ಶುಕ್ರವಾರ, ನವೆಂಬರ್ 14, 2025

ಗಮನ ಸೆಳೆದ ಅಂಗನವಾಡಿ ಕೇಂದ್ರಗಳ ಮಕ್ಕಳ ದಿನಾಚರಣೆ

ವೇಷ-ಭೂಷಣ ಪ್ರದರ್ಶನ, ಗರ್ಭಿಣಿ ಮಹಿಳೆಯರಿಗೆ ಸೀಮಂತ

ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಗದನಗರ ೧, ೨, ೩ ಮತ್ತು ೪ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒಗ್ಗೂಡಿ ಶುಕ್ರವಾರ ಮಕ್ಕಳ ದಿನಾಚರಣೆ ವಿಶಿಷ್ಟವಾಗಿ ಆಚರಿಸಲಾಯಿತು. 
    ಭದ್ರಾವತಿ : ನಗರಸಭೆ ವ್ಯಾಪ್ತಿಯ ಕಾಗದನಗರ ೧, ೨, ೩ ಮತ್ತು ೪ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒಗ್ಗೂಡಿ ಶುಕ್ರವಾರ ಮಕ್ಕಳ ದಿನಾಚರಣೆ ವಿಶಿಷ್ಟವಾಗಿ ಆಚರಿಸುವ ಮೂಲಕ ಗಮನ ಸೆಳೆದರು. 
    ಕಾರ್ಯಕ್ರಮ ಉದ್ಘಾಟಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಈರಪ್ಪ ಮಾತನಾಡಿ, ಅಂಗನವಾಡಿ ಕೇಂದ್ರಗಳನ್ನು ಮತ್ತಷ್ಟು ಉನ್ನತ್ತೀಕರಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಬಹುಮುಖ್ಯವಾಗಿ ಮುಂದಿನ ವರ್ಷದಿಂದ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಾಲೆ(ಎಲ್‌ಕೆಜಿ ಮತ್ತು ಯುಕೆಜಿ) ಆರಂಭಿಸಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಬದಲು ಇಲ್ಲಿಯೇ ದಾಖಲಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕೆಂದರು. 
    ಸರ್ಕಾರ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇವುಗಳಲ್ಲಿ ಗೃಹಲಕ್ಷ್ಮಿ ಯೋಜನೆ ಬಹುಮುಖ್ಯವಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದರು. ಮಕ್ಕಳು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಸೇರಿದಂತೆ ಮಹಾನ್ ಆದರ್ಶ ವ್ಯಕ್ತಿಗಳ ರೀತಿ ಭವಿಷ್ಯದ ನಾಯಕರಾಗಿ ರೂಪುಗೊಳ್ಳಬೇಕೆಂದು ಕರೆ ನೀಡಿದರು.
    ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗೆ ವೇಷ-ಭೂಷಣ ಪ್ರದರ್ಶನ ಆಯೋಜಿಸಲಾಗಿತ್ತು. ಕಿತ್ತೂರು ರಾಣಿ ಚನ್ನಮ್ಮ, ಒನಕ್ಕೆ ಓಬವ್ವ, ಶ್ರೀ ರಾಘವೇಂದ್ರ ಸ್ವಾಮಿ, ಸಂಗೊಳ್ಳಿ ರಾಯಣ್ಣ, ಶಕುಂತಲ, ಸೈನಿಕ, ಪೊಲೀಸ್, ಚಿಟ್ಟೆ, ರೈತ ಸೇರಿದಂತೆ ಇನ್ನಿತರ ವೇಷಭೂಷಣಗಳೊಂದಿಗೆ ಮಕ್ಕಳು ಕಂಗೊಳಿಸಿದರು. ಅಲ್ಲದೆ ವಿಶೇಷವಾಗಿ ಗರ್ಭಿಣಿ ಮಹಿಳೆಯರಿಗೆ ಸೀಮಂತ ನೆರವೇರಿಸುವ ಮೂಲಕ ಗಮನ ಸೆಳೆಯಲಾಯಿತು. 
    ನಗರಸಭೆ ಸದಸ್ಯೆ ಜಯಶೀಲ ಸುರೇಶ್, ಆಶಾ ಕಾರ್ಯಕರ್ತೆಯರಾದ ನೀಲಾಂಬಿಕ, ಮಂಜುಳಾ, ಅಂಗನವಾಡಿ ಕಾರ್ಯಕರ್ತೆಯರಾದ ರಶ್ಮಿ, ಎಸ್. ಮೀನಾಕ್ಷಿ, ಬಿ.ಆರ್ ಲಲಿತ, ಪುಷ್ಪ, ಸಹಾಯಕಿಯರಾದ ರೂಪ, ಸುಧಾ ಮತ್ತು ಸವಿತಾ ಹಾಗು ಸುತ್ತಮುತ್ತಲ ವ್ಯಾಪ್ತಿ ಗರ್ಭಿಣಿ ಮಹಿಳೆಯರು, ಮಕ್ಕಳು ಭಾಗವಹಿಸಿದ್ದರು. 
 

ಭದ್ರಾವತಿ ನಗರಸಭೆ ವ್ಯಾಪ್ತಿಯ ಕಾಗದನಗರ ೧, ೨, ೩ ಮತ್ತು ೪ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಒಗ್ಗೂಡಿ ಶುಕ್ರವಾರ ಮಕ್ಕಳ ದಿನಾಚರಣೆ ವಿಶಿಷ್ಟವಾಗಿ ಆಚರಿಸಲಾಯಿತು. ಗರ್ಭಿಣಿ ಮಹಿಳೆಯರಿಗೆ ಸೀಮಂತ ನೆರವೇರಿಸಲಾಯಿತು. 

ಪೋಷಕರು ಮಕ್ಕಳ ಮೇಲೆ ಸಂಪೂರ್ಣ ಹಿಡಿದ ಹೊಂದಿರಲಿ, ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಕೈ ಜೋಡಿಸಲಿ

ಪೋಷಕರ-ಶಿಕ್ಷಕರ ಮಹಾಸಭೆ ಹಾಗು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಕಣ್ಣಪ್ಪ 

ಭದ್ರಾವತಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳಿಂದ ಶುಕ್ರವಾರ ಆಯೋಜಿಸಲಾಗಿದ್ದಪೋಷಕರ-ಶಿಕ್ಷಕರ ಮಹಾಸಭೆ ಹಾಗು ಮಕ್ಕಳ ದಿನಾಚರಣೆ ಕಾರ್ಯಕ್ರಮ ಹಿರಿಯ ವಿದ್ಯಾರ್ಥಿ, ಚಲನಚಿತ್ರ  ನಿರ್ಮಾಪಕ, ನಿರ್ದೇಶಕ ಎಸ್. ಗೋವಿಂದ ಉದ್ಘಾಟಿಸಿದರು. 
    ಭದ್ರಾವತಿ: ಪೋಷಕರು ಮಕ್ಕಳನ್ನು ಕೇವಲ ಶಾಲೆಗಳಿಗೆ ಕಳುಹಿಸಿದರೆ ಸಾಲದು ಮಕ್ಕಳ ಮೇಲೆ ಸಂಪೂರ್ಣ ಹಿಡಿದ ಹೊಂದಿರಬೇಕು. ಮಕ್ಕಳ ಶಿಕ್ಷಣದ ಜೊತೆಗೆ ಸರ್ಕಾರಿ ಶಾಲೆಗಳ ಬೆಳವಣಿಗೆ ಪೋಷಕರು ಸಹ ಕೈಜೋಡಿಸಬೇಕೆಂದು ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಶೈಕ್ಷಣಿಕ ಸಲಹೆಗಾರರು, ಹಿರಿಯ ಪತ್ರಕರ್ತರಾದ ಕಣ್ಣಪ್ಪ ಮನವಿ ಮಾಡಿದರು. 
    ಶುಕ್ರವಾರ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಿಂದ ಹಮ್ಮಿಕೊಳ್ಳಲಾಗಿದ್ದ ಪೋಷಕರ-ಶಿಕ್ಷಕರ ಮಹಾಸಭೆ ಹಾಗು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
    ಉನ್ನತ ಸೌಲಭ್ಯಗಳು ಇಲ್ಲದೆ ಇರುವ ಸಂದರ್ಭದಲ್ಲಿ ಶಾಲೆಗಳನ್ನು ನಿರ್ಮಿಸಲು ನಮ್ಮ ಪೂರ್ವಿಕರ ಶ್ರಮ ಹೆಚ್ಚಿನದ್ದಾಗಿದೆ. ಇಂತಹ ಶಾಲೆಗಳು ಇದೀಗ ಕಣ್ಮರೆಯಾಗುತ್ತಿವೆ. ಅದರಲ್ಲೂ ಸರ್ಕಾರಿ ಶಾಲೆ ಉಳಿಸಿಕೊಳ್ಳುವುದು ಬಹಳ ಕಷ್ಟದ ಕೆಲಸವಾಗಿದೆ. ಹಿರಿಯ ವಿದ್ಯಾರ್ಥಿಗಳು ವಿದ್ಯೆ ಕಲಿತ ಸ್ಥಳದ ಕಟ್ಟಡ ಪ್ರಸ್ತುತ ಶಿಥಿಲಗೊಂಡಿದೆ. ತರಗತಿಗಳನ್ನು ಹೊಸ ಕಟ್ಟಡಕ್ಕೆ ವರ್ಗಾಹಿಸಲಾಗಿದೆ. ಆದರೆ ಈ ಕಟ್ಟಡ ಉಳಿಯಬೇಕು. ಭವಿಷ್ಯದಲ್ಲಿ ಈ ರೀತಿಯ ಕಟ್ಟಡ ನಿರ್ಮಿಸಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಶಾಸಕರು ಸೇರಿದಂತೆ ಚುನಾಯಿತ ಪ್ರತಿನಿಧಿಗಳು, ದಾನಿಗಳು, ಹಳೇಯ ವಿದ್ಯಾರ್ಥಿಗಳು ಕಟ್ಟಡ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಗಮನ ಹರಿಸಬೇಕೆಂದರು.  
    ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಹುಟ್ಟುಹಬ್ಬ ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಮಕ್ಕಳನ್ನು ಪ್ರತಿಯೊಬ್ಬರು ಪ್ರೀತಿಸಬೇಕು. ಅವರನ್ನು ಭವಿಷ್ಯದ ಪ್ರಜೆಗಳನ್ನಾಗಿ ರೂಪಿಸುವುದು ಶಿಕ್ಷಕರು, ಪೋಷಕರು ಹಾಗು ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು. 


ಭದ್ರಾವತಿ ನಗರದ ಮಹಾತ್ಮಗಾಂಧಿ ರಸ್ತೆ(ಟಿ.ಕೆ ರಸ್ತೆ)ಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿಗಳಿಂದ ಶುಕ್ರವಾರ ಆಯೋಜಿಸಲಾಗಿದ್ದಪೋಷಕರ-ಶಿಕ್ಷಕರ ಮಹಾಸಭೆ ಹಾಗು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಶೈಕ್ಷಣಿಕ ಸಲಹೆಗಾರರು, ಹಿರಿಯ ಪತ್ರಕರ್ತರಾದ ಕಣ್ಣಪ್ಪರನ್ನು ಸನ್ಮಾನಿಸಿ ಗೌರವಿಸಲಾಯಿತು.
    ಹಳೇಯ ವಿದ್ಯಾರ್ಥಿಗಳಾದ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಎಸ್. ಗೋವಿಂದ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಿ. ರಮಾಕಾಂತ್, ವಿಐಎಸ್‌ಎಲ್ ನಿವೃತ್ತ ನೌಕರ ಸುರೇಶ್ ವರ್ಮಾ, ಮೋಹನ್ ಸೇರಿದಂತೆ ಇನ್ನಿತರು ಮಾತನಾಡಿ, ಸರ್ಕಾರಿ ಶಾಲೆಗಳ ಬಗ್ಗೆ ತಾತ್ಸರ ಬೇಡ. ಈ ಶಾಲೆಯಲ್ಲಿ ಓದಿರುವ ಬಹಳಷ್ಟು ವಿದ್ಯಾರ್ಥಿಗಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಸರ್ಕಾರ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳು ಮಿತಿ ಮೀರಿ ಮೊಬೈಲ್ ಬಳಕೆಯಿಂದ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಹರಿಸುತ್ತಿಲ್ಲ. ಅಲ್ಲದೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನಿಯ ಸಂಗತಿಯಾಗಿದೆ. ಇವುಗಳಿಂದ ದೂರವಿದ್ದು, ಭವಿಷ್ಯದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುವ ನಿಟ್ಟಿನಲ್ಲಿ ಅಗತ್ಯವಿರುವ ವಿದ್ಯೆ, ಜ್ಞಾನ, ಉತ್ತಮ ಸಂಸ್ಕಾರಕ್ಕೆ ಹೆಚ್ಚಿನ ಗಮನ ಹರಿಸಬೇಕು. ಈ ನಿಟ್ಟಿನಲ್ಲಿ ಪೋಷಕರ ಪಾತ್ರ ಹೆಚ್ಚಿನದ್ದಾಗಿದೆ ಎಂದರು. 
    ವೇದಿಕೆಯಲ್ಲಿ ನಿವೃತ್ತ ಶಿಕ್ಷಕ ಕಾಂತಪ್ಪ, ಹಳೇಯ ವಿದ್ಯಾರ್ಥಿಗಳಾದ ಹಳೇನಗರ ಕುಂಬಾರರ ಬೀದಿ ನಿವಾಸಿ ಬಸವರಾಜ್, ಮುನಿರಾಜ್, ಎನ್. ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಮಿಳು ಸಂಘಮ್ ಮಾಜಿ ಅಧ್ಯಕ್ಷ ರವಿಕುಮಾರ್ ಅಧ್ಯಕ್ಷತೆವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕರು ಸೇರಿದಂತೆ ಶಿಕ್ಷಕ ವೃಂದದವರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.