Tuesday, February 21, 2023

ಶಿವಮೊಗ್ಗ ಜಿಲ್ಲೆಯ ರಾಜಕಾರಣಿಗಳಿಗೆ ರೈತರು, ಕಾರ್ಮಿಕರ ಬಗ್ಗೆ ಕಾಳಜಿ ಇಲ್ಲ : ಎಚ್.ಡಿ ಕುಮಾರಸ್ವಾಮಿ


ಭದ್ರಾವತಿ ಹಳೇನಗರದ ಕನಕಮಂಟಪ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜೆಡಿಎಸ್ ಪಕ್ಷದ ಬಹು ನಿರೀಕ್ಷಿತ ಪಂಚರತ್ನ ಯಾತ್ರೆ ವೇದಿಕೆ ಕಾರ್ಯಕ್ರಮ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ, ಸಿ.ಎಂ ಇಬ್ರಾಹಿಂ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.  
    ಭದ್ರಾವತಿ, ಫೆ. ೨೧: ಶಿವಮೊಗ್ಗ ಜಿಲ್ಲೆಯಲ್ಲಿ ರೈತರು, ಕಾರ್ಮಿಕರ ಸಮಸ್ಯೆಗಳು ಬಹಳಷ್ಟಿವೆ. ಆದರೆ ಜನರ ಅಗತ್ಯ ಸಮಸ್ಯೆಗಳಿಗೆ ಇಲ್ಲಿನ ರಾಜಕಾರಣಿಗಳು ಸ್ಪಂದಿಸದೆ ಹಣ ಲೂಟಿ ಮಾಡುವ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುತ್ತಿದ್ದಾರೆ. ಇದರಿಂದಾಗಿ ದಲಿತರು, ರೈತರು, ಕಾರ್ಮಿಕರು ಬಡವರಾಗಿಯೇ ಉಳಿಯುವಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದರು.
    ಅವರು ಹಳೇನಗರದ ಕನಕಮಂಟಪ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಜೆಡಿಎಸ್ ಪಕ್ಷದ ಬಹು ನಿರೀಕ್ಷಿತ ಪಂಚರತ್ನ ಯಾತ್ರೆ ವೇದಿಕೆ ಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದರು.
    ಜಿಲ್ಲೆಯಲ್ಲಿ ಅಡಕೆ ಬೆಳೆಗಾರರ ಸಮಸ್ಯೆ, ಬಗರ್‌ಹುಕುಂ ರೈತರ ಸಮಸ್ಯೆಗಳಿವೆ. ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡಿರುವ ರೈತರಿಗೆ ಸೂಕ್ತ ಪರಿಹಾರ ನೀಡಿಲ್ಲ. ಬೃಹತ್ ಕಾರ್ಖಾನೆಗಳು ಮುಚ್ಚಿ ಕಾರ್ಮಿಕರು ಬೀದಿ ಪಾಲಾಗಿದ್ದಾರೆ. ಸಾಕಷ್ಟು ಬಡವರಿಗೆ ಮನೆಗಳಿಲ್ಲವಾಗಿದೆ. ಇಂತಹ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಜಿಲ್ಲೆಯ ರಾಜಕಾರಣಿಗಳು ವಿಫಲರಾಗಿದ್ದಾರೆ. ಈ ಮೂಲಭೂತ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಕೊಡುವ ಉದ್ದೇಶವೇ ಪಂಚರತ್ನ ಯಾತ್ರೆಯಾಗಿದೆ. ಇದನ್ನು ಜನರು ಅರ್ಥ ಮಾಡಿಕೊಂಡು ಈ ಬಾರಿ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಬೇಕೆಂದರು.
    ಜಿಲ್ಲೆಯ ರಾಜಕಾರಣಿಗಳು ಅಭಿವೃದ್ಧಿ ಹೆಸರಿನಲ್ಲಿ ಲೂಟಿ ಹೊಡೆಯುತ್ತಿದ್ದಾರೆ. ಕೇವಲ ಅವರು ಹಾಗು ಕುಟುಂಬದವರು ಸಮೃದ್ಧಿಯಾಗುತ್ತಿದ್ದಾರೆ. ಇಂತಹ ರಾಜಕಾರಣ ನಾನು ಎಂದಿಗೂ ಮಾಡಿಲ್ಲ. ಎರಡು ಬಾರಿ ಮುಖ್ಯಮಂತ್ರಿಯಾದರೂ ಸಹ ಪೂರ್ಣ ಅಧಿಕಾರ ನೀಡದಿದ್ದರೂ ಸಹ ರೈತರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಎರಡು ಬಾರಿ ಸಾಲ ಮನ್ನಾ ಮಾಡಿದ್ದೇನೆ. ಬಡವರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸಿದ್ದೇನೆ. ಪಂಚರತ್ನ ಯೋಜನೆಗಳನ್ನು ಜಾರಿಗೊಳಿಸಲು ೨.೫ ಲಕ್ಷ ಕೋಟಿ ಅನುದಾನದ ಅಗತ್ಯವಿದೆ.  ರಾಜ್ಯದಲ್ಲಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಮೂಲಕ ಅಗತ್ಯವಿರುವ ಅನುದಾನವನ್ನು ಜನರ ತೆರಿಗೆ ಹಣದಲ್ಲಿ ಬಳಸಿಕೊಳ್ಳುತ್ತೇನೆ. ಈ ಬಾರಿ ನನಗೆ ಪೂರ್ಣ ಪ್ರಮಾಣದ ಅಧಿಕಾರ ನೀಡುವಂತೆ ಮನವಿ ಮಾಡಿದರು.
    ಕ್ಷೇತ್ರದ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳನ್ನು ಮುಚ್ಚಲು ಹಣ ಬಿಡುಗಡೆ ಮಾಡಿರುವ ಈ ಹಿಂದಿನ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳಿಗೆ ಈ ಕಾರ್ಖಾನೆಗಳನ್ನು ಉಳಿಸಿಕೊಳ್ಳುವುದಾಗಿ ಭರವಸೆ ನೀಡುವ ಯಾವುದೇ ನೈತಿಕತೆ ಇಲ್ಲವಾಗಿದೆ. ನಮ್ಮ ಸರ್ಕಾರ ಈ ಎರಡು ಕಾರ್ಖಾನೆಗಳನ್ನು ಪುನಶ್ಚೇತನಗೊಳಿಸಲು ಬದ್ಧವಾಗಿದೆ. ರಾಜ್ಯ ಸರ್ಕಾರವೇ ಈ ಎರಡು ಕಾರ್ಖಾನೆಗಳನ್ನು ಮುನ್ನಡೆಸಿಕೊಂಡು ಹೋಗಲಿದೆ. ಅಲ್ಲದೆ ಇಲ್ಲಿನ ಬಗರ್ ಹುಕುಂ ರೈತರ ಸಮಸ್ಯೆಗಳನ್ನು ಪರಿಹರಿಸುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಶಾರದ ಅಪ್ಪಾಜಿಯವರನ್ನು ಗೆಲ್ಲಿಸುವ ಮೂಲಕ ವಿಧಾನಸಭೆಗೆ ಆಯ್ಕೆ ಮಾಡಬೇಕೆಂದು ಮನವಿ ಮಾಡಿದರು.
    ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದಾ ಅಪ್ಪಾಜಿ, ವಿಧಾನ ಪರಿಷತ್ ಸದಸ್ಯ  ಎಸ್.ಎಲ್  ಬೋಜೇಗೌಡ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಜ್ಮಾ,  ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್,  ಜಿಲ್ಲಾಧ್ಯಕ್ಷ  ಎಂ. ಶ್ರೀಕಾಂತ್,  ಯುವ ಘಟಕದ ಜಿಲ್ಲಾಧ್ಯಕ್ಷ ಮಧು ಕುಮಾರ್, ಗೀತಾ,  ನಗರ ಘಟಕದ ಅಧ್ಯಕ್ಷ ಆರ್ ಕರುಣಾ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್, ಯುವ ಘಟಕದ ಅಧ್ಯಕ್ಷ ಎಂ.ಎ ಅಜಿತ್, ಕರಿಯಣ್ಣ, ಮೈಲಾರಪ್ಪ, ಮುರ್ತುಜಾಖಾನ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪಂಚರತ್ನ ಯಾತ್ರೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ

ಭದ್ರಾವತಿ, ಫೆ. 21:  ಹಳೇನಗರದ ಕನಕಮಂಟಪ ಆಯೋಜಿಸಲಾಗಿದ್ದ  ಜೆಡಿಎಸ್ ಪಕ್ಷದ ಬಹು ನಿರೀಕ್ಷಿತ ಪಂಚರತ್ನ  ಯಾತ್ರೆ ವೇದಿಕೆ ಕಾರ್ಯಕ್ರಮ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಉದ್ಘಾಟಿಸಿದರು.
   ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ, ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದಾ ಅಪ್ಪಾಜಿ, ವಿಧಾನ ಪರಿಷತ್ ಸದಸ್ಯ  ಎಸ್.ಎಲ್  ಬೋಜೇಗೌಡ, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ನಜ್ಮಾ,  ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್,  ಜಿಲ್ಲಾಧ್ಯಕ್ಷ  ಎಂ. ಶ್ರೀಕಾಂತ್,  ಯುವ ಘಟಕದ ಜಿಲ್ಲಾಧ್ಯಕ್ಷ ಮಧು ಕುಮಾರ್, ಗೀತಾ,  ನಗರ ಘಟಕದ ಅಧ್ಯಕ್ಷ ಆರ್ ಕರುಣಾ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪಂಚರತ್ನ ಯಾತ್ರೆಯಲ್ಲಿ ಕುಮಾರ ಸ್ವಾಮಿಗೆ ವಿಶೇಷ ಹಾರತುರಾಯಿ

    ಭದ್ರಾವತಿ, ಫೆ.21: ಉಕ್ಕಿನ ನಗರಕ್ಕೆ ಮಂಗಳವಾರ ಆಗಮಿಸಿದ ಪಂಚರತ್ನ ಯಾತ್ರೆಯಲ್ಲಿ ಹಲವು ವಿಶೇಷತೆಗಳು ಕಂಡುಬಂದವು. ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿಯವರಿಗೆ ಆಭಿಮಾನಿಗಳು, ಕಾರ್ಯಕರ್ತರಿಂದ ವಿಶೇಷ ಹಾರತುರಾಯಿಗಳ ಅದ್ದೂರಿ ಸ್ವಾಗತ ಕಂಡು ಬಂದಿತು.


      ನೀರಿನ ಬಾಟಲಿಗಳಿಂದ, ಕಲ್ಲಂಗಡಿ ಹಣ್ಣುಗಳಿಂದ ಹಾಗು ಅಡಕೆ ತಟ್ಟೆಗಳಿಂದ ತಯಾರಿಸಿದ ಬೃಹತ್ ಹಾರಗಳನ್ನು ಕ್ರೇನ್ ಬಳಸಿ ಹಾಕುವ  ಮೂಲಕ ಸಂಭ್ರಮಿಸಿದರು.
   ಹಲವು ಗ್ರಾಮಗಳಲ್ಲಿ ಗ್ರಾಮಸ್ಥರು ತಮ್ಮ ಅಳಲನ್ನು ಕುಮಾರ ಸ್ವಾಮಿ ಬಳಿ ತೋರಿಕೊಂಡರು. ಸುಡು ಬಿಸಿಲಿನಲ್ಲೂ ಆಭಿಮಾನಿಗಳು, ಕಾರ್ಯಕರ್ತರು ಯಾತ್ರೆಯಲ್ಲಿ  ಪಾಲ್ಗೊಂಡು ಸಂಜೆವರೆಗೂ ಹೆಜ್ಜೆ ಹಾಕಿದರು.





ಸೋಗಾನೆ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ

ಶಿವಮೊಗ್ಗ, ಫೆ. 21 :  ಕೊನೆಗೂ ಮಲೆನಾಡಿನ ಜನರ ಬಹು ವರ್ಷಗಳ ಕನಸು ಈಡೇರಿದೆ.   ಸೋಗಾನೆ ವಿಮಾನ ನಿಲ್ದಾಣಕ್ಕೆ ಮೊದಲ ವಿಮಾನ  ಮಂಗಳವಾರ  ಮಧ್ಯಾಹ್ನ ಬಂದಿಳಿದಿದ್ದು, ಜನರಲ್ಲಿ ಸಂಭ್ರಮ ಉಂಟುಮಾಡಿದೆ.  

     ಪ್ರಾಯೋಗಿಕವಾಗಿ ವಾಯು ಸೇನೆಯ ಬೋಯಿಂಗ್ ವಿಮಾನ ಬಂದಿಳಿದಿದೆ.  ಬೋಯಿಂಗ್ 737 – 7HI ಮಾದರಿಯ ವಿಮಾನ  ಮಧ್ಯಾಹ್ನ 12 ಗಂಟೆಗೆ  ದೆಹಲಿಯಿಂದ ಹೊರಟಿದ್ದು, ಮಧ್ಯಾಹ್ನ 2.30ರ ಹೊತ್ತಿಗೆ ಸೋಗಾನೆ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.  

     ಯಾವುದೇ ಅಡೆತಡೆ ಇಲ್ಲದೆ  ವಿಮಾನ ಬಂದಿಳಿದಿದ್ದು, ಮಧ್ಯಾಹ್ನ ವಿಮಾನ  ಬರುತ್ತಿದ್ದಂತೆ ಸುತ್ತಮುತ್ತಲ ಪ್ರದೇಶದ ಜನರು ಕುತೂಹಲದಿಂದ ಗಮನಿಸಿದರು. 

ವಿಐಎಸ್ಎಲ್-ಎಂಪಿಎಂ ಕಾರ್ಖಾನೆಗಳ ಪುನಶ್ಚೇತನಕ್ಕೆ ಬದ್ದ : ಎಚ್.ಡಿ ಕುಮಾರಸ್ವಾಮಿ

ಭದ್ರಾವತಿ , ಫೆ. 21:   ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮತ್ತು ಮೈಸೂರು ಕಾಗದ ಕಾರ್ಖಾನೆ ಪುನಶ್ಚೇತನಗೊಳಿಸುವುದು ನಮ್ಮ ಉದ್ದೇಶವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪುನರುಚ್ಚರಿಸಿದರು.

       ಅವರ ಮಂಗಳವಾರ ತಾಲೂಕಿನ ಗಡಿ ಭಾಗದ  ಕಾರೇನಹಳ್ಳಿಯಲ್ಲಿ   ಜೆಡಿಎಸ್ ಪಕ್ಷದ ಬಹು ನಿರೀಕ್ಷಿತ ಪಂಚರತ್ನ   ಯಾತ್ರೆಗೆ ಚಾಲನೆ ನೀಡಿ ಮಾತನಾಡಿದರು.

      ಶಿಕ್ಷಣ, ಆಸ್ಪತ್ರೆ, ಸ್ವಾಭಿಮಾನಿ ರೈತ, ಉದ್ಯೋಗ, ಮನೆ ನಿರ್ಮಾಣ, ಪ್ರತಿ ಕುಟುಂಬದ ಹಿರಿಯರಿಗೆ 5 ಸಾವಿರ ರು., ಮಸಾಶನ 800 ರು. ಬದಲಾಗಿ 2000 ರು. ಏರಿಕೆ, ಶ್ರೀಮಂತ ಮತ್ತು ಬಡವರ ನಡುವಿನ ಆರ್ಥಿಕ ವ್ಯತ್ಯಾಸ ಕುಗ್ಗಿಸುವುದು. ಜನರ ಆತ್ಮವಿಶ್ವಾಸ ಹೆಚ್ಚಿಸಿ  ಸದೃಢ ಸರ್ಕಾರ ನಿರ್ಮಾಣಕ್ಕೆ ಕರೆ ನೀಡುವುದು ಪಂಚರತ್ನ ಯಾತ್ರೆ ಉದ್ದೇಶವಾಗಿದೆ ಎಂದರು.

    ಈ ಬಾರಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ  ಶಾರದ ಅಪ್ಪಾಜಿ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ವಿಧಾನಸಭೆಗೆ ಆಯ್ಕೆ ಮಾಡಬೇಕು. ಆ ಮೂಲಕ ಆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಕಾರಣಕರ್ತರಾಗಬೇಕೆಂದು ಮನವಿ ಮಾಡಿದರು.

     ಯಾತ್ರೆ ಕೆಂಪೇಗೌಡ ನಗರ, ಬಾರಂದೂರು, ಕೆಂಚೇನಹಳ್ಳಿ, ಮಾವಿನಕೆರೆ, ತಾಷ್ಕೆಂಟ್‌ನಗರ, ಯರೇಹಳ್ಳಿ, ಮಾರುತಿನಗರ, ಶಿವನಿಕ್ರಾಸ್, ಗೌರಾಪುರ, ಬಸವನಗುಡಿ, ಕೆ.ಎಚ್ ನಗರ, ಅಂತರಗಂಗೆ, ಕಾಚಗೊಂಡನಹಳ್ಳಿ, ಅಶ್ವಥ್‌ನಗರ, ಶಿವಾಜಿ ವೃತ್ತ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಡರ್‌ಬ್ರಿಡ್ಜ್, ಹೊಸ ಸೇತುವೆ, ಕೆಎಸ್‌ಆರ್‌ಟಿಸಿ ಬಸ್ ಡಿಪೋ ವೃತ್ತ, ಕಂಚಿಬಾಗಿಲು ವೃತ್ತ ಮೂಲಕ ಕನಕಮಂಟಪ ಮೈದಾನ ತಲುಪಲಿದೆ. ಸಂಜೆ ೪ ಗಂಟೆಗೆ ಕನಕಮಂಟಪ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ.  ನವುಲೆ ಬಸಾವಪುರದಲ್ಲಿ ಕುಮಾರ ಸ್ವಾಮಿ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. 

     ಪಕ್ಷದ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಶಾರದಾ ಅಪ್ಪಾಜಿ, ವಿಧಾನ ಪರಿಷತ್ ಸದಸ್ಯ  ಎಸ್.ಎಲ್  ಬೋಜೇಗೌಡ, ರಾಜ್ಯ ಕಾರ್ಯದರ್ಶಿ ಜೆ.ಪಿ ಯೋಗೇಶ್,  ಜಿಲ್ಲಾಧ್ಯಕ್ಷ  ಎಂ. ಶ್ರೀಕಾಂತ್,  ಯುವ ಘಟಕದ ಜಿಲ್ಲಾಧ್ಯಕ್ಷ ಮಧು ಕುಮಾರ್ ನಗರ ಘಟಕದ ಅಧ್ಯಕ್ಷ ಆರ್ ಕರುಣಾ ಮೂರ್ತಿ, ಗ್ರಾಮಾಂತರ ಅಧ್ಯಕ್ಷ ಧರ್ಮಕುಮಾರ್  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.