Tuesday, April 22, 2025

ಹಿರಿಯ ನ್ಯಾಯವಾದಿ ಸದಾಶಿವರೆಡ್ಡಿ ಮೇಲೆ ಹಲ್ಲೆಗೆ ಖಂಡನೆ : ನ್ಯಾಯವಾದಿಗಳಿಂದ ಪ್ರತಿಭಟನೆ

ಭದ್ರಾವತಿಯಲ್ಲಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಉಮೇಶ್ ನೇತೃತ್ವದಲ್ಲಿ ಬೆಂಗಳೂರಿನ ಹಿರಿಯ ವಕೀಲರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ: ಬೆಂಗಳೂರಿನಲ್ಲಿ ವಕೀಲರ ಪರಿಷತ್ ಸಹ ಅಧ್ಯಕ್ಷ, ಹಿರಿಯ ನ್ಯಾಯವಾದಿ ಸದಾಶಿವರೆಡ್ಡಿ ಅವರ ಮೇಲೆ ನಡೆದ ಹಲ್ಲೆ ಮತ್ತು ಕಚೇರಿ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿ ರಾಜ್ಯ ವಕೀಲರ ಪರಿಷತ್ ಕರೆ ಮೇರೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಬೆಂಬಲಿಸಿ ನಗರದಲ್ಲಿ ತಾಲೂಕು ವಕೀಲರ ಸಂಘದ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
    ಸಂಘದ ಅಧ್ಯಕ್ಷ ಉಮೇಶ್ ಮಾತನಾಡಿ, ನ್ಯಾಯವಾದಿಗಳ ಮೇಲಿನ ಹಲ್ಲೆ, ಜೀವಹಾನಿ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗುತ್ತಿವೆ. ಅದರಲ್ಲೂ ನ್ಯಾಯಾಲಯದ ಆವರಣದಲ್ಲಿ ಹಲ್ಲೆ ಮಾಡಿರುವುದು ವಿಷಾದನೀಯ ಸಂಗತಿಯಾಗಿದೆ. ಇದರಿಂದ ವೃತ್ತಿನಿರತರಿಗೆ ಜೀವ ಭದ್ರತೆ ಇಲ್ಲದಂತಾಗಿದೆ. ಸರ್ಕಾರ ತಕ್ಷಣ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯವಾದಿಗಳ ಸಂರಕ್ಷಣೆಗೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಹಿರಿಯ ನ್ಯಾಯವಾದಿ ಸದಾಶಿವ ರೆಡ್ಡಿ ಅವರ ಮೇಲೆ ಹಲ್ಲೆ ನಡೆಸಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
     ಆರಂಭದಲ್ಲಿ ನ್ಯಾಯವಾದಿಗಳಿಂದ ಕೈ ತೋಳಿಗೆ ಕೆಂಪು ಪಟ್ಟಿಕಟ್ಟಿಕೊಂಡು ನ್ಯಾಯಾಲಯದ ಆವರಣದಿಂದ ಘೋಷಣೆ ಕೂಗುತ್ತಾ ತಾಲೂಕು ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಅಂತಿಮವಾಗಿ ಉಪ ತಹಸೀಲ್ದಾರ್ ಮಂಜಾನಾಯ್ಕ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. 
    ಪ್ರತಿಭಟನೆಯಲ್ಲಿ ತಾಲೂಕು ವಕೀಲರ ಸಂಘದ ಉಪಾಧ್ಯಕ್ಷ ನಾಗರಾಜ, ಕಾರ್ಯದರ್ಶಿ ರಾಜೇಶ್, ಸಹಕಾರ್ಯದರ್ಶಿ ಹರೀಶ್ ಬರ್ಗೆ, ಪ್ರಮುಖರಾದ ಆದರ್ಶ, ಹೇಮಾ, ಪವನ್ ಸೇರಿದಂತೆ ಸಂಘದ ಬಹುತೇಕ ಸದಸ್ಯರು ಪಾಲ್ಗೊಂಡಿದ್ದರು.  

ಅವನಿ ಶ್ರೀಗಳ ಸಾನಿಧ್ಯದಲ್ಲಿ ಲೋಕ ಕಲ್ಯಾರ್ಥವಾಗಿ ಚಂಡಿಕಾ ಹವನ

ಭದ್ರಾವತಿ ಜನ್ನಾಪುರದ ಬಬ್ಬೂರು ಕಮ್ಮೆ ಸೇವಾ ಸಂಘವು ಹಮ್ಮಿಕೊಂಡಿದ್ದ ಚಂಡಿಕಾ ಹವನ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾಧಕರಾದ ಡಾ: ಹರೀಶ್ ದೇಲಂತಬೆಟ್ಟು, ಡಾ: ವಿದ್ಯಾಶಂಕರ್, ಎನ್.ಎಸ್.ಸುಬ್ರಮಣ್ಯ ಇವರುಗಳನ್ನು ಗೌರವಿಸಲಾಯಿತು.
    ಭದ್ರಾವತಿ: ನಗರದ ಜನ್ನಾಪುರ ಬಬ್ಬೂರು ಕಮ್ಮೆ ಸೇವಾ ಸಂಘದ ೩೫ನೇ ವರ್ಷದ ಸ್ಥಾಪನಾ ಮಹೋತ್ಸವದ ಅಂಗವಾಗಿ ಮತ್ತು ಬೇವುಬೆಲ್ಲ ಕಾರ್ಯಕ್ರಮ ಹಾಗು ಶ್ರೀ ಭಾರತಿ ತೀರ್ಥ ಮಹಾಸ್ವಾಮಿಗಳವರ ೭೫ನೇ ವರ್ಧಂತಿ ಪ್ರಯುಕ್ತ ಲೋಕ ಕಲ್ಯಾಣಾರ್ಥವಾಗಿ ಚಂಡಿಕಾ ಹವನ ನೆರವೇರಿಸಲಾಯಿತು.  ಆವನಿ ಶೃಂಗೇರಿ ಶಂಕರ ಮಠದ ಪೀಠಾಧಿಪತಿಗಳಾದ ಶ್ರೀ ಅಧ್ವೈತಾನಂದ ಭಾರತೀ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ಫಲಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
    ಬಬ್ಬೂರು ಕಮ್ಮೆ ಸೇವಾ ಸಂಘದ ರಾಜ್ಯಾದ್ಯಕ್ಷ ಡಾ. ಎ.ವಿ.ಪ್ರಸನ್ನ ಮಾತನಾಡಿ, ಲೋಕ ಕಲ್ಯಾಣಾರ್ಥವಾಗಿ ಮಾಡುವ ಧಾರ್ಮಿಕ ಆಚರಣೆಗಳಿಂದ ಸಂಸ್ಕಾರ ಮತ್ತು ಸಂಸ್ಕೃತಿ ಉಳಿಯಲು ಸಾಧ್ಯ ಎಂದರು. 
    ಜಿಲ್ಲಾ ಬ್ರಾಹ್ಮಣ ಸಂಘಕ್ಕೆ ಆಯ್ಕೆಯಾದ ರಘುರಾಮ್‌ರವರು ಮಾತನಾಡಿ, ಧರ್ಮ ಮತ್ತು ಸಂಸ್ಕೃತಿಯನ್ನು ಉಳಿಸುವಲ್ಲಿ ಪ್ರತಿಯೊಬ್ಬರು ಸಹಕರಿಸಬೇಕೆಂದರು. ತಾಲೂಕು ಅಧ್ಯಕ್ಷ ಎಚ್.ಎಸ್ ನಂಜುಂಡಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. 
    ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಂಘದ ಪ್ರಮುಖರಾದ ನಾಗರಾಜ್, ಕೆ.ವಿ ನಾಗೇಶ್, ಕಾರ್‌ಕೊಡ್ಲು ಗುರುಮೂರ್ತಿ, ಮಾ.ಸಾ ನಂಜುಂಡಸ್ವಾಮಿ, ತಾಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಜಿ. ರಮೇಶ್ ಸೇರಿದಂತೆ ಇನ್ನಿತರರು ಮಾತನಾಡಿದರು. 
    ಕಾರ್ಯಕ್ರಮದಲ್ಲಿ ಸಾಧಕರಾದ ಡಾ. ಹರೀಶ ದೇಲಂತಬೆಟ್ಟು, ಡಾ. ಎಂ.ಎಚ್ ವಿದ್ಯಾಶಂಕರ್ ಮತ್ತು ಎನ್.ಎಸ್ ಸುಬ್ರಮಣ್ಯ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸುರೇಶ್, ಗುರುದತ್ತ, ಶ್ರೀಧರ್, ಪ್ರಕಾಶ್, ಛಾಯಾಪತಿ ಮತ್ತು ರಾಜಶೇಖರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  ಎಂ.ಡಿ.ಹಿರಿಯಣ್ಣ ಭಟ್ ವೇದಘೋಷ ನಡೆಸಿಕೊಟ್ಟರು. ಗ್ರಾಯತ್ರಿ ಪ್ರಾರ್ಥಿಸಿ, ಡಾ. ವಿದ್ಯಾಶಂಕರ್ ವಂದಿಸಿದರು. ದಿನೇಶ್ ನಿರೂಪಿಸಿದರು. 

ಏ.೨೩ರಂದು ಉಚಿತ ಕಣ್ಣಿನ ತಪಾಸಣೆ ಶಿಬಿರ

ಭದ್ರಾವತಿ : ನಗರಸಭೆ ವತಿಯಿಂದ ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ಏ.೨೩ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜ್ ಕುಮಾರ್‌ರವರ ಅಧ್ಯಕ್ಷತೆಯಲ್ಲಿ ಉಚಿತ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿದೆ. 
ನಗರಸಭೆ ಕಛೇರಿಯಲ್ಲಿ ಆಯೋಜಿಸಲಾಗಿರುವ ಶಿಬಿರದಲ್ಲಿ ನಗರಸಭೆ ಚುನಾಯಿತ ಪ್ರತಿನಿಧಿಗಳು ಹಾಗು ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗು ಸಿಬ್ಬಂದಿಗಳಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಲಾಗುವುದು. ಶಿಬಿರದ ಸದುಪಯೋಗಪಡಿಸಿಕೊಳ್ಳುವಂತೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಕೋರಿದ್ದಾರೆ. 

ಜಗದ್ಗುರುಗಳಾದ ಪೋಪ್ ಫ್ರಾನ್ಸಿಸ್‌ರವರ ನಿಧನಕ್ಕೆ ಶಾಸಕರಿಂದ ಸಂತಾಪ

ಶಾಸಕ ಬಿ.ಕೆ ಸಂಗಮೇಶ್ವರ್ 
ಭದ್ರಾವತಿ: ರೋಮನ್ ಕ್ಯಾಥೋಲಿಕ್ ಧರ್ಮಸಭೆಯ ಜಗದ್ಗುರುಗಳಾದ ಪೋಪ್ ಫ್ರಾನ್ಸಿಸ್‌ರವರ ನಿಧನಕ್ಕೆ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಂತಾಪ ಸೂಚಿಸಿದ್ದಾರೆ. 
ಜಗದ್ಗುರುಗಳು ಸೋಮವಾರ ಬೆಳಗ್ಗೆ ಈ ಲೋಕದ ಯಾತ್ರೆ ಮುಗಿಸಿ ದೇವರ ಪಾದಗಳಿಗೆ ಸೇರಿರುವ ವಿಷಯ ಕೇಳಿ ಮನಸ್ಸಿಗೆ ತುಂಬಾ ದುಃಖ ಮತ್ತು ನೋವು ಉಂಟು ಮಾಡಿದೆ.
ಜಗದ್ಗುರುಗಳ ಸಿನೋಡಿಯಲ್ ಅಂದರೆ ಎಲ್ಲರೂ ಜೊತೆಯಾಗಿ ನಡೆಯೋಣ ಮತ್ತು ಒಬ್ಬರನ್ನು ಒಬ್ಬರು ಗೌರವದಿಂದ ಆಲಿಸೋಣ ಎಂಬ ಕರೆ ನಿಜವಾಗಲೂ ವಿಶ್ವಕ್ಕೆ ಪ್ರೀತಿಯಿಂದ ಶಾಂತಿಯ ಪ್ರಯಾಸಕ್ಕೆ ಮುನ್ನುಡಿ ಬರೆದಂತಿತ್ತು. ಇವರ ಅಗಲಿಕೆಯಿಂದ ಇಡೀ ಮಾನವ ಕುಲಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಸಮಸ್ತ ಕ್ರೈಸ್ತ ಬಾಂಧವರಿಗೆ ಆಧಾರಣೆ ಮತ್ತು ಧೈರ್ಯ ಕೊಡಲಿ ಎಂದು ಪ್ರಾರ್ಥಿಸುತ್ತಾ ಸಂತಾಪ ಸೂಚಿಸುತ್ತೇನೆ ಎಂದು ಶಾಸಕರು ತಿಳಿಸಿದ್ದಾರೆ. 

ಅಕ್ರಮ ಕಸಾಯಿಖಾನೆ ಪಕ್ಕದಲ್ಲಿ ಬಂಧಿಸಿಟ್ಟಿದ್ದ ೧೭ ಗೋವುಗಳ ರಕ್ಷಣೆ

ಭದ್ರಾವತಿ ತಾಲೂಕಿನ ವೀರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಡರಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಬಂಧಿಸಿಟ್ಟಿದ್ದ ಸುಮಾರು ೧೭ ಗೋವುಗಳನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರ ನೆರವಿನೊಂದಿಗೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 
    ಭದ್ರಾವತಿ: ತಾಲೂಕಿನ ವೀರಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌಡರಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಬಂಧಿಸಿಟ್ಟಿದ್ದ ಸುಮಾರು ೧೭ ಗೋವುಗಳನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪೊಲೀಸರ ನೆರವಿನೊಂದಿಗೆ ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. 
    ಗ್ರಾಮದಲ್ಲಿ ಅಕ್ರಮ ಕಸಾಯಿಖಾನೆಯ ಪಕ್ಕದಲ್ಲಿ ಯಾವುದೇ ಪರವಾನಗಿ ಇಲ್ಲದೆ ಸೋಮವಾರ ರಾತ್ರಿ ೧೨ ಕರುಗಳು ಮತ್ತು ೬ ಹೋರಿಗಳನ್ನ ಬಂಧಿಸಿಡಲಾಗಿದೆ ಎಂಬ ಮಾಹಿತಿಯೊಂದಿಗೆ ಕ್ರಮ ಕೈಗೊಳ್ಳುವಂತೆ ಗ್ರಾಮಾಂತರ ಪೊಲೀಸರಿಗೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ದಾಳಿ ನಡೆಸಿ ಗೋವುಗಳನ್ನು ರಕ್ಷಿಸಿದ್ದಾರೆ. 
    ರಕ್ಷಣೆ ಮಾಡಿರುವ ಗೋವುಗಳನ್ನು ಕೂಡ್ಲಿ ಶೃಂಗೇರಿ ಮಠದ ಗೋ ಶಾಲೆಗೆ ಬಿಡಲಾಗಿದೆ. ಯಶಸ್ವಿ ಕಾರ್ಯಾಚರಣೆ ಕೈಗೊಂಡಿರುವ ಪೊಲೀಸರಿಗೆ ಹಿಂದೂ ಜಾಗರಣ ವೇದಿಕೆ ಪ್ರಶಂಸಿಸಿದೆ. 
      ತಾಲೂಕಿನಲ್ಲಿ ಅಕ್ರಮವಾಗಿ ಕಸಾಯಿಖಾನೆಗಳು ಕಾರ್ಯನಿರ್ವಹಿತ್ತಿರುವ ಬಗ್ಗೆ ಅನುಮಾನವಿದ್ದು, ಈ ಹಿಂದೆ ದಾಳಿ ನಡೆಸಿದಾಗ ಇದೆ ಸ್ಥಳದಲ್ಲಿ ಗೋ ಮಾಂಸ ಪತ್ತೆಯಾಗಿತ್ತು. ಇದೀಗ ಗೋವುಗಳು ಪತ್ತೆಯಾಗಿವೆ. ಆದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ. ಇಂತಹ ಸ್ಥಳಗಳನ್ನು ತಹಸೀಲ್ದಾರ್ ನೇತೃತ್ವದಲ್ಲಿ ವಶಕ್ಕೆ ಪಡೆದು ಕಟ್ಟೆಚ್ಚರ ವಹಿಸುವಂತೆ ಹಿಂದೂ ಜಾಗರಣ ವೇದಿಕೆ ಆಗ್ರಹಿದೆ. 

ಪ್ರಶಸ್ತಿಗಳು ಮತ್ತಷ್ಟು ಸಾಧನೆಗೆ ಪ್ರೇರಣೆ : ಕೋಗಲೂರು ತಿಪ್ಪೇಸ್ವಾಮಿ

ಭದ್ರಾವತಿ ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ಅಕ್ಷರ ಮಾತೆ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸುಮಾರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು. 
    ಭದ್ರಾವತಿ: ಪ್ರಶಸ್ತಿಗಳು ಬರಲಿ ಅಥವಾ ಬರದಿರಲಿ ನಮ್ಮ ಮನಸ್ಥಿತಿ ಬದಲಾಗಬಾರದು. ಪ್ರಶಸ್ತಿಗಳು ಬಂದಾಗ ನಿಜಕ್ಕೂ ಜವಾಬ್ಧಾರಿಗಳು ಹೆಚ್ಚಾಗಿ ಇನ್ನಷ್ಟು ಸಾಧನೆಗೆ ಪ್ರೇರಣೆ ನೀಡುತ್ತವೆ ಎಂದು ಕರ್ನಾಟಕ ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಹೇಳಿದರು. 
    ಅವರು ತಾಲೂಕಿನ ಯರೇಹಳ್ಳಿ ಗ್ರಾಮದಲ್ಲಿ ಅಕ್ಷರ ಮಾತೆ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸುಮಾರವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
    ಪ್ರಶಸ್ತಿಗಳು ಬಂದಾಗ ಹಿಗ್ಗದೆ, ಬರದಿದ್ದಾಗ ಕುಗ್ಗದೆ ಆತ್ಮಸಾಕ್ಷಿಯಾಗಿ, ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು. ಮನ ಮೆಚ್ಚುವಂತೆ ಕೆಲಸ ಮಾಡಬೇಕು.  ಈ ನಿಟ್ಟಿನಲ್ಲಿ ಶಿಕ್ಷಕಿ ಸುಮಾರವರು ಕಳೆದ ಸುಮಾರು ೨೫ ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದು, ಮಕ್ಕಳೊಂದಿಗೆ ಮಕ್ಕಳಾಗಿ ಸದಾ ಕಲಿಕೆಯಲ್ಲಿ ತೊಡಗಿಸಿ ಕೊಳ್ಳುತ್ತಿದ್ದು, ಅವರಿಗೆ ಪ್ರಶಸ್ತಿ ಬಂದಿದ್ದು ಶಾಲೆಗೆ ಮತ್ತೊಮ್ಮೆ ಕಿರೀಟ ತೊಡಿಸಿದಂತಾಗಿದೆ. ಶಾಲೆಯ ಎಲ್ಲಾ ಶಿಕ್ಷಕರು ಉತ್ತಮವಾಗಿ ಸೇವೆ ಸಲ್ಲಿಸುತ್ತಿದ್ದು, ಶಾಲೆ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿದೆ.
ಮಕ್ಕಳ ಕಲಿಕೆ ಮತ್ತಷ್ಟು ಉತ್ತಮ ಪಡಿಸಲು ಶ್ರಮಿಸಬೇಕೆಂದು ಕರೆ ನೀಡಿದರು.     
    ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಸುಮಾರವರು, ಮಕ್ಕಳೇ ನನ್ನ ಆಸ್ತಿ. ಅವರು ಕಲಿತರೆ ಅದೇ ನನಗೆ ಹೆಮ್ಮೆ. ಶಾಲೆಗೆ ಹೆಸರು ತರುವ ನಿಟ್ಟಿನಲ್ಲಿ ಸದಾಕಾಲ ಶ್ರಮಿಸುತ್ತಿರುವ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದ, ಸಿಬ್ಬಂದಿ ವರ್ಗ ಹಾಗೂ ಗ್ರಾಮದ ಶಿಕ್ಷಣ ಆಸಕ್ತಿಯುಳ್ಳವರ ಜೊತೆಗೆ ಸೇರಿಕೊಂಡು ಶಾಲೆಯ ಇನ್ನೂ ಹೆಚ್ಚಿನ ಅಭಿವೃದ್ಧಿಗೆ ನಿರಂತರವಾಗಿ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದರು. 
    ಅರಿವು ಕೇಂದ್ರದ ಮೇಲ್ವಿಚಾರಕಿ ಮಾಲಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು ಎಸ್‌ಡಿಎಂಸಿ ಅಧ್ಯಕ್ಷ ಲೋಕೇಶ್, ಸದಸ್ಯ ವರುಣ, ಶಿಕ್ಷಕರಾದ ವಾಣಿಶ್ರೀ, ಜ್ಯೋತಿ, ವೀಣಾ, ಶಂಕರ್, ಬೇಸಿಗೆ ಶಿಬಿರದ ಸಂಪನ್ಮೂಲ ವ್ಯಕ್ತಿ ಮಂಜುನಾಥ್, ಪೋಷಕರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.