Wednesday, April 30, 2025

ಮೇ.೧ರಂದು ಇಎಸ್‌ಐ ಚಿಕಿತ್ಸಾಲಯದಲ್ಲಿ ಕಾರ್ಮಿಕರ ದಿನಾಚರಣೆ


    ಭದ್ರಾವತಿ : ಶಿವಮೊಗ್ಗ ಜಿಲ್ಲಾ ಇಎಸ್‌ಐ ವಿಮಾದಾರರ ಹಾಗು ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮೇ.೧ರಂದು ಕಾರ್ಮಿಕರ ದಿನಾಚರಣೆ ಹಮ್ಮಿಕೊಳ್ಳಲಾಗಿದೆ. 
    ನಗರದ ಜನ್ನಾಪುರ ಇಎಸ್‌ಐ ಚಿಕಿತ್ಸಾಲಯ(ಬಂಟರ ಭವನ)ದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಕಾರ್ಮಿಕರ ದಿನಾಚರಣೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲಾ ಇಎಸ್‌ಐ ವಿಮಾದಾರರ ಹಾಗು ಇತರೆ ಕಾರ್ಮಿಕ ಕ್ಷೇಮಾಭಿವೃದ್ಧಿ ಸಂಘದ ರಾಜಾಸಾಬ್ ಎಚ್. ನಂದಿಹಳ್ಳಿಯವರು ಅಧ್ಯಕ್ಷತೆವಹಿಸಲಿದ್ದಾರೆ. 
    ನಿವೃತ್ತ ಆಡಳಿತ ವಿಮಾ ವೈದ್ಯಾಧಿಕಾರಿ ಡಾ. ಎಚ್.ಆರ್ ವಿಜಯಮೂರ್ತಿ, ವಿಮಾ ವೈದ್ಯಾಧಿಕಾರಿ ಡಾ. ಈಶ್ವರಪ್ಪ, ನಗರದ ನಯನ ಕಣ್ಣಿನ ಆಸ್ಪತ್ರೆ ವೈದ್ಯ ಡಾ. ಕುಮಾರ್, ನಿವೃತ್ತ ಕಾರ್ಮಿಕ ಅಧಿಕಾರಿ ವಿಶ್ವನಾಥ್ ಮತ್ತು ಇಎಸ್‌ಐಸಿ ಸ್ಥಳೀಯ ಕಛೇರಿ ವ್ಯವಸ್ಥಾಪಕಿ ಮಂಜುಳಾ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. 
    ಕಾರ್ಮಿಕ ದಿನಾಚರಣೆ ಅಂಗವಾಗಿ ನೂತನವಾಗಿ ರಚನೆಯಾಗಿರುವ ವಿಭಾಗದ ಸಂಘದ ಕಾರ್ಯಕರ್ತರ ಪದಗ್ರಹಣ ಹಾಗು ಇಎಸ್‌ಐ ಕಾರ್ಮಿಕರಿಗೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ಕಾರ್ಮಿಕರ ದಿನಾಚರಣೆ ಅಂಗವಾಗಿ ಉಚಿತ ಸಸಿಗಳ ವಿತರಣೆ


    ಭದ್ರಾವತಿ : ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಕಾರ್ಮಿಕರ ದಿನಾಚರಣೆ ಅಂಗವಾಗಿ ಮೇ.೧ರಂದು ಸಾರ್ವಜನಿಕರಿಗೆ ಉಚಿತ ಸಸಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 
    ಕಾರ್ಖಾನೆ ಮುಖ್ಯದ್ವಾರದ ಬಳಿ ಹೈಬ್ರಿಡ್ ನುಗ್ಗೆ, ಪಪ್ಪಾಯಿ, ತುಳಸಿ ಮತ್ತು ಹೊಂಗೆ ಸಸಿಗಳನ್ನು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆವರೆಗೆ ವಿತರಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಾರ್ವಜನಿಕ ಸಂಪರ್ಕ ಇಲಾಖೆ ಕೋರಿದೆ. 

೧೨ನೇ ಶತಮಾನದಲ್ಲಿ ಕ್ರಾಂತಿಕಾರಿ ಸಮಾಜ ನಿರ್ಮಾಣ : ಬಸವಣ್ಣನವರ ಆದರ್ಶಗಳು ಸರ್ವ ಕಾಲಕ್ಕೂ ಬೆಳಕು

ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಸಾಹಿತಿ, ಚಿಂತಕ ಚಟ್ನಳ್ಳಿ ಮಹೇಶ್ 

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ಮತು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ  ಹಳೇನಗರದ ಕನಕಮಂಟಪದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು. 
    ಭದ್ರಾವತಿ : ೧೨ನೇ ಶತಮಾನದಲ್ಲಿ ಶರಣರು ರೂಪಿಸಿದ ಸಮಾಜ ನಿಜಕ್ಕೂ ಕ್ರಾಂತಿಕಾರಿ ಸಮಾಜವಾಗಿದ್ದು, ಜಗಜ್ಯೋತಿ ಬಸವಣ್ಣನವರ ಆದರ್ಶಗಳು ಸರ್ವ ಕಾಲಕ್ಕೂ ಬೆಳಕಾಗಿವೆ ಎಂದು ಸಾಹಿತಿ, ಚಿಂತಕ ಚಟ್ನಳ್ಳಿ ಮಹೇಶ್ ಹೇಳಿದರು. 
    ಅವರು ಬುಧವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ಮತು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಹಳೇನಗರದ ಕನಕಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
    ಆಧುನಿಕತೆಯ ಸ್ಪರ್ಶವಿಲ್ಲದ, ಅಸಮಾನತೆಯಿಂದ ಕೂಡಿರುವ ಕಾಲಘಟ್ಟದಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಧಾರ್ಮಿಕವಾಗಿ ಎಲ್ಲಾ ಕ್ಷೇತ್ರಗಳಲ್ಲೂ ಕ್ರಾಂತಿಕಾರಿ ಸುಧಾರಣೆ ತಂದವರು ೧೨ನೇ ಶತಮಾನದ ಶರಣರು. ಬಸವಣ್ಣನವರ ಒಂದೊಂದು ವಚನಗಳಲ್ಲೂ ಅದ್ಭುತವಾದ ಪರಿಕಲ್ಪನೆಗಳಿವೆ. ನುಡಿ ಮತ್ತು ನಡೆ ಎರಡನ್ನೂ ಒಂದಾಗಿಸಿಕೊಂಡು ಸಮಸಮಾಜ ನಿರ್ಮಾಣ ಮಾಡಿದರು. ಜ್ಞಾನಕ್ಕೆ ಹೆಚ್ಚಿನ ಗೌರವ ನೀಡಿ ದಾಸೋಹ ಮತ್ತು ಕಾಯಕದ ಮಹತ್ವ ಸಮಾಜಕ್ಕೆ ತಿಳಿಸಿಕೊಟ್ಟಿದ್ದಾರೆ. ಇಂತಹ ಮಹಾನ್ ನಾಯಕನ ಜನ್ಮದಿನ ಕೇವಲ ಒಂದು ದಿನಕ್ಕೆ ಸೀಮಿತವಲ್ಲ ಎಂದರು. 
    ಮುಂದಿನ ದಿನಗಳಲ್ಲಿ ಸರ್ಕಾರ ಬಸವಣ್ಣನವರ ಜನ್ಮದಿನ ಇನ್ನೂ ವಿಶೇಷವಾಗಿ ಆಚರಿಸಬೇಕು. ಅವರ ಜನ್ಮದಿನದಂದು ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ವಿಚಾರಗೋಷ್ಠಿ, ವಚನ ಗಾಯನ ಸ್ಪರ್ಧೆ, ರಸಪ್ರಶ್ನೆ ಸೇರಿದಂತೆ ವಿಶೇಷ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಬಸವಣ್ಣನವರ ವಿಚಾರಧಾರೆಗಳನ್ನು ತಿಳಿಸುವ ಕಾರ್ಯ ಕೈಗೊಳ್ಳಬೇಕೆಂದು ಶಾಸಕರ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು. 
    ಬಸವಮಂಟಪದ ಸುಮಾ ಸುನೀಲ್ ಮಾತನಾಡಿ, ವಿಶ್ವ ಗುರು ಬಸವಣ್ಣನವರು ಜಗತ್ತಿನ ಮಹಾನ್ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಜಗತ್ತಿನಲ್ಲಿ ಮಹಿಳೆಯರಿಗೆ ಮೊಟ್ಟಮೊದಲು ಸಮಾನತೆ ನೀಡಿದವರು, ಸಮಾಜದ ಅತ್ಯಂತ ಕೆಳಗಿನ, ಶೋಷಿತ, ಅಸ್ಪೃಶ್ಯ ಸಮುದಾಯದವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದು ಉನ್ನತ ಸ್ಥಾನಮಾನಗಳನ್ನು ನೀಡಿ ಗೌರವಿಸಿದ ಮೊಟ್ಟ ಮೊದಲ ವ್ಯಕ್ತಿ ಎಂದರೆ ಬಸವಣ್ಣನವರು. ಜ್ಞಾನಕ್ಕೆ ಮೊದಲ ಆದ್ಯತೆ ನೀಡಿದವರು, ಕಾಯಕ ಹಾಗು ದಾಸೋಹದ ಪರಿಕಲ್ಪನೆ ಮೂಡಿಸಿದವರು ಬಸವಣ್ಣನವರು. ಇಂತಹ ಮಹಾನ್ ವ್ಯಕ್ತಿಯ ಜನ್ಮದಿನ ಪ್ರಪಂಚದಾದ್ಯಂತ ಆಚರಿಸಲಾಗುತ್ತಿದೆ. ಬಸವಣ್ಣವರ ಬದುಕು ಹಾಗು ಆದರ್ಶತನ ನಾವೆಲ್ಲರೂ ರೂಢಿಸಿಕೊಂಡಾಗ ಅವರ ಜನ್ಮದಿನ ಸಾರ್ಥಕಗೊಳ್ಳುತ್ತದೆ ಎಂದರು.  
    ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ತಹಸೀಲ್ದಾರ್ ಪರುಸಪ್ಪ ಕುರುಬರ, ನಗರಸಭೆ ಅಧ್ಯಕ್ಷೆ ಗೀತಾ ರಾಜ್‌ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಸದಸ್ಯರಾದ ವಿ ಕದಿರೇಶ್, ಬಿ.ಕೆ ಮೋಹನ್, ಲತಾ ಚಂದ್ರಶೇಖರ್, ಚನ್ನಪ್ಪ, ಬಸವರಾಜ ಬಿ. ಆನೇಕೊಪ್ಪ, ಅನುಪಮ ಚನ್ನೇಶ್, ಐ.ವಿ ಸಂತೋಷ್ ಕುಮಾರ್, ಹನುಮಂತಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ತಾಲೂಕು ವೀರಶೈವ ಸಮಾಜ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ (ಗ್ರಾಮಾಂತರ) ಅಧ್ಯಕ್ಷೆ ಸಾಕಮ್ಮ ಮಹೇಶ್, ಸೂಡಾ ಸದಸ್ಯ ಎಚ್. ರವಿಕುಮಾರ್, ಕುವೆಂಪು ವಿವಿ. ಸಿಂಡಿಕೇಟ್ ಸದಸ್ಯ ಎಂ. ಶಿವಕುಮಾರ್, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರಾದ ಬಿ.ಎನ್ ರಾಜು, ಶಿವುಪಾಟೀಲ್, ಎಸ್. ಮಂಜುನಾಥ್, ಯಲ್ಲಪ್ಪ, ಶಿವಬಸಪ್ಪ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. 
    ಅಕ್ಕನ ಬಳಗದ ಸದಸ್ಯರು ಪ್ರಾರ್ಥಿಸಿದರು. ಸಿದ್ದಾರ್ಥ ಅಂಧರ ಕೇಂದ್ರದ ಕಲಾವಿದರು ನಾಡಗೀತೆ ಹಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. 
    ಇದಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಿಂದ ವಿಶ್ವ ಗುರು ಬಸವಣ್ಣನವರ ಭಾವಚಿತ್ರ ಹಾಗು ಡಾ.ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ತಂಡ ಸೇರಿದಂತೆ ಇನ್ನಿತರ ಕಲಾತಂಡಗಳೊಂದಿಗೆ ಕನಕಮಂಟಪದವರೆಗೂ ಮೆರವಣಿಗೆ ನಡೆಸಲಾಯಿತು. 
 

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳು ಮತು ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಬುಧವಾರ ಶ್ರೀ ವಿಶ್ವಗುರು ಬಸವಣ್ಣನವರ ಜಯಂತಿ ಕಾರ್ಯಕ್ರಮದ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು.