Saturday, October 28, 2023

ಕೊಲೆ ಪ್ರಕರಣ : ೮ ಜನರ ಪೈಕಿ ನಾಲ್ವರ ಸೆರೆ

    ಭದ್ರಾವತಿ : ತಾಲೂಕಿನ ಗೌಡರಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಡೆದಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
    ಶಿವಮೊಗ್ಗ ಟಿಪ್ಪುನಗರ ನಿವಾಸಿ ರೌಡಿಶೀಟರ್, ಸೈಯದ್ ರಾಝಿಕ್ ಅ.೨೦ರಂದು ಗೌಡರಹಳ್ಳಿ ಗ್ರಾಮದಲ್ಲಿ ಕೊಲೆಯಾಗಿದ್ದು, ಈ ಸಂಬಂಧ ತಾಲೂಕಿನ ತಿಪ್ಲಾಪುರ ಕ್ಯಾಂಪ್ ಗ್ರಾಮದ ನಿವಾಸಿಗಳಾದ ಸಮೀರ್, ಜಮೀರ್ ಅಲಿಯಾಸ್ ಸಮೀರ್, ನಾಮತ್ ಅಲಿ ಮತ್ತು ಮಹಮ್ಮದ್ ಶಫಿವುಲಾ ಒಟ್ಟು ೪ ಮಂದಿಯನ್ನು ಬಂಧಿಸಲಾಗಿದೆ.
    ಘಟನೆ ವಿವರ : ಸೈಯದ್ ರಾಝಿಕ್‌ನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಸಂಬಂಧ ಈತನ ಅಕ್ಕ ಗುಲ್ಮಾಜ್ ಬಾನು ಹತ್ಯೆಗೈದ ಒಟ್ಟು ೮ ಜನರ ವಿರುದ್ದ ದೂರು ನೀಡಿದ್ದರು.
    ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಕುಮಾರ್ ಎಸ್. ಬೂಮರೆಡ್ಡಿ ಹಾಗು ಪೊಲೀಸ್ ಉಪಾಧೀಕ್ಷಕ ಕೆ.ಎನ್ ನಾಗರಾಜ್ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ಜಗದೀಶ್ ಸಿ. ಹಂಚಿನಾಳ್ ನೇತೃತ್ವದ ತಂಡ ರಚಿಸಲಾಗಿತ್ತು.
    ಕ್ಷಿಪ್ರ ಕಾರ್ಯಾಚರಣೆ ನಡೆಸಿದ ತಂಡ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಗಡಿಯಲ್ಲಿ ಅ.೨೫ರಂದು ೮ ಜನರ ಪೈಕಿ ಸಮೀರ್, ಜಮೀರ್ ಅಲಿಯಾಸ್ ಸಮೀರ್, ನಾಮತ್ ಅಲಿ, ಮತ್ತು ಮಹಮ್ಮದ್ ಶಫಿವುಲಾ ಅವರನ್ನು ಬಂಧಿಸಿದೆ. ಉಳಿದವರ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ.
    ೪ ಜನ ಬಂಧಿತರಿಂದ ಕೃತ್ಯ ವೆಸಗಲು ಉಪಯೋಗಿಸಿದ ಮಾರಕಾಸ್ತ್ರಗಳನ್ನು ಮತ್ತು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ ತಂಡದಲ್ಲಿ ಠಾಣಾಧಿಕಾರಿ ಶ್ರೀಶೈಲಕೆಂಚಣ್ಣವರ, ಸಿಬ್ಬಂದಿಗಳಾದ ಮಂಜುನಾಥ್, ಈರಯ್ಯ, ಮತ್ತು ಶಿವಪ್ಪ ಪಾಲ್ಗೊಂಡಿದ್ದರು. 

ಶಿರಡಿ ಶ್ರೀ ಸಾಯಿಬಾಬಾ ಕ್ಷೇತ್ರದಲ್ಲಿ ಸಂಗಮೇಶ್ವರ್ ೬೧ನೇ ಹುಟ್ಟುಹಬ್ಬ

ಭದ್ರಾವತಿ ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿರುವ ಬಿ.ಕೆ ಸಂಗಮೇಶ್ವರ್‌ರವರು ತಮ್ಮ ೬೧ನೇ ಹುಟ್ಟುಹಬ್ಬ ಶನಿವಾರ ಶಿರಡಿ ಶ್ರೀ ಸಾಯಿಬಾಬಾ ಕ್ಷೇತ್ರದಲ್ಲಿ ಆಚರಿಸಿಕೊಂಡರು.
    ಭದ್ರಾವತಿ: ಕ್ಷೇತ್ರದಲ್ಲಿ ೪ ಬಾರಿ ಶಾಸಕರಾಗಿರುವ ಬಿ.ಕೆ ಸಂಗಮೇಶ್ವರ್‌ರವರು ತಮ್ಮ ೬೧ನೇ ಹುಟ್ಟುಹಬ್ಬ ಶನಿವಾರ ಶಿರಡಿ ಶ್ರೀ ಸಾಯಿಬಾಬಾ ಕ್ಷೇತ್ರದಲ್ಲಿ ಆಚರಿಸಿಕೊಂಡರು.
    ಕ್ಷೇತ್ರದ ಅಭಿವೃದ್ಧಿಗಾಗಿ ಕುಟುಂಬ ವರ್ಗದವರೊಂದಿಗೆ ಶ್ರೀ ಸಾಯಿಬಾಬಾ ಕ್ಷೇತ್ರದಲ್ಲಿ ಪ್ರಾರ್ಥಿಸುವ ಮೂಲಕ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಹುಟ್ಟುಹಬ್ಬದ ಶುಭಾಶಯ ಕೋರಿದ ಕ್ಷೇತ್ರದ ಪ್ರತಿಯೊಬ್ಬರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಂಗಮೇಶ್ವರ್ ತಿಳಿಸಿದ್ದಾರೆ.
    ಶಾಸಕರೊಂದಿಗೆ ಸಹೋದರರಾದ ಉದ್ಯಮಿಗಳಾದ ಬಿ.ಕೆ ಜಗನ್ನಾಥ್, ಬಿ.ಕೆ ಶಿವಕುಮಾರ್, ಪುತ್ರರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಕುಟುಂಬ ವರ್ಗದವರು, ಹಿತೈಷಿಗಳು ಶಿರಡಿ ಶ್ರೀ ಸಾಯಿಬಾಬಾ ಕ್ಷೇತ್ರಕ್ಕೆ ತೆರಳಿದ್ದಾರೆ.
    ಸಂಗಮೇಶ್ವರ್‌ರವರು ಕಳೆದ ಬಾರಿ ತಮ್ಮ ೬೦ನೇ ಹುಟ್ಟುಹಬ್ಬ ಹಳೇನಗರದ ಕನಕಮಂಟಪ ಮೈದಾನದಲ್ಲಿ ಅದ್ದೂರಿಯಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಇನ್ನಿತರ ಗಣ್ಯರು ಪಾಲ್ಗೊಂಡಿದ್ದರು.

ಅಂಬೇಡ್ಕರ್-ವಾಲ್ಮೀಕಿ ಭವನ ಪೂರ್ಣಗೊಂಡರೆ ಭದ್ರಾವತಿಗೆ ಮೆರಗು : ಬಿ.ಕೆ ಮೋಹನ್

ಭದ್ರಾವತಿಯಲ್ಲಿ ಶನಿವಾರ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ವೀರಶೈವ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಉದ್ಘಾಟಿಸಿದರು.
    ಭದ್ರಾವತಿ: ಪ್ರಗತಿ ಹಂತದಲ್ಲಿರುವ ಬಿ.ಆರ್ ಅಂಬೇಡ್ಕರ್ ಭವನ ಮತ್ತು ವಾಲ್ಮೀಕಿ ಸಮುದಾಯ ಭವನಗಳೆರಡು ಪೂರ್ಣಗೊಂಡರೆ ನಗರಕ್ಕೆ ಮೆರಗು ದೊರೆಯುತ್ತದೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.
    ಅವರು ಶನಿವಾರ ತಾಲೂಕು ಆಡಳಿತ, ತಾಲೂಕು ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗು ಮಹರ್ಷಿ ವಾಲ್ಮೀಕಿ ನಾಯಕ ಸಂಘದ ವತಿಯಿಂದ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ನಗರದ ವೀರಶೈವ ಸಭಾಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಮುಂದಿನ ವರ್ಷ ವಾಲ್ಮೀಕಿ ಜಯಂತಿ ಕಾರ್ಯಕ್ರಮ ವಾಲ್ಮೀಕಿ ಸಮುದಾಯ ಭವನದಲ್ಲಿ ಆಚರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು. ವರುಷಕೊಮ್ಮೆ ನಡೆಯುವ ಸಮಾಜದ ಕಾರ್ಯಕ್ರಮಕ್ಕೆ ಸಮಾಜ ಬಾಂಧವರೆಲ್ಲರೂ ಭಾಗವಹಿಸುವುದು ಮುಖ್ಯ. ಈ ಕಾರ್ಯಕ್ರಮದ ಯಶಸ್ವಿಯಲ್ಲಿ ಅಧಿಕಾರಿಗಳ ಪಾತ್ರವೂ ಮುಖ್ಯವಾಗಿದ್ದು, ಅಧಿಕಾರಿಗಳ ಪ್ರಯತ್ನ ಶ್ಲಾಘನೀಯ ಎಂದರು.
    ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಬಸವರಾಜ್ ಬಿ ಆನೇಕೊಪ್ಪ ಮಾತನಾಡಿ, ವಾಲ್ಮೀಕಿ ಸಮಾಜದ ಅಭಿವೃದ್ಧಿಗಾಗಿ ನಗರದಲ್ಲಿ ವಾಲ್ಮೀಕಿ ಉದ್ಯಾನವನ ಹಾಗು ವಾಲ್ಮೀಕಿ ಪುತ್ಥಳಿ ಸ್ಥಾಪಿಸಬೇಕು. ಜೊತೆಗೆ ಪ್ರಗತಿ ಹಂತದಲ್ಲಿರುವ ವಾಲ್ಮೀಕಿ ಸಮುದಾಯ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೋರುವ ಮೂಲಕ ಮನವಿ ಸಲ್ಲಿಸಿದರು.
    ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ತಹಸೀಲ್ದಾರ್ ಕೆ.ಆರ್ ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭೆ ಪೌರಾಯುಕ್ತ ಮನುಕುಮಾರ್, ಸದಸ್ಯರಾದ ಲತಾ ಚಂದ್ರಶೇಖರ್, ಕಾಂತರಾಜ್, ಮಾಜಿ ಸದಸ್ಯೆ ಲಕ್ಷ್ಮೀದೇವಿ, ದಸಂಸ ಮುಖಂಡರಾದ ಚಿನ್ನಯ್ಯ, ರಂಗನಾಥ್, ಶಿವಬಸಪ್ಪ, ಈಶ್ವರಪ್ಪ, ತಮ್ಮಣ್ಣ, ಚಂದ್ರಣ್ಣ, ವೆಂಕಟೇಶ್ ಉಜ್ಜನಿಪುರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  
    ಸಿದ್ಧಾರ್ಥ ಅಂಧರ ಕೇಂದ್ರದ ಗಾಯಕರು ಪ್ರಾರ್ಥಿಸಿ, ನಾಡಗೀತೆ ಹಾಡಿದರು. ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲಪ್ಪ ಸ್ವಾಗತಿಸಿದರು. ಸಮಾಜ ಕಲ್ಯಾಣ ಇಲಾಖೆ ನಿಲಯ ಮೇಲ್ವಿಚಾರಕ ಎಸ್.ವಿ ಶಶಿಕುಮಾರ್ ಉಪನ್ಯಾಸ ನೀಡಿದರು.  ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ವಿಐಎಸ್‌ಎಲ್ ಶತಮಾನೋತ್ಸವ : ಸರ್ಕಾರದ ಹೆಸರು ದುರುಪಯೋಗ, ಹಣ ವಸೂಲಿ ಕಾರ್ಯಕ್ರಮ

ವಿಐಎಸ್‌ಎಲ್ ಉಳಿಸಿ ಭದ್ರಾವತಿ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ಆರೋಪ

ಭದ್ರಾವತಿಯಲ್ಲಿ ವಿಐಎಸ್‌ಎಲ್ ಶತಮಾನೋತ್ಸವ ಸಂಭ್ರಮಾಚರಣೆ ವಿರುದ್ಧ ವಿಐಎಸ್‌ಎಲ್ ಉಳಿಸಿ ಭದ್ರಾವತಿ ಉಳಿಸಿ ಹೋರಾಟ ಸಮಿತಿಯಿಂದ ಶನಿವಾರ ಪತ್ರಿಕಾಗೋಷ್ಠಿ ನಡೆಯಿತು.
    ಭದ್ರಾವತಿ: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶತಮಾನೋತ್ಸವ ಆಚರಣೆಯಲ್ಲಿ ಹಿರಿಯ ಚಲನಚಿತ್ರ ನಟ ಎಸ್. ದೊಡ್ಡಣ್ಣರವರು ತಮ್ಮ ಹೆಸರು ಹಾಗು ರಾಜ್ಯ ಸರ್ಕಾರದ ಹೆಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ಕ್ಷೇತ್ರದ ಜನರು ಎಚ್ಚೆತ್ತುಕೊಳ್ಳಬೇಕೆಂದು ವಿಐಎಸ್‌ಎಲ್ ಉಳಿಸಿ ಭದ್ರಾವತಿ ಉಳಿಸಿ ಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ಆರೋಪಿಸಿದರು.
    ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮೈಸೂರು ಮಹಾರಾಜರಾದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ದೂರದೃಷ್ಟಿ ಹಾಗು ಪರಿಶ್ರಮದ ಫಲವಾಗಿ ಕ್ಷೇತ್ರದಲ್ಲಿ ವಿಐಎಸ್‌ಎಲ್ ಮತ್ತು ಎಂಪಿಎಂ ಕಾರ್ಖಾನೆಗಳು ಸ್ಥಾಪನೆಗೊಂಡಿವೆ. ಇದರ ಪರಿಣಾಮ ಭದ್ರಾವತಿಗೆ ಉಕ್ಕಿನ ನಗರ, ಕಾಗದನಗರವೆಂಬ ಹೆಸರು ಬಂದಿತ್ತು.  ಕಾಲಕ್ರಮೇಣ ಎಂಪಿಎಂ ಕಾರ್ಖಾನೆ ಮುಚ್ಚಿ ಕಾರ್ಮಿಕರ ಈಗಾಗಲೇ ಬೀದಿ ಪಾಲಾಗಿದ್ದು, ವಿಐಎಸ್‌ಎಲ್ ಕಾರ್ಖಾನೆ ನಷ್ಟದಲ್ಲಿದ್ದು, ಗುತ್ತಿಗೆ ಕಾರ್ಮಿಕರು ತಿಂಗಳಿಗೆ ಕೇವಲ ೧೩ ದಿನ ಕೆಲಸ ಮಾಡುವಂತಾಗಿದೆ ಎಂದರು.
    ಕ್ಷೇತ್ರವು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಇಲ್ಲಿನ ವ್ಯಾಪಾರಸ್ಥರು ವ್ಯಾಪಾರವಿಲ್ಲದೇ ನಷ್ಟ ಅನುಭವಿಸುತ್ತಿದ್ದಾರೆ. ವಿಐಎಸ್‌ಎಲ್ ಕಾರ್ಮಿಕರು ನಿವೃತ್ತಿ ಹೊಂದಿ ಕಾರ್ಖಾನೆಯ ವಸತಿ ಗೃಹಗಳನ್ನು ಖಾಲಿ ಮಾಡಿರುವ ಪರಿಣಾಮ ಊರೇ ಸ್ಮಶಾನದಂತಾಗಿದೆ. ಕೆಲಸವಿಲ್ಲದೆ ಬೆಂಗಳೂರಿನತ್ತ ಗುಳೆ ಹೋಗುತ್ತಿದ್ದಾರೆ. ಈ ಬಾರಿ ಮಳೆ ಕೊರತೆಯಿಂದಾಗಿ ಕ್ಷೇತ್ರವು ಬರಪೀಡಿತವಾಗಿದ್ದು, ಭದ್ರಾ ಜಲಾಶಯದಲ್ಲಿ ನೀರು ಇಲ್ಲದ ಪರಿಣಾಮ ಭತ್ತ, ಅಡಕೆ ಹಾಗು ತರಕಾರಿ ಬೆಳೆಗಳಿಗೆ ನೀರು ನಿಲ್ಲಿಸಲಾಗಿದೆ. ಇಂತಹ ಸಂದರ್ಭದಲ್ಲಿ ವಿಐಎಸ್‌ಎಲ್‌ಗೆ ೧೦೦ ವರ್ಷ ತುಂಬಿದೆ ಎಂದು ಸಂಭ್ರಮಾಚರಣೆ ನಡೆಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದರು.
    ಚಲನಚಿತ್ರ ನಟ ಎಸ್. ದೊಡ್ಡಣ್ಣರವರು ಕ್ಷೇತ್ರದಲ್ಲಿರುವ ಪ್ರಗತಿಪರ ಸಂಘಟನೆಗಳು, ಕಾರ್ಮಿಕ, ದಲಿತ, ಧಾರ್ಮಿಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು, ಮಹಿಳಾ ಸಂಘಟನೆಗಳು, ವಿದ್ಯಾರ್ಥಿ ಹಾಗು ರೈತ ಸಂಘಟನೆಗಳನ್ನು ಹೊರಗಿಟ್ಟು ತಮ್ಮ ಮೂಗಿನ ನೇರಕ್ಕೆ ಶತಮಾನೋತ್ಸವ ಸಮಿತಿ ರಚಿಸಿಕೊಂಡು ತಾವೇ ಅಧ್ಯಕ್ಷರಾಗಿದ್ದು, ಎಂ.ವಿ ರೇವಣ್ಣಸಿದ್ದಯ್ಯ ಎಂಬುವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿಕೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗು ಕೆಲವು ಸಚಿವರು ಹಾಗು ಮಾಜಿ ಮುಖ್ಯಮಂತ್ರಿಗಳ ಹೆಸರನ್ನು ದುರುಪಯೋಗಪಡಿಸಿಕೊಂಡು ಹಲವಾರು ಉದ್ಯಮಿದಾರರು, ಗುತ್ತಿಗೆದಾರರು, ಬಿಲ್ಡರ್‌ಗಳನ್ನು ಮುಖ್ಯ ಅತಿಥಿಗಳನ್ನಾಗಿ ಆಹ್ವಾನಿಸಿ ಅಪಾರ ಪ್ರಮಾಣದಲ್ಲಿ ದೇಣಿಗೆ ಪಡೆದಿದ್ದಾರೆಂಬ ಮಾಹಿತಿ ಜನರಿಂದ ಕೇಳಿ ಬರುತ್ತಿದೆ ಎಂದರು.
    ಈ ಶತಮಾನೋತ್ಸವ ಆಚರಣೆಯಿಂದ ನಮ್ಮ ಊರಿಗಾಗಲೀ, ವಿಐಎಸ್‌ಎಲ್ ಕಾರ್ಖಾನೆಗಾಗಲೀ ಯಾವುದೇ ಒಳ್ಳೆಯ ಹೆಸರು ಬರುವುದಿಲ್ಲ. ಇದು ಕೇವಲ ಹಣ ವಸೂಲಿ ಕಾರ್ಯಕ್ರಮವಲ್ಲದೇ ಬೇರೆನೂ ಅಲ್ಲ ಎಂದು ಆರೋಪಿಸಿ, ಈ ಹಿನ್ನಲೆಯಲ್ಲಿ ಈ ಸಂಭ್ರಮಾಚರಣೆಯನ್ನು ಜನರು ಎಚ್ಚರಿಕೆಯಿಂದ ಗಮನಿಸಬೇಕೆಂದರು.
    ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ, ಡಿಎಸ್‌ಎಸ್ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಮುಖಂಡರಾದ ನಗರಸಭೆ ಮಾಜಿ ಸದಸ್ಯ ಮಹೇಶ್, ಪ್ರೇಮ್ ಕುಮಾರ್, ವೆಂಕಟೇಶ್, ಚಂದ್ರಶೇಖರ್, ದೇವರಾಜ್, ಭಾಸ್ಕರ್ ಬಾಬು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.