Thursday, June 15, 2023

ಜೂ.೨೦ರಂದು ಜಾಗೃತಿ ಸಭೆ, ಜನ್ಮದಿನಾಚರಣೆ

    ಭದ್ರಾವತಿ, ಜೂ. ೧೬ : ಡಾ. ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿ ವತಿಯಿಂದ ಜೂ.೨೦ರ ಸಂಜೆ ೪ ಗಂಟೆಗೆ ಡಾ. ಬಿ.ಆರ್ ಅಂಬೇಡ್ಕರ್ ಭವನ ನಿರ್ಮಾಣ ಜಾಗೃತಿ ಸಭೆ ಮತ್ತು ಕಾಂಮ್ರೇಡ್ ಡಿ.ಸಿ ಮಾಯಣ್ಣನವರ ೮೯ನೇ ಜನ್ಮದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ರೈತ ಸಂಘದ ವರಿಷ್ಠ ಕೆ.ಟಿ ಗಂಗಾಧರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಡಿಎಸ್‌ಎಸ್ ಮುಖಂಡರಾದ ವಿಜಯಮ್ಮ ಎನ್ ಗಿರಿಯಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಚಂದ್ರಶೇಖರಯ್ಯ ನಿವೃತ್ತ ತಹಸೀಲ್ದಾರ್ ಇಂದಿರಾ ಬಿ. ಕೃಷ್ಣಪ್ಪ, ಸಾಹಿತಿ ಹರೋನಹಳ್ಳಿ ಸ್ವಾಮಿ, ಚಿತ್ರನಟ ಆಂಜನೇಯ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಡಾ. ಬಿ.ಆರ್ ಅಂಬೇಡ್ಕರ್ ಭವನ ಸಂರಕ್ಷಣಾ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಕೋರಿದ್ದಾರೆ.

ಜೂ. ೧೬ರಂದು ಆರ್‌ಎಎಫ್ ಘಟಕ, ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆಗೆ ಸಂಸದ ಬಿ.ವೈ ರಾಘವೇಂದ್ರ ಆಗಮನ

ಸಂಸದ ಬಿ.ವೈ ರಾಘವೇಂದ್ರರವರು ಕಾಮಗಾರಿಗಳ ಪರಿಶೀಲನೆಗೆ ಶುಕ್ರವಾರ ಭದ್ರಾವತಿಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಗುರುವಾರ ಪೂರ್ವ ಪರಿಶೀಲನೆ ನಡೆಸಿದರು. ಕಾಮಗಾರಿಗಳ ಸಂಪೂರ್ಣ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಪೂರಕ ಸಿದ್ದತೆಗಳನ್ನು ಕೈಗೊಂಡರು.
    ಭದ್ರಾವತಿ, ಜೂ. ೧೫ : ಸಂಸದ ಬಿ.ವೈ ರಾಘವೇಂದ್ರ ನಗರದಲ್ಲಿ ಹಲವು ಕಾಮಗಾರಿಗಳ ಪ್ರಗತಿ ಪರಿಶೀಲನೆಗಾಗಿ ಜೂ.೧೬ರ ಶುಕ್ರವಾರ ಆಗಮಿಸುತ್ತಿದ್ದು, ಕಾಮಗಾರಿಗಳು ಮತ್ತಷ್ಟು ವೇಗ ಪಡೆದುಕೊಳ್ಳುವ ಲಕ್ಷಣಗಳು ಕಂಡು ಬರುತ್ತಿವೆ.
    ಮುಂದಿನ ವರ್ಷ ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಸಂಸದ ಬಿ.ವೈ ರಾಘವೇಂದ್ರ ವಿವಿಧ ಕಾಮಗಾರಿಗಳ ವೀಕ್ಷಣೆ-ವಿಕಾಸ ತೀರ್ಥಯಾತ್ರೆ ಕೈಗೊಂಡಿದ್ದು, ಈ ಅಂಗವಾಗಿ ಕಳೆದ ಸುಮಾರು ೨ ವರ್ಷಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಉದ್ಘಾಟನೆಗೊಂಡ ೯೭ ಬಿ.ಎನ್ ಆರ್‌ಎಎಫ್ ಘಟಕ ಹಾಗು ಕಡದಕಟ್ಟೆ ಬಳಿ ನಿರ್ಮಾಣಗೊಳ್ಳುತ್ತಿರುವ ರೈಲ್ವೆ ಮೇಲ್ಸೇತುವೆ ಕಾಮಗಾರಿ ವೀಕ್ಷಣೆ ನಡೆಸಲಿದ್ದಾರೆ.
    ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದು, ಕಾಮಗಾರಿಗಳು ಮತ್ತಷ್ಟು ವೇಗ ಪಡೆದುಕೊಳ್ಳುವ ಲಕ್ಷಣಗಳು ಕಂಡು ಬರುತ್ತಿವೆ. ಈ ಹಿಂದೆ ಸಹ ಬಿ.ವೈ ರಾಘವೇಂದ್ರ ಅವರು ಕಾಮಗಾರಿಗಳ ವೀಕ್ಷಣೆ ನಡೆಸಿದ್ದರು.
    ಬಿಜೆಪಿ ಮುಖಂಡರಿಂದ ಪೂರ್ವ ಪರಿಶೀಲನೆ:
    ಸಂಸದ ಬಿ.ವೈ ರಾಘವೇಂದ್ರರವರು ಕಾಮಗಾರಿಗಳ ಪರಿಶೀಲನೆಗೆ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಸ್ಥಳೀಯ ಬಿಜೆಪಿ ಮುಖಂಡರು ಗುರುವಾರ ಪೂರ್ವ ಪರಿಶೀಲನೆ ನಡೆಸಿದರು. ಕಾಮಗಾರಿಗಳ ಸಂಪೂರ್ಣ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಪೂರಕ ಸಿದ್ದತೆಗಳನ್ನು ಕೈಗೊಂಡರು.

ಅಂತರರಾಷ್ಟ್ರೀಯ ಯೋಗ ದಿನಾಚರಣೆ : ಜೂ.೧೮ ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ


    ಭದ್ರಾವತಿ, ಜೂ. ೧೫: ನ್ಯೂಟೌನ್ ಮಹಾತ್ಮಗಾಂಧಿ ಉದ್ಯಾನವನ ಸಮೀಪದಲ್ಲಿರುವ ಶ್ರೀ ಅನ್ನಪೂರ್ಣೇಶ್ವರಿ ವಿವೇಕಾನಂದ ಯೋಗ ಅಸೋಸಿಯೇಷನ್ ವತಿಯಿಂದ ಜೂ.೨೧ರಂದು ೯ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
    ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಪೂರಕವಾಗಿ ಜೂ.೧೮ರಂದು ಮುಕ್ತ ರಾಜ್ಯಮಟ್ಟದ ಯೋಗಾಸನ ಸ್ಪರ್ಧೆ ಆಯೋಜಿಸಲಾಗಿದೆ. ಜೂ.೨೧ರಂದು ಯೋಗ ದಿನಾಚರಣೆ ಪ್ರಯುಕ್ತ ಬೆಳಿಗ್ಗೆ ೬ ಗಂಟೆಯಿಂದ ೭.೧೫ರ ವರೆಗೆ ಸಾಮೂಹಿಕ ಯೋಗ ಪ್ರದರ್ಶನ ನಡೆಯಲಿದೆ.
    ಯೋಗಪಟುಗಳು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಅಸೋಸಿಯೇಷನ್ ಅಧ್ಯಕ್ಷ ಕೆ.ಎಚ್ ಪಾಲಾಕ್ಷಪ್ಪ, ಕಾರ್ಯದರ್ಶಿ ತಮ್ಮಣ್ಣ ಗೌಡ ಮತ್ತು ಖಜಾಂಚಿ ವಾದಿರಾಜ ಆಚಾರ್ ಕೋರಿದ್ದಾರೆ.  

ವಿಐಎಸ್‌ಎಲ್ ನಿವೃತ್ತ ನೌಕರ ನರಸಿಂಹಯ್ಯ ನಿಧನ

ನರಸಿಂಹಯ್ಯ
    ಭದ್ರಾವತಿ, ಜೂ. ೧೫ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ನಿವೃತ್ತ ನೌಕರ, ವಿದ್ಯಾಮಂದಿರ ನಿವಾಸಿ ನರಸಿಂಹಯ್ಯ ನಿಧನ ಹೊಂದಿದರು.
    ಇವರಿಗೆ ಪತ್ನಿ, ಓರ್ವ ಪುತ್ರಿ ಇದ್ದರು. ಅನಾರೋಗ್ಯಕ್ಕೆ ಒಳಗಾಗಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
    ನರಸಿಂಹಯ್ಯ ಅವರು ಈ ಹಿಂದೆ ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಹಲವಾರು ವರ್ಷಗಳಿಂದ ನಿವೃತ್ತ ಕಾರ್ಮಿಕರ ಪರ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದರು. ನಿವೃತ್ತ ಕಾರ್ಮಿಕರನ್ನು ಸಂಘಟಿಸುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದರು.
    ಸಂತಾಪ :
    ವಿಐಎಸ್‌ಎಲ್ ನಿವೃತ್ತ ಕಾರ್ಮಿಕರ ಕಲ್ಯಾಣ ಕೇಂದ್ರದ ಅಧ್ಯಕ್ಷ ರಾಮಲಿಂಗಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ಬೆಳಿಗ್ಗೆ ತುರ್ತು ಸಭೆ ನಡೆಸಿ ನರಸಿಂಹಯ್ಯನವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
    ಅವರ ಸೇವೆಯನ್ನು ಸ್ಮರಿಸಿ, ಅವರ ಆತ್ಮಕ್ಕೆ ಭಗವಂತ ಚಿರಶಾಂತಿ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು. ಪ್ರಮುಖರಾದ ಹನುಮಂತರಾವ್, ನರಸಿಂಹಚಾರ್, ಬಸವರಾಜ್, ಕೆಂಪಯ್ಯ, ಮಹೇಶ್ವರಪ್ಪ, ನಂಜಪ್ಪ, ಅಡವೀಶಯ್ಯ, ನಾಗರಾಜ್, ಜಯರಾಜ್, ಭೈರಪ್ಪ, ಹಾ. ರಾಮಪ್ಪ, ಗಜೇಂದ್ರ, ರವೀಂದ್ರ ರೆಡ್ಡಿ, ಮಂಜುನಾಥ್, ಸುರೇಶ್ ಪಟೇಲ್, ರಮೇಶ್, ಲಾಜರ್, ಡಾಕಪ್ಪ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.