ನೌಕರನಿಗೆ ಮಾನಸಿಕ, ದೈಹಿಕ ಹಿಂಸೆ, ಜಾತಿನಿಂದನೆ ಆರೋಪ
ಭದ್ರಾವತಿ: ಇಲ್ಲಿನ ಕೈಗಾರಿಕಾ ಪ್ರದೇಶದ ಮಲ್ನಾಡ್ ಅಲಾಯ್ ಕ್ಯಾಸ್ಟಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ಸೇರಿದಂತೆ ೫ ಜನರ ವಿರುದ್ಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಹಳೇನಗರ ವ್ಯಾಪ್ತಿಯ ಗಾಂಧಿನಗರ ನಿವಾಸಿ ಬಿ.ಎನ್ ರವಿ ಎಂಬುವರು ಕಳೆದ ೫ ದಿನಗಳ ಹಿಂದೆ ಫೆ.೧೯ರಂದು ದೂರು ದಾಖಲಿಸಿದ್ದಾರೆ. ಮಲ್ನಾಡ್ ಅಲಾಯ್ ಕ್ಯಾಸ್ಟಿಂಗ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ ವೈ.ವಿ ಮಧುಕರ್ ಜೋಯ್ಸ್, ಕಾರ್ಯನಿರ್ವಾಹಕ ನಿರ್ದೇಶಕ ಪ್ರತೀಕ್ ಜೋಯ್ಸ್, ಸಿ.ಇ.ಓ ಬಿ.ಎಸ್ ಜಗದೀಶ್, ಉತ್ಪಾದನಾ ವಿಭಾಗದ ವ್ಯವಸ್ಥಾಪಕ ರಾವಾ ಸಾಹೇಬ್ ಗಲೀಬಿ ಮತ್ತು ಕಚೇರಿ ಎಚ್.ಆರ್ ನಿರಂಜನ್ ವಿರುದ್ಧ ಮಾನಸಿಕ ಮತ್ತು ದೈಹಿಕ ಹಿಂಸೆ ಹಾಗು ಜಾತಿ ನಿಂದನೆ ಪ್ರಕರಣ ದಾಖಲಾಗಿದೆ.
ಮೋಚಿ ಪರಿಶಿಷ್ಟ ಜಾತಿ/ಪಂಗಡಕ್ಕೆ ಸೇರಿರುವ ದಲಿತ ಸಮುದಾಯದ ಬಿ.ಎನ್ ರವಿ ಕಳೆದ ೧೮ ವರ್ಷಗಳಿಂದ ಕಾರ್ಖಾನೆಯ ಉತ್ಪಾದನಾ ವಿಭಾಗದಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದು, ಕಾರ್ಮಿಕರ ಬೇಡಿಕೆಗಾಗಿ ಕಾರ್ಮಿಕ ಸಂಘದ ಅಧ್ಯಕ್ಷರ ಜೊತೆ ಸೇರಿ ಹೋರಾಟ ಮಾಡಿದ ಹಿನ್ನಲೆಯಲ್ಲಿ ಕಳೆದ ಸುಮಾರು ೨ ವರ್ಷಗಳಿಂದ ಇವರಿಗೆ ಮಾನಸಿಕ ಹಾಗು ದೈಹಿಕ ಹಿಂಸೆ ನೀಡುವ ಜೊತೆಗೆ ಅವಾಚ್ಯ ಶಬ್ದಗಳಿಂದ ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೆ ಕೆಲಸದಿಂದ ತೆಗೆದು ಹಾಕುವ ಹಾಗು ಜೀವ ಬೆದರಿಕೆ ಹಾಕಿದ್ದಾರೆಂದು ದೂರಿನಲ್ಲಿ ತಿಳಿಸಲಾಗಿದೆ.