Thursday, May 1, 2025

ಚಿರತೆ ದಾಳಿಗೆ ಕರು ಬಲಿ

ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಈ ಭಾಗದ ಕಲ್ಪನಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಕರು ಮೇಲೆ ದಾಳಿ ನಡೆಸಿ ಬಲಿ ತೆಗೆದುಕೊಂಡಿರುವ ಘಟನೆ ನಡೆದಿದೆ. 
    ಭದ್ರಾವತಿ : ತಾಲೂಕಿನ ಕೂಡ್ಲಿಗೆರೆ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು, ಈ ಭಾಗದ ಕಲ್ಪನಹಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಕರು ಮೇಲೆ ದಾಳಿ ನಡೆಸಿ ಬಲಿ ತೆಗೆದುಕೊಂಡಿರುವ ಘಟನೆ ನಡೆದಿದೆ. 
    ಕಳೆದ ಎರಡು ದಿನಗಳ ಹಿಂದೆ ಎಪಿಎಂಸಿ ಮಾಜಿ ಸದಸ್ಯೆ ಸುಜಾತರವರ ಟಿವಿಎಸ್ ಫಾರಂ ತೋಟದ ಮನೆಯಲ್ಲಿ ಚಿರತೆ ಕಾಣಿಸಿಕೊಂಡು ಭಯದ ವಾತಾವರಣ ಉಂಟು ಮಾಡಿತ್ತು. ಅಲ್ಲದೆ ಮಂಗಳವಾರ ನಾಯಿ ಬಲಿ ತೆಗೆದುಕೊಂಡಿದ್ದ  ಚಿರತೆ ಇದೀಗ ಕರು ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ. ಇದರಿಂದ ಈ ಭಾಗದ ಗ್ರಾಮಸ್ಥರಲ್ಲಿ ಆತಂಕ ಮರೆ ಮಾಡಿದೆ. ಅರಣ್ಯ ಇಲಾಖೆ ತಕ್ಷಣ ಮುನ್ನಚ್ಚರಿಕೆವಹಿಸಿ ಚಿರತೆ ಸೆರೆ ಹಿಡಿಯಬೇಕೆಂಬುದು ಗ್ರಾಮಸ್ಥರ ಆಗ್ರಹವಾಗಿದೆ. 

ಮೇ.೯ರಂದು ದೇವಿಯ ಆಲಯ ಪ್ರವೇಶ ಸ್ಥಿರಬಿಂಬ ಪ್ರತಿಷ್ಠಾಪನೆ, ಗೋಪುರ ಪ್ರತಿಷ್ಠೆ ಕಳಸಾರೋಹಣ



ಭದ್ರಾವತಿ ಕಾಗದನಗರ, ಸುರಗಿತೋಪು ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನ. 
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಕಾಗದನಗರ ಸುರಗಿತೋಪು ಶ್ರೀ ಚೌಡೇಶ್ವರಿ ದೇವಸ್ಥಾನದ ದೇವಿಯ ಆಲಯ ಪ್ರವೇಶ ಸ್ಥಿರಬಿಂಬ ಪ್ರತಿಷ್ಠಾಪನೆ ಹಾಗು ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ ಹಾಗು ದೀಪ ಸ್ಥಂಭ ಪ್ರತಿಷ್ಠಾಪನೆ ಮೇ.೯ರಂದು ಶ್ರೀ ಚೌಡೇಶ್ವರಿ ದೇವಸ್ಥಾನ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದೆ. 
    ಈ ಕುರಿತು ಗುರುವಾರ ಸಂಜೆ ದೇವಸ್ಥಾನದ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ದೇವಸ್ಥಾನ ಟ್ರಸ್ಟ್ ಪ್ರಮುಖರು, ಇಲ್ಲಿನ ನಿವಾಸಿಗಳು ಶ್ರೀ ಚೌಡೇಶ್ವರಿ ದೇವಿಯನ್ನು ಶ್ರದ್ಧಾ ಭಕ್ತಿಯಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ. ದೇವಸ್ಥಾನದ ಜೀರ್ಣೋದ್ದಾರ ಕಾರ್ಯ ಕೈಗೊಳ್ಳಲು ಟ್ರಸ್ಟ್ ರಚಿಸಿಕೊಂಡಿದ್ದು, ಈ ಮೂಲಕ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ. ಇನ್ನೂ ಬಹಳಷ್ಟು ಅಭಿವೃದ್ಧಿ ಕಾರ್ಯಗಳು ಬಾಕಿ ಉಳಿದಿದ್ದು, ದಾನಿಗಳು, ಭಕ್ತರು ಇನ್ನೂ ಹೆಚ್ಚಿನ ಆರ್ಥಿಕ ನೆರವಿನೊಂದಿಗೆ ಎಲ್ಲಾ ರೀತಿಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು. 
    ಈ ನಡುವೆ ಮೇ.೯ರಂದು ದೇವಿಯ ಆಲಯ ಪ್ರವೇಶ ಸ್ಥಿತಬಿಂಬ ಪ್ರತಿಷ್ಠಾಪನೆ ಹಾಗು ದೇವಿಯ ಗೋಪುರ ಪ್ರತಿಷ್ಠೆ ಕಳಸಾರೋಹಣ ಹಾಗು ದೀಪ ಸ್ಥಂಭ ಪ್ರತಿಷ್ಠಾಪನೆ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಲಾಗುತ್ತಿದೆ.  ಇದರ ಅಂಗವಾಗಿ ಮೇ.೭ರ ಬುಧವಾರ ಸಂಜೆ ೬-೩೦ ಗೋದೋಳಿ ಲಗ್ನದಲ್ಲಿ ಮಹಾಗಣಪತಿ ಪೂಜೆ, ರಕ್ಷಾ ಬಂಧನ, ಮೃತ್ಯುಗ್ರಹಣ, ಅಂಕುರಾರ್ಪಣ, ವಾಸ್ತು ಪೂಜೆ, ವಾಸ್ತು ಹೋಮ, ವಾಸ್ತು ಬಲಿ ಹಾಗು ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಜರುಗಲಿವೆ. ೮ರ ಗುರುವಾರ ಬೆಳಗ್ಗೆ ೮-೩೦ ಕ್ಕೆ ನೈರ್ಮಲ್ಯ ವಿಸರ್ಜನೆ, ಮಹಾಗಣಪತಿ ಹೋಮ,  ಅದಿವಾಸಿಗಳು ನವಗ್ರಹ ಪೂಜೆ, ಹೋಮ, ಸಪ್ತದಶ ಕಳಶ ಸ್ಥಾಪನೆ, ಮಹಾಮಂಗಳಾರತಿ ಹಾಗು ತೀರ್ಥ ಪ್ರಸಾದ ವಿನಿಯೋಗ ಮತ್ತು ಸಂಜೆ ೬ಕ್ಕೆ ಗೋದೋಳಿ ಲಗ್ನದಲ್ಲಿ ದ್ವಾರ ತೋರಣ, ಕುಂಭ ಪೂಜೆ, ಪುಷ್ಪಾದಿವಾಸ, ತತ್ವನ್ಯಾಸ, ಪ್ರಾಣ ಪ್ರತಿಷ್ಠಾಪನೆ ಹೋಮ, ಶಯೋ ದಿವಸ ಪಿಂಡಿತಾ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಲಿವೆ. 
     ೯ರ ಶುಕ್ರವಾರ ಬ್ರಾಹ್ಮಿ ಮುಹೂರ್ತದಲ್ಲಿ ೪:೩೦ ರಿಂದ ೬:೩೦ ರ ಬೆಳಗ್ಗೆ ಗಂಗಾಪೂಜೆ, ಅಲಯ ಪ್ರವೇಶ, ಪಂಚಾಮೃತ ಅಭಿಷೇಕ, ಅಲಂಕಾರ, ಮೂರ್ತಿ ಕ್ಷೇಮ ಮಹಾ ಪ್ರತಿಷ್ಠೆ ಹಾಗೂ ಮಹಾಪೂರ್ಣಾಹುತಿ ಹಾಗೂ ಅಭಿಜಿತ್ ಲಗ್ನದ ಶುಭಮುಹೂರ್ತದಲ್ಲಿ ಮಧ್ಯಾಹ್ನ ೧೨ ಗಂಟೆಗೆ  ಕಳಸಾರೋಣ, ಮತ್ತು ಮಧ್ಯಾಹ್ನ ೧ ಗಂಟೆಗೆ ಅನ್ನಸಂತರ್ಪಣೆ ಇರುತ್ತದೆ.  ಬೆಳಗ್ಗೆ ೪.೩೦ಕ್ಕೆ ಗಂಗೆ ತರುವ ಕಾರ್ಯಕ್ರಮವಿರುತ್ತದೆ. ಊರಿನ ಸಮಸ್ತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವಿ ಕೃಪೆಗೆ ಪಾತ್ರರಾಗಬೇಕೆಂದು ಕೋರಿದರು.
    ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಂದ್ರ ಉಕ್ಕು ಹಾಗು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ ಕುಮಾರಸ್ವಾಮಿ, ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಬಿ.ಕೆ ಸಂಗಮೇಶ್ವರ್, ಜಿ.ಎಚ್ ಶ್ರೀನಿವಾಸ್, ಡಿ.ಎಸ್ ಅರುಣ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ನಗರಸಭೆ ಸದಸ್ಯೆ ಜಯಶೀಲ ಸುರೇಶ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳುತ್ತಿದ್ದು, ಈ ಧಾರ್ಮಿಕ ಕಾರ್ಯ ವಿಶೇಷವಾಗಿ ನಡೆಯುತ್ತಿರುವುದರಿಂದ ಶಾಂತಿ, ಸಹನೆ, ಸಹಬಾಳ್ವೆಯಿಂದ ಊರಿನ ಸಮಸ್ತರು ವಿಶೇಷವಾಗಿ ಆಚರಿಸುವುದರ ಮೂಲಕ ಪ್ರತಿ ಮನೆಯ ಹಬ್ಬದಂತೆ ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆಚರಿಸಿ ಸಹಕರಿಸಲು ಮನವಿ ಮಾಡಿದರು. 
    ನಗರಸಭೆ ಸದಸ್ಯೆ ಜಯಶೀಲ ಸುರೇಶ್, ಟ್ರಸ್ಟ್ ಗೌರವಾಧ್ಯಕ್ಷ ಎಂ. ರಾಮಕೃಷ್ಣಪ್ಪ, ಅಧ್ಯಕ್ಷ ಶಿವರಾಜ್, ಉಪಾಧ್ಯಕ್ಷ ಎನ್. ಉಮೇಶ್, ಪ್ರಧಾನ ಕಾರ್ಯದರ್ಶಿ ಕೆ. ಪರಮೇಶ್, ಖಜಾಂಚಿ ಶ್ಯಾಮ್ ಕುಮಾರ್, ಟ್ರಸ್ಟಿಗಳಾದ ಚೇತನ್ ಕುಮಾರ್, ಚಂದ್ರಶೇಖರ್, ಸಿ. ಕಾಶಿ ಹಾಗು ದೇವಸ್ಥಾನ ಪ್ರಧಾನ ಅರ್ಚಕ ಮುರುಳಿಧರ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. 

ಇಎಸ್‌ಐ ವಿಮಾದಾರರ ಸೌಲಭ್ಯಗಳ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ : ಎಚ್.ಆರ್ ರಂಗನಾಥ್

ಭದ್ರಾವತಿ ನ್ಯೂಟೌನ್ ಬಂಟರ ಭವನದಲ್ಲಿ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಇಎಸ್‌ಐ ವಿಮಾದಾರರ ಹಾಗು ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗು ಇಎಸ್‌ಐ ಕಾರ್ಮಿಕರಿಗೆ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮ ನಿವೃತ್ತ ಆಡಳಿತ ವಿಮಾ ವೈದ್ಯಾಧಿಕಾರಿ ಡಾ.ಎಚ್.ಆರ್ ವಿಜಯಮೂರ್ತಿ ಉದ್ಘಾಟಿಸಿದರು. 
    ಭದ್ರಾವತಿ: ನಗರದಲ್ಲಿ ಕಾರ್ಮಿಕರಿಗೆ ಇಎಸ್‌ಐ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಶಿವಮೊಗ್ಗ ಜಿಲ್ಲಾ ಇಎಸ್‌ಐ ವಿಮಾದಾರರ ಹಾಗು ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ತಾಲೂಕು ಶಾಖೆ ನೂತನ ಅಧ್ಯಕ್ಷ, ರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು ಎಚ್.ಆರ್ ರಂಗನಾಥ್ ಭರವಸೆ ನೀಡಿದರು. 
    ಅವರು ಗುರುವಾರ ಸಂಘದ ವತಿಯಿಂದ ನ್ಯೂಟೌನ್ ಬಂಟರ ಭವನದಲ್ಲಿ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗು ಇಎಸ್‌ಐ ಕಾರ್ಮಿಕರಿಗೆ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಮಾತನಾಡಿದರು. 
    ನಗರದಲ್ಲಿ ಕಾರ್ಮಿಕರು ಇಎಸ್‌ಐ ಸೌಲಭ್ಯಗಳನ್ನು ಪಡೆದುಕೊಳ್ಳಲು ಸಾಕಷ್ಟು ತೊಂದರೆ ಅನುಭವಿಸಬೇಕಾದ ಸಂದರ್ಭದಲ್ಲಿ ಎಂಪಿಎಂ ಕಾರ್ಖಾನೆ ಗುತ್ತಿಗೆ ಕಾರ್ಮಿಕರು ನಡೆಸಿದ ನಿರಂತರ ಹೋರಾಟದ ಪ್ರಯತ್ನದ ಫಲವಾಗಿ ಹಾಗು ಶಾಸಕರು ಹೆಚ್ಚಿನ ಆಸಕ್ತಿವಹಿಸಿದ ಹಿನ್ನಲೆಯಲ್ಲಿ ಇಎಸ್‌ಐ ಆಸ್ಪತ್ರೆ ಸೌಲಭ್ಯಗಳು ಕಾರ್ಮಿಕರಿಗೆ ಸಮರ್ಪಕವಾಗಿ ಲಭಿಸುತ್ತಿವೆ. ಕ್ಷೇತ್ರದಲ್ಲಿ ಕಾರ್ಮಿಕರು ಹೆಚ್ಚಾಗಿದ್ದು, ಇಂತಹ ಕ್ಷೇತ್ರದಲ್ಲಿ ಸಂಘಟನೆ ಬಹಳ ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಇಎಸ್‌ಐ ವಿಮಾದಾರರ ಹಾಗು ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘ ಮತ್ತಷ್ಟು ಸಂಘಟಿತಗೊಂಡು ಜವಾಬ್ದಾರಿಯನ್ನು ವಹಿಸಿರುವುದು ತುಂಬಾ ಹೆಮ್ಮೆಯ ಸಂಗತಿಯಾಗಿದೆ ಎಂದರು. 
    ನಿವೃತ್ತ ಆಡಳಿತ ವಿಮಾ ವೈದ್ಯಾಧಿಕಾರಿ ಡಾ.ಎಚ್.ಆರ್ ವಿಜಯಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರಿ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಿರುವ ನನಗೆ ವಿಮಾ ಕಾರ್ಮಿಕರ ಸಂಕಷ್ಟಗಳನ್ನು ಅರಿತುಕೊಂಡಿದ್ದೇನೆ. ಕಾರ್ಮಿಕರು ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಇಂತಹ ಸಂಘಟನೆಗಳು ಸಹಕಾರಿಯಾಗಿವೆ ಎಂದರು. 
    ಸಂಘದ ಜಿಲ್ಲಾಧ್ಯಕ್ಷ ರಾಜಾಸಾಬ್ ಎಚ್. ನಂದಿಹಳ್ಳಿ ಅಧ್ಯಕ್ಷತೆ ವಹಿಸಿದ್ದರು. ನಯನ ಆಸ್ಪತ್ರೆ ನೇತ್ರ ತಜ್ಞ ಡಾ. ಕುಮಾರಸ್ವಾಮಿ ಮಾತನಾಡಿ, ಕಣ್ಣುಗಳ ರಕ್ಷಣೆ ಹಾಗು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು. 
    ಇಎಸ್‌ಐ ಆಡಳಿತ ವಿಮಾ ವೈದ್ಯಾಧಿಕಾರಿ ಡಾ. ಈಶ್ವರಪ್ಪ, ಸಂಘದ ಜಿಲ್ಲಾ ಶಾಖೆ ಉಪಾಧ್ಯಕ್ಷ ಬಿ. ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಎಸ್. ಅಜ್ಜಯ್ಯ(ಅಜೇಯ್), ಸಂಘಟನಾ ಕಾರ್ಯದರ್ಶಿ ಎಂ.ಎನ್ ಶಿವಕುಮಾರ್, ಖಜಾಂಚಿ ಕೆ.ವಿ ರವೀಂದ್ರ, ಹಾಗು ತಾಲೂಕು ನೂತನ ಉಪಾಧ್ಯಕ್ಷ ಪುಟ್ಟಮಾದಯ್ಯ, ಕಾರ್ಯದರ್ಶಿ ಚಿಕ್ಕಣ್ಣ ಮತ್ತು ನಿರ್ದೇಶಕ ವೆಂಕಟೇಶ್ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಸಹಯೋಗದೊಂದಿಗೆ ವಿಮಾದಾರರಿಗೆ ನೇತ್ರ ತಪಾಸಣೆ ಏರ್ಪಡಿಸಲಾಗಿತ್ತು. 


ಭದ್ರಾವತಿ ನ್ಯೂಟೌನ್ ಬಂಟರ ಭವನದಲ್ಲಿ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ಇಎಸ್‌ಐ ವಿಮಾದಾರರ ಹಾಗು ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗು ಇಎಸ್‌ಐ ಕಾರ್ಮಿಕರಿಗೆ ಮಾಹಿತಿ ಕಾರ್ಯಾಗಾರ ಕಾರ್ಯಕ್ರಮದಲ್ಲಿ ತಾಲೂಕು ಶಾಖೆ ನೂತನ ಅಧ್ಯಕ್ಷ  ರಾಷ್ಟ್ರೀಯ ಕಬ್ಬಡಿ ಕ್ರೀಡಾಪಟು ಎಚ್.ಆರ್ ರಂಗನಾಥ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 

ಧರ್ಮ ಪರಿಪಾಲನೆಯಿಂದ ಉತ್ತಮ ಸಂಸ್ಕಾರ : ರಂಭಾಪುರಿ ಶ್ರೀ

ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾದೀಶ್ವರ ಶ್ರೀ ಶ್ರೀ ಶ್ರೀ ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಗುರುವಾರ ಭದ್ರಾವತಿ ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ, ಸಹ್ಯಾದ್ರಿ ಬಡಾವಣೆಯಲ್ಲಿ ಉದ್ಯಮಿ ದಿವಂಗತ ಮಹಾದೇವಪ್ಪನವರ ನಿವಾಸದಲ್ಲಿ ಆಯೋಜಿಸಲಾಗಿದ್ದ ೪ನೇ ವರ್ಷದ ಇಷ್ಟಲಿಂಗ ಮಹಾಪೂಜೆ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಅಶೀರ್ವಚನ ನೀಡಿದರು. 
    ಭದ್ರಾವತಿ: ಪ್ರತಿಯೊಬ್ಬರಿಗೂ ಧರ್ಮ ಪರಿಪಾಲನೆ ಬಹಳ ಮುಖ್ಯವಾಗಿದ್ದು, ಇದನ್ನು ಅರಿತುಕೊಂಡಾಗ ನೆಮ್ಮದಿಯಿಂದ ಬದುಕಲು ಸಾಧ್ಯ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಶ್ರೀಮದ್ ರಂಭಾಪುರಿ ವೀರ ಸಿಂಹಾಸನಾದೀಶ್ವರ ಶ್ರೀ ಶ್ರೀ ಶ್ರೀ ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು. 
    ಜಗದ್ಗುರುಗಳು ಗುರುವಾರ ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ, ಸಹ್ಯಾದ್ರಿ ಬಡಾವಣೆಯಲ್ಲಿ ಉದ್ಯಮಿ ದಿವಂಗತ ಮಹಾದೇವಪ್ಪನವರ ನಿವಾಸದಲ್ಲಿ ಆಯೋಜಿಸಲಾಗಿದ್ದ ೪ನೇ ವರ್ಷದ ಇಷ್ಟಲಿಂಗ ಮಹಾಪೂಜೆ ಧಾರ್ಮಿಕ ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸಿ ಅಶೀರ್ವಚನ ನೀಡಿದರು. 
    ಧರ್ಮಪರಿಪಾಲನೆಯಿಂದ ಉತ್ತಮ ಸಂಸ್ಕಾರ ರೂಢಿಸಿಕೊಳ್ಳಲು ಸಾಧ್ಯ. ಲೋಕ ಕಲ್ಯಾಣಾರ್ಥವಾಗಿ ನೆರವೇರಿಸುವ ಇಷ್ಟಲಿಂಗ ಮಹಾಪೂಜೆ ಈ ನಿಟ್ಟಿನಲ್ಲಿ ಸಹಕಾರಿಯಾಗಿದೆ. ಇಂತಹ ಧಾರ್ಮಿಕ ಕಾರ್ಯಗಳು ಹೆಚ್ಚಾಗಿ ನಡೆಯಬೇಕು. ಮಾನವ ಜನ್ಮ ಶ್ರೇಷ್ಠವಾಗಿದ್ದು, ಇದನ್ನು ಸಾರ್ಥಕಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಬೇಕೆಂದರು. 
    ಬಿಳಿಕಿ ಹಿರೇಮಠದ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಸ್ವಾಮೀಜಿಯವರು ಮಾತನಾಡಿ, ನಾವು ನಮ್ಮ ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ಈ ನಿಟ್ಟಿನಲ್ಲಿ ಇಂತಹ ಆಚರಣೆಗಳು ಸಹಕಾರಿಯಾಗಿವೆ. ಮಕ್ಕಳು ಹಿರಿಯರನ್ನು ಕಡೆಗಣಿಸಬಾರದು. ಅವರನ್ನು ಕಡೆಯವರೆಗೂ ನೋಡಿಕೊಳ್ಳಬೇಕು. ಇದು ಮಕ್ಕಳ ಜವಾಬ್ದಾರಿಯಾಗಿದ್ದು, ಕುಟುಂಬದಲ್ಲಿ ಮಕ್ಕಳು, ಹಿರಿಯರು ಎಲ್ಲರೂ ಒಂದಾಗಿ ಬದುಕಿದಾಗ ಮಾತ್ರ ಆರೋಗ್ಯ ಪೂರ್ಣ ಸಮಾಜ ರೂಪುಗೊಳ್ಳಲು ಸಾಧ್ಯ ಎಂದರು. 
    ಮಳಲಿ ಮಠದ ಶ್ರೀ ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ಮತ್ತು ಶ್ರೀ ಶಾಂತವೀರ ಶಿವಾಚಾರ್ಯ ಸ್ವಾಮೀಜಿಯವರು ಉಪಸ್ಥಿತರಿದ್ದು ಮಾತನಾಡಿದರು. 
    ಕುಟುಂಬ ವರ್ಗದವರಾದ ರತ್ನಮ್ಮ ದಿವಂಗತ ಮಹಾದೇವಪ್ಪ, ಕೃಷ್ಣಮೂರ್ತಿ, ರಂಗಸ್ವಾಮಿ, ಮನು ಮತ್ತು ಸ್ವಾಮಿ ಹಾಗು ಪ್ರಮುಖರಾದ ಸಿದ್ದಲಿಂಗಯ್ಯ, ಕೆ.ಎಸ್ ವಿಜಯ್‌ಕುಮಾರ್, ಕೂಡ್ಲಿಗೆರೆ ಹಾಲೇಶ್, ಯಶವಂತರಾವ್ ಘೋರ್ಪಡೆ, ಎಚ್.ವಿ ಶಿವರುದ್ರಪ್ಪ ಸೇರಿದಂತೆ ಸ್ಥಳೀಯರು ಪಾಲ್ಗೊಂಡಿದ್ದರು.