Friday, October 25, 2024

ಅ.೨೬ರಂದು `ಮಂಥನ ಭದ್ರಾವತಿ'

   

 ಭದ್ರಾವತಿ: ಮಂಥನ ಕರ್ನಾಟಕ ವತಿಯಿಂದ ಭದ್ರೆಯ ಮಡಿಲು, ಅರಿವಿನ ಕಡಲು `ಮಂಥನ ಭದ್ರಾವತಿ' ಮೊದಲ ಕಾರ್ಯಕ್ರಮ ಅ.೨೬ರ ಸಂಜೆ ೬ ಗಂಟೆಗೆ ನಯನ ಆಸ್ಪತ್ರೆ ಸಭಾಂಗಣದಲ್ಲಿ ಆಯೋಜಿಸಲಾಗಿದೆ. 
    ಸ್ತ್ರೀ ರೋಗ ತಜ್ಞೆ ಡಾ. ವೀಣಾ ಎಸ್. ಭಟ್ ಮತ್ತು  ರಾಷ್ಟ್ರೀಯ ಸ್ವಯಂ ಸೇವಕ ಸಂಘ, ದಕ್ಷಿಣ ಪ್ರಾಂತ್ಯ ಪ್ರಚಾರ ಪ್ರಮುಖ್ ರಾಜೇಶ್ ಪದ್ಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಗೆ ೧೦ ಸಾವಿರ ರು. ದಂಡ..!

ಭದ್ರಾವತಿಯಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಗೆ ನ್ಯಾಯಾಲಯದ ಸಂಖ್ಯೆ ಸಿಸಿ೬೭೩೦/೨೪ರ ಪ್ರಕರಣದಲ್ಲಿ ಅ.೨೩ರಂದು ೧೦,೦೦೦ ರು. ದಂಡ ವಸೂಲಾತಿ ಮಾಡಲಾಗಿದೆ. ವಾಹನ ಸವಾರರಿಗೆ ಎಚ್ಚರಿಸುವ ಉದ್ದೇಶದಿಂದ ಈ ಕುರಿತು ಜಿಲ್ಲಾ ಪೊಲೀಸ್ ತನ್ನ ಎಕ್ಸ್ ಖಾತೆಯಲ್ಲಿ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಂಡಿದೆ. 
    ಭದ್ರಾವತಿ: ನಗರದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಯೊಬ್ಬರಿಗೆ ಸಂಚಾರಿ ಠಾಣೆ ಉಪನಿರೀಕ್ಷಕರು(ಪಿಎಸ್‌ಐ) ಗರಿಷ್ಠ ೧೦,೦೦೦ ರು. ದಂಡ ವಿಧಿಸಿ ವಸೂಲಿ ಮಾಡಿರುವ ಘಟನೆ ನಡೆದಿದೆ. 
    ನ್ಯಾಯಾಲಯದ ಸಂಖ್ಯೆ ಸಿಸಿ೬೭೩೦/೨೪ರ ಪ್ರಕರಣದಲ್ಲಿ ಅ.೨೩ರಂದು ೧೦,೦೦೦ ರು. ದಂಡ ವಸೂಲಾತಿ ಮಾಡಲಾಗಿದೆ. ವಾಹನ ಸವಾರರಿಗೆ ಎಚ್ಚರಿಸುವ ಉದ್ದೇಶದಿಂದ ಈ ಕುರಿತು ಜಿಲ್ಲಾ ಪೊಲೀಸ್ ತನ್ನ ಎಕ್ಸ್ ಖಾತೆಯಲ್ಲಿ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಂಡಿದೆ.  
    ದೇಶದಲ್ಲಿ ಯಾವುದೇ ವ್ಯಕ್ತಿ ಕುಡಿದು ವಾಹನ ಚಲಾವಣೆ ಮಾಡ್ತಿದ್ದರೆ ಸಂಚಾರಿ ಪೊಲೀಸರು ಆತನ ಮೇಲೆ ಸೆಕ್ಷನ್ ೧೮೫ ರಡಿ ದೂರು ದಾಖಲಿಸುತ್ತಾರೆ.  ಬಿಎಸಿ ಪರೀಕ್ಷೆ ಮಾಡಿದ ನಂತರ ದಂಡ ವಿಧಿಸಬಹುದು. ವಾಹನವನ್ನು ಸಹ ಕಸ್ಟಡಿಗೆ ತೆಗೆದುಕೊಳ್ಳಬಹುದು. ಮೋಟಾರು ವಾಹನ ಕಾಯ್ದೆಯ ಸೆಕ್ಷನ್ ೨೦೭ ರ ಅಡಿಯಲ್ಲಿ ನಿಮ್ಮ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ. ವಾಹನದ ಎಲ್ಲಾ ದಾಖಲೆಗಳನ್ನು ಸಹ ಸಂಚಾರ ಪೊಲೀಸರು ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರೆ. ಏಳು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ೨,೦೦೦ ರೂಪಾಯಿಯಿಂದ ೧೦,೦೦೦ ರೂಪಾಯಿವರೆಗೆ ದಂಡ ವಿಧಿಸಲಾಗುತ್ತದೆ.  
    ಇನ್ನು ಬೆಂಗಳೂರಿನಲ್ಲಿ ಕುಡಿದು ವಾಹನ ಚಾಲನೆ ಮಾಡಿದರೆ ಮೊದಲ ಬಾರಿ ೧೦,೦೦೦ ರೂಪಾಯಿ ದಂಡ ಅಥವಾ ೬ ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಎರಡನೇ ಬಾರಿ ಅಪರಾಧಕ್ಕೆ ೧೫,೦೦೦ ರೂಪಾಯಿ ದಂಡ ಅಥವಾ ೨ ವರ್ಷಗಳವರೆಗೆ ಜೈಲು ಶಿಕ್ಷೆಯಾಗುತ್ತದೆ.  

ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಪುರತತ್ವ ಇಲಾಖೆ ಅಭಿಯಂತರ ತಾರಕೇಶ್ ಭೇಟಿ : ಪರಿಶೀಲನೆ

ದೇವಸ್ಥಾನದ ಮೇಲ್ಛಾವಣಿಯಲ್ಲಿ ಮಳೆ ನೀರು ಸೋರಿಕೆ : ಶೀಘ್ರ ಕಾಮಗಾರಿ ಆರಂಭ 

ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ಧ ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಪುರತತ್ವ ಇಲಾಖೆ ಸಂರಕ್ಷಣಾ ವಿಭಾಗದ ಅಭಿಯಂತರ ತಾರಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಭದ್ರಾವತಿ: ಮುಜರಾಯಿ ಇಲಾಖೆಗೆ ಒಳಪಟ್ಟಿರುವ ಹಳೇನಗರದ ಪುರಾಣ ಪ್ರಸಿದ್ಧ ಕ್ಷೇತ್ರಪಾಲಕ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಪುರತತ್ವ ಇಲಾಖೆ ಸಂರಕ್ಷಣಾ ವಿಭಾಗದ ಅಭಿಯಂತರ ತಾರಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ದೇವಸ್ಥಾನದ ಮೇಲ್ಛಾವಣಿ ಶಿಥಿಲಗೊಂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿರುವ ಕುರಿತು ದೇವಸ್ಥಾನದ ಅರ್ಚಕರು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಗಮನಕ್ಕೆ ತಂದಿದ್ದರು. ಈ ಹಿನ್ನಲೆಯಲ್ಲಿ ಶಾಸಕರು ಪುರತತ್ವ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ತಾರಕೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಶೀಘ್ರ ಕಾಮಗಾರಿ ಆರಂಭಿಸುವುದಾಗಿ ತಿಳಿಸಿದ್ದು, ಈ ಸಂಬಂಧ ಕಾಮಗಾರಿ ವೆಚ್ಚದ ಅಂದಾಜು ಪಟ್ಟಿ ಸಲ್ಲಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ. ಕಂದಾಯ ನಿರೀಕ್ಷಕ ಪ್ರಶಾಂತ್, ದೇವಸ್ಥಾನದ ಸಹಾಯಕ ಅರ್ಚಕ ಶ್ರೀನಿವಾಸ್, ಮುಖಂಡರಾದ ನರಸಿಂಹಚಾರ್, ಬಿ.ಎಸ್ ಗಣೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.   

ಚನ್ನಪಟ್ಟಣ ಚುನಾವಣೆ ಉಸ್ತುವಾರಿಯಾಗಿ ಎಸ್. ಮಂಜುನಾಥ್ ನೇಮಕ


ಎಸ್. ಮಂಜುನಾಥ್ 
    ಭದ್ರಾವತಿ: ನಗರದ ಜನ್ನಾಪುರ ನಿವಾಸಿ, ಕೆಪಿಸಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಸಂಚಾಲಕ ಎಸ್. ಮಂಜುನಾಥ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯಾಗಿ ನೇಮಕಗೊಂಡಿದ್ದಾರೆ. 
    ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಒ.ಬಿ.ಸಿ, ಅಲ್ಪಸಂಖ್ಯಾತ ಉಸ್ತುವಾರಿ ಕೆ.ರಾಜು ಹಾಗು ಎ.ಐ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಷ್ಟ್ರೀಯ ಅಧ್ಯಕ್ಷ ರಾಜೇಶ್ ಲಿಲೋತಿಯರವರ ಆದೇಶದ ಮೇರೆಗೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿರ್ದೇಶನದಂತೆ  ಕೆ.ಪಿ.ಸಿ.ಸಿ ಪರಿಶಿಷ್ಟ ಜಾತಿ ವಿಭಾಗದ ರಾಜ್ಯಾಧ್ಯಕ್ಷ ಆರ್ ಧರ್ಮಸೇನ ಮಂಜುನಾಥ್‌ರವರನ್ನು ನೇಮಕಗೊಳಿಸಿದ್ದಾರೆ. 
     ಪರಿಶಿಷ್ಟಜಾತಿ ಸಮುದಾಯದ ಜನರನ್ನು ಗುರುತಿಸಿ ಅವರನ್ನು ವಿಶ್ವಾಸಕ್ಕೆ ಪಡೆದು ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವುದು, ಪಕ್ಷದ ಅಭ್ಯರ್ಥಿಪರ ವ್ಯಾಪಕ ಪ್ರಚಾರ ಕೈಗೊಂಡು ಗೆಲುವಿಗೆ ಶ್ರಮಿಸುವಂತೆ ಆದೇಶ ಪತ್ರದಲ್ಲಿ ಸೂಚಿಸಲಾಗಿದೆ. 
    ಮಂಜುನಾಥ್‌ರವರು ಕರ್ನಾಟಕ ರಾಜ್ಯ ಮಾದಿಗ ಸಮಾಜ(ಕೆಆರ್‌ಎಂಎಸ್)ದ ರಾಜ್ಯಾಧ್ಯಕ್ಷರಾಗಿದ್ದು, ಹಲವಾರು ವರ್ಷಗಳಿಂದ ಪರಿಶಿಷ್ಟರ ಪರವಾದ ಹೋರಾಟಗಳಲ್ಲಿ ತೊಡಗಿಸಿಕೊಂಡು ಗುರುತಿಸಿಕೊಂಡಿದ್ದಾರೆ.   

ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ವಿನ್ಯಾಸಕ್ಕೆ ಅನುಮತಿ ನೀಡಿ

ಭದ್ರಾವತಿ ತಾಲೂಕು ವ್ಯಾಪ್ತಿಯಲ್ಲಿ ಹಾಗೂ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರದಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿರುವ ಹಿನ್ನಲೆಯಲ್ಲಿ ಮುಂದಿನ ಪ್ರಕ್ರಿಯೆಗೆ ಪೂರಕವಾಗುವಂತೆ ಕಾಮಗಾರಿಗಳ ವಿನ್ಯಾಸಕ್ಕೆ ಅನುಮತಿ ನೀಡುವಂತೆ ನಗರದ ಜನ್ನಾಪುರ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್‌ರವರಿಗೆ ಮನವಿ ಸಲ್ಲಿಸಲಾಗಿದೆ. 
    ಭದ್ರಾವತಿ : ತಾಲೂಕು ವ್ಯಾಪ್ತಿಯಲ್ಲಿ ಹಾಗೂ ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಹಕಾರದಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿರುವ ಹಿನ್ನಲೆಯಲ್ಲಿ ಮುಂದಿನ ಪ್ರಕ್ರಿಯೆಗೆ ಪೂರಕವಾಗುವಂತೆ ಕಾಮಗಾರಿಗಳ ವಿನ್ಯಾಸಕ್ಕೆ ಅನುಮತಿ ನೀಡುವಂತೆ ನಗರದ ಜನ್ನಾಪುರ ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕ ಕೆ. ನಾಗೇಂದ್ರ ಪ್ರಸಾದ್‌ರವರಿಗೆ ಮನವಿ ಸಲ್ಲಿಸಲಾಗಿದೆ. 
    ಶ್ರೀ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್‌ರವರು ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿರುವ ಹಿನ್ನಲೆಯಲ್ಲಿ ಕೃತಜ್ಞತೆ ಸಲ್ಲಿಸಿದ್ದು, ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನ ಉಂಬ್ಲೆಬೈಲು ಕಲ್ಲಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯ ಇತರೆ ೨೮ ಗ್ರಾಮಗಳನ್ನೊಳಗೊಂಡ ಸುಮಾರು ೪೮ ಕೋಟಿ ರೂ ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಈ ಯೋಜನೆಯ ವಿನ್ಯಾಸಕ್ಕೆ (ಡಿಸೈನ್) ಅನುಮತಿ ನೀಡುವಂತೆ ಮನವಿ ಮಾಡಲಾಗಿದೆ. 
    ಶಿವಮೊಗ್ಗ ಜಿಲ್ಲೆ ಕುಂಸಿ ಮತ್ತು ೮೯ ಜನ ವಸತಿಗಳನ್ನೊಳಗೊಂಡ ಹಾಗೂ ಗಾಜನೂರು ಮತ್ತು ೧೫ ಜನ ವಸತಿಗಳನ್ನೊಳಗೊಂಡ ಸುಮಾರು ೧೨೫ ಕೋಟಿ ರು. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಈ ಯೋಜನೆಯ ವಿನ್ಯಾಸಕ್ಕೆ (ಡಿಸೈನ್) ಅನುಮತಿ ನೀಡುವುದು ಹಾಗು ತಾಲೂಕಿನ ಆನವೇರಿ ಮತ್ತು ೩೭ ಇತರೆ ಗ್ರಾಮಗಳಿಗೆ ಸುಮಾರು ೩೬.೧೧ ಕೋಟಿ ರು. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಈ ಯೋಜನೆಯ ವಿನ್ಯಾಸಕ್ಕೆ (ಡಿಸೈನ್) ಅನುಮತಿ ನೀಡುವಂತೆ ಕೋರಲಾಗಿದೆ. 
    ತಾಲೂಕಿನ ಮಾರಶೆಟ್ಟಿಹಳ್ಳಿ ಮತ್ತು ಇತರೆ ೨೩ ಗ್ರಾಮಗಳಿಗೆ ೨೫ ಕೋಟಿ ರು. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಯೋಜನೆಯ ವಿನ್ಯಾಸಕ್ಕೆ (ಡಿಸೈನ್) ಅನುಮತಿ ನೀಡುವಂತೆ ವಿನಂತಿಸಲಾಗಿದೆ.