ಭದ್ರಾವತಿ ಎಂಪಿಎಂ ಕಾರ್ಖಾನೆ ಪುನರ್ ಪ್ರಾರಂಭಿಸುವ ಕುರಿತು ಸದನದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಚರ್ಚಿಸಿದ ಪರಿಣಾಮ ಶುಕ್ರವಾರ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಸಭೆ ಜರುಗಿತು.
ಭದ್ರಾವತಿ : ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆ (ಎಂ.ಪಿ.ಎಂ) ಪುನರ್ ಪ್ರಾರಂಭಿಸುವ ಸಂಬಂಧ ಅರಣ್ಯ ಇಲಾಖೆಯಿಂದ ಎದುರಾಗಿರುವ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಅರಣ್ಯ ಖಾತೆ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ತಿಳಿಸಿದ್ದಾರೆ.
ಕಳೆದ ೩ ದಿನಗಳ ಹಿಂದೆ ಎಂಪಿಎಂ ಕಾರ್ಖಾನೆ ಪುನರ್ ಪ್ರಾರಂಭಿಸುವ ಕುರಿತು ಸದನದಲ್ಲಿ ನಾನು ಚರ್ಚಿಸಿದ ಪರಿಣಾಮ ಶುಕ್ರವಾರ ಸಚಿವ ಈಶ್ವರ ಖಂಡ್ರೆ ಸಮ್ಮುಖದಲ್ಲಿ ಸಭೆ ಜರುಗಿತು. ಪ್ರಸ್ತುತ ಎಂಪಿಎಂ ಕಾರ್ಖಾನೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿ ಸಚಿವರಿಗೆ ತಿಳಿಸುವ ಮೂಲಕ ಕಾರ್ಖಾನೆ ಪುನರ್ ಪ್ರಾರಂಭಿಸುವುದರಿಂದ ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸುವಂತಹ ಕಾರ್ಯ ಸಾಕಾರಗೊಳ್ಳುವ ಕುರಿತು ಮನವರಿಕೆ ಮಾಡಿಕೊಡಲಾಯಿತು.
ಸಚಿವರು, ಅರಣ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ಹಾಗೂ ಹಿರಿಯ ಅರಣ್ಯ ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿ ಆದಷ್ಟು ಬೇಗನೆ ಕಾರ್ಖಾನೆಯನ್ನು ಪುನರ್ ಪ್ರಾರಂಭಿಸಲು ಎಲ್ಲ ರೀತಿಯ ಸಹಕಾರ ನೀಡಲು ಬದ್ಧರಿರುವುದಾಗಿ ತಿಳಿಸಿದ್ದು, ಇದರಿಂದಾಗಿ ಮುಂದಿನ ದಿನಗಳಲ್ಲಿ ಕಾರ್ಖಾನೆ ಪುನರ್ ಪ್ರಾರಂಭಿಸುವ ವಿಶ್ವಾಸ ಹೆಚ್ಚಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.