Monday, January 15, 2024

ಪಿಕಪ್ ವಾಹನ ಪಲ್ಟಿ : ೩ ಸಾವು

        ಭದ್ರಾವತಿ : ಅಡಕೆ ಕಾಯಿ ತುಂಬಿದ ಬುಲೇರೊ ಪಿಕಪ್ ವಾಹನ ಪಲ್ಟಿಯಾಗಿ ಬಿದ್ದು ೩ ಜನ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ತಾಲೂಕಿನ ಹೊಳೆಹೊನ್ನೂರು ಪಟ್ಟಣ ಸಮೀಪದ ಚಂದನಕೆರೆಯ ನಿವಾಸಿಗಳಾದ ನಾಗರಾಜ (೪೭) ಮಂಜುನಾಥ (೪೦) ಗೌತಮ್ (೧೮) ಮೃತರು.
    ಶಿಕಾರಿಪುರ ಸಮೀಪದ ಅರಿಶಿನಗೆರೆಯ ಅಡಿಕೆ ತೋಟದಲ್ಲಿ ಅಡಕೆ ಕೊಯ್ಲು ಮುಗಿಸಿಕೊಂಡು ಚಂದನಕೆರೆಗೆ ವಾಪ್ಪಾಸಾಗುವಾಗ ಚಿನ್ನಿಕಟ್ಟೆ ಜೋಗದ ಬಳಿ ಶನಿವಾರ ಸಂಜೆ ಕಾಯಿ ತುಂಬಿದ ಬುಲೇರೊ ವಾಹನಕ್ಕೆ ಆಕಳೊಂದು ಅಡ್ಡ ಬಂದಿದೆ ಆಕಳು ತಪ್ಪಿಸುವ ಭರದಲ್ಲಿ ವಾಹನದ ಟೈಯರ್ ಹೊಡೆದು ಹೋಗಿ ವಾಹನ ಚಾಲಕನ ನಿಯಂತ್ರಣ ತಪ್ಪಿ ವಾಹನ ರಸ್ತೆಯಲ್ಲಿ ಪಲ್ಟಿಯಾಗಿದೆ.
    ಅಡಕೆ ಕೆಲಸಕ್ಕೆಂದು ಹೋದ ಮಂಜುನಾಥ್, ನಾಗರಾಜ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ ಗೌತಮ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ೭ ಜನ ಅಡಕೆ ತೋಟಕ್ಕೆ ಕಾಯಿ ತರಲು ಹೋಗಿದ್ದರು. ಬುಲೆರೊದ ಒಳಗೆ ಕುಳಿತಿದ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿದ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಮನೆ ಮುಂಭಾಗ ಮೃತ ಸಂಬಂದಿಗಳ ಆಕ್ರಂದನ ಮುಗಿಲು ಮುಟ್ಟಿತ್ತು. ಶವಗಳ ಅಂತಿಮ ದರ್ಶನಕ್ಕೆ ಹೋದ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರಿಂದ ಗ್ರಾಮದಲ್ಲಿ ಜನ ಗಂಜುಳಿಯಿಂದ ತುಂಬಿಹೋಯಿತ್ತು.

ಸಹ್ಯಾದ್ರಿ ಬಡಾವಣೆಯಲ್ಲಿ ಸಂಭ್ರಮದ ಸಂಕ್ರಾಂತಿ ಆಚರಣೆ

ಭದ್ರಾವತಿ ಬಿ.ಎಚ್ ರಸ್ತೆ, ಲೋಯರ್ ಹುತ್ತಾ ಸಹ್ಯಾದ್ರಿ ಬಡಾವಣೆಯಲ್ಲಿ ಸೋಮವಾರ ಅಲ್ಲಿನ ನಿವಾಸಿಗಳು ಅದ್ದೂರಿಯಾಗಿ ಸಂಕ್ರಾಂತಿ ಹಬ್ಬ ಆಚರಿಸುವ ಮೂಲಕ ಗಮನ ಸೆಳೆದರು.
    ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ ಸಹ್ಯಾದ್ರಿ ಬಡಾವಣೆಯಲ್ಲಿ ಸೋಮವಾರ ಅಲ್ಲಿನ ನಿವಾಸಿಗಳು ಅದ್ದೂರಿಯಾಗಿ ಸಂಕ್ರಾಂತಿ ಹಬ್ಬ ಆಚರಿಸುವ ಮೂಲಕ ಗಮನ ಸೆಳೆದರು.
    ಬಡಾವಣೆಯಲ್ಲಿ ಇಡೀ ದಿನ ಹಬ್ಬದ ಸಂಭ್ರಮ ಕಂಡು ಬಂದಿದ್ದು, ಬೆಳಿಗ್ಗೆಯಿಂದಲೇ ಹಬ್ಬಕ್ಕಾಗಿ ಸಿದ್ದತೆಗಳು ಆರಂಭಗೊಂಡವು. ಬಡಾವಣೆಯ ಮುಖ್ಯ ಅಡ್ಡ ರಸ್ತೆಯಲ್ಲಿ ವೇದಿಕೆ ನಿರ್ಮಿಸಲಾಗಿತ್ತು. ಸಂಜೆ ಸಂಪ್ರದಾಯದಂತೆ ಹೋರಿಗಳ ಕಿಚ್ಚಾಯಿಸುವ ಮೂಲಕ ಹಬ್ಬಕ್ಕೆ ಚಾಲನೆ ನೀಡಲಾಯಿತು. ನಂತರ ಮಕ್ಕಳು, ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
    ಬಡಾವಣೆಯಲ್ಲಿರುವ ಪ್ರತಿಯೊಬ್ಬರು ಸಾಂಪ್ರದಾಯಿಕ ಉಡುಗೆ ತೊಡುಗೆಗಳೊಂದಿಗೆ ಹಬ್ಬದ ಆಚರಣೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಕೊನೆಯಲ್ಲಿ ಬಡಾವಣೆಯ ಹಿರಿಯರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಹಿರಿಯ ಅಥ್ಲೆಟಿಕ್ ಕ್ರೀಡಾಪಟು ಬಿ. ನಂಜೇಗೌಡರಿಗೆ ರಾಜ್ಯಮಟ್ಟದ ಪಂದ್ಯಾವಳಿಯಲ್ಲಿ ಬಹುಮಾನ

ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಪತ್ರ, ಪಾರಿತೋಷಕ, ತೃತೀಯ ಸ್ಥಾನದೊಂದಿಗೆ ೨ ಕಂಚಿನ ಪದಕ

ಬಿ. ನಂಜೇಗೌಡ
    ಭದ್ರಾವತಿ: ನಗರದ ಹೊಸಮನೆ ನಿವಾಸಿ, ಹಿರಿಯ ಕ್ರೀಡಾಪಟು ಬಿ. ನಂಜೇಗೌಡರು ದಕ್ಷಿಣ ಕನ್ನಡ ಜಿಲ್ಲಾ ಮಾಸ್ಟರ್‍ಸ್ ಅಥ್ಲೆಟಿಕ್ ಅಸೋಸಿಯೇಷನ್ ವತಿಯಿಂದ ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ಜ.೧೩ ಮತ್ತು ೧೪ರಂದು ಆಯೋಜಿಸಲಾಗಿದ್ದ ೪೨ನೇ ಸ್ಟೇಟ್ ಮಾಸ್ಟರ್‍ಸ್ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಪಂದ್ಯಾವಳಿಯ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
    ೭೫ ವರ್ಷ ಮೇಲ್ಪಟ್ಟವರ ವಯೋಮಾನದ ವಿಭಾಗದ ೧೦೦ಮೀ. ಹರ್ಡಲ್ಸ್ ಹಾಗು ೧೫೦೦ ಮೀಟರ್ ಓಟ ಹಾಗು ಉದ್ದ ಜಿಗಿತದಲ್ಲಿ ೨.೫೯ ಮೀಟರ್ ಗುರಿ ಸಾಧಿಸುವ ಮೂಲಕ ಪ್ರಥಮ ಸ್ಥಾನದೊಂದಿಗೆ ಪ್ರಶಸ್ತಿ ಪತ್ರ ಹಾಗು ಪಾರಿತೋಷಕ ಬಹುಮಾನ ಪಡೆದುಕೊಂಡಿದ್ದಾರೆ.
    ಇದೆ ರೀತಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಾಸ್ಟರ್‍ಸ್ ಅಸೋಸಿಯೇಷನ್ ವತಿಯಿಂದ ಜ.೬ ಮತ್ತು ೭ರಂದು ಹೊಸಕೋಟೆ ಚನ್ನಭೈರೇಗೌಡ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪಂದ್ಯಾವಳಿಯ ೭೫ ವರ್ಷ ಮೇಲ್ಪಟ್ಟವರ ವಯೋಮಾನದ ವಿಭಾಗದ ೪೦೦ ಮೀಟರ್ ಓಟದಲ್ಲಿ ಹಾಗು ಉದ್ದ ಜಿಗಿತದಲ್ಲಿ ತೃತೀಯ ಸ್ವಾನದೊಂದಿಗೆ ಪ್ರಶಸ್ತಿ ಪತ್ರ ಹಾಗು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ.  
    ನಂಜೇಗೌಡರು ರಾಷ್ಟ್ರ, ರಾಜ್ಯ ಹಾಗು ಜಿಲ್ಲಾಮಟ್ಟದ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಇದುವರೆಗೂ ಸುಮಾರು ೪೫ ಪದಕಗಳನ್ನು ಪಡೆದುಕೊಂಡಿದ್ದಾರೆ. ಯುವ ಸಮುದಾಯಕ್ಕೆ ಸ್ಪೂರ್ತಿದಾಯಕರಾಗಿದ್ದಾರೆ. ಇವರ ಕ್ರೀಡಾ ಸಾಧನೆಗೆ ಕ್ರೀಡಾಭಿಮಾನಿಗಳು ಸೇರಿದಂತೆ ನಗರದ ಗಣ್ಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕರಿಂದ ಬೈಕ್ ಜಾಥಾ : ಕಹಿಯಾದ ವರ್ಷದ ಮೊದಲ ಹಬ್ಬ

ಸಿಹಿಯೊಂದಿಗೆ ಸಂಭ್ರಮ ಉಂಟು ಮಾಡುವ ಬದಲು ನೋವಿನ ಕಹಿ ದಿನವಾದ ಸಂಕ್ರಾಂತಿ

ಕೇಂದ್ರ ಸರ್ಕಾರ ಹಾಗೂ ಉಕ್ಕು ಪ್ರಾಧಿಕಾರ ಆಡಳಿತ ವರ್ಗ ಕೈಕೊಂಡಿರುವ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶಾಶ್ವತವಾಗಿ ಮುಚ್ಚುವ ತೀರ್ಮಾನದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಹೋರಾಟ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಸೋಮವಾರ ಶಿವಮೊಗ್ಗ ಸಂಸದರ ನಿವಾಸದವರೆಗೆ ಬೈಕ್ ರ್‍ಯಾಲಿ ಹಮ್ಮಿಕೊಳ್ಳಲಾಗಿತ್ತು.  
    ಭದ್ರಾವತಿ: ಕೇಂದ್ರ ಸರ್ಕಾರ ಹಾಗೂ ಉಕ್ಕು ಪ್ರಾಧಿಕಾರ ಆಡಳಿತ ವರ್ಗ ಕೈಕೊಂಡಿರುವ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಶಾಶ್ವತವಾಗಿ ಮುಚ್ಚುವ ತೀರ್ಮಾನದ ವಿರುದ್ಧ ಗುತ್ತಿಗೆ ಕಾರ್ಮಿಕರು ಕಾರ್ಖಾನೆ ಮುಂಭಾಗ ನಡೆಸುತ್ತಿರುವ ಹೋರಾಟ ಒಂದು ವರ್ಷ ಪೂರೈಸುತ್ತಿರುವ ಹಿನ್ನಲೆಯಲ್ಲಿ ಸೋಮವಾರ ಶಿವಮೊಗ್ಗ ಸಂಸದರ ನಿವಾಸದವರೆಗೆ ಬೈಕ್ ರ್‍ಯಾಲಿ ಹಮ್ಮಿಕೊಳ್ಳಲಾಗಿತ್ತು.  
    ಕಾರ್ಖಾನೆ ಮುಂಭಾಗದಲ್ಲಿ ಬೆಳಿಗ್ಗೆ ಜಮಾಯಿಸಿದ ಗುತ್ತಿಗೆ ಕಾರ್ಮಿಕರು ಘೋಷಣೆಗಳನ್ನು ಕೂಗಿ ಜಾಥಾ ಆರಂಭಿಸಿದರು. ಮಹಿಳಾ ಕಾರ್ಮಿಕರು ಬಸ್ ಮೂಲಕ ತೆರಳಿದರು. ನಂತರ ಸಂಸದ ನಿವಾಸದ ಮುಂಭಾಗ ಪ್ರತಿಭಟನಾ ಧರಣಿ ನಡೆಸುವ ಮೂಲಕ ತಮ್ಮ ನೋವುಗಳನ್ನು ಸಂಸದರ ಮುಂದೆ ತೋರ್ಪಡಿಸಿಕೊಂಡರು.
    ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಜಿ ಸುರೇಶ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಹಾಗು ಪದಾಧಿಕಾರಿಗಳು, ನಿವೃತ್ತ ಕಾರ್ಮಿಕ ನರಸಿಂಹಚಾರ್ ಸೇರಿದಂತೆ ಇನ್ನಿತರರು ಜಾಥಾ ನೇತೃತ್ವ ವಹಿಸಿದ್ದರು. ವರ್ಷದ ಮೊದಲ ಹಬ್ಬ ಸಂಕ್ರಾಂತಿ ಗುತ್ತಿಗೆ ಕಾರ್ಮಿಕರ ಬಾಳಿಗೆ ಸಿಹಿಯೊಂದಿಗೆ ಸಂಭ್ರಮ ಉಂಟು ಮಾಡುವ ಬದಲು ನೋವಿನ ಕಹಿ ದಿನವಾಯಿತು.