ಮಂಗಳವಾರ, ನವೆಂಬರ್ 4, 2025

ಅನಧಿಕೃತವಾಗಿ ನಿರ್ಮಾಣಗೊಂಡಿರುವ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸದಿರಿ

ಮೆಸ್ಕಾಂ ಶಾಖಾ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿ ಆಗ್ರಹ : ಮನವಿ 

ಭದ್ರಾವತಿ ನಗರದ ಜನ್ನಾಪುರ ಫಿಲ್ಟರ್‌ಶೆಡ್‌ನಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸದಿರುವಂತೆ ಆಗ್ರಹಿಸಿ ಮಂಗಳವಾರ ಉಂಬ್ಳೆಬೈಲು ರಸ್ತೆ, ಅಂಡರ್‌ಬ್ರಿಡ್ಜ್ ಸಮೀಪದಲ್ಲಿರುವ ಮೆಸ್ಕಾಂ ಶಾಖಾ ಕಛೇರಿ ಆವರಣದಲ್ಲಿ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬೀರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. 
    ಭದ್ರಾವತಿ: ನಗರದ ಜನ್ನಾಪುರ ಫಿಲ್ಟರ್‌ಶೆಡ್‌ನಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸದಿರುವಂತೆ ಆಗ್ರಹಿಸಿ ಮಂಗಳವಾರ ಉಂಬ್ಳೆಬೈಲು ರಸ್ತೆ, ಅಂಡರ್‌ಬ್ರಿಡ್ಜ್ ಸಮೀಪದಲ್ಲಿರುವ ಮೆಸ್ಕಾಂ ಶಾಖಾ ಕಛೇರಿ ಆವರಣದಲ್ಲಿ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣಾ ಸಮಿತಿಯಿಂದ ಪ್ರತಿಭಟನೆ ನಡೆಸಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಬೀರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. 
    ಫಿಲ್ಟರ್‌ಶೆಡ್ ನಿವಾಸಿ, ಸಾಮಾಜಿಕ ಹೋರಾಟ ಶಶಿಕುಮಾರ್ ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಪ್ರಮುಖರು ಮಾತನಾಡಿ, ಕೆಲವು ಪ್ರಭಾವಿಗಳು ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಗೆ ಸೇರಿದ ಜಾಗದಲ್ಲಿ ಅಂತರಘಟ್ಟಮ್ಮ ದೇವಸ್ಥಾನದ ಬಳಿ ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ್ದು, ಇದಕ್ಕೆ ಯಾವುದೇ ದಾಖಲಾತಿಗಳು ಇರುವುದಿಲ್ಲ. ಈ ಕಟ್ಟಡವನ್ನು ಕಾರ್ಖಾನೆ ಆಡಳಿತ ಮಂತಳಿ ತನ್ನ ಅಧೀನಕ್ಕೆ ತೆಗೆದುಕೊಂಡು ಕಟ್ಟಡ ನೆಲಸಮಗೊಳಿಸಬೇಕೆಂದ ಅಥವಾ ಕಟ್ಟಡವನ್ನು ಸಾರ್ವಜನಿಕರಿಗೆ ರಿಯಾಯಿತಿ ದರದಲ್ಲಿ ನೀಡಬೇಕೆಂದು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಅನಧಿಕೃತ ಕಟ್ಟಡಕ್ಕೆ ಯಾವುದೇ ಕಾರಣಕ್ಕೂ ವಿದ್ಯುತ್ ಸಂಪರ್ಕ ಕಲ್ಪಿಸಬಾರದೆಂದು ಆಗ್ರಹಿಸಿದರು. 
    ಒಂದು ವೇಳೆ ನಮ್ಮ ಹೋರಾಟಕ್ಕೆ ಬೆಲೆಕೊಡದೆ ಅನಧಿಕೃತವಾಗಿ ನಿರ್ಮಾಣಗೊಂಡಿರುವ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಲ್ಲಿ ತಮ್ಮ ಕಛೇರಿ ಮುಂಭಾಗ ಧರಣಿ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಸಿದರು. 
    ಪ್ರತಿಭಟನೆಯಲ್ಲಿ ಮಹಾದೇವಿ, ಇಂದ್ರಮ್ಮ, ಪ್ರಕಾಶ್, ದಿವ್ಯಶ್ರೀ ಮತ್ತು ವೈ. ಶಶಿಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ವಿವಿಧ ವೃತ್ತಿಯ ಕಾರ್ಮಿಕರಿಗೆ ಸಲಕರಣೆಗಳ ಕಿಟ್ ವಿತರಣೆ

ಭದ್ರಾವತಿ ಕ್ಷೇತ್ರದಲ್ಲಿ ಕಾರ್ಮಿಕರು ಹೆಚ್ಚಾಗಿದ್ದು, ಅದರಲ್ಲೂ ಅಸಂಘಟಿತ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದೆ. ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರಿಗೆ ಅಗತ್ಯವಿರುವ ಸಲಕರಣೆಗಳ ಸುಮಾರು ೪೦೦ ಕಿಟ್‌ಗಳನ್ನು ಕಾರ್ಮಿಕ ಇಲಾಖೆಯಿಂದ ಮಂಗಳವಾರ ವಿತರಿಸಲಾಯಿತು. 
    ಭದ್ರಾವತಿ : ಕ್ಷೇತ್ರದಲ್ಲಿ ಕಾರ್ಮಿಕರು ಹೆಚ್ಚಾಗಿದ್ದು, ಅದರಲ್ಲೂ ಅಸಂಘಟಿತ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದೆ. ಕಾರ್ಮಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅವರಿಗೆ ಅಗತ್ಯವಿರುವ ಸಲಕರಣೆಗಳ ಸುಮಾರು ೪೦೦ ಕಿಟ್‌ಗಳನ್ನು ಕಾರ್ಮಿಕ ಇಲಾಖೆಯಿಂದ ಮಂಗಳವಾರ ವಿತರಿಸಲಾಯಿತು. 
    ವಿದ್ಯುತ್ ಕೆಲಸಗಾರರು, ಮರ ಕೆತ್ತನೆ ಕೆಲಸಗಾರರು ಹಾಗು ಮೇಷನ್ ಸೇರಿದಂತೆ ಇನ್ನಿತರ ವೃತ್ತಿಗಳ ಕಾರ್ಮಿಕರಿಗೆ ಅಗತ್ಯವಿರುವ ಕಿಟ್‌ಗಳನ್ನು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರು ತಮ್ಮ ಗೃಹ ಕಛೇರಿಯಲ್ಲಿ ವಿತರಿಸಿ ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು. 
    ಪ್ರಮುಖರಾದ ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಸ್. ಕುಮಾರ್, ಉದ್ಯಮಿ ಬಿ.ಕೆ ಜಗನ್ನಾಥ್, ಕಾರ್ಮಿಕ ನಿರೀಕ್ಷಕ ರಕ್ಷಿತ್ ಹಾಗು ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು. 

ಕುಮರಿ ನಾರಾಯಣಪುರ ನಾಗರಾಜಣ್ಣ ನಿಧನ


ಕುಮರಿ ನಾರಾಯಣಪುರ ನಾಗರಾಜಣ್ಣ 
    ಭದ್ರಾವತಿ :  ತಾಲೂಕಿನ ಕುಮರಿ ನಾರಾಯಣಪುರ ಗ್ರಾಮದ ನಿವಾಸಿ, ಎಚ್.ಎಲ್.ಜಿ ಕುಟುಂಬದ ಸದಸ್ಯರಲ್ಲಿ ಒಬ್ಬರಾಗಿದ್ದ ನಾಗರಾಜಣ್ಣ ಮಂಗಳವಾರ ಬೆಳಿಗ್ಗೆ ನಿಧನ ಹೊಂದಿದರು. 
    ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರು ಇದ್ದಾರೆ. ನಾಗರಾಜಣ್ಣ ತಾಲೂಕು ಪಂಚಾಯಿತಿ ಮಾಜಿ ಸದಸ್ಯ, ಜೆಡಿಎಸ್ ಮುಖಂಡ ಧರ್ಮೇಗೌಡರವರ ಸಹೋದರಿಯ ಪತಿಯಾಗಿದ್ದಾರೆ. ಇವರ ಅಂತ್ಯಕ್ರಿಯೆ ಬುಧವಾರ ಬೆಳಿಗ್ಗೆ ಗ್ರಾಮದಲ್ಲಿ ನಡೆಯಲಿದ್ದು, ಇವರ ನಿಧನಕ್ಕೆ ಧರ್ಮೇಗೌಡ ಸೇರಿದಂತೆ ಜೆಡಿಎಸ್ ಪಕ್ಷದ ಮುಖಂಡರು, ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.