Saturday, February 25, 2023

ಫೆ.೨೬ರಂದು ಶೃಂಗೇರಿ ಶಂಕರ ಮಠದಲ್ಲಿ ಶ್ರೀ ಸರಸ್ವತಿ ಪೂಜಾ

    ಭದ್ರಾವತಿ, ಫೆ. ೨೫ : ಸಿದ್ದಾರೂಢನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಫೆ.೨೬ರಂದು ಬೆಳಿಗ್ಗೆ ೧೦ ಗಂಟೆಗೆ ಶ್ರೀ ಸರಸ್ವತಿ ಪೂಜಾ ಮತ್ತು ಹೋಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಪ್ರತಿ ವರ್ಷದಂತೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳಿಂದ ಸಹಸ್ರನಾಮ ಅರ್ಚನೆ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಸೇರಿದಂತೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಧರ್ಮಾಧಿಕಾರಿ ಕೆ.ಆರ್ ಸುಬ್ಬರಾವ್ ಮೊ: ೯೯೪೫೮೪೬೯೦೫ ಅಥವಾ ೯೯೦೦೨೪೯೩೦೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ. 
--

ಫೆ.೨೭ರಂದು ಗುತ್ತಿಗೆ ಕಾರ್ಮಿಕರ ಸಂಘದಿಂದ ಬೈಕ್ ರ್‍ಯಾಲಿ : ಪ್ರಧಾನಿಗೆ ಮನವಿ


ಭದ್ರಾವತಿ  ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಫೆ.೨೭ರಂದು ಮನವಿ ಸಲ್ಲಿಸುವುದಾಗಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಜಿ ಸುರೇಶ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. 
ಭದ್ರಾವತಿ, ಫೆ. ೨೫ : ನಗರದ ವಿಐಎಸ್‌ಎಲ್ ಕಾರ್ಖಾನೆ ಉಳಿವಿಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಫೆ.೨೭ರಂದು ಮನವಿ ಸಲ್ಲಿಸುವುದಾಗಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಜಿ ಸುರೇಶ್ ಹೇಳಿದರು.
ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೋಗಾನೆಯಲ್ಲಿ ನೂತನ ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆಯುವುದು, ಅಗತ್ಯವಿರುವ ಬಂಡವಾಳ ತೊಡಗಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಈಗಾಗಲೇ ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ಮೋದಿಯವರಿಗೆ ಖುದ್ದಾಗಿ ಮನವಿ ಸಲ್ಲಿಸಲು ಅವಕಾಶ ನೀಡುವಂತೆ ಕೋರಲಾಗಿದೆ. ಆದರೆ ಜಿಲ್ಲಾಧಿಕಾರಿಗಳು ಪ್ರಧಾನ ಮಂತ್ರಿ ಕಾರ್ಯಾಲಯಕ್ಕೆ ಪತ್ರ ಬರೆದಿದ್ದು, ಅಲ್ಲಿಂದ ಇದುವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದರು. 
ಫೆ.೨೭ರಂದು ಬೆಳಿಗ್ಗೆ ೭ ಗಂಟೆಗೆ ಕಾರ್ಖಾನೆ ಮುಂಭಾಗದಿಂದ ಬೈಕ್ ರ್‍ಯಾಲಿ ನಡೆಸಲಿದ್ದು, ನಂತರ ವಿಮಾನ ನಿಲ್ದಾಣ ತಲುಪಿ ಮನವಿ ಸಲ್ಲಿಸಲಾಗುವುದು. ಈ ಹಿನ್ನಲೆಯಲ್ಲಿ ಕ್ಷೇತ್ರದ ವಿವಿಧ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು ಸೇರಿದಂತೆ ಸಮಸ್ತ ನಾಗರೀಕರು ಪಕ್ಷಾತೀತವಾಗಿ ಬೆಂಬಲಿಸಿ ಪಾಲ್ಗೊಳ್ಳುವಂತೆ ಕೋರಿದರು.
ಫೆ.೨೪ರಂದು ಕರೆ ನೀಡಲಾಗಿದ್ದ ಭದ್ರಾವತಿ ಬಂದ್ ಸಂಪೂರ್ಣ ಯಶಸ್ವಿಯಾಗಿದ್ದು, ಈ ಹಿನ್ನಲೆಯಲ್ಲಿ ಗುತ್ತಿಗೆ ಕಾರ್ಮಿಕರ ಸಂಘಟನೆಗಳು ಕೃತಜ್ಞತೆ ಸಲ್ಲಿಸಲಿವೆ ಎಂದರು.  
ಉಪಾಧ್ಯಕ್ಷ ಎಸ್. ವಿನೋದ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಪಿ. ರಾಕೇಶ್, ಕಾರ್ಯದರ್ಶಿ ಅಂತೋಣಿದಾಸ್, ಖಜಾಂಚಿ ಜಿ. ಆನಂದ್, ಆರ್. ಅರುಣ್‌ಕುಮಾರ್, ಜೆ. ಕಿರಣ್, ಎಐಟಿಯುಸಿ ಅಧ್ಯಕ್ಷ ಕುಮಾರಸ್ವಾಮಿ, ಉಪಾಧ್ಯಕ್ಷ ಧನಂಜಯ, ಕಾರ್ಯದರ್ಶಿ ಐಸಾಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ವಿಐಎಸ್‌ಎಲ್ ಉಳಿಸಲು ಎಲ್ಲಾ ರಾಜಕೀಯ ಪಕ್ಷಗಳು ಇಚ್ಛಾಶಕ್ತಿ ಪ್ರದರ್ಶಿಸಲಿ : ಎಚ್. ವಿಶ್ವನಾಥ್

ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಶನಿವಾರ ಬೆಂಬಲ ಸೂಚಿಸಿ ಮಾತನಾಡಿದರು.
       
    ಭದ್ರಾವತಿ, ಫೆ. ೨೫ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಆಡಳಿತ ಮತ್ತು ವಿರೋಧ ಪಕ್ಷಗಳು ಸೇರಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಇಚ್ಛಾಶಕ್ತಿ ಪ್ರದರ್ಶಿಸಬೇಕೆಂದು ಮಾಜಿ ಸಚಿವ, ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದರು.
    ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ನಡೆಸುತ್ತಿರುವ ಹೋರಾಟಕ್ಕೆ ಅವರು ಶನಿವಾರ ಬೆಂಬಲ ಸೂಚಿಸಿ ಮಾತನಾಡಿದರು.
    ಮೈಸೂರು ಮಹಾರಾಜರು ದುಡಿಯುವ ಕೈಗಳಿಗೆ ಉದ್ಯೋಗ ನೀಡಿ ಲಕ್ಷಾಂತರ ಜನರ ಬದುಕಿಗೆ ಆಧಾರವಾಗುವಂತೆ ಆ ಮೂಲಕ ನಾಡಿನ, ದೇಶದ ಅಭಿವೃದ್ಧಿಗಾಗಿ ನಿರ್ಮಿಸಿರುವ ಕೈಗಾರಿಕೆ ಇದಾಗಿದೆ. ಈ ಕೈಗಾರಿಕೆ ಉಳಿಯಬೇಕಾಗಿದ್ದು, ಇದು ನಾಡಿನ ಆಸ್ತಿ, ನಮ್ಮೆಲ್ಲರ ಅಸ್ಮಿತೆಯ ಸಂಕೇತವಾಗಿದೆ. ಪ್ರಸ್ತುತ ಈ ಕಾರ್ಖಾನೆಯ ಶತಮಾನೋತ್ಸವ ಸಂಭ್ರಮದಲ್ಲಿ ಶೋಕೋತ್ಸವ ಮಾಡುವಂತಾಗಿರುವುದು ವಿಷಾದನೀಯ ಬೆಳವಣಿಗೆಯಾಗಿದೆ ಎಂದರು.
    ಜನರ ಬದುಕು ಬೇರೆ, ರಾಜಕಾರಣ ಬೇರೆಯಾಗಿದೆ. ರಾಜಕಾರಣಿಗಳು ಮೊದಲು ಜನರಿಗೆ ಬದುಕು ಕಟ್ಟಿಕೊಡುವ ನಿಟ್ಟಿನಲ್ಲಿ ಚಿಂತಿಸಬೇಕಾಗಿದೆ. ಈ ಕಾರ್ಖಾನೆ ವಿಚಾರ ನಮಗೆ ಸಂಬಂಧಿಸಿದ್ದಲ್ಲ ಎಂಬ ಧೋರಣೆ ಸರಿಯಲ್ಲ. ವಿರೋಧ ಪಕ್ಷದವರು ನಮಗೆ ಅಧಿಕಾರ ನೀಡಿ ಎನ್ನುವ ಬದಲು ನೀಡಿರುವ ಅಧಿಕಾರದ ಮಹತ್ವ ಅರಿತುಕೊಂಡು ಆಡಳಿತ ಪಕ್ಷದೊಂದಿಗೆ ಈ ಕಾರ್ಖಾನೆ ಉಳಿಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.
    ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಎಚ್.ಡಿ ಕುಮಾರಸ್ವಾಮಿ ಅವರಿಗೂ ಅಧಿಕಾರವಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ಅಧಿಕಾರವಿದೆ. ಎಲ್ಲರೂ ಸೇರಿ ಈ ಕಾರ್ಖಾನೆ ಉಳಿವಿಗೆ ಪ್ರಯತ್ನಿಸಬೇಕು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಸಂಸದ ಬಿ.ವೈ ರಾಘವೇಂದ್ರರವರು ಹೆಚ್ಚಿನ ವಿಶೇಷ ಕಾಳಜಿವಹಿಸಿ ಕಾರ್ಖಾನೆ ಇಂದಿನ ಪರಿಸ್ಥಿತಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಗಮನಕ್ಕೆ ತರಬೇಕೆಂದು ಮನವಿ ಮಾಡಿದರು.
    ರಾಜ್ಯದಲ್ಲಿರುವ ಬಿಜೆಪಿ ಡಬ್ಬಲ್ ಇಂಜಿನ್ ಸರ್ಕಾರ ಬಜೆಟ್‌ನಲ್ಲಿ ಅನ್ಯಗತ್ಯವಾಗಿ ಸಾವಿರಾರು ಕೋಟಿ ಬಂಡವಾಳ ವ್ಯಯಮಾಡಲು ಮುಂದಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ. ಕಾರ್ಮಿಕರ ಬದುಕಿಗಾಗಿ, ನಾಡಿನ ಅಭಿವೃದ್ಧಿಗಾಗಿ ಕನಿಷ್ಠ ೫೦೦ ಕೋ. ರು ಬಂಡವಾಳ ಹೂಡಲು ಮುಂದೆ ಬರುತ್ತಿಲ್ಲ. ಖಾಸಗಿ ಕಂಪನಿಗಳು, ಬಂಡವಾಳ ಶಾಹಿಗಳ ಮೇಲೆ ತೋರಿಸುತ್ತಿರುವ ಕಾಳಜಿ ಈ ಕಾರ್ಖಾನೆ ಮೇಲೆ ಏಕೆ ತೋರಿಸುತ್ತಿಲ್ಲ ಎಂದು ಪ್ರಶ್ನಿಸಿದರು.
    ಫೆ.೨೭ರಂದು ವಿಮಾನ ನಿಲ್ದಾಣ ಉದ್ಘಾಟನೆಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಮಿಕರ ಬವಣೆ ಕೇಳಬೇಕು. ಈ ನಿಟ್ಟಿನಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳು ಒಗ್ಗಟ್ಟಾಗಿ ಗಮನ ಸೆಳೆಯುವಂತಾಗಬೇಕು. ನಾನು ಸಹ ಈ ಕಾರ್ಖಾನೆ ಉಳಿವಿಗಾಗಿ ಪ್ರಧಾನಿ ಮೋದಿಯವರಿಗೆ ಮನವಿ ಮಾಡುತ್ತೇನೆ ಎಂದರು.
    ಗುತ್ತಿಗೆ ಕಾರ್ಮಿಕರ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾಯಂ ಹಾಗು ನಿವೃತ್ತ ಕಾರ್ಮಿಕ ಮುಖಂಡರು, ಗುತ್ತಿಗೆ ಕಾರ್ಮಿಕರು ಉಪಸ್ಥಿತರಿದ್ದರು. ಎಚ್. ವಿಶ್ವನಾಥ್ ಅವರಿಗೆ ಕಾರ್ಮಿಕ ಸಂಘಟನೆಗಳಿಂದ ಮನವಿ ಸಲ್ಲಿಸಲಾಯಿತು.