Saturday, January 6, 2024

ಸರ್ಕಾರದ ಮಾರ್ಗಸೂಚಿಯನ್ವಯ ಕನ್ನಡ ನಾಮಫಲಕ ಅಳವಡಿಕೆಗಾಗಿ ಹೋರಾಟ

ಹೋರಾಟ ಹತ್ತಿಕ್ಕಲು ಹೋರಾಟಗಾರರ ಬಂಧನ ಸರಿಯಲ್ಲ : ಕರವೇ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿದಂತೆ ಬಂಧಿಸಲಾಗಿರುವ ಕನ್ನಡ ಹೋರಾಟಗಾರರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ವೇದಿಕೆ ಭದ್ರಾವತಿ ತಾಲೂಕು ಘಟಕದ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ : ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಸೇರಿದಂತೆ ಬಂಧಿಸಲಾಗಿರುವ ಕನ್ನಡ ಹೋರಾಟಗಾರರನ್ನು ತಕ್ಷಣ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿ ವೇದಿಕೆ ತಾಲೂಕು ಘಟಕದ ವತಿಯಿಂದ ಶನಿವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ಗೃಹ ಸಚಿವರಿಗೆ  ಮನವಿ ಸಲ್ಲಿಸಲಾಯಿತು.
    ತಾಲೂಕು ಕಛೇರಿ ಮುಂಭಾಗ ವೇದಿಕೆ ತಾಲೂಕು ಅಧ್ಯಕ್ಷ ಎಂ. ಪರಮೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಪ್ರಮುಖರು, ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಕಡ್ಡಾಯವಾಗಿ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕೆಂದು ಒತ್ತಾಯಿಸಿ ವೇದಿಕೆ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಜಾಗೃತಿ ರ್‍ಯಾಲಿಗೆ ವಿನಾಕಾರಣ ಪೊಲೀಸರು ತಡೆಯೊಡ್ಡಿ ವೇದಿಕೆಯ ಸುಮಾರು ೧ ಸಾವಿರ ಕಾರ್ಯಕರ್ತರನ್ನು ಬಂಧಿಸಿದ್ದು, ಅಲ್ಲದೆ ಮಧ್ಯ ರಾತ್ರಿ ಟಿ.ಎ ನಾರಾಯಣಗೌಡ ಅವರನ್ನು ಬಲವಂತಾಗಿ ಬಂಧಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಸರ್ಕಾರದ ಮಾರ್ಗಸೂಚಿಯನ್ವಯ ನಾಮಫಲಕ ಅಳವಡಿಕೆಯಲ್ಲಿ ಕನ್ನಡ ಭಾಷೆಗೆ ಶೇ.೬೦ ಹಾಗು ಇತರೆ ಭಾಷೆಗೆ ಶೇ.೪೦ರಷ್ಟು ಸ್ಥಾನ ಮೀಸಲಿಡಬೇಕೆಂಬುದು ವೇದಿಕೆ ಆಶಯವಾಗಿದ್ದು, ಬಹಳಷ್ಟು ಜನರು ಇದನ್ನು ಪಾಲಿಸದೆ ನಿರ್ಲಕ್ಷ್ಯವಹಿಸಿದ್ದಾರೆ. ಹಲವಾರು ಬಾರಿ ಮನವಿ ಮಾಡಿಕೊಂಡರೂ ಸಹ ಯಾವುದೇ ಪ್ರಯೋಜನವಾಗಿರುವುದಿಲ್ಲ. ಅಲ್ಲದೆ ಈ ಸಂಬಂಧ ಸರ್ಕಾರಕ್ಕೂ ಸಹ ಮನವಿ ಸಲ್ಲಿಸಲಾಗಿರುತ್ತದೆ. ಈ ಹಿನ್ನಲೆಯಲ್ಲಿ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಿಕೊಳ್ಳುವಂತೆ ಜಾಗೃತಿ ಮೂಡಿಸಲು ವೇದಿಕೆ ರ್‍ಯಾಲಿ ಹಮ್ಮಿಕೊಂಡಿತ್ತು. ಆದರೆ ಸರ್ಕಾರ ಹೋರಾಟ ಹತ್ತಿಕ್ಕಲು ಪೊಲೀಸರನ್ನು ಬಳಸಿಕೊಂಡು ಕಾರ್ಯಕರ್ತರು ಹಾಗು ಟಿ.ಎ ನಾರಾಯಣಗೌಡ ಅವರನ್ನು ಬಂಧಿಸಿ ಅಪರಾಧಿಗಳಂತೆ ಬಿಂಬಿಸಿ ಕಿರುಕುಳ ನೀಡಿರುವುದು ಸರಿಯಲ್ಲ. ತಕ್ಷಣ ಬಂಧಿತರನ್ನು ಬಿಡುಗಡೆಗೊಳಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
    ಪ್ರಮುಖರಾದ ಯುವ ಘಟಕದ ಅಧ್ಯಕ್ಷ ಎಚ್. ರಾಮಕೃಷ್ಣ, ಸಂಘಟನಾ ಕಾರ್ಯದರ್ಶಿ ಎನ್. ರಮೇಶ್, ತುಕಾರಾಂ, ಎ. ಮಂಜುನಾಥ್, ಪ್ರವೀಣ, ಮುನ್ನಾಬಾಯ್, ಉಮೇಶ್ ಮತ್ತು ಪವನ್ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಚಲುವಯ್ಯ ನಿಧನ

ಚಲುವಯ್ಯ
    ಭದ್ರಾವತಿ : ಮೂಲತಃ ತಾಲೂಕಿನ ಗುಡ್ಡದ ಕೆಂಚಮ್ಮನ ಹಳ್ಳಿ ಗ್ರಾಮದ ಸಮೀಪದ ಶ್ರೀನಿವಾಸಪುರ ನಿವಾಸಿ ಚಲುವಯ್ಯ(೬೫) ನಿಧನ ಹೊಂದಿದರು.
    ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು, ಸೊಸೆ, ಅಳಿಯಂದಿರು ಹಾಗು ಮೊಮ್ಮಕ್ಕಳು ಇದ್ದರು. ಈ ಹಿಂದೆ ನಗರಸಭೆ ವ್ಯಾಪ್ತಿಯ ವೇಲೂರುಶೆಡ್‌ನಲ್ಲಿ ವಾಸವಾಗಿದ್ದರು. ಇವರ ಅಂತ್ಯಕ್ರಿಯೆ ಶ್ರೀನಿವಾಸಪುರ ಗ್ರಾಮದಲ್ಲಿ ಶನಿವಾರ ಸಂಜೆ ನಡೆಯಿತು.  

ಸೇವೆಯನ್ನು ಕರ್ತವ್ಯವೆಂದು ಭಾವಿಸಿ : ಬಿ.ಕೆ ಮೋಹನ್

ಭದ್ರಾವತಿ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗು ಬಡ ಕಾರ್ಮಿಕರಿಗೆ ವಸ್ತ್ರ ವಿತರಣೆ ಸಮಾರಂಭ ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಉದ್ಘಾಟಿಸಿದರು.
    ಭದ್ರಾವತಿ: ಮಾನವರಾಗಿ ಹುಟ್ಟಿದ ಪ್ರತಿಯೊಬ್ಬರೂ ಸಹ ಸೇವೆಯನ್ನು ಕರ್ತವ್ಯ ಎಂದು ಭಾವಿಸಬೇಕು.  ಕ್ಷೇತ್ರದಲ್ಲಿ ಹಲವರು ಶ್ರೀಮಂತರಿದ್ದಾರೆ. ಆದರೆ ದಾನಿಗಳ ಸಂಖ್ಯೆ ಕಡಿಮೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು.
    ನಗರದ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ವತಿಯಿಂದ ಆಯೋಜಿಸಲಾಗಿದ್ದ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ಹಾಗು ಬಡ ಕಾರ್ಮಿಕರಿಗೆ ವಸ್ತ್ರ ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
    ಬಡತನದಲ್ಲಿ ಹುಟ್ಟಿದರೂ ಶ್ರಮಪಟ್ಟು ಶ್ರೀಮಂತರಾಗಬೇಕು. ಅದೇರೀತಿ ಶ್ರೀಮಂತಿಕೆ ಬಂದ ಮೇಲೆ ದಾನಿಗಳಾಗಬೇಕು. ದೇವರು ಕೊಟ್ಟು ನೋಡುತ್ತಾನೆ. ಕೊಡದೆಯೂ ನೋಡುತ್ತಾನೆ. ಕೊಟ್ಟಾಗ ದಾನ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಆಗ ಮಾತ್ರ ದೇವರು ಮೆಚ್ಚುತ್ತಾನೆ ಎಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ ಮಾತನಾಡಿ, ಅನೇಕ ಅನುದಾನ ರಹಿತ ಶಾಲೆಗಳ ಅಭಿವೃದ್ಧಿಯಲ್ಲಿ ಸಂಘ-ಸಂಸ್ಥೆಗಳ ಕೊಡುಗೆ ಮಹತ್ವದ್ದಾಗಿದೆ. ಸಂಘ-ಸಂಸ್ಥೆಗಳ ಸಹಕಾರವಿಲ್ಲದಿದ್ದರೆ ಶಿಕ್ಷಣ ವ್ಯವಸ್ಥೆ ಅತಂತ್ರವಾಗುತ್ತದೆ ಎಂದರು.
    ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಟ್ರಸ್ಟಿ ತಸ್ಮೈ ಕಿರಣ್ ಅಧ್ಯಕ್ಷತೆ ವಹಿಸಿದ್ದರು.
    ಪೇಪರ್‌ಟೌನ್ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಸಿ. ಬಸವರಾಜ್, ಜ್ಞಾನೇಶ್ವರಿ ವಿದ್ಯಾವರ್ಧಕ ಶಾಲೆಯ ಮುಖ್ಯೋಪಾಧ್ಯಾಯ ಬಸವರಾಜ್, ಸಾಹಿತಿ ಜೆ.ಎನ್ ಬಸವರಾಜಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ನಂದಿನಿ ಮಲ್ಲಿಕಾರ್ಜುನ್ ಪ್ರಾರ್ಥಿಸಿದರು. ಅಪೇಕ್ಷ ಮಂಜುನಾಥ್ ಸ್ವಾಗತಿಸಿದರು. ಅಣ್ಣಪ್ಪ ನಿರೂಪಿಸಿ, ವಂದಿಸಿದರು.