Thursday, February 27, 2025

ಸಂವಿಧಾನ ಹಕ್ಕುಗಳ ಮಾನವ ಹಕ್ಕುಗಳ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ



ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಭದ್ರಾವತಿ ನ್ಯೂಟೌನ್ ರೋಟರಿ ಸಮುದಾಯ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಹಕ್ಕುಗಳ ಮಾನವ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಸಿ.ಪಿ.ಐ ರಾಜ್ಯ ಮಂಡಳಿ ಸದಸ್ಯರು, ಹಿರಿಯ ಕಾರ್ಮಿಕ ಮುಖಂಡರಾದ ಡಿ.ಸಿ ಮಾಯಣ್ಣ ಉದ್ಘಾಟಿಸಿದರು. 
    ಭದ್ರಾವತಿ: ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ನ್ಯೂಟೌನ್ ರೋಟರಿ ಸಮುದಾಯ ಭವನದಲ್ಲಿ ಗುರುವಾರ ಸಂವಿಧಾನ ಹಕ್ಕುಗಳ ಮಾನವ ಹಕ್ಕುಗಳ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 
    ಸಿ.ಪಿ.ಐ ರಾಜ್ಯ ಮಂಡಳಿ ಸದಸ್ಯರು, ಹಿರಿಯ ಕಾರ್ಮಿಕ ಮುಖಂಡರಾದ ಡಿ.ಸಿ ಮಾಯಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಇದಕ್ಕೂ ಮೊದಲು ಸಂವಿಧಾನ ಪೀಠಿಕೆ ವಾಚಿಸಲಾಯಿತು. 
    ನಿವೃತ್ತ ಪ್ರಾಧ್ಯಾಪಕ ಪ್ರೊ. ಎಂ. ಚಂದ್ರಶೇಖರಯ್ಯ ಉಪನ್ಯಾಸ ನೀಡಲಿದ್ದು, ಮಲೆನಾಡು ರೈತರ ಹೋರಾಟ ಸಮಿತಿ ಸಂಚಾಲಕ ತಿ.ನಾ ಶ್ರೀನಿವಾಸ್, ಎಂಪಿಎಂ ನೊಂದ ಕಾರ್ಮಿಕರ ಹೋರಾಟ ಸಮಿತಿ ಅಧ್ಯಕ್ಷ ಟಿ.ಜಿ ಬಸವರಾಜಯ್ಯ, ಮಾನವ ಹಕ್ಕುಗಳ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಐ.ಎಲ್ ಅರುಣ್ ಕುಮಾರ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ಡಿಎಸ್‌ಎಸ್ ರಾಜ್ಯ ಮುಖಂಡರಾದ ಸತ್ಯ ಭದ್ರಾವತಿ ಮತ್ತು ಜ್ಯೂನಿಯರ್ ವಿಷ್ಣುವರ್ಧನ್ ಎಂದೇ ಗುರುತಿಸಿಕೊಂಡಿರುವ ಕಲಾವಿದ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಅಪೇಕ್ಷ ಮಂಜುನಾಥ್ ಅವರ ೬೦ನೇ ವರ್ಷದ ಜನ್ಮ ದಿನಾಚರಣೆ ಅಂಗವಾಗಿ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು. ಅಲ್ಲದೆ ನಗರದ ಸುಮಾರು ೩೦ಕ್ಕೂ ಹೆಚ್ಚು ಗಣ್ಯರನ್ನು ಸಹ ಸನ್ಮಾನಿಸಿ ಗೌರವಿಸಲಾಯಿತು. 
ಸಾಹಿತಿ ಅರಳೇಹಳ್ಳಿ ಅಣ್ಣಪ್ಪ ಕಾರ್ಯಕ್ರಮ ನಿರೂಪಿಸಿದರು. ಮಾನವ ಹಕ್ಕುಗಳ ಹೋರಾಟ ಸಮಿತಿ ಪದಾಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಮಹಿಳಾ ಸಂಘಟನೆಗಳ ಪ್ರಮುಖರು ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. 

ಯಡಿಯೂರಪ್ಪ ೮೨ನೇ ಜನ್ಮದಿನ : ಹಣ್ಣು, ಬ್ರೆಡ್ ವಿತರಣೆ

ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ೮೨ನೇ ಜನ್ಮದಿನಾಚರಣೆ ಅಂಗವಾಗಿ ಭದ್ರಾವತಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು. 
    ಭದ್ರಾವತಿ: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರ ೮೨ನೇ ಜನ್ಮದಿನಾಚರಣೆ ಅಂಗವಾಗಿ ಗುರುವಾರ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಲಾಯಿತು. 
    ಪ್ರತಿ ವರ್ಷದಂತೆ ಈ ಬಾರಿ ಸಹ ಬಿಜೆಪಿ ತಾಲೂಕು ಮಂಡಲ ವತಿಯಿಂದ ದಣಿವರಿಯದ ಜನ ನಾಯಕ, ರೈತ ಬಂದು ಬಿ.ಎಸ್ ಯಡಿಯೂರಪ್ಪನವರ ಜನ್ಮದಿನಾಚರಣೆ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಣೆ ಮೂಲಕ ಸಾಮಾಜಿಕ ಸೇವಾ ಕಾರ್ಯಗಳೊಂದಿಗೆ ವಿಶೇಷವಾಗಿ ಆಚರಿಸಲಾಯಿತು. 
    ಈ ಸಂದರ್ಭದಲ್ಲಿ ಪ್ರಮುಖರು ಮಾತನಾಡಿ, ಯಡಿಯೂರಪ್ಪನವರು ತಮ್ಮ ಅಧಿಕಾರದ ಅವಧಿಯಲ್ಲಿ ಮಕ್ಕಳು, ಮಹಿಳೆಯರು, ವೃದ್ಧರು, ವಿದ್ಯಾರ್ಥಿಗಳು, ದೀನದಲಿತರು ಹಾಗು ರೈತರಿಗಾಗಿ ಜಾರಿಗೆ ತಂದಿರುವ ಜಾರಿಗೆ ತಂದಿರುವ ಹಲವಾರು ಯೋಜನೆಗಳು ಇಂದಿಗೂ ಮಾದರಿಯಾಗಿವೆ. ಅವರು ನಡೆದು ಬಂದ ದಾರಿ, ಸರ್ವಜನಾಂಗದವರ ಏಳಿಗಾಗಿ ನಡೆಸಿರುವ ಹೋರಾಟಗಳು ಎಲ್ಲರಿಗೂ ಮಾರ್ಗದರ್ಶಕವಾಗಿವೆ ಎಂದು ಬಣ್ಣಿಸಿದರು. 


ಭದ್ರಾವತಿ ಹೊಸಮನೆ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಬಿಜೆಪಿ ಮಂಡಲ ವತಿಯಿಂದ ಬಿ.ಎಸ್ ಯಡಿಯೂರಪ್ಪನವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಗವಂತ ಇನ್ನೂ ಹೆಚ್ಚಿನ ಆಯುರಾರೋಗ್ಯ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಲಾಯಿತು. 
    ಇದಕ್ಕೂ ಹೊಸಮನೆ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಬಿ.ಎಸ್ ಯಡಿಯೂರಪ್ಪನವರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಗವಂತ ಇನ್ನೂ ಹೆಚ್ಚಿನ ಆಯುರಾರೋಗ್ಯ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದರು. 
    ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ನೇತೃತ್ವ ವಹಿಸಿದ್ದರು. ಪ್ರಮುಖರಾದ ಕೂಡ್ಲಿಗೆರೆ ಹಾಲೇಶ್, ಬಿ.ಜಿ ರಾಮಲಿಂಗಯ್ಯ, ಎಂ. ಮಂಜುನಾಥ್, ಎಂ.ಎಸ್ ಸುರೇಶಪ್ಪ, ಜಿ. ಆನಂದಕುಮಾರ್, ಎಚ್. ತೀರ್ಥಯ್ಯ, ಜೆ. ಮೂರ್ತಿ, ಕಾ.ರಾ ನಾಗರಾಜ್, ರಾಜಶೇಖರ್ ಉಪ್ಪಾರ, ಸತೀಶ್ ಕುಮಾರ್, ಹನುಮಂತನಾಯ್ಕ, ಅಣ್ಣಪ್ಪ, ಬಿ.ಎಸ್ ಶ್ರೀನಾಥ್, ರಾಜು, ಸುಬ್ರಮಣಿ, ರಘುರಾವ್, ಹರೀಶ್, ನರೇಂದ್ರ, ಧನುಷ್ ಬೋಸ್ಲೆ, ನಂದೀಶ್, ಶರವಣ, ಮಂಜುಳಾ, ಅನುಷಾ, ಶಕುಂತಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ದೇವಸ್ಥಾನ ಜೀರ್ಣೋದ್ಧಾರಕ್ಕಾಗಿ ೧೦ ಲಕ್ಷ ರು. ಅನುದಾನ ಬಿಡುಗಡೆ

ಶಾಸಕರಿಗೆ ಗೆಳೆಯರ ಬಳಗ ಟ್ರಸ್ಟ್‌ನಿಂದ ಸನ್ಮಾನ 

ಭದ್ರಾವತಿ ಅಪ್ಪರ್‌ಹುತ್ತಾದಲ್ಲಿರುವ ಶ್ರೀ ನಂದಿ, ಈಶ್ವರ ಮತ್ತು ಸಂಕಷ್ಟಹರ ಗಣಪತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಸರ್ಕಾರದಿಂದ ೧೦ ಲಕ್ಷ ರು. ಅನುದಾನ ಬಿಡುಗಡೆ ಮಾಡಿಸಿಕೊಟ್ಟಿರುವ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಅಪ್ಪರ್‌ಹುತ್ತಾ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 
ಭದ್ರಾವತಿ: ಅಪ್ಪರ್‌ಹುತ್ತಾದಲ್ಲಿರುವ ಶ್ರೀ ನಂದಿ, ಈಶ್ವರ ಮತ್ತು ಸಂಕಷ್ಟಹರ ಗಣಪತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಸರ್ಕಾರದಿಂದ ೧೦ ಲಕ್ಷ ರು. ಅನುದಾನ ಬಿಡುಗಡೆ ಮಾಡಿಸಿಕೊಟ್ಟಿರುವ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅವರನ್ನು ಅಪ್ಪರ್‌ಹುತ್ತಾ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 
ಬುಧವಾರ ಮಹಾಶಿವರಾತ್ರಿ ಅಂಗವಾಗಿ ರಾತ್ರಿ ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದ ಶಾಸಕರನ್ನು ಬಳಗದ ವತಿಯಿಂದ ಸನ್ಮಾನಿಸಿ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ಕೋರಲಾಯಿತು. 
  ಅಪ್ಪರ್ ಹುತ್ತ ಗೆಳೆಯರ ಬಳಗ ಟ್ರಸ್ಟ್ ಅಧ್ಯಕ್ಷ ಹೇಮರಾಜ್, ಗೌರವಾಧ್ಯಕ್ಷ ಎಸ್.ಕೆ ಕುಮಾರ್, ಪ್ರಧಾನ ಕಾರ್ಯದರ್ಶಿ ಚರಣ್ ರಾಜ್, ರಾಜು, ರಾಜಣ್ಣ, ಶಿವಕುಮಾರ್, ಉಮಾ ಭಜನಾ ಮಂಡಳಿ ಸದಸ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
 

Mob: 9738801478
: 9482007466

ಮೀನಾಕ್ಷಿಯವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದ ವರದಿಗಳ ಕುರಿತು ಸ್ಪಷ್ಟೀಕರಣ



    ಭದ್ರಾವತಿ: ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ದಾಖಲಾಗಿರುವ ೫೯ ವರ್ಷದ ರೋಗಿ ಮೀನಾಕ್ಷಿಯವರ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ ಕೆಲ ಮಾಧ್ಯಮ ವರದಿಗಳಲ್ಲಿ ಬಂದಿರುವ ತಪ್ಪು ಮಾಹಿತಿ ಸ್ಪಷ್ಟಪಡಿಸುವ ಉದ್ದೇಶದಿಂದ, ಅವರ ಚಿಕಿತ್ಸೆಗೆ ಸಂಬಂಧಿಸಿದ ನಿಜವಾದ ಅಂಶಗಳನ್ನು ತಿಳಿಸಲು ಈ ಹೇಳಿಕೆ ಬಿಡುಗಡೆ ಮಾಡಲಾಗಿದೆ.
    ಮೀನಾಕ್ಷಿಯವರು, ೨೪ ಫೆಬ್ರವರಿ ಸೋಮವಾರದಂದು ಮತ್ತೊಂದು ಖಾಸಗಿ ಆಸ್ಪತ್ರೆಯಿಂದ ರೆಫರ್ ಆಗಿ ಸಹ್ಯಾದ್ರಿ ನಾರಾಯಣ ಆಸ್ಪತ್ರೆಗೆ ದಾಖಲಾಗಿದ್ದರು, ಅಲ್ಲಿ ಅವರು ಸೋಂಕು ಮತ್ತು ರಕ್ತದೊತ್ತಡ ಕುಸಿತಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಪಡೆಯುತ್ತಿದ್ದರು. ನಮ್ಮ ಆಸ್ಪತ್ರೆಗೆ ದಾಖಲಾದ ಕೂಡಲೇ ಅವರನ್ನು ತುರ್ತು ನಿಗಾ ಘಟಕಕ್ಕೆ ಕರೆದೊಯ್ಯಲಾಯಿತು ಮತ್ತು ನಂತರ ವೈದ್ಯಕೀಯ ತೀವ್ರ ನಿಗಾ ಘಟಕ (ಎಂಐಸಿಯು) ಗೆ ವರ್ಗಾಯಿಸಲಾಯಿತು. ಅವರ ಗಂಭೀರ ಸ್ಥಿತಿಯನ್ನು ಗಮನಿಸಿ, ವೆಂಟಿಲೇಟರ್ ಸಹಿತ ಸಂಪೂರ್ಣ ಚಿಕಿತ್ಸೆ ನೀಡಲಾಯಿತು.
    ಕೆಲವು ಮಾಧ್ಯಮ ವರದಿಗಳಲ್ಲಿ, ನಮ್ಮ ವೈದ್ಯರು ಮೀನಾಕ್ಷಿಯವರನ್ನು ಮೃತ ಪಟ್ಟಿದ್ದಾರೆ ಎಂದು ಘೋಷಿಸಿದರು ಮತ್ತು ಅವರ ಮನೆಗೆ ತಲುಪಿದ ಮೇಲೆ "ಅವರು  ಮತ್ತೆ ಉಸಿರಾಡಲು ಪ್ರಾರಂಭಿಸಿದರು" ಎಂಬ ಮಾಹಿತಿ ತಪ್ಪಾಗಿ ಪ್ರಕಟಿಸಲಾಗಿದೆ. ನಾವು ಈ ವರದಿಗಳನ್ನು ಪೂರ್ತಿಯಾಗಿ ತಿರಸ್ಕರಿಸುತ್ತೇವೆ. ನಮ್ಮ ವೈದ್ಯರು ಯಾವುದೇ ಹಂತದಲ್ಲಿಯೂ ರೋಗಿ ಮೃತ ಪಟ್ಟಿದ್ದಾರೆ ಎಂದು ಘೋಷಿಸಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತೇವೆ. ಕುಟುಂಬದ ಒತ್ತಾಯದ ಮೇರೆಗೆ, ವೈದ್ಯಕೀಯ ಸಲಹೆ ವಿರುದ್ಧ (ಡಿಎಎಂಎ) ಅವರನ್ನು ಬಿಡುಗಡೆ ಮಾಡಲಾಯಿತು.
    ೨೫ ಫೆಬ್ರವರಿ ಮಂಗಳವಾರದ ಬೆಳಿಗ್ಗೆ, ಅವರ ಆರೋಗ್ಯ ಮತ್ತಷ್ಟು ಗಂಭೀರಗೊಂಡಿದ್ದರಿಂದ ಅವರ ಆರೋಗ್ಯ ಪುನಶ್ಚೇತನಗೊಳ್ಳುವ ಸಾಧ್ಯತೆ ಕಡಿಮೆ ಇರುವ ಬಗ್ಗೆ ಕುಟುಂಬಕ್ಕೆ ತಿಳಿಸಲಾಯಿತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲು ರೋಗಿ ಸಂಬಂಧಿಕರಿಗೆ ತಿಳಿಸಿದರೂ, ಕುಟುಂಬದ ಸದಸ್ಯರು ಅವರ ಬಿಡುಗಡೆಗಾಗಿ ಒತ್ತಾಯಿಸಿದರು. ಹೀಗಾಗಿ, ವೈದ್ಯಕೀಯ ಸಲಹೆಯ ವಿರುದ್ಧವಾಗಿ, ಅಂದು ಬೆಳಿಗ್ಗೆ ಅವರನ್ನು ಬಿಡುಗಡೆ ಮಾಡಲಾಯಿತು. ವೈದ್ಯಕೀಯ ತಂಡವು ಅದರಿಂದ ಉಂಟಾಗಬಹುದಾದ ಅಪಾಯಗಳ ಬಗ್ಗೆ ಕುಟುಂಬಕ್ಕೆ ಸ್ಪಷ್ಟವಾದ ಮಾಹಿತಿ ನೀಡಿತ್ತು. ಆ ನಂತರ, ಮನೆಗೆ ತಲುಪಿದ ಬೆನ್ನಲ್ಲೇ, ರೋಗಿಯ ಪ್ರತಿಕ್ರಿಯೆಯಲ್ಲಿ ಸ್ವಲ್ಪ ಚೇತರಿಕೆ ಕಂಡು ಬಂದಂತೆ ಕಂಡುಬಂದ ಕಾರಣ, ಅವರ ಕುಟುಂಬ ಅದೇ ದಿನ ಕೆಲವೇ ಗಂಟೆಗಳಲ್ಲಿ ಅವರನ್ನು ಮತ್ತೆ ಆಸ್ಪತ್ರೆಗೆ ಕರೆದುಕೊಂಡು ಬಂದರು. ತಕ್ಷಣ ಅವರನ್ನು ಪುನಃ ದಾಖಲಿಸಿ, ನಮ್ಮ ವೈದ್ಯಕೀಯ ತಂಡ ಅವರಿಗೆ ಅಗತ್ಯವಾದ ಚಿಕಿತ್ಸೆ ನೀಡಿದೆ.
    ಮಾಧ್ಯಮ ಪ್ರತಿನಿಧಿಗಳಿಗೆ ಈ ಅಧಿಕೃತ ಹೇಳಿಕೆಯನ್ನು ಆಧಾರವಾಗಿ ಬಳಸುವಂತೆ ಮನವಿ ಮಾಡುತ್ತೇವೆ. ಹೆಚ್ಚಿನ ಸ್ಪಷ್ಟೀಕರಣಕ್ಕಾಗಿ, ದಯವಿಟ್ಟು ಶ್ರೀ ಕಿಶನ್ ಸಿಂಗ್, ಬ್ರ್ಯಾಂಡ್‌ಕಾಂ PR, ಮೊಬೈಲ್: +೯೧ ೭೦೯೦೭೧೧೯೧೬, ಇಮೇಲ್: kishan@brandcompr.com ಗೆ ಸಂಪರ್ಕಿಸಬಹುದು.

ಭದ್ರಾವತಿ ವಿವಿಧೆಡೆ ಈಶ್ವರ ದೇವಾಲಯಗಳಲ್ಲಿ ಮಹಾಶಿವರಾತ್ರಿ ಆಚರಣೆ

ಭದ್ರಾವತಿ ನಗರದ ಹೃದಯ ಭಾಗದಲ್ಲಿ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಾಲಯದಲ್ಲಿ ಮಹಾರಾತ್ರಿ ಆಚರಣೆ ಅಂಗವಾಗಿ ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. 
    ಭದ್ರಾವತಿ: ನಗರದ ವಿವಿಧೆಡೆ ಈಶ್ವರ ದೇವಾಲಯಗಳಲ್ಲಿ ಮಹಾಶಿವರಾತ್ರಿ ಹಬ್ಬ ಈ ಬಾರಿ ಸಹ ವಿಜೃಂಭಣೆಯಿಂದ ಆಚರಿಸಲಾಯಿತು. ಬಹುತೇಕ ದೇವಾಲಯಗಳಲ್ಲಿ ಭಕ್ತ ಸಮೂಹವೇ ಕಂಡು ಬಂದಿತು.  ದೇವಾಲಯಗಳು ಹಸಿರು ತೋರುಣಗಳಿಂದ, ವಿದ್ಯುತ್ ಹಾಗು ಪುಷ್ಪಾಂಲಕಾರಗಳಿಂದ ಆಕರ್ಷಕವಾಗಿ ಕಂಗೊಳಿಸಿದವು. ಹಗಲು-ರಾತ್ರಿ ಬಿಡುವಿಲ್ಲದೆ ಧಾರ್ಮಿಕ ಆಚರಣೆಗಳು ಜರುಗಿದವು. ಇದಕ್ಕೆ ಪೂರಕವೆಂಬಂತೆ ಭಕ್ತರು ಸಹ ಪಾಲ್ಗೊಂಡು ಭಕ್ತಿ ಮೆರೆದರು.
     ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನ :
    ಹೊಸಮನೆ ಎನ್.ಎಂ.ಸಿ ಎಡಭಾಗದಲ್ಲಿರುವ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ರುದ್ರಾಭಿಷೇಕ, ರುದ್ರಹೋಮ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಅಲ್ಲದೆ ಕೇಶವಪುರ ಬಡಾವಣೆಯ ಶ್ರೀ ಕೃಷ್ಣ ಸತ್ಸಂಗ ಮತ್ತು ಕದಳಿ ವೇದಿಕೆ ತಂಡಗಳಿಂದ ಭಜನೆ, ಜ್ಞಾನವಾಹಿನಿ ಭಜನೆ ತಂಡದಿಂದ ಭಜನೆ, ಹೊಸಮನೆ ಶ್ರೀ ಮಲ್ಲಿಕಾರ್ಜುನ ಭಜನಾ ಮಂಡಳಿಯಿಂದ ಮ್ಯಾನ್ಯೂಲ್ ಭಕ್ತಿಗಾಯನ ಲಹರಿ, ಧರ್ಮಶಾಸ್ತ್ರ ಭಜನಾ ಮಂಡಳಿಯಿಂದ ಭಜನೆ ಹಾಗು ಶಿವಮೊಗ್ಗ ಗಾಯಕ ಪ್ರೀತಮ್ ಮತ್ತು ತಂಡದಿಂದ ಭಕ್ತಿಗೀತೆಗಳು ಜರುಗಿದವು. 
    ಶ್ರೀ ಭದ್ರಾ ಶಿವಾಲಯ ಸಮಿತಿ ಅಧ್ಯಕ್ಷ ಜಿ. ಆನಂದಕುಮಾರ್ ನೇತೃತ್ವ ವಹಿಸಿದ್ದರು. ಸಮಿತಿ ಪದಾಧಿಕಾರಿಗಳು ಹಾಗು ಸದಸ್ಯರು, ಸ್ಥಳೀಯ ಮುಖಂಡರು, ಗಣ್ಯರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ನಗರದ ವಿವಿಧ ಭಾಗಗಳಿಂದ ಭಕ್ತಾಧಿಗಳು ಆಗಮಿಸಿ ಸ್ವಾಮಿಯ ಕೃಪೆಗೆ ಪಾತ್ರರಾದರು.
    ಶ್ರೀ ಸಂಗಮೇಶ್ವರ ದೇವಾಲಯ: 
    ನಗರದ ಹೃದಯ ಭಾಗದಲ್ಲಿ ಭದ್ರಾ ನದಿಯಲ್ಲಿರುವ ಶ್ರೀ ಸಂಗಮೇಶ್ವರ ದೇವಾಲಯದಲ್ಲಿ ಸ್ವಾಮಿಯ ದರ್ಶನ ಪಡೆಯಲು ಬುಧವಾರ ಬೆಳಿಗ್ಗೆಯಿಂದಲೇ ಭಕ್ತಾರು ಸಾಲುಗಟ್ಟಿ ನಿಂತಿರುವುದು ಕಂಡು ಬಂದಿತು.
    ಪ್ರತಿ ವರ್ಷದಂತೆ ಈ ಬಾರಿ ಸಹ ವೀರಶೈವ ಸೇವಾ ಸಮಿತಿವತಿಯಿಂದ ಧಾರ್ಮಿಕ ಆಚರಣೆಗಳು ಜರುಗಿದವು. ಮಂಗಳವಾರ ಸಂಜೆ ಗಣಹೋಮ, ರುದ್ರಹೋಮ, ನವಗ್ರಹ ಪೂಜೆ ಜರುಗಿದವು. ಬೆಳಿಗ್ಗೆ  ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣಪತಿ, ಶ್ರೀ ಸಂಗಮೇಶ್ವರಸ್ವಾಮಿ, ನಂದಿ, ನಾಗದೇವತೆ ದೇವರುಗಳಿಗೆ ರುದ್ರಾಭಿಷೇಕ ನೆರವೇರಿತು. ವೀರಶೈವ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಶಿವರಾತ್ರಿ ಆಚರಣಾ ಉಸ್ತುವಾರಿ ವಿವಿಧ ಸಮಿತಿಗಳ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ದೇವಸ್ಥಾನದ ಸಮೀಪ ಸೇವಾಕರ್ತರಿಂದ ಭಕ್ತರಿಗೆ ಕಲ್ಲಂಗಡಿ ಹಣ್ಣು, ಕೋಸಂಬರಿ, ಪಾನಕ ವಿತರಣೆ ನೆರವೇರಿತು. ಸ್ಥಳೀಯ ಸಂಘ-ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ, ರಾಜಕೀಯ ಪಕ್ಷಗಳ ಪ್ರಮುಖರು, ಗಣ್ಯರು ಸೇರಿದಂತೆ ನಗರದ ವಿವಿಧೆಡೆಗಳಿಂದ ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು. 
    ಶ್ರೀ ಮರುಳಸಿದ್ದೇಶ್ವರಸ್ವಾಮಿ ದೇವಸ್ಥಾನ :
    ಡೈರಿ ಸಮೀಪದ ಜೇಡಿಕಟ್ಟೆಯಲ್ಲಿರುವ ಮರುಳಸಿದ್ದೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಅಂಗವಾಗಿ ಬಿಳಿಕಿ ಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಇಷ್ಟಲಿಂಗ ಪೂಜೆ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗು ಅನ್ನ ದಾಸೋಹ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
    ದೇವಸ್ಥಾನದ ಮುಖ್ಯ ಅರ್ಚಕ ತಿಪ್ಪೇಸ್ವಾಮಿ, ಶ್ರೀ ಮರುಳಸಿದ್ದೇಶ್ವರಸ್ವಾಮಿ ಜನ ಕಲ್ಯಾಣ ಟ್ರಸ್ಟ್ ಅಧ್ಯಕ್ಷ ಸಿದ್ದಲಿಂಗಯ್ಯ ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು. ಜೇಡಿಕಟ್ಟೆ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಂದ ಭಕ್ತರು ಆಗಮಿಸಿ ಸ್ವಾಮಿಯ ದರ್ಶನ ಪಡೆದು ಕೃಪೆಗೆ ಪಾತ್ರರಾದರು.
    ಲೋಯರ್ ಹುತ್ತಾ ಬಿ.ಎಚ್ ರಸ್ತೆಯಲ್ಲಿರುವ ಶ್ರೀ ಭದ್ರೇಶ್ವರ ದೇವಸ್ಥಾನ, ಅಪ್ಪರ್‌ಹುತ್ತಾದಲ್ಲಿರುವ ಶ್ರೀ ನಂದಿ, ಈಶ್ವರ ಮತ್ತು ಸಂಕಷ್ಟಹರ ಗಣಪತಿ ದೇವಸ್ಥಾನ, ನಗರದ ನ್ಯೂಟೌನ್ ಶಿವ ಸಾಯಿ ಕೃಪಾ ಧಾಮ, ಕಾಗದನಗರದ ಶ್ರೀ ಈಶ್ವರ ದೇವಸ್ಥಾನ, ಜನ್ನಾಪುರ ಶ್ರೀ ಮಲ್ಲೇಶ್ವರ ಸ್ವಾಮಿ ದೇವಸ್ಥಾನ, ಕೆ.ಸಿ ಬಡಾವಣೆ ಹಾಲಪ್ಪ ಶೆಡ್‌ನಲ್ಲಿರುವ ಶ್ರೀ ನಾಗದೇವಾಲಯ, ವೀರಾಪುರ ಹುಲಿಬಂಡೆ ಸಿದ್ದೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ ವಿವಿಧ ದೇವಾಲಯಗಳಲ್ಲಿ ಮಹಾಶಿವರಾತ್ರಿ ವಿಜೃಂಭಣೆಯಿಂದ ಜರುಗಿತು.  
 

ಭದ್ರಾವತಿ ಹೊಸಮನೆ ಎನ್.ಎಂ.ಸಿ ಎಡಭಾಗದಲ್ಲಿರುವ ಶ್ರೀ ಮಲ್ಲಿಕಾರ್ಜುನಸ್ವಾಮಿ ದೇವಸ್ಥಾನದಲ್ಲಿ ಸ್ವಾಮಿಗೆ ರುದ್ರಾಭಿಷೇಕ, ರುದ್ರಹೋಮ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಶ್ರೀ ಭದ್ರಾ ಶಿವಾಲಯ ಸಮಿತಿ ಅಧ್ಯಕ್ಷ ಜಿ. ಆನಂದಕುಮಾರ್ ನೇತೃತ್ವ ವಹಿಸಿದ್ದರು. ಸಮಿತಿ ಪದಾಧಿಕಾರಿಗಳು ಹಾಗು ಸದಸ್ಯರು, ಸ್ಥಳೀಯ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.