ಮಂಗಳವಾರ, ಸೆಪ್ಟೆಂಬರ್ 16, 2025

ನೂತನ ಕಮಾನು ಸೇತುವೆಗೆ `ಶ್ರಿ ವಿಶ್ವಕರ್ಮಶಿಲ್ಪಿ ಅಮರಶಿಲ್ಪಿ ಜಕಣಾಚಾರಿ ಸೇತುವೆ' ಹೆಸರು ನಾಮಕರಣ

ಭದ್ರಾವತಿ ನಗರದ ಹೃದಯ ಭಾಗದಲ್ಲಿ ಭದ್ರಾ ನದಿಗೆ ಬಿ.ಎಚ್ ರಸ್ತೆ (ಡಾ. ರಾಜಕುಮಾರ್ ರಸ್ತೆ)ಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಮಾನು ಸೇತುವೆಗೆ `ಶ್ರಿ ವಿಶ್ವಕರ್ಮಶಿಲ್ಪಿ ಅಮರಶಿಲ್ಪಿ ಜಕಣಾಚಾರಿ ಸೇತುವೆ' ಹೆಸರು ನಾಮಕರಣಗೊಳಿಸಲಾಗುತ್ತಿದ್ದು, ವಿಶ್ವಕರ್ಮ ಸಮಾಜ ಬಾಂಧವರಲ್ಲಿ ಸಂತಸ ಮನೆ ಮಾಡಿದೆ. 
    ಭದ್ರಾವತಿ : ನಗರದ ಹೃದಯ ಭಾಗದಲ್ಲಿ ಭದ್ರಾ ನದಿಗೆ ಬಿ.ಎಚ್ ರಸ್ತೆ (ಡಾ. ರಾಜಕುಮಾರ್ ರಸ್ತೆ)ಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕಮಾನು ಸೇತುವೆಗೆ `ಶ್ರಿ ವಿಶ್ವಕರ್ಮಶಿಲ್ಪಿ ಅಮರಶಿಲ್ಪಿ ಜಕಣಾಚಾರಿ ಸೇತುವೆ' ಹೆಸರು ನಾಮಕರಣಗೊಳಿಸಲಾಗುತ್ತಿದ್ದು, ವಿಶ್ವಕರ್ಮ ಸಮಾಜ ಬಾಂಧವರಲ್ಲಿ ಸಂತಸ ಮನೆ ಮಾಡಿದೆ. 
    ಕಳೆದ ಒಂದು ವರ್ಷದ ಹಿಂದೆ ಅಮರಶಿಲ್ಪಿ ಜಕಣಾಚಾರಿ ಜನ್ಮದಿನದಂದು ಸೇತುವೆಗೆ ಅವರ ಹೆಸರನ್ನು ನಾಮಕರಣಗೊಳಿಸುವಂತೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ನಗರಸಭೆ ಆಡಳಿತಕ್ಕೆ ಮನವಿ ಸಲ್ಲಿಸಿ ಒತ್ತಾಯಿಸಿದ್ದರು. 
    ನಗರಸಭೆ ಸಾಮಾನ್ಯಸಭೆಯಲ್ಲಿ ಈ ಸಂಬಂಧ ಸಲ್ಲಿಕೆಯಾಗಿದ್ದ ಪ್ರಸ್ತಾವನೆಗೆ ಸದಸ್ಯರು ಪಕ್ಷಬೇಧ ಮರೆತು ಒಮ್ಮತ ಸೂಚಿಸಿ ಸರ್ಕಾರಕ್ಕೆ ನಿರ್ಣಯ ಕಳುಹಿಸಲಾಗಿತ್ತು. ಸರ್ಕಾರ ಅನುಮೋದನೆ ನೀಡಿದ್ದು, ಈ ಹಿನ್ನಲೆಯಲ್ಲಿ ಕಳೆದ ೨ ದಿನಗಳ ಹಿಂದೆ ಸೇತುವೆ ಎರಡು ಬದಿ ಕಮಾನುಗಳ ಮೇಲೆ ಬೃಹತ್ ನಾಮಫಲಕ ಜೆಸಿಬಿ ಯಂತ್ರ ಬಳಸಿ ಅಳವಡಿಸಲಾಗಿದೆ. ನಗರಸಭೆ ಅಭಿಯಂತರ ಪ್ರಸಾದ್, ಕಲಾವಿದ ಭದ್ರಾವತಿ ಗುರು, ರಾಮಕೃಷ್ಣ, ಗೋವರ್ಧನರಾವ್, ತಿಪ್ಪೇಸ್ವಾಮಿ, ಶಿವರುದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    2018ರಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ:
    ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದ ಡಾ. ಎಚ್.ಸಿ ಮಹಾದೇವಪ್ಪ 2018ರಲ್ಲಿ ಸೇತುವೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದಿಂದ ಅಂದಾಜು 21.34 ಕೋ. ರು. ವೆಚ್ಚದಲ್ಲಿ 240.5 ಮೀಟರ್ ಉದ್ದದ ಸೇತುವೆ ನಿರ್ಮಿಸಲಾಗಿದೆ.  ಮೆ/ಎಸ್‌ಪಿಎಲ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್, ಚೆನ್ನೈ ಕಂಪನಿಗೆ ಗುತ್ತಿಗೆ ನೀಡಲಾಗಿತ್ತು. ನಿರ್ವಹಣಾ ಸಲಹೆಗಾರರಾಗಿ ಮೆ/ ಸತ್ರ ಇನ್ಫ್ರಾಸ್ಟ್ರಕ್ಚರ್ ಮ್ಯಾನೇಜ್‌ಮೆಂಟ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಇವರನ್ನು ನೇಮಕಗೊಳಿಸಲಾಗಿದೆ. 5 ವರ್ಷಗಳವರೆಗೆ ಸೇತುವೆ ನಿರ್ವಹಣಾ ಜವಾಬ್ದಾರಿಯನ್ನು ಗುತ್ತಿಗೆದಾರರಿಗೆ ವಹಿಸಲಾಗಿದೆ.


    155 ವರ್ಷಗಳ `ಭದ್ರಾ ಸೇತುವೆ'(ಹಳೇ ಸೇತುವೆ) : 
    ೧೫೫ ವರ್ಷಗಳ ಹಿಂದೆ ಮೈಸೂರು ರಾಜ್ಯದ ಪಿಡಬ್ಲ್ಯೂಡಿ ಇಲಾಖೆಯ ಮುಖ್ಯ ಆಯುಕ್ತರಾಗಿದ್ದ ಬ್ರಿಟಿಷ್ ಅಧಿಕಾರಿ ಕಬ್ಬನ್ ಅಂದಿನ ಬೆಂಕಿಪುರ(ಭದ್ರಾವತಿ)ದಲ್ಲಿ ೭೪,೯೯೭ ರು. ವೆಚ್ಚದಲ್ಲಿ ಭದ್ರಾ ಸೇತುವೆ ನಿರ್ಮಿಸಿದ್ದರು. ಈ ಸೇತುವೆ ಇಂದಿಗೂ ಬಲಿಷ್ಠವಾಗಿದ್ದು, ನಗರದಲ್ಲಿ ವಾಹನ ದಟ್ಟಣೆ ಅಧಿಕಗೊಂಡ ಹಿನ್ನಲೆಯಲ್ಲಿ ಕಳೆದ ಸುಮಾರು ೨ ದಶಕಗಳಿಂದ ಸೇತುವೆ ಸುರಕ್ಷತೆಗೆ ಒತ್ತಾಯಿಸಿಕೊಂಡು ಬಂದ ಹಿನ್ನಲೆಯಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿತ್ತು. 
    `ಶ್ರಿ ವಿಶ್ವಕರ್ಮಶಿಲ್ಪಿ ಅಮರಶಿಲ್ಪಿ ಜಕಣಾಚಾರಿ ಸೇತುವೆ' : ಸಂತಸ 
    ಅಮರಶಿಲ್ಪಿ ಜಕಣಾಚಾರಿಯವರ ಹೆಸರನ್ನು ನೂತನ ಸೇತುವೆಗೆ ನಾಮಕರಣಗೊಳಿಸುತ್ತಿರುವುದು ವಿಶ್ವಕರ್ಮ ಸಮಾಜ ಬಾಂಧವರಲ್ಲಿ ಸಂತಸ ಮನೆ ಮಾಡಿದೆ. ಈ ನಡುವೆ ಸಮಾಜ ಬಾಂಧವರು ಸೆ.೧೭ ವಿಶ್ವಕರ್ಮ ಜಯಂತಿ ದಿನದಂದು ನೂತನ ಕಮಾನು ಸೇತುವೆಗೆ ಶ್ರಿ ವಿಶ್ವಕರ್ಮಶಿಲ್ಪಿ ಅಮರಶಿಲ್ಪಿ ಜಕಣಾಚಾರಿ ಸೇತುವೆ' ಹೆಸರು ನಾಮಕರಣಗೊಳಿಸಲು ಶ್ರಮಿಸಿರುವ ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹಾಗು ನಗರಸಭೆ ಆಡಳಿತವನ್ನು ಅಭಿನಂದಿಸಲು ಮುಂದಾಗಿದ್ದಾರೆ. 

ನಗರಸಭೆಯಿಂದ ೧೦ ದಿನಗಳ ಕಾಲ ವೈಭವಯುತ ದಸರಾ ಆಚರಣೆ

ಸೆ.೨೨ರಂದು ಹಿರಿಯ ಸಮಾಜ ಸೇವಕ ಎಚ್.ವಿ ಶಿವರುದ್ರಪ್ಪ ಉದ್ಘಾಟನೆ 

ಭದ್ರಾವತಿ ನಗರಸಭೆಯಿಂದ ೧೦ ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ನಾಡಹಬ್ಬ ದಸರಾ ಆಚರಣೆ ಲಾಂಛನ ಮಂಗಳವಾರ ಅನಾವರಣಗೊಳಿಸಲಾಯಿತು. 
    ಭದ್ರಾವತಿ : ಪ್ರತಿ ವರ್ಷದಂತೆ ಈ ಬಾರಿ ಸಹ ನಗರಸಭೆ ವತಿಯಿಂದ ನಾಡಹಬ್ಬ ದಸರಾ ಸೆ.೨೨ ರಿಂದ ಅ.೨ರವರೆಗೆ ವಿವಿಧ ಧಾರ್ಮಿಕ ಆಚರಣೆಗಳೊಂದಿಗೆ ಹಲವು ವಿಭಿನ್ನ ಸಾಂಸ್ಕೃತಿಕ ಮತ್ತು ಕ್ರೀಡಾ ಕಾರ್ಯಕ್ರಮಗಳೊಂದಿಗೆ ವೈಭವಯುತವಾಗಿ ೧೦ ದಿನಗಳ ಕಾಲ ಆಚರಿಸಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷೆ ಜೆ.ಸಿ ಗೀತಾ ರಾಜ್‌ಕುಮಾರ್ ತಿಳಿಸಿದರು.
    ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಬಾರಿ ಸುಮಾರು ೫೦ ಲಕ್ಷ ರು. ವೆಚ್ಚದಲ್ಲಿ ನಾಡಹಬ್ಬ ದಸರಾ ಆಚರಿಸಲಾಗುತ್ತಿದ್ದು, ಸೆ.೨೨ರಂದು ಬೆಳಿಗ್ಗೆ ೧೦.೩೦ಕ್ಕೆ ನಗರಸಭೆ ಸಭಾಂಗಣದಲ್ಲಿ ಹಿರಿಯ ಸಮಾಜ ಸೇವಕರಾದ ಎಚ್.ವಿ ಶಿವರುದ್ರಪ್ಪ ಈ ಬಾರಿ ನಾಡಹಬ್ಬಕ್ಕೆ ಚಾಲನೆ ನೀಡುತ್ತಿದ್ದಾರೆ ಎಂದರು. 
    ನಗರಸಭೆ ಆವರಣದ ವೇದಿಕೆಯಲ್ಲಿ ಇದೆ ದಿನ ಬೆಳಿಗ್ಗೆ ೯ ಗಂಟೆಗೆ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದ ವಿಕಲಚೇತನರಿಂದ ಭಾವಗೀತೆ ಮತ್ತು ಸುಗಮ ಸಂಗೀತಾ ಕಾರ್ಯಕ್ರಮ ನಡೆಯಲಿದ್ದು, ಸಂಜೆ ೬ ಗಂಟೆಗೆ ಶಿವಮೊಗ್ಗ ಝೇಂಕಾರ ಮೆಲೋಡಿಸ್ ವತಿಯಿಂದ ಸುಗಮ ಸಂಗೀತ ಕಾರ್ಯಕ್ರಮ ಜರುಗಲಿದೆ. ೨೩ರಂದು ಬೆಳಿಗ್ಗೆ ೯.೩೦ಕ್ಕೆ ಜನ್ನಾಪುರ ಬಂಟರ ಭವನದಲ್ಲಿ ಮಹಿಳೆಯರಿಗೆ ಇಂಧನ ರಹಿತ ಅಡುಗೆ ಸ್ಪರ್ಧೆ ಆಯೋಜಿಸಲಾಗಿದ್ದು, ಆರ್ಟ್ ಆಫ್ ಲೀವಿಂಗ್ ಯೋಗ ಶಿಕ್ಷಕಿ ಭಾಗ್ಯಮೂರ್ತಿ ಉದ್ಘಾಟಿಸುವರು. ನಗರಸಭೆ ಆವರಣದ ವೇದಿಕೆಯಲ್ಲಿ ಸಂಜೆ ೬ ಗಂಟೆಗೆ ಜನ್ನಾಪುರ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದಿಂದ ಕಿರುನಾಟಕ ಮತ್ತು ಜಾನಪದ ಗೀತೆಗಳ ಗಾಯನ ಹಾಗು ನ್ಯೂಟೌನ್ ಮಿತ್ರಕಲಾ ಮಂಡಳಿಯಿಂದ ಸಂಗ್ಯಾ ಬಾಳ್ಯಾ ಜಾನಪದ ನಾಟ ಪ್ರದರ್ಶನ ಕಾರ್ಯಕ್ರಮ ನಡೆಯಲಿದ್ದು, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ, ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್ ಉದ್ಘಾಟಿಸುವರು ಎಂದರು. 
    ೨೪ರಂದು ಸಂಜೆ ೬ ಗಂಟೆಗೆ ಭದ್ರಾ ಸುಗಮ ಸಂಗೀತಾ ವೇದಿಕೆಯಿಂದ ಸುಗಮ ಸಂಗೀತ ಹಾಗು ಆರ್.ಜೆ ಕಲಾ ತಂಡದವರಿಂದ ಜಾನಪದ ಮತ್ತು ಸುಗಮ ಕಾರ್ಯಕ್ರಮ ನಗರಸಭೆ ಆವರಣದ ವೇದಿಕೆಯಲ್ಲಿ ನಡೆಯಲಿದ್ದು, ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಕಾರ್ಯಕ್ರಮ ಉದ್ಘಾಟಿಸುವರು. ೨೫ರಂದು ಬೆಳಿಗ್ಗೆ ೯.೩೦ಕ್ಕೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ನಗರದ ವಿವಿಧ ಇಲಾಖೆಗಳು, ಸಂಘ-ಸಂಸ್ಥೆಗಳು ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ಮಹಿಳೆಯರಿಗೆ ಮಹಿಳಾ ಕ್ರೀಡಾ ಕೂಟ ಆಯೋಜಿಸಲಾಗಿದ್ದು, ೩ ಬಾರಿ ಖೋ ಖೋ ರಾಷ್ಟ್ರ ಪ್ರಶಸ್ತಿ ವಿಜೇತ ಮಹಿಳಾ ಕ್ರೀಡಾಪಟು ಎಸ್. ಜಾನಕಿ ಸುರೇಶ್ ಕ್ರೀಡಾಕೂಟ ಉದ್ಘಾಟಿಸುವರು ಎಂದರು. 
    ೨೫ರಂದು ಸಂಜೆ ೬ ಗಂಟೆಗೆ ನಗರಸಭೆ ಆವರಣದ ವೇದಿಕೆಯಲ್ಲಿ ಅಪರಂಜಿ ಅಭಿನಯ ಶಾಲೆವತಿಯಿಂದ ನಾಟಕ ಪ್ರದರ್ಶನ ಮತ್ತು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆಯಿಂದ ದಸರಾ ಕವಿಗೋಷ್ಠಿ ಹಾಗು ಕಥೆ ಗೋಷ್ಠಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ನಗರಸಭೆ ಹಿರಿಯ ಸದಸ್ಯ ಬಿ.ಟಿ ನಾಗರಾಜ್ ಉದ್ಘಾಟಿಸುವರು. ೨೬ರಂದು ಬೆಳಿಗ್ಗೆ ೧೦ ಗಂಟೆಗೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ಕುಸ್ತಿ ಪಂದ್ಯಾವಳಿ ನಡೆಯಲಿದ್ದು, ಹಿರಿಯ ಕುಸ್ತಿಪಟು ಎಚ್. ವಾಸುದೇವ್ ಉದ್ಘಾಟಿಸುವರು. ಸಂಜೆ ೬ ಗಂಟೆಗೆ ನಗರಸಭೆ ಆವರಣದ ವೇದಿಕೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ನಗರಸಭೆ ಹಿರಿಯ ಸದಸ್ಯ ಟಿಪ್ಪುಸುಲ್ತಾನ್ ಉದ್ಘಾಟಿಸುವರು ಎಂದರು. 
    ೨೭ರಂದು ಕನಕಮಂಟಪ ಮೈದಾನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಕಬಡ್ಡಿ ಪಂದ್ಯಾವಳಿ ನಡೆಯಲಿದ್ದು, ಕಬಡ್ಡಿ ಕೇಸರಿ ಪ್ರಶಸ್ತಿ ವಿಜೇತ ಎಚ್.ಎಲ್ ರಂಗನಾಥ್ ಉದ್ಘಾಟಿಸುವರು. ೨೮ರಂದು ಬೆಳಿಗ್ಗೆ ೯.೩೦ಕ್ಕೆ ನ್ಯೂಟೌನ್ ಸರ್.ಎಂ.ವಿ ಒಳಾಂಗಣ ಕ್ರೀಡಾಂಗಣದಲ್ಲಿ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ಇದೆ ಮೊದಲ ಬಾರಿಗೆ ಏರ್ಪಡಿಸಲಾಗಿದ್ದು, ವಿಐಎಸ್‌ಎಲ್ ನಿವೃತ್ತ ಕಾರ್ಮಿಕ ರಾಬರ್ಟ್ ಡಿಸೋಜ ಉದ್ಘಾಟಿಸುವರು. ಸಂಜೆ ೬ ಗಂಟೆಗೆ ಕನಕ ಮಂಟಪ ಮೈದಾನದಲ್ಲಿ ನಗರದ ವಿವಿಧ ಇಲಾಖೆಗಳು, ಸಂಘ-ಸಂಸ್ಥೆಗಳು ಮತ್ತು ಮಹಿಳಾ ಸ್ವ-ಸಹಾಯ ಸಂಘಗಳ ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು. 
    ೨೯ರಂದು ಸಂಜೆ ೬ ಗಂಟೆಗೆ ಕನಕಮಂಟಪ ಮೈದಾನದಲ್ಲಿ ಚರಣ್ ಸಂಗೀತ ಮೆಲೋಡಿಯಿಂದ ಆರ್ಕೇಸ್ಟ್ರಾ ನಡೆಯಲಿದ್ದು, ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸುವರು. ೩೦ರಂದು ಸಂಜೆ ೬ ಗಂಟೆಗೆ ಕನಕಮಂಟಪ ಮೈದಾನದಲ್ಲಿ ಕಾಮಿಡಿ ಕಿಲಾಡಿಗಳು ಹಾಗು ಗಾಯಕರಿಂದ ನೃತ್ಯ/ಸಂಗೀತ/ಕಾಮಿಡಿ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸುವರು ಎಂದರು. 
ಉಳಿದಂತೆ ಅ.೧ರಂದು ಬೆಳಿಗ್ಗೆ ೧೦ ಗಂಟೆಗೆ ಆಯುಧ ಪೂಜೆ ಹಾಗು ೨ರಂದು ಮಧ್ಯಾಹ್ನ ೩ ಗಂಟೆಗೆ ದಸರಾ ಮೆರವಣಿಗೆ ಲೋಯರ್ ಹುತ್ತಾ ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಿಂದ ನಡೆಯಲಿದ್ದು, ಸಂಜೆ ೬ ಗಂಟೆಗೆ ಕನಕಮಂಟಪ ಮೈದಾನದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ಜರುಗಲಿದೆ. ತಾಲೂಕು ದಂಡಾಧಿಕಾರಿ ತಹಸೀಲ್ದಾರ್ ಪರುಸಪ್ಪ ಕುರುಬರ ಬನ್ನಿ ಮುಡಿಯುವರು ಎಂದರು.
    ದಸರಾ ವಿವಿಧ ಸಮಿತಿಗಳ ಅಧ್ಯಕ್ಷರಾದ ಕೆ. ಸುದೀಪ್ ಕುಮಾರ್, ಕೆ. ಉದಯ್ ಕುಮಾರ್, ವಿ. ಕದಿರೇಶ್, ಚನ್ನಪ್ಪ, ಬಿ.ಎಂ ಮಂಜುನಾಥ್, ಬಿ.ಪಿ ಸರ್ವಮಂಗಳ ಭೈರಪ್ಪ, ಪೌರಾಯುಕ್ತ ಕೆ.ಎನ್ ಹೇಮಂತ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.