Saturday, October 26, 2024

ಬಸ್ ನಿಲ್ದಾಣದ ಬಳಿ ಓ.ಸಿ ಮಟ್ಕಾ ಜೂಜಾಟ : ಪ್ರಕರಣ ದಾಖಲು

    ಭದ್ರಾವತಿ: ನಗರದ ಬೈಪಾಸ್ ರಸ್ತೆ, ನಗರಸಭೆ ವ್ಯಾಪ್ತಿಯ ಉಜ್ಜನಿಪುರ ಸರ್ಕಲ್ ಸಮೀಪದ ಬಸ್ ನಿಲ್ದಾಣದ ಬಳಿ ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಾಗಿದೆ. 
    ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಬಸವರಾಜ್ ಅ.೨೫ರ ಸಂಜೆ ೫ ಗಂಟೆ ಸಮಯದಲ್ಲಿ ಗಸ್ತು ಕರ್ತವ್ಯದಲ್ಲಿದ್ದಾಗ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಓ.ಸಿ ಮಟ್ಕಾ ಜೂಜಾಟದಲ್ಲಿ ತೊಡಗಿರುವುದು ಕಂಡು ಬಂದಿದೆ. ಈ ಹಿನ್ನಲೆಯಲ್ಲಿ ನ್ಯಾಯಾಲಯದ ಅನುಮತಿ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 

ಮನೆಯಲ್ಲಿ ದಾಸ್ತಾನು ಮಾಡಿದ್ದ ೫ ಕೆ.ಜಿ ಒಣ ಗಾಂಜಾ ಸೊಪ್ಪು ವಶ : ಪ್ರಕರಣ ದಾಖಲು


    ಭದ್ರಾವತಿ : ವ್ಯಕ್ತಿಯೋರ್ವ ಮನೆಯಲ್ಲಿ ದಾಸ್ತಾನು ಮಾಡಿದ್ದ ಸುಮಾರು ೫ ಕೆ.ಜಿ ತೂಕದ ಒಣ ಗಾಂಜಾ ಸೊಪ್ಪನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ನಡೆದಿದೆ. 
    ತಾಲೂಕಿನ ಅಗರದಹಳ್ಳಿ ಗ್ರಾಮದ ಮನೆಯೊಂದರಲ್ಲಿ ಗಾಂಜಾ ಸೊಪ್ಪನ್ನು ದಾಸ್ತಾನು ಮಾಡಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜುರವರ ನೇತೃತ್ವದ ತಂಡ ದಾಳಿ ನಡೆಸಿದ್ದು, ಸುಮಾರು ೨.೮೦ ಲಕ್ಷ ರು. ಮೌಲ್ಯದ ೫ ಕೆ.ಜಿ ೫೭೪ ಗ್ರಾಂ ತೂಕದ ಒಣ ಗಾಂಜಾ ಸೊಪ್ಪು ಪತ್ತೆಯಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. 

ಮನೆಯ ಮೇಲ್ಛಾವಣಿ ಶೀಟ್ ತೆಗೆದು ಚಿನ್ನಾಭರಣ ಕಳ್ಳತನ



    ಭದ್ರಾವತಿ : ಮನೆಯ ಮೇಲ್ಛಾವಣಿ ಶೀಟ್ ತೆಗೆದು ಒಳಗೆ ಪ್ರವೇಶಿಸಿ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಆನವೇರಿ ಗ್ರಾಮದಲ್ಲಿ ನಡೆದಿದೆ. 
    ಶೇಖರಪ್ಪ ಎಂಬುವರರ ಮನೆಯಲ್ಲಿ ಕಳ್ಳತನ ನಡೆದಿದ್ದು, ಅ.೨೪ರಂದು ಮಧ್ಯಾಹ್ನ ೧.೩೦ರ ಸಮಯದಲ್ಲಿ ಮನೆಗೆ ಬೀಗ ಹಾಕಿಕೊಂಡು ಶಿವಮೊಗ್ಗಕ್ಕೆ ಹೋಗಿದ್ದು,  ಸಂಜೆ ೬.೩೦ರ ಸಮಯಕ್ಕೆ ಮನೆಗೆ ಬಂದಾಗ ಕಳ್ಳತನ ಮಾಡಿರುವುದು ಕಂಡು ಬಂದಿದೆ. ಸುಮಾರು ೩೫ ಸಾವಿರ ರು. ಮೌಲ್ಯದ ಚಿನ್ನ ಹಾಗು ಸುಮಾರು ೧೫ ಸಾವಿರ ರು. ಮೌಲ್ಯದ ಬೆಳ್ಳಿಯ ಆಭರಣಗಳನ್ನು ಕಳ್ಳತನ ಮಾಡಲಾಗಿದೆ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮನುಷ್ಯನ ದೈಹಿಕ, ಬುದ್ಧಿ ಬೆಳವಣಿಗೆಗೆ ಅಯೋಡಿನ್ ಅತಿ ಅವಶ್ಯಕ : ಕೆ. ಸುಶೀಲಬಾಯಿ

ಭದ್ರಾವತಿ ತಾಲೂಕಿನ ಅರೆಬಿಳಿಚಿ ಗ್ರಾಮದ ಶ್ರೀ ಬಸವೇಶ್ವರ ಪ್ರೌಢಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗು ಅರೆಬಿಳಿಚಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಒಕ್ಕೂಟದ ಸಹಯೋಗದೊಂದಿಗೆ ಸ್ವಾಸ್ಥ್ಯ ಸಂಕಲ್ಪ ಹಾಗು ಅಯೋಡಿನ್ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ: ಅಯೋಡಿನ್ ಮನುಷ್ಯನ ದೈಹಿಕ ಹಾಗು ಬುದ್ಧಿ ಬೆಳವಣಿಗೆಯಲ್ಲಿ ಅತಿ ಅವಶ್ಯಕವಾದ ಸೂಕ್ಷ್ಮ ಪೋಷಕಾಂಶವಾಗಿದ್ದು, ಇದು ನೈಸರ್ಗಿಕವಾಗಿ ಅಯೋಡಿನ್‌ಯುಕ್ತ ಉಪ್ಪಿನಲ್ಲಿ ದೊರೆಯುತ್ತದೆ ಎಂದು ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕೆ. ಸುಶೀಲಬಾಯಿ ಹೇಳಿದರು. 
    ಅವರು ತಾಲೂಕಿನ ಅರೆಬಳಿಚಿಯಲ್ಲಿರುವ ಶ್ರೀ ಬಸವೇಶ್ವರ ಪ್ರೌಢಶಾಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ ಹಾಗು ಅರೆಬಿಳಿಚಿ ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಒಕ್ಕೂಟದ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ವಾಸ್ಥ್ಯ ಸಂಕಲ್ಪ ಹಾಗು ಅಯೋಡಿನ್ ಸಪ್ತಾಹ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾಹಿತಿ ನೀಡಿದರು. 
    ನಿರಂತರ ಮಳೆಯಿಂದಾಗಿ ಭೂಮಿಯ ಮೇಲ್ಮೈಯಲ್ಲಿರುವ ಅಯೋಡಿನ್ ಅಂಶ ಕೊಚ್ಚಿ ಹೋಗಿ ಹಳ್ಳ-ಕೊಳ್ಳ, ನದಿಗಳ ಸಮುದ್ರ ಸೇರುತ್ತದೆ. ಈ ಹಿನ್ನಲೆಯಲ್ಲಿ ಗೆಡ್ಡೆ ರೂಪದಲ್ಲಿರುವ ಮೂಲಂಗಿ, ಗೆಣಸು, ಕ್ಯಾರೇಟ್, ಬೀಟ್‌ರೋಟ್, ಕೋಸು ಇತ್ಯಾದಿ ತರಕಾರಿಗಳಲ್ಲಿ ಅತಿ ಕಡಿಮೆ ಪ್ರಮಾಣದಲ್ಲಿ ದೊರೆಯುತ್ತದೆ. ಸಮುದ್ರದ ಮೀನು ಇತ್ಯಾದಿಗಳಲ್ಲಿ ಇದು ಹೆಚ್ಚಾಗಿ ದೊರೆಯುತ್ತದೆ ಎಂದರು. 
    ಅಯೋಡಿನ್ ಪೋಷಕಾಂಶ ಕೊರತೆಯಿಂದ ಗರ್ಭಿಣಿ ಮಹಿಳೆಯರಲ್ಲಿ ಗರ್ಭಪಾತ, ಬುದ್ಧಿಮಾಂಧ್ಯ, ಕಿವುಡತನ, ಮೂಕತನ ಹಾಗು ಮೆಳ್ಳೆ ಕಣ್ಣು ಶಿಶುವಿನ ಜನನ ಸಾಧ್ಯತೆ ಹೆಚ್ಚಾಗಿದೆ. ಅಲ್ಲದೆ ಮಕ್ಕಳಲ್ಲಿ ಕುಬ್ಜತನ, ಗ್ರಹಣ ಶಕ್ತಿಯ ಕೊರತೆ, ಕುಂಠಿತ ಬುದ್ಧಿ ಬೆಳವಣಿಗೆ, ವಯಸ್ಕರಲ್ಲಿ ಅತಿಯಾದ ಆಯಾಸ, ಹೆಣ್ಣು ಮಕ್ಕಳ ಋತು ಚಕ್ರದಲ್ಲಿ ಸಮಸ್ಯೆಗಳು ಕಂಡು ಬರುತ್ತವೆ. ಸ್ಥೂಲಕಾಯ ಹಾಗು ಥೈರಾಯಿಡ್ ಗ್ರಂಥಿಯ ಗಳಗಂಡ ಅಥವಾ ಗಾಯಿಟರ್ ಎಂಬ ಕೊರತೆ ಕಾಯಿಲೆಯು ಕಾಡುತ್ತದೆ ಎಂದರು. 
    ಸರ್ಕಾರ ಎಲ್ಲರಿಗೂ ಅಯೋಡಿನ್ ಪೋಷಕಾಂಶ ವಿತರಿಸುವ ಉದ್ದೇಶದಿಂದ ಉಪ್ಪಿನಲ್ಲಿ ಅಯೋಡಿನ್ ಅಂಶ ಸೇರಿಸಿ `ಅಯೋಡಿನ್‌ಯುಕ್ತ ಉಪ್ಪು' ಮಾರಾಟಕ್ಕೆ ಅವಕಾಶ ನೀಡಿದೆ. ನಾವುಗಳು ಅಯೋಡಿನ್‌ಯುಕ್ತ ಉಪ್ಪನ್ನು ಖರೀದಿಸಬೇಕು. ಅಲ್ಲದೆ ಗಾಳಿಯಲ್ಲಿ ಅಯೋಡಿನ್ ಅಂಶ ಹಾಳಾಗದಂತೆ ಭದ್ರವಾದ ಮುಚ್ಚಳವಿರುವ ಡಬ್ಬದಲ್ಲಿ ಸಂಗ್ರಹಿಸಿ ಬಳಸಬೇಕೆಂದರು. 
ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ಶುಚಿ, ಪೋಷಕಾಂಶಯುಕ್ತ ಆಹಾರ ಹಾಗು ಶುದ್ಧ ನೀರಿನ ಸೇವನೆ, ಪರಿಸರ ಸ್ವಚ್ಛತೆಯ ಕಾಳಜಿ ಮತ್ತು ಪರಿಸರ ರಕ್ಷಣೆ ಅತಿ ಮುಖ್ಯ ಎಂದರು. 
    ಶಾಲಾ ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು, ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಒಕ್ಕೂಟದ ಪ್ರತಿನಿಧಿಗಳು, ವಿದ್ಯಾಥಿಗಳು ಉಪಸ್ಥಿತರಿದ್ದರು. 

ಎಸ್. ಬಂಗಾರಪ್ಪ ಹುಟ್ಟುಹಬ್ಬ : ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಣೆ

ಹಿಂದುಳಿದ ವರ್ಗಗಳ ನಾಯಕ, ಬಡವರ ಬಂಧು, ಮಾಜಿ ಮುಖ್ಯಮಂತ್ರಿ ದಿವಂಗತ ಸಾರೇಕೊಪ್ಪ ಬಂಗಾರಪ್ಪನವರ ೯೨ನೇ ಹುಟ್ಟುಹಬ್ಬದ ಅಂಗವಾಗಿ ಭದ್ರಾವತಿಯಲ್ಲಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಗ್ರಾಮಾಂತರ ವಿಭಾಗದ ವತಿಯಿಂದ ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಿಸಲಾಯಿತು. 
    ಭದ್ರಾವತಿ : ಹಿಂದುಳಿದ ವರ್ಗಗಳ ನಾಯಕ, ಬಡವರ ಬಂಧು, ಮಾಜಿ ಮುಖ್ಯಮಂತ್ರಿ ದಿವಂಗತ ಸಾರೇಕೊಪ್ಪ ಬಂಗಾರಪ್ಪನವರ ೯೨ನೇ ಹುಟ್ಟುಹಬ್ಬದ ಅಂಗವಾಗಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಗ್ರಾಮಾಂತರ ವಿಭಾಗದ ವತಿಯಿಂದ ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಿಸಲಾಯಿತು. 
    ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಮಾರ್ಗದರ್ಶನದಲ್ಲಿ ಹಿರಿಯೂರಿನ ಅಮಲಾ ಮಾತಾ ಆಸ್ಪತ್ರೆಯಲ್ಲಿ ವಿಭಾಗದ ಅಧ್ಯಕ್ಷ ಎಂ. ರಮೇಶ್ ಶೆಟ್ಟಿ ನೇತೃತ್ವದಲ್ಲಿ ಒಳ ರೋಗಿಗಳಿಗೆ ಬ್ರೆಡ್, ಹಣ್ಣು-ಹಂಪಲು ವಿತರಿಸಲಾಯಿತು. ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರು ತಮ್ಮ ಅಧಿಕಾರಾವಧಿಯಲ್ಲಿ ಜಾರಿಗೊಳಿಸಿದ್ದ ಜನಪರ ಯೋಜನೆಗಳ ಮೂಲಕ ಅವರನ್ನು ಸ್ಮರಿಸಲಾಯಿತು. 
    ಶಂಕರಘಟ್ಟ ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಟಿ.ಡಿ ಶಶಿಕುಮಾರ್, ಶಂಕರ್ ರೈಸ್ ಮಿಲ್ ಮಾಲೀಕ ನಂದೀಶ್ ಕುಮಾರ್, ತಾಲೂಕು ಬಗರ್ ಹುಕುಂ ಸಮಿತಿ ಸದಸ್ಯ ಮುರುಗೇಶ್ ಹಾಗು ಆಸ್ಪತ್ರೆ ವೈದ್ಯರು, ದಾದಿಯರು ಹಾಗು ಸಿಬ್ಬಂದಿ ವರ್ಗದವರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ವಿದ್ಯಾರ್ಥಿ ನಿಲಯ ಕಾಮಗಾರಿ ಶೀಘ್ರ ಮುಕ್ತಾಯಗೊಂಡು ಸದ್ಬಳಕೆಯಾಗಲಿ : ಬಿ.ಕೆ ಮೋಹನ್

ಭದ್ರಾವತಿ ನಗರಸಭೆ ವ್ಯಾಪ್ತಿಯ ಸೀಗೇಬಾಗಿ ಹನುಮಂತ ನಗರದಲ್ಲಿ ಶನಿವಾರ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಡಾ.ಬಿ.ಅರ್ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯ ಕಾಮಗಾರಿಗೆ ಗುದ್ದಲಿ ಪೂಜೆ ಹಾಗು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರ ಹುಟ್ಟುಹಬ್ಬ ಕಾರ್ಯಕ್ರಮ ಆಯೋಜಿಸಲಾಗಿತ್ತು. 
    ಭದ್ರಾವತಿ : ಶಾಸಕ ಬಿ.ಕೆ ಸಂಗಮೇಶ್ವರ್ ಬಡ ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸಿ ಅವರ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮೆಟ್ರಿಕ್ ಪೂರ್ವ ಡಾ.ಬಿ.ಅರ್ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯ ಮಂಜೂರಾತಿ ಮಾಡಿಸಿದ್ದು, ಶೀಘ್ರ ಕಾಮಗಾರಿ ಮುಕ್ತಾಯಗೊಳಿಸುವ ಮೂಲಕ ಇದರ ಸದ್ಬಳಕೆಯಾಗಬೇಕೆಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಹೇಳಿದರು. 
    ಅವರು ಶನಿವಾರ ನಗರಸಭೆ ವ್ಯಾಪ್ತಿಯ ಸೀಗೇಬಾಗಿ ಹನುಮಂತ ನಗರದಲ್ಲಿ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಸರ್ಕಾರಿ ಮೆಟ್ರಿಕ್ ಪೂರ್ವ ಡಾ.ಬಿ.ಅರ್ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪನವರ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
  ಸಮಾಜ ಕಲ್ಯಾಣ ಇಲಾಖೆ ಅನುದಾನ ಸುಮಾರು ೩.೫ ಕೋ. ರು. ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಿಸಲು ಕ್ರಮ ಕೈಗೊಂಡಿದ್ದು, ಬಂಗಾರಪ್ಪನವರ ಮುಂದಿನ ಜನ್ಮದಿನ ಅಚರಣೆಯೊಳಗೆ ಕಟ್ಟಡ ಪೂರ್ಣಗೊಂಡು ಉದ್ಘಾಟನೆಯಾಗಬೇಕು. ವಿದ್ಯೆ ಎಂಬುದು ಕದಿಯಲಾಗದ ಸಂಪತ್ತು. ವಿದ್ಯೆ ಕಲಿಯಲು ಪ್ರತಿಯೊಬ್ಬರು ಸಹಕಾರ ನೀಡಬೇಕು ಎಂದರು. 
    ನಗರಸಭೆ ಪ್ರಭಾರ ಅಧ್ಯಕ್ಷ ಎಂ.ಮಣಿ ಎಎನ್‌ಎಸ್,  ಸದಸ್ಯರಾದ ಚನ್ನಪ್ಪ, ಅನಿತಾ ಮಲ್ಲೇಶ್, ಬಷೀರ್ ಅಹಮ್ಮದ್, ಮಹಮ್ಮದ್ ಯೂಸುಫ್, ಮುಖಂಡರಾದ ಜಿಂಜಾನಾಯ್ಕ, ನಾಗಣ್ಣ, ಶಿವಾಜಿರಾವ್, ರಾಮಣ್ಣ, ಅಣ್ಣಾದೊರೈ, ಸಂಪತ್, ಶ್ರೀನಿವಾಸ, ಅರಿಫ್, ಚಿನ್ನಯ್ಯ, ಶೇಖರ್,  ಶಾಲಾ ಅಡುಗೆ ತಯಾರಕರಾದ ಮೋಹಿನಿ, ಪದ್ಮ, ರತ್ನ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.