ಸೆ.೨೮ರಂದು ಕೇಂದ್ರ ಕಾರ್ಯಾಲಯ, ನಾಮಫಲಕ ಉದ್ಘಾಟನೆ
ಭದ್ರಾವತಿಯಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಮನ್ವಯ ಸಮಿತಿ ರಾಜ್ಯಾಧ್ಯಕ್ಷ ವಿ.ವಿನೋದ್ ಮಾತನಾಡಿದರು.
ಭದ್ರಾವತಿ : ಸಮಾನ ಮನಸ್ಕ ಬಹುಜನರನ್ನು ಸೆಳೆದುಕೊಂಡು ಅಲ್ಪಸಂಖ್ಯಾತರು, ಹಿಂದುಳಿದವರು, ದಲಿತರು, ಅಲೆಮಾರಿಗಳು, ಶೋಷಿತರು, ದಮನಿತರನ್ನು ಒಟ್ಟಿಗೆ ಬೆಸೆಯುವಂತೆ ಮಾಡಲು ಹಾಗೂ ಕಳಚಿಹೋದ ಕೊಂಡಿಗಳನ್ನು ಬೆಸೆಯಲು ಮತ್ತು ಅನ್ಯಾಯದ ವಿರುದ್ದ ಸ್ವಾಭಿಮಾನದಿಂದ ಸೆಟೆದು ನಿಲ್ಲಲು ನೂತನವಾಗಿ ಕರ್ನಾಟಕ ದಲಿತ ಸಮನ್ವಯ ಸಮಿತಿ ಅಸ್ತಿತ್ವಕ್ಕೆ ತರಲಾಗಿದೆ.
ಸೆ.೨೮ರ ಭಾನುವಾರ ಬೆಳಿಗ್ಗೆ ೧೦.೩೦ಕ್ಕೆ ನಗರದ ಸಿ.ಎನ್ ರಸ್ತೆ, ಶ್ರೀ ಗಂಗಾಪರಮೇಶ್ವರಿ ಸಮುದಾಯ ಭವನದಲ್ಲಿ ನೂತನ ಸಮಿತಿ ಕೇಂದ್ರ ಕಾರ್ಯಾಲಯ ಮತ್ತು ನಾಮಫಲಕ ಉದ್ಘಾಟನೆ ಹಾಗು ರಾಜ್ಯ ಪದಾಧಿಕಾರಿಗಳ ಪದಗ್ರಹಣ ಏರ್ಪಡಿಸಲಾಗಿದೆ ಎಂದು ಸಮಿತಿ ರಾಜ್ಯಾಧ್ಯಕ್ಷ ವಿ. ವಿನೋದ್ ತಿಳಿಸಿದರು.
ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಚಳುವಳಿಯ ಬೀಡಾದ ನಗರದಲ್ಲಿ ನ್ಯಾಯಯುತ ಹಕ್ಕುಗಳಿಗಾಗಿ ನಾವು ಹಗಲಿರುಳು ಶ್ರಮಿಸುತ್ತಿದ್ದೇವೆ. ಬುದ್ದ, ಬಸವ, ಅಂಬೇಡ್ಕರ್ರವರ ಸಿದ್ದಾಂತಗಳನ್ನು ಮೈಗೂಡಿಸಿಕೊಂಡು ಯುವ ಹೋರಾಟಗಾರರು, ಪ್ರಗತಿಪರ ಚಿಂತಕರನ್ನು ಒಗ್ಗೂಡಿಸಿಕೊಂಡು ಅನೇಕ ಹೋರಾಟಗಳನ್ನು ಮಾಡಿಕೊಂಡು ಬಂದಿದ್ದು, ಪ್ರಸ್ತುತ ಹೊಸ ಸಂಘಟನೆ ಅಗತ್ಯತೆ ಮನಗಂಡು ಕರ್ನಾಟಕ ದಲಿತ ಸಮನ್ವಯ ಸಮಿತಿ ಅಸ್ತಿತ್ವಕ್ಕೆ ತರಲಾಗಿದೆ ಎಂದರು.
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ರಾಜ್ಯಾದ್ಯಕ್ಷ ವಿ.ವಿನೋದ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಆರ್.ಟಿ.ಓ ಇಲಾಖೆ ನೌಕರ ದಲಿತ ಮುಖಂಡ ಎನ್. ಮಂಜುನಾಥ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ. ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ, ಶಿಕ್ಷಕ ಎಂ.ಆರ್ ರೇವಣಪ್ಪರವರಿಗೆ `ಕರ್ನಾಟಕ ಜಾನಪದ ರತ್ನ' ರಾಜ್ಯ ಪ್ರಶಸ್ತಿ ಪ್ರಧಾನ ಹಾಗು ನೂತನ ಸಮಿತಿ ಕೇಂದ್ರ ಕಾರ್ಯಾಲಯ ಮತ್ತು ನಾಮಫಲಕ ಉದ್ಘಾಟನೆ ಹಾಗು ರಾಜ್ಯ ಪದಾಧಿಕಾರಿಗಳ ಪದಗ್ರಹಣ ನಡೆಯಲಿದೆ ಎಂದರು.
ನಗರಸಭೆ ಉಪಾಧ್ಯಕ್ಷ ಮಣಿ ಎಎನ್ಎಸ್, ಹಿರಿಯ ಸದಸ್ಯ ಬಿ.ಕೆ ಮೋಹನ್, ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಶಿಕ್ಷಕಿ ಭಾರತಿ ಗೋವಿಂದಸ್ವಾಮಿ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಡಿಎಸ್ಎಸ್ ಸಂಸ್ಥಾಪಕರಾದ ನಿವೃತ್ತ ಮುಖ್ಯ ಶಿಕ್ಷಕ ಡಿ. ಕರಿಯಪ್ಪ, ನಾಗತಿಬೆಳಗಲು ತಾಂಡ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎಚ್.ಎನ್ ನರಸಿಂಹಮೂರ್ತಿ, ಕಾಗದನಗರ ಜಿಯುಎಲ್ಪಿಎಸ್ ಶಿಕ್ಷಕ ಸಿ. ಚನ್ನಪ್ಪ, ಶಿಕ್ಷಕಿಯರಾದ ರಾಧಾಬಾಯಿ ಹಾಜ್ಯನಾಯ್ಕ, ಶಾರದ ಪ್ರೇಮ್ ಕುಮಾರ್ ಮತ್ತು ಎಸ್. ಭಾರತಿ ಅವರಿಗೆ ವಿಶೇಷ ಸನ್ಮಾನ ಏರ್ಪಡಿಸಲಾಗಿದೆ ಎಂದರು.
ಪತ್ರಿಕಾ ಗೋಷ್ಟಿಯಲ್ಲಿ ರಾಜ್ಯ ಪದಾಧಿಕಾರಿಗಳಾದ ಸುಶೀಲಮ್ಮ, ಜೆ. ಸೆಂದಿಲ್ಕುಮಾರ್, ಸುರೇಶ್, ನೇತ್ರಾವತಿ, ಎ. ಮಂಜು, ಗಿರೀಶ್, ಭಾಗ್ಯ, ಮಂಗಳ, ಜಿಲ್ಲಾಧ್ಯಕ್ಷ ಅರುಳ್, ಜಯಶೀಲ, ತಾಲೂಕು ಅಧ್ಯಕ್ಷ ರಾಕೇಶ್, ಗೋವಿಂದಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ