ಸಂವಿಧಾನ ವಿರೋಧಿ ದ್ವೇಷ ಭಾಷಣ, ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ಜಾರಿಗೊಳಿಸದಿರಿ
ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಬಿಜೆಪಿ ಮನವಿ
ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ೨೦೨೫ ಭಾರತದ ಸಂವಿಧಾನಕ್ಕೆ ವಿರುದ್ಧವಿದ್ದು, ಇದನ್ನು ಜಾರಿಗೊಳಿಸದಂತೆ ರಾಜ್ಯಪಾಲರಿಗೆ ಭದ್ರಾವತಿಯಲ್ಲಿ ಬಿಜೆಪಿ ಮುಖಂಡರು ತಹಸೀಲ್ದಾರ್ ಮೂಲಕ ಬುಧವಾರ ಮನವಿ ಸಲ್ಲಿಸಿದ್ದಾರೆ.
ಭದ್ರಾವತಿ : ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ೨೦೨೫ ಭಾರತದ ಸಂವಿಧಾನಕ್ಕೆ ವಿರುದ್ಧವಿದ್ದು, ಇದನ್ನು ಜಾರಿಗೊಳಿಸದಂತೆ ರಾಜ್ಯಪಾಲರಿಗೆ ಬಿಜೆಪಿ ಮುಖಂಡರು ತಹಸೀಲ್ದಾರ್ ಮೂಲಕ ಬುಧವಾರ ಮನವಿ ಸಲ್ಲಿಸಿದ್ದಾರೆ.
ತಾಲೂಕು ಕಛೇರಿ ಮುಂಭಾಗ ವಿಧೇಯಕ ವಿರೋಧಿಸಿ ಪ್ರತಿಭಟನೆ ನಡೆಸಿದ ನಂತರ ಮಾತನಾಡಿದ ಪ್ರಮುಖರಾದ ಬಿಜೆಪಿ ಮಹಿಳಾ ರಾಜ್ಯಾಧ್ಯಕ್ಷೆ ಸಿ. ಮಂಜುಳಾ, ಮಾಜಿ ಶಾಸಕ ಕೆ.ಬಿ ಅಶೋಕ್ ನಾಯ್ಕ್, ನಗರ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಗ್ರಾಮಾಂತರ ಮಂಡಲ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಹೊಳೆಹೊನ್ನೂರು ಮಂಡಲ ಅಧ್ಯಕ್ಷ ಮಲ್ಲೇಶ್ ಸೇರಿದಂತೆ ಇನ್ನಿತರರು, ಪ್ರಸ್ತುತ ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರುತ್ತಿರುವ ವಿಧೇಯಕ ನಾಗರೀಕರ ಮೂಲ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸಂವಿಧಾನದ ೧೯(೧) ಪರಿಚ್ಛೇದ, (೨) ಪರಿಚ್ಛೇದದಡಿ ವಾಕ್ ಅಥವಾ ಅಭಿವೃತ್ತಿ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ. ಡಾ.ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನದಡಿ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಸರಕಾರ ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದರು.
ಅಲ್ಲದೆ ಈ ವಿಧೇಯಕ ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ. ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯವನ್ನು ಹೇಳುವುದನ್ನೂ ಕೂಡ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ. ಜನರು ಭಯದಿಂದ ಮಾತನಾಡದೆ ಇರುವಂತೆ ಮಾಡುವುದು ಸರ್ಕಾರದ ಉದ್ದೇಶವೇ ಎಂದು ಪ್ರಶ್ನಿಸಿದರು.
. ಇದು ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ ಮಾತ್ರವಲ್ಲ ಪ್ರಜಾಪ್ರಭುತ್ವದ ಕತ್ತು ಹಿಸುಕುವ ಯತ್ನ. ಈ ವಿಧೇಯಕ ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡುತ್ತದೆ. ವಿಧೇಯಕ ಹೇಳುವಂತೆ ಇಲ್ಲಿನ ಅಪರಾಧಗಳಿಗೆ ಜಾಮೀನು ಇಲ್ಲ. ಜನಸಾಮಾನ್ಯರನ್ನು ಅಪರಾಧಿಗಳಾಗಿ ಮಾಡುವ ಈ ಕೀಳು ಮಟ್ಟದ ವಿಧೇಯಕ ನಮಗೆ ಬೇಕಿಲ್ಲ ಎಂದರು.
ಈ ವಿಧೇಯಕದಲ್ಲಿ ಪ್ರತಿಬಂಧಕ ಕ್ರಮಗಳನ್ನು ಸಹ ಉಲ್ಲೇಖಿಸಲಾಗಿದೆ. ಪೊಲೀಸರು ಅಥವಾ ಅಧಿಕಾರಿಗಳು ಸಂಭಾವ್ಯ ಅಪರಾಧ ಎಂದು ಭಾವಿಸಿ ಮುಂಚಿತವಾಗಿ ಕ್ರಮ ಕೈಗೊಳ್ಳಬಹುದು. ಇದರಿಂದ ಪ್ರತಿಭಟನೆಗಳು ಸಭೆಗಳು ಅಥವಾ ಸಾಮಾಜಿಕ ಚಳವಳಿಗಳನ್ನು ತಡೆಯುವ ಉದ್ದೇಶ ಇದ್ದಂತಿದೆ. ಈ ವಿಧೇಯಕದಿಂದ ಸಾಮಾಜಿಕ ಕಾರ್ಯಕರ್ತರು, ಪತ್ರಕರ್ತರು, ಸಾಮಾಜಿಕ ಮಾಧ್ಯಮ ಬಳಸುವವರು ಹೆಚ್ಚು ತೊಂದರೆಗೆ ಸಿಲುಕುತ್ತಾರೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮ ಮತ್ತು ಜನರ ಧ್ವನಿಯನ್ನು ನಾಶಪಡಿಸುವ ಇಂತಹ ಕಾಯಿದೆ ಯಾವ ಕಾರಣಕ್ಕೂ ಜಾರಿಯಾಗಬಾರದು ಎಂದು ಆಗ್ರಹಿಸಿದರು.
ಅನ್ಯಾಯ ಅಥವಾ ಸರ್ಕಾರದ ತಪ್ಪುಗಳ ಬಗ್ಗೆ ಮಾತನಾಡಿದರೆ ಭಾವನಾತ್ಮಕ ಹಾನಿ ಎಂದು ಆರೋಪಿಸಿ ಬಂಧನ ಮಾಡಲು ಈ ವಿಧೇಯಕ ಪೊಲೀಸರಿಗೆ ಅಧಿಕಾರ ನೀಡುತ್ತದೆ. ಪತ್ರಕರ್ತರ ತನಿಖಾ ವರದಿಗಳು ಕೇಸಿನ ತೂಗುಗತ್ತಿ ಎದುರಿಸಬೇಕಾಗುತ್ತದೆ. ಸಾಮಾಜಿಕ ಮಾಧ್ಯಮದಲ್ಲಿ ಹಾಸ್ಯ ಅಥವಾ ಟೀಕೆಯನ್ನು ದ್ವೇಷ ಎಂದು ಕರೆದು ಬ್ಲಾಕ್ ಮಾಡಬಹುದು, ಕಾನೂನು ಕ್ರಮ ಕೈಗೊಳ್ಳಬಹುದು. ಸಾಮಾಜಿಕ ಸಾಮರಸ್ಯದ ಹೆಸರಿನಲ್ಲಿ ಅಭಿವ್ಯಕ್ತಿಯನ್ನು ನಿರ್ಬಂಧಿಸುವ ಮೂಲಕ ಪ್ರಜಾಪ್ರಭುತ್ವವನ್ನು ಈ ದುರ್ಬಲಗೊಳಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ರಮುಖರಾದ ವಿಎಚ್ಪಿ ಹಾ. ರಾಮಪ್ಪ, ರಾಜಶೇಖರ್ ಉಪ್ಪಾರ, ಅಣ್ಣಪ್ಪ, ಹನುಮಂತನಾಯ್ಕ, ರಘುರಾವ್, ಶಕುಂತಲಾ ಪ್ರದೀಪ್, ಅನ್ನಪೂರ್ಣ, ಕವಿತಾ ರಾವ್, ಆಶಾ ಪುಟ್ಟಸ್ವಾಮಿ, ಸರಸ್ವತಿ, ಲೋಕಾಕ್ಷಿ, ಪ್ರೇಮಾ, ರವಿಕುಮಾರ್, ಶ್ರೀನಿವಾಸ್, ಶಂಕರಮೂರ್ತಿ, ಸತೀಶ್ ಕುಮಾರ್, ಬಾರಂದೂರು ಪ್ರಸನ್ನ ಸೇರಿದಂತೆ ವಿವಿಧ ಮೋರ್ಚಾಗಳ, ಬೂತ್ಗಳ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.