Saturday, March 4, 2023

ಎಂಪಿಎಂ ಬೊಂಬು ಸಂಗ್ರಹದಲ್ಲಿ ಬೆಂಕಿ ಅವಘಡ : ಲಕ್ಷಾಂತರ ರು. ಹಾನಿ

ರಾಜ್ಯ ಸರ್ಕಾರಿ ಸ್ವಾಮ್ಯದ ಭದ್ರಾವತಿ ಮೈಸೂರು ಕಾಗದ ಕಾರ್ಖಾನೆಯ ಸಕ್ಕರೆ ಘಟಕದ ಸಮೀಪದಲ್ಲಿರುವ ಬೊಂಬು ಸಂಗ್ರಹದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. 

    ಭದ್ರಾವತಿ, ಮಾ. ೪ : ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ ಸಕ್ಕರೆ ಘಟಕದ ಸಮೀಪದಲ್ಲಿರುವ ಬೊಂಬು ಸಂಗ್ರಹದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರು. ಹಾನಿ ಸಂಭವಿಸಿದೆ.
    ಸುಮಾರು ೮ ವರ್ಷಗಳಿಂದ ಸ್ಥಗಿತಗೊಂಡಿರುವ ಎಂಪಿಎಂ ಕಾರ್ಖಾನೆಯಲ್ಲಿ ಈಗಾಗಲೇ ಯಂತ್ರೋಪಕರಣಗಳು ತುಕ್ಕು ಹಿಡಿದಿದ್ದು, ಖಾಲಿ ಜಾಗಗಳಲ್ಲಿ ಗಿಡಗಂಟಿಗಳು ಬೆಳೆದು ನಿಂತಿವೆ. ಈ ನಡುವೆ ಇದೀಗ ಬೆಂಕಿ ಅವಘಡ ಸಂಭವಿಸಿದ್ದು, ಸಕ್ಕರೆ ಘಟಕದ ಸಮೀಪದಲ್ಲಿರುವ ಬೊಂಬು ಸಂಗ್ರಹದಲ್ಲಿ ಬೆಂಕಿ ಅವಘಡದಿಂದ ಲಕ್ಷಾಂತರ ರು. ಮೌಲ್ಯದ ಮರಮುಟ್ಟುಗಳು ಸುಟ್ಟುಕರಕಲಾಗಿವೆ.
ಶುಕ್ರವಾರ ಮಧ್ಯಾಹ್ನ ೧೨.೩೦ರ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಸುಮಾರು ೧೦ ಗಂಟೆಗಳ ನಿರಂತರ ಕಾರ್ಯಾಚರಣೆ ನಡೆಸಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾದರು. ಅಲ್ಲದೆ ಇದರಿಂದಾಗಿ ಹೆಚ್ಚಿನ ಹಾನಿ ತಪ್ಪಿದೆ.
    ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ಇಲಾಖೆಯ ೩, ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಯ ೧ ಅಗ್ನಿಶಾಮಕ ವಾಹನಗಳನ್ನು ಬಳಸಿಕೊಳ್ಳಲಾಗಿತ್ತು. ಅಗ್ನಿಶಾಮಕ ಇಲಾಖೆಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಅಶೋಕ್‌ಕುಮಾರ್, ಇಲಾಖೆಯ ಸ್ಥಳೀಯ ಸಿಬ್ಬಂದಿಗಳಾದ ಹುಲಿಯಪ್ಪ, ಬಾಬುಗೌಡ, ಅಶೋಕ್, ವಿನೂತನ್, ಮಹೇಂದ್ರ, ರಾಜಾನಾಯ್ಕ, ಹರೀಶ್, ಪ್ರಜ್ವಲ್, ವೀರೇಶ್, ಚಾಲಕರಾದ ಮಂಜುನಾಥ್, ರಾಘವೇಂದ್ರ, ರಮೇಶ್, ಎಂಪಿಎಂ ಅಗ್ನಿಶಾಮಕ ವಿಭಾಗದ ಮುರುಳಿ ಮೋಹನ್, ಉಮೇಶ್ ಸೇರಿದಂತೆ ಸುಮಾರು ೨೦ ಮಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಹೊಸಸೇತುವೆ ಕಾಮಗಾರಿ ಕಳಪೆ, ಅವೈಜ್ಞಾನಿಕ : ಪ್ರತಿಭಟನೆ

ಭದ್ರಾವತಿ ನಗರದ ಹೃದಯ ಭಾಗದಲ್ಲಿ ಭದ್ರಾ ಹಳೇಸೇತುವೆ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿ, ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿ ಶನಿವಾರ ತಾಲೂಕು ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು.
    ಭದ್ರಾವತಿ, ಮಾ. ೪ : ನಗರದ ಹೃದಯ ಭಾಗದಲ್ಲಿ ಭದ್ರಾ ಹಳೇಸೇತುವೆ ಪಕ್ಕದಲ್ಲಿ ನಿರ್ಮಾಣಗೊಳ್ಳುತ್ತಿರುವ ಹೊಸಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿ, ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿ ಶನಿವಾರ ತಾಲೂಕು ಸಾರ್ವಜನಿಕ ಹಿತರಕ್ಷಣಾ ಸಮಿತಿ ವತಿಯಿಂದ ರಸ್ತೆ ತಡೆ ನಡೆಸಿ ಪ್ರತಿಭಟಿಸಲಾಯಿತು. 
ನಗರಸಭೆ ವಾರ್ಡ್ ನಂ.೩ರ ವ್ಯಾಪ್ತಿಯಲ್ಲಿ ಕಳೆದ ಸುಮಾರು ೫ ವರ್ಷಗಳಿಂದ ಸೇತುವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ಮಂದಗತಿಯಲ್ಲಿ ಸಾಗುವ ಜೊತೆಗೆ ಕಳಪೆಯಿಂದ ಕೂಡಿದೆ. ಅಲ್ಲದೆ ಸೇತುವೆ ಕಾಮಗಾರಿ ಮೂಲ ನೀಲನಕ್ಷೆಯಂತೆ ಕೈಗೊಳ್ಳದೆ ಚುನಾವಣೆ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಒತ್ತಡಕ್ಕೆ ಮಣಿದು ತರಾತುರಿಯಲ್ಲಿ ಅವೈಜ್ಞಾನಿಕವಾಗಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದರು. 
ಕಾಮಗಾರಿಯನ್ನು ಮೂಲ ನೀಲನಕ್ಷೆಯಂತೆ ಸೇತುವೆ ಸಮೀಪದಲ್ಲಿರುವ ಕಟ್ಟಡಗಳನ್ನು ತೆರವುಗೊಳಿಸಿ ಕೈಗೊಳ್ಳಬೇಕು. ಆದರೆ ಇದೀಗ ತರಾತುರಿಯಲ್ಲಿ ಸೇತುವೆ ರಸ್ತೆಯನ್ನು ಓರೆಯಾಗಿ ನಿರ್ಮಾಣ ಮಾಡಲಾಗುತ್ತಿದೆ. ಇದರಿಂದ ವಾಹನಗಳ ಸಂಚಾರಕ್ಕೆ, ಪಾದಚಾರಿಗಳಿಗೆ ತೊಂದರೆಯಾಗಲಿದೆ. ತಕ್ಷಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ಕಟ್ಟಡಗಳನ್ನು ತೆರವುಗೊಳಿಸಿ ಮೂಲ ನೀಲನಕ್ಷೆಯಂತೆ ಕೈಗೊಳ್ಳಬೇಕೆಂದು ಆಗ್ರಹಿಸಿದರು. 

    ತಹಸೀಲ್ದಾರ್ ಮೂಲಕ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ನಗರಸಭಾ ಸದಸ್ಯರಾದ ಜಾರ್ಜ್, ಆರ್. ಮೋಹನ್‌ಕುಮಾರ್, ಉದಯ್‌ಕುಮಾರ್, ಬಸವರಾಜ ಬಿ. ಆನೆಕೊಪ್ಪ, ನಗರಸಭೆ ಮಾಜಿ ಅಧ್ಯಕ್ಷ ಆರ್. ಆರ್. ಕರುಣಾಮೂರ್ತಿ, ಮಾಜಿ ಉಪಾಧ್ಯಕ್ಷೆ ಸಾವಿತ್ರಮ್ಮ ಪುಟ್ಟೇಗೌಡ,  ಮಾಜಿ ಸದಸ್ಯರಾದ ಎಂ.ಎ ಅಜಿತ್, ಮೋಹನ್‌ರಾವ್, ಗುಣಶೇಖರ್, ಮಾಜಿ ಉಪಮೇಯರ್ ಮಹಮದ್ ಸನಾವುಲ್ಲಾ, ಪ್ರಮುಖರಾದ ಅಮೋಸ್, ನಕುಲ್, ಗೋಕುಲ್ ಕೃಷ್ಣ, ಪ್ರಕಾಶ್, ಸೈಯದ್ ಅಜ್ಮಲ್, ಧರ್ಮರಾಜ್, ತಬ್ರೇಸ್ ಖಾನ್, ವೆಂಕಟೇಶ್ ಉಜ್ಜನಿಪುರ, ಸೇರಿದಂತೆ ಸ್ಥಳೀಯ ಮುಖಂಡರು, ನಿವಾಸಿಗಳು ಪಾಲ್ಗೊಂಡಿದ್ದರು. 

ಎನ್‌ಡಿಪಿಎಸ್ ಪ್ರಕರಣ : ಇಬ್ಬರಿಗೆ ೬ ತಿಂಗಳ ಕಠಿಣ ಕಾರಾವಾಸ ಶಿಕ್ಷೆ


    ಭದ್ರಾವತಿ, ಮಾ. ೪ : ಎನ್‌ಡಿಪಿಎಸ್ ಪ್ರಕರಣದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ೬ ತಿಂಗಳ ಕಠಿಣ ಕಾರಾವಾಸ ಶಿಕ್ಷೆ ಮತ್ತು ೧೦ ಸಾವಿರ ರು. ದಂಡ ವಿಧಿಸಿ ತೀರ್ಪು ನೀಡಿದೆ.
    ಇಮ್ರಾನ್‌ಪಾಷಾ(೨೨) ಮತ್ತು ಸೈಯದ್ ರೋಷನ್(೩೮) ಶಿಕ್ಷೆಗೊಳಗಾಗಿದ್ದು, ಪೇಪರ್‌ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಠಾಣಾಧಿಕಾರಿ ಶಿಲ್ಪಾ ನಾಯನೇಗಲಿ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪ್ರಧಾನ ಸಿ.ಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಆರ್. ಯತೀಶ್ ಆರೋಪ ದೃಡಪಟ್ಟ ಹಿನ್ನಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರಿ ಅಭಿಯೋಜಕ ಬಿ.ಎಚ್ ರಂಗಪ್ಪ ವಾದ ಮಂಡಿಸಿದ್ದರು.

ವಾಹನದ ಬಣ್ಣ ಬದಲಿಸಿ, ಹೆಚ್ಚಿನ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡ ಯುವಕನಿಗೆ ದಂಡ

    ಭದ್ರಾವತಿ, ಮಾ. ೪ : ಸಾರಿಗೆ (ಆರ್‌ಟಿಓ) ಅಧಿಕಾರಿಗಳಿಗೆ ಮಾಹಿತಿ ನೀಡದೆ ವಾಹನದ ಬಣ್ಣ ಬದಲಿಸಿಕೊಂಡು, ಹೆಚ್ಚಿನ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡ ಹಿನ್ನಲೆಯಲ್ಲಿ ನ್ಯಾಯಾಲಯ ದಂಡ ವಿಧಿಸಿ ಶಿಕ್ಷೆ ನೀಡಿರುವ ಘಟನೆ ನಡೆದಿದೆ.
    ವಾಹನ ಖರೀದಿಸುವ ವೇಳೆ ಆರ್‌ಸಿ ದಾಖಲಾತಿಯಲ್ಲಿ ನಮೂದಾಗಿರುವ ವಾಹನದ ಬಣ್ಣ ಬಳಿಕ ಬದಲಿಸಿಕೊಳ್ಳಲು ಸಾರಿಗೆ(ಆರ್‌ಟಿಓ) ಅಧಿಕಾರಿಗಳಿಗೆ ಮಾಹಿತಿ ನೀಡಬೇಕಾಗುತ್ತದೆ. ಆದರೆ ಗಗನ್ ಎಂಬ ಯುವಕ ಯಾವುದೇ ಮಾಹಿತಿ ನೀಡದೆ ವಾಹನದ ಬಣ್ಣ ಬದಲಿಸಿಕೊಂಡಿದ್ದು, ಅಲ್ಲದೆ ಹೆಚ್ಚಿನ ಶಬ್ದದ ಸೈಲೆನ್ಸರ್ ಅಳವಡಿಸಿಕೊಂಡಿರುವುದು ಸಂಚಾರಿ ಪೊಲೀಸರ ತಪಾಸಣೆ ವೇಳೆ ತಿಳಿದುಬಂದಿದೆ. ಹೆಲ್ಮೆಟ್ ಧರಿಸದೆ ವಾಹನ ಚಾಲನೆ ಮಾಡುವಾಗ ಈತ ಸಿಕ್ಕಿ ಬಿದ್ದಿದ್ದು, ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ನ್ಯೂಟೌನ್ ಪೊಲೀಸ್ ಠಾಣಾಧಿಕಾರಿ ರಂಗನಾಥ ಅಂತರಗಟ್ಟಿ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಪ್ರಿನ್ಸಿಪಲ್ ಸಿವಿಲ್ ಜಡ್ಜ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರಾದ ಯತೀಶ್ ದಂಡದ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.