Wednesday, March 12, 2025

ಗಾಂಜಾ ಸೇವನೆ : ಪ್ರಕರಣ ದಾಖಲು


    ಭದ್ರಾವತಿ : ನಗರದ ಎಂಪಿಎಂ ಬಡಾವಣೆಯಲ್ಲಿ ಮಾದಕ ವಸ್ತು ಗಾಂಜಾ ಸೇವಿಸಿ ಅಮಲಿನಲ್ಲಿ ಓಡಾಡುತ್ತಿದ್ದ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ನಡೆದಿದೆ. 
    ಪೇಪರ್‌ಟೌನ್ ಪೊಲೀಸ್ ಠಾಣೆ ಸಿಬ್ಬಂದಿ ಎಚ್.ಪಿ ವಿಕ್ರಮ್ ಮಾ.೧೧ರಂದು ಗಸ್ತಿನಲ್ಲಿದ್ದಾಗ ಮಧ್ಯಾಹ್ನ ೨.೪೫ ಸಮಯದಲ್ಲಿ ಎಂಪಿಎಂ ಬಡಾವಣೆ ವ್ಯಾಪ್ತಿಯಲ್ಲಿ ಯಾರೋ ಒಬ್ಬ ವ್ಯಕ್ತಿಯು  ಅಮಲಿನಲ್ಲಿ ಓಡಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆತನನ್ನು ವಶಕ್ಕೆ ಪಡೆದು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಲಾಗಿ ಆತ ಮಾದಕ ವಸ್ತುವಾದ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. 

ಪುರುಷರು ಮಹಿಳೆಯರ ಸ್ವಾತಂತ್ರ್ಯ ಕಸಿದುಕೊಳ್ಳದಂತೆ ಎಚ್ಚರಿಕೆ ನೀಡಿ : ಡಾ. ವಿಜಯದೇವಿ

 

ಭದ್ರಾವತಿ ಜನ್ನಾಪುರ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೋಟರಿ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಎಂದು ಸಾಹಿತಿ, ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ `ಕಾರುಣ್ಯ ವರ್ಷದ ಮಹಿಳೆ ಪ್ರಶಸ್ತಿ' ಸ್ವೀಕರಿಸಿದರು. 
    ಭದ್ರಾವತಿ: ಮಹಿಳೆ ಎಂದಿಗೂ ಪುರುಷನನ್ನು ಬಿಟ್ಟು ಪ್ರತ್ಯೇಕವಾಗಿ ಇರಲು ಸಾಧ್ಯವಿಲ್ಲ. ಸಮಾಜದಲ್ಲಿ ಇಬ್ಬರು ಒಟ್ಟಿಗೆ ಬದುಕಲೇ ಬೇಕು. ಆದರೆ ಪುರುಷ ಮಹಿಳೆ ತನಗಾಗಿ ಮಾತ್ರ, ತನ್ನ ಹಿಡಿತದಲ್ಲಿಯೇ ಇರಬೇಕೆಂದು ಬಯಸುವುದು ಸರಿಯಲ್ಲ. ಆಕೆಯ ಸ್ವಾತಂತ್ರ್ಯ ಕಸಿದುಕೊಳ್ಳದಂತೆ ಎಚ್ಚರಿಕೆ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಸಾಹಿತಿ, ಎಮೆರಿಟಸ್ ಪ್ರಾಧ್ಯಾಪಕಿ ಡಾ. ವಿಜಯದೇವಿ ಹೇಳಿದರು. 
    ಅವರು ಬುಧವಾರ ನಗರದ ಜನ್ನಾಪುರ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರೋಟರಿ ಕ್ಲಬ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ `ಕಾರುಣ್ಯ ವರ್ಷದ ಮಹಿಳೆ ಪ್ರಶಸ್ತಿ' ಸ್ವೀಕರಿಸಿ ಮಾತನಾಡಿದರು. 
    ಮಹಿಳೆಯರಿಗೆ ಡಾ.ಬಿ.ಆರ್ ಅಂಬೇಡ್ಕರ್‌ರವರು ಕುಟುಂಬದಲ್ಲಿನ ಪುರುಷರ ಹಿಡಿತದಿಂದ ಹೊರತಂದು ಅವರಿಗೆ ಸಂವಿಧಾನ ಬದ್ಧ ಸಮಾನತೆ ಹಕ್ಕನ್ನು ನೀಡಿದ್ದಾರೆ. ಈ ಹಕ್ಕು ನಮ್ಮೆಲ್ಲರಿಗೂ ಸಂತೋಷ, ಸಂಭ್ರಮವನ್ನುಂಟು ಮಾಡಿದೆ. ನಾವು ಈ ಹಕ್ಕನ್ನು ಸದ್ಬಳಕೆ ಮಾಡಿಕೊಂಡು ಪುರುಷರೊಂದಿಗೆ ಭವಿಷ್ಯದ ಸಮಾಜ ರೂಪಿಸಿಕೊಳ್ಳಬೇಕೆಂದರು. 
    ಸಮಾಜದಲ್ಲಿ ಮಹಿಳೆಯರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆಗೆ ಗಮನ ಹರಿಸುವ ಅಗತ್ಯವಿದೆ. ಜೊತೆಗೆ ಮಹಿಳೆಯರು ಸಹ ತಮ್ಮ ಜವಾಬ್ದಾರಿಗಳನ್ನು ಅರಿತು ಪುರುಷರೊಂದಿಗೆ ಭವಿಷ್ಯದ ಸಮಾಜ ಕಟ್ಟುವ ಕಾರ್ಯದಲ್ಲಿ ಕೈಜೋಡಿಸಬೇಕೆಂದರು. 
    ಕಾರ್ಯಕ್ರಮವನ್ನು ದಲಿತ ಚಳುವಳಿಯ ರೂವಾರಿ, ಡಿಎಸ್‌ಎಸ್ ಸಂಸ್ಥಾಪಕ ಪ್ರೊ. ಬಿ. ಕೃಷ್ಣಪ್ಪನವರ ಧರ್ಮಪತ್ನಿ, ಚಿಂತಕಿ ಇಂದಿರಾ ಕೃಷ್ಣಪ್ಪ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಸರ್ಕಾರಿ ಅಭಿಯೋಜಕ ಮಮತ ಸೇರಿದಂತೆ ಇನ್ನಿತರರು ಮಾತನಾಡಿದರು. 
ಕಾರುಣ್ಯ ಚಾರಿಟೇಬಲ್ ಅಧ್ಯಕ್ಷ ಜಿ. ರಾಜು, ನಗರಸಭೆ ಸದಸ್ಯರಾದ ಜಯಶೀಲ, ನಾಗರತ್ನ ಅನಿಲ್‌ಕುಮಾರ್, ಸವಿತ ಉಮೇಶ್,  ಡಿಎಸ್‌ಎಸ್ ಮುಖಂಡ ಸಿ. ಜಯಪ್ಪ, ಆರ್.ಎಸ್ ಶೋಭಾ, ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಎಂ. ಸುಹಾಸಿನಿ, ಪೇಪರ್‌ಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಕವಿತ, ದುರ್ಗಾದೇವಿ ಮಣಿಶೇಖರ್  ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ನಗರದ ವಿವಿಧ ಮಹಿಳಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಮಂಜುಳಾ ಸ್ವಾಗತಿಸಿ, ನಾಗವೇಣಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಎ. ತಿಪ್ಪೇಸ್ವಾಮಿ ಕಾರ್ಯಕ್ರಮ ನಿರೂಪಿಸಿ, ಜೀವಾ ವಂದಿಸಿದರು. ಟ್ರಸ್ಟ್ ಪದಾಧಿಕಾರಿಗಳು, ಸೇವಾಕರ್ತರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 


ಮಾ.೧೬ರಂದು ಮೊದಲ ಬಾರಿಗೆ ತಾಲೂಕು ಮಟ್ಟದ ಜಾನಪದ ಸಮ್ಮೇಳನ

ಸಮ್ಮೇಳನ ಸರ್ವಾಧ್ಯಕ್ಷರಾಗಿ ಲಕ್ಷ್ಮಣ್‌ರಾವ್ ಬೋರತ್

ಭದ್ರಾವತಿ ಹೊಸಮನೆ ನಿವಾಸಿ ಚೌಡಿಕೆ ಕಲಾವಿದರಾದ ಲಕ್ಷ್ಮಣ್‌ರಾವ್  ಬೋರತ್‌ರವರನ್ನು ತಾಲೂಕು ಮಟ್ಟದ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ಹಾಗೂ ಸದಸ್ಯರು ಲಕ್ಷ್ಮಣ್ ರಾವ್‌ಬೋರತ್‌ರವರ ನಿವಾಸಕ್ಕೆ ತೆರಳಿ ಅಭಿನಂದಿಸಿದರು. 
    ಭದ್ರಾವತಿ: ಕರ್ನಾಟಕ ಜಾನಪದ ಪರಿಷತ್ ತಾಲೂಕು ಶಾಖೆ, ಹಿರಿಯೂರು ಹೋಬಳಿ ಘಟಕ ನೇತೃತ್ವದಲ್ಲಿ ಮೊದಲ ಬಾರಿಗೆ ತಾಲೂಕು ಮಟ್ಟದ ಜಾನಪದ ಸಮ್ಮೇಳನ ಹಾಗು ಜಾನಪದ ಸಿರಿ ಪ್ರಶಸ್ತಿ ಪ್ರದಾನ ಸಮಾರಂಭ ಮಾ.೧೬ರಂದು ತಾಲೂಕಿನ ಗೊಂದಿ ಗ್ರಾಮದ ಶ್ರೀ ಪಾಂಡುರಂಗ ಸಾಧಕಾಶ್ರಮದಲ್ಲಿ ಆಯೋಜಿಸಲಾಗಿದೆ. 
    ಗೊಂದಿ ಶ್ರೀ ಪಾಂಡುರಂಗ ಸಾಧಕಾಶ್ರಮದ ಮಾತಾ ಮುಕ್ತಾನಂದಮಯಿ ದಿವ್ಯ ಸಾನಿಧ್ಯವಹಿಸಲಿದ್ದು, ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಆಶಯ ನುಡಿಗಳನ್ನಾಡಲಿದ್ದಾರೆ. ಚನ್ನಗಿರಿ ಸಿದ್ದನ ಮಠದ ಆಧುನಿಕ ಸರ್ವಜ್ಞ ಯುಗಧರ್ಮ ರಾಮಣ್ಣ ಸಮ್ಮೇಳನ ಉದ್ಘಾಟಿಸಲಿದ್ದಾರೆ. 
    ಸಮ್ಮೇಳನಾಧ್ಯಕ್ಷ ಚೌಡಿಕೆ ಕಲಾವಿದ ಲಕ್ಷ್ಮಣ್‌ರಾವ್ ಬೋರತ್ ಸಮ್ಮೇಳನ ನುಡಿಗಳನ್ನಾಡಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಹಿರಿಯ ಕಲಾವಿದರಿಗೆ ಜಾನಪದ ಸಿರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ಅಧ್ಯಕ್ಷತೆ ವಹಿಸಲಿದ್ದು, ಹಿರಿಯೂರು ಹೋಬಳಿ ಘಟಕ ಅಧ್ಯಕ್ಷ ಜಯರಾಂ ಗೊಂದಿ, ಅರಳಿಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ, ಸದಸ್ಯರಾದ ಬಿ. ಸುರೇಶ್, ಎಸ್. ರಾಜು, ಅಭಿವೃದ್ಧಿ ಅಧಿಕಾರಿ ಸುರೇಶ್, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ ಹಾಗು ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 
    ಕಲಾವಿದರಾದ ಲಕ್ಷ್ಮಮ್ಮ(ಸೋಬಾನೆ ಪದ), ಭಾಗ್ಯಬಾಯಿ(ಲಂಬಾಣಿ ನೃತ್ಯ), ವೆಂಕಟರಮಣ(ತಮಟೆ ವಾದನ), ಕಣ್ಣನ್(ಭಜನೆ ಪದ), ಜಂಬೂಸ್ವಾಮಿ(ಜಾನಪದ ಗಾಯನ), ಶಿವಾಜಿ ರಾವ್(ಡೊಳ್ಳು ಕುಣಿತ) ಮತ್ತು ಹನುಮಂತ್‌ರಾವ್(ರಂಗಕಲೆ) ಅವರಿಗೆ ಜಾನಪದ ಸಿರಿ ಪ್ರಶಸ್ತಿ ನೀಡಲಾಗುವುದು. 
    ಎಮ್ಮಹಟ್ಟಿ ಅನಿಲ್ ಕುಮಾರ್ ಮತ್ತು ಸಂಗಡಿಗರಿಂದ ಡೊಳ್ಳು ಕುಣಿತ, ತಾರೀಕಟ್ಟೆ ಶೇಖರ್ ಮತ್ತು ಸಂಗಡಿಗರು ಹಾಗು ಜೆ. ಪ್ರಶಾಂತ್ ಮತ್ತು ಸಂಗಡಿಗರಿಂದ ತಮಟೆ ಕುಣಿತ, ಹೊಸಮನೆ ಲಕ್ಷ್ಮಣ್ ರಾವ್ ಮತ್ತು ಕುಟುಂಬ ಹಾಗು ಕೇಶವ ಮತ್ತು ಸಂಗಡಿಗರಿಂದ ಚೌಡಿಕೆ ಗೊಂದಲಿಗರ ಪದ, ಹಿರಿಯೂರು ನಗರಾಜ್ ಮತ್ತು ಸಂಗಡಿಗರಿಂದ ವೀರಗಾಸೆ, ದಿವಾಕರ್ ಮತ್ತು ಸಂಗಡಿಗರಿಂದ ಲಂಬಾಣಿ ನೃತ್ಯ, ತಿಮ್ಲಾಪುರ ಮಹಾದೇವಿ ಮತ್ತು ಸಂಗಡಿಗರು, ರಮಾ ಮತ್ತು ಸಂಗಡಿಗರು ಹಾಗು ಓಂಕಾರ ಯೋಗ ತಂಡದಿಂದ ಕೋಲಾಟ ನಡೆಯಲಿವೆ.  ಅಲ್ಲದೆ ಪುಟಾಣಿ ಮಕ್ಕಳಿಂದ ಕಂಸಾಳೆ ನೃತ್ಯ, ಲಂಬಾಣಿ ನೃತ್ಯ, ಸುಗ್ಗಿ ಕುಣಿತ ಮತ್ತು ಜಾನಪದ ನೃತ್ಯ ಜರುಗಲಿವೆ. ಕಲಾವಿದರು, ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮ್ಮೇಳನ ಯಶಸ್ರಿಗೊಳಿಸುವಂತೆ ಕೋರಲಾಗಿದೆ. 
  ಸಮ್ಮೇಳನದ ಸರ್ವಾಧ್ಯಕ್ಷರಾಗಿ ಲಕ್ಷ್ಮಣ್‌ರಾವ್ ಬೋರತ್: 
    ಹೊಸಮನೆ ನಿವಾಸಿ ಚೌಡಿಕೆ ಕಲಾವಿದರಾದ ಲಕ್ಷ್ಮಣ್‌ರಾವ್  ಬೋರತ್‌ರವರನ್ನು ತಾಲೂಕು ಮಟ್ಟದ ಜಾನಪದ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ. 
    ಪರಿಷತ್ ತಾಲೂಕು ಶಾಖೆ ಅಧ್ಯಕ್ಷ ಎಂ.ಆರ್ ರೇವಣಪ್ಪ ಹಾಗೂ ಸದಸ್ಯರು ಲಕ್ಷ್ಮಣ್ ರಾವ್‌ಬೋರತ್‌ರವರ ನಿವಾಸಕ್ಕೆ ತೆರಳಿ ಅಭಿನಂದಿಸಿದರು. ಪರಿಷತ್ ಪ್ರಧಾನ ಕಾರ್ಯದರ್ಶಿ ಮೋಹನ್ ಹಾಗೂ ಲತಾ, ಕಮಲಾಕರ್, ಬಿ.ಎಚ್ ಪ್ರಶಾಂತ್, ದಿವಾಕರ್, ಜಂಬೂಸ್ವಾಮಿ, ಶಿವರಾಜ್, ಹರೀಶ್, ಭಾರ್ಗವಿ ಮತ್ತು ಶಶಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.