Thursday, January 11, 2024

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಕಾಂತರಾಜ್

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಗುರುವಾರ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ ಅವರ ಸಮ್ಮುಖದಲ್ಲಿ ನೂತನ ಅಧ್ಯಕ್ಷ ಕಾಂತರಾಜ್ ಅವರನ್ನು ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಸೇರಿದಂತೆ ಸದಸ್ಯರು ಅಭಿನಂದಿಸಿದರು.
    ಭದ್ರಾವತಿ: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಾರ್ಡ್ ನಂ. ೨೮ರ ಸದಸ್ಯ ಕಾಂತರಾಜ್ ಗುರುವಾರ ಅಧಿಕಾರ ಸ್ವೀಕರಿಸಿದರು.
    ನಗರಸಭೆ ಸಭಾಂಗಣದಲ್ಲಿ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ ಅವರ ಸಮ್ಮುಖದಲ್ಲಿ ನೂತನ ಅಧ್ಯಕ್ಷ ಕಾಂತರಾಜ್ ಅವರನ್ನು ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಅಭಿನಂದಿಸಿದರು.
ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಕಾಂತರಾಜ್, ಉತ್ತಮವಾಗಿ ಕಾರ್ಯನಿರ್ವಹಿಸಲು ಎಲ್ಲಾ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಹಾಗು ಪೌರಕಾರ್ಮಿಕರು ಸೇರಿದಂತೆ ಪ್ರತಿಯೊಬ್ಬರು ಸಹಕಾರ ನೀಡುವಂತೆ ಮನವಿ ಮಾಡಿದರು.
    ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದ ಹಿರಿಯ ಸದಸ್ಯ ಬಿ.ಟಿ.ನಾಗರಾಜ್ ಮಾತನಾಡಿ, ನಗರಸಭೆ ಕೆಲಸಗಳು ಸಾರ್ವಜನಿಕರ ತೆರಿಗೆ ಹಣದಲ್ಲಿ ನಡೆಯುವುದರಿಂದ ಕಳಪೆ ಕಾಮಗಾರಿ ತಡೆಯುವುದು ನಮ್ಮ ಜವಾಬ್ದಾರಿ. ಗುಣಮಟ್ಟದ ಕೆಲಸಗಳು ನಡೆದಾಗ ಜನಪ್ರತಿನಿಧಿಗಳಿಗೆ ಜನರು ತಾವಾಗಿಯೇ ಗೌರವನೀಡುತ್ತಾರೆ. ಈ ನಿಟ್ಟಿನಲ್ಲಿ ನಾವು ಪ್ರಯತ್ನಿಸೋಣ ಎಂದರು.
    ಮಾಜಿ ಉಪಾಧ್ಯಕ್ಷ ಚನ್ನಪ್ಪ ಮಾತನಾಡಿ, ಅಭಿವೃದ್ಧಿ ಕಾರ್ಯಗಳಿಗೆ ಪಕ್ಷತೀತವಾಗಿ ಎಲ್ಲಾ ಸದಸ್ಯರ ಬೆಂಬಲವಿದೆ. ಈ ಹಿನ್ನಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸಿ, ಕಾಮಗಾರಿಗಳ ಗುಣಮಟ್ಟ ಕಾಯ್ದುಕೊಳ್ಳಲು ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.
    ಸದಸ್ಯರಾದ ಮಣಿ, ಜಾರ್ಜ್, ಅನಿತಾ ಮಲ್ಲೇಶ್, ಗೀತ ರಾಜ್‌ಕುಮಾರ್, ಆರ್. ಶ್ರೇಯಸ್(ಚಿಟ್ಟೆ), ಬಿ.ಎಂ ಮಂಜುನಾಥ್, ಪ್ರೇಮ ಬದರಿ ನಾರಾಯಣ್, ಲತಾ ಚಂದ್ರಶೇಖರ್  ಸೇರಿದಂತೆ ಹಲವರು ಹಾಜರಿದ್ದರು. ಇದೇ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಪದಾಧಿಕಾರಿಗಳು ನೂತನ ಸ್ಥಾಯಿ ಸಮಿತಿ ಅಧ್ಯಕ್ಷರನ್ನು ಸನ್ಮಾನಿಸಿ ಗೌರವಿಸಿದರು.
    ಕಾಂಗ್ರೆಸ್ ನಗರಸಭೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಹೆಚ್ಚಿನ ಸದಸ್ಯರನ್ನು ಹೊಂದಿರುವ ಕಾಂಗ್ರೆಸ್ ಅಧಿಕಾರ ಹಂಚಿಕೆ ಒಪ್ಪಂದ ಮಾಡಿಕೊಂಡಿದೆ. ಶಾಸಕ ಬಿ.ಕೆ ಸಂಗಮೇಶ್ವರ್ ಸಲಹೆಯಂತೆ ಸದಸ್ಯರು ಅಧಿಕಾರ ಹಂಚಿಕೆ ಮಾಡಿಕೊಂಡು ಮುನ್ನಡೆಯುತ್ತಿದ್ದಾರೆ. ಮೀಸಲಾತಿ ಮೊದಲ ೩೦ ತಿಂಗಳ ಅವಧಿಯಲ್ಲಿ ಇದುವರೆಗೂ ಕೆ. ಸುದೀಪ್‌ಕುಮಾರ್ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದರು. ಇದೀಗ ಕಾಂತರಾಜ್ ಅವರಿಗೆ ಬಿಟ್ಟು ಕೊಡಲಾಗಿದೆ.
    ಇದೆ ರೀತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೂ ಅಧಿಕಾರ ಹಂಚಿಕೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈಗಾಗಲೇ ೩ ಮಂದಿ ಸದಸ್ಯರು ಅಧ್ಯಕ್ಷರಾಗಿ ಅಧಿಕಾರ ಅನುಭವಿಸಿದ್ದು, ಜ.೨೨ರಂದು ನೂತನ ಅಧ್ಯಕ್ಷರ ಆಯ್ಕೆ ನಡೆಯಲಿದೆ. ಉಪಾಧ್ಯಕ್ಷರಾಗಿ ಈಗಾಗಲೇ ಒಬ್ಬ ಸದಸ್ಯರು ಅಧಿಕಾರ ಅನುಭವಿಸಿದ್ದು, ಪ್ರಸ್ತುತ ಉಪಾಧ್ಯಕ್ಷರ ಅವಧಿ ಇನ್ನೂ ೩ ತಿಂಗಳವರೆಗೆ ಮುಂದುವರೆಯಲಿದೆ ಎನ್ನಲಾಗಿದೆ.

No comments:

Post a Comment