Friday, May 29, 2020

ಮೇ.೨೯ ‘ಆಶಾ ಸಂರಕ್ಷಣಾ ದಿನ’ವಾಗಿ ಘೋಷಿಸಿ : ಸರ್ಕಾರಕ್ಕೆ ಮನವಿ

ರಾಜ್ಯ ಸರ್ಕಾರ ಮೇ.೨೯ ‘ಆಶಾ ಸಂರಕ್ಷಣಾ ದಿನ’ವೆಂದು ಘೋಷಣೆ ಮಾಡುವ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭದ್ರಾವತಿಯಲ್ಲಿ ಶುಕ್ರವಾರ ಆಶಾ ಕಾರ್ಯಕರ್ತೆಯರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. 
ಭದ್ರಾವತಿ, ಮೇ. ೨೯: ರಾಜ್ಯ ಸರ್ಕಾರ ಮೇ.೨೯ ‘ಆಶಾ ಸಂರಕ್ಷಣಾ ದಿನ’ವೆಂದು ಘೋಷಣೆ ಮಾಡುವ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶುಕ್ರವಾರ ಆಶಾ ಕಾರ್ಯಕರ್ತೆಯರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. 
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಿ, ಆಶಾ ಕಾರ್ಯಕರ್ತೆಯರ ಮೇಲೆ ದೈಹಿಕ ಹಲ್ಲೆ ಮಾಡಿದವರನ್ನು ಶಿಕ್ಷಿಸಿ, ಹಲ್ಲೆಗೆ ಒಳಗಾದ ಆಶಾ ಕಾರ್ಯಕರ್ತೆಗೆ ಸೂಕ್ತ ಪರಿಹಾರ ನೀಡುವುದು. ಮಾರ್ಚ್ ತಿಂಗಳಿಂದ ಕೋವಿಡ್-೧೯ರ ಸಂಬಂಧ ಕರ್ತವ್ಯಕ್ಕೆ ನಿಯೋಜನೆಗೊಳಿಸುವ ಅವಧಿವರೆಗೂ ವಿಶೇಷ ಪ್ಯಾಕೇಜ್ ಮಾಸಿಕ ರು. ೧೦,೦೦೦ ನೀಡುವಂತೆ ಒತ್ತಾಯಿಸಿದರು. 
ಅಗತ್ಯವಿರುವಷ್ಟು ಮಾಸ್ಕ್ ಹಾಗೂ ಸ್ಯಾನಿಟೈಸರ್, ಗ್ಲೌಸ್‌ಗಳನ್ನು ನೀಡುವುದು. ಪಾನಮತ್ತರಾಗಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೈದವರಿಗೆ ಉಗ್ರ ಶಿಕ್ಷೆ ನೀಡುವ ಜೊತೆಗೆ ಮದ್ಯ ನಿಷೇಧ ಮಾಡುವುದು. ಕೋವಿಡ್-೧೯ರ ಪರಿಣಾಮ ಸಾವಿಗೀಡಾದ ಆಶಾ ಕಾರ್ಯಕರ್ತೆಯರ ಕುಟುಂಬಕ್ಕೆ ನೀಡುವಂತೆ ೫೦ ಲಕ್ಷ ರು. ವಿಮೆ ಸೌಲಭ್ಯವನ್ನು ಕೋವಿಡ್-೧೯ ಸೇವೆಯಲ್ಲಿರುವಾಗ ಸಾವಿಗೀಡಾದ ಆಶಾ ಕಾರ್ಯಕರ್ತೆಯರ ಕುಟುಂಬಕ್ಕೂ ನೀಡುವಂತೆ ಆಗ್ರಹಿಸಿದರು. 
ಸಂಘದ ಜಿಲ್ಲಾಧ್ಯಕ್ಷೆ ರಾಜೇಶ್ವರಿ, ತಾಲೂಕು ಅಧ್ಯಕ್ಷೆ ಚಂದ್ರಕಲಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

೧೦೦ ಮೀಟರ್ ಅಂತರದ ಒಳಗಿರುವ ಮದ್ಯದಂಗಡಿಗಳ ಪರವಾನಗಿ ರದ್ದುಗೊಳಿಸಿ

ಮುಖ್ಯಮಂತ್ರಿಗಳಿಗೆ ಸಂಯುಕ್ತ ಜನತಾದಳ ವತಿಯಿಂದ ತಹಸೀಲ್ದಾರ್ ಮೂಲಕ ಮನವಿ 

ಕರ್ನಾಟಕ ಅಬಕಾರಿ ಅಧಿನಿಯಮ ಉಲ್ಲಂಘಿಸಿ ಅಕ್ರಮವಾಗಿ ೧೦೦ ಮೀಟರ್ ಅಂತರದ ಒಳಗಿರುವ ಮದ್ಯದಂಗಡಿಗಳ ವಿರುದ್ದ ಸ್ವತಃ ದೂರು ದಾಖಲಿಸಿಕೊಂಡು ಪರವಾನಿಗೆ ನವೀಕರಣಗೊಳ್ಳದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶುಕ್ರವಾರ ಭದ್ರಾವತಿಯಲ್ಲಿ ಮುಖ್ಯಮಂತ್ರಿಗಳಿಗೆ ಸಂಯುಕ್ತ ಜನತಾದಳ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ನೇತೃತ್ವದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಮೇ. ೨೯: ಶಾಲಾ-ಕಾಲೇಜು, ಆಸ್ಪತ್ರೆ, ಧಾರ್ಮಿಕ ಸ್ಥಳಗಳು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರು ವಾಸಿಸುವ ಸ್ಥಳಗಳಲ್ಲಿ ಕರ್ನಾಟಕ ಅಬಕಾರಿ ಅಧಿನಿಯಮ ಉಲ್ಲಂಘಿಸಿ ಅಕ್ರಮವಾಗಿ ೧೦೦ ಮೀಟರ್ ಅಂತರದ ಒಳಗಿರುವ ಮದ್ಯದಂಗಡಿಗಳ ವಿರುದ್ದ ಸ್ವತಃ ದೂರು ದಾಖಲಿಸಿಕೊಂಡು ಪರವಾನಿಗೆ ನವೀಕರಣಗೊಳ್ಳದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಶುಕ್ರವಾರ ಮುಖ್ಯಮಂತ್ರಿಗಳಿಗೆ ಸಂಯುಕ್ತ ಜನತಾದಳ ರಾಜ್ಯ ಯುವ ಘಟಕದ ಉಪಾಧ್ಯಕ್ಷ ಶಶಿಕುಮಾರ್ ಎಸ್ ಗೌಡ ನೇತೃತ್ವದಲ್ಲಿ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಲಾಯಿತು.
ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ದೇಶದಲ್ಲಿ ಮದ್ಯಪಾನ ನಿರ್ಮೂಲನೆ ಬಯಸಿ ರಾಮರಾಜ್ಯದ ಕನಸು ಕಂಡಿದ್ದರು. ಆದರೆ ಅವರ ಕನಸು ಇಂದಿಗೂ ನನಸಾಗಿಲ್ಲ. ಮಹಾತ್ಮಗಾಂಧಿಯವರ ಚಿಂತನೆಗಳನ್ನು ಗಾಳಿಗೆ ತೂರಿ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಇದರಿಂದಾಗಿ ಮದ್ಯ ವ್ಯಸನಿಗಳು ಹಣ, ಆರೋಗ್ಯ ಮತ್ತು ಮಾನ ಕಳೆದುಕೊಳ್ಳುವಂತಾಗಿದೆ. ಅಲ್ಲದೆ ಬಡ ಕುಟುಂಬಗಳು ಬೀದಿಗೆ ಬೀಳುವಂತಾಗಿದೆ ಎಂದು ಅಳಲು ವ್ಯಕ್ತಪಡಿಸಲಾಗಿದೆ.
ದೇಶದಲ್ಲಿ ಈಗಾಗಲೇ ಗುಜರಾತ್, ಬಿಹಾರ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಮದ್ಯಪಾನ ನಿಷೇಧಿಸಲಾಗಿದೆ. ರಾಜ್ಯದಲ್ಲೂ ಸಹ ದಿಟ್ಟ ನಿರ್ಧಾರ ಕೈಗೊಂಡು ಮದ್ಯಪಾನ ನಿಷೇಧ ಜಾರಿಗೆ ತರಲು ಮುಂದಾಗಬೇಕು. ಪ್ರಸ್ತುತ ಹೊಸದಾಗಿ ಸುಮಾರು ೧ ಸಾವಿರಕ್ಕೂ ಹೆಚ್ಚು ಎಂಎಸ್‌ಐಎಲ್ ಮದ್ಯದಂಗಡಿಗಳನ್ನು ತೆರೆಯಲು ಪರವಾನಗಿ ನೀಡಲು ಮುಂದಾಗಿರುವ ವಿಚಾರ ತಿಳಿದುಬಂದಿದೆ. ಯಾವುದೇ ಕಾರಣಕ್ಕೂ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಅವಕಾಶ ನೀಡಬಾರದೆಂದು ಮನವಿ ಮಾಡಲಾಗಿದೆ.
ಪ್ರಸ್ತುತ ರಾಜ್ಯದಲ್ಲಿ ೧೧,೦೩೭ ಮದ್ಯದಂಗಡಿಗಳಿದ್ದು, ಬಹುತೇಕ ಮದ್ಯದಂಗಡಿಗಳು ಶಿಕ್ಷಣ ಸಂಸ್ಥೆ, ಕಾಲೇಜು, ವಿಶ್ವವಿದ್ಯಾನಿಲಯ, ಪೂರ್ವ ಪ್ರಾಥಮಿಕ ಶಾಲೆ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಛೇರಿಗಳು, ಎ ಮತ್ತು ಬಿ ದರ್ಜೆ ಹೊಂದಿರುವ ಕಛೇರಿ ಮತ್ತು ಸಿಟಿ ಕಾರ್ಪೋರೇಷನ್, ಸಿಟಿ ಮುನಿಸಿಪಾಲಿಟಿ ಕಾರ್ಪೋರೇಷನ್, ಟೌನ್ ಮುನ್ಸಿಪಲ್ ಕಾರ್ಪೋರೇಷನ್, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ, ಧಾರ್ಮಿಕ ಸಂಸ್ಥೆಗಳು ಎಂದರೆ ದೇವಸ್ಥಾನ, ಮಠ, ಮಸೀದಿ, ಚರ್ಚ್, ಸಾರ್ವಜನಿಕ ಧಾರ್ಮಿಕ ಮತ್ತು ಧರ್ಮಾರ್ಥ ದತ್ತಿ, ಅಂಗನವಾಡಿ, ೩೦ ಹಾಸಿಗೆಯುಳ್ಳ ನರ್ಸಿಂಗ್ ಹೋಂ ಸೇರಿದಂತೆ ಇನ್ನಿತರ ಸ್ಥಳಗಳ ೧೦೦ ಮೀಟರ್ ಅಂತರದ ಒಳಗಿವೆ. ಅಲ್ಲದೆ ಕೆಲವು ಮದ್ಯದಂಗಡಿಗಳು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ಮದ್ಯದಿಂದ ೨೨೦ ಮೀಟರ್ ಅಂತರದ ಒಳಗಿವೆ. ಮುಖ್ಯಮಂತ್ರಿಗಳು ತಾಲೂಕು ದಂಡಾಧಿಕಾರಿಗಳಿಗೆ ಮತ್ತು ಅಬಕಾರಿ ಉಪ ಆಯುಕ್ತರಿಗೆ ಸ್ವತಃ ದೂರು ದಾಖಲಿಸಿಕೊಂಡು  ಈ ಮದ್ಯದಂಗಡಿಗಳ ಪರವಾನಗಿ ನವೀಕರಣಗೊಳ್ಳದಂತೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಒಂದು ವೇಳೆ ಯಾವುದೇ ಕ್ರಮ ಕೈಗೊಳ್ಳದಿದ್ದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಜೆ. ಪಟೇಲ್‌ರವರ ನೇತೃತ್ವದಲ್ಲಿ ರಾಜ್ಯಾದ್ಯಂತ ಶಾಂತಿಯುತವಾಗಿ ಹಾಗೂ ಲಾಕ್‌ಡೌನ್ ಮುಗಿದ ನಂತರ ನಿರಂತರವಾಗಿ ಹೋರಾಟ ನಡೆಸುವುದಾಗಿ ಎಚ್ಚರಿಸಲಾಗಿದೆ.
ಪಕ್ಷದ ಮುಖಂಡರಾದ ಬಾಬು ದೀಪಕ್ ಕುಮಾರ್, ಹರೀಶ್‌ಗೌಡ, ಮನೋಜ್, ರವಿಚಂದ್ರ, ರೈತ ಮುಖಂಡ ಸುಬ್ಬೇಗೌಡ, ದಲಿತ ಮುಖಂಡ ರವಿಕುಮಾರ್ ನಾಯ್ಕ, ಕರವೇ(ಪ್ರವೀಣ್‌ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Thursday, May 28, 2020

ಯುವಕನ ಮೇಲೆ ಹಲ್ಲೆ


ಭದ್ರಾವತಿ, ಮೇ. ೨೮: ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ಖಬರ್‌ಸ್ಥಾನ ಬಳಿ ಮೂವರು ಯುವಕರ ನಡುವೆ ಜಗಳ ನಡೆದು ಓರ್ವನ ಮೇಲೆ ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಡೆದಿದೆ.
ಮೆಹಬೂಬ್ ಪಾಷ(೨೮) ಎಂಬಾತ ತೀವ್ರ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಮುಬಾರಕ್(೨೨) ಮತ್ತು ಶಕಿಬ್ ಎಂಬುವರ ಜೊತೆ ಸೇರಿ ಮೆಹಬೂಬ್ ಪಾಷ ಮದ್ಯಪಾನ ಮಾಡುತ್ತಿದ್ದಾಗ ಯಾವುದೋ ಕಾರಣಕ್ಕೆ ಜಗಳ ಉಂಟಾಗಿದ್ದು, ಮೆಹಬೂಬ್ ಪಾಷ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಲಾಗಿದೆ. ಈ ಸಂಬಂಧ ಕಾಗದನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೊಮ್ಮನಕಟ್ಟೆ ವ್ಯಾಪ್ತಿಯಲ್ಲಿ ಇತ್ತೀಚೆಗೆ ಓ.ಸಿ, ಇಸ್ಪೀಟ್ ಸೇರಿದಂತೆ ಇನ್ನಿತರ ಜೂಜಾಟ, ಅನೈತಿಕ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಆಗಾಗ ಈ ರೀತಿಯ ಘಟನೆಗಳು ಮರುಗಳಿಸುತ್ತಿದ್ದು, ಪೊಲೀಸ್ ಇಲಾಖೆ ಈ ಭಾಗದಲ್ಲಿ ಹೆಚ್ಚಿನ ಕಾರ್ಯಾಚರಣೆ ಕೈಗೊಂಡು ಕಾನೂರು ಬಾಹಿರ ಚಟುವಟಿಕೆಗಳಿಗೆ ಕಡಿವಾಣಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಕಡುಬಡವರಿಗೆ ದಿನಸಿ ಸಾಮಗ್ರಿ ವಿತರಣೆ

ಭದ್ರಾವತಿಯಲ್ಲಿ ಛಲವಾದಿ ಮಹಾಸಭಾ ವತಿಯಿಂದ ಗುರುವಾರ ಕಡುಬಡವರಿಗೆ ದಿನಸಿ ಸಾಮಗ್ರಿ ವಿತರಿಸಲಾಯಿತು. 
ಭದ್ರಾವತಿ, ಮೇ. ೨೮: ಕೊರೋನಾ ವೈರಸ್ ಪರಿಣಾಮ ಸಂಕಷ್ಟಕ್ಕೆ ಒಳಗಾದವರ ನೆರವಿಗೆ ಛಲವಾದಿ ಮಹಾಸಭಾ ಮುಂದಾಗಿದ್ದು, ಗುರುವಾರ ನಗರದ ವಿವಿದೆಡೆ ಕಡುಬಡವರಿಗೆ ದಿನಸಿ ಸಾಮಗ್ರಿ ವಿತರಿಸಲಾಯಿತು.
ನಗರದ ವಿವಿದೆಡೆ ಛಲವಾದಿ ಸಮಾಜದ ಕಡು ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಾಧ್ಯವಾದಷ್ಟು ನೆರವು ನೀಡಬೇಕೆಂಬ ಉದ್ದೇಶದೊಂದಿಗೆ ಹಂತ ಹಂತವಾಗಿ ದಿನಸಿ ಸಾಮಗ್ರಿ ವಿತರಿಸಲಾಗುತ್ತಿದೆ. ಕಳೆದ ೩ ದಿನಗಳ ಹಿಂದೆ ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಮತ್ತು ನಗರಸಭೆ ಪೌರಾಯುಕ್ತ ಮನೋಹರ್ ಸೇರಿದಂತೆ ಇನ್ನಿತರರು ದಿನಸಿ ಸಾಮಗ್ರಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.
  ಛಲವಾದಿ ಮಹಾಸಭಾ ಅಧ್ಯಕ್ಷ ಸುರೇಶ್, ಮುಖಂಡರಾದ ಜಯರಾಜ್, ಮಹೇಶ್, ಗೋಪಾಲ್, ಅರುಣ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಬಲವಂತವಾಗಿ ಶಾಲಾ ಶುಲ್ಕ ವಸೂಲಾತಿ ಮಾಡುವಂತಿಲ್ಲ

ಖಾಸಗಿ ಶಾಲೆಗಳ ಮುಖ್ಯಸ್ಥರ ಸಭೆಯಲ್ಲಿ ತಹಸೀಲ್ದಾರ್ ಶಿವಕುಮಾರ್ ಎಚ್ಚರಿಕೆ 

ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಗುರುವಾರ ತಹಸೀಲ್ದಾರ್ ಶಿವಕುಮಾರ್ ನೇತೃತ್ವದಲ್ಲಿ ಶುಲ್ಕ ವಸೂಲಾತಿಗೆ ಸಂಬಂಧಿಸಿದಂತೆ ಖಾಸಗಿ ಶಾಲೆಗಳ ಮುಖ್ಯಸ್ಥರ ಸಭೆ ನಡೆಯಿತು. 
ಭದ್ರಾವತಿ, ಮೇ. ೨೮: ಖಾಸಗಿ ಶಾಲೆಗಳು ಯಾವುದೇ ಕಾರಣಕ್ಕೂ ಬಲವಂತದಿಂದ ಶಾಲಾ ಶುಲ್ಕ ವಸೂಲಾತಿ ಮಾಡುವಂತಿಲ್ಲ ಎಂದು ತಹಸೀಲ್ದಾರ್ ಶಿವಕುಮಾರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. 
ಅವರು ಗುರುವಾರ ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಖಾಸಗಿ ಶಾಲೆಗಳ ಮುಖ್ಯಸ್ಥರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
ಪ್ರಸ್ತುತ ಕೊರೋನಾ ವೈರಸ್ ಪರಿಣಾಮ ಶ್ರೀಸಾಮಾನ್ಯರು ಸಂಕಷ್ಟಕ್ಕೆ ಒಳಗಾಗಿದ್ದು, ಈ ಸಂದಿಗ್ದ ಪರಿಸ್ಥಿತಿಯಲ್ಲಿ ಬಲವಂತವಾಗಿ ಶಾಲಾ ಶುಲ್ಕ ವಸೂಲಾತಿ ಮಾಡಬಾರದು. ಈ ಸಂಬಂಧ ಸರ್ಕಾರ ಸಹ ಆದೇಶ ಹೊರಡಿಸಿದೆ. ಇದನ್ನು ಪಾಲಿಸುವಂತೆ ಮನವಿ ಮಾಡಿದರು. 
ಸಭೆಯಲ್ಲಿ ಪಾಲ್ಗೊಂಡಿದ್ದ ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್ ಮಾತನಾಡಿ, ಶಾಲಾ ಶುಲ್ಕ ವಸೂಲಾತಿಗೆ ಸಂಬಂಧಿಸಿದಂತೆ ತಾಲೂಕು ಆಡಳಿತ ಹಾಗು ಶಿಕ್ಷಣ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ತಹಸೀಲ್ದಾರ್‌ರವರು ಪೂರಕವಾಗಿ ಸ್ಪಂದಿಸಿ ಸಭೆ ಕರೆದಿದ್ದು, ಖಾಸಗಿ ಶಾಲೆಗಳು ಯಾವುದೇ ಕಾರಣಕ್ಕೂ ಈ ಬಾರಿ ಶಾಲಾ ಶುಲ್ಕ ವಸೂಲಾತಿ ಮಾಡಬಾರದು. ಅದರಲ್ಲೂ ಭದ್ರಾವತಿಯಂತಹ ನಗರದಲ್ಲಿ ಶ್ರೀಸಾಮಾನ್ಯರು ತುಂಬಾ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯಾವುದೇ ಉದ್ಯೋಗವಿಲ್ಲದೆ ದಿನದ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದನ್ನು ಅರ್ಥ ಮಾಡಿಕೊಂಡು ಖಾಸಗಿ ಶಾಲೆಗಳು ಸಹಕರಿಸಬೇಕು. ಅಲ್ಲದೆ ಈ ಸಂಬಂಧ ಸರ್ಕಾರ ಸಹ ಆದೇಶ ಹೊರಡಿಸಿದ್ದು, ಇದನ್ನು ಪಾಲಿಸುವ ಮೂಲಕ ಶ್ರೀಸಾಮಾನ್ಯರ ನೆರವಿಗೆ ಮುಂದಾಗುವಂತೆ ಕೋರಿದರು. 
ಒಂದು ವೇಳೆ ಸರ್ಕಾರದ ಆದೇಶ ಉಲ್ಲಂಘಿಸಿ, ಬಲವಂತವಾಗಿ ಶುಲ್ಕ ವಸೂಲಾತಿ ಮಾಡಿದ್ದಲ್ಲಿ ಹೋರಾಟ ನಡೆಸುವುದು ಅನಿವಾರ್ಯ ಎಂದು ಎಚ್ಚರಿಸಿದರು. 
ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ಕ್ಷೇತ್ರ ಶಿಕ್ಷಣ ಸಂಪನ್ಮೂಲ ಸಮನ್ವಯಾಧಿಕಾರಿ ರಾಜಶೇಖರ್, ಶಿಕ್ಷಣ ಸಂಯೋಜಕ ರವಿಕುಮಾರ್, ಆಮ್ ಆದ್ಮಿ ಪಾರ್ಟಿ ಮುಖಂಡರಾದ ಇಬ್ರಾಹಿಂ ಖಾನ್, ಪೀಟರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಸುಮಾರು ೫೨ ಖಾಸಗಿ ಶಾಲೆಗಳ ಮುಖ್ಯಸ್ಥರು ಸಭೆಯಲ್ಲಿ ಪಾಲ್ಗೊಂಡಿದ್ದರು. 

ಗೊಂದಿ ನಾಲೆಗೆ ಹಾರಿ ತಾಯಿ ಸೇರಿದಂತೆ ಇಬ್ಬರು ಮಕ್ಕಳು ಆತ್ಮಹತ್ಯೆ

ಭದ್ರಾವತಿಯಲ್ಲಿ ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಮೃತದೇಹಗಳನ್ನು ಗುರುವಾರ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿ ವಾರಸುದಾರರಿಗೆ ಹಿಂದಿರುಗಿಸಲಾಯಿತು. 
ಭದ್ರಾವತಿ, ಮೇ. ೨೮: ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 
ನಗರಸಭೆ ವ್ಯಾಪ್ತಿಯ ನೆಹರು ನಗರ ನಿವಾಸಿ ಚಂದ್ರಕಲಾ(೩೩), ಹೆಣ್ಣು ಮಕ್ಕಳಾದ ಶ್ವೇತಾ(೮) ಮತ್ತು ರೋಹಿಣಿ(೪) ಮೃತಪಟ್ಟಿದ್ದಾರೆ. ಬುಧವಾರ ಸಂಜೆ ಕೋಡಿಹಳ್ಳಿ ಗ್ರಾಮದ ಗೊಂದಿ ನಾಲೆಗೆ ಹಾರಿದ್ದು, ಇದನ್ನು ಸ್ಥಳೀಯರು ಗಮನಿಸಿ ಹುಡುಕಾಟ ನಡೆಸಿದ ಹಿನ್ನಲೆಯಲ್ಲಿ ೩ ಮೃತ ದೇಹಗಳು ಪತ್ತೆಯಾಗಿವೆ. 
ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಮೃತದೇಹಗಳ ಶವ ಪರೀಕ್ಷೆ ನಡೆದು ವಾರಸುದಾರರಿಗೆ ಹಿಂದಿರುಗಿಸಲಾಯಿತು. 
ಆತ್ಮಹತ್ಯೆಗೆ ಕೌಟುಂಬಿಕ ಕಲಹ ಕಾರಣ ಎನ್ನಲಾಗಿದೆ. ಈ ಸಂಬಂಧ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ಪತಿ ವೆಂಕಟೇಶ್ ವಿರುದ್ಧ ದೂರು ದಾಖಲಾಗಿದೆ ಎಂದು ವಾರ್ಡ್ ನಗರಸಭೆ ಹಿರಿಯ ಸದಸ್ಯ ಆರ್. ಕರುಣಾಮೂರ್ತಿ ತಿಳಿಸಿದ್ದಾರೆ. 


Wednesday, May 27, 2020

ಅಕ್ಷರ ದಾಸೋಹ ಮಹಿಳೆಯರ ನೆರವಿಗೆ ಮುಂದಾಗಿ : ಸರ್ಕಾರಕ್ಕೆ ಮನವಿ

ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಶಾಖೆ ವತಿಯಿಂದ ನೆರವಿಗೆ ಮುಂದಾಗುವಂತೆ ಒತ್ತಾಯಿಸಿ ಭದ್ರಾವತಿಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಮೂಲಕ ಮುಖ್ಯಮಂತ್ರಿಗಳಿಗೆ ಬುಧವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಮೇ. ೨೭: ಕೊರೋನಾ ವೈರಸ್ ಪರಿಣಾಮ ಅಕ್ಷರ ದಾಸೋಹ ಯೋಜನೆಯಡಿ ದುಡಿಯುತ್ತಿರುವ ದುರ್ಬಲ ವರ್ಗದ ಮಹಿಳೆಯರು  ಸಂಕಷ್ಟಕ್ಕೆ ಒಳಗಾಗಿದ್ದು, ಸರ್ಕಾರ ಇವರ ನೆರವಿಗೆ ಮುಂದಾಗಬೇಕೆಂದು ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಶಾಖೆ ವತಿಯಿಂದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಅಕ್ಷರ ದಾಸೋಹ ಯೋಜನೆಯಡಿ ದುರ್ಬಲ ವರ್ಗಕ್ಕೆ ಸೇರಿದ ಸುಮಾರು ೧.೧೮ ಲಕ್ಷ ಮಹಿಳೆಯರು ಹಲವಾರು ವರ್ಷಗಳಿಂದ ದುಡಿಯುತ್ತಿದ್ದು, ಈ ಪೈಕಿ ವಿಧವೆಯರು, ವಿಚ್ಛೇದಿತರು, ಕಡು ಬಡ ಕುಟುಂಬದ ಮಹಿಳೆಯರು ಹೆಚ್ಚಾಗಿದ್ದಾರೆ.  ಬೇಸಿಗೆ ದಿನಗಳಲ್ಲಿ, ಬರಗಾಲದ ಸಂದರ್ಭಗಳಲ್ಲೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೊರೋನಾ ವೈರಸ್ ಪರಿಣಾಮ ಪ್ರಸ್ತುತ ಎದುರಾಗಿರುವ ಸಂದಿಗ್ದ ಪರಿಸ್ಥಿತಿಯಲ್ಲೂ ಅಕ್ಷರ ದಾಸೋಹ ಯೋಜನೆಯ ಆಹಾರ ಧಾನ್ಯಗಳನ್ನು ಮಕ್ಕಳ ಮನೆಗಳಿಗೆ ತಲುಪಿಸುತ್ತಿದ್ದಾರೆ. ಆದರೆ ಈ ಮಹಿಳೆಯರಿಗೆ ಸರ್ಕಾರದ ಯಾವುದೇ ಸೌಲಭ್ಯಗಳು ಲಭಿಸದೆ ವಂಚಿತರಾಗಿದ್ದಾರೆಂದು ಅಳಲು ವ್ಯಕ್ತಪಡಿಸಲಾಗಿದೆ. 
ಸರ್ಕಾರ ತಕ್ಷಣ ಏಪ್ರಿಲ್ ತಿಂಗಳಿನಿಂದ ಪುನಃ ಶಾಲೆಗಳು ಪ್ರಾರಂಭವಾಗುವವರೆಗೂ ಈ ಮಹಿಳೆಯರ ಜೀವನ ನಿರ್ವಹಣೆಗೆ ಸಂಪೂರ್ಣ ವೇತನ ನೀಡುವುದು. ಎಲ್‌ಐಸಿ ಆಧಾರಿತ ಪೆನ್ಷನ್ ನೀಡುವುದು, ಖಾಯಂ ಗೊಳಿಸುವುದು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರವೇಶ ಶುಲ್ಕ ಮತ್ತು ಇತರೆ ಶುಲ್ಕಗಳಿಂದ ಸಂಪೂರ್ಣ ವಿನಾಯಿತಿ ನೀಡುವುದು ಹಾಗೂ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಿಕೊಡುವಂತೆ ಒತ್ತಾಯಿಸಲಾಗಿದೆ.
ಅಧ್ಯಕ್ಷೆ ಹನುಮಮ್ಮ, ಕಾರ್ಯದರ್ಶಿ ಬಿ. ಸರಸ್ವತಿ, ಪದಾಧಿಕಾರಿಗಳಾದ ಪಿ. ಶೆಲ್ವಿ, ಶಶಿಕಲಾ, ಜಯಲಕ್ಷ್ಮಿ, ಅನುಸೂಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.