Thursday, January 26, 2023

ಸಂವಿಧಾನ ಗೌರವಿಸಿ ಭವಿಷ್ಯದ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಮುನ್ನಡೆಯೋಣ : ಬಿ.ಕೆ ಸಂಗಮೇಶ್ವರ್


ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಹಾಗು ಶಿಕ್ಷಣ, ಆರೋಗ್ಯ, ಪೊಲೀಸ್, ನ್ಯಾಯಾಂಗ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂಧಿಗಳನ್ನು ಭದ್ರಾವತಿಯಲ್ಲಿ ಆಯೋಜಿಸಲಾಗಿದ್ದ ೭೪ನೇ ಗಣರಾಜ್ಯೋತ್ಸವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು
    ಭದ್ರಾವತಿ, ಜ. ೨೬: ದೇಶದ ಸಂವಿಧಾನ ಪ್ರಪಂಚದಲ್ಲಿಯೇ ಶ್ರೇಷ್ಠ ಸಂವಿಧಾನವಾಗಿದ್ದು, ನಾವೆಲ್ಲರೂ ಸಂವಿಧಾನದ ಆಶಯಗಳನ್ನು ಅರಿತುಕೊಂಡು ಮುನ್ನಡೆಯಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು. 
ಅವರು ಹಳೇನಗರದ ಕನಕಮಂಟಪ ಮೈದಾನದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೭೪ನೇ ಗಣರಾಜ್ಯೋತ್ಸವದ ಅಧ್ಯಕ್ಷತೆವಹಿಸಿ ಮಾತನಾಡಿದರು. 
ಡಾ.ಬಿ.ಆರ್ ಅಂಬೇಡ್ಕರ್‌ರವರು ರಚಿಸಿದ ಸಂವಿಧಾನದಿಂದಾಗಿ ನಾವೆಲ್ಲರೂ ಶಾಂತಿ, ಸೌಹಾರ್ದತೆಯಿಂದ ಬದಕಲು ಸಾಧ್ಯವಾಗಿದೆ. ಗಣತಂತ್ರ ವ್ಯವಸ್ಥೆ ಮೂಲಕ ಪ್ರಜಾಪ್ರಭುತ್ವ ಗಟ್ಟಿಗೊಳಿಸುವಲ್ಲಿ ಸಂವಿಧಾನ ಪರಿಣಾಮಕಾರಿಯಾಗಿದೆ. ಇಂತಹ ಶ್ರೇಷ್ಠ ಸಂವಿಧಾನಕ್ಕೆ ನಾವೆಲ್ಲರೂ ಗೌರವ ನೀಡುವ ಜೊತೆಗೆ ನಮ್ಮ ಭವಿಷ್ಯದ ಮುಂದಿರುವ ಸವಾಲುಗಳನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಮುನ್ನಡೆಯೋಣ ಎಂದರು. 
ಇದಕ್ಕೂ ಮೊದಲು ತಹಸೀಲ್ದಾರ್ ಆರ್. ಪ್ರದೀಪ್ ಧ್ವಜಾರೋಹಣ ನೆರವೇರಿಸಿದರು. ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಪೌರಾಯುಕ್ತ ಎಚ್.ಎಂ ಮನುಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್ ಸೇರಿದಂತೆ ನಗರಸಭಾ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರು ಹಾಗು ಶಿಕ್ಷಣ, ಆರೋಗ್ಯ, ಪೊಲೀಸ್, ಅರಣ್ಯ, ನ್ಯಾಯಾಂಗ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ಸಿಬ್ಬಂಧಿಗಳನ್ನು ಹಾಗು ಹಿರಿಯ ಕಟ್ಟಡ ಕಾರ್ಮಿಕ ಮತ್ತು ಪತ್ರಕರ್ತರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಲಾವಿದ ಅಪೇಕ್ಷ ಮಂಜುನಾಥ್ ನಿರೂಪಿಸಿದರು. 

ಗಣರಾಜ್ಯೋತ್ಸವ, ಸಂಗೊಳ್ಳಿರಾಯಣ್ಣ ಪುಣ್ಯಸ್ಮರಣೆ : ರಕ್ತದಾನ ಶಿಬಿರ


ಗಣರಾಜ್ಯೋತ್ಸವ ಹಾಗು ಕ್ರಾಂತಿಕಾರಿ ಸಂಗೊಳ್ಳಿರಾಯಣ್ಣ ಪುಣ್ಯಸ್ಮರಣೆ ಅಂಗವಾಗಿ ಭದ್ರಾವತಿ ನಗರದ ಕೇಸರಿಪಡೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
    ಭದ್ರಾವತಿ, ಜ. ೨೬: ಗಣರಾಜ್ಯೋತ್ಸವ ಹಾಗು ಕ್ರಾಂತಿಕಾರಿ ಸಂಗೊಳ್ಳಿರಾಯಣ್ಣ ಪುಣ್ಯಸ್ಮರಣೆ ಅಂಗವಾಗಿ ನಗರದ ಕೇಸರಿಪಡೆ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ಗುರುವಾರ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
    ಹೊಸಸೇತುವೆ ರಸ್ತೆಯ ಜಿ.ಎಸ್ ಆಟೋ ಮೊಬೈಲ್ಸ್ ಬಳಿ ಶಿಬಿರ ಆಯೋಜಿಸಲಾಗಿತ್ತು. ಶಿಬಿರ ಉದ್ದೇಶಿಸಿ ಮಾತನಾಡಿದ ಪ್ರಮುಖರು ಕೇಸರಿಪಡೆ ವತಿಯಿಂದ ಕಳೆದ ೫ ವರ್ಷಗಳಿಂದ ನಿರಂತರವಾಗಿ ರಕ್ತದಾನ ಶಿಬಿರ ಆಯೋಜಿಸಿಕೊಂಡು ಬರುತ್ತಿರುವುದು ಶ್ಲಾಘನೀಯ. ಅಲ್ಲದೆ ಸಾಮಾಜಿಕ, ಧಾರ್ಮಿಕ ಹಾಗು ಶೈಕ್ಷಣಿಕ ಸೇವಾಕಾರ್ಯಗಳಲ್ಲೂ ಕೇಸರಿಪಡೆ ತೊಡಗಿಸಿಕೊಂಡು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೇವಾಕಾರ್ಯಗಳು ನಡೆಯುವಂತಾಗಲಿ ಎಂದರು.
    ಕೇಸರಿಪಡೆ, ತಾಲೂಕು ಕುರುಬ ಸಮಾಜ ಮತ್ತು ಸಂಗೊಳ್ಳಿರಾಯಣ್ಣ ವೇದಿಕೆ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಸೇವೆಯಲ್ಲಿ ತೊಡಗಿಸಿಕೊಂಡಿರುವವರ ನೆರವಿಗೆ ಮುಂದಾಗಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ಜನ್ನಾಪುರ ಜಯಶ್ರೀ ಕಲ್ಯಾಣ ಮಂದಿರದ ಎಡಬದಿ ರಸ್ತೆಯಲ್ಲಿರುವ ಕಾರುಣ್ಯ ಚಾರಿಟಬಲ್ ಟ್ರಸ್ಟ್  ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಟ್ರಸ್ಟ್ ಕರಪತ್ರ ಮತ್ತು ದಿನದರ್ಶಿಕೆ ಬಿಡುಗಡೆಗೊಳಿಸಲಾಯಿತು.
    ಭದ್ರಾವತಿ, ಜ. ೨೬: ವಯೋವೃದ್ಧರು, ನಿರ್ಗತಿಕರು, ಅಶಕ್ತರಿಗೆ ಹಾಗು ಶೋಷಣೆಗೆ ಒಳಗಾದವರಿಗೆ ಆಶ್ರಯ ನೀಡುವ ಮನೋಭಾವದೊಂದಿಗೆ ಸಮಾಜದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಎಲ್ಲರೂ ಸಹಕಾರ ನೀಡುವುದು ಅಗತ್ಯವಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಗುರುವಾರ ನಗರದ ಜನ್ನಾಪುರ ಜಯಶ್ರೀ ಕಲ್ಯಾಣ ಮಂದಿರದ ಎಡಬದಿ ರಸ್ತೆಯಲ್ಲಿರುವ ಕಾರುಣ್ಯ ಚಾರಿಟಬಲ್ ಟ್ರಸ್ಟ್  ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಟ್ರಸ್ಟ್ ಕರಪತ್ರ ಮತ್ತು ದಿನದರ್ಶಿಕೆ ಬಿಡುಗಡೆಗೊಳಿಸಿ ಮಾತನಾಡಿದರು.
    ಪ್ರಸ್ತುತ ಸಮಾಜದಲ್ಲಿ ಬಹಳಷ್ಟು ಕುಟುಂಬಗಳಲ್ಲಿ ವಯೋವೃದ್ಧರನ್ನು ಕಡೆಗಣಿಸುವ ಮೂಲಕ ಅವರನ್ನು ಮನೆಯಿಂದ ಹೊರಗಿಡುವ ಮನಸ್ಥಿತಿ ಹೆಚ್ಚಾಗುತ್ತಿದೆ. ಅಲ್ಲದೆ ನಿರ್ಗತಿಕರು, ಅಶಕ್ತರು ಹಾಗು ಶೋಷಣೆಗೆ ಒಳಗಾದವರು ಸಹ ಹೆಚ್ಚಾಗಿ ಕಂಡು ಬರುತ್ತಿದ್ದಾರೆ. ಇವರ ನೆರವಿಗೆ ಮುಂದಾಗಿ ಸೇವೆಯಲ್ಲಿ ತೊಡಗಿಸಿಕೊಂಡಿರುವವರ  ಕಾರ್ಯ ಶ್ಲಾಘನೀಯವಾಗಿದ್ದು, ಇದಕ್ಕೆ ಯಾರು ಸಹ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದರು.
    ಕಾರುಣ್ಯ ಚಾರಿಟಬಲ್ ಟ್ರಸ್ಟ್ ಕಾರ್ಯಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ದವಿದ್ದೇನೆ. ಅಲ್ಲದೆ ವೈಯಕ್ತಿಕವಾಗಿ ಸಹ ಹೆಚ್ಚಿನ ನೆರವು ನೀಡುವುದಾಗಿ ಭರವಸೆ ನೀಡಿದರು.
    ಸಾಮಾಜಿಕ ಚಿಂತಕ, ಕೋಮು ಸೌಹಾರ್ದ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅಶೋಕ್, ನಗರಸಭೆ ಉಪಾಧ್ಯಕ್ಷ ಚನ್ನಪ್ಪ, ಸದಸ್ಯ ಮಣಿ ಎಎನ್‌ಎಸ್, ಮಾಜಿ ಸದಸ್ಯ ಬಾಲಕೃಷ್ಣ, ವೈದ್ಯ ಡಾ. ಎಚ್.ಆರ್ ನರೇಂದ್ರ, ಆರ್. ಮೋಸಸ್, ಜೈಪಾಲ್, ರಘು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಸವಿತಾ, ವೈ.ಕೆ ಹನುಮಂತಯ್ಯ, ವಿಲ್ಸನ್ ಬಾಬು ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಟ್ರಸ್ಟ್ ಅಧ್ಯಕ್ಷ ಜಿ. ರಾಜು ಹಾಗೂ ಸೇವಾಕರ್ತರು ಮತ್ತು ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಹೊಸ ಮುಕ್ತಿವಾಹಿನಿ ವಾಹನ ಖರೀದಿಸಲು ಜೆಡಿಎಸ್ ಮನವಿ

    ಭದ್ರಾವತಿ, ಜ. ೨೬ : ಮುಕ್ತಿವಾಹಿನಿ ವಾಹನ ಸೇವೆ ಇಲ್ಲದಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದ್ದು, ಹೊಸ ವಾಹನ ಖರೀದಿಸುವಂತೆ ಜೆಡಿಎಸ್ ಪಕ್ಷದಿಂದ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಗಿದೆ.
    ೩೫ ವಾರ್ಡ್‌ಗಳನ್ನು ಹೊಂದಿರುವ ನಗರಸಭೆಯಲ್ಲಿ ೨ ಮುಕ್ತಿವಾಹಿನಿ ವಾಹನಗಳಿದ್ದು,  ಈ ಪೈಕಿ ಒಂದು ವಾಹನ ಮಾತ್ರ ಸೇವೆಯಲ್ಲಿರುತ್ತದೆ. ಮತ್ತೊಂದು ವಾಹನ ಹಲವಾರು ದಿನಗಳಿಂದ ದುರಸ್ತಿಯಲ್ಲಿದೆ.  ಇದರಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಸೂಕ್ತ ಸಮಯದಲ್ಲಿ ಸೇವೆ ಒದಗಿಸಲು ಹೊಸ ಮುಕ್ತಿವಾಹಿನಿ ವಾಹನ ಖರೀದಿಸಿ ತೊಂದರೆಯನ್ನು ತಪ್ಪಿಸುವಂತೆ ಪಕ್ಷದ ನಗರ ಘಟಕದ ಅಧ್ಯಕ್ಷ, ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ, ಸದಸ್ಯರಾದ ಬಸವರಾಜ ಬಿ. ಆನೇಕೊಪ್ಪ, ಉದಯ್‌ಕುಮಾರ್, ಸವಿತಾ ಉಮೇಶ್, ನಾಗರತ್ನ ಅನಿಲ್‌ಕುಮಾರ್, ಮಂಜುಳ ಸುಬ್ಬಣ್ಣ ಸೇರಿದಂತೆ ಇನ್ನಿತರರು ಮನವಿಯಲ್ಲಿ ಆಗ್ರಹಿಸಿದ್ದಾರೆ.