Tuesday, April 4, 2023

ಅತಂತ್ರದಲ್ಲಿ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರ ಹೋರಾಟ

ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

ಭದ್ರಾವತಿ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕ ಸಂಘಟನೆಗಳ ಮುಖಂಡರು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಕಾರ್ಖಾನೆ ಉಳಿಸುವಂತೆ ಮನವಿ ಮಾಡಿದ್ದಾರೆ.
    ಭದ್ರಾವತಿ, ಏ. ೫: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿವಿಗಾಗಿ ಹೋರಾಟ ಮುಂದುವರೆದಿದ್ದು, ಗುತ್ತಿಗೆ ಕಾರ್ಮಿಕರ ಅನಿರ್ಧಿಷ್ಟಾವಧಿ ಹೋರಾಟ ಈಗಾಗಲೇ ೭೫ ದಿನಗಳನ್ನು ಪೂರೈಸಿದೆ. ಈ ಹಿಂದೆ ಮಾ.೩೧ರಿಂದ ಕಾರ್ಖಾನೆಯಲ್ಲಿ ಉತ್ಪಾದನೆ ಸ್ಥಗಿತಗೊಳ್ಳಲಿದೆ ಎಂಬ ಸುದ್ದಿ ವ್ಯಾಪಕವಾಗಿ ಹರಿದಾಡುತ್ತಿತ್ತು. ಆದರೆ ಈ ಕುರಿತು ಆಡಳಿತ ಮಂಡಳಿ ಇದುವರೆಗೂ ಯಾವುದೇ ಸ್ಪಷ್ಟನೆ ನೀಡಿಲ್ಲ. ಈ ನಡುವೆ ಗುತ್ತಿಗೆ ಕಾರ್ಮಿಕರು ಅತಂತ್ರದಲ್ಲಿ ಹೋರಾಟ ಮುಂದುವರೆಸುವಂತಾಗಿದೆ.
    ಒಂದೆಡೆ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಿದ್ದು, ಇದರಿಂದಾಗಿ ಹೋರಾಟಕ್ಕೆ ಬೆಂಬಲ ನೀಡುವವರು ಮೌನಕ್ಕೆ ಒಳಗಾಗುವಂತಾಗಿದೆ. ಮತ್ತೊಂದೆಡೆ ಕೇಂದ್ರ ಸರ್ಕಾರಕ್ಕೆ ಅಥವಾ ಆಡಳಿತ ಮಂಡಳಿಗೆ ಕಾರ್ಖಾನೆ ಕುರಿತು ಸೂಕ್ತ ನಿರ್ಧಾರ ಕೈಗೊಂಡು ಪ್ರಕಟಿಸಲು ಸಹ  ಸಾಧ್ಯವಾಗುತ್ತಿಲ್ಲ. ಈ ಹಿನ್ನಲೆಯಲ್ಲಿ ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳುವವರೆಗೂ ಗುತ್ತಿಗೆ ಕಾರ್ಮಿಕರು ತಮ್ಮ ಮುಂದಿನ ಹೋರಾಟ ಕುರಿತು ಯಾವುದೇ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಒಟ್ಟಾರೆ ಅತಂತ್ರ ಸ್ಥಿತಿ ಎದುರಾಗಿದ್ದು, ಸಂಕಷ್ಟದಲ್ಲಿಯೇ ಗುತ್ತಿಗೆ ಕಾರ್ಮಿಕರು ತಮ್ಮ ಹೋರಾಟ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ.
    ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ :
    ಗುತ್ತಿಗೆ ಕಾರ್ಮಿಕ ಸಂಘಟನೆಗಳ ಮುಖಂಡರು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಕಾರ್ಖಾನೆ ಉಳಿಸುವಂತೆ ಮನವಿ ಮಾಡಿದ್ದಾರೆ.
    ಮನವಿಗೆ ಸ್ಪಂದಿಸಿರುವ ಡಾ. ವೀರೇಂದ್ರ ಹೆಗ್ಗಡೆಯವರು ಪೂರಕವಾಗಿ ಸ್ಪಂದಿಸಿದ್ದಾರೆ. ಸಿಐಟಿಯು ಉಪಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ವಿನಯ್ ಕುಮಾರ್, ಅವಿನಾಶ್, ಎಐಟಿಯುಸಿ ಅಧ್ಯಕ್ಷ ಕುಮಾರ ಸ್ವಾಮಿ, ಶಿವನಾಗು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಲೋಕಾಯುಕ್ತ ಡಿವೈಎಸ್ಪಿ ಹೆಸರಿನಲ್ಲಿ ಹಣದ ಬೇಡಿಕೆಯೊಂದಿಗೆ ಕಿರುಕುಳ

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪೊಲೀಸರಿಗೆ ದೂರು


    ಭದ್ರಾವತಿ, ಏ. ೪ : ಅಕ್ರಮದಲ್ಲಿ ಭಾಗಿಯಾಗಿರುವ ಬಗ್ಗೆ ಇಲಾಖೆಗೆ ನಿಮ್ಮ ವಿರುದ್ಧ ದೂರು ಬಂದಿದ್ದು, ನಿಮ್ಮನ್ನು ಪ್ರಕರಣದಿಂದ ಪಾರು ಮಾಡಲು ಹಣ ನೀಡುವಂತೆ ವ್ಯಕ್ತಿಯೋರ್ವ ಶಿಶು ಅಭಿವೃದ್ಧಿ ಯೋಜನಾಧಿಕಾರಿ(ಸಿಡಿಪಿಓ)ಗೆ ಕರೆ ಮಾಡಿ ಮಾನಸಿಕವಾಗಿ ಕಿರುಕುಳ ನೀಡಿದ್ದಾನೆ. ಈ ಹಿನ್ನಲೆಯಲ್ಲಿ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
    ವ್ಯಕ್ತಿಯೋರ್ವ ನಾನು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎಂದು ಹೇಳಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುರೇಶ್‌ರವರಿಗೆ ಮೊಬೈಲ್ ಮೂಲಕ ಕರೆ ಮಾಡಿದ್ದು, ಅಂಗನವಾಡಿ ಆಹಾರ ವಿತರಣೆಯಲ್ಲಿ ಹಗರಣ ನಡೆದಿರುವ ಬಗ್ಗೆ ನಿಮ್ಮ ವಿರುದ್ಧ ದೂರು ಬಂದಿದೆ. ಈ ಹಿನ್ನಲೆಯಲ್ಲಿ ಇಲಾಖೆ ವಿಚಾರಣಾಧಿಕಾರಿಗಳು ಬೆಂಗಳೂರಿನಿಂದ ಬರುತ್ತಿದ್ದಾರೆ.  ನಿಮ್ಮನ್ನು ಪಾರು ಮಾಡಲು ೧.೨೦ ಲಕ್ಷ ರು. ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ.
    ನಿರಂತರವಾಗಿ ಕರೆ ಮಾಡಿ ಮಾನಸಿಕವಾಗಿ ಕಿರುಕುಳ ನೀಡಿದ್ದು, ಇದರಿಂದ ಅನುಮಾನಗೊಂಡ ಸುರೇಶ್‌ರವರು ಕರೆ ಮಾಡಿರುವ ವ್ಯಕ್ತಿ ಕುರಿತು ಮಾಹಿತಿ ತಿಳಿದುಕೊಂಡಿದ್ದಾರೆ. ಆತ ನಕಲಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಎಂಬುದು ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.  

ಶಾಸಕ ಬಿ.ಕೆ ಸಂಗಮೇಶ್ವರ್ ಪ್ರಚಾರ ವಾಹನ ವಶಕ್ಕೆ

ನೀತಿ ಸಂಹಿತೆ ಉಲ್ಲಂಘನೆ ದೂರು ದಾಖಲು


ಭದ್ರಾವತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಬಿ.ಕೆ ಸಂಗಮೇಶ್ವರ್ ಪರವಾಗಿ ಪ್ರಚಾರ ನಡೆಸುತ್ತಿದ್ದ ವಾಹನ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ತಂಡ ವಶಕ್ಕೆ ಪಡೆದಿರುವುದು.
    ಭದ್ರಾವತಿ, ಏ. ೪ : ಕಾಂಗ್ರೆಸ್ ಅಭ್ಯರ್ಥಿ ಶಾಸಕ ಬಿ.ಕೆ ಸಂಗಮೇಶ್ವರ್ ಪರವಾಗಿ ಪ್ರಚಾರ ನಡೆಸುತ್ತಿದ್ದ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ.
    ಟಾಟಾ ಏಸ್ ವಾಹನದಲ್ಲಿ ಸಂಗಮೇಶ್ವರ್ ಪರವಾಗಿ ಪ್ರಚಾರ ನಡೆಸುತ್ತಿದ್ದು, ಚುನಾವಣಾ ಆಯೋಗದಿಂದ ಅನುಮತಿ ಪಡೆಯದೆ ಶಾಸಕರ ಭಾವಚಿತ್ರ, ಕಾಂಗ್ರೆಸ್ ಪಕ್ಷದ ಚಿಹ್ನೆ, ಬಾವುಟದೊಂದಿಗೆ ಹಾಗು ಎಲ್‌ಇಡಿ ಪರದೆ ಮೂಲಕ ಶಾಸಕರ ಸಾಧನೆಗಳ ಪ್ರದರ್ಶನ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಲಾಗಿದೆ ಎಂದು ವಾಹನವನ್ನು ವಶಕ್ಕೆ ಪಡೆದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
    ಘಟನೆ ವಿವರ :
    ಶಾಸಕ ಬಿ.ಕೆ ಸಂಗಮೇಶ್ವರ್ ಪರವಾಗಿ ಕಳೆದ ಸುಮಾರು ೨ ತಿಂಗಳಿನಿಂದ ಕ್ಷೇತ್ರದಾದ್ಯಂತ ಟಾಟಾ ಏಸ್ ವಾಹನದಲ್ಲಿ ಶಾಸಕರ ಭಾವಚಿತ್ರ, ಕಾಂಗ್ರೆಸ್ ಪಕ್ಷದ ಚಿಹ್ನೆ, ಬಾವುಟದೊಂದಿಗೆ ಹಾಗು ಎಲ್‌ಇಡಿ ಪರದೆ ಮೂಲಕ ಶಾಸಕರ ಸಾಧನೆಗಳ ಪ್ರದರ್ಶನ ಮಾಡುವ ಮೂಲಕ ಪ್ರಚಾರ ನಡೆಸಲಾಗುತ್ತಿದ್ದು, ಸೋಮವಾರ ಸಂಜೆ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿ ಗವಿರಂಗಪ್ಪ ನೇತೃತ್ವದ ತಂಡ ಈ ವಾಹನ ತಪಾಸಣೆ ನಡೆಸಿದಾಗ ಚುನಾವಣೆ ನೀತಿ ಸಂಹಿತೆ ಘೋಷಣೆಯಾದ ನಂತರ ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪಡೆಯದೆ ಪ್ರಚಾರ ಕಾರ್ಯ ಕೈಗೊಳ್ಳುತ್ತಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ಚಾಲಕನನ್ನು ಬಂಧಿಸಿ ವಾಹನ ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶ್ರೀ ಕ್ಷೇತ್ರ ಭದ್ರಗಿರಿ ಲೋಕ ಕಲ್ಯಾಣಾರ್ಥ ವಿಜೃಂಭಣೆಯಿಂದ ಜರುಗಿದ ಸಾಮೂಹಿಕ ಶ್ರೀ ಮಹಾಚಂಡಿಕಯಾಗ

ಭದ್ರಾವತಿ, ಏ. 4 : ಶ್ರೀ ಕ್ಷೇತ್ರ ಭದ್ರಗಿರಿ ಶ್ರೀ ಶಿವ ಸುಬ್ರಮಣ್ಯ ಸ್ವಾಮಿ ದೇವಸ್ಥಾನದಲ್ಲಿ  ಮಂಗಳವಾರ ಲೋಕ ಕಲ್ಯಾಣಾರ್ಥ ಸಾಮೂಹಿಕ ಶ್ರೀ ಮಹಾಚಂಡಿಕಯಾಗ ವಿಜೃಂಭಣೆಯಿಂದ ಜರುಗಿತು.
     ಶ್ರೀ ಕ್ಷೇತ್ರದಲ್ಲಿ ಶ್ರೀ ದುರ್ಗಾದೇವಿ ಪ್ರತಿಮೆ ಪ್ರತಿಷ್ಠಾಪನೆ ೧೨ನೇ ವರ್ಷದ ಅಂಗವಾಗಿ ಶ್ರೀ ಮಹಾಚಂಡಿಕಯಾಗ ಹಮ್ಮಿಕೊಳ್ಳಲಾಗಿತ್ತು, ಮಧ್ಯಾಹ್ನ ೧೨.೩೦ಕ್ಕೆ ಪೂರ್ಣಾಹುತಿ ಹಾಗು ಮಹಾಮಂಗಳಾರತಿ ನಂತರ ಪ್ರಸಾದ ವಿನಿಯೋಗ ನಡೆಯಿತು. 

    ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳ  ಭಕ್ತಾಧಿಗಳು ಸಾಮೂಹಿಕ ಶ್ರೀ ಮಹಾಚಂಡಿಕಯಾಗದಲ್ಲಿ ಪಾಲ್ಗೊಂಡು  ಅಮ್ಮನವರ ಕೃಪೆಗೆ  ಪಾತ್ರರಾದರು.    
       ದೇವಸ್ಥಾನ ಸಮಿತಿ ಅಧ್ಯಕ್ಷ ಎ. ಚಂದ್ರಘೋಷನ್ ಸೇರಿದಂತೆ ಪದಾಧಿಕಾರಿಗಳು, ಸೇವಾಕರ್ತರು ಉಪಸ್ಥಿತರಿದ್ದರು.