Monday, March 27, 2023

ಬಡವರಿಗೆ ನಿವೇಶನ ಹಂಚಿ : ಪಿಡಿಓ ಅಮಾನತುಗೊಳಿಸಿ

ತಾಲೂಕು ಪಂಚಾಯಿತಿ ಕಚೇರಿ ಮುಂಭಾಗ ಪ್ರತಿಭಟನೆ

ಭದ್ರಾವತಿ ಹಳೇ ಹಿರಿಯೂರು ಗ್ರಾಮಠಾಣಾ ಜಾಗ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ಹಂಚಿಕೆ ಮಾಡುವಂತೆ ಹಾಗೂ ಗ್ರಾಮ ಪಂಚಾಯಿತಿ ಪಿಡಿಓ ಭ್ರಷ್ಟ ಅಧಿಕಾರಿಯನ್ನು ಅಮಾನತ್ತು ಮಾಡಲು ಆಗ್ರಹಿಸಿ ಸೋಮವಾರ ತಾಲೂಕು ಪಂಚಾಯತಿ ಮುಂಭಾಗ ಹಿರಿಯೂರು ಗ್ರಾಮಾಭವೃದ್ಧಿ ಹೋರಾಟ ಸಮಿತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಡಾ. ರಾಜಕುಮಾರ್ ಅಭಿಮಾನಿಗಳ ಸಂಘದ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ಮಾ. ೨೭: ಹಳೇ ಹಿರಿಯೂರು ಗ್ರಾಮಠಾಣಾ ಜಾಗ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ಹಂಚಿಕೆ ಮಾಡುವಂತೆ ಹಾಗೂ ಗ್ರಾಮ ಪಂಚಾಯಿತಿ ಪಿಡಿಓ ಭ್ರಷ್ಟ ಅಧಿಕಾರಿಯನ್ನು ಅಮಾನತ್ತು ಮಾಡಲು ಆಗ್ರಹಿಸಿ ಸೋಮವಾರ ತಾಲೂಕು ಪಂಚಾಯತಿ ಮುಂಭಾಗ ಹಿರಿಯೂರು ಗ್ರಾಮಾಭವೃದ್ಧಿ ಹೋರಾಟ ಸಮಿತಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಮತ್ತು ಡಾ. ರಾಜಕುಮಾರ್ ಅಭಿಮಾನಿಗಳ ಸಂಘದ ಪ್ರತಿಭಟನೆ ನಡೆಸಲಾಯಿತು.
    ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಪ್ರಮುಖರು, ಹಿರಿಯೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳೇಹಿರಿಯೂರು ಗ್ರಾಮಠಾಣಾ ವಿಸ್ತೀರ್ಣ ೧೭.೦೮ ಎಕರೆ ಜಾಗದಲ್ಲಿ ಸರ್ಕಾರದ ವತಿಯಿಂದ ೧೯೯೨ರ ಅವಧಿಯಲ್ಲಿ ೧೩೯ ಕುಟುಂಬಕ್ಕೆ ನಿವೇಶನ ಪತ್ರವನ್ನು ಹಂಚಿಕೆ ಮಾಡಿದ್ದು, ಅಲ್ಲಿಂದ ಇಲ್ಲಿಯವರೆಗೆ ಇನ್ನೂ ನೂರಾರು ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡುವಷ್ಟು ಜಾಗವಿದ್ದರೂ ೩೦ ವರ್ಷಗಳಿಂದ ನಿವೇಶನ ರಹಿತ ದಲಿತ, ಹಿಂದುಳಿದ ವರ್ಗದ ಬಡಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡದೆ ಹಾಲಿ ಗ್ರಾಮಪಂಚಾಯತಿ ಸದಸ್ಯರುಗಳ ಕುಟುಂಬದವರು ಹಾಗೂ ಹಣವಂತರು ಎಕರೆಗಟ್ಟಲೇ ಜಾಗವನ್ನು ಆಕ್ರಮಿಸಿಕೊಂಡಿದ್ದು, ಇದರ ಬಗ್ಗೆ ನಮ್ಮ ಸಂಘಟನೆವತಿಯಿಂದ ೩ ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ ಎಂದರು.            
    ಹೋರಾಟದ ಫಲವಾಗಿ ದಿನಾಂಕ ೨೦-೦೮-೨೦೨೨ರಂದು ಜಿಲ್ಲಾಧಿಕಾರಿಯವರು ತಾಲೂಕು ಪಂಚಾಯಿತಿ ಅಧಿಕಾರಿಯವರಿಗೆ ಮಾಡಿದ ಆದೇಶದ ಅನ್ವಯ, ತಾಲೂಕು ಪಂಚಾಯಿತಿ ಮತ್ತು ಗ್ರಾಮಪಂಚಾಯಿತಿ ಅಧಿಕಾರಿಗಳು ಭೂಮಾಪನ ಇಲಾಖೆವತಿಯಿಂದ ಸರ್ವೆ ಕಾರ್ಯ ನಡೆಸಿ, ಗಡಿ ಗುರುತಿಸಿಕೊಟ್ಟ ನಂತರ  ಗ್ರಾಮಠಾಣಾ ತೆರುವು ಕಾರ್ಯಚರಣೆ ಮಾಡಲು ದಿನಾಂಕ ೨೬-೦೯-೨೦೨೨ರಂದು ಪೋಲಿಸ್ ಬಂದೋಬಸ್ತ್ ನೊಂದಿಗೆ  ಮುಂದಾದ ಸಂದರ್ಭದಲ್ಲಿ ರಾಜಕೀಯ ಒತ್ತಡದಿಂದ ಅಧಿಕಾರಿಗಳು ನಡೆಯಬೇಕಿದ್ದ ತೆರುವು ಕಾರ್ಯಚರಣೆಯನ್ನು ಸ್ಥಗಿತಗೊಳಿಸಿ, ಹೋರಾಟಗಾರರ ಮೇಲೆ ಉದ್ದೇಶ ಪೂರ್ವಕವಾಗಿ ಗ್ರಾಮಪಂಚಾಯತಿ ಪಿಡಿಓ ಹಾಗೂ ಸದಸ್ಯರುಗಳಿಂದ ಜಾತಿ ನಿಂದನೆ, ಮಹಿಳಾ ಸದಸ್ಯರ ಮೇಲೆ ದೌರ್ಜನ್ಯ, ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆಂದು ಪೇಪರ್ ಟೌನ್    ಪೋಲಿಸ್ ಠಾಣೆಯಲ್ಲಿ ದಿನಾಂಕ ೨೮-೦೯-೨೦೨೨ರಂದು ೨ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಆರೋಪಿಸಿದರು.
    ಹೋರಾಟಗಾರರ ಬಲವನ್ನು ಕುಗ್ಗಿಸುವ ವ್ಯರ್ಥ ಪ್ರಯತ್ನವನ್ನು ಮಾಡಿರುತ್ತಾರೆ. ಇದಕ್ಕೆ ನಮ್ಮ ಸಂಘಟನೆ ಯಾವ ಬೆದರಿಕೆಗಳಿಗೆ ಕುಗ್ಗದೆ ಕಾನೂನಿನ ರೀತಿಯಲ್ಲಿ ಹೋರಾಟ ನಡೆಸಿಕೊಂಡು ಬರುತ್ತಿದ್ದೇವೆ.  ಗ್ರಾಮ ಪಂಚಾಯಿತಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಪರಮೇಶ್ವರಪ್ಪ ಪಂಚಾಯಿತಿಯಲ್ಲಿ ನಡೆಸಿರುವ ಹಲವಾರು ಭ್ರಷ್ಟಾಚಾರದ ಬಗ್ಗೆ ಸಂಘಟನೆ ವತಿಯಿಂದ ದಾಖಲೆ ಸಮೇತ ಮೇಲಾಧಿಕಾರಿಗಳಿಗೆ ದೂರನ್ನು ಸಲ್ಲಿಸಿದರೂ, ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಒಳಗಾಗಿ ಇಂತಹ ಭ್ರಷ್ಟ ಅಧಿಕಾರಿಗಳ ಮೇಲೆ ಇದುವರೆವಿಗೂ ಯಾವುದೇ ಕಾನೂನು ರೀತಿಯ ಕಠಿಣ ಕ್ರಮ ಕೈಗೊಳ್ಳದೆ, ಅಮಾನತುಗೊಳಿಸದೇ ರಕ್ಷಿಸುತ್ತಿರುವುದರಿಂದ ಹಾಗೂ ಹಳೇ ಹಿರಿಯೂರು ಗ್ರಾಮಾಠಾಣಾ ಜಾಗವನ್ನು ತೆರುವು ಗೊಳಿಸದೇ ಒತ್ತುವರಿ ಮಾಡಿಕೊಂಡಿರುವವರನ್ನು ರಕ್ಷಿಸುತ್ತಿರುವ ಅಧಿಕಾರಿಗಳ ವಿರುದ್ಧ, ಗ್ರಾಮದ ನಿವೇಶನ ರಹಿತ ಬಡ ಕುಟುಂಬಗಳಿಗೆ ನ್ಯಾಯ ಕೊಡಿಸುವ ಉದ್ದೇಶದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.                                        
    ನ್ಯಾಯ ಸಮ್ಮತ ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಮುಂದುವರೆಸಲಿದ್ದೇವೆ. ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಎಚ್ಚರಿಸಿದರು.
    ಪ್ರತಿಭಟನೆಯಲ್ಲಿ ಪ್ರಮುಖರಾದ ಸಂತೋಷ್, ಸತ್ಯನಾರಾಯಣ್ ರಾವ್, ರವಿ ಬಿ., ಕುಮಾರ್ ಹೆಚ್.ವೈ  ಮತ್ತು ಕೆ.ಟಿ. ಪ್ರಸನ್ನ ಗ್ರಾಮದ ಪ್ರಮುಖರು, ಗ್ರಾಮಸ್ಥರು ಪಾಲ್ಗೊಂಡಿದ್ದರು

ವಿಐಎಸ್‌ಎಲ್-ಎಂಪಿಎಂ ಕಾರ್ಖಾನೆಗಳ ಅಭಿವೃದ್ಧಿಗೆ ಕ್ರೈಸ್ತ ಧರ್ಮಗುರುಗಳಿಂದ ಸಾಮೂಹಿಕ ಪ್ರಾರ್ಥನೆ

ಎರಡು ಕಾರ್ಖಾನೆಗಳಿಗೂ ಅಗತ್ಯವಿರುವ ಬಂಡವಾಳ ಹೂಡಿ ಪುನಶ್ಚೇತನಗೊಳಿಸಲು ಆಗ್ರಹ

ಭದ್ರಾವತಿಯಲ್ಲಿ ಸೋಮವಾರ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ತಾಲೂಕು ಶಾಖೆ ವತಿಯಿಂದ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿ ವಿಐಎಸ್‌ಎಲ್-ಎಂಪಿಎಂ ಎರಡೂ ಕಾರ್ಖಾನೆಗಳ ಪುನಶ್ಚೇತನಗೊಳಿಸಲು ಆಗ್ರಹಿಸಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಮಾ. ೨೬ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಐಎಸ್‌ಎಲ್ ಕಾರ್ಖಾನೆ ಮುಚ್ಚುವ ಪ್ರಕ್ರಿಯೆ ಕೈಬಿಡಬೇಕೆಂದು ಮತ್ತು ರಾಜ್ಯ ಸರ್ಕಾರಿ ಸ್ವಾಮ್ಯದ ಎಂಪಿಎಂ ಕಾರ್ಖಾನೆ ಪುನರ್ ಆರಂಭಿಸಬೇಕೆಂದು ಕೇಂದ್ರ ಹಾಗು ರಾಜ್ಯ ಸರ್ಕಾರಗಳಿಗೆ ನಗರದ ಕ್ರೈಸ್ತ ಧರ್ಮಗುರುಗಳು ಆಗ್ರಹಿಸಿದ್ದಾರೆ.
    ಸೋಮವಾರ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ತಾಲೂಕು ಶಾಖೆ ವತಿಯಿಂದ ಗುತ್ತಿಗೆ ಕಾರ್ಮಿಕರ ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದರು.
ಕಾರ್ಖಾನೆ ಮುಚ್ಚುವ ಆದೇಶ ಹಿಂಪಡೆದು ಅಗತ್ಯವಿರುವ ಬಂಡವಾಳ ತೊಡಗಿಸುವ ಜೊತೆಗೆ ದುಡಿಯುವ ಕೈಗಳಿಗೆ ಉದ್ಯೋಗ ನೀಡಬೇಕೆಂದು ಒತ್ತಾಯಿಸಿದರು.  ಭವಿಷ್ಯದಲ್ಲಿ ಎರಡು ಕಾರ್ಖಾನೆಗಳು ಅಭಿವೃದ್ಧಿ ಹೊಂದುವಂತಾಗಲಿ ಎಂದು ಸಾಮೂಹಿಕವಾಗಿ ಪ್ರಾರ್ಥಿಸಿದರು.
    ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಲಾಯಿತು.
    ನ್ಯೂಟೌನ್ ಅಮಲೋದ್ಭವಿಮಾತೆ ದೇವಾಲಯದ ಧರ್ಮಗುರು ಲ್ಯಾನ್ಸಿ ಡಿಸೋಜ, ಗಾಂಧಿನಗರ ವೇಲಾಂಗಣಿ ಮಾತೆ ದೇವಾಲಯದ ಧರ್ಮಗುರು ಪಾದರ್ ಸ್ಟೀವನ್ ಡಿಸಾ, ಮಾವಿನಕೆರೆ ಕಿರಿಯ ಪುಷ್ಪ ಸಂತ ತೆರೇಸರ ದೇವಾಲಯದ ಧರ್ಮಗುರು ಪಾದರ್ ದಿವ್ಯ ಕರುಣೀಶ್ ಕ್ಯಾಪುಚಿನ್, ಕಾಗದನಗರದ ಸಂತ ಜೋಸೆಫರ ದೇವಾಲಯ ಧರ್ಮಗುರು ಡೊನೆಮಿಕ್ ಕ್ರಿಸ್ತರಾಜ್, ಹಿರಿಯೂರು ವಿನ್ನಿ ಮೈನರ್ ಸೆಮಿನರಿ ರೆಕ್ಟರ್ ಪಾದರ್ ಸಂತೋಷ್ ಪೆರೇರಾ, ಧರ್ಮಗುರು ಪಾದರ್ ಮಾರ್ಕ್ ಪೆಟ್ರಿಕ್ ಡಿಸಿಲ್ವ, ಜೇಡಿಕಟ್ಟೆ ಆಶಾಕಿರಣ ನಿರ್ದೇಶಕ ಪಾದರ್ ಪ್ರಕಾಶ್ ಪಿಂಟೋ,   ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಂ ಫಾರ್ ಹ್ಯೂಮನ್ ರೈಟ್ಸ್ ಸಂಚಾಲಕ ಅಂತೋಣಿ ವಿಲ್ಸನ್, ಯುನೈಟೆಡ್ ಕ್ರಿಶ್ಚಿಯನ್ ಅಸೋಸಿಯೇಷನ್ ತಾಲೂಕು ಅಧ್ಯಕ್ಷ ಸೆಲ್ವರಾಜ್, ನಗರಸಭೆ ಸದಸ್ಯ ಜಾರ್ಜ್, ಲತಾ ರಾರ್ಬಟ್, ಜೆ. ಭಾಸ್ಕರ್, ಡೇವಿಸ್, ಸ್ಟೀಫನ್,  ತಾಲೂಕಿನ ಎಲ್ಲಾ ಚರ್ಚ್‌ಗಳ ಧರ್ಮಗುರುಗಳು, ಫಾಸ್ಟರ್‌ಗಳು, ಸಭಾಪಾಲಕರು, ಧರ್ಮಭಗಿನಿಯರು, ಸಂಘ-ಸಂಸ್ಥೆಗಳ ಮುಖಂಡರು ಪಾಲ್ಗೊಂಡಿದ್ದರು. ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಕಾರ್ಮಿಕ ಮುಖಂಡರು, ಗುತ್ತಿಗೆ ಕಾರ್ಮಿಕರು ಉಪಸ್ಥಿತರಿದ್ದರು.

ಬೀದಿ ನಾಯಿ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ ಪ್ರತಿಭಟನೆ : ಮನವಿ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ನಗರಸಭೆ ಮುಂಭಾಗ ಕೆಜಿಎನ್ ನೌಜವಾನ್ ಕಮಿಟಿವತಿಯಿಂದ ಪ್ರತಿಭಟನೆ ನಡೆಸಿ ಪರಿಸರ ಅಭಿಯಂತರ ಪ್ರಭಾಕರ್‌ರವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಮಾ. ೨೭: ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರ ನಗರಸಭೆ ಮುಂಭಾಗ ಕೆಜಿಎನ್ ನೌಜವಾನ್ ಕಮಿಟಿವತಿಯಿಂದ ಪ್ರತಿಭಟನೆ ನಡೆಸಿ ಪರಿಸರ ಅಭಿಯಂತರ ಪ್ರಭಾಕರ್‌ರವರಿಗೆ ಮನವಿ ಸಲ್ಲಿಸಲಾಯಿತು.
    ನಗರಸಭೆ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳಲ್ಲೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ನೆಹರು ನಗರದಲ್ಲಿ ೬ ವರ್ಷದ ಮಗುವಿನ ಮೇಲೆ ಬೀದಿನಾಯಿಗಳು ಏಕಾಏಕಿ ದಾಳಿ ನಡೆಸಿದ್ದು, ಇದರಿಂದಾಗಿ ಮಕ್ಕಳು, ಮಹಿಳೆಯರು, ವಯೋವೃದ್ದರು ಒಬ್ಬಂಟಿಯಾಗಿ ಸಂಚರಿಸಲು ಭಯಪಡುವಂತಾಗಿದೆ. ಈಗಾಗಲೇ ನಗರಸಭೆ ಹಲವು ವಾರ್ಡ್‌ಗಳಲ್ಲಿ ಬೀದಿನಾಯಿಗಳು ದಾಳಿ ನಡೆಸಿರುವ ಪ್ರಕರಣಗಳು ನಡೆದಿವೆ. ಈ ಸಂಬಂಧ ಮೌಖಿಕವಾಗಿ ನಾಯಿಗಳ ನಿಯಂತ್ರಣಕ್ಕೆ ಈ ಹಿಂದೆ ತಮ್ಮ ಗಮನಕ್ಕೆ ತರಲಾಗಿದೆ. ಆದರೂ ಸಹ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸದ ಸಂಗತಿಯಾಗಿದೆ. ತಕ್ಷಣ ಬೀದಿ ನಾಯಿಗಳನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.


    ಕೆಜಿಎನ್ ನೌಜವಾನ್ ಕಮಿಟಿ ಅಧ್ಯಕ್ಷ ಅಸದ್ ಉಲ್ಲಾ ಖಾನ್ ನೇತೃತ್ವ ವಹಿಸಿದ್ದರು. ಉಪಾಧ್ಯಕ್ಷರಾದ ಶಾಹಿದ್,  ಇಮ್ರಾನ್,  ಅಂಜುಮನ್-ಎ-ಇಸ್ಲಾಹುಲ್ ಮುಸ್ಲಿಮೀನ್ ಅಧ್ಯಕ್ಷ ಮುರ್ತುಜಾಖಾನ್, ದೇಶ ಪ್ರೇಮಿ ಟಿಪ್ಪು ಸುಲ್ತಾನ್ ಯುವಕರ ಸಂಘದ ಅಧ್ಯಕ್ಷ ಮೆಹಬೂಬ್, ಪ್ರಮುಖರಾದ ನಗರಸಭಾ ಸದಸ್ಯರಾದ ಟಿಪ್ಪು ಸುಲ್ತಾನ್, ಬಷೀರ್ ಅಹಮದ್,  ಅಬ್ದುಲ್ ಖದೀರ್, ಎ. ಮಸ್ತಾನ್, ಇಬ್ರಾಹಿಂ ಖಾನ್, ಜಾವಿದ್, ಕೇಸರಿಪಡೆ ಮಂಜುನಾಥ್ ಕೊಹ್ಲಿ,  ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.