Monday, May 1, 2023

ಮಹಿಳಾ ಪೊಲೀಸ್ ಠಾಣಾಧಿಕಾರಿ ದ್ವಿಚಕ್ರ ವಾಹನ ಅಪಘಾತ : ಪ್ರಕರಣ ದಾಖಲು

    ಭದ್ರಾವತಿ, ಮೇ. ೧: ಮಹಿಳಾ ಪೊಲೀಸ್ ಠಾಣಾಧಿಕಾರಿಯೊಬ್ಬರ ದ್ವಿಚಕ್ರವಾಹನಕ್ಕೆ ಮತ್ತೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿರುವ ಘಟನೆ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆಯಲ್ಲಿ ನಡೆದಿದೆ.
    ಪೇಪರ್‌ಟೌನ್ ಪೊಲೀಸ್ ಠಾಣಾಧಿಕಾರಿ ಶಿಲ್ಪ ನಾಯನೇಗಲಿಯವರು ಏ.೩೦ರ ಭಾನುವಾರ ಮಧ್ಯಾಹ್ನ ೧.೨೦ರ ಸಮಯದಲ್ಲಿ ಇಲಾಖೆಯ ಹಿರೋ ಮೆಸ್ಟ್ರೋ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಬೊಮ್ಮನಕಟ್ಟೆ ಕಡೆಯಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಶಿಲ್ಪ ನಾಯನೇಗಲಿಯವರು ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆ ಚಿಕಿತ್ಸೆಗೆ ದಾಖಲಾಗಿರುತ್ತಾರೆ. ಈ ಸಂಬಂಧ ಪೇಪರ್‌ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಧಾನಸಭಾ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಬಿ.ಕೆ ಸಂಗಮೇಶ್ವರ್‌ಗೆ ಡಿಎಸ್‌ಎಸ್ ಬೆಂಬಲ

ಭದ್ರಾವತಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಕೆ ಸಂಗಮೇಶ್ವರ್‌ಗೆ ಬೆಂಬಲ ನೀಡಲಿದೆ ಎಂದು ಸಮಿತಿ ರಾಜ್ಯ ಖಜಾಂಚಿ ಸತ್ಯ ಹೇಳಿದರು.
    ಭದ್ರಾವತಿ, ಮೇ. ೧ : ಸಂವಿಧಾನ ವಿರೋಧಿ ನಿಲುವುಗಳನ್ನು ಕೈಗೊಳ್ಳುವ ಜೊತೆಗೆ ಅಭಿವೃದ್ಧಿಗೆ ಮಾರಕವಾಗಿರುವ ರಾಜ್ಯದ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ಕಿತ್ತೊಗೆಯಲು ಕರ್ನಾಟಕ ದಲಿತ ಸಂಘರ್ಷ ಸಮಿತಿ ನಿರ್ಧರಿಸಿದ್ದು, ಈ ಹಿನ್ನಲೆಯಲ್ಲಿ ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಕೆ ಸಂಗಮೇಶ್ವರನ್ನು ಬೆಂಬಲಿಸಲಿದೆ ಎಂದು ಸಮಿತಿ ರಾಜ್ಯ ಖಜಾಂಚಿ ಸತ್ಯ ಹೇಳಿದರು.
    ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ೨೦೨೦ರಲ್ಲಿ ಅಂದಿನ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರಕ್ಕೆ ಬಂದ ಡಬಲ್ ಇಂಜಿನ್ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿಯನ್ನು ಕೈಗೊಂಡಿಲ್ಲ. ಅಲ್ಲದೆ ಶೋಷಿತರ ಮೇಲಿನ ದೌರ್ಜನ್ಯಗಳನ್ನು ತಡೆಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು.
    ಈ ಬಾರಿ ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ರಾಜ್ಯದ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಚಾರದಲ್ಲಿ ಸುಳ್ಳು ಹೇಳಿ ಮೋಸ ಮಾಡಿದೆ. ಅಲ್ಲದೆ ಸಂವಿಧಾನ ವಿರೋಧಿ ನೀತಿಗಳನ್ನು ಕೈಗೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬೆಂಬಲಿಸದಿರುವ ನಿರ್ಧಾರ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಕೆ ಸಂಗಮೇಶ್ವರನ್ನು ಬೆಂಬಲಿಸಲಾಗುವುದು. ದಲಿತರ, ಶೋಷಿತರ ಪರವಾದ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಯಾವುದೇ ಕಾರಣಕ್ಕೂ ಹೋರಾಟದಲ್ಲಿ ರಾಜೀ ಮಾಡಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಜಿಲ್ಲಾ ಸಂಚಾಲಕ ಚಿನ್ನಯ್ಯ, ಪ್ರಮುಖರಾದ ಸಿ. ಜಯಪ್ಪ, ಈಶ್ವರಪ್ಪ, ಕಾಣಿಕ್‌ರಾಜ್, ಮಣಿ ಜಿಂಕ್‌ಲೈನ್, ದಾಸ್, ಲಕ್ಷ್ಮಣ್, ಕೆ. ಯೋಗೇಶ್ವರನಾಯ್ಕ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಭದ್ರಾವತಿ ಸರ್ವತೋಮುಖ ಅಭಿವೃದ್ಧಿಗಾಗಿ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ : ಎಸ್.ಕೆ ಸುಧೀಂದ್ರ

ಭದ್ರಾವತಿಯಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷೇತರ ಅಭ್ಯರ್ಥಿ ಎಸ್.ಕೆ ಸುಧೀಂದ್ರ ಮಾತನಾಡಿದರು.  
    ಭದ್ರಾವತಿ, ಮೇ. ೧ : ವಿಧಾನಸಭಾ ಚುನಾವಣೆಗೆ ೨ನೇ ಬಾರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದು, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ನನ್ನನ್ನು ಬೆಂಬಲಿಸುವಂತೆ ಪಕ್ಷೇತರ ಅಭ್ಯರ್ಥಿ ಎಸ್.ಕೆ ಸುಧೀಂದ್ರ ಮನವಿ ಮಾಡಿದರು.
    ಅವರು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಾನು ವಿಐಎಸ್‌ಎಲ್ ಕಾರ್ಖಾನೆ ನಿವೃತ್ತ ಕಾರ್ಮಿಕರಾದ ದಿವಂಗತ ಕೃಷ್ಣಮೂರ್ತಿ ಮತ್ತು ಸುಮತಿ ಪುತ್ರನಾಗಿದ್ದೇನೆ. ಇಲ್ಲಿಯೇ ಹುಟ್ಟಿ ಬೆಳೆದಿದ್ದು, ವಿದ್ಯಾರ್ಥಿ ದೆಸೆಯಿಂದಲೇ ನನ್ನ ರಾಜಕೀಯ ಜೀವನ ಆರಂಭಗೊಂಡಿದೆ. ಸುಮಾರು ೨೯ ವರ್ಷಗಳಿಂದ ತೆರೆಮರೆಯಲ್ಲಿ ಕೈಲಾದಷ್ಟು ಸಾಮಾಜಿಕ ಸೇವಾ ಕಾರ್ಯಗಳನ್ನು ಹಾಗು ಹೋರಾಟಗಳನ್ನು ನಡೆಸಿಕೊಂಡು ಬಂದಿದ್ದೇನೆ ಎಂದರು.
    ನಾನು ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಯ ಗುರಿ ಹೊಂದಿದ್ದೇನೆ. ಈ ಹಿನ್ನಲೆಯಲ್ಲಿ ಮತದಾರರು ಈ ಬಾರಿ ಚುನಾವಣೆಯಲ್ಲಿ ಮತ ಖರೀದಿ ಮಾಡುವವರಿಗೆ ಮತ ನೀಡಲಾರೆ, ಅಭಿವೃದ್ಧಿ ಮಾಡುವವರಿಗಾಗಿ ಮಾತ್ರ ನನ್ನ ಮತ, ಆರ್ಥಿಕತೆ, ಸಾಮಾಜಿಕತೆಯ ಜ್ಞಾನ ಮತ್ತು ನ್ಯಾಯ ಪರತೆಯ ನೀತಿಯುಳ್ಳವರಿಗೆ ನನ್ನ ಮತ, ಸ್ವಜನ ಪಕ್ಷಪಾತಿಗಳನ್ನು ಧಿಕ್ಕರಿಸಿ ಸರ್ವರನ್ನೂ ಸಮಾನರೆಂದು ಕಾಣುವವರಿಗೆ ನನ್ನ ಮತ, ವಿಧಾನಸಭೆಯಲ್ಲಿ ಮೌನವಾಗಿದ್ದು ಮತಯಾಚನೆಗೆ ಮಾತ್ರ ಬಾಯಿ ಬಿಡುವವರಿಗೆ ನನ್ನ ಮತವಿಲ್ಲ ಹಾಗು ನನ್ನ ಒಂದು ಮತ ಕ್ಷೇತ್ರದ ಭವಿಷ್ಯ ಬದಲಾಯಿಸುತ್ತದೆ ಎಂಬ ತಿಳುವಳಿಕೆಯಿಂದ ನಾನು ಕಡ್ಡಾಯವಾಗಿ ಮತದಾನ ಮಾಡುತ್ತಿದ್ದೇನೆ ಎಂಬ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಬೆಂಬಿಸುವಂತೆ ಮನವಿ ಮಾಡಿದರು.

ರೈಸ್ ಮಿಲ್ ಮಾಲೀಕರ ಪತ್ನಿ ಕಲಾ ನಿಧನ

ಕಲಾ
    ಭದ್ರಾವತಿ, ಮೇ. ೧ : ತಾಲೂಕಿನ ಹಿರಿಯೂರು ಗ್ರಾಮದ ಶ್ರೀ ವೆಂಕಟೇಶ್ವರ ರೈಸ್ ಮಿಲ್ ಮಾಲೀಕ ಎಲ್.ಸಿ ಮಂಜುನಾಥ್‌ರವರ ಪತ್ನಿ ಕಲಾ(೫೬) ಸೋಮವಾರ ಬೆಳಿಗ್ಗೆ ನಿಧನ ಹೊಂದಿದರು.
    ಪತಿ ಎಲ್.ಸಿ ಮಂಜುನಾಥ್, ಇಬ್ಬರು ಗಂಡು ಮಕ್ಕಳಿದ್ದರು. ಇವರ ಅಂತ್ಯಕ್ರಿಯೆ ಸಂಜೆ ನಡೆಯಲಿದೆ. ಇವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕೆ.ಟಿ ಪ್ರಸನ್ನ ಹಾಗು ಗ್ರಾಮದ ಮುಖಂಡರು, ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.