Wednesday, January 8, 2025

ನಗರಸಭೆ ವ್ಯಾಪ್ತಿಯಲ್ಲಿಸರ್ಕಾರಿ, ಧಾರ್ಮಿಕ ಕಾರ್ಯಕ್ರಮಗಳು ಹೊರತು ಫ್ಲೆಕ್ಸ್ ಬಳಕೆ ಸಂಪೂರ್ಣ ನಿಷೇಧ

    ಭದ್ರಾವತಿ : ನಗರಸಭೆ ವ್ಯಾಪ್ತಿಯಲ್ಲಿ ಫ್ಲೆಕ್ಸ್ ಬಳಕೆಯನ್ನು ಜ.೧೬ರಿಂದ ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಆದರೆ ಸರ್ಕಾರಿ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಪ್ರಚಾರಕ್ಕೆ ಪ್ಲೆಕ್ಸ್ ಬಳಸಲು ವಿನಾಯಿತಿ ನೀಡಲಾಗಿದೆ. ಯಾವುದೇ ರಾಜಕೀಯ ಪಕ್ಷ ಹಾಗೂ ಖಾಸಗಿ ವ್ಯಕ್ತಿಗಳ ಭಾವಚಿತ್ರ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ತಿಳಿಸಿದರು.
    ಅವರು ಬುಧವಾರ ಈ ಸಂಬಂಧ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ನಗರದಲ್ಲಿ ಅಳವಡಿಸಲಾಗಿರುವ ಪ್ಲೆಕ್ಸ್‌ಗಳನ್ನು ಜ.೧೫ರಿಂದ ತೆರವುಗೊಳಿಸಲಾಗುವುದು ಎಂದರು. 
    ಪ್ಲಾಸ್ಟಿಕ್ ಬ್ಯಾನರ್/ಫ್ಲೆಕ್ಸ್ ಮತ್ತು ಕಟೌಟ್‌ಗಳಿಂದ ಪರಿಸರ ಮತ್ತು ನಗರದ ಸೌಂದರ್ಯ ಹಾಳಾಗುತ್ತಿರುವುದಲ್ಲದೆ ಸಾರ್ವಜನಿಕರಿಗೆ ಮತ್ತು ವರ್ತಕರಿಗೆ ತೊಂದರೆಯಾಗುವುದರಿಂದ ಸಂಪೂರ್ಣವಾಗಿ ನಿಷೇಧಿಸಲು ಈ ಹಿಂದಿನ ಹಲವಾರು ಸಭೆಗಳಲ್ಲಿ ನಿರ್ಣಯವಾಗಿದ್ದರೂ ಸಹ ಕ್ರಮವಹಿಸಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಡಿ.೨೬ರಂದು ನಡೆದ ಕೌನ್ಸಿಲ್ ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿರುವಂತೆ ಜ.೧೬ರಿಂದ ಫ್ಲೆಕ್ಸ್ ಬಳಕೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದರು.
ನಗರದ ಬಿ.ಎಚ್ ರಸ್ತೆ ಅಂಡರ್‌ಬ್ರಿಡ್ಜ್‌ನಿಂದ ಸಿ.ಎನ್ ರಸ್ತೆ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಂಸಿ)ವರೆಗಿನ ರಸ್ತೆಗೆ ಡಾ. ರಾಜ್‌ಕುಮಾರ್ ರಸ್ತೆ ಹಾಗೂ ಮಾಧವಾಚಾರ್ ವೃತ್ತದಿಂದ ಬಾರಂದೂರು ಬೈಪಾಸ್‌ವರೆಗೆ ಮಹಾತ್ಮ ಗಾಂಧಿ ರಸ್ತೆ ಎಂದು ನಾಮಕರಣ ಮಾಡಲಾಗಿದ್ದು, ವರ್ತಕರು ಕಡ್ಡಾಯವಾಗಿ ಫಲಕಗಳಲ್ಲಿ ನಮೂದು ಮಾಡದಿದ್ದಲ್ಲಿ ನಗರಸಭೆ ವತಿಯಿಂದ ಕ್ರಮ ಜರುಗಿಸಲಾಗುವುದು ಎಂದರು.
    ಪತ್ರಿಕಾಗೋಷ್ಠಿಯಲ್ಲಿ ಪೌರಾಯುಕ್ತರಾದ ಪಿ.ಎಂ ಚನ್ನಪ್ಪನವರ್, ನಗರಸಭಾ ಸದಸ್ಯರುಗಳಾದ ಬಿ.ಕೆ. ಮೋಹನ್, ಬಿ.ಟಿ. ನಾಗರಾಜ್, ವಿ. ಕದಿರೇಶ್, ಚನ್ನಪ್ಪ, ಮೋಹನ್‌ಕುಮಾರ್, ಉದಯ್‌ಕುಮಾರ್, ಲತಾಚಂದ್ರಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಎನ್. ಶ್ರೀನಿವಾಸ್ ನಿಧನಕ್ಕೆ ಛಲವಾದಿಗಳ ಸಮಾಜ ಸಂತಾಪ

ಭದ್ರಾವತಿ ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ಛಲವಾದಿಗಳ ಸಮಾಜ(ಪ.ಜಾ)ದಲ್ಲಿ ಬುಧವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡ ಎನ್. ಶ್ರೀನಿವಾಸ್‌ರವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. 
    ಭದ್ರಾವತಿ: ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ಛಲವಾದಿಗಳ ಸಮಾಜ(ಪ.ಜಾ)ದಲ್ಲಿ ಬುಧವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡ ಎನ್. ಶ್ರೀನಿವಾಸ್‌ರವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. 
    ಸಮಾಜದ ಅಧ್ಯಕ್ಷ ಚನ್ನಪ್ಪರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್. ಶ್ರೀನಿವಾಸ್ ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿದರು. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿ, ಮೌನಾಚರಣೆ ನಡೆಸಲಾಯಿತು. 
    ಸಮಾಜದ ಪ್ರಮುಖರಾದ ನಿರ್ದೇಶಕರಾದ ಶಂಕರಯ್ಯ, ರಂಗಸ್ವಾಮಿ, ಚಂದ್ರಕುಮಾರ್, ಹುಚ್ಚಯ್ಯ, ಗೌರವಾಧ್ಯಕ್ಷ ಎಂ. ನಾಗರಾಜ್, ಕಾರ್ಯದರ್ಶಿ ಎಚ್.ಎಂ ಮಹಾದೇವಯ್ಯ, ರಾಮದಾಸ್, ಚಿಕ್ಕರಾಜು, ನೀಲಕಂಠಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಜ.೯ರಂದು ತಾಲೂಕು ೧೧ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ

ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಭದ್ರಾವತಿ ತಾಲೂಕು ಘಟಕದ ವತಿಯಿಂದ ಜ.೯ರ ಗುರುವಾರ ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಶಾಲೆ ಆವರಣದಲ್ಲಿ ತಾಲೂಕು ಹನ್ನೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. 
    ಭದ್ರಾವತಿ: ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಘಟಕದ ವತಿಯಿಂದ ಜ.೯ರ ಗುರುವಾರ ನಗರದ ನ್ಯೂಟೌನ್ ಶ್ರೀ ಆದಿಚುಂಚನಗಿರಿ ವಿದ್ಯಾಸಂಸ್ಥೆ ಶಾಲೆ ಆವರಣದಲ್ಲಿ ತಾಲೂಕು ಹನ್ನೊಂದನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಹೇಳಿದರು. 
    ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬೆಳಿಗ್ಗೆ ೯.೩೦ಕ್ಕೆ ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಬಿ. ಜಗದೀಶ್ ರಾಷ್ಟ್ರ ಧ್ವಜಾರೋಹಣ ಹಾಗು ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಕವಿತ ನಾಡ ಧ್ವಜಾರೋಹಣ ಮತ್ತು ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಕನ್ನಡ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು. 
    ವಿದ್ಯಾಸಂಸ್ಥೆಯ ೮ನೇ ತರಗತಿ ವಿದ್ಯಾರ್ಥಿ ಮನೀಷ್ ಪಿ ಯಾದವ್ ೧೦ ಗಂಟೆಗೆ ಸಮ್ಮೇಳನ ಉದ್ಘಾಟಿಸಲಿದ್ದು, ಶ್ರೀ ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥಸ್ವಾಮೀಜಿ ದಿವ್ಯ ಸಾನಿಧ್ಯವಹಿಸಲಿದ್ದಾರೆ. ನಗರದ ಪೂರ್ಣಪ್ರಜ್ಞ ವಿದ್ಯಾಸಂಸ್ಥೆ ೯ನೇ ತರಗತಿ ವಿದ್ಯಾರ್ಥಿನಿ ಲಿಖಿತ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್, ವಿದ್ಯಾಸಂಸ್ಥೆ ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ, ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದರು. 
    ಬೆಳಿಗ್ಗೆ ೧೧.೩೦ ರಿಂದ ೧೨.೧೫ರವರೆಗೆ ಗೋಷ್ಠಿ-೧, ಕವಿಗೋಷ್ಠಿ, ಮಧ್ಯಾಹ್ನ ೧೨.೧೫ರಿಂದ ೧ ಗಂಟೆವರೆಗೆ ಗೋಷ್ಠಿ-೨, ಕವಿಗೋಷ್ಠಿ ಹಾಗು ಮಧ್ಯಾಹ್ನ ೨ ಗಂಟೆಯಿಂದ ಗೋಷ್ಠಿ-೩, ಪ್ರಚಲಿತ ವಿದ್ಯಾಮಾನಗಳು ನಡೆಯಲಿವೆ. ಸಂಜೆ ೪ ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ಎಂ.ವಿ ಪಂಚಾಕ್ಷರಿ, ಶಿಕ್ಷಣ ಸಂಯೋಜಕ ದಯಾನಂದ್, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬದರಿನಾರಾಯಣ ಶ್ರೇಷ್ಠಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. ಸಮ್ಮೇಳನ ಯಶಸ್ವಿಗೊಳಿಸುವಂತೆ ಕೋರಿದರು. 
    ಪತ್ರಿಕಾಗೋಷ್ಠಿಯಲ್ಲಿ ವೇದಿಕೆ ಪ್ರಧಾನ ಕಾರ್ಯದರ್ಶಿ ಜೆ. ಉಮಾಪತಿ, ಖಜಾಂಚಿ ಗಂಗರಾಜ್, ಸಂಘಟನಾ ಕಾರ್ಯದರ್ಶಿ ಬಿ. ಕಾಂತಪ್ಪ, ಕಮಲಾಕುಮಾರಿ, ಮಲ್ಲಿಕಾಂಬ ವಿರೂಪಾಕ್ಷಪ್ಪ, ಕೋಡ್ಲು ಯಜ್ಞಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.