ಶನಿವಾರ, ಅಕ್ಟೋಬರ್ 11, 2025

ಭಾರಿ ಗಾತ್ರದ ಮಳೆಯಿಂದ ಭತ್ತದ ಬೆಳೆಗೆ ಹಾನಿ

ಭದ್ರಾವತಿಯಲ್ಲಿ ಪ್ರಗತಿಪರ ರೈತ ಭಂಡಾರಹಳ್ಳಿ ಶ್ರೀಧರ್‌ರವರು ಬೆಳೆದಿರುವ ಭತ್ತದ ಬೆಳೆ ಭಾರಿ ಗಾತ್ರದ ಮಳೆಯಿಂದಾಗಿ ಹಾನಿಗೊಳಗಾಗಿದೆ.  
    ಭದ್ರಾವತಿ : ಕಳೆದ ೨ ದಿನಗಳ ಹಿಂದೆ ಸುರಿದ ಭಾರಿ ಗಾತ್ರದ ಮಳೆಯಿಂದಾಗಿ ಕ್ಷೇತ್ರದಲ್ಲಿ ಭತ್ತದ ಬೆಳೆಗೆ ಹಾನಿಯಾಗಿದ್ದು,  ಪ್ರಗತಿಪರ ರೈತ ಭಂಡಾರಹಳ್ಳಿ ಶ್ರೀಧರ್ ಆತಂಕ ವ್ಯಕ್ತಪಡಿಸಿದ್ದಾರೆ. 
    ಕ್ಷೇತ್ರದ ಬಹುತೇಕ ವ್ಯಾಪ್ತಿಯಲ್ಲಿ ರೈತರು ಭತ್ತದ ಬೆಳೆದಿದ್ದು, ಭಾರಿ ಗಾತ್ರದ ಮಳೆಯಿಂದಾಗಿ ಹೂವಿನ ಹಂತದಲ್ಲಿರುವ ಭತ್ತದ ಬೆಳೆಗೆ ಹಾನಿಯಾಗಿದೆ. ಮುಂದಿನ ಒಂದೆಡೆರಡು ತಿಂಗಳಲ್ಲಿ ಬೀಜ ಕಟ್ಟುವ ಹಂತಕ್ಕೆ ಬೆಳೆ ತಲುಪಲಿದೆ. ಈ ಹಂತದಲ್ಲಿ ಬೀಜ ಸರಿಯಾಗಿ ಬೆಳವಣಿಗೆಯಾಗದೆ ಇಳುವಳಿ ಕುಸಿತವಾಗಲಿದೆ. ಇದರಿಂದ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಒಳಗಾಗುವಂತಾಗಿದೆ ಎಂದು ಶ್ರೀಧರ್ ಆತಂಕ ವ್ಯಕ್ತಪಡಿಸಿದ್ದಾರೆ. 
    ನಾಟಿ ವಿಳಂಬವಾಗಿ ನಡೆದಿರುವ ಬೆಳೆಗಳಿಗೆ ಯಾವುದೇ ಹಾನಿ ಉಂಟಾಗುವುದಿಲ್ಲ. ಸಂಕಷ್ಟಕ್ಕೆ ಒಳಗಾಗುವ ರೈತರ ನೆರವಿಗೆ ಸರ್ಕಾರ ಮುಂದಾಗಬೇಕೆಂದು ಕೋರಿದ್ದಾರೆ.

ಶ್ರೀ ಬೀರೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ೨ನೇ ವರ್ಷದ ವಾರ್ಷಿಕೋತ್ಸವ

ಭದ್ರಾವತಿ ಹೊಸಮನೆ ಮುಖ್ಯರಸ್ತೆ, ಸಂತೆ ಮೈದಾನದ ಸಮೀಪದಲ್ಲಿರುವ ಶ್ರೀ ಬೀರೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ೨ನೇ ವರ್ಷದ ವಾರ್ಷಿಕೋತ್ಸವ ಯಶಸ್ವಿಯಾಗಿ ನಡೆಯಿತು. 
    ಭದ್ರಾವತಿ : ನಗರದ ಹೊಸಮನೆ ಮುಖ್ಯರಸ್ತೆ, ಸಂತೆ ಮೈದಾನದ ಸಮೀಪದಲ್ಲಿರುವ ಶ್ರೀ ಬೀರೇಶ್ವರ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ೨ನೇ ವರ್ಷದ ವಾರ್ಷಿಕೋತ್ಸವ ಯಶಸ್ವಿಯಾಗಿ ನಡೆಯಿತು. 
    ಕಳೆದ ೨ ವರ್ಷದಿಂದ ನಗರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸೊಸೈಟಿ ಮುಖ್ಯ ಶಾಖೆ ಬೆಳಗಾವಿ, ಚಿಕ್ಕೋಡಿ ಯಕ್ಸಾಂಬದಲ್ಲಿದ್ದು, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿ ಒಟ್ಟು ೨೨೮ಕ್ಕೂ ಹೆಚ್ಚು ಶಾಖೆಗಳನ್ನು ಒಳಗೊಂಡಿದೆ. ಹಲವು ವಿಭಿನ್ನ ಸೇವೆಗಳೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದೆ. 
  ಸೊಸೈಟಿ ಉಪಾಧ್ಯಕ್ಷ ಎಸ್. ರಾಜಶೇಖರ ಉಪ್ಪಾರ, ನಿರ್ದೇಶಕರಾದ ಬಸವಂತಪ್ಪ ಹಾಗೂ ಹರೀಶ್‌ಕುಮಾರ್, ವ್ಯವಸ್ಥಾಪಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ಶಿವಬಸಪ್ಪರಿಗೆ ಸನ್ಮಾನ

ಭದ್ರಾವತಿ ನ್ಯೂಟೌನ್ ಸಿದ್ಧಾರ್ಥ ಅಂಧರ ಕೇಂದ್ರದ ಅಧ್ಯಕ್ಷ, ನಿವೃತ್ತ ಪ್ರಾಚಾರ್ಯ ಶಿವಬಸಪ್ಪರವರ ವಿಕಲಚೇತನರ ಸೇವೆಯನ್ನು ಗುರುತಿಸಿ ಶಿವಮೊಗ್ಗ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜರುಗಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ : ನಗರದ ನ್ಯೂಟೌನ್ ಸಿದ್ಧಾರ್ಥ ಅಂಧರ ಕೇಂದ್ರದ ಅಧ್ಯಕ್ಷ, ನಿವೃತ್ತ ಪ್ರಾಚಾರ್ಯ ಶಿವಬಸಪ್ಪರವರ ವಿಕಲಚೇತನರ ಸೇವೆಯನ್ನು ಗುರುತಿಸಿ ಶಿವಮೊಗ್ಗ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜರುಗಿದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಶಿವಬಸಪ್ಪರವರು ಕಳೆದ ಹಲವು ದಶಕಗಳಿಂದ ವಿಕಲಚೇತನರ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಅಲ್ಲದೆ ದಲಿತ ಸಂಘಟನೆಗಳ ನೇತೃತ್ವವಹಿಸಿ ಹಲವಾರು ಹೋರಾಟಗಳನ್ನು ಮುನ್ನಡೆಸಿದ್ದಾರೆ. ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಸಾಕಷ್ಟು ಕೊಡುಗೆ ನೀಡಿದ್ದು, ಉಪನ್ಯಾಸಕರಾಗಿ, ಪ್ರಾಚಾರ್ಯರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದಾರೆ. 
    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಸಿ.ಎಸ್ ಚಂದ್ರ ಭೂಪಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಉಪನಿರ್ದೇಶಕಿ ಭಾರತಿ ಬಣಕಾರ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಉಪನಿರ್ದೇಶಕಿ ಸುವರ್ಣ ವಿ. ನಾಯ್ಕ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಗಾಯನ ಸ್ಪರ್ಧೆಯಲ್ಲಿ ಜಂಬೂಸ್ವಾಮಿಗೆ ಪ್ರಥಮ ಬಹುಮಾನ

ಜಂಬೂಸ್ವಾಮಿ 
    ಭದ್ರಾವತಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಹಾಗು ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಹಿರಿಯ ನಾಗರಿಕರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಗರದ ಹಿರಿಯ ನಾಗರಿಕ ಜಂಬೂಸ್ವಾಮಿ ಸಾಂಸ್ಕೃತಿಕ ಸ್ಪರ್ಧೆಯ ಗಾಯನ ವಿಭಾಗದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ. 
    ಮೈಸೂರು ಕಾಗದ ಕಾರ್ಖಾನೆ ನಿವೃತ್ತ ನೌಕರ, ಜಂಜೂಸ್ವಾಮಿಯವರು ದೇಶಭಕ್ತಿ ಗೀತೆ, ಭಾವಗೀತೆ ಮತ್ತು ಜಾನಪದ ಗೀತೆ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಗಾಯಕರಾಗಿ ತೊಡಗಿಸಿಕೊಂಡಿದ್ದಾರೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ಹಲವಾರು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶಿವಮೊಗ್ಗ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದುಕೊಂಡು ಕೀರ್ತಿ ತಂದಿದ್ದಾರೆ. ಶಿವಮೊಗ್ಗದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಇವರಿಗೆ ಪ್ರಶಸ್ತಿನೀಡಿ ಗೌರವಿಸಲಾಗಿದೆ.