ಶನಿವಾರ, ಸೆಪ್ಟೆಂಬರ್ 20, 2025

ನಾಡಹಬ್ಬ ದಸರಾ ಆಚರಣೆಗೆ ಸೆ.೨೨ರಂದು ಹಿರಿಯ ಸಮಾಜ ಸೇವಕ ಎಚ್.ವಿ ಶಿವರುದ್ರಪ್ಪರವರಿಂದ ಚಾಲನೆ

ಎಚ್.ವಿ ಶಿವರುದ್ರಪ್ಪ 
    ಭದ್ರಾವತಿ : ಈ ಬಾರಿ ನಗರಸಭೆಯಿಂದ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆಗೆ ನಗರದ ಹಿರಿಯ ಸಮಾಜ ಸೇವಕ ಹೆಬ್ಬಂಡಿ ವೀರಪ್ಪ ಶಿವರುದ್ರಪ್ಪ ಸೆ.೨೨ರ ಸೋಮವಾರ ಬೆಳಿಗ್ಗೆ ೧೦.೩೦ಕ್ಕೆ ನಗರಸಭೆ ಆವರಣದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಿದ್ದಾರೆ. 
    ಜಿಲ್ಲೆಯಲ್ಲಿಯೇ ನಗರಸಭೆಯಿಂದ ಪ್ರತಿ ವರ್ಷ ನಾಡಹಬ್ಬ ದಸರಾ ಆಚರಣೆ ವಿಶಿಷ್ಟವಾಗಿ, ವೈಭವಯುತವಾಗಿ ಆಚರಿಸಿಕೊಂಡು ಬರಲಾಗುತ್ತಿದ್ದು, ಸಾಹಿತಿಗಳು, ಹೋರಾಟಗಾರರು, ಸಮಾಜ ಸೇವಕರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿರುವವರನ್ನು ಗುರುತಿಸಿ ಅವರಿಂದ ದಸರಾ ಆಚರಣೆಗೆ ಚಾಲನೆ ನೀಡಲಾಗುತ್ತಿದೆ.  ನಿವೃತ್ತ ಉಪನ್ಯಾಸಕ ದಿವಂಗತ ಕೆ.ಎಸ್ ಕುಮಾರಸ್ವಾಮಿ, ವೈದ್ಯ ಸಾಹಿತಿ ಡಾ. ಕೃಷ್ಣ ಎಸ್. ಭಟ್, ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ, ಸಮಾಜ ಸೇವಕ ಪಿ. ವೆಂಕಟರಮಣ ಶೇಟ್ ಸೇರಿದಂತೆ ಸಮಾಜಕ್ಕೆ ತಮದೇ ಆದ ಕೊಡುಗೆಗಳನ್ನು ನೀಡಿರುವ ಇನ್ನೂ ಮುಂತಾದವರು ಇಲ್ಲಿನ ದಸರಾ ಆಚರಣೆಗೆ ಚಾಲನೆ ನೀಡಿರುವುದು ವಿಶೇಷವಾಗಿದೆ. ಈ ಬಾರಿ ನಗರದ ಲೋಯರ್ ಹುತ್ತಾ ಬಿ.ಎಚ್ ರಸ್ತೆ, ಸಹ್ಯಾದ್ರಿ ಬಡಾವಣೆ ನಿವಾಸಿ, ಸಮಾಜ ಸೇವಕ ಎಚ್.ವಿ ಶಿವರುದ್ರಪ್ಪರವರು ದಸರಾ ಆಚರಣೆಗೆ ಚಾಲನೆಗೆ ನೀಡುತ್ತಿದ್ದಾರೆ. 
    ಎಚ್.ವಿ ಶಿವರುದ್ರಪ್ಪ ಪರಿಚಯ: 
    ೦೧.೦೨.೧೯೩೮ರಲ್ಲಿ ಭದ್ರಾವತಿ ಕ್ಷೇತ್ರದಲ್ಲಿಯೇ ಜನಿಸಿರುವ ಶಿವರುದ್ರಪ್ಪರವರು ಮೂಲತಃ ಕೃಷಿಕರು ಹಾಗು ವ್ಯಾಪಾರಸ್ಥರಾಗಿದ್ದು, ೧೯೭೦ರಿಂದ ಸುಮಾರು ೫೫ ವರ್ಷಗಳಿಂದ ನಗರದ ಲಯನ್ಸ್ ಕ್ಲಬ್ ಅಂತರಾಷ್ಟ್ರೀಯ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿಕೊಂಡು ಬರುವ ಮೂಲಕ  ಅಜೀವ ಸದಸ್ಯರಾಗಿ ಇಂದಿಗೂ ತಮ್ಮ ಸೇವೆ ಮುಂದುವರೆಸಿದ್ದಾರೆ. ಇವರಿಗೆ ಇಬ್ಬರು ಪುತ್ರರರು, ಇಬ್ಬರು ಪುತ್ರಿಯರು ಇದ್ದಾರೆ.  ಎಸ್‌ಎಸ್‌ಎಲ್‌ಸಿ ಓದಿರುವ ಶಿವರುದ್ರಪ್ಪ, ತಮ್ಮ ಕುಟುಂಬದ ಪೂರ್ವಿಕರು ನಡೆಸಿಕೊಂಡು ಬರುತ್ತಿದ್ದ ವ್ಯಾಪಾರ ವೃತ್ತಿಯನ್ನು ಮುಂದುವರೆಸುವ ಜೊತೆಗೆ ಕೃಷಿಕರಾಗಿ ಹಂತ ಹಂತವಾಗಿ ಬೆಳದವರು. ಆರಂಭದಲ್ಲಿ ಕಡದಕಟ್ಟೆ ರೈತರ ವ್ಯವಸಾಯೋತ್ಪನ್ನ ಸಹಕಾರ ಸಂಘದಲ್ಲಿ ೩ ವರ್ಷ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಜೊತೆಗೆ ಸಹಕಾರ ಸಂಘದ ಬೆಳವಣಿಗೆಗೆ ಆರ್ಥಿಕ ನೆರವನ್ನು ನೀಡಿದ್ದಾರೆ. ಅಲ್ಲದೆ ಈ ಅವಧಿಯಲ್ಲಿ ಉತ್ತಮ ಜಿಲ್ಲಾ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. 
    ಕಡದಕಟ್ಟೆ ಶ್ರೀ ವಿನಾಯಕ ದೇವಸ್ಥಾನದ ಸಂಸ್ಥಾಪಕ ಕಾರ್ಯದರ್ಶಿಯಾಗಿ, ತಾಲೂಕು ಕಛೇರಿ ರಸ್ತೆಯ ಶ್ರೀ ವೀರಭದ್ರೇಶ್ವರಸ್ವಾಮಿ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುವ ಜೊತೆಗೆ ಆರ್ಥಿಕ ನೆರವನ್ನು ನೀಡಿದ್ದಾರೆ. ಜನ್ನಾಪುರ ದೇವಾಲಯಗಳ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಜೊತೆಗೆ ವಿವಿಧ ದೇವಸ್ಥಾನಗಳ ಅಭಿವೃದ್ಧಿ ಕಾರ್ಯಗಳಿಗೆ ಆರ್ಥಿಕ ನೆರವು ನೀಡಿದ್ದಾರೆ. ಅಲ್ಲದೆ ಜನ್ನಾಪುರ ಮಲ್ಲೇಶ್ವರ ಸಮುದಾಯ ಭವನದ ಸಂಸ್ಥಾಪಕ ಅಧ್ಯಕ್ಷರಾಗಿ ಇಂದಿಗೂ ಸೇವೆ ಸಲ್ಲಿಸುತ್ತಿದ್ದಾರೆ. 
    ಜನ್ನಾಪುರ ಬಸವೇಶ್ವರ ವಿದ್ಯಾವರ್ಧಕ ಸಂಘದ ಸಂಸ್ಥಾಪಕ ಅಧ್ಯಕ್ಷರಾಗಿ ಶಿಕ್ಷಣ ಕ್ಷೇತ್ರಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಲಯನ್ಸ್ ಕ್ಲಬ್ ಅಂತರಾಷ್ಟ್ರೀಯ ಸಂಸ್ಥೆ ಅಜೀವ ಸದಸ್ಯರಾಗಿರುವ ಇವರು ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸಹ ಸೇವೆ ಸಲ್ಲಿಸಿ ಹಲವಾರು ಸೇವಾ ಕಾರ್ಯಗಳಿಗೆ ದೇಣಿಗೆ ನೀಡಿದ್ದಾರೆ. ೧೯೮೯ರಲ್ಲಿ ಅಮೇರಿಕದಲ್ಲಿ ಜರುಗಿದ ಲಯನ್ಸ್ ಕ್ಲಬ್ ಅಂತರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿರುವುದು ಇವರ ಹೆಗ್ಗಳಿಕೆಯಾಗಿದೆ.    
ದಸರಾ ಉದ್ಘಾಟನೆಗೆ ಆಹ್ವಾನ ಸಂತಸ ತಂದಿದೆ : 
    ಈ ಬಾರಿ ನಾಡಹಬ್ಬ ದಸರಾ ಉದ್ಘಾಟನೆಗೆ ನಮ್ಮನ್ನು ಆಹ್ವಾನಿಸಿರುವುದು ನನಗೆ ಹಾಗು ಕುಟುಂಬ ವರ್ಗಕ್ಕೆ ಸಂತಸವನ್ನುಂಟು ಮಾಡಿದೆ. ನಾನು ಸಲ್ಲಿಸಿರುವ ಸೇವೆ ಹಾಗು ಹಿರಿತನ ಪರಿಗಣಿಸಿ ಉದ್ಘಾಟನೆಗೆ ಆಹ್ವಾನಿಸಿರುವುದು ಹೆಮ್ಮೆಯ ಸಂಗತಿಯಾಗಿದೆ. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕ್ಷೇತ್ರದ ಶಾಸಕರಾದ ಬಿ.ಕೆ ಸಂಗಮೇಶ್ವರ್ ಹಾಗು ನಗರಸಭೆ ಆಡಳಿತಕ್ಕೆ ಮತ್ತು ಕ್ಷೇತ್ರದ ನಾಗರಿಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆಂದು ಶಿವರುದ್ರಪ್ಪ ತಿಳಿಸಿದ್ದಾರೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ