Friday, May 23, 2025

ಮೇ. ೨೫ರಂದು ಶ್ರೀ ಕರುಮಾರಿಯಮ್ಮ ದೇವಿಯ ೪೫ನೇ ವರ್ಷದ ಕರಗ ಉತ್ಸವ

ಭದ್ರಾವತಿ ನ್ಯೂಟೌನ್, ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನ
    ಭದ್ರಾವತಿ : ನಗರದ ನ್ಯೂಟೌನ್, ವಿಐಎಸ್‌ಎಲ್ ಆಸ್ಪತ್ರೆ ಸಮೀಪದ ಶ್ರೀ ಕರುಮಾರಿಯಮ್ಮ ದೇವಸ್ಥಾನದ ೪೫ನೇ ವರ್ಷದ ಕರಗ ಮಹೋತ್ಸವ ಶುಕ್ರವಾರದಿಂದ ಆರಂಭಗೊಂಡಿದ್ದು, ಮೇ.೨೫ರ ಭಾನುವಾರ ಕರಗ ಉತ್ಸವ ನಡೆಯಲಿದೆ. 
    ಮೇ.೨೪ರ ಬೆಳಿಗ್ಗೆ ೧೦ ಗಂಟೆಗೆ ಅಮ್ಮನವರಿಗೆ ಪಂಚಾಮೃತ ಅಭಿಷೇಕ, ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಸಂಜೆ ೬ ಗಂಟೆಗೆ ಉಮಾ ಮಹಿಳಾ ಭಜನಾ ಮಂಡಳಿಯಿಂದ ಭಕ್ತಿಗೀತೆಗಳು ನಡೆಯಲಿವೆ. ಮೇ.೨೫ರ ಭಾನುವಾರ ೯ ಗಂಟೆಗೆ ಅಮ್ಮನವರಿಗೆ ಎಳನೀರು ಮತ್ತು ಪಂಚಾಮೃತ ಅಭಿಷೇಕ, ತೀರ್ಥಪ್ರಸಾದ ವಿನಿಯೋಗ, ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ, ಮಧ್ಯಾಹ್ನ ೧೨ ಗಂಟೆಗೆ ಶ್ರೀ ದೇವಿಗೆ ಬುಳ್ಳಾಪುರ ಚಾನೆಲ್ ಬಳಿ ಶಕ್ತಿ ಕರಗ ಸ್ಥಾಪನೆ ಮಾಡಿ ಮೆರವಣಿಗೆಯ ಮೂಲಕ ದೇವಸ್ಥಾನ ತಂದು ಮಹಾಮಂಗಳಾರತಿಯೊಂದಿಗೆ ತೀರ್ಥ ಪ್ರಸಾದ ವಿನಿಯೋಗ ಜರುಗಲಿದೆ. 
    ನಂತರ ದೇವಿಗೆ ಅಂಬಲಿ ಮತ್ತು ಅನ್ನದಾನ ಸಮರ್ಪಣೆ ನಡೆಯಲಿದ್ದು, ಸಂಜೆ ದೇವಿಗೆ ಅರಿಶಿನ ಅಭಿಷೇಕ ಮತ್ತು ಮಹಾ ಮಂಗಳಾರತಿಯೊಂದಿಗೆ ಕರಗ ಭದ್ರಾ ನದಿಯಲ್ಲಿ ವಿಸರ್ಜನೆ ನಡೆಯಲಿದೆ. 
    ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್, ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜ್‌ಕುಮಾರ್, ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್, ಸದಸ್ಯರಾದ ಬಿ.ಕೆ ಮೋಹನ್, ಸರ್ವಮಂಗಳ ಭೈರಪ್ಪ, ಕಾಂತರಾಜ್, ನಾಗರತ್ನ ಅನಿಲ್‌ಕುಮಾರ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ, ನಗರಸಭೆ ಮಾಜಿ ಸದಸ್ಯರಾದ ಎಂ.ಎ ಅಜಿತ್, ಎಂ. ರಾಜು, ಆಂಜನಪ್ಪ, ಲಲಿತಮ್ಮ ಕೃಷ್ಣಪ್ಪ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮುಖಂಡರಾದ ಉದ್ಯಮಿ ಎ. ಮಾಧು, ಎಂ. ಮಂಜುನಾಥ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. 
    ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕರಗ ಮಹೋತ್ಸವ ಯಶಸ್ವಿಗೊಳಿಸುವಂತೆ ದೇವಸ್ಥಾನ ಸೇವಾ ಸಮಿತಿ ಕೋರಿದೆ. 

ನಗರಸಭೆ ವ್ಯಾಪ್ತಿಯ ಬೀದಿ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆಗೆ ಚಾಲನೆ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಪ್ರತಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ ಬೀದಿ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದ್ದು, ಶುಕ್ರವಾರ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜ್‌ಕುಮಾರ್ ಚಾಲನೆ ನೀಡಿದರು.
    ಭದ್ರಾವತಿ : ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಪ್ರತಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ ಬೀದಿ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದ್ದು, ಶುಕ್ರವಾರ ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾರಾಜ್‌ಕುಮಾರ್ ಚಾಲನೆ ನೀಡಿದರು.
    ನಗರಸಭೆ ಮೈದಾನದಲ್ಲಿ ಚಿಕ್ಕಮಗಳೂರು ಗ್ರೀನ್ ಫೂಟ್‌ಪ್ರಿಂಟ್ ಟ್ರಸ್ಟ್ ಸಹಯೋಗದೊಂದಿಗೆ ನಗರಸಭೆ ವತಿಯಿಂದ ಹೊಸಮನೆ ಮುಖ್ಯರಸ್ತೆ, ಸಂತೆ ಮೈದಾನದಲ್ಲಿರುವ ಮಳಿಗೆಗಳ ಕಟ್ಟಡದಲ್ಲಿ ನಾಯಿಗಳ ಸಂತಾನಹರಣ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ತಾಲೂಕು ಮುಖ್ಯ ಪಶು ವೈದ್ಯಾಧಿಕಾರಿ ಡಾ. ಡಿ.ಬಿ ಶಿವರಾಜ್ ಮಾರ್ಗದರ್ಶನದಲ್ಲಿ ಎನ್‌ಜಿಓ ಡಾ. ವಿಜಯಶಂಕರ್ ಶಸ್ತ್ರ ಚಿಕಿತ್ಸೆ ನಡೆಸುತ್ತಿದ್ದು,  ಗ್ರೀನ್ ಫೂಟ್‌ಪ್ರಿಂಟ್ ಟ್ರಸ್ಟ್ ಕಾರ್ಯಕರ್ತರು ನಗರಸಭೆ ಪೌರಕಾರ್ಮಿಕರ ಸಹಕಾರದೊಂದಿಗೆ ನಗರಸಭೆ ವ್ಯಾಪ್ತಿಯ ವಿವಿಧೆಡೆ ಬೀದಿ ನಾಯಿಗಳನ್ನು ಪ್ರತಿದಿನ ಹಿಡಿದು ಶಸ್ತ್ರ ಚಿಕಿತ್ಸಾ ಸ್ಥಳಕ್ಕೆ ತರಲಾಗುತ್ತಿದೆ. 
    ನಗರಸಭೆ ವ್ಯಾಪ್ತಿಯಲ್ಲಿ ಸುಮಾರು ೬ ಸಾವಿರ ಬೀದಿ ನಾಯಿಗಳಿವೆ ಎಂದು ಅಂದಾಜಿಸಲಾಗಿದ್ದು, ಈ ಪೈಕಿ ಈ ಬಾರಿ ಸುಮಾರು ೧೬೦೦ ಬೀದಿ ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ನಡೆಸುವ ಗುರಿ ಹೊಂದಲಾಗಿದೆ. ಒಂದು ನಾಯಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಸುಮಾರು ೧,೬೦೦ ರು. ವೆಚ್ಚವಾಗಲಿದ್ದು, ಕಳೆದ ಬಾರಿ ೧ ಸಾವಿರ ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. 


    ಗೂಗಲ್ ಮ್ಯಾಪ್ ವಿಳಾಸ ಆಧರಿಸಿ ಬೀದಿನಾಯಿಗಳನ್ನು ಹಿಡಿದು ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದ್ದು, ನಂತರ ೩ ದಿನ ಅವುಗಳನ್ನು ಆರೈಕೆ ಮಾಡಿ ಪುನಃ ಅವುಗಳ ನಿಗದಿತ ಸ್ಥಳಕ್ಕೆ ಬಿಡಲಾಗುವುದು. ಶಸ್ತ್ರ ಚಿಕಿತ್ಸೆ ಸಮಯದಲ್ಲಿ ನಾಯಿಗಳಿಗೆ ಸೋಂಕು ಹರಡದಂತೆ ನಿವಾರಕ ಬಳಸಲಾಗುತ್ತಿದ್ದು, ಅಲ್ಲದೆ ರೇಬಿಸ್ ನಿರೋಧಕ ಚುಚ್ಚು ಮದ್ದು ನೀಡಲಾಗುತ್ತಿದೆ. ಇದರಿಂದ ಬೀದಿ ನಾಯಿಗಳು ಒಂದು ವೇಳೆ ಮನುಷ್ಯರ ಮೇಲೆ ದಾಳಿ ಮಾಡಿದಾಗ ರೇಬಿಸ್ ರೋಗಾಣುಗಳು ಹರಡುವುದಿಲ್ಲ. ಶಸ್ತ್ರ ಚಿಕಿತ್ಸೆ ನಡೆಸಿದ ನಾಯಿಗಳನ್ನು ಸುಲಭವಾಗಿ ಗುರುತಿಸಲು ಅವುಗಳ ಒಂದು ಭಾಗದ ಕಿವಿಯನ್ನು ಸುಮಾರು ಅರ್ಧ ಇಂಚು ಪಂಚ್ ಮಾಡಿ ಕತ್ತರಿಸಲಾಗುತ್ತಿದೆ. ಪ್ರತಿ ದಿನ ಸುಮಾರು ೨೦ ರಿಂದ ೨೫ ನಾಯಿಗಳಿಗೆ ಶಸ್ತ್ರ ಚಿಕಿತ್ಸೆ ನಡೆಯಲಿದೆ. 
    ನಗರಸಭೆ ಉಪಾಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಸೈಯದ್ ರಿಯಾಜ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಪರಿಸರ ಅಭಿಯಂತರ ಪ್ರಭಾಕರ್, ಸದಸ್ಯರಾದ ಲತಾ ಚಂದ್ರಶೇಖರ್, ಮುಖಂಡ ಬಿ. ಗಂಗಾಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.