Monday, November 25, 2024

ನ.೨೭ರಂದು ಕನ್ನಡ ರಾಜ್ಯೋತ್ಸವ

ಭದ್ರಾವತಿ : ಸಿದ್ಧರೂಢನಗರದ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.೨೭ರ ಬುಧವಾರ ಸಂಗೀತ ನೃತ್ಯ ಸಂಭ್ರಮ, ವಿವಿಧ ಕ್ಷೇತ್ರಗಳ ಗಣ್ಯರಿಗೆ ಸನ್ಮಾನ ಹಾಗು ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ. 
ಬೆಳಿಗ್ಗೆ ೯ ಗಂಟೆಗೆ ಉದ್ಯಮಿಗಳಾದ ಎ. ಮಾಧು ಮತ್ತು ಮಾದೇವಪ್ಪ ದ್ವಜಾರೋಹರಣ ನೆರವೇರಿಸಲಿದ್ದು, ನಿವೃತ್ತ ಸಹಾಯಕ ಪೊಲೀಸ್ ನಿರೀಕ್ಷಕ ಕೃಷ್ಣಮೂರ್ತಿ, ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಸದಸ್ಯರಾದ ಎ. ಸಚ್ಚಿದಾನಂದ ಗುಪ್ತ, ಎಚ್.ಪಿ ಶಿವಪ್ಪ ಮತ್ತು ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಎಸ್.ಆರ್ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 
ಸಂಜೆ ೫ ಗಂಟೆಯಿಂದ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ ಹಾಗು ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ೬ರಿಂದ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ. ಡಾ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಯುವ ಮುಖಂಡರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್, ಗೋಪಾಲ್, ವೈ. ರೇಣುಕಮ್ಮ, ಆರ್. ಶ್ರೇಯಸ್ಸು, ಬಿ.ಎಂ ಸಂತೋಷ್, ಕಾಂತರಾಜ್, ಎಚ್. ರವಿಕುಮಾರ್, ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. 

ದೇಶದ ಪ್ರಮುಖ ಸ್ವಯಂ ಸೇವಾ ಸಂಸ್ಥೆಗಳ ಸಾಲಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ : ಪ್ರಕಾಶ್ ವೈ. ನಾಯ್ಕ್

ಭದ್ರಾವತಿಯಲ್ಲಿ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿ ಕುರಿತು ಯೋಜನಾಧಿಕಾರಿ ಪ್ರಕಾಶ್ ವೈ. ನಾಯ್ಕ್ ಮಾಹಿತಿ ನೀಡಿದರು.  
    ಭದ್ರಾವತಿ: ೧೯೮೨ರಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರ ಸಾಮರ್ಥ್ಯ ವರ್ಧನೆಗಾಗಿ ಪ್ರಾರಂಭಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಮಾರು ೪೦ ವರ್ಷಗಳ ಸುಧೀರ್ಘ ಪ್ರಯಾಣದಲ್ಲಿ ಸ್ವಾವಲಂಬನೆ, ಆರ್ಥಿಕ ಸಾಮರ್ಥ್ಯ, ಕೌಶಲ್ಯಭಿವೃದ್ಧಿಯನ್ನು ಸಬಲೀಕರಣದ ವ್ಯಾಖ್ಯೆಯಲ್ಲಿ ಸೇರಿಸಿಕೊಂಡಿದೆ. ಪ್ರಸ್ತುತ ದೇಶದ ಪ್ರಮುಖ ಸ್ವಯಂ ಸೇವಾ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ ಎಂದು ತಾಲೂಕಿನ ಯೋಜನೆ-೧ರ ಯೋಜನಾಧಿಕಾರಿ  ಪ್ರಕಾಶ್ ವೈ. ನಾಯ್ಕ್ ಹೇಳಿದರು. 
    ಅವರು ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯ ವೈಖರಿ ಕುರಿತು ಮಾಹಿತಿ ನೀಡಿದರು. ತಾಲೂಕಿನಲ್ಲಿ ೨೦೦೭-೦೮ ರಿಂದ ಸುಮಾರು ೧೭ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಗ್ರಾಮಗಳಲ್ಲಿ ಸುಸ್ಥಿರ ಪ್ರಗತಿಯ ಅನೇಕ ಮಾದರಿಗಳನ್ನು ಪ್ರಾರಂಭಿಸಿದೆ. ತನ್ನ ಪಾಲುದಾರ ಕುಟುಂಬಗಳ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಯು ಹಲವು ಕಾರ್ಯಕ್ರಮಗಳನ್ನು ರೂಪಿಸುತ್ತಿದೆ. ಬ್ಯಾಂಕುಗಳು, ವಿಮಾ ಕಂಪನಿಗಳು ಮತ್ತು ಸರ್ಕಾರದ ಪ್ರತಿನಿಧಿಯಾಗಿ ಬಡವರು ಯಾವುದೇ ತೊಂದರೆ ಇಲ್ಲದೆ ಸೌಲಭ್ಯಗಳನ್ನು ಪಡೆಯಲು ನೆರವಿಗನಾಗಿ ಯೋಜನೆಯು ಯಶಸ್ವಿಯಾಗಿದೆ ಎಂದರು. 
    ಸಾಮೂಹಿಕವಾಗಿ ಜನರಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸಲು ಗ್ರಾಮಗಳಲ್ಲಿ ಸತ್ಯನಾರಾಯಣ ಪೂಜೆ ಹಾಗೂ ವರಮಹಲಕ್ಷ್ಮಿ ವ್ರತವನ್ನು ಆಯೋಜನೆ ಮಾಡಿ ಜನರಲ್ಲಿ ಧಾರ್ಮಿಕ ಸಂಸ್ಕೃತಿಯ ಮತ್ತು ಸಂಪ್ರದಾಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ೫೧ ಜನ ಸೇವಾಪ್ರತಿನಿಧಿಗಳು, ೩೫ ಜನ ಸಿ.ಎಸ್.ಸಿ ಸೇವಾದಾರರು, ೩೫ ಜನ ಸುವಿಧಾ ಸಹಾಯಕರು, ೨ ಜನ ಶುದ್ಧಗಂಗಾ ಪ್ರೇರೇಕರು ೨೪ ಜನ ಖಾಯಂ ಸಿಬ್ಬಂದಿಗಳು ತಾಲೂಕು ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದರು. 
    ನ.೨೬ರಿಂದ ಲಕ್ಷ ದೀಪೋತ್ಸವ : 
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪ್ರತಿ ವರ್ಷದಂತೆ ಈ ಬಾರಿ ನ.೨೬ ರಿಂದ ೩೦ರವರೆಗೆ ಲಕ್ಷದೀಪೋತ್ಸವ ಜರುಗಲಿದ್ದು,  ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ನ.೨೯ ಮತ್ತು ೩೦ ರಂದು ೯೨ನೇ ವರ್ಷದ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳು, ವಸ್ತು ಪ್ರದರ್ಶನ, ಲಲಿತ ಕಲಾಗೋಷ್ಠಿ ಹಾಗು ಸಂಗೀತ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತಿವೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗುವಂತೆ ಕೋರಿದರು. 
    ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಿ.ಆರ್ ಬದರಿನಾರಾಯಣ ಶ್ರೇಷ್ಠಿ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಕಣ್ಣಪ್ಪ ಮಾತನಾಡಿ, ಯೋಜನೆಯ ಕಾರ್ಯ ವೈಖರಿಗಳನ್ನು ಪ್ರಶಂಸಿಸಿದರು. ಯೋಜನೆ-೨ರ ಯೋಜನಾಧಿಕಾರಿ ಅಜಯ್‌ಕುಮಾರ್ ಉಪಸ್ಥಿತರಿದ್ದರು.