Tuesday, May 30, 2023

ಮೇ.೩೧ರಂದು ಶಾಲಾ ಹಬ್ಬದೊಂದಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಚಾಲನೆ

ಪೋಷಕರು ಸ್ವಯಂ ಪ್ರೇರಣೆಯಿಂದ ಮುಂದೆ ಬರಲಿ

ಭದ್ರಾವತಿ ನಗರಸಭೆ ವಾಪ್ತಿಯ ಹೃದಯ ಭಾಗದ ಜಟ್‌ಪಟ್ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ ಕಾಂಪೌಂಡ್ ಇಲ್ಲದೆ ಇರುವುದು.
    ಭದ್ರಾವತಿ, ಮೇ. ೩೦ : ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಮೇ.೩೧ರಿಂದ ಶಾಲಾಹಬ್ಬದೊಂದಿಗೆ ಚಾಲನೆ ನೀಡಲಾಗುತ್ತಿದ್ದು, ಕ್ಷೇತ್ರ ಶಿಕ್ಷಣ ಇಲಾಖೆ ಈಗಾಗಲೇ ಎಲ್ಲಾ ರೀತಿಯ ಸಿದ್ದತೆಗಳನ್ನು ಕೈಗೊಂಡಿದೆ.
    ಆದರೆ ಕೆಲವು ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿಲ್ಲದಿರುವುದು ಕಂಡು ಬರುತ್ತಿದೆ. ಶಾಲಾ ಹಬ್ಬದ ಹಿಂದಿನ ೨ ದಿನ ಶಾಲಾ ಕೊಠಡಿ ಹಾಗು ಆವರಣದಲ್ಲಿ ಸ್ವಚ್ಛತೆಗೆ ಗಮನ ನೀಡುವಂತೆ ಹಾಗು ಶಾಲಾ ವ್ಯಾಪ್ತಿಯಲ್ಲಿ ವಿಶೇಷ ದಾಖಲಾತಿ ಹಾಗು ಸಾಮಾನ್ಯ ದಾಖಲಾತಿ ಅಂದೋಲನ ಕೈಗೊಳ್ಳುವಂತೆ ಸಂಬಂಧಪಟ್ಟ ಶಾಲೆಗಳ ಶಾಲಾಭಿವೃದ್ಧಿ ಸಮಿತಿ ಹಾಗು ಶಿಕ್ಷಕರು ಮತ್ತು ಸಿಬ್ಬಂದಿಗಳಿಗೆ ಸೂಚಿಸಲಾಗಿತ್ತು. ಆದರೆ ಕೆಲವು ಶಾಲೆಗಳಲ್ಲಿ ಕೊಠಡಿ ಹಾಗು ಆವರಣದಲ್ಲಿ ಸ್ವಚ್ಛತೆ ಇನ್ನೂ ಸಮರ್ಪಕವಾಗಿ ಕೈಗೊಂಡಿಲ್ಲ.
    ಕೆಲವು ಸರ್ಕಾರಿ ಶಾಲೆಗಳಿಗೆ ಸೂಕ್ತ ರಕ್ಷಣೆ ಇಲ್ಲವಾಗಿದೆ. ಮುಖ್ಯವಾಗಿ ಶಾಲೆಯ ಆವರಣಕ್ಕೆ ಕಾಂಪೌಂಡ್ ಇಲ್ಲದೆ ಇರುವುದು ಕಂಡು ಬರುತ್ತಿದ್ದು, ಇದರಿಂದಾಗಿ ಈ ಶಾಲೆಗಳ ಬಳಿ ರಾತ್ರಿ ವೇಳೆ ಅನೈತಿಕ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಅಲ್ಲದೆ ಪುಂಡ ಪೋಕರಿಗಳ, ಹಾವು, ಮುಂಗುಸಿ, ಬೀದಿ ನಾಯಿಗಳ, ದನ ಕರುಗಳ ತಾಣಗಳಾಗಿ ಮಾರ್ಪಟ್ಟಿವೆ. ಈ ಹಿಂದೆ ಸಂಬಂಧಪಟ್ಟ ಶಿಕ್ಷಣ ಸಚಿವರಿಗೆ ಈ ಸಂಬಂಧ ದೂರು ಸಲ್ಲಿಸಿ ತಕ್ಷಣ ಕಾಂಪೌಂಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಮನವಿ ಸಹ ಸಲ್ಲಿಸಲಾಗಿತ್ತು. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.
    ಕೆಲವು ಸರ್ಕಾರಿ ಶಾಲೆಗಳ ಬಳಿ ವಿಶೇಷ ದಾಖಲಾತಿ ಹಾಗೂ ಸಾಮಾನ್ಯ ದಾಖಲಾತಿ ಕುರಿತು ಹಾಗು ಶಾಲೆಯಲ್ಲಿ ಸರ್ಕಾರದ ಪೋತ್ಸಾಹದಾಯಕ ಯೋಜನೆಗಳು, ವಿಶೇಷ ಸೌಲಭ್ಯಗಳು ಹಾಗು ಶಾಲೆಯಲ್ಲಿ ಲಭ್ಯವಿರುವ ಇತರೆ ಸೌಲಭ್ಯಗಳ ಕುರಿತು ಪ್ಲೆಕ್ಸ್‌ಗಳನ್ನು ಹಾಕಲಾಗಿದೆ.
    ತಾಲೂಕಿನಲ್ಲಿ ಕೆಲವು ಸರ್ಕಾರಿ ಶಾಲೆಗಳು ಶಾಲಾಭಿವೃದ್ಧಿ ಸಮಿತಿ, ಸ್ವಯಂ ಸೇವಾ ಸಂಸ್ಥೆಗಳು, ದಾನಿಗಳು ಹಾಗು ಸ್ಥಳೀಯರ ಸಹಕಾರದೊಂದಿಗೆ ಖಾಸಗಿ ಶಾಲೆಗಳನ್ನು ಮೀರಿಸುವಂತೆ ಗುಣಮಟ್ಟದ ಶಿಕ್ಷಣ ನೀಡುತ್ತಿವೆ. ಹಲವು ವಿಶೇಷ ಸೌಲಭ್ಯಗಳನ್ನು ಹೊಂದಿ ಮಕ್ಕಳನ್ನು ಶಾಲೆಗಳ ಕಡೆಗೆ ಆಕರ್ಷಿಸುತ್ತಿವೆ. ಅಲ್ಲದೆ ಉತ್ತಮ ಫಲಿತಾಂಶ ಸಹ ಪಡೆದುಕೊಳ್ಳುತ್ತಿವೆ.
    ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಲು ಪೋಷಕರು ಸ್ವಯಂ ಪ್ರೇರಣೆಯಿಂದ ಮುಂದೆ ಬರಬೇಕಾಗಿದೆ. ಆಗ ಮಾತ್ರ ಸರ್ಕಾರಿ ಶಾಲೆಗಳು ಸಹ ಅಸ್ತಿತ್ವ ಕಂಡುಕೊಳ್ಳಲು ಸಾಧ್ಯ.


ಭದ್ರಾವತಿ ತಾಲೂಕು ಕಛೇರಿ ರಸ್ತೆಯ ಎ.ಕೆ ಕಾಲೋನಿ, ಹನುಮಂತ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ವಿಶೇಷ ದಾಖಲಾತಿ, ಸಾಮಾನ್ಯ ದಾಖಲಾತಿ ಹಾಗು ಸೌಲಭ್ಯಗಳ ಕುರಿತ ಮಾಹಿತಿಗಳನ್ನೊಳಗೊಂಡ ಪ್ಲೆಕ್ಸ್ ಹಾಕಿರುವುದು.

ಶ್ರೀ ಜಗದ್ಗುರು ರೇಣುಕಾಚಾರ್ಯರ ಶಿಲಾವಿಗ್ರಹ ನಿರ್ಮಾಣದ ೩ನೇ ಕಲ್ಲಿಗೆ ವಿಶೇಷ ಪೂಜೆ

ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ೭೫ ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯರ ಶಿಲಾವಿಗ್ರಹದ ಕೆತ್ತನೆ ಕಾರ್ಯ ಭರದಿಂದ ಸಾಗುತ್ತಿದ್ದು, ಪಾಣಿಪೀಠದ ಕಲ್ಲನ್ನು ಮಡಕಶಿರದಿಂದ ಸಾಗಿಸಲಾಗುತ್ತಿದ್ದು, ೩ನೇ ಬೃಹತ್ ಕಲ್ಲು ಮಂಗಳವಾರ ಭದ್ರಾವತಿ ನಗರವನ್ನು ಪ್ರವೇಶಿದ ಹಿನ್ನಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
    ಭದ್ರಾವತಿ, ಮೇ. ೩೦: ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಪೀಠದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ೭೫ ಅಡಿ ಎತ್ತರದ ಶ್ರೀ ಜಗದ್ಗುರು ರೇಣುಕಾಚಾರ್ಯರ ಶಿಲಾವಿಗ್ರಹದ ಕೆತ್ತನೆ ಕಾರ್ಯ ಭರದಿಂದ ಸಾಗುತ್ತಿದ್ದು, ಪಾಣಿಪೀಠದ ಕಲ್ಲನ್ನು ಮಡಕಶಿರದಿಂದ ಸಾಗಿಸಲಾಗುತ್ತಿದ್ದು, ೩ನೇ ಬೃಹತ್ ಕಲ್ಲು ಮಂಗಳವಾರ ನಗರವನ್ನು ಪ್ರವೇಶಿದ ಹಿನ್ನಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
    ಬೃಹತ್ ಗಾತ್ರದ ಕಲ್ಲನ್ನು ೧೧೨ ಚಕ್ರ ಹೊಂದಿರುವ ಲಾರಿಯಲ್ಲಿ ಪೀಠಕ್ಕೆ ಸಾಗಿಸಲಾಗುತ್ತಿದ್ದು, ನಗರದ ಬೈಪಾಸ್ ರಸ್ತೆಗೆ ಆಗಮಿಸಿದ ಲಾರಿಗೆ ಉಜ್ಜನಿಪುರ ಬಳಿ ಬಾಳೆಹೊನ್ನೂರು ರಂಭಾಪುರಿ ಶಾಖಾ ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಭಕ್ತರು ಸ್ವಾಗತಿಸಿ ವಿಶೇಷ ಪೂಜೆ ಸಲ್ಲಿಸಿದರು.  
    ಪಾಣಿಪೀಠದ ೧ ಮತ್ತು ೨ನೇ ಕಲ್ಲಿಗೂ ಈ ಹಿಂದೆ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ನೇತೃತ್ವದಲ್ಲಿ ಸ್ವಾಗತಿಸಿ ವಿಶೇಷ ಪೂಜೆ ಸಲ್ಲಿಸಲಾಗಿತ್ತು. ಶ್ರೀ ಜಗದ್ಗುರು ರೇಣುಕಾಚಾರ್ಯರ ಶಿಲಾವಿಗ್ರಹದ ಕತ್ತನೆ ಕಾರ್ಯ ಕೆಲವೇ ದಿನಗಳಲ್ಲಿ ಮುಕ್ತಾಯಗೊಂಡು ವಿಗ್ರಹ ಲೋಕಾರ್ಪಣೆಗೊಳ್ಳಲಿದೆ.
       ಪ್ರಮುಖರಾದ ಜಿ.ಎಂ ಮೂರ್ತಿ, ಅಶೋಕ್, ಎಚ್. ಮಂಜುನಾಥ್, ಬಿ.ಎಂ ರಮೇಶ್, ಬಿ.ಎಂ ಮಂಜುನಾಥ, ಎಸ್. ವಾಗೀಶ್, ಸತೀಶ್, ಮೋಹನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಜೂ.೬ರಂದು ಚಾಮೇಗೌಡ ಏರಿಯಾ ಶ್ರೀ ಮಾರಿಯಮ್ಮ ದೇವಿ ಕರಗ ಮಹೋತ್ಸವ

ಶ್ರೀ ಮಾರಿಯಮ್ಮ ದೇವಿ
    ಭದ್ರಾವತಿ, ಮೇ. ೩೦ : ಬಿ.ಎಚ್ ರಸ್ತೆ, ಚಾಮೇಗೌಡ ಏರಿಯಾ, ಶ್ರೀ ಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ಜೂ.೬ರಂದು ಶ್ರೀ ಅಮ್ಮನವರ ಕರಗ ಮಹೋತ್ಸವ ನಡೆಯಲಿದೆ.
    ಜೂ.೬ರಂದು ಬೆಳಿಗ್ಗೆ ೮.೩೦ಕ್ಕೆ ಶ್ರೀ ಮುನೇಶ್ವರಸ್ವಾಮಿ ಪೂಜೆ ನಂತರ ಭದ್ರಾನದಿ ತೀರದಿಂದ ಶ್ರೀ ಅಮ್ಮನವರ ಕರಗ ಜೋಡಿಸಿಕೊಂಡು ರಾಜಬೀದಿ ಮೆರವಣಿಗೆ ಮುಖಾಂತರ ಬಂದು ದೇವಸ್ಥಾನ ತಲುಪುವುದು. ಮಧ್ಯಾಹ್ನ ೧ ಗಂಟೆಗೆ ಮಹಾಮಂಗಳಾರತಿ ನಂತರ ಅಂಬಲಿ ಉಯ್ಯಲಾಗುವುದು ಸಂಜೆ ೬ ಗಂಟೆಗೆ ಶ್ರೀ ಅಮ್ಮನವರ ಕರಗ ರಾಜಬೀದಿ ಮೆರವಣಿಗೆ ಬರುವುದು.
    ಜೂ.೭ರಂದು ಬೆಳಿಗ್ಗೆ ೯ಕ್ಕೆ ಅಮ್ಮನವರಿಗೆ ಅರಿಶಿನ ಅಭಿಷೇಕ ನಡೆಯುವುದು. ಜೂ.೧೩ರಂದು ಸಂಜೆ ೭ ರಿಂದ ಶಾಂತಿ ಪೂಜೆ ನಡೆಯುವುದು. ಜೂ.೧೩ರಂದು ಮಧ್ಯಾಹ್ನ ೧೨.೩೦ಕ್ಕೆ ಅನ್ನದಾನ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸುವಂತೆ ದೇವಸ್ಥಾನ ಸಮಿತಿ ಕೋರಿದೆ.

ಮೇ.೩೧ರಂದು ಬೀಳ್ಕೊಡುಗೆ ಸಮಾರಂಭ

    ಭದ್ರಾವತಿ, ಮೇ. ೩೦ : ಅನೌಪಚಾರಿಕ ಪಡಿತರ ತಾಲೂಕು ಕಛೇರಿ, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ತಾಲೂಕು ಶಾಖೆ ವತಿಯಿಂದ ಮೇ.೩೧ರಂದು ಮಧ್ಯಾಹ್ನ ೩ ಗಂಟೆಗೆ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
    ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದು, ತಾಲೂಕು ಶಾಖೆ ನಗರ ಅಧ್ಯಕ್ಷ ಎಸ್.ಆರ್ ನಾಗರಾಜ್ ಮತ್ತು ಅನೌಪಚಾರಿಕ ಪಡಿತರ ಕಛೇರಿ ಸಹಾಯಕ ನಿರ್ದೇಶಕ ವಿ.ಎಸ್ ಅಂಕಯ್ಯ ಉಪಸ್ಥಿತರಿರುವರು.
    ಆಹಾರ ನಿರೀಕ್ಷಕಿ ಡಿ. ಗಾಯತ್ರಿ ದೇವಿ, ಕೆಎಫ್‌ಸಿಎಸ್‌ಸಿ ಮಳಿಗೆ ವ್ಯವಸ್ಥಾಪಕ ಜೆ.ಎಸ್ ಈಶ್ವರಪ್ಪ ಮತ್ತು ಆಹಾರ ಇಲಾಖೆ ಬಿ.ಆರ್ ಓಂಕಾರಯ್ಯ ಉಪಸ್ಥಿತರಿರುವರು.