ಸರ್ಕಾರಿ ನೌಕರರ ಸಂಘದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಂಗಾರದ ಪದಕ ಪಡೆದ ಭದ್ರಾವತಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಗೋವಿಂದಸ್ವಾಮಿ-ಜ್ಯೋತಿ ದಂಪತಿಯನ್ನು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ: ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ, ಯೋಗಪಟು ಗೋವಿಂದಸ್ವಾಮಿ ಪಂಜಾಬ್ ರಾಜ್ಯದ ಚಂಡೀಘಡದಲ್ಲಿ ನಡೆದ ಸರ್ಕಾರಿ ನೌಕರರ ಸಂಘದ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯ ಪ್ರತಿನಿಧಿಸಿ ಪ್ರಥಮ ಸ್ಥಾನದೊಂದಿಗೆ ಬಂಗಾರದ ಪದಕ ತಮ್ಮದಾಗಿಸಿಕೊಂಡು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಈ ಹಿನ್ನಲೆಯಲ್ಲಿ ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಗೋವಿಂದಸ್ವಾಮಿ ಮತ್ತು ಇವರ ಪತ್ನಿ ಜ್ಯೋತಿ ದಂಪತಿಯನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಶಿಕ್ಷಕ, ಯೋಗಪಟು ಗೋವಿಂದಸ್ವಾಮಿಯವರ ಸಾಧನೆಯನ್ನು ಪ್ರಶಂಸಿಸಿ ಮತ್ತಷ್ಟು ಸಾಧನೆ ಮಾಡುವ ಮೂಲಕ ಯುವ ಕ್ರೀಡಾಪಟುಗಳಿಗೆ ಇವರ ಸಾಧನೆ ಪ್ರೇರಣೆಯಾಗಲಿ ಎಂದು ಮೆಚ್ಚುಗೆ ವ್ಯಕ್ತಪಡಿಸಲಾಯಿತು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ಶಿಕ್ಷಕ ಶಿವಲಿಂಗೇಗೌಡ, ದೈಹಿಕ ಶಿಕ್ಷಣ ಶಿಕ್ಷಕರಾದ ಕರಣ್ಸಿಂಗ್, ಗಿರೀಶ್, ನಾಗರಾಜ್ ನಾಯಕ್, ಸಿದ್ದಯ್ಯ, ಮುಂಜಿರಾ ನೂರ್ ಫಾತೀಮಾ, ರತ್ನಮ್ಮ, ಅಮೀರ್ ಉನ್ನೀಸಾ, ಸಂತೋಷ್, ಶ್ರೀಕಾಂತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.