Tuesday, April 1, 2025

ಏ.೨ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ: ಮೆಸ್ಕಾಂ ನಗರ ಉಪವಿಭಾಗ, ಘಟಕ-೩ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ.೨ ರ ಬುಧವಾರ ಬೆಳಿಗ್ಗೆ ೯.೩೦ ರಿಂದ ಸಂಜೆ ೫.೩೦ರವರೆಗೆ ವಿದ್ಯುತ್ ಅಡಚಣೆ ವ್ಯತ್ಯಯ ಉಂಟಾಗಲಿದೆ. 
    ನಗರ ವ್ಯಾಪ್ತಿಯ ಜನ್ನಾಪುರ, ಹುತ್ತಾ ಕಾಲೋನಿ, ಅಪ್ಪರ್‌ಹುತ್ತ, ಜಿಂಕ್‌ಲೈನ್ ವೇಲೂರುಶೆಡ್, ಭಂಡಾರಹಳ್ಳಿ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ, ಗ್ರಾಹಕರು ಸಹಕರಿಸಲು ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಉಚಿತ ಕುಡಿಯುವ ನೀರಿನ ಸೇವೆಗೆ ಚಾಲನೆ : ಪ್ರತಿಯೊಬ್ಬರು ಸೇವಾ ಕಾರ್ಯ ಮೈಗೂಡಿಸಿಕೊಳ್ಳಿ

ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ 

ಭದ್ರಾವತಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಹಾಗು ಶ್ರೀ ಸತ್ಯ ಸಾಯಿ ಶಾಲಾ ಸಮಿತಿ ವತಿಯಿಂದ  ಉಚಿತ ಕುಡಿಯುವ ನೀರಿನ ಸೇವೆ ಹಮ್ಮಿಕೊಳ್ಳಲಾಗಿದ್ದು, ಮಂಗಳವಾರ ವ್ಯವಸ್ಥಾಪಕ ಕೃಷ್ಣಮೂರ್ತಿ ಚಾಲನೆ ನೀಡಿದರು. 
    ಭದ್ರಾವತಿ : ಶ್ರೀ ಸತ್ಯಸಾಯಿ ಬಾಬಾರವರ ಪ್ರೇರಣೆಯಿಂದ ಪ್ರತಿ ವರ್ಷ ಬೇಸಿಗೆಯಲ್ಲಿ ಪ್ರಯಾಣಿಕರಿಗೆ ಉಚಿತ ಕುಡಿಯುವ ನೀರಿನ ಸೇವೆ ಮಾಡುತ್ತಿದ್ದು, ಈ ಕಾರ್ಯದಲ್ಲಿ ಸ್ವಯಂ ಪ್ರೇರಣೆಯಿಂದ ಭಕ್ತರು ಪಾಲ್ಗೊಂಡು ಯಶಸ್ವಿಗೆ ಸಹಕರಿಸುತ್ತಿದ್ದಾರೆ. ಪ್ರತಿಯೊಬ್ಬರು ಇಂತಹ ಸೇವಾ ಕಾರ್ಯ ಮೈಗೂಡಿಸಿಕೊಳ್ಳಬೇಕೆಂದು ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯ ಹೇಳಿದರು. 
    ಅವರು ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ನ್ಯೂಟೌನ್ ಪ್ರಶಾಂತಿ ಸೇವಾ ಟ್ರಸ್ಟ್, ಶ್ರೀ ಸತ್ಯ ಸಾಯಿ ಸೇವಾ ಸಮಿತಿ ಹಾಗು ಶ್ರೀ ಸತ್ಯ ಸಾಯಿ ಶಾಲಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಕುಡಿಯುವ ನೀರಿನ ಸೇವೆ ಕಾರ್ಯಕ್ರಮದ ನೇತೃತ್ವವಹಿಸಿ ಮಾತನಾಡಿದರು. 
    ಬಾಬಾರವರ ಪ್ರೇರಣೆಯಿಂದ ಪ್ರತಿದಿನ ಹಲವಾರು ಸೇವಾ ಕಾರ್ಯಗಳು ನಡೆಯುತ್ತಿವೆ. ಈ ಪೈಕಿ ಉಚಿತ ಕುಡಿಯುವ ನೀರಿನ ಸೇವೆ ಸಹ ಒಂದಾಗಿದೆ. ೧೯೮೫ರಿಂದ ನಿರಂತರವಾಗಿ ಈ ಸೇವಾ ಕಾರ್ಯ ನಡೆಸಲಾಗುತ್ತಿದ್ದು, ೪೧ನೇ ವರ್ಷದ ಸೇವಾ ಕಾರ್ಯ ಇದಾಗಿದೆ. ಮಹಿಳೆಯರು, ಪುರುಷರು ಹಾಗು ಯುವ ಸಮುದಾಯದವರು ಈ ಸೇವಾ ಕಾರ್ಯದಲ್ಲಿ ಪಾಲ್ಗೊಳ್ಳುತ್ತಿದ್ದು, ಈ ಕಾರ್ಯಕ್ಕೆ ಸಹಕರಿಸುತ್ತಿರುವ ಪ್ರತಿಯೊಬ್ಬರಿಗೂ ಬಾಬಾರವರು ಒಳ್ಳೆಯದನ್ನು ಮಾಡಲಿ ಎಂದರು.  
    ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕ ಕೃಷ್ಣಮೂರ್ತಿ ಉಚಿತ ಕುಡಿಯುವ ನೀರಿನ ಸೇವೆಗೆ ಚಾಲನೆ ನೀಡಿದರು. 
    ಪ್ರಶಾಂತಿ ಸೇವಾ ಟ್ರಸ್ಟ್ ಕಾರ್ಯದರ್ಶಿ ಸೌಮ್ಯ ಪ್ರಭಾಕರ ಬೀರಯ್ಯ, ರಾಮಕೃಷ್ಣಯ್ಯ, ಸಂತೋಷ್ ವರ್ಣೇಕರ್, ಶ್ರೀ ಸತ್ಯಸಾಯಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ಮೃತ್ಯುಂಜಯ ಕಾನಿಟ್ಕರ್, ಶಾಮರಾಯ ಆಚಾರ್, ಶಿಕ್ಷಣ ಸಂಯೋಜಕ ಪರಮೇಶ್ವರಪ್ಪ ಸೇರಿದಂತೆ ಶಿಕ್ಷಕ ವೃಂದದವರು, ಸೇವಾಕರ್ತರು ಉಪಸ್ಥಿತರಿದ್ದರು. 

ಡಾ. ಶಿವಕುಮಾರ ಸ್ವಾಮೀಜಿ ಜನ್ಮದಿನ : ಒಳರೋಗಿಗಳಿಗೆ ಹಣ್ಣು ವಿತರಣೆ

ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ತುಮಕೂರು ಸಿದ್ದಗಂಗಾ ಮಠದ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೮ನೇ ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ವಿತರಿಸಲಾಯಿತು. 
    ಭದ್ರಾವತಿ: ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ತುಮಕೂರು ಸಿದ್ದಗಂಗಾ ಮಠದ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೮ನೇ ಜನ್ಮದಿನದ ಅಂಗವಾಗಿ ಪ್ರತಿ ವರ್ಷದಂತೆ ಈ ಬಾರಿ ಸಹ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಹಳೇನಗರದ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ವಿತರಿಸಲಾಯಿತು. 
    ಮಹಾಸಭಾ ತಾಲೂಕು ಅಧ್ಯಕ್ಷ ಕೆ.ಎಸ್ ವಿಜಯ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಮುಖರು ಮಾತನಾಡಿ, ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರು ಸಮಾಜಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸುವ ಮೂಲಕ ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳುವಂತೆ ಕರೆ ನೀಡಿದರು. 
    ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಮೆಸ್ಕಾಂ ಗ್ರಾಹಕರ ಸಲಾಹ ಸಮಿತಿ ಅಧ್ಯಕ್ಷ ಬಸವಂತಪ್ಪ, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಮಲ್ಲಿಕಾರ್ಜುನ್, ಸಿದ್ದಾರೂಢ ಮಠದ ಕಾರ್ಯದರ್ಶಿ ರಾಮಮೂರ್ತಿ ಮತ್ತು ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗು ಮಹಾಸಭಾ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ನಿರ್ದೇಶಕರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಸಂತ ಗುರು ಹರಳಯ್ಯರವರ ಬದುಕು ಪ್ರತಿಯೊಬ್ಬರಿಗೂ ಪ್ರೇರಣೆಯಾಗಲಿ : ಬಿ.ಕೆ ಶಿವಕುಮಾರ್

ಭದ್ರಾವತಿ ತಾಲೂಕು ಸಮಗಾರ ಶ್ರೀ ಹರಳಯ್ಯ ಮೋಚಿ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಸಂಘದ ಸುವರ್ಣ ಮಹೋತ್ಸವ ಹಾಗೂ ಸರ್ವಸದಸ್ಯರ ಮಹಾಸಭೆ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ, ಬಿ.ಪಿ ರಾಘವೇಂದ್ರ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು.  
    ಭದ್ರಾವತಿ : ಕಾಯಕ ನಿಷ್ಠೆಯೊಂದಿಗೆ ಸಮಾಜಕ್ಕೆ ತನ್ನದೇ ಆದ ಆದರ್ಶ ಮೌಲ್ಯಗಳನ್ನು ನೀಡಿರುವ ಸಂತ ಗುರು ಹರಳಯ್ಯರವರ ಬದುಕು ನಮ್ಮೆಲ್ಲರಿಗೂ ಪ್ರೇರಣೆಯಾಗುವ ಮೂಲಕ ಭವಿಷ್ಯದ ಸಮಾಜ ರೂಪಿಸಿಕೊಳ್ಳಬೇಕೆಂದು ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್ ಕರೆ ನೀಡಿದರು. 
    ಅವರು ತಾಲೂಕು ಸಮಗಾರ ಶ್ರೀ ಹರಳಯ್ಯ ಮೋಚಿ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಸಂಘದ ಸುವರ್ಣ ಮಹೋತ್ಸವ ಹಾಗೂ ಸರ್ವಸದಸ್ಯರ ಮಹಾಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಗುರು ಹರಳಯ್ಯ ೧೨ನೇ ಶತಮಾನದ ವಚನ ಸಾಹಿತ್ಯದ ಮಹಾನ್ ಸಂತ. ಜಗಜ್ಯೋತಿ ಬಸವಣ್ಣನವರ ಅನುಭವ ಮಂಟಪದಲ್ಲಿ ನೆಲೆಸಿದ್ದ ಹರಳಯ್ಯ, ಪತ್ನಿ ಕಲ್ಯಾಣಮ್ಮ ದಂಪತಿ ಕಾಯಕದ ಮಹತ್ವ, ನಿಷ್ಠೆ ತಿಳಿಸಿಕೊಡುವ ಜೊತೆಗೆ ವಚನ ಸಾಹಿತ್ಯದ ಮೂಲಕ ಸಾಮಾಜಿಕ ಸುಧಾರಣೆಗೆ ಮುಂದಾಗಿದ್ದರು. ಇವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕೆಂದರು. 
    ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಮಾತನಾಡಿದ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯುಕ್ತ ಸಂಜೀವ್ ಶಂಕರ್ ನಿಪ್ಪಾಣಿಕರ್, ಸಂಘದ ಸುವರ್ಣ ಮಹೋತ್ಸವ ಆಚರಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಭವಿಷ್ಯ ರೂಪಿಸುವಂತೆ ಕರೆ ನೀಡಿದರು.
    ನ್ಯಾಯವಾದಿ ವೈ.ಸಿ. ಕಾಂಬಳೆ ಮಾತನಾಡಿ, ಶಿಕ್ಷಣದ ಜೊತೆಗೆ ಸಮಾಜವನ್ನು ಸಂಘಟನೆಯ ಮೂಲಕ ಬಲಪಡಿಸಿದಾಗ ಮಾತ್ರ ಸರ್ಕಾರದ ಸವಲತ್ತುಗಳನ್ನು ಪಡೆಯಲು ಸಾಧ್ಯ ಎಂದರು.
    ಸಂಘದ ಅಧ್ಯಕ್ಷ ಬಿ.ಪಿ ರಾಘವೇಂದ್ರ ಮಾತನಾಡಿ, ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸಂಘದ ಏಳಿಗೆಗೆ ದುಡಿದಾಗ ಮಾತ್ರ ಯಾವುದೇ ಹಿಂದುಳಿದ ಸಮಾಜ ಮುಂದುವರೆಯಲು ಸಾಧ್ಯ ಎಂದರು. 
    ಉದ್ಯಮಿ ಬಿ.ಕೆ ಜಗನ್ನಾಥ್, ಯುವ ಮುಖಂಡರಾದ ಬಿ.ಎಸ್ ಗಣೇಶ್, ನಗರಸಭೆ ಸದಸ್ಯ ಬಿ.ಎಂ ಮಂಜುನಾಥ್, ಸಂಘದ ಗೌರವಾಧಕ್ಷ ದೇವರಾವ್, ಉಪಾಧ್ಯಕ್ಷರಾದ ಜಿ.ಗಣೇಶ್ ಮತ್ತು ಬಿ.ಅಶ್ವಥ್, ಪ್ರಧಾನ ಕಾರ್ಯದರ್ಶಿ ದಶರಥ, ಖಜಾಂಚಿ ಎಸ್. ಚಂದ್ರಶೇಖರ್, ಸಹ ಕಾರ್ಯದರ್ಶಿ ಶಿವಾಜಿರಾವ್, ಸಂಘಟನಾ ಕಾರ್ಯದರ್ಶಿ ಗುರುಮೂರ್ತಿ, ಲೋಕೇಶ್ ಸರಾಠೆ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.