Thursday, December 5, 2024

ತುರ್ತು ಚಿಕಿತ್ಸೆಗೆ ಆಗಮಿಸಿದ ಯುವಕನಿಗೆ ಚಿಕಿತ್ಸೆ ನೀಡದೆ ಕರ್ತವ್ಯ ಲೋಪ

ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಶುಶ್ರೂಷಕಿ ಅಧಿಕಾರಿ ವಿರುದ್ಧ ದೂರು 

ತುರ್ತು ಚಿಕಿತ್ಸೆಗಾಗಿ ಭದ್ರಾವತಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಯುವಕನಿಗೆ ಸೂಕ್ತ ಚಿಕಿತ್ಸೆ ನೀಡದೆ ಕರ್ತವ್ಯ ಲೋಪವೆಸಗಿರುವ ಘಟನೆ ಗುರುವಾರ ಸಂಜೆ ನಡೆದಿದೆ. 
    ಭದ್ರಾವತಿ: ತುರ್ತು ಚಿಕಿತ್ಸೆಗಾಗಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಗೆ ಆಗಮಿಸಿದ ಯುವಕನಿಗೆ ಸೂಕ್ತ ಚಿಕಿತ್ಸೆ ನೀಡದೆ ಕರ್ತವ್ಯ ಲೋಪವೆಸಗಿರುವ ಘಟನೆ ಗುರುವಾರ ಸಂಜೆ ನಡೆದಿದೆ. 
    ಅನಿಲ ಎಂಬ ಯುವಕನಿಗೆ ಎಂಎಲ್‌ಸಿ ಪ್ರಕರಣದಡಿಯಲ್ಲಿ ಚಿಕಿತ್ಸೆಗಾಗಿ ಸಂಜೆ ೪ ಗಂಟೆ ಸಮಯದಲ್ಲಿ ಆಸ್ಪತ್ರೆಗೆ ಕರೆ ತಂದಾಗ ಸೂಕ್ತ ಚಿಕಿತ್ಸೆಯನ್ನೂ ನೀಡದೆ, ವೈದ್ಯರಿಗೂ ತಿಳಿಸದೆ ಉದಾಸೀನವಾಗಿ ವರ್ತಿಸುವ ಜೊತೆಗೆ ಮನೆಗೆ ತೆರಳುವಂತೆ ಏರು ಧ್ವನಿಯಲ್ಲಿ ಮಾತನಾಡಿ ಕರ್ತವ್ಯ ಲೋಪವೆಸಗಿದ್ದಾರೆಂದು ಆರೋಪಿಸಲಾಗಿದೆ. 
    ಘಟನೆ ಸಂಬಂಧ ಕುಟುಂಬಸ್ಥರು ಸಮಾಜ ಸೇವಕ, ನಗರಸಭೆ ಮಾಜಿ ಸದಸ್ಯ ಬಾಲಕೃಷ್ಣರವರಿಗೆ ಮಾಹಿತಿ ನೀಡಿದ್ದು, ತಕ್ಷಣ ಆಸ್ಪತ್ರೆಗೆ ಆಗಮಿಸಿ ವಿಚಾರಿಸಿದಾಗ ಚಿಕಿತ್ಸೆ ನೀಡಲು ಮುಂದಾಗಿದ್ದಾರೆ. 
    ಸುಮಾರು ೨ ಗಂಟೆ ಸಮಯ ಚಿಕಿತ್ಸೆ ಇಲ್ಲದೆ ಯುವಕ ನರಳಾಡುವಂತೆ ಮಾಡಿದ್ದು, ಈ ಹಿನ್ನಲೆಯಲ್ಲಿ ಕರ್ತವ್ಯ ಲೋಪವೆಸಗಿ ಉದಾಸೀನವಾಗಿ ವರ್ತಿಸಿರುವ ಆಸ್ಪತ್ರೆಯ ಶುಶ್ರೂಷಕಿ ಅಧಿಕಾರಿಯಾಗಿರುವ ಸುರಾಜ್‌ಮತಿ ಎಲಿಜಬೆತ್ ಸ್ಯಾಂಡ್ರ ಪಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಅಲ್ಲದೆ ಈ ಕುರಿತು ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪರವರಿಗೆ ದೂರು ಸಲ್ಲಿಸಲಾಗಿದೆ.
    ಕಾರಣ ಕೇಳಿ ನೋಟಿಸ್ : 
ತುರ್ತು ಚಿಕಿತ್ಸೆಗೆ ಆಗಮಿಸಿದ ಯುವಕನಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡದೆ ಹಾಗು ಉದಾಸೀನವಾಗಿ ವರ್ತಿಸಿ ಕರ್ತವ್ಯಲೋಪವೆಗಿರುವ ಸಂಬಂಧ ದೂರು ಬಂದಿದ್ದು, ಈ ಹಿನ್ನಲೆಯಲ್ಲಿ ಉತ್ತರಿಸುವಂತೆ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಶಂಕರಪ್ಪ ಸುರಾಜ್‌ಮತಿ ಎಲಿಜಬೆತ್ ಸ್ಯಾಂಡ್ರ ಪಾರವರಿಗೆ ಸೂಚಿಸಿದ್ದಾರೆ. ಅಲ್ಲದೆ ಮುಂದಿನ ದಿನಗಳಲ್ಲಿ ಈ ರೀತಿ ಪ್ರಕರಣಗಳು ಮರುಕಳುಹಿಸಿದ್ದಲ್ಲಿ ಶಿಸ್ತು ಕ್ರಮ ಜರುಗಿಸಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡುವುದಾಗಿ ಎಚ್ಚರಿಸಿದ್ದಾರೆ. 

ಕಾಳೇಗೌಡರು ನಿಧನ

ಕಾಳೇಗೌಡರು 
    ಭದ್ರಾವತಿ : ನಗರದ ಅಪ್ಪರ್ ಹುತ್ತಾ ನಿವಾಸಿ, ತಾಲೂಕು ಒಕ್ಕಲಿಗರ ಸಂಘದ ಮಹಾಪೋಷಕರಾದ ಕಾಳೇಗೌಡರು(೯೪) ವಯೋಸಹಜವಾಗಿ ಗುರುವಾರ ನಿಧನ ಹೊಂದಿದರು. 
    ಇವರಿಗೆ ಪುತ್ರ ಹಾಗು ೮ ಜನ ಪುತ್ರಿಯರು ಇದ್ದಾರೆ. ಇವರ ಅಂತ್ಯಕ್ರಿಯೆ ಶುಕ್ರವಾರ ಲೋಯರ್ ಹುತ್ತಾ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದ್ದು, ಕಾಳೇಗೌಡರು ಬೊಂಬು ಗುತ್ತಿಗೆದಾರರಾಗಿ ಜನಪ್ರಿಯರಾಗಿದ್ದರು. ತಾಲೂಕು ಒಕ್ಕಲಿಗರ ಸಂಘವನ್ನು ಮುಂಚೂಣಿಗೆ ತರುವಲ್ಲಿ ಸಾಕಷ್ಟು ಶ್ರಮಿಸಿದ್ದರು. ಇವರು ಮಾಜಿ ಶಾಸಕ ದಿವಂಗತ ಎಂ.ಜೆ ಅಪ್ಪಾಜಿಯವರ ಕುಟುಂಬ ಸಂಬಂಧಿಯಾಗಿದ್ದಾರೆ. 
    ಇವರ ನಿಧನಕ್ಕೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ಮುಖಂಡರಾದ ಆರ್. ಕರುಣಾಮೂರ್ತಿ, ಟಿ. ಚಂದ್ರೇಗೌಡ, ಕರಿಯಪ್ಪ, ಸಿ. ರಾಮಕೃಷ್ಣ, ಮಧುಸೂಧನ್ ಹಾಗು ತಾಲೂಕು ಒಕ್ಕಲಿಗರ ಸಂಘ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಕೋಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆರೆ ಒತ್ತುವರಿ ಕಾರ್ಯಾಚರಣೆ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಹೋಬಳಿ ಕೋಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸರ್ವೆ ನಂಬರ್ ೮೨ರಲ್ಲಿರುವ ಸುಮಾರು ೨೬ ಗುಂಟೆ ವಿಸ್ತೀರ್ಣ ಹೊಂದಿರುವ ಕೆರೆ ಒತ್ತುವರಿ ಕಾರ್ಯಾಚರಣೆ ಗುರುವಾರ ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರ ನೆರವಿನೊಂದಿಗೆ ಕೈಗೊಂಡರು. 
    ಭದ್ರಾವತಿ: ತಾಲೂಕಿನ ಕೂಡ್ಲಿಗೆರೆ ಹೋಬಳಿ ಕೋಮಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಸರ್ವೆ ನಂಬರ್ ೮೨ರಲ್ಲಿರುವ ಸುಮಾರು ೨೬ ಗುಂಟೆ ವಿಸ್ತೀರ್ಣ ಹೊಂದಿರುವ ಕೆರೆ ಒತ್ತುವರಿ ಕಾರ್ಯಾಚರಣೆ ಗುರುವಾರ ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಸ್ಥರ ನೆರವಿನೊಂದಿಗೆ ಕೈಗೊಂಡರು. 
    ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಜಗನ್ನಾಥ್, ಗ್ರಾಮ ಲೆಕ್ಕಾಧಿಕಾರಿ ಜ್ಞಾನೇಶ್ ಸಹಾಯಕ ರಂಗನಾಥ್, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೇಶವಮೂರ್ತಿ ಹಾಗೂ ಸಿಬ್ಬಂದಿ ವರ್ಗ, ಸರ್ವೆ ಇಲಾಖೆಯ ರಾಜಶೇಖರಯ್ಯ ಮತ್ತು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಪ್ರಧಾನ ಕಾರ್ಯದರ್ಶಿ ತೀರ್ಥೇಶ್, ಕಾರ್ತಿಕ್, ಡಿಎಸ್‌ಎಸ್ ಮುಖಂಡ ನಾಗರಾಜ್ ಹಾಗೂ ಕಬಳಿಕಟ್ಟೆ ಮಂಜುನಾಥ್, ಭಂಡಾರಹಳ್ಳಿ ಕಿರಣ್, ಜೈ ಕರ್ನಾಟಕ ಸಂಘದ ಮುಕುಂದ, ಸಾಮಾಜಿಕ ಹೋರಾಟಗಾರ ಕೆಂಚೇನಹಳ್ಳಿ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನೂತನ ವರ್ಷಕ್ಕೆ ರೈಲ್ವೆ ಮೇಲ್ಸೇತುವೆ ಲೋಕಾರ್ಪಣೆ

ಭದ್ರಾವತಿ ಕಡದಕಟ್ಟೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಗುರುವಾರ ಸಂಸದ ಬಿ.ವೈ ರಾಘವೇಂದ್ರ ಪರಿಶೀಲನೆ ನಡೆಸಿದರು. 
    ಭದ್ರಾವತಿ: ನಗರದ ಕಡದಕಟ್ಟೆ ರೈಲ್ವೆ ಮೇಲ್ಸೇತುವೆ ಕಾಮಗಾರಿ ಮುಕ್ತಾಯ ಹಂತಕ್ಕೆ ತಲುಪಿದ್ದು, ಜನವರಿ ೨೦೨೫ ನೂತನ ವರ್ಷಕ್ಕೆ ಲೋಕಾರ್ಪಣೆ ಗೊಳಿಸಲಾಗುವುದು ಎಂದು ಸಂಸದ ಬಿ .ವೈ ರಾಘವೇಂದ್ರ ಹೇಳಿದರು. 
    ಅವರು ಗುರುವಾರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು. ೨೦೨೨ ಜನವರಿಯಲ್ಲಿ ಸುಮಾರು ೨೩ಕೋ.ರು. ವೆಚ್ಚದಲ್ಲಿ ಆರಂಭಗೊಂಡ ಎಲ್.ಸಿ-೩೪ ರೈಲ್ವೆ ಮೇಲ್ಸೇತುವೆ ಸೇತುವೆ ಕಾಮಗಾರಿ ಇದೀಗ ಸುಮಾರು ಎರಡು ವರ್ಷಗಳ ಅವಧಿಯಲ್ಲಿ ಮುಕ್ತಾಯಗೊಳ್ಳುತ್ತಿದೆ. ಈ  ಹಿನ್ನೆಲೆಯಲ್ಲಿ  ಅಧಿಕಾರಿಗಳ ವರ್ಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. 
    ಸುಮಾರು ಎರಡು ವರ್ಷಗಳವರೆಗೆ ಶಿವಮೊಗ್ಗ ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಹೊಂದಿರುವ ಪ್ರಮುಖ ರಸ್ತೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡು ವಾಹನ ಸವಾರರು, ಪಾದಚಾರಿಗಳು ಹಾಗೂ ಸ್ಥಳೀಯರು  ಸಾಕಷ್ಟು ಸಮಸ್ಯೆ ಎದುರಿಸುವಂತಾಗಿದೆ. ಸುಮಾರು ೧೫ ಕಿ.ಮೀ ಬಳಸಿಕೊಂಡು ನಗರ ಪ್ರವೇಶಿಸಬೇಕಾಗಿದೆ. ಒಟ್ಟಾರೆ ಕಾಮಗಾರಿಗೆ ಸಹಕರಿಸಿರುವ ಎಲ್ಲರಿಗೂ ಹಾಗೂ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.


    ಅಧಿಕಾರಿಗಳು ಈಗಾಗಲೇ ಜನವರಿಯಲ್ಲಿ ಮೇಲ್ಸೇತುವೆ ಲೋಕಾರ್ಪಣೆಗೊಳಿಸುವ ಸಂಬಂಧ ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡಿದ್ದು, ಸಾರ್ವಜನಿಕರು ಸೇತುವೆ ಉಪಯೋಗಿಸಿಕೊಳ್ಳಬಹುದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದರು.
   ರೈಲ್ವೆ ಇಲಾಖೆ ಎಂಜಿನಿಯರ್ ರಾಜ್‌ಕುಮಾರ್(ಎಇಇ), ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಎಂಜಿನಿಯರ್‌ಗಳಾದ ಬಿ.ಬಿ ಶಿವಪ್ರಸಾದ್, ಕೆ. ಪ್ರಸಾದ್ ಸೇರಿದಂತೆ ಇನ್ನಿತರ ಅಧಿಕಾರಿಗಳು,  ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮುಖಂಡರಾದ ಮಂಗೋಟೆ ರುದ್ರೇಶ್, ರಾಜು ತಲ್ಲೂರು, ಪ್ರಕಾಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.