ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಸಸಿಗಳನ್ನು ವಿತರಿಸಲಾಗುತ್ತಿದೆ.
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಸಸಿಗಳನ್ನು ವಿತರಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಸುಮಾರು 4000 ಸಸಿಗಳನ್ನು ವಿತರಿಸಲಾಗಿದೆ.
ಕಾರ್ಖಾನೆ ವತಿಯಿಂದ ಸಾಮಾಜಿಕ ಕಾರ್ಯ ಯೋಜನೆಯಡಿ ಪರಿಸರ ಸಂರಕ್ಷಣೆಗಾಗಿ ಸಸಿಗಳನ್ನು ನೆಡಲು ಪ್ರೋತ್ಸಾಹಿಸುವ ಉದ್ದೇಶ ಹೊಂದಲಾಗಿದ್ದು, ಕಾರ್ಖಾನೆ ಭದ್ರತಾ ಸಿಬ್ಬಂದಿಗಳು ತಮ್ಮ ಬಿಡುವಿನ ಅವಧಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವ ಕರಿಬೇವು, ಹಲಸು, ಪಪ್ಪಾಯಿ, ನುಗ್ಗೆ ಸೇರಿದಂತೆ ಹಲವು ರೀತಿಯ ಸಸಿಗಳನ್ನು ಬೆಳೆಸುವ ಮೂಲಕ ಸಾರ್ವಜನಿಕರಿಗೆ ಪರಿಸರ ಕುರಿತು ಜಾಗೃತಿ ಮೂಡಿಸಿ ಸಸಿಗಳನ್ನು ನೆಡುವ ಮೂಲಕ ಪೋಷಿಸಿ ಬೆಳೆಸುವಂತೆ ಪ್ರೋತ್ಸಾಹಿಸಲಾಗುತ್ತಿದೆ.
2024ರ ಸಾಲಿನಲ್ಲಿ ಒಟ್ಟು ಸುಮಾರು 2000 ಸಸಿಗಳನ್ನು ಕಾರ್ಖಾನೆ ಅಧಿಕಾರಿಗಳು, ಕಾಯಂ ಹಾಗು ಗುತ್ತಿಗೆ ಕಾರ್ಮಿಕರು ಮತ್ತು ಸಾರ್ವಜನಿಕರಿಗೆ ಹಾಗು ಸರ್ಕಾರಿ ಕಛೇರಿಗಳು, ಶಾಲಾ-ಕಾಲೇಜುಗಳಿಗೆ ಉಚಿತವಾಗಿ ವಿತರಿಸಲಾಗಿದೆ.
ಈ ಬಾರಿ ಪ್ರಸಕ್ತ ಸಾಲಿನಲ್ಲಿ ಕೇವಲ 6 ತಿಂಗಳ ಅವಧಿಯಲ್ಲಿ ಸುಮಾರು 4000 ಸಾವಿರ ಸಸಿಗಳನ್ನು ಉಚಿತವಾಗಿ ವಿತರಿಸಲಾಗಿದೆ. ಈ ಪೈಕಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸುಮಾರು 750ಕ್ಕೂ ಅಧಿಕ ಸಸಿಗಳನ್ನು ಉಚಿತವಾಗಿ ವಿತರಿಸಲಾಗಿದೆ.
ಬುಧವಾರ ಬೆಳಿಗ್ಗೆ ಕಾರ್ಖಾನೆ ಮುಖ್ಯದ್ವಾರದಲ್ಲಿ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ, ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್ ಕುಮಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಸಾರ್ವಜನಿಕರಿಗೆ ಉಚಿತ ಸಸಿಗಳನ್ನು ವಿತರಿಸುವ ಮೂಲಕ ಪೋಷಿಸಿ ಬೆಳೆಸುವಂತೆ ಮನವಿ ಮಾಡಿದರು.
ಪ್ರಸಕ್ತ ಸಾಲಿನಲ್ಲಿ ಗುರಿ ಮೀರಿ ಸಸಿಗಳನ್ನು ವಿತರಣೆ ಮಾಡಲಾಗಿದ್ದು, ಆದರೂ ಸಹ ಸಸಿ ವಿತರಣೆ ಮುಂದುವರೆಯಲಿದೆ. ಸಭೆ, ಸಮಾರಂಭ, ರಾಷ್ಟ್ರೀಯ ಹಬ್ಬಗಳ ಆಚರಣೆ ಸೇರಿದಂತೆ ಇನ್ನಿತರ ವಿಶೇಷ ದಿನಗಳಂದು ಸಸಿಗಳನ್ನು ವಿತರಿಸುವ ಗುರಿ ಹೊಂದಲಾಗಿದೆ.
No comments:
Post a Comment