೨ನೇ ಬಾರಿಗೆ ಮುಳುಗಿದ ಹೊಸ ಸೇತುವೆ
ಭದ್ರಾ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುತ್ತಿರುವ ಹಿನ್ನಲೆಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಹೊಸಸೇತುವೆ ಈ ವರ್ಷ ೨ನೇ ಬಾರಿಗೆ ಮುಳುಗಡೆಗೊಂಡಿದೆ.
ಭದ್ರಾವತಿ: ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಕಳೆದ ೩-೪ ದಿನಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಲಾಶಯ ಬಹುತೇಕ ಭರ್ತಿಯಾಗಿದ್ದು, ಸುಮಾರು ೪೦ ಸಾವಿರ ಕ್ಯೂಸೆಕ್ ನೀರು ಒಳಹರಿವು ಹೊಂದಿದ್ದು, ಇಷ್ಟೆ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಈ ನಡುವೆ ನಗರದ ಹೃದಯ ಭಾಗದಲ್ಲಿರುವ ಹೊಸ ಸೇತುವೆ ಈ ವರ್ಷ ೨ನೇ ಬಾರಿಗೆ ಮುಳುಗಡೆಗೊಂಡಿದೆ.
ಭಾನುವಾರ ರಾತ್ರಿಯಿಂದಲೇ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು, ಸೋಮವಾರ ಬೆಳಿಗ್ಗೆ ಹೊಸಸೇತುವೆ ಮೇಲೆ ಹರಿಯುತ್ತಿದ್ದು, ಈ ಹಿನ್ನಲೆಯಲ್ಲಿ ಸೇತುವೆ ಮೇಲಿನ ಸಂಚಾರ ಸ್ಥಗಿತಗೊಳಿಸಲಾಗಿದೆ. ಸೇತುವೆ ಎರಡು ಬದಿಯಲ್ಲಿ ಬ್ಯಾರಿಗೇಡ್ಗಳನ್ನು ಅಳವಡಿಸಿ ಸಂಚಾರ ನಿಷೇಧಿಸಲಾಗಿದೆ. ಇದರಿಂದಾಗಿ ನಗರದಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ದಟ್ಟಣೆ ನಿಯಂತ್ರಿಸಲು ಸಂಚಾರಿ ಪೊಲೀಸರು ಹರಸಹಾಸ ಪಡುವಂತಾಗಿದೆ.
ಮಳೆ ಪ್ರಮಾಣ ಹೆಚ್ಚಾದ್ದಲ್ಲಿ ನದಿಗೆ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣ ನೀರು ಹೊರ ಬಿಡುವ ಸಾಧ್ಯತೆ ಇದ್ದು, ಇದರಿಂದಾಗಿ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲವೃತಗೊಳ್ಳಲಿವೆ. ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ನಗರಸಭೆ ಆಡಳಿತಗಳು ಪ್ರವಾಹ ಎದುರಿಸಲು ಸಿದ್ದತೆಗಳನ್ನು ಕೈಗೊಂಡಿವೆ. ತಗ್ಗು ಪ್ರದೇಶದ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚಿಸಲಾಗಿದೆ.