ಭಾನುವಾರ, ಆಗಸ್ಟ್ 3, 2025

ಆ.೪ರಂದು ಕಾರ್ಮಿಕರ ಭವನ ಲೋಕಾರ್ಪಣೆ


ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್
    ಭದ್ರಾವತಿ : ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ನಗರದ ಉಜ್ಜನಿಪುರ, ಬೈಪಾಸ್ ರಸ್ತೆ, ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಕಾರ್ಮಿಕರ ಭವನ ಆ.೪ರ ಸೋಮವಾರ ಮಧ್ಯಾಹ್ನ ೩ ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. 
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಉಪಸ್ಥಿತಿಯಲ್ಲಿ ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಉದ್ಘಾಟಿಸುವರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ. 
    ಕರ್ನಾಟಕ ಅರಣ್ಯ ಕೈಗಾರಿಕೆ ನಿಗಮದ ಅಧ್ಯಕ್ಷರಾದ ಶಾಸಕ ಗೋಪಾಲಕೃಷ ಬೇಳೂರು, ಸಂಸದ ಬಿ.ವೈ ರಾಘವೇಂದ್ರ, ವಿಧಾನಸಭಾ ಸದಸ್ಯರಾದ ಅರಗ ಜ್ಞಾನೇಂದ್ರ, ಶಾರದಾ ಪೂರ್‍ಯಾನಾಯ್ಕ, ಎಸ್.ಎನ್ ಚನ್ನಬಸಪ್ಪ ಮತ್ತು ಬಿ.ವೈ ವಿಜಯೇಂದ್ರ, ವಿಧಾನಪರಿಷತ್ ಸದಸ್ಯರಾದ ಎಸ್.ಎಲ್ ಭೋಜೇಗೌಡ, ಭಾರತಿ ಶೆಟ್ಟಿ, ಡಿ.ಎಸ್ ಅರುಣ್, ಡಾ. ಧನಂಜಯ ಸರ್ಜಿ, ಬಲ್ಕೀಶ್ ಬಾನು ಸೇರಿದಂತೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಕಾರ್ಮಿಕ ಮತ್ತು ಸಾರಿಗೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಮತ್ತು ಆಯುಕ್ತರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಭಾಗವಹಿಸಲಿದ್ದಾರೆ. 
    ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗ ಮತ್ತು ವಿವಿಧ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಹಾಗೂ ಸದಸ್ಯರು, ಕಾರ್ಮಿಕ ಇಲಾಖೆ ಸಿಬ್ಬಂದಿಗಳು, ಜಿಲ್ಲೆಯ ಎಲ್ಲಾ ಕಾರ್ಮಿಕ ವರ್ಗದವರು ಹಾಗೂ ಆಡಳಿತ ವರ್ಗದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ. 
    ಜೂ.೨೮, ೨೦೨೨ರಂದು ಸುಮಾರು ೫ ಕೋ.ರು. ವೆಚ್ಚದಲ್ಲಿ ಕಾರ್ಮಿಕರ ಭವನ ನಿರ್ಮಾಣಕ್ಕೆ ಅಂದಿನ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಡಾ. ಕೆ.ಸಿ ನಾರಾಯಣ ಗೌಡ ಉಪಸ್ಥಿತಿಯಲ್ಲಿ ಅಂದಿನ ಕಾರ್ಮಿಕ ಸಚಿವರಾಗಿದ್ದ ಶಿವರಾಮ್ ಹೆಬ್ಬಾರ್‌ರವರು ಶಂಕುಸ್ಥಾಪನೆ ನೆರವೇರಿಸಿದ್ದರು. ಸುಮಾರು ಒಂದು ವರ್ಷದ ಹಿಂದೆಯೇ ಭವನ ನಿರ್ಮಾಣಗೊಂಡಿದ್ದರೂ ಸಹ ಲೋಕಾರ್ಪಣೆಗೊಳ್ಳದೆ ನೆನೆಗುದಿಗೆ ಬಿದ್ದಿತ್ತು. ಇದೀಗ ಲೋಕಾರ್ಪಣೆಗೊಳ್ಳುತ್ತಿದೆ. 
    ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಕಾರ್ಮಿಕರ ಭವನ ನಿರ್ಮಾಣಗೊಂಡಿರುವುದು ಹೆಚ್ಚಿನ ಸಹಕಾರಿಯಾಗಿದೆ. ಸಭೆ, ಸಮಾರಂಭಗಳನ್ನು ನಡೆಸಲು, ಅದರಲ್ಲೂ ವಲಸೆ ಕಾರ್ಮಿಕರು ತಾತ್ಕಾಲಿಕವಾಗಿ ಉಳಿದುಕೊಳ್ಳಲು ಹೆಚ್ಚಿನ ಅನುಕೂಲವಾಗಿದೆ.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ