Thursday, October 17, 2024

ಮಹರ್ಷಿ ವಾಲ್ಮೀಕಿ ಎಂದಿಗೂ ಅವಿಸ್ಮರಣೀಯ : ಫೈಜ್ ನಟರಾಜ್

ಭದ್ರಾವತಿಯಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗು ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಮತ್ತು ವಿವಿಧ ಸಂಘಟನೆಗಳ ವತಿಯಿಂದ  ನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಶೈವ ಸಭಾಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ  ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಸೇರಿದಂತೆ ಇನ್ನಿತರರು ಕಾರ್ಯಕ್ರಮ ಉದ್ಘಾಟಿಸಿದರು. 
    ಭದ್ರಾವತಿ: ಮಾನವ ಸಮಾಜಕ್ಕೆ ಎಂದಿಗೂ ಅಗತ್ಯವಿರುವ ಶ್ರೀ ರಾಮಾಯಣ ಮಾಹಾಗ್ರಂಥ ನೀಡಿರುವ ಮಹರ್ಷಿ ವಾಲ್ಮೀಕಿ ಎಂದಿಗೂ ಅವಿಸ್ಮರಣೀಯ. ಅವರ ಆದರ್ಶ ಮೌಲ್ಯಗಳನ್ನು ನಾವುಗಳು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಚಳ್ಳಕೆರೆ, ತಳುಕು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಫೈಜ್ ನಟರಾಜ್ ಹೇಳಿದರು. 
    ಅವರು ಗುರುವಾರ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ನಗರಸಭೆ ಹಾಗು ಮಹರ್ಷಿ ವಾಲ್ಮೀಕಿ ನಾಯಕ ಸಮಾಜ ಮತ್ತು ವಿವಿಧ ಸಂಘಟನೆಗಳ ವತಿಯಿಂದ  ನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ವೀರಶೈವ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ  ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು. 
    ಈ ಮಾನವ ಸಮಾಜಕ್ಕೆ ಒಂದು ಉತ್ತಮ ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ನೀಡಿದ ಸಮಾಜ ವಾಲ್ಮೀಕಿ ಸಮಾಜವಾಗಿದ್ದು, ಪ್ರತಿಯೊಬ್ಬರ ನಡುವಿನ ಭಾವನೆಗಳು, ಮೌಲ್ಯಗಳು, ಸಂಘರ್ಷಗಳಿಗೆ ರಾಮಾಯಣ ಸೂಕ್ತ ಉತ್ತರವಾಗಿದೆ. ಈ ಹಿನ್ನಲೆಯಲ್ಲಿ ಭೂತ ಕಾಲ, ವರ್ತಮಾನ ಹಾಗು ಭವಿಷ್ಯಕ್ಕೂ ರಾಮಾಯಣ ಪ್ರಸ್ತುತವಾಗಿದೆ. ರಾಮಾಯಣ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ಬೇರೆ ಬೇರೆಯಾಗಿ ನೋಡಲು ಸಾಧ್ಯವಿಲ್ಲ ಎಂದರು. 
    ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಾಲ್ಮೀಕಿ ಸಮಾಜ ಇನ್ನೂ ಹೆಚ್ಚು ಸಂಘಟಿತಗೊಳ್ಳಬೇಕಾಗಿದೆ. ನಗರದಲ್ಲಿ ವಾಲ್ಮೀಕಿ ಸಮುದಾಯ ಭವನ ನಿರ್ಮಾಣ ವಿಳಂಬವಾಗುತ್ತಿದ್ದು, ಶಾಸಕರು ನೆನೆಗುದಿಗೆ ಬಿದ್ದಿರುವ ಕಾಮಗಾರಿ ಶೀಘ್ರವಾಗಿ ಮುಕ್ತಾಯಗೊಳಿಸಿ ಸಮುದಾಯ ಭವನ ಉದ್ಘಾಟಿಸುವ ವಿಶ್ವಾಸವಿದೆ ಎಂದರು. 
    ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಗರಸಭೆ ಅಧ್ಯಕ್ಷ ಮಣಿ ಎಎನ್‌ಎಸ್,  ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ವಾಲ್ಮೀಕಿ ನಾಯಕ ಸಮಾಜದ ತಾಲೂಕು ಅಧ್ಯಕ್ಷ ಬಸವರಾಜ್ ಬಿ. ಆನೇಕೊಪ್ಪ, ತಹಸೀಲ್ದಾರ್ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ  ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ,   ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸವಿತ, ನಗರಸಭೆ ಸದಸ್ಯರಾದ ಲತಾ ಚಂದ್ರಶೇಖರ್, ಸರ್ವಮಂಗಳ ಭೈರಪ್ಪ, ಟಿಪ್ಪು ಸುಲ್ತಾನ್, ಮಂಜುಳ ಸುಬ್ಬಣ್ಣ, ಪರ್ವೇಜ್, ಸೂಡ ಸದಸ್ಯ  ಎಚ್. ರವಿಕುಮಾರ್, ವಾಲ್ಮೀಕಿ ಸಮಾಜದ ಗೌರವಾಧ್ಯಕ್ಷ ಬಸವರಾಜಪ್ಪ, ಪ್ರಧಾನ ಕಾರ್ಯದರ್ಶಿ ಶಿವಾನಂದ, ಪ್ರಮುಖರಾದ ರಾಜೇಂದ್ರ, ಈಶ್ವರಪ್ಪ, ವಿ. ವಿನೋದ್, ವೆಂಕಟೇಶ್  ಉಜ್ಜನಿಪುರ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಮಾಜ ಕಲ್ಯಾಣ ಇಲಾಖೆ ಶಶಿಕುಮಾರ್ ಕಾರ್ಯಕ್ರಮ ನಿರೂಪಿಸಿದರು.
    ಇದಕ್ಕೂ ಬಿ.ಎಚ್ ರಸ್ತೆ ಹುತ್ತಾ ಕಾಲೋನಿ ಬಸ್ ನಿಲ್ದಾಣದಿಂದ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರ ಹಾಗು ಡೊಳ್ಳು ಕುಣಿತ, ವೀರಗಾಸೆ ಕಲಾ ತಂಡಗಳೊಂದಿಗೆ ಉತ್ಸವ ಮೆರವಣಿಗೆ ನಡೆಸಲಾಯಿತು. ಕರ್ನಾಟಕ ಗ್ರಾಮೀಣಿ ಮೂಲಕ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಮೆರವಣಿಗೆಗೆ ಚಾಲನೆನೀಡಿದರು. ಅಂಬೇಡ್ಕರ್ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಹಾಗು ರಂಗಪ್ಪ ವೃತ್ತ ಮೂಲಕ ತಾಲೂಕು ಕಛೇರಿ ರಸ್ತೆಯಲ್ಲಿ ಸಾಗಿ ಮೆರವಣಿಗೆ ಸಭಾ ಭವನ ತಲುಪಿತು. 

No comments:

Post a Comment