Tuesday, February 28, 2023

ಬಿಎಸ್‌ವೈ ಹುಟ್ಟುಹಬ್ಬದಂದು ಶವದ ಪ್ರತಿಕೃತಿ ನಿರ್ಮಿಸಿ ವಿಕೃತಿ : ಕಿಡಿಗೇಡಿಗಳ ಬಂಧನಕ್ಕೆ ಬಿಜೆಪಿ ಆಗ್ರಹ

ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಪ್ರತಿಕೃತಿ ಶವಯಾತ್ರೆ ನಡೆಸಿ ಆಕ್ರೋಶ

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗು ಸಂಸದ ಬಿ.ವೈ ರಾಘವೇಂದ್ರರವರ ಶವದ ಪ್ರತಿಕೃತಿ ನಿರ್ಮಿಸಿ ದುರ್ವರ್ತನೆ  ತೋರಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಭದ್ರಾವತಿಯಲ್ಲಿ ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ಸಂಜೆ ರಸ್ತೆತಡೆ ನಡೆಸಿ ಪ್ರತಿಭಟಿಸಲಾಯಿತು.
    ಭದ್ರಾವತಿ, ಫೆ. ೨೮: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗು ಸಂಸದ ಬಿ.ವೈ ರಾಘವೇಂದ್ರರವರ ಶವದ ಪ್ರತಿಕೃತಿ ನಿರ್ಮಿಸಿ ದುರ್ವರ್ತನೆ  ತೋರಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಆಗ್ರಹಿಸಿ ಬಿಜೆಪಿ ಮಂಡಲ ವತಿಯಿಂದ ಮಂಗಳವಾರ ಸಂಜೆ ರಸ್ತೆತಡೆ ನಡೆಸಿ ಪ್ರತಿಭಟಿಸಲಾಯಿತು.
    ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಪ್ರಮುಖರು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ಹುಟ್ಟುಹಬ್ಬದಂದು ಕಾಂಗ್ರೆಸ್ ಹಾಗು ಜೆಡಿಎಸ್ ಪಕ್ಷದ ಕೆಲ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಇದಕ್ಕೆ ಇಲ್ಲಿನ ಪೊಲೀಸರು ಸಹ ಸಹಕರಿಸಿದ್ದಾರೆಂದು ಆರೋಪಿಸಿದರು.
    ರಾಜ್ಯ ಹಾಗು ಜಿಲ್ಲೆಗೆ ಬಿ.ಎಸ್ ಯಡಿಯೂರಪ್ಪನವರ ಕೊಡುಗೆ ಅಪಾರವಾಗಿದ್ದು, ಸಂಸದ ಬಿ.ವೈ ರಾಘವೇಂದ್ರರವರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ. ಕ್ಷೇತ್ರದ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕೈಗಾರಿಕೆಗಳ ಇಂದಿನ ಸ್ಥಿತಿಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ದುರಾಡಳಿತ ಕಾರಣವಾಗಿದೆ. ಬಿಜೆಪಿ ಪಕ್ಷ ಎಂದಿಗೂ ಅಭಿವೃದ್ದಿ ವಿಚಾರದಲ್ಲಿ ರಾಜಕಾರಣ ಮಾಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಈ ಎರಡು ಕಾರ್ಖಾನೆಗಳನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ. ಕಾರ್ಮಿಕರ ದಿಕ್ಕು ತಪ್ಪುಸುವ ಕೆಲಸದಲ್ಲಿ ತೊಡಗಿವೆ. ಭವಿಷ್ಯದಲ್ಲಿ ಈ ಎರಡು ಪಕ್ಷಗಳು ಕ್ಷೇತ್ರದಲ್ಲಿ ನೆಲೆ ಕಳೆದುಕೊಳ್ಳಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಕಿಡಿಗೇಡಿಗಳು ನಡೆಸಿರುವ ಶವದ ಪ್ರತಿಕೃತಿಗಳು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮುಖಂಡರುಗಳದ್ದಾಗಿವೆ. ಅವುಗಳು ಕೊಳೆತು ದುರ್ವಾಸನೆ ಬರುವ ಮೊದಲು ಅವುಗಳಿಗೆ ಮುಕ್ತಿ ನೀಡುವ ಕಾರ್ಯದಲ್ಲಿ ಬಿಜೆಪಿ ತೊಡಗಿದೆ. ಈ ಬಾರಿ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳನ್ನು ಕ್ಷೇತ್ರದ ಜನರು ತಿರಸ್ಕರಿಸಲಿದ್ದಾರೆ ಎಂದರು.
    ಪಕ್ಷದ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವ ವಹಿಸಿದ್ದರು. ಪ್ರಮುಖರಾದ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷೆ ಕೆ.ಬಿ ಪವಿತ್ರ ರಾಮಯ್ಯ, ನಗರಸಭಾ ಸದಸ್ಯರಾದ ವಿ. ಕದಿರೇಶ್, ಅನುಪಮ, ಅನ್ನಪೂರ್ಣ, ಕರೀಗೌಡ, ಪ್ರಮುಖರಾದ ತೀರ್ಥಯ್ಯ, ಎಸ್. ಕುಮಾರ್, ಎಂ. ಮಂಜುನಾಥ್, ಜಿ. ಆನಂದಕುಮಾರ್, ಎಂ. ಪ್ರಭಾಕರ್, ಚಂದ್ರಪ್ಪ, ಚನ್ನೇಶ್, ಗೋಕುಲ್ ಕೃಷ್ಣ, ಗಣೇಶ್‌ರಾವ್, ಚಂದ್ರು ದೇವರನರಸೀಪುರ, ನಕುಲ್, ರಾಜಶೇಖರ್, ಹೇಮಾವತಿ ವಿಶ್ವನಾಥ್, ಸುಲೋಚನ, ಅನ್ನಪೂರ್ಣ ಸಾವಂತ್, ಕವಿತಾ ರಾವ್ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಪಾಲ್ಗೊಂಡಿದ್ದರು. ಕೊನೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಪ್ರತಿಕೃತಿ ಶವಯಾತ್ರೆ ನಡೆಸಿ ಅಂತ್ಯಕ್ರಿಯೆ ನೆರವೇರಿಸಿದರು.

ಕೈಗಾರಿಕೆಗಳಿಗೆ ಮೊದಲ ಆದ್ಯತೆ, ಯುವಕರಿಗೆ ಉದ್ಯೋಗ ನೀಡಿ : ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ

ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಶಿವಮೊಗ್ಗ ಜಿಲ್ಲೆ ವೀರಶೈವ ಲಿಂಗಾಯತ ಮಠಾಧೀಶರ ಮಹಾಸಭಾವತಿಯಿಂದ ಬೆಂಬಲ ಸೂಚಿಸಿ ಆನಂದಪುರ ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮಾತನಾಡಿದರು.
    ಭದ್ರಾವತಿ, ಫೆ. ೨೮ : ಕಾರ್ಖಾನೆಗಳು ಮುಚ್ಚಿದ ಮೇಲೆ ವಿಮಾನ ನಿಲ್ದಾಣದಿಂದ ಯಾರಿಗೆ ಪ್ರಯೋಜನ. ಮೊದಲು ಕೈಗಾರಿಕೆಗಳು ಅಭಿವೃದ್ಧಿಗೊಂಡು ಯುವಕರಿಗೆ ಉದ್ಯೋಗ ಲಭಿಸಬೇಕೆಂದು ಶಿವಮೊಗ್ಗ ಜಿಲ್ಲೆ ವೀರಶೈವ ಲಿಂಗಾಯತ ಮಠಾಧೀಶರ ಮಹಾಸಭಾ ಅಧ್ಯಕ್ಷರಾದ ಆನಂದಪುರ ಬೆಕ್ಕಿನ ಕಲ್ಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.
    ನಗರದ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಆದೇಶದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಅನಿರ್ಧಿಷ್ಟಾವಧಿ ಹೋರಾಟಕ್ಕೆ ಮಹಾಸಭಾವತಿಯಿಂದ ಬೆಂಬಲ ಸೂಚಿಸಿ ಶ್ರೀಗಳು ಮಾತನಾಡಿದರು.
    ಜನರ ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸುವುದು ಮಠಾಧೀಶರ ಮೊದಲ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಮಹಾಸಭಾ ಸಂಪೂರ್ಣ ಬೆಂಬಲ ಸೂಚಿಸುತ್ತದೆ. ಮಲೆನಾಡಿನ ಭಾಗದಲ್ಲಿರುವ ಬೃಹತ್ ಕಾರ್ಖಾನೆಗಳು ಒಂದೊಂದಾಗಿ ಮುಚ್ಚುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ. ವಿಐಎಸ್‌ಎಲ್ ಈ ಭಾಗದಲ್ಲಿರುವ ಏಕೈಕ ಕಬ್ಬಿಣ ಕಾರ್ಖಾನೆಯಾಗಿದ್ದು, ಇದು ಕೇವಲ ಭದ್ರಾವತಿ ಜನರಿಗೆ ಮಾತ್ರ ಸೀಮಿತವಾಗಿಲ್ಲ. ಇಡೀ ಮಲೆನಾಡಿನ ಜನರ ಬದುಕಿಗೆ ಆಧಾರವಾಗಿದೆ. ತನ್ನದೇ ಆದ ಪರಂಪರೆ ಹೊಂದುವ ಜೊತೆಗೆ ಸಾಮಾಜಿಕವಾಗಿ, ಆರ್ಥಿಕವಾಗಿ ಕೊಡುಗೆ ನೀಡಿದೆ. ಈ ಕಾರ್ಖಾನೆ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಳುವ ಸರ್ಕಾರಗಳು ಪುನರ್ ಪರಿಶೀಲನೆ ನಡೆಸಬೇಕಾಗಿದೆ ಎಂದರು.
    ವಿಐಎಸ್‌ಎಲ್ ಕಾರ್ಖಾನೆಯನ್ನು ಆಧುನೀಕರಣಗೊಳಿಸಿ ಇನ್ನೂ ಹೆಚ್ಚಿನ ಗುಣಮಟ್ಟದ ಉತ್ಪನ್ನಗಳನ್ನು ಉತ್ಪಾದಿಸುವ ನಿಟ್ಟಿನಲ್ಲಿ ಅಗತ್ಯವಿರುವ ಬಂಡವಾಳ ಹೂಡಬೇಕು. ಇಂದಿನ ಮಾರುಕಟ್ಟೆಗೆ ಪೈಪೋಟಿ ನೀಡುವಂತೆ ಶಕ್ತಿ ತುಂಬಬೇಕು. ಇದ್ಯಾವುದನ್ನೂ ಸಹ ಮಾಡದೆ ಲಾಭ ಪಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು. ಮೊದಲು ಅಗತ್ಯವಿರುವ ಬಂಡವಾಳ ತೊಡಗಿಸಿ ಯುವಕರಿಗೆ ಉದ್ಯೋಗ ನೀಡಿ. ಇದರಿಂದ ಭವಿಷ್ಯದಲ್ಲಿ ಎಲ್ಲಾ ರೀತಿಯ ಬೆಳವಣಿಗೆ ಕಾಣಲು ಸಾಧ್ಯ ಎಂದರು.
    ಅಂದಿನ ಮೈಸೂರು ಮಹಾರಾಜರು ಹೊಂದಿದ್ದ ಸಾಮಾಜಿಕ ಕಾಳಜಿ, ಅಭಿವೃದ್ಧಿ ಕಾರ್ಯಗಳನ್ನು ಪರಿಪೂರ್ಣಗೊಳಿಸುವ ನಿಟ್ಟಿನಲ್ಲಿ ದಿವಾನರು, ತಂತ್ರಜ್ಞರು ಹೊಂದಿದ್ದ ಬದ್ಧತೆ ಇಂದಿನ ಸರ್ಕಾರಗಳಲ್ಲಿ ಕಂಡು ಬರುವುದಿಲ್ಲ. ಶತಮಾನ ಪೂರೈಸಿರುವ ವಿಐಎಸ್‌ಎಲ್ ನಮ್ಮೆಲ್ಲರ ಸ್ವಾಭಿಮಾನದ ಸಂಕೇತವಾಗಿದೆ. ಮೇಡ್ ಇನ್ ಇಂಡಿಯಾ ಹಾಗು ಮೇಕ್ ಇನ್ ಇಂಡಿಯಾ ಈ ಎರಡೂ ಪದಗಳಿಗೂ ಸಾಕಷ್ಟು ವ್ಯತ್ಯಾಸಗಳಿವೆ. ಒಂದು ಉತ್ಪಾದನೆಗೆ ಬೇಕಾದ ಎಲ್ಲಾ ಉತ್ಪನ್ನಗಳನ್ನು ನಮ್ಮಲ್ಲಿಯೇ ಉತ್ಪಾದಿಸುವ ಮೂಲಕ ನಮ್ಮದೇ ಆದ ಒಂದು ಅಸ್ತಿತ್ವ ಕಂಡುಕೊಳ್ಳುವುದು ಮೇಕ್ ಇನ್ ಇಂಡಿಯಾ ಎಂಬುದಾಗಿದೆ. ಈ ಪದದ ಅರ್ಥಕ್ಕೆ ಚ್ಯುತಿ ಬರದಂತೆ ಆಳುವ ಸರ್ಕಾರಗಳು ಎಚ್ಚರ ವಹಿಸಬೇಕೆಂದರು.
    ವಿಮಾನ ನಿಲ್ದಾಣಗಳಿಂದ ಉದ್ಯಮಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಆದರೆ ಇಲ್ಲಿ ಯಾವುದೇ ಕೈಗಾರಿಕೆಗಳು ಇಲ್ಲದಿದ್ದಲ್ಲಿ ಉದ್ಯಮಿಗಳು ಬರಲು ಸಾಧ್ಯವೇ. ಮೊದಲು ಕೈಗಾರಿಕೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಈ ಕುರಿತು ಈಗಾಗಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದರು.
    ಬಿಳಿಕಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಮಾರು ೨೦ಕ್ಕೂ ಹೆಚ್ಚು ವಿವಿಧ ಮಠಗಳ ಸ್ವಾಮೀಜಿಗಳು ಪಾಲ್ಗೊಂಡಿದ್ದರು.