ಭದ್ರಾವತಿ ಹಳೇನಗರದ ಕೆಎಸ್ಆರ್ಟಿಸಿ ಬಸ್ ಘಟಕದ ಸಮೀಪದ ದೇವರಾಜ್ ಅರಸ್ ಬಡಾವಣೆಯ ಬಿಸಿಎಂ ಬಾಲಕಿಯರ ವಿದ್ಯಾರ್ಥಿನಿಲಯದ ಪಕ್ಕದಲ್ಲಿರುವ ಎಂ.ಜಿ ರಮೇಶ್ ಎಂಬುವರ ಮನೆ ಬೀಗ ಮುರಿದು ನಗದು, ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಭದ್ರಾವತಿ : ಹಳೇನಗರದ ಕೆಎಸ್ಆರ್ಟಿಸಿ ಬಸ್ ಘಟಕದ ಸಮೀಪದ ದೇವರಾಜ್ ಅರಸ್ ಬಡಾವಣೆಯ ಬಿಸಿಎಂ ಬಾಲಕಿಯರ ವಿದ್ಯಾರ್ಥಿನಿಲಯದ ಪಕ್ಕದಲ್ಲಿರುವ ಮನೆಯೊಂದರ ಬೀಗ ಮುರಿದು ನಗದು, ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ಎಂ.ಜಿ ರಮೇಶ್ ಎಂಬುವರ ಮನೆಯ ಕಾಂಪೌಂಡ್ ಗೇಟ್ ಹಾರಿ ಮನೆಯ ಬಾಗಿಲ ಬೀಗ ಮುರಿದು ಕಳ್ಳತನ ಮಾಡಲಾಗಿದ್ದು, ಮನೆಯವರು ಬೀಗ ಹಾಕಿಕೊಂಡು ಊರಿಗೆ ಹೋಗಿದ್ದಾಗ ಈ ಘಟನೆ ನಡೆದಿದೆ.
ಬುಧವಾರ ಬೆಳಗ್ಗೆ ೧೧ ಗಂಟೆ ಸಮಯದಲ್ಲಿ ಮನೆಯವರು ಊರಿಂದ ಬಂದು ನೋಡಿದಾಗ ಮನೆಯ ಬೀಗ ಮುರಿದಿರುವುದು ಕಂಡು ಬಂದಿದ್ದು, ಒಳಹೋಗಿ ನೋಡಿದಾಗ ಸುಮಾರು ೨೫ ಸಾವಿರ ರೂ ನಗದು, ಚಿನ್ನಾಭರಣಗಳನ್ನು ಕಳ್ಳತನ ಮಾಡಿರುವುದು ಕಂಡು ಬಂದಿದೆ.
ಸ್ಥಳಕ್ಕೆ ಶ್ವಾನದಳ ಮತ್ತು ಬೆರಳಚ್ಚು ತಜ್ಞರ ತಂಡ ಹಾಗು ಹಳೇನಗರ ಪೊಲೀಸ್ ಠಾಣೆ ಉಪ ನಿರೀಕ್ಷಕ ಚಂದ್ರಶೇಖರ ನಾಯ್ಕ ಮತ್ತು ಸಿಬ್ಬಂದಿಗಳಾದ ಹಾಲಪ್ಪ ಸೇರಿದಂತೆ ಇನ್ನಿತರರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು.