Thursday, March 23, 2023

ಹೊಸ ಉತ್ಸಾಹ, ಹಲವು ಭರವಸೆಗಳೊಂದಿಗೆ ಜಾನ್ ಬೆನ್ನಿ ವಿಧಾನಸಭಾ ಚುನಾವಣೆಗೆ ಸ್ಪರ್ಧೆ

ಸುಮಾರು ೧ ವರ್ಷದಿಂದ ಕ್ಷೇತ್ರದಾದ್ಯಂತ ವ್ಯಾಪಕ ಪ್ರಚಾರ

ಜಾನ್ ಬೆನ್ನಿ
    ಭದ್ರಾವತಿ, ಮಾ. ೨೩ : ಈ ಬಾರಿ ಸಹ ವಿಧಾನಸಭಾ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಜಾನ್ ಬೆನ್ನಿ ಹೊಸ ಉತ್ಸಾಹ ಹಾಗು ಹಲವು ಭರವಸೆಗಳೊಂದಿಗೆ ಸ್ಪರ್ಧಿಸುತ್ತಿದ್ದು, ಕಳೆದ ಸುಮಾರು ೧ ವರ್ಷದಿಂದ ಕ್ಷೇತ್ರದಾದ್ಯಂತ ವ್ಯಾಪಕ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕೆಲವು ದಿನಗಳಿಂದ ಪ್ರಚಾರ ಮತ್ತಷ್ಟು ತೀವ್ರಗೊಳಿಸಿದ್ದು, ಕ್ಷೇತ್ರದ ಪ್ರತಿಯೊಂದು ಮನೆಗೆ ತೆರಳಿ ಮತದಾರರಲ್ಲಿ ವಿಶ್ವಾಸ ಮೂಡಿಸುವ ಮೂಲಕ ಮತಯಾಚನೆ ಕೈಗೊಂಡಿದ್ದಾರೆ.
    ಸಾಮಾನ್ಯ ಕುಟುಂಬದ ವ್ಯಕ್ತಿಯಾಗಿರುವ ಜಾನ್ ಬೆನ್ನಿ ನಗರದಲ್ಲಿ ಸುಮಾರು ೩-೪ ದಶಕಗಳಿಂದ ವಾಹನ ಚಾಲನಾ ತರಬೇತಿ ಶಿಕ್ಷಕರಾಗಿ ಗುರುತಿಸಿಕೊಂಡು ಚಿರಪರಿಚಿತರಾಗಿದ್ದಾರೆ. ಕ್ಷೇತ್ರದ ಜನರ ಭವಿಷ್ಯದ ಬದುಕಿಗೆ ಹೊಸ ಮುನ್ನುಡಿ ಬರೆಯಬೇಕೆಂಬ ಹಂಬಲದೊಂದಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ವಿಶೇಷ ಎಂದರೆ ಇವರು ಯಾವುದೇ ರಾಜಕೀಯಗಳ ಪಕ್ಷಗಳಿಗೆ ಜೋತು ಬೀಳದೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ.   ತಿಂಗಳಿನಿಂದ
    ನಗರದ ಜನರ ಜೀವನಾಡಿಯಾಗಿರುವ ವಿಐಎಸ್‌ಎಲ್ ಮತ್ತು ಎಂಪಿಎಂ ಎರಡು ಕಾರ್ಖಾನೆಗಳು ಅವನತಿ ದಾರಿ ಹಿಡಿದು ಸಾವಿರಾರು ಕಾರ್ಮಿಕರು, ಲಕ್ಷಾಂತರ ಕುಟುಂಬಗಳು ಬೀದಿ ಪಾಲಾಗಿದ್ದು, ನಿರುದ್ಯೋಗ ಸಮಸ್ಯೆ ಉಲ್ಬಣಗೊಂಡಿದೆ, ಬೇರೆಡೆಗೆ ವಲಸೆ ಹೋಗುವವರ ಸಂಖ್ಯೆ ಹೆಚ್ಚಾಗುತ್ತಿದೆ, ಆರ್ಥಿಕ ಮಟ್ಟ ಕುಸಿತವಾಗಿದೆ ಹಾಗು ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಇಂತಹ ಸಂದಿಗ್ದ ಪರಿಸ್ಥಿತಿಯಲ್ಲಿ ಎದುರಾಗುತ್ತಿರುವ ಚುನಾವಣೆ ನಮ್ಮೆಲ್ಲರ ಪಾಲಿಗೆ ಮಹತ್ವದ್ದಾಗಿದೆ. ನಿಮ್ಮ ಅಧಿಕಾರ ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿದೆ. "ನಿಂತಿರುವುದು ನಾನಲ್ಲ ನೀವೇ" ಅಭ್ಯರ್ಥಿ ಎಂದು ಪರಿಗಣಿಸಿ ನನಗೆ ಒಂದು ಅವಕಾಶ ಕೊಡಿ. ಅವಕಾಶ ನೀಡಿ ಎಂಬ ಮನವಿ ಇವರದ್ದಾಗಿದೆ. ಅಲ್ಲದೆ ಸುಮಾರು ೧೧ ಭರವಸೆಗಳೊಂದಿಗೆ ಮತಯಾಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಮಾ.೨೫ರಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ

    ಭದ್ರಾವತಿ, ಮಾ. ೨೩ : ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ವತಿಯಿಂದ ಮಾ.೨೫ರ ಮಧ್ಯಾಹ್ನ ೩ ಗಂಟೆಗೆ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ಸರ್ವಮಂಗಳಮ್ಮ ಶಿವಶಂಕರಯ್ಯ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.
    ಪ್ರಶಸ್ತಿ ಪುರಸ್ಕೃತರಾದ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಅಧ್ಯಕ್ಷೆ ಡಾ.ಎಸ್.ಜಿ ಸುಶೀಲಮ್ಮ ಸಮರಂಭ ಉದ್ಘಾಟಿಸುವರು. ತಾಲೂಕು ವೀರಶೈವ ಲಿಂಗಾಯತ ಮಹಿಳಾ ಸಮಾಜದ ಅಧ್ಯಕ್ಷೆ ಆರ್.ಎಸ್ ಶೋಭ ಅಧ್ಯಕ್ಷತೆ ವಹಿಸಲಿದ್ದಾರೆ.
    ಪ್ರಶಸ್ತಿ ಸ್ಥಾಪಕರಾದ ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ ಉಪಸ್ಥಿತರಿರುವರು. ಬೆಂಗಳೂರಿನ ವಕೀಲರಾದ ಶ್ರೀದೇವಿ ಅಂಚಿ ಚೀಟಿ ಮತ್ತು ಮಹಿಳೆ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದು, ಸಮಾಜದ ಉಪಾಧ್ಯಕ್ಷೆ ಬಿ.ಎಸ್ ಭಾಗ್ಯಲಕ್ಷ್ಮಿ, ರಾಜ್ಯಮಟ್ಟದ ಕರಾಟೆಪಟು ಸಿಂಚನ ಅವರಿಗೆ ಸನ್ಮಾನ ನಡೆಯಲಿದೆ.
    ಸಮಾಜದ ಗೌರವಾಧ್ಯಕ್ಷೆ ಗೌರಮ್ಮ ಶಂಕರಯ್ಯ, ಸಲಹೆಗಾರರಾದ ಯಶೋಧ ವೀರಭದ್ರಪ್ಪ, ಪ್ರಧಾನ ಕಾರ್ಯದರ್ಶಿ ನಾಗರತ್ನ ವಾಗೀಶ್ ಕೋಠಿ ಮತ್ತು ವೀರಶೈವ ಸೇವಾಸಮಿತಿ ಅಧ್ಯಕ್ಷ ಆರ್. ಮಹೇಶ್‌ಕುಮಾರ್ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಮಾಜದ ಅಧ್ಯಕ್ಷೆ ಆರ್.ಎಸ್ ಶೋಭ ಕೋರಿದ್ದಾರೆ.

ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಗೌರಮ್ಮ ಮಾಹಾದೇವ ಅವಿರೋಧ ಆಯ್ಕೆ

ಗ್ರಾಮ ಪಂಚಾಯಿತಿ ಸದಸ್ಯೆ ಕಾಂಗ್ರೆಸ್ ಸೇರ್ಪಡೆ 

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗೌರಮ್ಮ ಮಹಾದೇವ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಭದ್ರಾವತಿ, ಮಾ. ೨೩ : ತಾಲೂಕಿನ ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಗೌರಮ್ಮ ಮಹಾದೇವ ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಗೌರಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯಾದ ತಾಲೂಕು ಕಾರ್ಯನಿರ್ವಹಣಾಧಿಕಾರಿ ರಮೇರ್ಶರವರು ಅವಿರೋಧ ಆಯ್ಕೆ ಘೋಷಿಸಿದರು.
    ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಒಟ್ಟು ೧೩ ಸದಸ್ಯ ಬಲಹೊಂದಿದ್ದು, ಕಾಂಗ್ರೆಸ್ ಪಕ್ಷದ ಬೆಂಬಲಿತರು ಅಧಿಕಾರದ ಚುಕ್ಕಾಣಿ ಹಿಡಿದ್ದಾರೆ. ಒಪ್ಪಂದ ಮಾಡಿಕೊಂಡು ಅಧಿಕಾರ ಹಂಚಿಕೆ ಮಾಡಿಕೊಳ್ಳಲಾಗಿದೆ. ಅದರಂತೆ ಅಧ್ಯಕ್ಷರಾಗಿದ್ದ ಪಾರ್ವತಿ ಬಾಯಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ನಡೆದ ಚುನಾವಣೆಯಲ್ಲಿ ಗೌರಮ್ಮ ಆಯ್ಕೆಯಾಗಿದ್ದಾರೆ.
   ಗ್ರಾಮ ಪಂಚಾಯಿತಿ ಸದಸ್ಯೆ ಕಾಂಗ್ರೆಸ್ ಸೇರ್ಪಡೆ  :
    ಗ್ರಾಮ ಪಂಚಾಯ್ತಿ ಸದಸ್ಯೆ ನೀಲಾ ಬಾಯಿ ಹಾಗೂ ಅವರ ಪತಿ ಚಂದ್ರನಾಯ್ಕರವರು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮಣಿಶೇಖರ್‌ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾದರು.
    ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಆರ್.ಎನ್ ರುದ್ರೇಶ್, ಸದಸ್ಯರಾದ ಎಂ. ಜಯಣ್ಣ, ಕುಬೇರ ನಾಯ್ಕ, ಸಿ. ವಿಶ್ವನಾಥ್, ಮಲಕ್ ಬಿ ವೀರಪ್ಪನ್, ಸ್ವಾಮಿನಾಥನ್, ಜಿ.ಆರ್ ನಾಗರಾಜಪ್ಪ, ಭಾಗ್ಯ, ಉಮಾದೇವಿ ತಿಪ್ಪೇಶ್, ಪಾರ್ವತಿ ಬಾಯಿ, ಸಿದ್ದಮ್ಮ ನಾಗೇಶ್, ಕೂಡ್ಲಿಗೆರೆ ವಿಎಸ್‌ಎಸ್‌ಎನ್ ಅಧ್ಯಕ್ಷ ಎನ್.ಎಚ್ ಮಹೇಶ್, ಬ್ಲಾಕ್ ಕಾಂಗ್ರೆಸ್ ಸಮಿತಿ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಮಣಿ ಎಎನ್‌ಎಸ್, ಅನಿತಾ ಮಲ್ಲೇಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಪರಮೇಶ್ವರಪ್ಪ, ಮುಖಂಡರಾದ ಎಸ್. ಮಹಾದೇವ, ಕಲ್ಪನಹಳ್ಳಿ ಕಿರ್ಯಾನಾಯ್ಕ, ಪ್ರವೀಣ್ ನಾಯ್ಕ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು, ಗ್ರಾಮದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.


ಭದ್ರಾವತಿ ಕೂಡ್ಲಿಗೆರೆ ಗ್ರಾಮ ಪಂಚಾಯ್ತಿ ಸದಸ್ಯೆ ನೀಲಾ ಬಾಯಿ ಹಾಗೂ ಅವರ ಪತಿ ಚಂದ್ರನಾಯ್ಕರವರು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ, ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮಣಿಶೇಖರ್‌ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾದರು.