Friday, January 26, 2024

ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಚುನಾವಣಾ ಕಮಿಟಿ ಸದಸ್ಯರಾಗಿ ಎಸ್.ಎನ್ ಶಿವಪ್ಪ ನೇಮಕ

ಎಸ್.ಎನ್ ಶಿವಪ್ಪ 
    ಭದ್ರಾವತಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ, ನಗರದ ಎಸ್.ಎನ್ ಶಿವಪ್ಪ ಅವರನ್ನು ಶಿವಮೊಗ್ಗ ಮತ್ತು ಹಾಸನ ಲೋಕಸಭಾ ಕ್ಷೇತ್ರಗಳ ಚುನಾವಣಾ ಕಮಿಟಿ(ಇ.ಸಿ ಮೆಂಬರ್) ಸದಸ್ಯರನ್ನಾಗಿ ನೇಮಕಗೊಳಿಸಲಾಗಿದೆ.
    ಶಿವಪ್ಪ ಅವರಿಗೆ ಎರಡು ಲೋಕಸಭಾ ಕ್ಷೇತ್ರಗಳ ಚುನಾವಣಾ ಕಮಿಟಿ(ಇ.ಸಿ ಮೆಂಬರ್) ಸದಸ್ಯರನ್ನಾಗಿ ನೇಮಕಗೊಳಿಸಿದ್ದು, ಈ ಕುರಿತು ಜ.24ರಂದು ಕೆಪಿಸಿಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ, ವಿಧಾನ ಪರಿಷತ್ ಮಾಜಿ ಸದಸ್ಯ ಆರ್. ಧರ್ಮಸೇನ ಅವರು ಆದೇಶ ಹೊರಡಿಸಿದ್ದಾರೆ.
    ಶಿವಪ್ಪ ಅವರು ರಾಜಕೀಯ ಹೆಚ್ಚಿನ ಅನುಭವ ಹೊಂದಿದ್ದು, ಈ ಹಿಂದಿನ ಚುನಾವಣೆ ಸಂದರ್ಭದಲ್ಲಿ ಲೋಕಸಭಾ ಕ್ಷೇತ್ರಗಳ ವೀಕ್ಷಕರನ್ನಾಗಿ ನೇಮಕಗೊಳಿಸಲಾಗಿತ್ತು.

ಸಂಗಮೇಶ್ವರ್‌ಗೆ ಎರಡನೇ ಬಾರಿಗೆ ಕೆಆರ್‌ಐಡಿಎಲ್ ಅಧ್ಯಕ್ಷ ಪಟ್ಟ

ಶಾಸಕ ಬಿ.ಕೆ ಸಂಗಮೇಶ್ವರ್
    ಭದ್ರಾವತಿ: ಶಾಸಕ ಬಿ.ಕೆ ಸಂಗಮೇಶ್ವರ್‌ಗೆ 2ನೇ ಬಾರಿಗೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ(ಕೆಆರ್‌ಐಡಿಎಲ್) ಅಧ್ಯಕ್ಷ ಪಟ್ಟ ಒಲಿದು ಬಂದಿದ್ದು, ಕ್ಷೇತ್ರದ ಜನತೆಯಲ್ಲಿ ಸ್ವಲ್ಪಮಟ್ಟಿಗೆ ಸಮಾಧಾನ ಉಂಟು ಮಾಡಿದೆ.  
    4 ಬಾರಿ ಕ್ಷೇತ್ರದ ಶಾಸಕರಾಗಿರುವ ಸಂಗಮೇಶ್ವರ್‌ಗೆ ಈ ಬಾರಿ ಬಹುತೇಕ ಸಚಿವ ಸ್ಥಾನ ಲಭಿಸುವ ನಿರೀಕ್ಷೆ ಇತ್ತು. ಆದರೆ ಕ್ಷೇತ್ರದ ಜನರ ನಿರೀಕ್ಷೆ ಹುಸಿಯಾಗುವ ಮೂಲಕ ಸರ್ಕಾರದ ವಿರುದ್ಧ ಅಸಮಾಧಾನ ಕಂಡು ಬಂದಿತ್ತು. ಈ ನಡುವೆ ಸಂಗಮೇಶ್ವರ್ ಬೆಂಬಲಿಗರು, ಅಭಿಮಾನಿಗಳು ಸಚಿವ ಸ್ಥಾನ ನೀಡುವಂತೆ ನಿರಂತರವಾಗಿ ಆಗ್ರಹಿಸುತ್ತಿದ್ದರು. ಅಲ್ಲದೆ ಸಂಗಮೇಶ್ವರ್ ಸಹ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದರು. ಇದೀಗ ಪುನಃ ಎರಡನೇ ಬಾರಿ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ(ಕೆಆರ್‌ಐಡಿಎಲ್) ಅಧ್ಯಕ್ಷ ಪಟ್ಟ ಲಭಿಸಿದೆ.
    ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂಗಮೇಶ್ವರ್ ಪುನಃ ಆಯ್ಕೆಯಾದಲ್ಲಿ ಸಚಿವ ಸ್ಥಾನ ನೀಡುವುದಾಗಿ ಹಲವು ಬಾರಿ ಬಹಿರಂಗ ಸಭೆಗಳಲ್ಲಿ ಭರವಸೆ ನೀಡಿದ್ದರು. ಅಲ್ಲದೆ ಕಳೆದ ಸುಮಾರು 9 ವರ್ಷಗಳಿಂದ ಸ್ಥಗಿತಗೊಂಡಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ ಪುನರ್ ಆರಂಭಿಸುವುದಾಗಿ ಸಹ ಭರವಸೆ ನೀಡಲಾಗಿತ್ತು. ಇದೀಗ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಕ್ಷೇತ್ರದ ಜನತೆಗೆ ನೀಡಿರುವ ಒಂದು ಭರವಸೆ ಕೈತಪ್ಪಿ ಹೋಗಿದ್ದು,  ಕಾರ್ಖಾನೆ ಪುನರ್ ಆರಂಭಿಸುವ ಮೂಲಕ ಎರಡನೇ ಭರವಸೆಯನ್ನಾದರೂ ಈಡೇರಿಸಲು ಮುಂದಾಗಬೇಕಾಗಿದೆ.

ಸಾಮಾಜಿಕ ಸೇವೆ : ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್‌ಗೆ ಸನ್ಮಾನ, ಗೌರವ

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಹಾಗು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಭದ್ರಾವತಿ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಾಮಾಜಿಕ ಸೇವೆಯನ್ನು ಗುರುತಿಸಿ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ಭದ್ರಾವತಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಹಾಗು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಸಾಮಾಜಿಕ ಸೇವೆಯನ್ನು ಗುರುತಿಸಿ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

    ಶಿವಕುಮಾರ್ ಅವರು ಹಲವಾರು ವರ್ಷಗಳಿಂದ ಬಡ ಮಕ್ಕಳ ಶಿಕ್ಷಣಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಸೇವಾ ಕಾರ್ಯಗಳನ್ನು ಕೈಗೊಳ್ಳುವ ಜೊತೆಗೆ ಸ್ವಯಂ ಸೇವಾ ಸಂಸ್ಥೆಗಳ ಸೇವಾ ಕಾರ್ಯಗಳಲ್ಲೂ ಕೈಜೋಡಿಸುತ್ತಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಗೌರವಿಸಲಾಗಿದೆ.

    ಶಾಸಕ ಬಿ.ಕೆ ಸಂಗಮೇಶ್ವರ್ ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್, ಉಪಾಧ್ಯಕ್ಷೆ ಬಿ.ಪಿ ಸರ್ವಮಂಗಳ ಭೈರಪ್ಪ, ಸ್ಥಾಯಿಸಮಿತಿ ಅಧ್ಯಕ್ಷ ಕಾಂತರಾಜ್, ಕರ್ನಾಟಕ ರಾಜ್ಯ ಸ.ನೌ. ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ತಹಸೀಲ್ದಾರ್ ಗ್ರೇಡ್-2 ರಂಗಮ್ಮ, ಉಪ ತಹಸೀಲ್ದಾರ್ ರಾಧಾಕೃಷ್ಣ ಭಟ್, ಮಂಜಾನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ದಿವಾಕರ್, ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರುಗಳು ಹಾಗೂ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಸ್ವಾತಂತ್ರ ಹೋರಾಟಗಾರರು, ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.

Thursday, January 25, 2024

ಅಂಬೇಡ್ಕರ್‌ರವರ ಆಶಯದಂತೆ ಎಲ್ಲರೂ ಸಮಾನತೆಯಿಂದ ಬದುಕಬೇಕಾಗಿದೆ : ಸಂಗಮೇಶ್ವರ್

 


ಭದ್ರಾವತಿ:  ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ತಾಲೂಕು ಆಡಳಿತ, ನಗರ ಸಭೆ, ತಾಲೂಕು ಪಂಚಾಯಿತಿ, ಶಿಕ್ಷಣ ಇಲಾಖೆ ಹಾಗು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಳೇನಗರದ ಕನಕ ಮಂಟಪ ಮೈದಾನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ತಹಸೀಲ್ದಾರ್ ಕೆ.ಆರ್ ನಾಗರಾಜು ಧ್ವಜಾರೋಹಣ ನೆರವೇರಿಸಿದರು.

  ಶಾಸಕ ಬಿ.ಕೆ ಸಂಗಮೇಶ್ವರ ಅಧ್ಯಕ್ಷತೆವಹಿಸಿ ಮಾತನಾಡಿ, ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಆಶಯದಂತೆ ಎಲ್ಲರೂ ಸಮಾನತೆಯಿಂದ ಬದುಕಬೇಕಾಗಿದೆ. ಈ ನಿಟ್ಟಿನಲ್ಲಿ ಭವಿಷ್ಯದ ಸಮಾಜ ನಿರ್ಮಾಣಗೊಳ್ಳಬೇಕಾಗಿದೆ ಎಂದರು.

 ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್, ಉಪಾಧ್ಯಕ್ಷೆ  ಬಿ.ಪಿ ಸರ್ವಮಂಗಳ ಭೈರಪ್ಪ, ಸ್ಥಾಯಿಸಮಿತಿ ಅಧ್ಯಕ್ಷ ಕಾಂತರಾಜ್, ಕರ್ನಾಟಕ ರಾಜ್ಯ ಸ.ನೌ. ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ತಹಸೀಲ್ದಾರ್ ಗ್ರೇಡ್-2 ರಂಗಮ್ಮ, ಉಪಸ್ಥಿತರಿದ್ದರು. ಉಪ ತಹಸೀಲ್ದಾರ್  ರಾಧಾಕೃಷ್ಣ ಭಟ್, ಮಂಜಾನಾಯ್ಕ, ತಾಲೂಕು ಆರೋಗ್ಯಾಧಿಕಾರಿ ಡಾ.ಎಂ.ವಿ ಅಶೋಕ್, ನಗರ ಸ್ಥಳೀಯ ಸಂಸ್ಥೆಗಳ  ಸದಸ್ಯರುಗಳು ಹಾಗೂ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರುಗಳು, ಸ್ವಾತಂತ್ರ ಹೋರಾಟಗಾರರು ಪ್ರತಿಕಾ ಪ್ರತಿನಿಧಿಗಳು,  ಸರ್ಕಾರಿ ಅಧಿಕಾರಿಗಳು ಹಾಗೂ ನೌಕರರು ಮತ್ತು  ನಾಗರೀಕರು ಹಾಗು ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. 

     ಇದಕ್ಕೂ ಮೊದಲು ಶ್ರೀಶೈಲ ಕೆಂಚಣ್ಣನವರು ಪಥ ಸಂಚಲನದ ವಂದನೆ ಸ್ವೀಕರಿಸಿದರು.  ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿ, ಅಪೇಕ್ಷ ಮಂಜುನಾಥ್ ನಿರೂಪಿದರು. 


ಮತ ಹಾಕುವ ಮತದಾರ ಯೋಚಿಸಿ ಎಚ್ಚರಿಕೆಯಿಂದ ಮತದಾನ ಮಾಡಿ : ನ್ಯಾ. ಟಿ. ಶ್ರೀಕಾಂತ್

ತಾಲೂಕು ಆಡಳಿತ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮತದಾರರ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ಭದ್ರಾವತಿ; ನಮ್ಮ ಸಂವಿಧಾನ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಮತದಾನದ ಹಕ್ಕು ನೀಡಿದ್ದು, ಮತ ಹಾಕುವ ಮತದಾರ ಯೋಚಿಸಿ ಎಚ್ಚರಿಕೆಯಿಂದ ಮತದಾನ ಮಾಡಬೇಕು ಎಂದು ನಗರದ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಟಿ. ಶ್ರೀಕಾಂತ್ ಹೇಳಿದರು.
ತಾಲೂಕು ಆಡಳಿತ ಹಾಗು ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮತದಾನ ಎನ್ನುವುದು ಸಂವಿಧಾನ ನಮಗೆ ಕೊಟ್ಟಿರುವ ಹಕ್ಕು ಮಾತ್ರವಲ್ಲದೆ ಅದು ನಮ್ಮೆಲ್ಲರ ಕರ್ತವ್ಯವೂ ಆಗಿದೆ. ನಾವು ಹಾಕುವ ಒಂದು ಮತದಿಂದ ಗೆಲ್ಲುವ ಚುನಾಯಿತ ಪ್ರತಿನಿಧಿಗಳು, ಮಾಡುವ ಕಾನೂನುಗಳಿಂದ ಸಮಾಜದ ಮೇಲೆ ಹಾಗು ನಮ್ಮ ಮೇಲೆ ಸಾಕಷ್ಟು ಉತ್ತಮ ಪರಿಣಾಮ ಬೀರುತ್ತವೆ. 
ಹಿಂದೆ ನ್ಯಾಯವಾದಿಗಳು ಹೆಚ್ಚಾಗಿ ರಾಜಕೀಯ ರಂಗ ಪ್ರವೇಶಿಸುತ್ತಿದ್ದರು. ಕಾನೂನುಗಳ ಅರಿವು ತಿಳುವಳಿಕೆ ಕೂಡ ಹೊಂದಿರುತ್ತಿದ್ದರು, ಇತ್ತೀಚೆಗೆ ರಾಜಕೀಯ ಪ್ರವೇಶ ಕಡಿಮೆಯಾಗಿದೆ. ಇಂದಿಗೂ ಬ್ರಿಟಿಷರು ಮಾಡಿರುವ ಕಾನೂನುಗಳನ್ನೇ ನಾವು ಒಪ್ಪಿಕೊಂಡು ಬಳಕೆ ಮಾಡಿಕೊಳ್ಳುತ್ತಿದ್ದೇವೆ. ಅವುಗಳನ್ನು ತಿದ್ದುಪಡಿ ಮಾಡುವುದೂ ಸಹ ಕಷ್ಟವಾಗಿದೆ. ತಿದ್ದುಪಡಿ ಮಾಡುವ ಅವಕಾಶ  ಜನಪ್ರತಿನಿಧಿಗಳಿಗಿದ್ದು,  ತಿಳುವಳಿಕೆಯುಳ್ಳ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವುದು ಯುವ ಪೀಳಿಗೆಯ ಜವಾಬ್ದಾರಿಯಾಗಿದೆ ಎಂದರು.
ತಹಸೀಲ್ದಾರ್ ಕೆ.ಆರ್ ನಾಗರಾಜ್ ಮಾತನಾಡಿ, ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಒಟ್ಟು 2,12,770 ಮತದಾರರಿದ್ದಾರೆ. ಈ ಪೈಕಿ 3,372 ಯುವ ಮತದಾರರಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸದೃಢ ಪ್ರಜಾಪ್ರಭುತ್ವ ಕಟ್ಟಲು ಮತದಾರರ ಪಾತ್ರ ಮಹತ್ವದ್ದಾಗಿದ್ದು, ಮತದಾನ ಮಾಡಲು ಪ್ರತಿಯೊಬ್ಬರೂ ಮುಂದಾಗಬೇಕೆAದರು.
ನ್ಯಾಯಾಧೀಶರಾದ ಸಿ.ಎನ್ ಲೋಕೇಶ್ ಪ್ರತಿಜ್ಞಾ ವಿಧಿ ಭೋಧಿಸಿದರು.  ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ್, ಪಿ. ರತ್ನಮ್ಮ, ವಕೀಲರ ಸಂಘದ ಅಧ್ಯಕ್ಷ ಉಮೇಶ್, ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ., ಗ್ರೇಡ್-2 ತಹಸೀಲ್ದಾರ್ ರಂಗಮ್ಮ, ಮಂಜಾನಾಯ್ಕ, ರಾಧಾಕೃಷ್ಣ ಭಟ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಜೀವನದಲ್ಲಿ ವಿದ್ಯೆಗೆ ಹೆಚ್ಚಿನ ಗೌರವ, ಮಹತ್ವ ಅರಿತುಕೊಳ್ಳಿ : ಬಿ.ಕೆ ಮೋಹನ್

ಭದ್ರಾವತಿ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ೨೦೨೩-೨೪ನೇ ಸಾಲಿನ ಸಹ ಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಉದ್ಘಾಟಿಸಿದರು.
    ಭದ್ರಾವತಿ: ಜೀವನದಲ್ಲಿ ವಿದ್ಯೆಗೆ ಹೆಚ್ಚಿನ ಗೌರವವಿದ್ದು, ಮಕ್ಕಳು ಶಾಲಾ-ಕಾಲೇಜು ದಿನಗಳಲ್ಲಿಯೇ ವಿದ್ಯೆಯ ಮಹತ್ವ ತಿಳಿಯಬೇಕು. ಇಲ್ಲವಾದಲ್ಲಿ ಭವಿಷ್ಯದಲ್ಲಿ ಬಹಳ ಕಷ್ಟ ಅನುಭವಿಸಬೇಕಾಗುತ್ತದೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.
    ನಗರದ ನ್ಯೂಟೌನ್ ಸರ್.ಎಂ.ವಿ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಗುರುವಾರ ಆಯೋಜಿಸಲಾಗಿದ್ದ ೨೦೨೩-೨೪ನೇ ಸಾಲಿನ ಸಹ ಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
    ಪ್ರಸ್ತುತ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳ್ಳಲು ಬಸವಣ್ಣ ಮತ್ತು ಅಂಬೇಡ್ಕರ್ ಅವರ ಆದರ್ಶಗಳು ಅಗತ್ಯ. ಶಾಲಾ-ಕಾಲೇಜುಗಳಲ್ಲಿ ಸಣ್ಣ ಘಟನೆಗಳಿಗೂ ಅನಗತ್ಯವಾಗಿ ಚಳುವಳಿಗಳನ್ನು ನಡೆಸುವುದು ದುರಂತ ಸಂಗತಿ ಎಂದರು.
ಶಿವಮೊಗ್ಗದ ಡಾ. ಕಟೀಲ್ ಅಶೋಕ್ ಪೈ ಮೆಮೋರಿಯಲ್ ಕಾಲೇಜಿನ ಪ್ರಿನ್ಸಿಪಲ್ ಡಾ. ಸಂಧ್ಯಾ ಕಾವೇರಿ ಮಾತನಾಡಿ, ಶಿಕ್ಷಣ ಎಂದರೆ ಕೇವಲ ಪಠ್ಯವಲ್ಲ. ಜೀವನವನ್ನು ಸುಂದರವನ್ನಾಗಿಸುವ ಸಾಧನ. ಶಿಕ್ಷಣ ಸಂಸ್ಥೆಗಳ ದೊಡ್ಡ ಜವಾಬ್ದಾರಿ ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವುದು ಎಂದರು.
    ಸರ್.ಎಂ.ವಿ ಕಾಲೇಜು ಸುಸಜ್ಜಿತವಾಗಿದ್ದು, ವಿದ್ಯಾರ್ಥಿಗಳು ಇದನ್ನು ಉತ್ತಮ ರೀತಿ ಬಳಸಿಕೊಳ್ಳಬೇಕು. ಪ್ರಸ್ತುತ ಇಂದಿನ ದಿನಗಳು ಸಂಶೋಧನೆಯ ಯುಗ, ಆಧುನಿಕತೆಯ ಯುಗವಾಗಿರುವುದರ ಜೊತೆಗೆ ಸಾಧನೆಯ ಯುಗವೂ ಆಗಿದೆ ಎಂಬುದನ್ನು ತಿಳಿಯಬೇಕಿದೆ ಎಂದರು.
    ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್, ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಣಿಶೇಖರ್, ಮುಖಂಡರಾದ ಎಸ್.ಎಸ್ ಭೈರಪ್ಪ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಮುಕುಂದಪ್ಪ, ಕಿರಣ್ ಬಾರಂದೂರು, ಸೈಯದ್ ಸರ್ಪರಾಜ್ ನವಾಜ್, ಪ್ರಮೋದ್, ಯಲ್ಲೋಜಿರಾವ್(ಬಾಬು), ನಂಜುಂಡಪ್ಪ, ಪಿ.ಕೆ ಹರೀಶ್, ಇಮ್ರಾನ್, ರಿಚರ್ಡ್, ಎಂ.ಎ ವೆಂಕಟೇಶ್, ಟಿ.ಆರ್ ಯೋಗೇಶಪ್ಪ, ಲೀಲಾವತಿ, ಗಂಗಾಧರ್, ಎಂ.ಜಿ ರಾಮಚಂದ್ರನ್, ಇಸ್ರೆಲ್, ವಿವಿಧ ವೇದಿಕೆಗಳ ಸಂಚಾಲಕರಾದ ಎಂ. ವೆಂಕಟೇಶ್, ಎಂ. ಮೊಹಮ್ಮದ್ ನಜೀಬ್, ಅಕ್ರಂಪಾಷ, ಆರ್. ವೆಂಕಟೇಶ್, ಡಾ. ಎಚ್.ಎಸ್ ಶಿವರುದ್ರಪ್ಪ, ಡಾ. ಎಸ್. ವರದರಾಜ, ಬಿ. ಗುರುಪ್ರಸಾದ್, ಡಾ. ಬಿ.ಜಿ ಅಕ್ಷತ, ಡಾ. ಟಿ.ಜಿ ಉಮಾ, ಕಾಲೇಜಿನ ಸಾಂಸ್ಕೃತಿಕ ವೇದಿಕೆ ವಿದ್ಯಾರ್ಥಿ ಪದಾಧಿಕಾರಿಗಳಾದ ವಿ. ಪ್ರೇಮ್ ಕುಮಾರ್, ಅಬ್ದುಲ್ ಹಸೀಬ್ ಖಾನ್, ಟಿ. ಶ್ಯಾಂ ಬಾಬು ಮತ್ತು ಆರ್. ಪುಷ್ಪಲತಾ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
    ಕಾಲೇಜಿನ ಪ್ರಾಂಶುಪಾಲರಾದ ಡಾ.ಶೈಲಜಾ ಎಸ್ ಹೊಸಳ್ಳೇರ ಅಧ್ಯಕ್ಷತೆ ವಹಿಸಿದ್ದರು. ಶಾಯಿದ್ ಮತ್ತು ಸಂಗಡಿಗರು ನಾಡಗೀತೆ ಹಾಗು ವಚನಗಾಯನ ಹಾಡಿದರು. ಪ್ರೊ. ಎನ್. ರವಿ ಸ್ವಾಗತಿಸಿದರು.  ವಿವಿಧ ಕ್ರೀಡೆಗಳಲ್ಲಿ ಸ್ಪರ್ಧಿಸಿ ಉತ್ತಮ ಸಾಧನೆ ಮಾಡಿರುವ ಕ್ರೀಡಾಪಟುಗಳು, ಸ್ಕೌಟ್ ಸದಸ್ಯರು ಹಾಗು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪ್ರೊ. ಶ್ರೀದೇವಿ ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದರು.

ಯಾವುದೇ ಸರ್ಕಾರವಿದ್ದರೂ ಸೈದ್ದಾಂತಿಕವಾಗಿ ನಾನು ನೌಕರರ ಪರವಾಗಿರುತ್ತೇನೆ : ಪೂರ್ಣ ಪ್ರಮಾಣದ ರಾಜಕಾರಣಿ ಅಲ್ಲ, ಹೋರಾಟಗಾರ

ನೈರುತ್ಯ ಪದವೀಧರರ ಕ್ಷೇತ್ರ  ಕಾಂಗ್ರೆಸ್ ಪಕ್ಷದ ಸಂಭವನೀಯ ಅಭ್ಯರ್ಥಿ, ಮಾಜಿ ಸಂಸದ ಆಯನೂರು ಮಂಜುನಾಥ್

\

ಭದ್ರಾವತಿ ಹಳೇನಗರದ ಪತ್ರಿಕಾಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾಜಿ ಸಂಸದ ಆಯನೂರು ಮಂಜುನಾಥ್ ಮಾತನಾಡಿದರು.
    ಭದ್ರಾವತಿ: ಕಳೆದ 40 ವರ್ಷಗಳಿಂದ ನನ್ನನ್ನು ನಾನೇ ನೌಕರರ ಹಾಗೂ ಕಾರ್ಮಿಕರ ವರ್ಗಕ್ಕೆ ಮೀಸಲಿಟ್ಟುಕೊಂಡಿದ್ದು, ಯಾವುದೇ ಸರ್ಕಾರವಿದ್ದರೂ ಸೈದ್ದಾಂತಿಕವಾಗಿ ನಾನು ನೌಕರರ ಪರವಾಗಿರುತ್ತೇನೆ. ಪೂರ್ಣ ಪ್ರಮಾಣದ ರಾಜಕಾರಣಿ ಅಲ್ಲ, ಹೋರಾಟಗಾರ  ಎಂದು ನೈರುತ್ಯ ಪದವೀಧರರ ಕ್ಷೇತ್ರ  ಕಾಂಗ್ರೆಸ್ ಪಕ್ಷದ ಸಂಭವನೀಯ ಅಭ್ಯರ್ಥಿ, ಮಾಜಿ ಸಂಸದ ಆಯನೂರು ಮಂಜುನಾಥ್ ಹೇಳಿದರು.
      ಹಳೇನಗರದ ಪತ್ರಿಕಾಭವನದಲ್ಲಿ  ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ವಿದ್ಯಾರ್ಥಿ ದಿನಗಳಿಂದಲೂ ಕಾರ್ಮಿಕ, ಶ್ರಮಿಕ, ನೌಕರರ ಮತ್ತು ಜನಸಾಮಾನ್ಯರ ಪರವಾಗಿ ಹಾಗೂ ಅನ್ಯಾಯಗಳ ವಿರುದ್ಧ ಸದಾ ಕಾಲ ಹಲವಾರು ಹೋರಾಟಗಳನ್ನು ಮಾಡುತ್ತಾ ಬಂದಿದ್ದೇನೆ. ಈ ಹಿಂದೆ ಶಾಸಕನಾಗಿ ಆಯ್ಕೆಯಾದಾಗ ಲಭಿಸಿದ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸದನದ ಒಳಗೂ,  ಹೊರಗೂ ಶ್ರಮಿಕ ವರ್ಗದ ಪರವಾಗಿ ಧ್ವನಿಎತ್ತಿದ್ದೇನೆ ಎಂದರು.
       ನೌಕರರ, ಶಿಕ್ಷಕರ , ಅತಿಥಿ ಉಪನ್ಯಾಸಕರ, ಅತಿಥಿ ಶಿಕ್ಷಕರ ಹಾಗೂ ಬಡ್ತಿಯಿಂದ ಶಿಕ್ಷಕರಿಗೆ ಉಂಟಾದ ಸಮಸ್ಯೆ, ಸಿ ಅಂಡ್ ಆರ್ ಇತ್ಯಾದಿ ವಿಷಯಗಳು, ಆರೋಗ್ಯ ಇಲಾಖೆ ಎನ್.ಎಚ್.ಎಂ ನೌಕರರ, ಅರಣ್ಯ ಇಲಾಖೆ, ಪೌರ ಕಾರ್ಮಿಕರ ಸಮಸ್ಯೆ, ಕಾರ್ಖಾನೆಗಳ ಕಾರ್ಮಿಕರ ಬಗ್ಗೆ ಮತ್ತು ಪೊಲೀಸ್ ಇಲಾಖೆಯಲ್ಲಿ ಔರಾದ್ ಕರ್ ವರದಿಯಿಂದ ಉಂಟಾದ ವೇತನ ಹಾಗೂ ಭತ್ಯೆಯ ತಾರತಮ್ಯ, ಸೇವಾ ಜ್ಯೇಷ್ಠತೆ, ಕಡೆಗಣನೆಯ ವಿರುಧ್ದ ಕರ್ನಾಟಕ ರಾಜ್ಯದ ಪೊಲೀಸರ ಪರವಾಗಿ ಧ್ವನಿ ಎತ್ತಿ ಅವರ ಸಮಸ್ಯೆಯ ಬಗ್ಗೆ ಚರ್ಚಿಸಿ, ತಾರ್ಕಿಕ ಅಂತ್ಯ ಕಾಣಿಸುವ ಹೋರಾಟ ಮಾಡಿದ್ದೇನೆ ಎಂದು ವಿವರಿಸಿದರು.
      ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉಡುಪಿ, ಮಂಗಳೂರು ಜಿಲ್ಲೆ ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ ಮತ್ತು ನ್ಯಾಮತಿ ತಾಲೂಕಿನ ಒಟ್ಟು 30 ವಿಧಾನಸಭಾ ಹಾಗೂ 5 ಲೋಕಸಭಾ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿರುವ ನೈರುತ್ಯ ಪದವೀಧರ ಕ್ಷೇತ್ರದ ಮತದಾರರಾಗಿ ಹೆಸರನ್ನು ನೊಂದಾಯಿಸಿಕೊAಡಿರುವ ಮತದಾರರು ಮತದಾನದಲ್ಲಿ ಪಾಲ್ಗೊಳ್ಳಬಹುದು ಎಂದು ತಿಳಿಸಿದರು.      
      ಪದವೀಧರ ನೌಕರರು, ಸ್ವಯಂ ಉದ್ಯೋಗಿ ಮತ್ತು ನಿರುದ್ಯೋಗಿ ಪದವೀಧರರ ಪರವಾಗಿ ಸದನದಲ್ಲಿ ಧ್ವನಿಯಾಗಲು ಮತ್ತೊಮ್ಮೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದು, ಕ್ಷೇತ್ರ ವ್ಯಾಪ್ತಿಯ ಪದವೀಧರ ಮತದಾರರು ತಪ್ಪದೆ ಮತದಾನ ಮಾಡುವ ಮೂಲಕ ಅವಕಾಶ ನೀಡಿ, ಹರಸಬೇಕೆಂದು ಮನವಿ ಮಾಡಿದರು.
      ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಮುಖಂಡ ವೈ.ಎಚ್ ನಾಗರಾಜ್, ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್, ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್,  ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಮಾಜಿ ಉಪಾಧ್ಯಕ್ಷ ಚನ್ನಪ್ಪ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್. ಕುಮಾರ್,  ಜಿ.ಪಂ. ಸದಸ್ಯ ಎಸ್. ಮಣಿಶೇಖರ್ ಉಪಸ್ಥಿತರಿದ್ದರು.

Wednesday, January 24, 2024

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ವ್ಯಕ್ತಿ ನಾಪತ್ತೆ

ಗಂಗಪ್ಪ ಹತ್ತಿ
    ಭದ್ರಾವತಿ : ನಗರದ ಜನ್ನಾಪುರ ನಿವಾಸಿ ಗಂಗಪ್ಪ ಹತ್ತಿ(60) ಎಂಬುವರು ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಡಿ.9ರಂದು ನಾಪತ್ತೆಯಾಗಿದ್ದು, ಇದುವರೆಗೂ ಪತ್ತೆಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಯಾರಿಗಾದರೂ ಇವರ ಸುಳಿವು ಕಂಡು ಬಂದಲ್ಲಿ ಮಾಹಿತಿ ನೀಡುವಂತೆ ಕೋರಲಾಗಿದೆ.
    4 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋದಿ ಬಣ್ಣ, ಕೋಲುಮುಖ, ಬಿಳಿ ಮತ್ತು ಕಪ್ಪು ಬಣದ ಗಡ್ಡ ಹೊಂದಿರುತ್ತಾರೆ. ಕಾಣೆಯಾದಾಗ ತಲೆಯಲ್ಲಿ ಕೆಂಪು ಟೋಪಿ, ಬ್ರೌನ್ ಕಲರ್ ಶರ್ಟ್, ಗ್ರೇ ಕಲರ್ ಪ್ಯಾಂಟ್ ಧರಿಸಿರುತ್ತಾರೆ. ಮಾತನಾಡಲು ಬರುವುದಿಲ್ಲ. ಕೈ ಸನ್ನೆ ಮಾಡುತ್ತಾರೆ.
    ಡಿ.6ರಂದು ಯಾರಿಗೂ ಹೇಳದೆ ಗಂಗಪ್ಪ ಹತ್ತಿ ಅವರು ಮನೆ ಬಿಟ್ಟು ಹಾವೇರಿಗೆ ಸಂಬಂಧಿಕರ ಮನೆಗೆ ಹೋಗಿದ್ದು, ಶಿಕಾರಿಪುರದಲ್ಲಿ ವಾಸವಾಗಿರುವ ಇವರ ಪುತ್ರ ಬಸವರಾಜ ಅವರಿಗೆ ಸಂಬಂಧಿಕರು ಪೋನ್ ಮಾಡಿ ನಿಮ್ಮ ತಂದೆಯವರು ಹಾವೇರಿಯಲ್ಲಿದ್ದು, ಬಂದು ಕರೆದುಕೊಂಡು ಹೋಗುವಂತೆ ಹೇಳಿದ್ದಾರೆ. ಅದರಂತೆ ಶಿಕಾರಿಪುರದಿಂದ ಭದ್ರಾವತಿ ಕರೆದುಕೊಂಡು ಬರುವಾಗ ಡಿ.9ರಂದು ರಾತ್ರಿ 8 ಗಂಟೆ ಸಮಯದಲ್ಲಿ ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಕಾಣೆಯಾಗಿದ್ದಾರೆಂದು ಹುಡುಕಿ ಕೊಡುವಂತೆ ಡಿ.21ರಂದು ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಗೆ ಮನವಿ ಮಾಡಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮಹಿಳೆಯರಿಲ್ಲದ ಕ್ಷೇತ್ರವೇ ಇಲ್ಲವಾಗಿರುವುದು ಮಹಿಳೆಯರ ಸಾಮರ್ಥ್ಯಕ್ಕೆ ನಿದರ್ಶನ : ಕೆ. ನಾಗಮ್ಮ

ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಮಹಿಳಾ ಸೇವಾ ಸಮಾಜದ ಸಭಾಂಗಣದಲ್ಲಿ ಅಪರಂಜಿ ಅಭಿನಯ ಶಾಲೆ ಹಾಗು ಮಹಿಳಾ ಸೇವಾ ಸಮಾಜದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಹಿಳಾ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಪೇಪರ್‌ಟೌನ್ ಠಾಣಾ ನಿರೀಕ್ಷಕಿ ಕೆ. ನಾಗಮ್ಮ ಉದ್ಘಾಟಿಸಿದರು.
    ಭದ್ರಾವತಿ: ತೊಟ್ಟಿಲು ತೂಗುವ ಕೈಗಳು ದೇಶವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿರುತ್ತವೆ. ಮಹಿಳೆಯರು ಇಂದು ಎಲ್ಲ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವುದೇ ಸಾಕ್ಷಿ. ಮಹಿಳೆಯರಿಲ್ಲದ ಕ್ಷೇತ್ರವೇ ಇಲ್ಲವಾಗಿರುವುದು ಮಹಿಳೆಯರ ಸಾಮರ್ಥ್ಯಕ್ಕೆ ನಿದರ್ಶನವಾಗಿದೆ ಎಂದು ಪೇಪರ್‌ಟೌನ್ ಠಾಣಾ ನಿರೀಕ್ಷಕಿ ಕೆ. ನಾಗಮ್ಮ ತಿಳಿಸಿದರು.
    ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಮಹಿಳಾ ಸೇವಾ ಸಮಾಜದ ಸಭಾಂಗಣದಲ್ಲಿ ಅಪರಂಜಿ ಅಭಿನಯ ಶಾಲೆ ಹಾಗು ಮಹಿಳಾ ಸೇವಾ ಸಮಾಜದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಮಹಿಳಾ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಪುರುಷರು ಮತ್ತು ಮಹಿಳೆಯರು ಪರಸ್ಪರ ಗೌರವದಿಂದ ನಡೆದಾಗ ಮಾತ್ರ ಸಾಮರಸ್ಯ ನೆಲೆಸುತ್ತದೆ. ಮಹಿಳಾ ಸೌಲಭ್ಯಗಳು ಏಳಿಗೆಗೆ ಕಾರಣವಾಗಬೇಕೆ ಹೊರತು ಸ್ವೇಚ್ಛಾಚಾರಕ್ಕೆ ಕಾರಣವಾಗಬಾರದು. ಮಹಿಳೆಯರನ್ನು ಒಗ್ಗೂಡಿಸುವುದು ಕಷ್ಟದ ಕೆಲಸ ಎಂದರು.
    ಮಹಿಳೆಯರಿಗೆ ಕಾನೂನು ತಿಳುವಳಿಕೆ ಮತ್ತು ಸ್ವರಕ್ಷಣೆಯ ವಿದ್ಯೆಗಳ ಕಲಿಕೆ ಮುಖ್ಯ. ಮಹಿಳೆಯರು ಸಂಘಟಿತರಾದರೆ ನಿಯಮಗಳ ಅರಿವು ಮೂಡಿಸಲು ಆರಕ್ಷಕ ಇಲಾಖೆ ನೆರವು ನೀಡುವುದಾಗಿ ತಿಳಿಸಿದರು.
    ಆಶಯ ನುಡಿಗಳನ್ನಾಡಿದ ಅಪರಂಜಿ ಅಭಿನಯ ಶಾಲೆಯ ಅಧ್ಯಕ್ಷ ಅಪರಂಜಿ ಶಿವರಾಜ್, ಹೆಣ್ಣು ಮಕ್ಕಳು ಸುಖ ಸಂತೋಷದಿಂದ ಇದ್ದರೆ ಅಂತಹ ಕುಟುಂಬವೂ ನೆಮ್ಮದಿಯಿಂದ ಇರುತ್ತದೆ. ಹೆಣ್ಣು ಮಕ್ಕಳ ಪ್ರತಿಭಾ ಪ್ರದರ್ಶನಕ್ಕೊಂದು ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಮಹಿಳಾ ಸಾಂಸ್ಕೃತಿಕ ವೈಭವ ಆಯೋಜಿಸಲಾಗಿದೆ ಎಂದರು.
    ಕಾರ್ಯಕ್ರಮದಲ್ಲಿ ಮಹಿಳಾ ಸೇವಾ ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ ರಾವ್, ಪ್ರಧಾನ ಕಾರ್ಯದರ್ಶಿ ಶೋಭಾ ಗಂಗರಾಜ್, ಖಜಾಂಚಿ ಜಯಂತಿ ನಾಗರಾಜ ಶೇಟ್, ಅಪರಂಜಿ ಅಭಿನಯ ಶಾಲೆಯ ಉಪಾಧ್ಯಕ್ಷೆ ಅನುಸೂಯ ಎಂ., ಪ್ರಧಾನ ಕಾರ್ಯದರ್ಶಿ ಪುಷ್ಪಲತಾ ಸಿ.ಎಚ್. ಸೇರಿದಂತೆ ಹಲವರು ಹಾಜರಿದ್ದರು.
    ಕಮಲಕುಮಾರಿ, ಶೋಭಾ ಹಾಗು ಸಂಗಡಿಗರು ಪ್ರಾರ್ಥಿಸಿದರು. ನಂತರ ಹಲವು ಮಹಿಳಾ ತಂಡಗಳಿಂದ ಗಾಯನ ಹಾಗು ನೃತ್ಯ ಪ್ರದರ್ಶನ ನಡೆಯಿತು.

ಜೆಪಿಎಸ್ ಕಾಲೋನಿ ಸರ್ಕಾರಿ ಶಾಲಾ ಕೊಠಡಿ ಉದ್ಘಾಟನೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜೆಪಿಎಸ್ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕೊಠಡಿ ಬುಧವಾರ ಶಾಸಕ ಬಿ.ಕೆ ಸಂಗಮೇಶ್ವರ ಉದ್ಘಾಟಿಸಿದರು.
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಜೆಪಿಎಸ್ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾ ಕೊಠಡಿ ಬುಧವಾರ ಶಾಸಕ ಬಿ.ಕೆ ಸಂಗಮೇಶ್ವರ ಉದ್ಘಾಟಿಸಿದರು.
    ಶಾಲೆಯ ಕೊಠಡಿ ಶಿಥಿಲಗೊಂಡಿದ್ದ ಹಿನ್ನೆಲೆಯಲ್ಲಿ ನೆಲಸಮಗೊಳಿಸಿ ಪಂಚಾಯಿತಿಯ ರಾಜ್ ಇಲಾಖೆಯಿಂದ ಬಿಡುಗಡೆಯಾದ ವಿವೇಕ ಶಾಲೆ ಅನುದಾನ ಸುಮಾರು 13.90 ಲಕ್ಷ ರು. ವೆಚ್ಚದಲ್ಲಿ ನೂತನ ಕೊಠಡಿ ನಿರ್ಮಿಸಲಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು.
    ನಗರಸಭೆ ಸದಸ್ಯೆ ವಿಜಯ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಶಿಕ್ಷಣ ಸಂಯೋಜಕ ರವಿಕುಮಾರ್, ಸಿ.ಚನ್ನಪ್ಪ, ಮುಖಂಡರಾದ ಎಸ್. ಕುಮಾರ್,   ಜಯರಾಮ್, ಮಣಿ, ನಾಗರಾಜ್ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಭದ್ರಾವತಿ ನಗರಸಭೆ : 6199.47 ಲಕ್ಷ ಬಜೆಟ್ ಮಂಡನೆ ನಿರೀಕ್ಷೆ

   ಭದ್ರಾವತಿ: ನಗರಸಭೆ ಸ್ವಂತ ಆದಾಯಗಳಾದ ಸ್ವಯಂ ಘೋಷಿತ ಆಸ್ತಿ ತೆರಿಗೆ, ನೀರಿನ ತೆರಿಗೆ ಮತ್ತು ಇತರೆ
ಆದಾಯ ಹಾಗೂ ಸರ್ಕಾರದ ಅನುದಾನಗಳು ಸೇರಿ ಒಟ್ಟು 6199.47 ಲಕ್ಷಗಳು ನಿರೀಕ್ಷೆ ಇಟ್ಟುಕೊಂಡು  ನಗರದ ಅಭಿವೃದ್ಧಿ ಹಾಗೂ ನಿರ್ವಹಣೆಗಾಗಿ 2024-25 ನೇ ಸಾಲಿನ ಬಜೆಟ್ ತಯಾರಿಸಬಹುದಾಗಿದೆ. ಸೂಕ್ತ ಸಲಹೆ ಸಹಕಾರ ನೀಡುವಂತೆ ನೂತನ ನಗರಸಭೆ ಅಧ್ಯಕ್ಷೆ ಲತಾ ಚಂದ್ರಶೇಖರ್ ಕೋರಿದರು.
    ಅವರು ಬುಧವಾರ ನಡೆದ ಆಯ-ವ್ಯಯ(ಬಜೆಟ್) ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದರು.
 ಇದಕ್ಕೂ ಮೊದಲು ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಮಾಹಿತಿ ನೀಡಿದರು.
     ನಿರೀಕ್ಷಿತ ಆದಾಯದ ವಿವರಗಳು: 
  ಆಸ್ತಿ ತೆರಿಗೆ 725 ಲಕ್ಷ ರು., ನೀರಿನ ಶುಲ್ಕ 350 ಲಕ್ಷ ರು., ಬಾಡಿಗೆಗಳು 22.27 ಲಕ್ಷ ರು., ಉದ್ದಿಮೆ ಪರವಾನಿಗೆ 38.10 ಲಕ್ಷ ರು., ಅಭಿವೃದ್ಧಿ ಶುಲ್ಕ 75 ಲಕ್ಷ ರು., ವಾಹನ ಬಾಡಿಗೆ 15 ಲಕ್ಷ ರು. ಮತ್ತು ಇತರೆ (ಬ್ಯಾಂಕ್ ಬಡ್ಡಿ, ಸುಂಕ, ಸ್ಟಾಂಪ್ ಡ್ಯೂಟಿ ವಸೂಲಾತಿ ಆದಾಯಗಳು) 120.10 ಲಕ್ಷ ರು. ಸೇರಿದಂತೆ ಒಟ್ಟು ಸ್ವಂತ ಆದಾಯ 1345.47 ಲಕ್ಷ ರು. ಮತ್ತು ರಾಜ್ಯ ಸರ್ಕಾರದ ಅನುದಾನಗಳಾದ ಎಸ್.ಎಫ್.ಸಿ ಮುಕ್ತ ನಿಧಿ ಅನುದಾನ, ಎಸ್.ಎಫ್.ಸಿ ವೇತನ ಅನುದಾನ, ಎಸ್.ಎಫ್.ಸಿ ವಿದ್ಯುತ್ ಅನುದಾನ, ಎಸ್.ಎಫ್.ಸಿ ಕುಡಿಯುವ ನೀರು ಅನುದಾನ, ಎಸ್.ಎಫ್.ಸಿ ವಿಶೇಷ ಅನುದಾನ ಹಾಗು ಕೇಂದ್ರ ಸರ್ಕಾರದ ಅನುದಾನಗಳಾದ I5 ನೇ ಹಣಕಾಸು ಯೋಜನೆ ಅನುದಾನ, ಅಮೃತ್ ನಗರ ಯೋಜನೆ 2.0 ಅನುದಾನ, ನಲ್ಮ್ ಯೋಜನೆ ಅನುದಾನ, ಎಸ್.ಬಿ.ಎಂ. 2.0 ಯೋಜನೆ ಮತ್ತು 15 ನೇ ಹಣಕಾಸು ಅನುದಾನ (MPC Grant) ಸೇರಿದಂತೆ ಒಟ್ಟು ಸರ್ಕಾರದ ಅನುದಾನಗಳು 4854 ಲಕ್ಷ ರು. ಒಟ್ಟಾರೆ ಈ ಬಾರಿ 6199.47 ಲಕ್ಷ ರು. ಆದಾಯ ನಿರೀಕ್ಷಿಸಲಾಗಿದೆ ಎಂದರು.
       ನಿರೀಕ್ಷಿತ ಖರ್ಚುಗಳ ವಿವರಗಳು :
   ರಸ್ತೆಗಳ ಅಭಿವೃದ್ಧಿ ಮತ್ತು ನಿರ್ವಹಣೆ 416 ಲಕ್ಷ ರು., ಚರಂಡಿಗಳ ಅಭಿವೃದ್ಧಿ ಮತ್ತು ನಿರ್ವಹಣೆ 334 ಲಕ್ಷ ರು., ಒಳಚರಂಡಿ ಕಾಮಗಾರಿ 558.92 ಲಕ್ಷ ರು., ಹೊರಗುತ್ತಿಗೆ ನೀರು ಸರಬರಾಜು ಸಿಬ್ಬಂದಿಗಳ ವೇತನ ಪಾವತಿ 215 ಲಕ್ಷ ರು., ನೈರ್ಮಲೀಕರಣ ಹೊರಗುತ್ತಿಗೆ/ ನೇರ ಪಾವತಿ  ಸಿಬ್ಬಂಧಿಗಳ ವೇತನ ಪಾವತಿ 562.18 ಲಕ್ಷ ರು., ಬೀದಿ ದೀಪಗಳ ನಿರ್ವಹಣೆ 120 ಲಕ್ಷ ರು., ನೀರು ಸರಬರಾಜು ನಿರ್ವಹಣೆ & ಅಭಿವೃದ್ಧಿ 374 ಲಕ್ಷ ರು., ಪ.ಜಾತಿ/ಪ.ಪಂಗಡ/ಇತರೆ 24.10% 7.25% 5% ಸಮುದಾಯದ ಅಭಿವೃದ್ಧಿಗಾಗಿ 108 ಲಕ್ಷ ರು., ನಲ್ಮ್ ಯೋಜನೆ ವೆಚ್ಚಗಳು 5 ಲಕ್ಷ ರು., ಸ್ವಚ್ಛ ಭಾರತ್ ಮಿಷನ್ ಕಾಮಗಾರಿಗಳು 50 ಲಕ್ಷ ರು., ವಿದ್ಯುತ್ ಬಿಲ್ ಪಾವತಿ 1287 ಲಕ್ಷ ರು., ಘನತ್ಯಾಜ್ಯ ವಸ್ತುಗಳ ವಿಲೇವಾರಿ ಘಟಕದ ಅಭಿವೃದ್ಧಿ ಕಾಮಗಾರಿ 250 ಲಕ್ಷ ರು., ಉದ್ಯಾನವನ ಮತ್ತು ಕೆರೆ ಅಭಿವೃದ್ಧಿ ಅಮೃತ್ ಯೋಜನೆ ಅಡಿಯಲ್ಲಿ 473.47 ಲಕ್ಷ ರು., ಖಾಯಂ ನೌಕರರ ವೇತನ 1086 ಲಕ್ಷ ರು., ವಾಹನಗಳ ದುರಸ್ಥಿ ಮತ್ತು ನಿರ್ವಹಣೆ ಹಾಗೂ ಇಂಧನ ಬಿಲ್ಲು 177 ಲಕ್ಷ ರು., ದಸರಾ ಆಚರಣೆ ಮತ್ತು ರಾಷ್ಟ್ರೀಯ ಹಬ್ಬಗಳು 40 ಲಕ್ಷ ರು. ಹಾಗು ಕಛೇರಿಯ ಇನ್ನಿತರೆ ವೆಚ್ಚಗಳು 142.90 ಲಕ್ಷ ರು. ಸೇರಿದಂತೆ ಒಟ್ಟು 6199.47 ಲಕ್ಷ ರು. ವೆಚ್ಚ ನಿರೀಕ್ಷಿಸಲಾಗಿದೆ ಎಂದರು.
    ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್ ಉಪಸ್ಥಿತರಿದ್ದರು. 
   ಹಳೇನಗರ ಮನೆ ಮಾಲೀಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಎಪಿಎಂಸಿ ಹಮಾಲಿಗರ ಸಂಘದ ಅಧ್ಯಕ್ಷ ಬಿ.ಎಸ್ ನಾರಾಯಣಪ್ಪ, ಅಂತೋಣಿ ವಿಲ್ಸನ್ ಸೇರಿದಂತೆ ಇನ್ನಿತರರು ಸಲಹೆ ಸೂಚನೆಗಳನ್ನು ನೀಡಿದರು.




Tuesday, January 23, 2024

ಸಂಪನ್ಮೂಲ ವ್ಯಕ್ತಿ ನವೀದ್‌ ಅಹಮದ್‌ ಪರ್ವೀಜ್‌ಗೆ ರಾಜ್ಯಮಟ್ಟದ ಪ್ರಶಸ್ತಿ

ನವೀದ್‌ ಅಹಮದ್‌ ಪರ್ವೀಜ್‌  
    ಭದ್ರಾವತಿ: ನಗರದ ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ಕಛೇರಿಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಕರ್ತವ್ಯ ನಿರ್ವಹಿಸುವ ಜೊತೆಗೆ ಚುನಾವಣಾ ನೋಡಲ್‌ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ನವೀದ್‌ ಅಹಮದ್‌ ಪರ್ವೀಜ್‌ ಅವರಿಗೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ʻಸ್ಟೇಟ್‌ ಲೆವೆಲ್‌ ಮಾಸ್ಟರ್‌ ಟ್ರೈನರ್‌ʼ ಪ್ರಶಸ್ತಿ ಲಭಿಸಿದೆ.
    ಕಳೆದ ಹಲವಾರು ವರ್ಷಗಳಿಂದ ಆಯೋಗದ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳ ಮಹತ್ವ, ಪ್ರಕ್ರಿಯೆಗಳು, ಸಮುದಾಯದ ಜವಾಬ್ದಾರಿಗಳು, ಮತದಾರರ ಪಾಲ್ಗೊಳ್ಳುವಿಕೆ ಹಾಗು ಹಕ್ಕುಗಳು ಸೇರಿದಂತೆ ಹಲವಾರು ವಿಚಾರಗಳ ಕುರಿತು ಅರಿವು ಮೂಡಿಸುವ ನಿರಂತರ ಜಾಗೃತಿ ಕಾರ್ಯದಲ್ಲಿ ನವೀದ್‌  ಅವರು ತೊಡಗಿಸಿಕೊಂಡು ಗಮನ ಸೆಳೆದಿದ್ದಾರೆ. ಇವರ ಸೇವೆಯನ್ನು ಗುರುತಿಸಿ ಚುನಾವಣಾ ಆಯೋಗ ಪ್ರಶಸ್ತಿ ನೀಡಿದೆ.  
    ನವೀದ್‌ ಅವರಿಗೆ ‍ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗು ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಛೇರಿ ಅಭಿನಂದಿಸಿವೆ.

ನೂತನ ನಗರಸಭೆ ಅಧ್ಯಕ್ಷರಿಗೆ ಕೆಪಿಸಿಸಿ ಕಾರ್ಮಿಕ ವಿಭಾಗದಿಂದ ಅಭಿನಂದನೆ

ಭದ್ರಾವತಿ ನಗರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಾರ್ಡ್ ನಂ.೩೪ರ ಸದಸ್ಯೆ ಲತಾ ಚಂದ್ರಶೇಖರ್ ಅವರನ್ನು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಎಸ್. ಅರುಣ್ ಕುಮಾರ್ ನೇತೃತ್ವದಲ್ಲಿ ಅಭಿನಂದಿಸಲಾಯಿತು.
    ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ವಾರ್ಡ್ ನಂ.೩೪ರ ಸದಸ್ಯೆ ಲತಾ ಚಂದ್ರಶೇಖರ್ ಅವರನ್ನು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಎಸ್. ಅರುಣ್ ಕುಮಾರ್ ನೇತೃತ್ವದಲ್ಲಿ ಅಭಿನಂದಿಸಲಾಯಿತು.
    ಮೊದಲ ಬಾರಿಗೆ ಕಾಂಗ್ರೆಸ್ ಪಕ್ಷದಿಂದ ನಗರಸಭೆಗೆ ಸ್ಪರ್ಧಿಸಿ ಆಯ್ಕೆಯಾಗುವ ಮೂಲಕ ಅಧ್ಯಕ್ಷರಾಗಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಪಕ್ಷದಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಲಾಯಿತು.
    ಪ್ರಮುಖರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಹೋದರ ಬಿ.ಕೆ ಶಿವಕುಮಾರ್, ಎಚ್. ರವಿಕುಮಾರ್ ಮತ್ತು ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಾಮಮಂದಿರ ಲೋಕಾರ್ಪಣೆ : ಗಮನ ಸೆಳೆದ ಶ್ರೀರಾಮ, ಹನುಮಂತ ವೇಷಧಾರಿಗಳು

ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಸೋಮವಾರ ಭದ್ರಾವತಿ ಹಳೇನಗರ ಬಸವೇಶ್ವರ ವೃತ್ತದಲ್ಲಿ ಕಲಾವಿದ ರಮೇಶ್‌ರವರು ಶ್ರೀರಾಮ ಹಾಗು ಆಟೋ ಪ್ರದೀಪ್‌ರವರು ಹನುಮಂತ ವೇಷ ಧರಿಸಿ ಎಲ್ಲರ ಗಮನ ಸೆಳೆದರು.
    ಭದ್ರಾವತಿ : ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಸೋಮವಾರ ಹಳೇನಗರ ಬಸವೇಶ್ವರ ವೃತ್ತದಲ್ಲಿ ವರ್ತಕರ ಸಂಘದಿಂದ ಧಾರ್ಮಿಕ ಆಚರಣೆಗಳು ಜರುಗಿದವು.
  ಪ್ರಭು ಶ್ರೀರಾಮ ಚಂದ್ರನಿಗೆ ವರ್ತಕರು, ಸ್ಥಳೀಯರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಂಭ್ರಮಿಸಿದರು. ಕಲಾವಿದ ರಮೇಶ್‌ರವರು ಶ್ರೀರಾಮ ಹಾಗು ಆಟೋ ಪ್ರದೀಪ್‌ರವರು ಹನುಮಂತ ವೇಷ ಧರಿಸಿ ಎಲ್ಲರ ಗಮನ ಸೆಳೆದರು.

ಎನ್. ಗಣೇಶ್‌ರಾವ್ ಸಿಂಧ್ಯಾ ನಿಧನಕ್ಕೆ ಸಂತಾಪ

ಎನ್. ಗಣೇಶ್‌ರಾವ್ ಸಿಂಧ್ಯಾ 
ಭದ್ರಾವತಿ : ನಗರದ ಹಿರಿಯ ಪತ್ರಕರ್ತ ಎನ್. ಗಣೇಶ್‌ರಾವ್ ಸಿಂಧ್ಯಾರವರ ನಿಧನಕ್ಕೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಸಂತಾಪ ಸೂಚಿಸಿ ಪತ್ರಿಕಾ ಕ್ಷೇತ್ರಕ್ಕೆ ಅವರ ಸೇವೆಯನ್ನು ಸ್ಮರಿಸಿದೆ.
    ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ ಅಧ್ಠಕ್ಷತೆಯಲ್ಲಿ ಶ್ರದ್ಧಾಂಜಲಿ ಸಭೆ ನಡೆಸಿ ಸಂತಾಪ ಸೂಚಿಸಲಾಯಿತು. ಸಿಂಧ್ಯಾರವರು ಪತ್ರಿಕಾ ಕ್ಷೇತ್ರದಲ್ಲಿ ಸುದೀಘ ಕಾಲ ತೊಡಗಿಸಿಕೊಂಡಿದ್ದು, ಅಲ್ಲದೆ ಸಂಘದ ಹಿರಿಯ ಸದಸ್ಯರಾಗಿ ಮಾರ್ಗದರ್ಶಕರಾಗಿದ್ದರು. ಇವರ ನಿಧನದಿಂದ ಪತ್ರಿಕಾ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಉಂಟಾಗಿದ್ದು, ಇವರ ನಿಧನದಿಂದ ಉಂಟಾಗಿರುವ ದುಃಖ ಭರಿಸುವ ಶಕ್ತಿ ದೇವರು ಕುಟುಂಬ ವರ್ಗಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು.  
       ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ, ಸಂಘದ ಹಿರಿಯ ಪತ್ರಕರ್ತರಾದ ಎನ್ ಬಾಬು, ಎಚ್.ಕೆ ಶಿವಶಂಕರ್, ಕೆ.ಎನ್ ರವೀಂದ್ರನಾಥ್(ಬ್ರದರ್), ಕೆ. ಎಸ್ ಸುಧೀಂದ್ರ ಮತ್ತು ಪ್ರಧಾನ ಕಾರ್ಯದರ್ಶಿ ಬಸವರಾಜ್ ಸೇರಿದಂತೆ ಸಂಘದ ಸದಸ್ಯರು ಭಾಗವಹಿಸಿದ್ದರು.  

Monday, January 22, 2024

ರಾಮಮಂದಿರ ಲೋಕಾರ್ಪಣೆ, ಪ್ರಾಣ ಪ್ರತಿಷ್ಠಾಪನೆ : ಎಲ್ಲೆಡೆ ಹಬ್ಬದ ವಾತಾವರಣ

ಸುಮಾರು ೧೫ ಸಾವಿರ ಲಾಡು ವಿತರಣೆ, ಕರ ಸೇವಕರಿಗೆ ಸನ್ಮಾನ

ವಿಶ್ವ ಹಿಂದೂ ಪರಿಷದ್ ವತಿಯಿಂದ ಭದ್ರಾವತಿ ಸಿದ್ಧಾರೂಢನಗರದ ಧಮಶ್ರೀ ಸಭಾಭವನದಲ್ಲಿ ವಿರಕ್ತಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹೋಮ-ಹವನ, ಭಜನೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಅಲ್ಲದೆ ಕರಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಭಕ್ತರಿಗೆ ಐತಿಹಾಸಿಕ ಕ್ಷಣ ವೀಕ್ಷಣೆಗಾಗಿ ಬೃಹತ್ ಎಲ್‌ಸಿಡಿ  ವ್ಯವಸ್ಥೆ ಕಲ್ಪಿಲಾಗಿತ್ತು.
    ಭದ್ರಾವತಿ : ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ಸೋಮವಾರ ಎಲ್ಲೆಡೆ ಹಬ್ಬದ ವಾತಾವರಣ ಕಂಡು ಬಂದಿತು.
    ಐತಿಹಾಸಿಕ ಶುಭ ಸಂದರ್ಭದಲ್ಲಿ ದೇವಸ್ಥಾನಗಳ ಬಳಿ ಅದರಲ್ಲೂ ವಿಶೇಷವಾಗಿ ಶ್ರೀ ರಾಮ ದೇವಸ್ಥಾನ ಹಾಗು ಮಂದಿರಗಳ ಬಳಿ ಆಡಳಿ ಮಂಡಳಿಯವರು, ಹಿಂದೂಪರ ಸಂಘಟನೆಗಳು, ಸೇವಾಕರ್ತರು, ದಾನಿಗಳು, ಭಕ್ತರು ಕೆಲವು ದಿನಗಳ ಹಿಂದೆಯೇ ಬೃಹತ್ ಫ್ಲೆಕ್ಸ್‌ಗಳನ್ನು ಅಳವಡಿಸುವ ಮೂಲಕ ಐತಿಹಾಸಿಕ ದಿನ ಕಾತುರದಿಂದ ಎದುರು ನೋಡುತ್ತಿದ್ದರು.
    ಆಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನೆರವೇರುತ್ತಿದ್ದಂತೆ ಎಲ್ಲೆಡೆ ಹಬ್ಬದ ವಾತಾವರಣ ಕಂಡು ಬಂದಿತು. ಅಭಿಷೇಕ, ವಿಶೇಷ ಪೂಜೆ, ಹೋಮ-ಹವನ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಅಲ್ಲದೆ ವಿವಿಧ ಸಂಘಟನೆಗಳು, ದಾನಿಗಳು, ಭಕ್ತರು, ಸೇವಾಕರ್ತರಿಂದ ಪಾನಕ, ಮಜ್ಜಿಗೆ, ಕೋಸಂಬರಿ, ಲಾಡು ಹಾಗು ಅನ್ನಸಂತರ್ಪಣೆ ನೆರವೇರಿತು.
    ಐತಿಹಾಸಿಕ ಕ್ಷಣ ವೀಕ್ಷಣೆಗೆ ಬೃಹತ್ ಎಲ್‌ಸಿಡಿ ವ್ಯವಸ್ಥೆ-ಕರ ಸೇವಕರಿಗೆ ಸನ್ಮಾನ:
    ವಿಶ್ವ ಹಿಂದೂ ಪರಿಷದ್ ವತಿಯಿಂದ ಸಿದ್ಧಾರೂಢನಗರದ ಧಮಶ್ರೀ ಸಭಾಭವನದಲ್ಲಿ ವಿರಕ್ತಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹೋಮ-ಹವನ, ಭಜನೆ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಅಲ್ಲದೆ ಕರಸೇವಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಭಕ್ತರಿಗೆ ಐತಿಹಾಸಿಕ ಕ್ಷಣ ವೀಕ್ಷಣೆಗಾಗಿ ಬೃಹತ್ ಎಲ್‌ಸಿಡಿ  ವ್ಯವಸ್ಥೆ ಕಲ್ಪಿಲಾಗಿತ್ತು.
    ಸುಮಾರು ೧೫ ಸಾವಿರ ಲಾಡು ವಿತರಣೆ :
    ಪ್ರಮುಖ ಹಿಂದೂಪರ ಸಂಘಟನೆಗಳಲ್ಲಿ ಒಂದಾಗಿರುವ ಕೇಸರಿಪಡೆ ವತಿಯಿಂದ ಹಳೇನಗರದ ಕಂಚಿನಬಾಗಿಲು ವೃತ್ತದ ಬಳಿ ಪ್ರಭು ಶ್ರೀರಾಮ ಚಂದ್ರನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಕೇಸರಿಪಡೆ ಪ್ರಮುಖರು, ಕಾರ್ಯಕತರು, ಸ್ಥಳೀಯ ನಿವಾಸಿಗಳು, ಭಕ್ತರು ಸಿಡಿಮದ್ದು ಸಿಡಿಸಿ, ಕಲಾತಂಡಗಳೊಂದಿಗೆ ಸಂಭ್ರಮಿಸಿ ಸುಮಾರು ೧೫ ಸಾವಿರ ಲಾಡು ವಿತರಣೆ ಮೂಲಕ ಗಮನ ಸೆಳೆದರು.


ಭದ್ರಾವತಿಯಲ್ಲಿ ಕೇಸರಿಪಡೆ ವತಿಯಿಂದ ಹಳೇನಗರದ ಕಂಚಿನಬಾಗಿಲು ವೃತ್ತದ ಬಳಿ ಪ್ರಭು ಶ್ರೀರಾಮ ಚಂದ್ರನಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಿಡಿಮದ್ದು ಸಿಡಿಸಿ, ಕಲಾತಂಡಗಳೊಂದಿಗೆ ಸಂಭ್ರಮಿಸಿ ಸುಮಾರು ೧೫ ಸಾವಿರ ಲಾಡು ವಿತರಿಸಲಾಯಿತು.

ಭದ್ರಾವತಿ ನಗರಸಭೆ ಅಧ್ಯಕ್ಷರಾಗಿ ಲತಾ ಚಂದ್ರಶೇಖರ್

ಭದ್ರಾವತಿ ನಗರಸಭೆ ಅಧ್ಯಕ್ಷರಾಗಿ ವಾರ್ಡ್ ನಂ. ೩೪ರ ಸದಸ್ಯೆ ಲತಾ ಚಂದ್ರಶೇಖರ್ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಅಭಿನಂದಿಸಿದರು.
    ಭದ್ರಾವತಿ: ನಗರಸಭೆ ಅಧ್ಯಕ್ಷರಾಗಿ ವಾರ್ಡ್ ನಂ. ೩೪ರ ಸದಸ್ಯೆ ಲತಾ ಚಂದ್ರಶೇಖರ್ ಸೋಮವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
    ನಗರಸಭೆ ಆಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಮೀಸಲಾತಿ ಮೊದಲ ೩೦ ತಿಂಗಳ ಅವಧಿ ಒಪ್ಪಂದದಂತೆ ಹಂಚಿಕೆ ಮಾಡಿಕೊಂಡಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್ ನಿರ್ದೇಶನದಂತೆ ಅರ್ಹ ಸದಸ್ಯರಿಗೆ ಬಿಟ್ಟುಕೊಡಲಾಗುತ್ತಿದೆ. ಸಾಮಾನ್ಯ ಮಹಿಳಾ ಮೀಸಲು ಹೊಂದಿರುವ ಅಧ್ಯಕ್ಷ ಸ್ಥಾನ ಅಧಿಕಾರ ಈಗಾಗಲೇ ಗೀತಾ ರಾಜ್‌ಕುಮಾರ್, ಅನುಸುಧಾ ಮೋಹನ್ ಪಳನಿ ಮತ್ತು ಶೃತಿ ಸಿ. ವಸಂತಕುಮಾರ್ ಕೆ.ಸಿ ಒಟ್ಟು ೩ ಮಂದಿ ಸದಸ್ಯರು ಅನುಭವಿಸಿದ್ದು, ಉಳಿದ ಅವಧಿಗೆ ವಾರ್ಡ್ ನಂ.೩೪ರ ಸದಸ್ಯೆ ಲತಾ ಚಂದ್ರಶೇಖರ್ ಅವರಿಗೆ ಬಿಟ್ಟು ಕೊಡಲಾಗಿದೆ.
    ಈ ಹಿಂದೆಯೇ ಅಧಿಕಾರ ಅನುಭವಿಸಬೇಕಾಗಿದ್ದ ಲತಾ ಚಂದ್ರಶೇಖರ್ ಅವರಿಗೆ ಮೀಸಲಾತಿ ಕೊನೆ ಅವಧಿ ಅಧಿಕಾರ ಬಿಟ್ಟುಕೊಡುವುದಾಗಿ ತೀರ್ಮಾನಿಸಲಾಗಿತ್ತು. ಅದರಂತೆ ಶೃತಿ ಸಿ. ವಸಂತಕುಮಾರ್ ಕೆ.ಸಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಚುನಾವಣೆ ನಡೆಯಿತು.
  ಪ್ರಸ್ತುತ ನಗರಸಭೆಯಲ್ಲಿ ೧೮ ಕಾಂಗ್ರೆಸ್, ೧೨ ಜೆಡಿಎಸ್, ೪ ಬಿಜೆಪಿ ಹಾಗು ೧ ಪಕ್ಷೇತರ ಸದಸ್ಯರಿದ್ದಾರೆ. ಲತಾ ಚಂದ್ರಶೇಖರ್‌ರವರು ಮೂಲತಃ ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಮೊದಲ ಬಾರಿಗೆ ವಾರ್ಡ್ ನಂ.೩೪ರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.
    ನಗರದ ಅಭಿವೃದ್ಧಿಗೆ ಶ್ರಮಿಸಿ : ಶಾಸಕ ಬಿ.ಕೆ ಸಂಗಮೇಶ್ವರ್
    ನೂತನ ಅಧ್ಯಕ್ಷೆ ಲತಾ ಚಂದ್ರಶೇಖರ್ ಅವರನ್ನು ಅಭಿನಂದಿಸಿದ ಶಾಸಕ ಬಿ.ಕೆ ಸಂಗಮೇಶ್ವರ್, ೩೦ ತಿಂಗಳ ಅಧಿಕಾರ ಹಂಚಿಕೆಯಲ್ಲಿ ಈಗಾಗಲೇ ೩ ಮಂದಿ ಮಹಿಳಾ ಸದಸ್ಯರು ಅಧ್ಯಕ್ಷರಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಹೆಚ್ಚಿನ ಸಹಕಾರ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ನೂತನ ಅಧ್ಯಕ್ಷರು ಸಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಹಕಾರ ನೀಡಬೇಕೆಂದರು.
    ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಹಿರಿಯ ಸದಸ್ಯರಾದ ವಿ. ಕದಿರೇಶ್, ಬಿ.ಟಿ ನಾಗರಾಜ್, ಟಿಪ್ಪು ಸುಲ್ತಾನ್ ಸೇರಿದಂತೆ ಇನ್ನಿತರರು ಅಭಿನಂದಿಸಿ ಮಾತನಾಡಿದರು.  
    ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಹಾಗು ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ನೂತನ ಅಧ್ಯಕ್ಷೆ ಲತಾ ಚಂದ್ರಶೇಖರ್ ಅವರನ್ನು ಅಭಿನಂದಿಸಿದರು.

Sunday, January 21, 2024

ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಆಯೋಧ್ಯೆ ಧಾರ್ಮಿಕ ಆಚರಣೆಗಳಲ್ಲಿ ಬಿಳಿಕಿ ಶ್ರೀ

ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಎದುರಾಗುತ್ತಿದ್ದು, ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ಭದ್ರಾವತಿ ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಂಡಿದ್ದಾರೆ.
    ಭದ್ರಾವತಿ : ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಎದುರಾಗುತ್ತಿದ್ದು, ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ತಾಲೂಕಿನ ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಂಡಿದ್ದಾರೆ.
    ಶ್ರೀ ಮಠದಲ್ಲಿ ನಿರಂತರವಾಗಿ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳುವ ಮೂಲಕ ಧರ್ಮ ಜಾಗೃತಿ ಮೂಡಿಸುತ್ತಿರುವ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ತಾವರೆಕೆರೆ ಶಿಲಾಮಠದ ಡಾ. ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಮತ್ತು ನಾಗಲಾಪುರ ಮಠ ಹಾಗು ತಂಡೆಕೆರೆ ಮಠದ ಸ್ವಾಮೀಜಿಯವರೊಂದಿಗೆ ಆಯೋಧ್ಯೆಯಲ್ಲಿ ನಡೆಯುವ ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಂಡಿದ್ದಾರೆ.

ಹಿರಿಯ ಪತ್ರಕರ್ತ ಎನ್. ಗಣೇಶ್ ರಾವ್ ಸಿಂಧ್ಯಾ ನಿಧನ

ಎನ್. ಗಣೇಶ್ ರಾವ್ ಸಿಂಧ್ಯಾ
     ಭದ್ರಾವತಿ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಹಿರಿಯ ಪತ್ರಕರ್ತ ಹಾಗೂ  48 ವರ್ಷಗಳಿಂದ ನಿರಂತರವಾಗಿ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಎನ್. ಗಣೇಶ್ ರಾವ್ ಸಿಂಧ್ಯಾ(75) ರವರು ಭಾನುವಾರ ಬೆಳಿಗ್ಗೆ ನಿಧನರಾದರು.  ಪತ್ನಿ ಯಲ್ಲೂಬಾಯಿ, ಪತ್ರಕರ್ತ ಜಿ. ಸುಭಾಷ್ ರಾವ್ ಸಿಂಧ್ಯಾ, ತೇಜಸ್ ಪ್ರಿಂಟರ್ಸ್ ಮಾಲೀಕ ನವೀನ್ ಮತ್ತು ಪ್ರವೀಣ್ ಸೇರಿದಂತೆ ಮೂವರು ಪುತ್ರರು, ಓರ್ವ ಪುತ್ರಿ ಹಾಗೂ ಮೊಮ್ಮಕ್ಕಳಿದ್ದಾರೆ. 
       ಮೃತರ ಅಂತ್ಯಕ್ರಿಯೆ ನಗರದ ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ಭಾನುವಾರ ಸಂಜೆ ನೆರವೇರಿತು. 
        ಗಣೇಶ್ ರಾವ್ ಸಿಂಧ್ಯಾ ರವರು ಸ್ಥಳೀಯ ಮಟ್ಟದಲ್ಲಿ ಕನ್ನಡ ದಿನಪತ್ರಿಕೆ ಆರಂಭಿಸಿ ಅದರ ಸಂಪಾದಕರಾಗುವ ಜೊತೆಗೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ  ಪತ್ರಿಕಾ ಭವನ ಟ್ರಸ್ಟ್ ನಿರ್ದೇಶಕರಾಗಿದ್ದರು. 
    ಇದರೊಂದಿಗೆ ನಗರದ ರೈಲ್ವೆ ನಿಲ್ದಾಣ ರಸ್ತೆಯ ನಾಗರಾಜ್ ಪ್ರಿಂಟರ್ಸ್ ಮಾಲೀಕರಾಗಿ ಮುದ್ರಣ ಮಾಲೀಕರ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 
     ಸಂತಾಪ: ಶಾಸಕ ಬಿ.ಕೆ ಸಂಗಮೇಶ್ವರ್, ಜೆಡಿಎಸ್ ಮುಖಂಡರಾದ ಶಾರದಾ ಅಪ್ಪಾಜಿ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ,  ಛತ್ರಪತಿ ಶಿವಾಜಿ  ಕ್ಷತ್ರಿಯ ಮರಾಠ ಸೇವಾ ಸಂಘ, ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯಾ ವಿಶ್ವವಿದ್ಯಾಲಯ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಮುಖಂಡರು, ಗಣ್ಯರು ಸಂತಾಪ ಸೂಚಿಸಿದ್ದಾರೆ.



Saturday, January 20, 2024

ರಾಮಮಂದಿರ ಲೋಕಾರ್ಪಣೆ- ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ

ನೋಟಿನ ಮೂಲಕ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ  ಸಂಗ್ರಹಗಾರರಾದ ಗಣೇಶ್ ಸ್ವಾಗತ

ಅಯೋಧ್ಯೆ ಶ್ರೀ ರಾಮಮಂದಿರ ಲೋಕಾರ್ಪಣೆ- ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಎದುರಾಗಿದ್ದು, ನೋಟಿನ ಮೂಲಕ ಭದ್ರಾವತಿಯ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ  ಸಂಗ್ರಹಗಾರರಾದ ಗಣೇಶ್ ಸ್ವಾಗತ ಕೋರಿದ್ದಾರೆ.
    ಭದ್ರಾವತಿ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಎದುರಾಗುತ್ತಿದ್ದು, ಈ ನಡುವೆ  ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ  ಸಂಗ್ರಹಗಾರರಾದ ಗಣೇಶ್‌ರವರು ಈ ಐತಿಹಾಸಿಕ ಕ್ಷಣಗಣನೆಯನ್ನು ನೋಟಿನ ಮೂಲಕ ಸ್ವಾಗತಿಸಿದ್ದಾರೆ.
    ಜ.೨೨, ೨೦೨೪ರ ಐತಿಹಾಸಿಕ ಕ್ಷಣಗಣನೆಗಾಗಿ ೧೦ ರು. ಮುಖಬೆಲೆ ನೋಟು ಸಮರ್ಪಿಸಿದ್ದಾರೆ. ಅಲ್ಲದೆ ಜೂ.೧, ೨೦೨೨ರಂದು ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ಹಾಗು ನ.೯, ೨೦೧೯ರ ಸುಪ್ರೀಂಕೋರ್ಟ್ ತೀರ್ಪು, ಫೆ.೫, ೨೦೨೦ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನಾಮಕರಣ, ಫೆ.೧೯, ಟ್ರಸ್ಟ್ ಮೊದಲ ಸಭೆ ಹಾಗು ಜು.೧೮, ೨೦೨೦ ಟ್ರಸ್ಟ್ ಎರಡನೇ ಸಭೆ ದಿನಾಂಕಗಳ ರು. ೧೦ ಮುಖಬೆಲೆಯ ನೋಟುಗಳನ್ನು ಶುಭ ಸಂದರ್ಭದಲ್ಲಿ ಸಮರ್ಪಿಸುವ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ.
    ರಾಜಕಾರಣಿಗಳು, ಮಠಾಧೀಶರು, ಚಲನಚಿತ್ರ ನಟರು, ಸಾಹಿತಿಗಳು, ಕವಿ, ಕ್ರೀಡಾಪಟು ಸೇರಿದಂತೆ ಗಣ್ಯ ವ್ಯಕ್ತಿಗಳಿಗೆ ಸಭೆ ಸಮಾರಂಭಗಳಲ್ಲಿ ಅವರ ಜನ್ಮದಿನಾಂಕ ಹೊಂದಿರುವ ನೋಟು ಉಡುಗೊರೆಯಾಗಿ ನೀಡುವ ಮೂಲಕ ಶುಭ ಹಾರೈಸುವ ಹಾಗು ನಿಧನರಾದ ಸಂದರ್ಭದಲ್ಲಿ ಮರಣ ದಿನಾಂಕ ಹೊಂದಿರುವ ನೋಟಿನ ಮೂಲಕ ಸಂತಾಪ ಸೂಚಿಸುವ ಮತ್ತು ಐತಿಹಾಸಿಕ ದಿನಗಳನ್ನು ನೋಟಿನ ಮೂಲಕ ಸ್ಮರಿಸುವ ಹವ್ಯಾಸ ಗಣೇಶ್ ಅವರು ಬೆಳೆಸಿಕೊಂಡು ಬಂದಿದ್ದಾರೆ.

ಚಿನ್ನ-ಬೆಳ್ಳಿಯಲ್ಲಿ ಅರಳಿದ ಭವ್ಯ ರಾಮಮಂದಿರ : ಕಲಾವಿದ ಸಚಿನ್ ಎಂ. ವರ್ಣೇಕರ್

ಭದ್ರಾವತಿಯಲ್ಲಿ ಸೂಕ್ಷ್ಮ ಕಲಾಕೃತಿ ಮಾದರಿಗಳ ತಯಾರಿಕೆ ಕಲಾವಿದ ಸಚಿನ್ ಎಂ. ವರ್ಣೇಕರ್ ಅವರ ಕೈಚಳಕದಲ್ಲಿ ತಯಾರಾಗಿರುವ ಆಕರ್ಷಕವಾದ ಅಯೋಧ್ಯೆ ಭವ್ಯ ರಾಮಮಂದಿರ ಕಲಾಕೃತಿ ಮಾದರಿ
    ಭದ್ರಾವತಿ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ದೇಶಾದ್ಯಂತ ವಿಭಿನ್ನ ಧಾರ್ಮಿಕ ಆಚರಣೆಗಳು ಜರುಗುತ್ತಿದ್ದು, ಈ ನಡುವೆ ಕಲಾ ಸಾಧಕರು ಪ್ರಭು ಶ್ರೀರಾಮ ಚಂದ್ರನಿಗಾಗಿ ತಮ್ಮಲ್ಲಿನ ಪ್ರತಿಭೆಗಳನ್ನು ಅನಾವರಣಗೊಳಿಸಿ ಸಮರ್ಪಿಸುತ್ತಿದ್ದಾರೆ. ಈ ಸಾಲಿನಲ್ಲಿ ನಗರದ ಸಚಿನ್ ಎಂ. ವರ್ಣೇಕರ್ ಸಹ ಒಬ್ಬರಾಗಿದ್ದಾರೆ.


    ಸಚಿನ್ ಮೂಲತಃ ಸೂಕ್ಷ್ಮ ಕಲಾಕೃತಿ (ಮೈಕ್ರೋ ಆರ್ಟ್ಸ್) ಮಾದರಿ ತಯಾರಿಕೆ ಕಲಾವಿದರಾಗಿದ್ದು, ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕರಾಗಿದ್ದಾರೆ. ಆಯೋಧ್ಯೆ ಭವ್ಯ ರಾಮಮಂದಿರ ಮಾದರಿ ತಯಾರಿಕೆಯಲ್ಲಿ ಇವರ ಪ್ರತಿಭೆ ಅನಾವರಣಗೊಂಡಿದೆ.  ೧೪೦ ಗ್ರಾಂ ತೂಕ, ೬ ಇಂಚು ಉದ್ದ, ೪ ಇಂಚು ಅಗಲ ಹಾಗು ೫.೫ ಇಂಚು ಎತ್ತರದ  ಚಿನ್ನ ಮತ್ತು ಬೆಳ್ಳಿ ಬಳಸಿ ಆಕರ್ಷಕವಾದ ಎರಡು ಭವ್ಯ ರಾಮಮಂದಿರ ಮಾದರಿ ತಯಾರಿಸಲಾಗಿದೆ.
    ಸಚಿನ್ ಚಿನ್ನ ಮತ್ತು ಬೆಳ್ಳಿ ಬಳಸಿ ಹಲವಾರು ಸೂಕ್ಷ್ಮ ಕಲಾಕೃತಿಗಳನ್ನು ರಚಿಸಿದ್ದು, ಅಲ್ಲದೆ ಇವರ ಕಲಾಕೃತಿಗಳು ಶ್ರೀ ಕ್ಷೇತ್ರ ಧರ್ಮಸ್ಥಳ ವಸ್ತು ಸಂಗ್ರಹಾಲಯದಲ್ಲಿ ಸ್ಥಾನ ಪಡೆದುಕೊಂಡಿರುವುದು ವಿಶೇಷವಾಗಿದೆ.

ವಿಇಎಸ್ ಆವರಣದಲ್ಲಿ ಜ.೨೯ರಂದು ಜಿಲ್ಲಾ ಉಸ್ತುವಾರಿ ಸಚಿವರಿಂದ ನೂತನ ಕಟ್ಟಡದ ಉದ್ಘಾಟನೆ

ವಿದ್ಯಾಸಂಸ್ಥೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ

ಭದ್ರಾವತಿಯಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಕಛೇರಿಯಲ್ಲಿ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ ಮಾತನಾಡಿದರು.  
    ಭದ್ರಾವತಿ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಿತದ ನಗರದ ಹೊಸಸೇತುವೆ ರಸ್ತೆ, ಸಿದ್ದಾರೂಢ ನಗರದ ವಿಶ್ವೇಶ್ವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡಗಳ ಉದ್ಘಾಟನೆ, ಕ್ರೀಡಾ  ಹಾಗು ಸಾಂಸ್ಕೃತಿಕ ದಿನಾಚರಣೆ ಜ.೨೯ರಂದು ನಡೆಯಲಿದೆ ಎಂದು ವಿದ್ಯಾಸಂಸ್ಥೆ  ಹಾಗು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ಹೇಳಿದರು.
    ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿದ್ಯಾಸಂಸ್ಥೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಟ್ಟಡದ ಉದ್ಘಾಟನೆ ಜ.೨೯ರಂದು ಸಂಜೆ ೫.೩೦ಕ್ಕೆ ನಡೆಯಲಿದೆ. ತಾಲೂಕಿನ ಸರ್ಕಾರಿ ನೌಕರರಿಗೆ ಕಾರ್ಯಾಗಾರ ಸೇರಿದಂತೆ ಇನ್ನಿತರ ಚಟುವಟಿಕೆಗಳನ್ನು ನಡೆಸಲು ಸುಸಜ್ಜಿತವಾದ ಯಾವುದೇ ಸಭಾಂಗಣದ ವ್ಯವಸ್ಥೆ ಇರುವುದಿಲ್ಲ. ಈ ಹಿನ್ನಲೆಯಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಬಳಸಿ ಸುಮಾರು ೧.೩೦ ಕೋ. ರು. ವೆಚ್ಚದಲ್ಲಿ ಸುಸಜ್ಜಿತವಾದ ಸಭಾಂಗಣ ನೂತನ ಕಟ್ಟಡದಲ್ಲಿ ನಿರ್ಮಿಸಲಾಗಿದೆ. ಸಭಾಂಗಣ ೨೫೦ ರಿಂದ ೩೦೦ ಆಸನ ವ್ಯವಸ್ಥೆ ಹೊಂದಿದ್ದು, ಹವಾನಿಯಂತ್ರಿತ(ಎ.ಸಿ) ಸೌಲಭ್ಯದೊಂದಿಗೆ ಅತ್ಯಾಧುನಿಕ ಉಪಕರಣಗಳನ್ನು ಸಹ ಒಳಗೊಂಡಿದೆ ಎಂದರು.
    ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಮಧು ಬಂಗಾರಪ್ಪ ನೂತನ ಕಟ್ಟಡ ಉದ್ಘಾಟಿಸಲಿದ್ದು, ಸಂಸದ ಬಿ.ವೈ ರಾಘವೇಂದ್ರ, ವಿಧಾನಪರಿಷತ್ ಸದಸ್ಯ ಎಸ್.ಎಲ್ ಭೋಜೇಗೌಡ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.
    ಶಾಸಕರಿಗೆ ಮನವಿ:
    ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಾಸಕ ಬಿ.ಕೆ ಸಂಗಮೇಶ್ವರ ಅವರಿಗೆ ಶನಿವಾರ ಮನವಿ ಸಲ್ಲಿಸಲಾಗಿದ್ದು, ರಾಜ್ಯ ೭ನೇ ವೇತನ ಆಯೋಗದಿಂದ ಶೀಘ್ರ ವರದಿ ಪಡೆದು ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳನ್ನು ಪೂರ್ಣ ಪ್ರಮಾಣದಲ್ಲಿ ಪರಿಷ್ಕರಿಸಿ ಆದೇಶ ಹೊರಡಿಸುವುದು. ಹಳೇ ಪಿಂಚಣಿ ಯೋಜನೆಯನ್ನು ಮರು ಜಾರಿಗೊಳಿಸುವುದು ಹಾಗು ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು ಒಟ್ಟು ೩ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರಿಗೆ ತಾಲೂಕಿನ ಸರ್ಕಾರಿ ನೌಕರರ ಪರವಾಗಿ ಒತ್ತಾಯಿಸುವಂತೆ ಮನವಿಯಲ್ಲಿ ಕೋರಲಾಗಿದೆ ಎಂದರು.
    ಶಾಲೆಗಳಲ್ಲಿ ಶೌಚಾಲಯ ಸ್ವಚ್ಛತೆಗೆ ಅಗತ್ಯ ಕ್ರಮ ಕೈಗೊಳ್ಳಲು ಮನವಿ :
ಶಾಲಾ ಮಕ್ಕಳಿಂದ ಯಾವುದೇ ಕೆಲಸ ಮಾಡಿಸದಂತೆ ಈಗಾಗಲೇ ಶಿಕ್ಷಣ ಸಚಿವರು ಆದೇಶಿಸಿದ್ದಾರೆ. ಈ ನಡುವೆ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಿ, ಸಿಬ್ಬಂದಿ ನೇಮಕಗೊಳಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಶೌಚಾಲಯ ಸ್ವಚ್ಛತೆಗೆ ಸಂಬಂಧಿಸಿಂತೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಶಿಕ್ಷಣ ಸಚಿವರೊಂದಿಗೆ ಮತ್ತೊಮ್ಮೆ ಚರ್ಚಿಸಲಾಗಿದೆ. ಈ ಹಿನ್ನಲೆಯಲ್ಲಿ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಬೇಕೆಂದರು.  
    ಸಂಘದ ಗೌರವಾಧ್ಯಕ್ಷ ಆರ್. ಜನಾರ್ಧನ, ಉಪಾಧ್ಯಕ್ಷ ರಾಜ್‌ಕುಮಾರ್, ಕಾರ್ಯದರ್ಶಿ ಡಿ.ಎಸ್ ರಾಜಪ್ಪ, ಖಜಾಂಚಿ ಎಸ್.ಕೆ ಮೋಹನ್, ಜಂಟಿ ಕಾರ್ಯದರ್ಶಿ ಆರ್. ಉಮಾ, ಸರ್ಕಾರಿ ನೌಕರರ ಪ್ರಾಥಮಿಕ ಬಳಕೆದಾರರ ಸಂಘದ ಅಧ್ಯಕ್ಷ ಎಸ್.ಟಿ. ಸುಧೀಂದ್ರ ರೆಡ್ಡಿ, ಉಪಾಧ್ಯಕ್ಷ ಎ. ತಿಪ್ಪೇಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿದ್ಯುತ್ ಅವಘಡ ; ನಗದು, ಚಿನ್ನಾಭರಣ ಅಗ್ನಿಗಾಹುತಿ

ಭದ್ರಾವತಿ ಹಳೇನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಬಳಿ ಮನೆಯೊಂದರಲ್ಲಿ ವಿದ್ಯುತ್ ಅವಘಡ ಸಂಭವಿಸಿ ನಗದು, ಚಿನ್ನಾಭರಣ ಸೇರಿದಂತೆ ಇನ್ನಿತರ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
    ಭದ್ರಾವತಿ: ಹಳೇನಗರದ ಶ್ರೀ ಹಳದಮ್ಮ ದೇವಿ ದೇವಸ್ಥಾನದ ಬಳಿ ಮನೆಯೊಂದರಲ್ಲಿ ವಿದ್ಯುತ್ ಅವಘಡ ಸಂಭವಿಸಿ ನಗದು, ಚಿನ್ನಾಭರಣ ಸೇರಿದಂತೆ ಇನ್ನಿತರ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.
    ವಾಸು ಎಂಬುವರಿಗೆ ಸೇರಿದ ಮನೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಶುಕ್ರವಾರ ರಾತ್ರಿ ಬೆಂಕಿ ಕಾಣಿಕೊಂಡಿದೆ. ಈ ವಿದ್ಯುತ್ ಅವಘಡದಿಂದ ಮನೆಯಲ್ಲಿದ್ದ ಲಕ್ಷಾಂತರ ರು ಮೌಲ್ಯದ ಚಿನ್ನಾಭರಣ, ನಗದು ಸೇರಿದಂತೆ ಇನ್ನಿತರ ವಸ್ತುಗಳು ಸುಟ್ಟುಹೋಗಿವೆ.
    ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿ

ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಮನವಿ  

ತಕ್ಷಣ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ದೇಶನ ನೀಡುವಂತೆ ಭದ್ರಾವತಿ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.
    ಭದ್ರಾವತಿ: ತಕ್ಷಣ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ಕೈಗೊಳ್ಳಲು ನಿರ್ದೇಶನ ನೀಡುವಂತೆ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ.
    ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗು ಸುವರ್ಣ ಮಹಿಳಾ ವೇದಿಕೆ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ಹಾಗು ಕಾರ್ಯದರ್ಶಿ ಗಿರಿನಾಯ್ಡು ಅವರು ಮನವಿ ಸಲ್ಲಿಸಿದ್ದು, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಉಂಬ್ಳೆಬೈಲು ಹಾಗು ಭದ್ರಾವತಿ ತಾಲೂಕಿನ ಕಲ್ಲಹಳ್ಳಿ ಸೇರಿದಂತೆ ೨೮ ಗ್ರಾಮಗಳನ್ನೊಳಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆ, ದೊಣಬಘಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಾಗು ಸಿಂಗನಮನೆ ಗ್ರಾಮದ ಏಕಗ್ರಾಮ ಕುಡಿಯುವ ನೀರಿನ ಯೋಜನೆಯ ಮನಶ್ವೇತನ ಕಾಮಗಾರಿ ಮತ್ತು ಕಂಬದಾಳ್ ಹೊಸೂರು ಸೇರಿದಂತೆ ೨೧ ಗ್ರಾಮಗಳನ್ನೊಗೊಂಡ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗನ್ನು ತುರ್ತಾಗಿ ಕೈಗೊಳ್ಳಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಶಂಕುಸ್ಥಾಪನಾ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಡಿ. ದೇವರಾಜ ಅರಸು ಜನಸ್ಪಂದನಾ ಸೇವಾ ಟ್ರಸ್ಟ್ ಹಾಗು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರಾದ ಕೆ. ನಾಗೇಂದ್ರ ಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಗಿತ್ತು. ಈ ಹಿನ್ನಲೆಯಲ್ಲಿ ನಿರ್ದೇಶಕರು ಈ ಸಂಬಂಧ ಕ್ರಮ ಕೈಗೊಳ್ಳುವಂತೆ ತಮಗೆ(ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ) ೧೮ ಅಕ್ಟೋಬರ್ ೨೦೨೩ರಂದು ಪತ್ರ ಬರೆದಿದ್ದಾರೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ತಕ್ಷಣ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕ್ಷೇತ್ರದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಯೋಜನೆಯ ಪುನಶ್ಚೇತನ ಕಾಮಗಾರಿಗಳನ್ನು ಕೈಗೊಳ್ಳಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.

Friday, January 19, 2024

ಪೆನ್ಸಿಲ್ ತುದಿಯಲ್ಲಿ ಭವ್ಯ ರಾಮಮಂದಿರ : ಕಲಾವಿದ ವರುಣ್ ಆಚಾರ್

ಭದ್ರಾವತಿಯಲ್ಲಿ ಸೂಕ್ಷ್ಮ ಕಲಾಕೃತಿ ಮಾದರಿಗಳ ತಯಾರಿಕೆ ಕಲಾವಿದ ಎಸ್. ವರುಣ್ ಆಚಾರ್ ಕೈಚಳಕದಲ್ಲಿ ತಯಾರಾಗಿರುವ ಆಕರ್ಷಕವಾದ ಅಯೋಧ್ಯೆ ಭವ್ಯ ರಾಮಮಂದಿರ ಕಲಾಕೃತಿ ಮಾದರಿ.
    ಭದ್ರಾವತಿ: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆ ಹಾಗು ಪ್ರಭು ಶ್ರೀರಾಮ ಚಂದ್ರನ ಪ್ರಾಣ ಪ್ರತಿಷ್ಠಾಪನೆ ಹಿನ್ನಲೆಯಲ್ಲಿ ದೇಶಾದ್ಯಂತ ವಿಭಿನ್ನ ಧಾರ್ಮಿಕ ಆಚರಣೆಗಳು ಜರುಗುತ್ತಿದ್ದು, ಈ ನಡುವೆ ಕಲಾ ಸಾಧಕರು ಪ್ರಭು ಶ್ರೀರಾಮ ಚಂದ್ರನಿಗಾಗಿ ತಮ್ಮಲ್ಲಿನ ಪ್ರತಿಭೆಗಳನ್ನು ಅನಾವರಣಗೊಳಿಸಿ ಸಮರ್ಪಿಸುತ್ತಿದ್ದಾರೆ. ಈ ಸಾಲಿನಲ್ಲಿ ಹಳೇನಗರದ ಎನ್‌ಎಸ್‌ಟಿ ರಸ್ತೆ ನಿವಾಸಿ ಎಸ್. ವರುಣ್ ಆಚಾರ್ ಸಹ ಒಬ್ಬರಾಗಿದ್ದಾರೆ.
    ವರುಣ್ ಮೂಲತಃ ಸೂಕ್ಷ್ಮ ಕಲಾಕೃತಿ (ಮೈಕ್ರೋ ಆರ್ಟ್ಸ್) ಮಾದರಿ ತಯಾರಿಕೆ ಕಲಾವಿದರಾಗಿದ್ದು, ಇಂಡಿಯನ್ ಬುಕ್ ಆಫ್ ರೆಕಾರ್ಡ್ಸ್ ಸಾಧಕರಾಗಿದ್ದಾರೆ. ಇದೀಗ ಪೆನ್ಸಿಲ್ ತುದಿಯಲ್ಲಿ ಆಯೋಧ್ಯೆ ಭವ್ಯ ರಾಮಮಂದಿರ ಮಾದರಿ ತಯಾರಿಕೆಯಲ್ಲಿ ಇವರ ಪ್ರತಿಭೆ ಅನಾವರಣಗೊಂಡಿದೆ. ೧.೯ ಸೆ.ಮೀ. ಅಳತೆಯ ಆಕರ್ಷಕವಾದ ಭವ್ಯ ರಾಮಮಂದಿರ ಮಾದರಿ ತಯಾರಿಸಲಾಗಿದ್ದು, ಮಂದಿರ, ಗೋಪುರಗಳು ಹಾಗು ಕೇಸರಿ ಧ್ವಜಕಂಬ ಒಳಗೊಂಡಿದೆ.  ಇದನ್ನು ತಯಾರಿಸಲು ಸುಮಾರು ೪ ಗಂಟೆ ಸಮಯ ವ್ಯಯ ಮಾಡಿದ್ದಾರೆ.
    ಪದವಿಧರರಾಗಿರುವ ವರುಣ್, ಸಿದ್ದರಾಜು-ಗಾಯಿತ್ರಿ ದಂಪತಿ ಪುತ್ರರಾಗಿದ್ದಾರೆ. ಖಾಸಗಿ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಬಿಡುವಿನ ಅವಧಿಯಲ್ಲಿ ಸೂಕ್ಷ್ಮ ಕಲಾಕೃತಿ ಮಾದರಿಗಳನ್ನು ತಯಾರಿಸುತ್ತಿದ್ದಾರೆ. ಸೀಮೆಸುಣ್ಣ, ಅಕ್ಕಿಕಾಳು, ಬೆಂಕಿಕಡ್ಡಿ, ಕಡಲೆ ಬೀಜ ಸೇರಿದಂತೆ ಇತ್ಯಾದಿ ವಸ್ತುಗಳಲ್ಲಿ ಸುಮಾರು ೩೦೦ಕ್ಕೂ ಹೆಚ್ಚು ಕಲಾಕೃತಿ ಮಾದರಿಗಳು ಇವರ ಕೈಚಳಕದಲ್ಲಿ ಅನಾವರಣಗೊಂಡಿವೆ.  

ಡಿಎಸ್‌ಎಸ್ ಸುವರ್ಣ ಮಹೋತ್ಸವಕ್ಕೆ ಚಾಲನೆ : ದಲಿತರ ಏಳಿಗೆಗಾಗಿ ಶ್ರಮಿಸದ ಧೀಮಂತ ವ್ಯಕ್ತಿ ಪ್ರೊ. ಬಿ. ಕೃಷ್ಣಪ್ಪ

ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆಯಲ್ಲಿ ಹಿರಿಯ ಮುಖಂಡ ಜಿ. ಮೂರ್ತಿ

ಪ್ರೊ. ಬಿ. ಕೃಷ್ಣಪ್ಪ ಅವರು ಸಂಘಟಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇದೀಗ ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ಭದ್ರಾವತಿ ನಗರದಲ್ಲಿ ಚಾಲನೆ ನೀಡಲಾಯಿತು.

    ಭದ್ರಾವತಿ : ಪ್ರೊ. ಬಿ. ಕೃಷ್ಣಪ್ಪ ಅವರು ಸಂಘಟಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇದೀಗ ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು.
    ಇದಕ್ಕೂ ಮೊದಲು ನಗರದ ರಂಗಪ್ಪ ವೃತ್ತ, ಜೈಭೀಮ್ ನಗರದಿಂದ ಕಲಾ ತಂಡಗಳೊಂದಿಗೆ  ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದವರೆಗೂ ಮೆರವಣಿಗೆ ನಡೆಸಲಾಯಿತು. ನಂತರ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಪ್ರೊ. ಬಿ. ಕೃಷ್ಣಪ್ಪನವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಲಾಯಿತು. ಮೆರವಣಿಗೆಯಲ್ಲಿ ಸಮಿತಿ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.
    ನಂತರ ಅಂಬೇಡ್ಕರ್ ವೃತ್ತದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆಗೆ ಚಾಲನೆ ನೀಡಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ಹಿರಿಯ ಮುಖಂಡ ಜಿ.ಮೂರ್ತಿ, ಬಿ. ಕೃಷ್ಣಪ್ಪ ಅವರು ಸದಾ ಕಾಲ ದಲಿತರ ಪರವಾದ ಚಿಂತನೆಗಳನ್ನು ಹೊಂದುವ ಮೂಲಕ ಅವರ ಏಳಿಗೆಗಾಗಿ ಶ್ರಮಿಸಿದ ಧೀಮಂತ ವ್ಯಕ್ತಿ. ತಮ್ಮ ಸ್ವಂತ ಹಣದಲ್ಲಿಯೇ ಸಂಘಟನೆ ಕಟ್ಟುವ ಜೊತೆಗೆ ನಗರದ ವಿಐಎಸ್‌ಎಲ್ ಹಾಗು ಎಂಪಿಎಂ ಈ ಎರಡು ಅವಳಿ ಕಾರ್ಖಾನೆಗಳ ಕಾರ್ಮಿಕರು ನೀಡಿದ ತಲಾ ಎರಡು ರುಪಾಯಿ ಕೆಂಪು ನೋಟಿನ ಹಣದಲ್ಲಿ ಇಡೀ ರಾಜ್ಯಾದ್ಯಂತ ಸಂಘಟನೆ ವಿಸ್ತರಿಸಿದರು. ಆ ಮೂಲಕ ಹಲವು ಹೋರಾಟಗಳಲ್ಲಿ ಯಶಸ್ಸು ಸಾಧಿಸಿ ಶೋಷಿತರಿಗೆ ನ್ಯಾಯ ಒದಗಿಸಿಕೊಟ್ಟರು ಎಂದರು.
    ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಮಾತನಾಡಿ, ಡಾ.ಬಿ.ಆರ್.ಅಂಬೇಡ್ಕರ್ ಆಶಯ ಹಾಗು ಸಂವಿಧಾನದ ಆಧಾರದಲ್ಲಿ ದಲಿತ ಸಂಘರ್ಷ ಸಮಿತಿಯನ್ನು ಸ್ಥಾಪಿಸಲಾಗಿದೆ. ಇಂಥದೊಂದು ಸಂಘಟನೆವ ೫೦ ವರ್ಷಗಳನ್ನು ಪೂರೈಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.


ಪ್ರೊ. ಬಿ. ಕೃಷ್ಣಪ್ಪ ಅವರು ಸಂಘಟಿಸಿದ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಇದೀಗ ೫೦ ವರ್ಷಗಳನ್ನು ಪೂರೈಸಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ಭದ್ರಾವತಿ ನಗರದಲ್ಲಿ ಮೆರವಣಿಗೆ ನಡೆಸಲಾಯಿತು.
    ಅನೇಕ ಚಳವಳಿಗಳು ಆರಂಭಗೊಂಡು ಕೆಲಕಾಲದಲ್ಲಿಯೇ ನಶಿಸಿವೆ. ಆದರೆ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರ ನಡುವೆ ಹುಟ್ಟಿದ ಚಳವಳಿಯಾಗಿದ್ದರಿಂದ ಇಂದಿಗೂ ಜೀವಂತವಾಗಿದೆ. ಸಾಮಾಜಿಕ ಮಾಧ್ಯಮಗಳಿಲ್ಲದ ಕಾಲದಲ್ಲಿಯೂ ಸದೃಢವಾಗಿ ಬಲಗೊಂಡ ಸಂಘಟನೆ ದಲಿತ ಸಂಘರ್ಷ ಸಮಿತಿ ಎಂದರು.
    ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ದಲಿತ ಸಂಘರ್ಷ ಸಮಿತಿ ಅನೇಕ ಕಾಯ್ದೆಗಳು ರೂಪಿಸಲು ಕಾರಣವಾಗಿದೆ. ಅನೇಕ ಬಡವರ ಜಮೀನುಗಳನ್ನು ಉಳಿಸುವಲ್ಲಿ ಪ್ರಮುಖ ಪಾತ್ರವಹಿಸಿದೆ. ಪ್ರಸ್ತುತ ದಲಿತರು ಅನೇಕ ಸೌಲಭ್ಯಗಳನ್ನು ಪಡೆಯುವಲ್ಲಿ ಕದಸಂಸ ಪಾತ್ರ ಪ್ರಮುಖವಾಗಿದೆ ಎಂದರು.
    ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಸದಸ್ಯ ಚನ್ನಪ್ಪ, ಮುಖಂಡರುಗಳಾದ ಈಶ್ವರಪ್ಪ, ಪ್ರಸನ್ನಕುಮಾರ್, ರಂಗನಾಥ್, ಕಾಣಿಕ್ ರಾಜ್, ಎಸ್. ಉಮಾ, ಶಾಂತಿ, ತಿಪ್ಪೇಸ್ವಾಮಿ, ಪರಮೇಶ್ವರಪ್ಪ, ಗಂಗಾಧರ್, ವಿ. ವಿನೋದ್, ಜಿಂಕ್‌ಲೈನ್ ಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ವಿಐಎಸ್‌ಎಲ್ ೧೦೬ನೇ ಸಂಸ್ಥಾಪಕರ ದಿನಾಚರಣೆ : ಸರ್.ಎಂ.ವಿ ಪ್ರತಿಮೆಗೆ ಮಾಲಾರ್ಪಣೆ

ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೬ನೇ ಸ್ಥಾಪನೆ ವರ್ಷದ ಅಂಗವಾಗಿ ಅತ್ಯುತ್ತಮ ಇಂಜಿನಿಯರ್, ರಾಜನೀತಿಜ್ಞ ಸರ್. ಮೋಕ್ಷ ಗುಂಡಂ ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಖಾನೆ ವತಿಯಿಂದ ಗೌರವ ಸಲ್ಲಿಸಲಾಯಿತು.
    ಭದ್ರಾವತಿ : ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ೧೦೬ನೇ ಸ್ಥಾಪನೆ ವರ್ಷದ ಅಂಗವಾಗಿ ಅತ್ಯುತ್ತಮ ಇಂಜಿನಿಯರ್, ರಾಜನೀತಿಜ್ಞ ಸರ್. ಮೋಕ್ಷ ಗುಂಡಂ ವಿಶ್ವೇಶ್ವರಾಯರವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಖಾನೆ ವತಿಯಿಂದ ಗೌರವ ಸಲ್ಲಿಸಲಾಯಿತು.
    ಕಾರ್ಖಾನೆ ಆವರಣದಲ್ಲಿರುವ ಪ್ರತಿಮೆಗೆ ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ ನಿರ್ದೇಶಕ ಕೆ.ಎಸ್ ಸುರೇಶ್ ನೇತೃತ್ವದಲ್ಲಿ ಮಾಲಾರ್ಪಣೆ ಮಾಡಲಾಯಿತು.  
    ಕಾರ್ಮಿಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ, ಪ್ರಭಾರಿ ಅಧ್ಯಕ್ಷ ಎಂ.ಎಲ್ ಯೋಗೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷ ಪಾರ್ಥಸಾರಥಿ ಮಿಶ್ರ, ಉಪಪ್ರಬಂಧಕ(ಸಿಬ್ಬಂದಿ) ಕೆ.ಎಸ್ ಶೋಭ ಸೇರಿದಂತೆ ಕಾರ್ಖಾನೆ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು ಪಾಲ್ಗೊಂಡಿದ್ದರು.

Thursday, January 18, 2024

ಹಿರಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಎಚ್.ಬಿ ವಸಂತಕುಮಾರ್

ಭದ್ರಾವತಿ ತಾಲೂಕಿನ ಹಿರಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಎಚ್.ಬಿ ವಸಂತಕುಮಾರ್ ಹಾಗು ಉಪಾಧ್ಯಕ್ಷರಾಗಿ ನೇತ್ರಾವತಿ ಆಯ್ಕೆಯಾಗಿದ್ದಾರೆ.
    ಭದ್ರಾವತಿ: ತಾಲೂಕಿನ ಹಿರಿಯೂರು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾಗಿ ಎಚ್.ಬಿ ವಸಂತಕುಮಾರ್ ಹಾಗು ಉಪಾಧ್ಯಕ್ಷರಾಗಿ ನೇತ್ರಾವತಿ ಆಯ್ಕೆಯಾಗಿದ್ದಾರೆ.
    ಉಳಿದಂತೆ ಸದಸ್ಯರಾಗಿ ಎಚ್.ಎಂ ಲೋಕೇಶ್, ಎಚ್.ಪಿ ಚಂದ್ರಶೇಖರ್, ಎಚ್.ಎಸ್ ಕುಮಾರ್, ಎಚ್.ಆರ್ ಜಗದೀಶ್, ಎಚ್.ಎ ಶಿವಣ್ಣ, ಎಂ. ಶಿವಕುಮಾರ್, ಸತ್ಯನಾರಾಯಣರಾವ್ ಮತ್ತು ಮಂಜುಳ ಸೇರಿದಂತೆ ೮ ಮಂದಿ ಆಯ್ಕೆಯಾಗಿದ್ದಾರೆ.
    ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಹಾಗು ಸದಸ್ಯರಿಗೆ ಹಿರಿಯೂರು ಗ್ರಾಮಸ್ಥರು, ಹಾಲು ಉತ್ಪಾದಕರು ಹಾಗು ವಿವಿಧ ಸಂಘ-ಸಂಸ್ಥೆಗಳು ಅಭಿನಂದಿಸಿವೆ.

ಜ.೨೨ರಂದು ನಗರಸಭೆ ಅಧ್ಯಕ್ಷರ ಚುನಾವಣೆ : ಲತಾ ಚಂದ್ರಶೇಖರ್ ಆಯ್ಕೆ ಬಹುತೇಕ ಖಚಿತ

ಲತಾ ಚಂದ್ರಶೇಖರ್
    ಭದ್ರಾವತಿ:  ನಗರಸಭೆ ಅಧ್ಯಕ್ಷರ ಚುನಾವಣೆ ಜ.೨೨ರಂದು ನಡೆಯಲಿದ್ದು, ಅಧ್ಯಕ್ಷರಾಗಿ ವಾರ್ಡ್ ನಂ. ೩೪ರ ಸದಸ್ಯೆ ಲತಾ ಚಂದ್ರಶೇಖರ್ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
    ನಗರಸಭೆ ಆಧಿಕಾರದ ಗದ್ದುಗೆ ಹಿಡಿದಿರುವ ಕಾಂಗ್ರೆಸ್ ಮೀಸಲಾತಿ ಮೊದಲ ೩೦ ತಿಂಗಳ ಅವಧಿ ಒಪ್ಪಂದದಂತೆ ಹಂಚಿಕೆ ಮಾಡಿಕೊಂಡಿದ್ದು, ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳನ್ನು ಶಾಸಕ ಬಿ.ಕೆ ಸಂಗಮೇಶ್ವರ್ ನಿರ್ದೇಶನದಂತೆ ಅರ್ಹ ಸದಸ್ಯರಿಗೆ ಬಿಡುಕೊಡಲಾಗುತ್ತಿದೆ. ಸಾಮಾನ್ಯ ಮಹಿಳಾ ಮೀಸಲು ಹೊಂದಿರುವ ಅಧ್ಯಕ್ಷ ಸ್ಥಾನ ಅಧಿಕಾರ ಈಗಾಗಲೇ ಗೀತಾ ರಾಜ್‌ಕುಮಾರ್, ಅನುಸುಧಾ ಮೋಹನ್ ಪಳನಿ ಮತ್ತು ಶೃತಿ ಸಿ. ವಸಂತಕುಮಾರ್ ಕೆ.ಸಿ ಒಟ್ಟು ೩ ಮಂದಿ ಸದಸ್ಯರು ಅನುಭವಿಸಿದ್ದಾರೆ. ಉಳಿದ ಅವಧಿಗೆ ವಾರ್ಡ್ ನಂ.೩೪ರ ಸದಸ್ಯೆ ಲತಾ ಚಂದ್ರಶೇಖರ್ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.
    ಈ ಹಿಂದೆಯೇ ಅಧಿಕಾರ ಅನುಭವಿಸಬೇಕಾಗಿದ್ದ ಲತಾ ಚಂದ್ರಶೇಖರ್ ಅವರಿಗೆ ಮೀಸಲಾತಿ ಕೊನೆ ಅವಧಿ ಅಧಿಕಾರ ಬಿಟ್ಟುಕೊಡುವುದಾಗಿ ತೀರ್ಮಾನಿಸಲಾಗಿತ್ತು. ಅದರಂತೆ ಶೃತಿ ಸಿ. ವಸಂತಕುಮಾರ್ ಕೆ.ಸಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಉಪವಿಭಾಗಾಧಿಕಾರಿ ಸತ್ಯನಾರಾಯಣ ಅವರ ನೇತೃತ್ವದಲ್ಲಿ ಜ.೨೨ರಂದು ಚುನಾವಣೆ ನಡೆಯಲಿದೆ.
    ಪ್ರಸ್ತುತ ನಗರಸಭೆಯಲ್ಲಿ ೧೮ ಕಾಂಗ್ರೆಸ್, ೧೨ ಜೆಡಿಎಸ್, ೪ ಬಿಜೆಪಿ ಹಾಗು ೧ ಪಕ್ಷೇತರ ಸದಸ್ಯರಿದ್ದಾರೆ. ಲತಾ ಚಂದ್ರಶೇಖರ್‌ರವರು ಮೂಲತಃ ಹಿಂದೂಪರ ಸಂಘಟನೆಗಳಲ್ಲಿ ಗುರುತಿಸಿಕೊಂಡು ಮೊದಲ ಬಾರಿಗೆ ವಾರ್ಡ್ ನಂ.೩೪ರಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.
    ಜ.೨೨ರಂದು ಬೆಳಿಗ್ಗೆ ೧೦ ಗಂಟೆಯಿಂದ ೧೧ ಗಂಟೆವರೆಗೆ ನಾಮಪತ್ರ ಸಲ್ಲಿಕೆ, ಮಧ್ಯಾಹ್ನ ೧.೧೫ ರಿಂದ ೧.೩೦ರವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ. ೧.೩೦ರ ನಂತರ ಅಧ್ಯಕ್ಷ ಘೋಷಣೆ ನಡೆಯಲಿದೆ. ಈ ಸಂಬಂಧ ಜ.೧೦ರಂದು ಉಪವಿಭಾಗಾಧಿಕಾರಿ ಚುನಾವಣೆ ಸೂಚನೆ ಪತ್ರ ಹೊರಡಿಸಿದ್ದಾರೆ.

ದೇಹದಾರ್ಢ್ಯ ಪಟುವಿನ ಸಾವಿನ ಪ್ರಕರಣ ಮರುತನಿಖೆಗೆ ಆಗ್ರಹ

ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿಗೆ ತೆರಳಿ ಪೋಷಕರಿಂದ ಮನವಿ

ಭದ್ರಾವತಿ ನಗರದ ಆಂಜನೇಯ ಅಗ್ರಹಾರ ಕೂಲಿಬ್ಲಾಕ್ ಶೆಡ್ ನಿವಾಸಿ, ರಾಷ್ಟ್ರಮಟ್ಟದ ದೇಹದಾರ್ಢ್ಯ ಪಟುವಿನ ಸಾವಿನ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಪೋಷಕರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಘಟನೆ ನಡೆದಿದೆ.
    ಭದ್ರಾವತಿ: ನಗರದ ಆಂಜನೇಯ ಅಗ್ರಹಾರ ಕೂಲಿಬ್ಲಾಕ್ ಶೆಡ್ ನಿವಾಸಿ, ರಾಷ್ಟ್ರಮಟ್ಟದ ದೇಹದಾರ್ಢ್ಯ ಪಟುವಿನ ಸಾವಿನ ಪ್ರಕರಣ ಮರುತನಿಖೆಗೆ ಆಗ್ರಹಿಸಿ ಪೋಷಕರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿರುವ ಘಟನೆ ನಡೆದಿದೆ.
    ದೇಹದಾರ್ಢ್ಯ ಪಟು ರತಿಲ ಕುಮಾರ್ ಮೇ.೧೩, ೨೦೨೩ರಂದು ಸಾವನ್ನಪ್ಪಿದ್ದರು. ಇವರ ಮೃತದೇಹ ಸಿರಿಯೂರು ವೀರಾಪುರ ನಾಲೆಯಲ್ಲಿ ಪತ್ತೆಯಾಗಿತ್ತು. ಈ ಸಂಬಂಧ ಗ್ರಾಮಾಂತರ ಠಾಣೆ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದರು.
    ಇದೀಗ ರತಿಲ ಕುಮಾರ್ ಅವರ ತಂದೆ ಇಂದ್ರೇಶ್ ಅವರು, ಅಂದು ಮದುವೆಗೆ ಹೋಗಿದ್ದ ರತಿಲ ಕುಮಾರ್‌ಗೆ ಬಾರ್ ಒಂದರಲ್ಲಿ ಕುಡಿಸಿ ಗಲಾಟೆ ಮಾಡಲಾಗಿತ್ತು. ನಂತರ ನಾಲೆಯ ಬಳಿ ಕರೆದುಕೊಂಡು ಹೋಗಿ ತಲೆಗೆ ಬಲವಾಗಿ ಹೊಡೆದು ನೀರಿಗೆ ತಳ್ಳಿ ಕೊಲೆ ಮಾಡಲಾಗಿದೆ. ಪೊಲೀಸರು ಯುಡಿಆರ್ ಪ್ರಕರಣವೆಂದು ದಾಖಲಿಸಿ ತನಿಖೆ ಸರಿಯಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
    ರತಿಲ ಕುಮಾರ್ ಸ್ನೇಹಿತರೊಂದಿಗೆ ಪೋಷಕರು ಜಿಲ್ಲಾ ರಕ್ಷಣಾಧಿಕಾರಿಗಳ ಕಛೇರಿಗೆ ತೆರಳಿ ಕಳೆದ ಸುಮಾರು ೮ ತಿಂಗಳಿನಿಂದ ನ್ಯಾಯಕ್ಕಾಗಿ ಅಲೆಯುತ್ತಿದ್ದು, ಈಗಾಗಲೇ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಹಾಗು  ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಮತ್ತೊಮ್ಮೆ ಮನವಿ ಸಲ್ಲಿಸುತ್ತಿದ್ದು, ಐಪಿಸಿ ಸೆಕ್ಷನ್ ೩೦೨ರಡಿ ಕೊಲೆ ಪ್ರಕರಣ ದಾಖಲಿಸಿ ಮರು ತನಿಖೆ ಕೈಗೊಳ್ಳುವಂತೆ ಎಎಸ್‌ಪಿ ಕರಿಯಪ್ಪರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.
    ರತಿಲ ಕುಮಾರ್ ಸಹೋದರಿ ದೀಪ್ತಿ, ಸ್ನೇಹಿತರಾದ ಅಂತೋಣಿ ವಿಲ್ಸನ್, ಮಂಜುನಾಥ್, ಎಚ್. ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Wednesday, January 17, 2024

ಕುಂಚ ಕಲಾವಿದ ಹಫೀಜ್ ಉರ್ ರಹಮಾನ್ ನಿಧನ

 ಭದ್ರಾವತಿ:  ತಾಲೂಕು ಕುಂಚ ಕಲಾವಿದರ ಸಂಘದ ಖಜಾಂಚಿ ಹಫೀಜ್ ಉರ್ ರಹಮಾನ್(51) ಗುರುವಾರ  ಬೆಳಗ್ಗೆ  ನಿಧನ  ಹೊಂದಿದರು.
    ಪತ್ನಿ, ಪುತ್ರಿ ಹಾಗೂ ಇಬ್ಬರು ಪುತ್ರರರು ಇದ್ದರು. ಕಳೆದ ಸುಮಾರು 2 ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು.  ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನ ಹೊಂದಿದ್ದಾರೆ.
       ರಹಮಾನ್ ಅವರು ಜಮಾತೇ ಇಸ್ಲಾಂಮೀ ಹಿಂದ್ ಸಂಘಟನೆ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
       ಇವರ ನಿಧನಕ್ಕೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ.


ಜ.೧೯ರಂದು ಕ.ದ.ಸಂ.ಸ ಸುವರ್ಣ ಮಹೋತ್ಸವಕ್ಕೆ ಚಾಲನೆ : ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಮಾಹಿತಿ

ಭದ್ರಾವತಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಮಾತನಾಡಿದರು.
    ಭದ್ರಾವತಿ : ಪ್ರೊ. ಬಿ.ಕೃಷ್ಣಪ್ಪರವರು ೧೯೭೪-೭೫ರಲ್ಲಿ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಘಟಿಸಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಆಶಯಗಳನ್ನು ಮೂಲ ಉದ್ದೇಶವಾಗಿಟ್ಟುಕೊಂಡು ಚಳುವಳಿಯನ್ನು ಆರಂಭಿಸಿದರು.     ಪ್ರಸ್ತುತ ಸಮಿತಿ ೫೦ ವರ್ಷಗಳನ್ನು ಪೂರೈಸಿದ್ದು, ಈ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಸುವರ್ಣ ಮಹೋತ್ಸವ ಆಚರಣೆ ಹಮ್ಮಿಕೊಳ್ಳಲಾಗಿದೆ. ಜ.೧೯ರಂದು ಸುವರ್ಣ ಮಹೋತ್ಸವಕ್ಕೆ ನಗರದಲ್ಲಿ ಚಾಲನೆ ನೀಡಲಾಗುವುದು ಎಂದು ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ತಿಳಿಸಿದರು.
    ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ದೇಶದಲ್ಲಿ ಆರ್‌ಎಸ್‌ಎಸ್ ಹೇಗೆ ತನ್ನದೇ ಆದ ಸೈದ್ಧಾಂತಿಕ ನೆಲಗಟ್ಟಿನಲ್ಲಿ ಬಲಿಷ್ಠವಾಗಿ ಬೆಳೆದು ನಿಂತಿದೆಯೋ, ಅದೇ ರೀತಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾದ್ಯಂತ ಎಲ್ಲಾ ೩೧ ಜಿಲ್ಲೆಗಳಲ್ಲಿ ಬೆಳೆದು ನಿಂತಿದೆ. ಪ್ರೊ. ಬಿ. ಕೃಷ್ಣಪ್ಪ ಅವರು ೧೯೭೪ರಲ್ಲಿ ವಿಐಎಸ್‌ಎಲ್ ಕಾರ್ಮಿಕನ ಜೊತೆ ನಡೆದ ಅಸ್ಪೃಶ್ಯತೆ ನಡವಳಿಕೆ ಖಂಡಿಸಿ ಕಾರ್ಮಿಕರನ್ನು ಸಂಘಟಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಚಳುವಳಿಗೆ ನಾಂದಿ ಹಾಡಿದರು ಎಂದರು.
    ಸಮಿತಿ ನಡೆಸಿದ ಹೋರಾಟದ ಫಲವಾಗಿ ಬಗರ್‌ಹುಕುಂ ಚಳುವಳಿ, ಬೆತ್ತಲೆ ಸೇವೆ ಪದ್ಧತಿ ನಿಷೇಧ, ಜಾತಿನಿಂದನೆ ಕಾಯಿದೆ, ಪಿಟಿಸಿಲ್ ಕಾಯಿದೆ ಸೇರಿದಂತೆ ಅನೆಕ ಕಾಯಿದೆಗಳು ಜಾರಿಗೆ ಬಂದಿವೆ ಎಂದರು.
    ಜಾತಿ, ವರ್ಗ, ಧರ್ಮಬೇದವಿಲ್ಲದೆ ಎಲ್ಲಾ ರೀತಿಯ ಶೋಷಿತ ಜನರ ಧ್ವನಿಯಾಗಿ ಜನ್ಮತಾಳಿದ ಸಂಘಟನೆಗೆ ಇದೀಗ ೫೦ ವರ್ಷ ತುಂಬುತ್ತಿದ್ದು, ಇದರ ಸವಿನೆನಪಿಗಾಗಿ ಚಳುವಳಿಯ ತವರು ನೆಲದಲ್ಲಿ ಸುವರ್ಣಮಹೋತ್ಸವಕ್ಕೆ ಚಾಲನೆ ನೀಡಲಾಗುತ್ತಿದೆ.  ಈ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
    ಸಮಿತಿ ಜಿಲ್ಲಾ ಸಂಚಾಲಕ ಚಿನ್ನಯ್ಯ ಮಾತನಾಡಿ, ಶೋಷಿತರ ಧ್ವನಿಯಾಗಿ ಜ. ೧೯ರಂದು ಬೆಳಿಗ್ಗೆ ೧೧ ಗಂಟೆಗೆ ನಗರದ ರಂಗಪ್ಪ ವೃತ್ತ, ಜೈಭೀಮ್ ನಗರದಿಂದ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.  ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದವರೆಗೂ ಮೆರವಣಿಗೆ ಸಾಗಲಿದೆ. ನಂತರ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್ ಹಾಗೂ ಪ್ರೊ. ಬಿ. ಕೃಷ್ಣಪ್ಪನವರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಲಾಗುವುದು. ಕಾರ್ಯಕ್ರಮವನ್ನು ಶಾಕ ಬಿ.ಕೆ.ಸಂಗಮೆಶ್ವರ್ ಉದ್ಘಾಟಿಸಲಿದ್ದಾರೆ. ಪ್ರೊ. ಬಿ.ಕೃಷ್ಣಪ್ಪನವರು ಹುಟ್ಟುಹಾಕಿರುವ ಈ ಸಂಘಟನೆ ಯಾವುದೇ ಒಂದು ವರ್ಗ, ವ್ಯಕ್ತಿಗೆ ಸೇರಿದ ಸ್ವತ್ತಲ್ಲ.  ಈ ಕಾರ್ಯಕ್ರಮದ ಧ್ಯೇಯವಾಕ್ಯ ದಲಿತರ ಐಕ್ಯತೆ ಸಂಘರ್ಷ-ಆರದ ಶೋಷಿತರ ಹಣತೆ ಎಂಬ ಶೀರ್ಷಿಕೆಯನ್ನು ಹೊಂದಿದೆ. ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಜ.೨೦ ತ್ತು ೨೧ರಂದು ಬಿಜಾಪುರ, ಆಲಮಟ್ಟಿ ಡ್ಯಾಂ, ಹರ್ಡೇಕರ್ ಮಂಜಪ್ಪ ಸ್ಮಾರಕ ಭವನದಲ್ಲಿ ಅಧ್ಯಯನ ಶಿಬಿರವನ್ನು ಏರ್ಪಡಿಸಲಾಗಿದೆ. ಅದೇ ರೀತಿ ಜಿಲ್ಲಾಮಟ್ಟದಲ್ಲಿ ಸಹ ಸಮಾವೇಶಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
      ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಸಂಚಾಲಕ ಕೆ. ರಂಗನಾಥ, ಪ್ರಮುಖರಾದ ಕಾಣಿಕ್ ರಾಜ್, ಸಂದೀಪ, ಈಶ್ವರಪ್ಪ, ನರಸಿಂಹ, ಪ್ರಸನ್ನ ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಶ್ರೀ ಸಿದ್ದರಾಮೇಶ್ವರರು ಕೇವಲ ಒಂದು ಜಾತಿಗೆ ಸೀಮಿತವಾಗಿರದ ಸಮಾಜ ಸುಧಾರಕರು : ಡಾ. ಧನಂಜಯ

ಭದ್ರಾವತಿ ತಾಲೂಕು ಆಡಳಿತ ಮತ್ತು ಬೋವಿ ಜನಾಂಗದ ಅಭಿವೃದ್ಧಿ ಸಂಘ ವತಿಯಿಂದ ಬುಧವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವಯೋಗಿ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರರ ಸಿದ್ದರಾಮೇಶ್ವರರ ೮೫೧ನೇ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಸನ್ಮಾನಿಸಲಾಯಿತು.
    ಭದ್ರಾವತಿ: ಶ್ರೀ ಸಿದ್ದರಾಮೇಶ್ವರರು ಕೇವಲ ಭೋವಿ ಸಮಾಜಕ್ಕೆ ಮಾತ್ರ ಸೀಮಿತವಾಗಿಲ್ಲ. ಅವರು ಒಬ್ಬ ಸಮಾಜ ಸುಧಾರಕರಾಗಿದ್ದು, ಅವರ ಕಾಲಾವಧಿಯಲ್ಲಿ ಕೈಗೊಂಡಿರುವ ಜನಪರವಾದ ಕಾರ್ಯಗಳು ಇಂದಿಗೂ ಉಳಿದುಕೊಂಡಿವೆ ಎಂದು ಎನ್.ಆರ್ ಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ಪ್ರಾಂಶುಪಾಲ ಡಾ. ಧನಜಂಯ ಹೇಳಿದರು.  
    ತಾಲೂಕು ಆಡಳಿತ ಮತ್ತು ಬೋವಿ ಜನಾಂಗದ ಅಭಿವೃದ್ಧಿ ಸಂಘ ವತಿಯಿಂದ ಬುಧವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವಯೋಗಿ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರರ ಸಿದ್ದರಾಮೇಶ್ವರರ ೮೫೧ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
    ಶ್ರೀ ಸಿದ್ದರಾಮೇಶ್ವರರು ೧೨ನೇ ಶತಮಾನದಲ್ಲಿ ಜಗಜ್ಯೋತಿ ಬಸವಣ್ಣನವರ ಅನುಭವ ಮಂಟಪದಲ್ಲಿನ ವಚನಗಾರರ ಪೈಕಿ ಒಬ್ಬರಾಗಿದ್ದರು. ಅವರು ಸಮಾಜದಲ್ಲಿ ಶೋಷಣೆಗೆ ಒಳಗಾಗಿದ್ದ ವಡ್ಡರ ಪರವಾಗಿ ತಮ್ಮ ನಿಲುವುಗಳನ್ನು ಸಮಾಜಕ್ಕೆ ತಿಳಿಯಪಡಿಸುವ ಜೊತೆಗೆ ಸಮಾಜದಲ್ಲಿನ ಎಲ್ಲಾ ಸಮುದಾಯಗಳಿಗೂ ಮಾರ್ಗದರ್ಶಕರಾಗಿದ್ದರು. ಅಲ್ಲದೆ ಅವರ ಅವಧಿಯಲ್ಲಿ ಹಲವಾರು ಜನಪರ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ಸಮಜದ ಅಭಿವೃದ್ಧಿಗೆ ಮುನ್ನುಡಿ ಬರೆದಿದ್ದರು. ಅವರ ಆದರ್ಶತನ, ಚಿಂತನೆಗಳನ್ನು ಸ್ವಲ್ಪಮಟ್ಟಿಗಾದರೂ ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕಾಗಿದೆ. ಭೋವಿ ಜನಾಂಗದವರು ಸೇರಿದಂತೆ ಸಮಾಜದಲ್ಲಿ ಶೋಷಣೆಗೆ ಒಳಗಾಗಿರುವ ಎಲ್ಲಾ ಸಮುದಾಯಗಳು ಸಹ ಇಂದು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಅವರನ್ನುಶಿಕ್ಷಣವಂತರನ್ನಾಗಿಸಬೇಕಾಗಿದೆ ಎಂದರು.


ಭದ್ರಾವತಿಯಲ್ಲಿ ತಾಲೂಕು ಆಡಳಿತ ಮತ್ತು ಬೋವಿ ಜನಾಂಗದ ಅಭಿವೃದ್ಧಿ ಸಂಘ ವತಿಯಿಂದ ಬುಧವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದ್ದ ಶ್ರೀ ಶಿವಯೋಗಿ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರರ ಸಿದ್ದರಾಮೇಶ್ವರರ ೮೫೧ನೇ ಜಯಂತಿ ಕಾರ್ಯಕ್ರಮ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಮಾತನಾಡಿ, ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಸಂದೇಶವನ್ನು ೧೨ನೇ ಶತಮಾನದಲ್ಲಿಯೇ ವಚನಗಾರರು ತಿಳಿಸಿಕೊಟ್ಟಿದ್ದಾರೆ. ನಾವುಗಳು ಆದರ್ಶ ವ್ಯಕ್ತಿಗಳನ್ನು ಜಾತಿ, ಧರ್ಮ, ಪಂಥಗಳ ಆಧಾರದ ಮೇಲೆ ಗುರುತಿಸದೆ ಅವರ ಅದರ್ಶತನ ಮೈಗೂಡಿಸಿಕೊಳ್ಳಬೇಕು. ಆಗ ಮಾತ್ರ ಜಯಂತಿ ಕಾರ್ಯಕ್ರಮಗಳಿಗೆ ಅರ್ಥ ಬರುತ್ತದೆ ಎಂದರು.
    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಆದರ್ಶ ವ್ಯಕ್ತಿಗಳಿಗೆ ಅವಮಾನ ಮಾಡುವ ರೀತಿಯಲ್ಲಿ ಯಾವುದೇ ಕಾರ್ಯಕ್ರಮಗಳನ್ನು ಆಚರಿಸಬಾರದು. ಇದನ್ನು ಆಯಾ ಸಮಾಜದವರು ಹಾಗು ಕಾರ್ಯಕ್ರಮದ ಜವಾಬ್ದಾರಿ ವಹಿಸಿಕೊಳ್ಳುವ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯವರು ಅರ್ಥ ಮಾಡಿಕೊಳ್ಳಬೇಕು. ಆದರ್ಶ ವ್ಯಕ್ತಿಗಳ ಕಾರ್ಯಕ್ರಮಗಳಿಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಆಗ ಮಾತ್ರ ಆ ಕಾರ್ಯಕ್ರಮಗಳು ಸಾರ್ಥಕಗೊಳ್ಳುತ್ತವೆ ಎಂದರು.
    ಶಾಸಕ ಬಿ. ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ಈ ರೀತಿಯ ತಪ್ಪುಗಳಿಗೆ ಅವಕಾಶ ಮಾಡಿಕೊಡಬಾರದು. ಎಲ್ಲರೂ ಒಗ್ಗೂಡಬೇಕು. ಆದರ್ಶ ವ್ಯಕ್ತಿಗಳ ಜಯಂತಿಗಳನ್ನು ಆಚರಿಸುವ ಮೂಲಕ ಅವರ ಆದರ್ಶತನಗಳನ್ನು ಮೈಗೂಡಿಸಿಕೊಳ್ಳಬೇಕೆಂದರು.
    ಭೋವಿ ಜನಾಂಗದ ಅಭಿವೃದ್ಧಿ ಸಂಘದ ಅಧ್ಯಕ್ಷ ಶಿವಣ್ಣ ತಹಸೀಲ್ದಾರ್ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ.  ಗಂಗಣ್ಣ, ನಗರಸಭೆ ಪೌರಾಯುಕ್ತ ಪ್ರಕಾಶ್ ಚನ್ನಪ್ಪನವರ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಗೋಪಾಲಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಚಿನ್ನಯ್ಯ, ಮುಖಂಡರಾದ ಎಸ್. ಕುಮಾರ್, ಸುಕನ್ಯಾ ರಾಜ್, ಚೌಡಯ್ಯ, ತಮ್ಮಯ್ಯ, ಶಿವು ಪಾಟೀಲ್, ಜಲ್ಲಿ ರಾಮಣ್ಣ, ಕೃಷ್ಣ, ಸಿದ್ಧ ಭೋವಿ ವೈ. ಮಂಜುನಾಥ್, ನಾಗೇಶ, ವಿಠಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸ್ವಾಗತಿಸಿದರು. ಎಸ್.ಕೆ ಮೋಹನ್ ನಿರೂಪಿಸಿದರು. ಸುಮತಿ ಕಾರಂತ್ ತಂಡದಿಂದ ನಾಡಗೀತೆ, ಪ್ರಾರ್ಥನೆ  ನಡೆಯಿತು.

Tuesday, January 16, 2024

`ಭದ್ರಾವತಿಯ ಕರಾಳ ದಿನ' ಆಚರಣೆ : ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರಿಂದ ಪಂಚಿನ ಮೆರವಣಿಗೆ

ಸಂಸದ ಬಿ.ವೈ ರಾಘವೇಂದ್ರ ಕಾರ್ಖಾನೆ ಉಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಿ


ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ೧೬ ಜನವರಿ ೨೦೨೩ರಂದು ಉಕ್ಕು ಪ್ರಾಧಿಕಾರ ತೀರ್ಮಾನ ತೆಗೆದುಕೊಂಡಿತ್ತು. ಇದನ್ನು ವಿರೋಧಿಸಿ ವಿಐಎಸ್‌ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್ ವತಿಯಿಂದ  ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದ್ದು, ಹೋರಾಟ ೧ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಮಂಗಳವಾರ `ಭದ್ರಾವತಿಯ ಕರಾಳ ದಿನ' ಆಚರಿಸಲಾಯಿತು. ಸಂಜೆ ನಡೆದ ಪಂಜಿನ ಮೆರವಣಿಗೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.
    ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಉಳಿಸುವ ನಿಟ್ಟಿನಲ್ಲಿ ಸಂಸದ ಬಿ.ವೈ ರಾಘವೇಂದ್ರ ಪ್ರಾಮಾಣಿಕವಾಗಿ ಪ್ರಯತ್ನಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಆಗ್ರಹಿಸಿದರು.
    ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಶಾಶ್ವತವಾಗಿ ಮುಚ್ಚಲು ಕೇಂದ್ರ ಸರ್ಕಾರದ ಆದೇಶದ ಮೇರೆಗೆ ೧೬ ಜನವರಿ ೨೦೨೩ರಂದು ಉಕ್ಕು ಪ್ರಾಧಿಕಾರ ತೀರ್ಮಾನ ತೆಗೆದುಕೊಂಡಿತ್ತು. ಇದನ್ನು ವಿರೋಧಿಸಿ ವಿಐಎಸ್‌ಪಿ ಕಾಂಟ್ರಾಕ್ಟ್ ವರ್ಕರ್ಸ್ ಯೂನಿಯನ್ ವತಿಯಿಂದ  ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದ್ದು, ಹೋರಾಟ ೧ ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಮಂಗಳವಾರ `ಭದ್ರಾವತಿಯ ಕರಾಳ ದಿನ' ಆಚರಿಸಲಾಯಿತು. ಸಂಜೆ ನಡೆದ ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿ.ಕೆ ಸಂಗಮೇಶ್ವರ್ ಹಾಗು ಕಾಂಗ್ರೆಸ್ ಮುಖಂಡರು, ಬಿ.ವೈ ರಾಘವೇಂದ್ರ ಅವರು ಈಗಲೂ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ ಹೊರತು ಕಾರ್ಖಾನೆಯನ್ನು ಉಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿಲ್ಲ ಎಂದು ಆರೋಪಿಸಿ ಆಕ್ರೋಶ ವ್ಯಕ್ತಪಡಿಸಿದರು.  


    ಸೋಮವಾರ ಶಿವಮೊಗ್ಗದಲ್ಲಿರುವ ಸಂಸದರ ನಿವಾಸಕ್ಕೆ ಬೈಕ್ ರ್‍ಯಾಲಿ ಕೈಗೊಂಡಿದ್ದ ಗುತ್ತಿಗೆ ಕಾರ್ಮಿಕರು `ಭದ್ರಾವತಿಯ ಕರಾಳ ದಿನ'ದ ಅಂಗವಾಗಿ ನಗರದ  ಹೊಸಸೇತುವೆ ರಸ್ತೆ, ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ ಹಾಗು ಅಂಬೇಡ್ಕರ್ ವೃತ್ತದವರೆಗೂ ಪಂಜಿನ ಮೆರವಣಿಗೆ ನಡೆಸಿದರು. ಪ್ರಮುಖ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರ ಹಾಗು ಉಕ್ಕು ಪ್ರಾಧಿಕಾರದ ಧೋರಣೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
    ಮೆರವಣಿಗೆಯಲ್ಲಿ ಪ್ರಮುಖರಾದ ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ನೇತ್ರಾವತಿ, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಮುಖಂಡರಾದ ಎಚ್. ರವಿಕುಮಾರ್, ಅಭಿಲಾಷ್, ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ನೂರಾರು ಕಾರ್ಮಿಕರು ಪಾಲ್ಗೊಂಡಿದ್ದರು.  

ಲಯನ್ಸ್ ಸೇವಾ ಕಾರ್ಯ ಶ್ಲಾಘನೀಯ : ಬಿ. ಸಿದ್ದಬಸಪ್ಪ

ಭದ್ರಾವತಿ ಸರ್ಕಾರಿ ನೌಕರರ ಸಂಘ, ವಿಶ್ವೇಶ್ವರಾಯ ವಿದ್ಯಾಸಂಸ್ಥೆ, ಮಲ್ನಾಡ್ ಕಾನ್ಸರ್ ಆಸ್ಪತ್ರೆ, ಮೀನಾ ನರ್ಸಿಂಗ್ ಹೋಂ, ಲಯನ್ಸ್ ರಕ್ತ ನಿಧಿ ಇವರ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಯುವದಿನ, ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಕ್ಯಾನ್ಸರ್ ಜಾಗೃತಿ ಉಪನ್ಯಾಸ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಬಿ.ಎಲ್ ರಂಗಸ್ವಾಮಿ ಸ್ವಾಮಿ, ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.
    ಭದ್ರಾವತಿ: ಲಯನ್ಸ್ ಒಂದು ಸೇವಾಧಾರಿತ ಸಂಸ್ಥೆ, ತಮ್ಮ ಕಾರ್ಯದ ಒತ್ತಡದ ನಡುವೆಯೂ ಕೂಡ ಸಂಸ್ಥೆಯು ನೂರಾರು ಸೇವಾ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ. ಸ್ವಾಮಿ ವಿವೇಕಾನಂದ ಜಯಂತಿಯನ್ನು ರಕ್ತದಾನ ಹಾಗೂ ಆರೋಗ್ಯ ಶಿಬಿರ ಮೂಲಕ ನಡೆಸುತ್ತಿರುವುದು ಶ್ಲಾಘನೀಯ ಎಂದು ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯ ಅಧ್ಯಕ್ಷ ಬಿ.ಸಿದ್ದಬಸಪ್ಪ ಹೇಳಿದರು.
    ಸರ್ಕಾರಿ ನೌಕರರ ಸಂಘ, ವಿಶ್ವೇಶ್ವರಾಯ ವಿದ್ಯಾಸಂಸ್ಥೆ, ಮಲ್ನಾಡ್ ಕಾನ್ಸರ್ ಆಸ್ಪತ್ರೆ, ಮೀನಾ ನರ್ಸಿಂಗ್ ಹೋಂ, ಲಯನ್ಸ್ ರಕ್ತ ನಿಧಿ ಇವರ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಯುವದಿನ, ಉಚಿತ ವೈದ್ಯಕೀಯ ತಪಾಸಣಾ ಶಿಬಿರ, ಕ್ಯಾನ್ಸರ್ ಜಾಗೃತಿ ಉಪನ್ಯಾಸ ಹಾಗೂ ಸ್ವಯಂ ಪ್ರೇರಿತ ರಕ್ತದಾನ ಶಿಬಿರದ ಅಧ್ಯಕ್ಷತೆವಹಿಸಿ ಮಾತನಾಡಿದರು.
    ರಕ್ತದಾನ ಹಾಗು ಆರೋಗ್ಯ ಶಿಬಿರ ಜಾಗತಿಕ ಆದರ್ಶ ರೂಪಿ, ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರಿಗೆ ನಾವು ಸಲ್ಲಿಸುತ್ತಿರುವ ಗೌರವದ ಸಮರ್ಪಣೆಯಾಗಿದೆ ಎಂದು ತಿಳಿಸಲು ಹೆಮ್ಮೆಯಾಗಿದೆ. ಲಯನ್ಸ್ ಕ್ಲಬ್ ಮಾದರಿಯಲ್ಲಿ ಎಲ್ಲಾ ಸ್ವಯಂ ಸೇವಾ ಸಂಸ್ಥೆಗಳು ಸಾಮಾಜಿಕ ಸೇವಾ ಕಾರ್ಯಗಳನ್ನು ಕೈಗೊಂಡಲ್ಲಿ ಭಾರತ ದೇಶ ಆರೋಗ್ಯಪೂರ್ಣರಾಷ್ಟ್ರವಾಗುವುದರಲ್ಲಿ ಸಂಶಯವಿಲ್ಲ. ಆರೋಗ್ಯವೇ ಮಹಾಭಾಗ್ಯ, ರಕ್ತದಾನ ಮಹಾದಾನ ಎಂದು ಲಯನ್ಸ್ ಕ್ಲಬ್ ಸೇವೆಯನ್ನು ಪ್ರಶಂಸಿಸಿದರು.
    ಮಾಜಿ ಜಿಲ್ಲಾ ಗವರ್ನರ್ ದಿವಾಕರ್ ಶೆಟ್ಟಿ ಮಾತನಾಡಿ, ರಾಷ್ಟ್ರೀಯ ಯುವದಿನವನ್ನು ರಕ್ತದಾನ ಶಿಬಿರದ ಮೂಲಕ ಆಚರಿಸುತ್ತಿರುವುದು ಸಂತಸದ ವಿಷಯ ಎಂದರು.
    ವಿದ್ಯಾಸಂಸ್ಥೆ ಸಂಸ್ಥಾಪಕ ಬಿ.ಎಲ್ ರಂಗಸ್ವಾಮಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ವೈದ್ಯರಾದ ಮೊಹಮ್ಮದ್ ಇಸ್ಮಾಯಿಲ್ ಶರೀಫ್ ಹಾಗೂ ಭರತ್ ಕ್ಯಾನ್ಸರ್ ತಡೆಗಟ್ಟುವ ಮಾರ್ಗೋಪಾಯಗಳು ಹಾಗೂ ಜೀವನ ಶೈಲಿ ಕುರಿತು ಪಿಪಿಟಿ ಮೂಲಕ ಜಾಗೃತಿ ಮೂಡಿಸಿದರು.
    ರಕ್ತನಿಧಿ ಅಧ್ಯಕ್ಷ ಮೌನೇಶ್, ರವಿಚಂದ್ರ ರಕ್ತದಾನ ಶಿಬಿರ ಹಾಗು ಮೀನಾ ನರ್ಸಿಂಗ್ ಹೋಂ ವೈದ್ಯರಾದ ಡಾ.ವರ್ಷಾ ಹಾಗೂ ಹಿತೇಶ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಸಿಕೊಟ್ಟರು.
    ಪ್ರಾಂತೀಯ ಅಧ್ಯಕ್ಷ ಎಲ್. ದೇವರಾಜ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಆಶಾ ಸ್ವಾಗತಿಸಿ, ಕಾರ್ಯದರ್ಶಿ ಎಂ. ದಿವಾಕರ್ ನಿರೂಪಿಸಿ, ಬಿ.ಎಸ್ ರಾಜೇಶ್ ವಂದಿಸಿದರು. ಶ್ರೀನಿವಾಸ್, ಎಸ್.ಕೆ ಮೋಹನ್, ನಾಗರಾಜ್, ಶ್ರೀನಿವಾಸ್, ಅಶೋಕ್, ರಾಜ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಮಾಜಿ ಸೈನಿಕರಿಂದ ಭಾರತೀಯ ಭೂ ಸೇನಾ ದಿನಾಚರಣೆ

ಭದ್ರಾವತಿಯಲ್ಲಿ ಭಾರತೀಯ ಭೂ ಸೇನಾ ದಿನಾಚರಣೆ ಅಂಗವಾಗಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಸೋಮವಾರ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ದೇಶಕ್ಕಾಗಿ ಸೈನಿಕರು ಸಲ್ಲಿಸುತ್ತಿರುವ ಸೇವೆ ಹಾಗು ಅವರ ದೇಶಭಕ್ತಿ ಸ್ಮರಣೆಯೊಂದಿಗೆ ಸಂಭ್ರಮಿಸಲಾಯಿತು. ಅಲ್ಲದೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಾಗು ನ್ಯೂಟೌನ್ ದಯಾಸಾಗರ್ ಟ್ರಸ್ಟ್‌ನಲ್ಲಿ ವಯೋವೃದ್ಧರು, ಅಶಕ್ತರಿಗೆ ಹಣ್ಣು ಹಂಪಲು ವಿತರಿಸಲಾಯಿತು.
    ಭದ್ರಾವತಿ: ಭಾರತೀಯ ಭೂ ಸೇನಾ ದಿನಾಚರಣೆ ಅಂಗವಾಗಿ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಸೋಮವಾರ ನಗರದ ಪ್ರಮುಖ ರಸ್ತೆಗಳಲ್ಲಿ ಬೈಕ್ ಜಾಥಾ ನಡೆಸಿ ದೇಶಕ್ಕಾಗಿ ಸೈನಿಕರು ಸಲ್ಲಿಸುತ್ತಿರುವ ಸೇವೆ ಹಾಗು ಅವರ ದೇಶಭಕ್ತಿ ಸ್ಮರಣೆಯೊಂದಿಗೆ ಸಂಭ್ರಮಿಸಲಾಯಿತು. ಅಲ್ಲದೆ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಒಳರೋಗಿಗಳಿಗೆ ಹಾಗು ನ್ಯೂಟೌನ್ ದಯಾಸಾಗರ್ ಟ್ರಸ್ಟ್‌ನಲ್ಲಿ ವಯೋವೃದ್ಧರು, ಅಶಕ್ತರಿಗೆ ಹಣ್ಣು ಹಂಪಲು ವಿತರಿಸಲಾಯಿತು.
    ನಗರಸಭೆ ವಾಡ್ ನಂ.೨೯ರ ಸಿದ್ದಾಪುರದಲ್ಲಿರುವ ಮಾಜಿ ಸೈನಿಕರ ಸಂಘದ ಕಛೇರಿಯಿಂದ ಆರಂಭಗೊಂಡ ಬೈಕ್ ಜಾಥಾ ಜಯಶ್ರೀ ಮುಖ್ಯ ರಸ್ತೆ ಮೂಲಕ ಜಯಶ್ರೀ ವೃತ್ತ, ವಿಐಎಸ್‌ಎಲ್ ಕಾರ್ಖಾನೆ ಮುಂಭಾಗದಿಂದ ಡಬ್ಬಲ್ ರಸ್ತೆ ಮೂಲಕ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಹಾಗು ರಂಗಪ್ಪ ವೃತ್ತ ಮೂಲಕ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ತಲುಪಿತು.
    ಸಂಘದ ಅಧ್ಯಕ್ಷ ಸುಬೇದಾರ್ ಗುಲ್ಗುಲೆ, ಉಪಾಧ್ಯಕ್ಷ ಮಹೇಶ್‌ಕುಮಾರ್, ಪ್ರಧಾನ ಕಾರ್ಯದರ್ಶಿ ವೆಂಕಟಗಿರಿ, ಸಹಕಾರ್ಯದರ್ಶಿ ಹರೀಶ್, ಹಿರಿಯ ಮಾಜಿ ಸೈನಿಕರಾದ ಗೋವಿಂದಪ್ಪ,  ವಾಸುದೇವನ್, ಮುದುಗಲ ರಾಮರೆಡ್ಡಿ, ಕೃಷ್ಣೋಜಿರಾವ್, ಸುರೇಶ್, ಅಭಿಲಾಷ್, ಗಿರಿ, ಶ್ರೀಧರ, ಉಮೇಶ್, ರಮೇಶ್, ದಿನೇಶ್, ಶೇಷಾಚಲ, ಉದಯ್,  ಸ್ಥಳೀಯರಾದ ರಾಜಶೇಖರ್, ಈಶ್ವರ್ ರಾವ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

Monday, January 15, 2024

ಪಿಕಪ್ ವಾಹನ ಪಲ್ಟಿ : ೩ ಸಾವು

        ಭದ್ರಾವತಿ : ಅಡಕೆ ಕಾಯಿ ತುಂಬಿದ ಬುಲೇರೊ ಪಿಕಪ್ ವಾಹನ ಪಲ್ಟಿಯಾಗಿ ಬಿದ್ದು ೩ ಜನ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ತಾಲೂಕಿನ ಹೊಳೆಹೊನ್ನೂರು ಪಟ್ಟಣ ಸಮೀಪದ ಚಂದನಕೆರೆಯ ನಿವಾಸಿಗಳಾದ ನಾಗರಾಜ (೪೭) ಮಂಜುನಾಥ (೪೦) ಗೌತಮ್ (೧೮) ಮೃತರು.
    ಶಿಕಾರಿಪುರ ಸಮೀಪದ ಅರಿಶಿನಗೆರೆಯ ಅಡಿಕೆ ತೋಟದಲ್ಲಿ ಅಡಕೆ ಕೊಯ್ಲು ಮುಗಿಸಿಕೊಂಡು ಚಂದನಕೆರೆಗೆ ವಾಪ್ಪಾಸಾಗುವಾಗ ಚಿನ್ನಿಕಟ್ಟೆ ಜೋಗದ ಬಳಿ ಶನಿವಾರ ಸಂಜೆ ಕಾಯಿ ತುಂಬಿದ ಬುಲೇರೊ ವಾಹನಕ್ಕೆ ಆಕಳೊಂದು ಅಡ್ಡ ಬಂದಿದೆ ಆಕಳು ತಪ್ಪಿಸುವ ಭರದಲ್ಲಿ ವಾಹನದ ಟೈಯರ್ ಹೊಡೆದು ಹೋಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆಯಲ್ಲಿ ಪಲ್ಟಿಯಾಗಿದೆ.
    ಅಡಕೆ ಕೆಲಸಕ್ಕೆಂದು ಹೋದ ಮಂಜುನಾಥ್, ನಾಗರಾಜ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ ಗೌತಮ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ೭ ಜನ ಅಡಕೆ ತೋಟಕ್ಕೆ ಕಾಯಿ ತರಲು ಹೋಗಿದ್ದರು. ಬುಲೆರೊದ ಒಳಗೆ ಕುಳಿತಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಮನೆ ಮುಂಭಾಗ ಮೃತ ಸಂಬಂದಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಶವಗಳ ಅಂತಿಮ ದರ್ಶನಕ್ಕೆ ಹೋದ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರಿಂದ ಗ್ರಾಮದಲ್ಲಿ ಜನ ಗಂಜುಳಿಯಿಂದ ತುಂಬಿಹೋಯಿತ್ತು.

ಸಹ್ಯಾದ್ರಿ ಬಡಾವಣೆಯಲ್ಲಿ ಸಂಭ್ರಮದ ಸಂಕ್ರಾಂತಿ ಆಚರಣೆ

ಭದ್ರಾವತಿ ಬಿ.ಎಚ್ ರಸ್ತೆ, ಲೋಯರ್ ಹುತ್ತಾ ಸಹ್ಯಾದ್ರಿ ಬಡಾವಣೆಯಲ್ಲಿ ಸೋಮವಾರ ಅಲ್ಲಿನ ನಿವಾಸಿಗಳು ಅದ್ದೂರಿಯಾಗಿ ಸಂಕ್ರಾಂತಿ ಹಬ್ಬ ಆಚರಿಸುವ ಮೂಲಕ ಗಮನ ಸೆಳೆದರು.
    ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ ಸಹ್ಯಾದ್ರಿ ಬಡಾವಣೆಯಲ್ಲಿ ಸೋಮವಾರ ಅಲ್ಲಿನ ನಿವಾಸಿಗಳು ಅದ್ದೂರಿಯಾಗಿ ಸಂಕ್ರಾಂತಿ ಹಬ್ಬ ಆಚರಿಸುವ ಮೂಲಕ ಗಮನ ಸೆಳೆದರು.
    ಬಡಾವಣೆಯಲ್ಲಿ ಇಡೀ ದಿನ ಹಬ್ಬದ ಸಂಭ್ರಮ ಕಂಡು ಬಂದಿದ್ದು, ಬೆಳಿಗ್ಗೆಯಿಂದಲೇ ಹಬ್ಬಕ್ಕಾಗಿ ಸಿದ್ದತೆಗಳು ಆರಂಭಗೊಂಡವು. ಬಡಾವಣೆಯ ಮುಖ್ಯ ಅಡ್ಡ ರಸ್ತೆಯಲ್ಲಿ ವೇದಿಕೆ ನಿರ್ಮಿಸಲಾಗಿತ್ತು. ಸಂಜೆ ಸಂಪ್ರದಾಯದಂತೆ ಹೋರಿಗಳ ಕಿಚ್ಚಾಯಿಸುವ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ನಂತರ ಮಕ್ಕಳು, ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
    ಬಡಾವಣೆಯಲ್ಲಿರುವ ಪ್ರತಿಯೊಬ್ಬರು ಸಾಂಪ್ರದಾಯಿಕ ಉಡುಗೆ ತೊಡುಗೆಗಳೊಂದಿಗೆ ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಕೊನೆಯಲ್ಲಿ ಬಡಾವಣೆಯ ಹಿರಿಯರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.