Sunday, December 8, 2024

ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಮಾಜಕ್ಕೆ ಮಾದರಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪ್ರತಿಭಾವಂತ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಿದರು. 
    ಭದ್ರಾವತಿ: ಸೇವಾ ಮನೋಭಾವನೆಯೊಂದಿಗೆ ಆರಂಭಗೊಂಡು ಪ್ರಸ್ತುತ ಬೃಹತ್ ಪ್ರಮಾಣದಲ್ಲಿ ಬೆಳೆದು ವಿದ್ಯೆ ನೀಡುವ ಮೂಲಕ ಸಾವಿರಾರು ಮಕ್ಕಳಿಗೆ ಬೆಳಕಾಗಿರುವ ನಗರದ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಪ್ರಶಂಸೆ ವ್ಯಕ್ತಪಡಿಸಿದರು. 
    ಅವರು ಎರಡು ದಿನಗಳ ಕಾಲ ಜರುಗಿದ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾಸಂಸ್ಥೆ ಆರಂಭಿಸುವುದು ಮುಖ್ಯವಲ್ಲ. ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಮುನ್ನಡೆಯುವುದು ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಮುಂಚೂಣಿಯಲ್ಲಿದ್ದು, ಸಂಸ್ಥೆಯ ಏಳಿಗೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ ಎಂದರು. 
    ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ ಮಾತನಾಡಿ, ಭವಿಷ್ಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ ಎಲ್ಲಾ ರೀತಿಯ ಆಯಾಮಗಳನ್ನು ಶಿಕ್ಷಣ ಸಂಸ್ಥೆ ಮೈಗೂಡಿಸಿಕೊಂಡಿದೆ ಎಂದರು. 


ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವದಲ್ಲಿ ಶಾಲಾ ಮಕ್ಕಳ ರೈತ ಪೋಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಶಿಕ್ಷಣ ಸಂಸ್ಥೆ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಮಾತನಾಡಿ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆ ಸಾಮಾಜಿಕ, ಆಧ್ಯಾತ್ಮಿಕ ಹಾಗು ಶೈಕ್ಷಣಿಕವಾಗಿ ಹಲವಾರು ಯೋಜನೆಗಳನ್ನು ರೂಪಿಸಿಕೊಂಡಿದೆ. ಇಂದಿನ ಮಕ್ಕಳಿಗೆ ಸಂಸ್ಕಾರಯುತ, ಮೌಲ್ಯಯುತವಾದ ಶಿಕ್ಷಣ ನೀಡುವುದು ಸಂಸ್ಥೆಯ ಗುರಿಯಾಗಿದೆ ಎಂದರು. 
    ಎರಡು ದಿನಗಳ ಕಾಲ ಜರುಗಿದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಹಾಗು ಸಾಕ್ಷರತಾ ಇಲಾಖೆ ಜಿಲ್ಲಾ ಉಪನಿರ್ದೇಶಕ(ಆಡಳಿತ) ಎಸ್.ಆರ್ ಮಂಜುನಾಥ್, ಶಿವಮೊಗ್ಗ ರಾಷ್ಟ್ರೀಯ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎಸ್.ಎನ್ ನಾಗರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಪ್ರಶಾಂತಿ ಸೇವಾ ಟ್ರಸ್ಟ್ ತಾಲೂಕು ಗೌರವಾಧ್ಯಕ್ಷ ಎಂ. ದೇವೇಂದ್ರಪ್ಪ, ಶಿಕ್ಷಣ ಸಂಸ್ಥೆ ಜಂಟಿ ಕಾರ್ಯದರ್ಶಿ ಸೌಮ್ಯ ರೂಪ .ಕೆ, ಶಿಕ್ಷಣ ಸಂಯೋಜಕ ಜಿ.ಪಿ ಪರಮೇಶ್ವರಪ್ಪ, ಮುಖ್ಯೋಪಾಧ್ಯಾಯಿನಿ ಟಿ.ವಿ ಸುಜಾತ, ಪ್ರಾಂಶುಪಾಲ ಮೃತ್ಯುಂಜಯ ಕಾನಿಟ್ಕರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 


ಭದ್ರಾವತಿ ನ್ಯೂಟೌನ್ ಶ್ರೀ ಸತ್ಯ ಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಶಾಲಾ ವಾರ್ಷಿಕೋತ್ಸವದಲ್ಲಿ ವಿದ್ಯಾಸಂಸ್ಥೆಯಲ್ಲಿ ಸುಧೀರ್ಘ ಸೇವೆ ಸಲ್ಲಿಸಿರುವ ಪ್ರಾಂಶುಪಾಲ ಶಾಮರಾಯ ಆಚಾರ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ವಿಶೇಷ ಎಂದರೆ ಶಾಲಾ ಮಕ್ಕಳಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಲ್ಲದೆ ಮತ್ತೊಂದು ವಿಶೇಷತೆ ಎಂದರೆ ಪ್ರತಿವರ್ಷ ಶಾಲಾ ಮಕ್ಕಳು ವೈಯಕ್ತಿಕವಾಗಿ ಇಷ್ಟಪಡುವ ವಸ್ತುಗಳನ್ನು ಬಹುಮಾನವಾಗಿ ವಿತರಿಸಲಾಗುತ್ತಿದೆ.  ಇನ್ನೊಂದು ವಿಶೇಷತೆ ಎಂದರೆ ಪ್ರತಿವರ್ಷ ಶಾಲಾ ಮಕ್ಕಳ ರೈತ ಪೋಷಕರು ಮತ್ತು ಯೋಧ ಪೋಷಕರನ್ನು ಸನ್ಮಾನಿಸಿ ಗೌರವಿಸಲಾಗುತ್ತಿದೆ. ಈ ಬಾರಿ ಶಿಕ್ಷಣ ಸಂಸ್ಥೆಯಲ್ಲಿ ಸುಧೀರ್ಘವಾಗಿ ಸೇವೆ ಸಲ್ಲಿಸಿರುವ ಪ್ರಾಂಶುಪಾಲ ಶಾಮರಾಯ ಆಚಾರ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರತಿವರ್ಷ ವಾರ್ಷಿಕೋತ್ಸವದ ವೇದಿಕೆಯನ್ನು ಕಾಗದನಗರ ಸಂತೋಷ್ ಶಾಮಿಯಾನ ಮಾಲೀಕ ಸಂತೋಷ್‌ರವರು ನಿರ್ಮಿಸಿಕೊಡುತ್ತಿದ್ದು, ಈ ಹಿನ್ನಲೆಯಲ್ಲಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಶಾಲಾ ಮಕ್ಕಳಿಂದ ಮೌಲ್ಯಾಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಸಮಗ್ರ ಶಿಕ್ಷಣ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು, ಪೋಷಕರು, ಸುತ್ತಮುತ್ತಲಿನ ಸ್ಥಳೀಯರು ಪಾಲ್ಗೊಂಡಿದ್ದು, ಸಾಂಸ್ಕೃತಿಕ ಕಾರ್ಯಕ್ರಮ ಮನಸೂರೆಗೊಂಡವು. 

ಡಿ.೯ರಂದು ಕಾವ್ಯ, ಕಥೆ, ಪ್ರಬಂಧ ರಚನಾ ಕಮ್ಮಟ


    ಭದ್ರಾವತಿ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಸಮಿತಿ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಸಹಕಾರದೊಂದಿಗೆ ಡಿ.೯ರ ಸೋಮವಾರ ಬೆಳಿಗ್ಗೆ ೧೦ ಗಂಟೆಗೆ ನ್ಯೂಟೌನ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಕಾವ್ಯ, ಕಥೆ ಹಾಗು ಪ್ರಬಂಧ ರಚನಾ ಕಮ್ಮಟ ಹಮ್ಮಿಕೊಳ್ಳಲಾಗಿದೆ. 
    ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಉದ್ಘಾಟಿಸಲಿದ್ದು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಸಮಿತಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ಶಿವಮೊಗ್ಗ ನಿವೃತ್ತ ಪ್ರಾಂಶುಪಾಲ, ಸಾಹಿತಿ ಡಾ.ಎಚ್.ಟಿ ಕೃಷ್ಣಮೂರ್ತಿ, ಸಹ ಪ್ರಾಧ್ಯಾಪಕ ಡಾ. ಜಿ.ಆರ್ ಲವ, ಸಾಹಿತಿ, ಅಂಕಣಕಾರ ಟಿ. ಚಂದ್ರೇಗೌಡ, ನ್ಯೂಟೌನ್ ಸರ್ಕಾರಿ ಬಾಲಾಕಿಯರ ಪ್ರೌಢಶಾಲೆ ಉಪಪ್ರಾಂಶುಪಾಲರಾದ ಟಿ.ಎಸ್ ಸುಮನ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡ್ಲುಯಜ್ಞಯ್ಯ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.