Saturday, February 18, 2023

ಜೆಡಿಎಸ್ ಪಕ್ಷಕ್ಕೆ ಕ್ರೈಸ್ತ ಮುಖಂಡರ ಸೇರ್ಪಡೆ

ಭದ್ರಾವತಿಯಲ್ಲಿ ಕಳೆದ ಕೆಲವು ದಿನಗಳಿಂದ ಜೆಡಿಎಸ್ ಪಕ್ಷಕ್ಕೆ ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಹಾಗು ಸಮುದಾಯಗಳ ಮುಖಂಡರು ಸೇರ್ಪಡೆಗೊಳ್ಳುತ್ತಿದ್ದು, ಶನಿವಾರ ಕ್ರೈಸ್ತ ಸಮುದಾಯದ ಕೆಲವು ಮುಖಂಡರು ಸೇರ್ಪಡೆಗೊಂಡರು.
    ಭದ್ರಾವತಿ, ಫೆ. ೧೮ : ಕಳೆದ ಕೆಲವು ದಿನಗಳಿಂದ ಜೆಡಿಎಸ್ ಪಕ್ಷಕ್ಕೆ ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಹಾಗು ಸಮುದಾಯಗಳ ಮುಖಂಡರು ಸೇರ್ಪಡೆಗೊಳ್ಳುತ್ತಿದ್ದು, ಶನಿವಾರ ಕ್ರೈಸ್ತ ಸಮುದಾಯದ ಕೆಲವು ಮುಖಂಡರು ಸೇರ್ಪಡೆಗೊಂಡರು.
    ಪಕ್ಷದ ರಾಜ್ಯ ವಕ್ತಾರ ಅಮೋಸ್ ನೇತೃತ್ವದಲ್ಲಿ  ಪ್ರೊಟೆಸ್ಟೆಂಟ್ ಕ್ರೈಸ್ತ ಸಮುದಾಯದ ಮುಖಂಡ ಗಾಬ್ರೇಲ್, ಆಂಜನೇಯ ಅಗ್ರಹಾರದ ಪ್ರಭಾಕರ್, ವೇಲೂರ್‌ಶೆಡ್ ಕುಮಾರ್, ಮೂಲೆಕಟ್ಟೆ ಶೇಖರ್, ಗಣೇಶ್ ಕಾಲೋನಿ ಕೃಷ್ಣ, ಕಾಗದ ನಗರದ ಪ್ರಸನ್ನಬಾಬು, ಕೂಲಿಬ್ಲಾಕ್ ಶೆಡ್ ಆನಂದ್ ಸೇರಿದಂತೆ ಇನ್ನಿತರರು ಸೇರ್ಪಡೆಗೊಂಡರು.
    ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದ ಅಪ್ಪಾಜಿ, ನಗರ ಘಟಕದ ಅಧ್ಯಕ್ಷ ಆರ್. ಕರುಣಾಮೂರ್ತಿ, ಪರಿಶಿಷ್ಟ ಪಂಗಡ ವಿಭಾಗದ ಅಧ್ಯಕ್ಷ ಬಸವರಾಜ್ ಬಿ. ಆನೇಕೊಪ್ಪ, ಮಹಿಳಾ ಘಟಕದ ಭಾಗ್ಯಮ್ಮ, ನಗರಸಭೆ ಮಾಜಿ ಸದಸ್ಯ ಆನಂದ್, ಲೋಕೇಶ್ವರ್‌ರಾವ್, ಸೈಯದ್ ಅಜ್ಮಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಕೆಲವು ದಿನಗಳ ಹಿಂದೆ ಆಮ್ ಆದ್ಮಿ ಪಕ್ಷದ ಮುಖಂಡರಾದ ಮಸ್ತಾನ್, ರೇಷ್ಮಬಾನು, ಜಾವೇದ್ ಸೇರಿದಂತೆ ಇನ್ನಿತರರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಹೋರಾಟ ತೀವ್ರಗೊಳ್ಳಲಿ : ಟಿ. ಚಂದ್ರೇಗೌಡ


ಭದ್ರಾವತಿ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು, ಶನಿವಾರ ಅಪ್ಪರ್ ಹುತ್ತಾಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ ಪಾಲ್ಗೊಂಡು ಮಾತನಾಡಿದರು.
    ಭದ್ರಾವತಿ, ಫೆ. ೧೮ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ತೀವ್ರ ಹೋರಾಟ ನಡೆಸುವುದು ಅನಿವಾರ್ಯ ಎಂದು ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಟಿ. ಚಂದ್ರಗೌಡ ಹೇಳಿದರು.
    ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು, ಶನಿವಾರ ಅಪ್ಪರ್ ಹುತ್ತಾಕಾಲೋನಿಯಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಭೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
    ಹೋರಾಟ ತೀವ್ರಗೊಳಿಸಲು ಸೂಕ್ತ ಸಮಯ ಇದಾಗಿದ್ದು, ಸರ್ಕಾರಕ್ಕೆ ಹೋರಾಟದ ಬಿಸಿ ಮುಟ್ಟಿಸಬೇಕು. ಇಲ್ಲವಾದಲ್ಲಿ ಹೋರಾಟಕ್ಕೆ ಯಾವುದೇ ಫಲಿತಾಂಶ ಲಭಿಸುವುದಿಲ್ಲ. ಮುಂದಿನ ೩-೪ ದಿನಗಳಲ್ಲಿ ದೊಡ್ಡಮಟ್ಟದ ಹೋರಾಟ ನಡೆಯಬೇಕು. ಆಗ ಮಾತ್ರ ಸರ್ಕಾರ ಕಾರ್ಮಿಕರ ಹೋರಾಟಕ್ಕೆ ಸ್ಪಂದಿಸಲಿದೆ ಎಂದರು.
    ಸ್ಥಳೀಯ ಮುಖಂಡರು ಮಾತನಾಡಿ, ವಿಐಎಸ್‌ಎಲ್ ಕಾರ್ಖಾನೆ ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ನಾವೆಲ್ಲರೂ ಬೆಂಬಲ ವ್ಯಕ್ತಪಡಿಸಬೇಕೆಂದರು.
    ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿ, ಇಂದು ನಮ್ಮ ಮುಂದೆ ದೊಡ್ಡ ಸವಾಲು ಎದುರಾಗಿದೆ. ಕಾರ್ಖಾನೆ ಉಳಿಸಿಕೊಳ್ಳಲು ಹೋರಾಟ ನಡೆಸುವುದು ಅನಿವಾರ್ಯವಾಗಿದೆ. ನಮಗೆ ಕಾರ್ಖಾನೆ ಉಳಿಸಿಕೊಳ್ಳುವ ನಂಬಿಕೆ ಇದೆ. ನಮ್ಮ ಹೋರಾಟಕ್ಕೆ ನಿವಾಸಿಗಳು ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು. ಗುತ್ತಿಗೆ ಕಾರ್ಮಿಕರ ಸಂಘದ ಪದಾಧಿಕಾರಿಗಳು, ಕಾರ್ಮಿಕ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
    ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ೩೧ ದಿನಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದು, ಕಳೆದ ಕೆಲವು ದಿನಗಳಿಂದ ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಿಗೆ ತೆರಳಿ ಹೋರಾಟಕ್ಕೆ ಬೆಂಬಲ ನೀಡುವಂತೆ ನಿವಾಸಿಗಳಿಗೆ ಮನವಿ ಮಾಡುತ್ತಿದ್ದಾರೆ.

ಮಹಾಶಿವರಾತ್ರಿ : ಶ್ರೀ ಸಂಗಮೇಶ್ವರ ದರ್ಶನಕ್ಕೆ ಸಾಲುಗಟ್ಟಿ ನಿಂತ ಭಕ್ತರು

ಭದ್ರಾವತಿ ಹೃದಯ ಭಾಗದಲ್ಲಿ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಸ್ವಾಮಿಯ ದರ್ಶನ ಪಡೆಯಲು ಸಾಲುಗಟ್ಟಿ ನಿಂತಿರುವ ಭಕ್ತರು.
    ಭದ್ರಾವತಿ, ಫೆ. ೧೮: ಮಹಾಶಿವರಾತ್ರಿ ಈ ಬಾರಿ ಎಲ್ಲೆಡೆ ವೈಭವಯುತವಾಗಿ ಜರುಗುತ್ತಿದ್ದು. ವಿಶೇಷವಾಗಿ ನಗರದ ಹೃದಯ ಭಾಗದಲ್ಲಿ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಾಲಯದಲ್ಲಿ ಸ್ವಾಮಿಯ ದರ್ಶನ ಪಡೆಯಲು ಶನಿವಾರ ಬೆಳಿಗ್ಗೆಯಿಂದಲೇ ಭಕ್ತಾಧಿಗಳು ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತು.
    ಪ್ರತಿ ವರ್ಷದಂತೆ ಈ ಬಾರಿ ಸಹ ವೀರಶೈವ ಸೇವಾ ಸಮಿತಿವತಿಯಿಂದ ಧಾರ್ಮಿಕ ಆಚರಣೆಗಳು ಜರುಗಿದವು. ಶುಕ್ರವಾರ ಸಂಜೆ ಗಣಹೋಮ, ರುದ್ರಹೋಮ, ನವಗ್ರಹ ಪೂಜೆ ಜರುಗಿದವು. ಶನಿವಾರ ಬೆಳಿಗ್ಗೆ  ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣಪತಿ, ಶ್ರೀ ಸಂಗಮೇಶ್ವರಸ್ವಾಮಿ, ನಂದಿ, ನಾಗದೇವತೆ ದೇವರುಗಳಿಗೆ ರುದ್ರಾಭಿಷೇಕ ನೆರವೇರಿತು.
    ತರೀಕೆರೆ ಹಿರೇಮಠದ ಶ್ರೀ ಷ||ಬ್ರ|| ಜಗದೀಶ್ವರ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯಸಾನಿಧ್ಯದಲ್ಲಿ ವೇದಬ್ರಹ್ಮ ಸಿ.ಎಂ ಮಹೇಶ್ವರಮೂರ್ತಿ ಶಾಸ್ತ್ರಿಗಳು, ಚಿನ್ನಯ್ಯ ಶಾಸ್ತ್ರಿ, ಎಸ್.ಆರ್ ವಿಶ್ವನಾಥಯ್ಯ, ವಾಗೀಶಯ್ಯ, ರುದ್ರಸ್ವಾಮಿ ಶಾಸ್ತ್ರಿ, ಎಂ.ಬಿ ಕಿರಣ್ ಶಾಸ್ತ್ರಿ ಮತ್ತು ಶಂಕರಯ್ಯ ಹಿರೇಮಠ್ ಧಾರ್ಮಿಕ ಆಚರಣೆಗಳನ್ನು ನೆರವೇರಿಸಿಕೊಟ್ಟರು. ವೀರಶೈವ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಶಿವರಾತ್ರಿ ಆಚರಣಾ ಉಸ್ತುವಾರಿ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಫೆ.೧೯ರ ಭಾನುವಾರ ಹಳೇನಗರದ ಶ್ರೀ ಕೋಟೆ ಬಸವಣ್ಣ, ಶ್ರೀ ವೀರಭದ್ರಸ್ವಾಮಿ, ಶ್ರೀ ಬನಶಂಕರಿದೇವಿ ಮತ್ತು ಶ್ರೀ ಸದಾನಂದಸ್ವಾಮಿ ಗದ್ದುಗೆಯಲ್ಲಿ ಮಹಾಶಿವರಾತ್ರಿ ಪ್ರಯುಕ್ತ ರುದ್ರಾಭಿಷೇಕ ಸೇರಿದಂತೆ ಇನ್ನಿತರ ಆಚರಣೆಗಳನ್ನು ಹಮ್ಮಿಕೊಳ್ಳಲಾಗಿದೆ.
    ಬೆಳಿಗ್ಗೆ ೭ ಗಂಟೆಗೆ ಕೋಟೆ ಬಸವಣ್ಣ ದೇವಸ್ಥಾನದಲ್ಲಿ ಕೆಂಡಾರ್ಚನೆ ಗುಗ್ಗಳ ಮಹೋತ್ಸವ ನಡೆಯಲಿದ್ದು, ದೇವಸ್ಥಾನದಿಂದ ಆರಂಭಗೊಳ್ಳುವ ಉತ್ಸವ ಮೆರವಣಿಗೆ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ, ಕಂಚಿಬಾಗಿಲು, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ ಮುಖಾಂತರ ಪುನಃ ಕೋಟೆ ಬಸವಣ್ಣ ದೇವಸ್ಥಾನ ತಲುಪಲಿದೆ.  
    ದೇವಸ್ಥಾನದ ಸಮೀಪ ಸೇವಾಕರ್ತರಿಂದ ಭಕ್ತರಿಗೆ ಕಲ್ಲಂಗಡಿ ಹಣ್ಣು, ಕೋಸಂಬರಿ, ಪಾನಕ ವಿತರಣೆ ನೆರವೇರಿತು. ಸ್ಥಳೀಯ ಸಂಘ-ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಪ್ರಮುಖರು, ಗಣ್ಯರು ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತಾಧಿಗಳು ಆಗಮಿಸಿ ಸ್ವಾಮಿಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು.


ಭದ್ರಾವತಿ ಹೃದಯ ಭಾಗದಲ್ಲಿ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬದ ಹಿನ್ನಲೆಯಲ್ಲಿ ಸ್ವಾಮಿಗೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು.