Friday, June 5, 2020

ಆದಿ ಕರ್ನಾಟಕ ಜನಾಂಗದವರ ಬೇಡಿಕೆಗಳನ್ನು ಈಡೇರಿಸಿ

ಓಡಾಡಲು ರಸ್ತೆ, ನಿವೇಶನಗಳಿಗೆ ಖಾತೆ, ಸ್ಮಶಾನ ಭೂಮಿ ಮಂಜೂರಿಗೆ ಒತ್ತಾಯ 

ಭದ್ರಾವತಿ ತಾಲೂಕಿನ ಕಲ್ಪನಹಳ್ಳಿಯಲ್ಲಿ ಕಳೆದ ಸುಮಾರು ೫೦ ವರ್ಷಗಳಿಂದ ಗ್ರಾಮ ಠಾಣಾ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ಆದಿ ಕರ್ನಾಟಕ ಜನಾಂಗದವರ ಬೇಡಿಕೆಗಳನ್ನು ತಕ್ಷಣ ಈಡೇರಿಸಿಕೊಡುವ ಜೊತೆಗೆ ನಿರ್ಲಕ್ಷ್ಯತನದಿಂದ ವರ್ತಿಸುತ್ತಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಶುಕ್ರವಾರ ತಾಲೂಕು ಪಂಚಾಯಿತಿ ಮುಂಭಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಪ್ರತಿಭಟನೆ ನಡೆಸಲಾಯಿತು. 
ಭದ್ರಾವತಿ, ಜೂ. ೫ : ತಾಲೂಕಿನ ಕಲ್ಪನಹಳ್ಳಿಯಲ್ಲಿ ಕಳೆದ ಸುಮಾರು ೫೦ ವರ್ಷಗಳಿಂದ ಗ್ರಾಮ ಠಾಣಾ ಜಾಗದಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ಆದಿ ಕರ್ನಾಟಕ ಜನಾಂಗದವರ ಬೇಡಿಕೆಗಳನ್ನು ತಕ್ಷಣ ಈಡೇರಿಸಿಕೊಡುವ ಜೊತೆಗೆ ನಿರ್ಲಕ್ಷ್ಯತನದಿಂದ ವರ್ತಿಸುತ್ತಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ಶುಕ್ರವಾರ ತಾಲೂಕು ಪಂಚಾಯಿತಿ ಮುಂಭಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಪ್ರತಿಭಟನೆ ನಡೆಸಲಾಯಿತು. 
ಕೂಡ್ಲಿಗೆರೆ ಹೋಬಳಿ ಕಲ್ಪನಹಳ್ಳಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಆದಿ ಕರ್ನಾಟಕ ಜನಾಂಗದ ೫ ರಿಂದ ೬ ಕುಟುಂಬಗಳು ಸುಮಾರು ೫೦ ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದು, ಈ ಕುಟುಂಬಗಳಿಗೆ ಓಡಾಡಲು ರಸ್ತೆ ಸಹ ಇದುವರೆಗೂ ನಿರ್ಮಿಸಿಕೊಟ್ಟಿರುವುದಿಲ್ಲ. ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಹಲವು ಬಾರಿ ಮನವಿ ಸಲ್ಲಿಸಿ ಒತ್ತಾಯಿಸಿದ್ದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಈ ಭಾಗದ ಜನಪ್ರತಿನಿಧಿಗಳು ಸಹ ಗಮನ ಹರಿಸುತ್ತಿಲ್ಲ ಎಂದು ಅಳಲು ವ್ಯಕ್ತಪಡಿಸಲಾಯಿತು.
ತಕ್ಷಣ ಸರ್ಕಾರದ ನಿಯಮಾನುಸಾರ ಓಡಾಡಲು ರಸ್ತೆ ನಿರ್ಮಾಣ ಮಾಡಿಕೊಡಬೇಕು. ವಾಸದ ನಿವೇಶನಗಳಿಗೆ ಖಾತೆ ಮಾಡಿಕೊಡಬೇಕು. ಸರ್ಕಾರದ ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಡಬೇಕು. ಗ್ರಾಮದ ಆದಿ ಕರ್ನಾಟಕ ಜನಾಂಗದವರಿಗೆ ಪ್ರತ್ಯೇಕ ಸ್ಮಶಾನ ಭೂಮಿ ಮಂಜೂರು ಮಾಡಕೊಡಬೇಕು ಹಾಗೂ ಬೇಡಿಕೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯತನ ವಹಿಸಿರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಿ ಪ್ರಕರಣದ ತನಿಖೆ ನಡೆಸಬೇಕೆಂದು ಒತ್ತಾಯಿಸಲಾಯಿತು. 
ಪ್ರಮುಖರಾದ ಜಿಲ್ಲಾ ಸಂಚಾಲಕ ಟಿ.ಎಚ್ ಹಾಲೇಶಪ್ಪ, ಸಂಘಟನಾ ಸಂಚಾಲಕ ಎಂ. ಪಳನಿರಾಜ್, ತಾಲ್ಲೂಕು ಪ್ರಧಾನ ಸಂಚಾಲಕ ಎಂ. ಕುಬೇಂದ್ರಪ್ಪ, ಜಿಲ್ಲಾ ಮಹಿಳಾ ಒಕ್ಕೂಟದ ರತನ್‌ಜ್ಯೋತಿ, ತಾಲೂಕು ಮಹಿಳಾ ಒಕ್ಕೂಟದ ಸಂಚಾಲಕಿ ಯೋಗೇಶ್ವರಿ, ಕಲ್ಲೇಶ್, ಜಗ್ಗು, ಎಚ್. ಲೋಕೇಶ್, ಇಬ್ರಾಹಿಂ ಸಾಬ್, ಆನಂದ ರಾವ್, ನ್ಯಾಮತಿ ಹಾಲಪ್ಪ, ಶಿವನಾಯ್ಕ, ಜಗದೀಶ್, ಕೆ. ಮಂಜಪ್ಪ, ಕರ್ಣ, ತಿಮ್ಮಣ್ಣ ಮತ್ತು ರಮೇಶ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 
೧೫ ದಿನದಲ್ಲಿ ಸಮಸ್ಯೆಗಳಿಗೆ ಪರಿಹಾರ: 
ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ೧೫ ದಿನಗಳಲ್ಲಿ ಭೇಡಿಕೆ ಈಡೇರಿಸಿ ಕೊಡುವುದಾಗಿ ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಪ್ರತಿಭಟನೆ ಹಿಂಪಡೆಯಲಾಯಿತು. 

Thursday, June 4, 2020

ಎಸ್‌ಸಿಪಿ ಟಿಎಸ್‌ಪಿ ಕಾಮಗಾರಿಯಲ್ಲಿ ಅವ್ಯವಹಾರ : ಪ್ರತಿಭಟನೆ

ತಪ್ಪಿತಸ್ಥ ಇಂಜಿನಿಯರ್ ಅಮಾನತ್ತುಗೊಳಿಸಿ ತನಿಖೆ ಕೈಗೊಳ್ಳಲು ಆಗ್ರಹ

ಲೋಕೋಪಯೋಗಿ ಇಲಾಖೆ ವತಿಯಿಂದ ಎಸ್‌ಸಿಪಿ ಟಿಎಸ್‌ಪಿ ಮತ್ತು ವಾರ್ಷಿಕ ನಿರ್ವಹಣೆ(ಜಂಗಲ್ ಕಟಿಂಗ್) ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದು, ಈ ಹಿನ್ನಲೆಯಲ್ಲಿ ತಕ್ಷಣ ತಪ್ಪಿತಸ್ಥ ಇಂಜಿನಿಯರ್ ಅಮಾನತ್ತುಗೊಳಿಸಿ ತನಿಖೆ ಕೈಗೊಳ್ಳಬೇಕೆಂದು ಒತ್ತಾಯಿಸಿ ಗುರುವಾರ ಭದ್ರಾವತಿ ತರೀಕೆರೆ ರಸ್ತೆಯಲ್ಲಿರುವ ಲೋಕೋಪಯೋಗಿ ಕಛೇರಿ ಮುಂಭಾಗ ಕರ್ನಾಟಕ ರಾಜ್ಯ ಮಾದಿಗ ಸಮಾಜ ಸೇರಿದಂತೆ ಇನ್ನಿತರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಶಿವಕುಮಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೪: ಲೋಕೋಪಯೋಗಿ ಇಲಾಖೆ ವತಿಯಿಂದ ಎಸ್‌ಸಿಪಿ ಟಿಎಸ್‌ಪಿ ಮತ್ತು ವಾರ್ಷಿಕ ನಿರ್ವಹಣೆ(ಜಂಗಲ್ ಕಟಿಂಗ್) ಕಾಮಗಾರಿಯಲ್ಲಿ ಅವ್ಯವಹಾರ ನಡೆದಿದ್ದು, ಈ ಹಿನ್ನಲೆಯಲ್ಲಿ ತಕ್ಷಣ ತಪ್ಪಿತಸ್ಥ ಇಂಜಿನಿಯರ್ ಅಮಾನತ್ತುಗೊಳಿಸಿ ತನಿಖೆ ಕೈಗೊಳ್ಳಬೇಕೆಂದು ಒತ್ತಾಯಿಸಿ ಗುರುವಾರ ನಗರದ ತರೀಕೆರೆ ರಸ್ತೆಯಲ್ಲಿರುವ ಲೋಕೋಪಯೋಗಿ ಕಛೇರಿ ಮುಂಭಾಗ ಕರ್ನಾಟಕ ರಾಜ್ಯ ಮಾದಿಗ ಸಮಾಜ ಸೇರಿದಂತೆ ಇನ್ನಿತರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಶಿವಕುಮಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. 
ನಗರ ಮತ್ತು ಗ್ರಾಮೀಣ ಭಾಗದಲ್ಲಿ ಎಸ್‌ಸಿಪಿ ಟಿಎಸ್‌ಪಿ ಯೋಜನೆಯಡಿ ೨೦೧೮-೨೦೧೯ ಮತ್ತು ೨೦೧೯-೨೦೨೦ನೇ ಸಾಲಿನಲ್ಲಿ ಸುಮಾರು ೧,೮೪,೦೦೦ ರು. ವೆಚ್ಚದಲ್ಲಿ ಕಾಮಗಾರಿಗಳು ನಡೆದಿವೆ. ಕೆಲವು ಭಾಗದಲ್ಲಿ ತಾಂತ್ರಿಕವಾಗಿ ಮಂಜೂರಾತಿ ಆಗಿರುವ ಜಾಗಗಳನ್ನು ಬಿಟ್ಟು ಬೇರೆ ಕಡೆ ಮಾಡಲಾಗಿದೆ. ಅಲ್ಲದೆ ಈ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಅಳತೆ ಪುಸ್ತಕ, ಬಿಲ್ ಪ್ರತಿಗಳು ಸೇರಿದಂತೆ ಕೆಲವು ಮುಖ್ಯ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಆರೋಪಿಸಲಾಯಿತು. 
೨೦೧೯ ಮತ್ತು ೨೦೨೦ ನೇ ಸಾಲಿನ ಎನ್.ಎಂ ರಸ್ತೆ ಎಸ್‌ಎಚ್ ೬೫ರ ಸರಪಳಿ ೧೪೯.೮ ರಿಂದ ೧೮೬.೬ ಕಿ.ಮೀ ಆಯ್ದ ಭಾಗದಲ್ಲಿ ವಾರ್ಷಿಕ ನಿರ್ವಹಣೆ ಕಾಮಗಾರಿ ಮಾಡದೆ ಸುಮಾರು ೨೦ ಲಕ್ಷ ರು. ಬಿಲ್ ಸಂಬಂಧಪಟ್ಟ ಗುತ್ತಿಗೆದಾರರಿಗೆ ಪಾವತಿಸಲಾಗಿದೆ ಎಂದು ದೂರಲಾಯಿತು. 
ಈ ಎಲ್ಲಾ ಅಕ್ರಮಗಳಿಗೆ ಕಾರಣರಾಗಿರುವ ಇಂಜಿನಿಯರ್ ಅಮಾನತ್ತುಗೊಳಿಸಿ ತನಿಖೆ ನಡೆಸುವ ಮೂಲಕ ಕಾನೂನು ಕ್ರಮ ಕೈಗೊಂಡು ಸರ್ಕಾರದ ಬೊಕ್ಕಸಕ್ಕೆ ಉಂಟಾಗಿರುವ ನಷ್ಟವನ್ನು ಅವರಿಂದ ಮರುಪಾವತಿಸಬೇಕೆಂದು ಆಗ್ರಹಿಸಲಾಯಿತು. 
ಪ್ರತಿಭಟನೆಯಲ್ಲಿ ಕರ್ನಾಟಕ ಜನಸೈನ್ಯ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಹನುಮಮ್ಮ, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್,  ಐ.ವಿ ಸಂತೋಷ್‌ಕುಮಾರ್, ಪುಟ್ಟರಾಜು, ಕುಮಾರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯಾಗಿ ಡಾ. ಕೋಟ್ರೇಶಪ್ಪ

ಭದ್ರಾವತಿ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯಾಗಿ ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಕೋಟ್ರೇಶಪ್ಪ ಪ್ರಭಾರ ಅಧಿಕಾರ ವಹಿಸಿಕೊಂಡರು. 
ಭದ್ರಾವತಿ, ಜೂ. ೪: ಕೊನೆಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗುರುವಾರ ಕರ್ತವ್ಯದಿಂದ ಬಿಡುಗಡೆಗೊಂಡಿದ್ದು, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಡಾ. ಕೋಟ್ರೇಶಪ್ಪ ಪ್ರಭಾರ ಅಧಿಕಾರ ವಹಿಸಿಕೊಂಡರು.
ತಾಲೂಕು ಪಂಚಾಯಿತಿ ಸದಸ್ಯರು ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡ ವಿರುದ್ಧ ಬುಧವಾರ ಹಲವು ಆರೋಪಗಳನ್ನು ಮಾಡುವ ಮೂಲಕ ಕರ್ತವ್ಯದಿಂದ ಬಿಡುಗಡೆಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಇದರ ಪರಿಣಾಮ ಕರ್ತವ್ಯದಿಂದ ತಕ್ಷಣ ಬಿಡುಗಡೆಗೊಳಿಸುವುದಾಗಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ ದೂರವಾಣಿ ಮೂಲಕ ಭರವಸೆ ನೀಡಿದ್ದರು.
ಈ  ಹಿನ್ನಲೆಯಲ್ಲಿ ಪ್ರಭಾರ ಅಧಿಕಾರಿಯಾಗಿ ಡಾ. ಕೋಟ್ರೇಶಪ್ಪ ಅವರನ್ನು ನೇಮಕಗೊಳಿಸಿದ್ದಾರೆ. ತಮ್ಮಣ್ಣಗೌಡರವರು ಅಧಿಕಾರ ಹಸ್ತಾಂತರಿಸಿದರು.
ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಎಸ್. ರಮೇಶ್, ಸದಸ್ಯ ಕೆ. ಮಂಜುನಾಥ್, ಮುಖಂಡರಾದ ಶ್ರೀಧರ್, ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಮದ್ಯಪಾನ ನಿಷೇಧಿಸಿ, ಮೈಕ್ರೋ ಫೈನಾನ್ಸ್ ಹಾವಳಿ ತಪ್ಪಿಸಿ

ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ 

ರಾಜ್ಯದಲ್ಲಿ ತಕ್ಷಣ ಮದ್ಯಪಾನ ನಿಷೇಧಿಸುವಂತೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಗುರುವಾರ ಸಂಯುಕ್ತ ಜನತಾದಳ ವತಿಯಿಂದ ಭದ್ರಾವತಿಯಲ್ಲಿ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿ ತಹಸೀಲ್ದಾರ್ ಶಿವಕುಮಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೪: ರಾಜ್ಯದಲ್ಲಿ ತಕ್ಷಣ ಮದ್ಯಪಾನ ನಿಷೇಧಿಸುವಂತೆ ಹಾಗೂ ಮೈಕ್ರೋ ಫೈನಾನ್ಸ್‌ಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಗುರುವಾರ ಸಂಯುಕ್ತ ಜನತಾದಳ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಿ ತಹಸೀಲ್ದಾರ್ ಶಿವಕುಮಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. 
ಲಾಕ್‌ಡೌನ್ ಹಿನ್ನಲೆಯಲ್ಲಿ ಸ್ಥಗಿತಗೊಳಿಸಲಾಗಿದ್ದ ಮದ್ಯ ಮಾರಾಟ ಪುನಃ ಆರಂಭಗೊಂಡಿರುವುದರಿಂದ ಒಂದೊತ್ತಿನ ಊಟಕ್ಕೂ ಪರದಾಡುವಂತಹ ಸ್ಥಿತಿಯಲ್ಲಿರುವ ಕುಟುಂಬಗಳು ಮತ್ತಷ್ಟು ಸಂಕಷ್ಟ ಅನುಭವಿಸುವಂತಾಗಿದೆ. ಈ ಹಿಂದೆ ತಾವು ಉಪಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸಾರಾಯಿ ನಿಷೇಧಗೊಳಿಸಿದ್ದು, ಇಂದಿಗೂ ರಾಜ್ಯದ ಜನರು ಮರೆಯುವಂತಿಲ್ಲ. ಇದೀಗ ಸಂಪೂರ್ಣ ಮದ್ಯಪಾನ ನಿಷೇಧಿಸುವ ಮೂಲಕ ಈ ಬಾರಿ ಗಾಂಧಿ ಜಯಂತಿಗೆ ವಿಶಿಷ್ಟ ಕೊಡುಗೆ ನೀಡುವ ಜೊತೆಗೆ ರಾಷ್ಟ್ರದಲ್ಲಿಯೇ ಮಾದರಿ ರಾಜ್ಯವನ್ನಾಗಿಸಬೇಕೆಂದು ಒತ್ತಾಯಿಸಲಾಯಿತು. 
ಜಿಲ್ಲೆಯಲ್ಲಿ ಸುಮಾರು ೫೫ಕ್ಕೂ ಹೆಚ್ಚಿನ ಮೈಕ್ರೋ ಫೈನಾನ್ಸ್‌ಗಳಿದ್ದು, ಬಹುತೇಕ ಫೈನಾನ್ಸ್‌ಗಳು ಆರ್‌ಬಿಐ ಮಾರ್ಗಸೂಚಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿವೆ. ಕೊರೋನಾ ಲಾಕ್‌ಡೌನ್ ಪರಿಣಾಮ ಉದ್ಯೋಗವಿಲ್ಲದೆ ಎಲ್ಲೆಡೆ ಆರ್ಥಿಕ ಸಂಕಷ್ಟ ಎದುರಾಗಿದ್ದು, ಈ ಹಿನ್ನಲೆಯಲ್ಲಿ ಸರ್ಕಾರ ಆಗಸ್ಟ್‌ವರೆಗೂ ಸದಸ್ಯರಿಗೆ ತಕ್ಷಣ ಹಣ ಪಾವತಿಸುವಂತೆ ಒತ್ತಾಯಿಸುವಂತಿಲ್ಲ ಎಂದು ಆದೇಶಿಸಿದೆ. ಆದರೆ ಈ ಆದೇಶವನ್ನು ಉಲ್ಲಂಘಿಸಿ ತಕ್ಷಣ ಹಣ ಪಾವತಿಸುವಂತೆ ಮಹಿಳಾ ಸದಸ್ಯರಿಗೆ ತೀವ್ರ ಒತ್ತಡ ಹಾಕಲಾಗುತ್ತಿದೆ. ಈ ಹಿನ್ನಲೆಯಲ್ಲಿ ಈ ಮೈಕ್ರೋ ಫೈನಾನ್ಸ್‌ಗಳ ವಿರುದ್ಧ ಕ್ರಮ ಕೈಗೊಂಡು ಪರವಾನಗಿ ರದ್ದುಗೊಳಿಸಬೇಕು. ಅಲ್ಲದೆ ಈ ಫೈನಾನ್ಸ್‌ಗಳಲ್ಲಿ ಬಡ ವರ್ಗದ ಜನರು ಪಡೆದಿರುವ ಸಾಲ ಮನ್ನಾ  ಮಾಡಬೇಕೆಂದು ಆಗ್ರಹಿಸಲಾಯಿತು. 
ಮನೆ ಮನೆಗೆ ಅಡುಗೆ ಅನಿಲ ಪೂರೈಸುವ ವಿತರಕರು ನಿಗದಿತ ದರ ಪಡೆಯದೆ ೩೦ ರಿಂದ ೪೦ ರು. ಹೆಚ್ಚಿಗೆ ಪಡೆಯುತ್ತಿದ್ದಾರೆ. ಸಂಕಷ್ಟದ ಸಮಯದಲ್ಲಿ ಗ್ರಾಹಕರಿಂದ ಹೆಚ್ಚಿನ ಹಣ ಸುಲಿಗೆ ಮಾಡುವುದು ಸರಿಯಲ್ಲ. ಈ ಸಂಬಂಧ ತಕ್ಷಣ ಕ್ರಮ ಕೈಗೊಳ್ಳಬೇಕು. ಔರಾದ್‌ಕರ್ ವರದಿ ಜಾರಿಗೆ ತರುವ ಮೂಲಕ ಪೊಲೀಸ್ ಸಿಬ್ಬಂದಿಗಳಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸುವುದು. ಸರ್ಕಾರ ಶಾಲೆಗಳ ಆರಂಭಕ್ಕೆ ಮುಂದಾಗಿರುವುದು ಸರಿಯಲ್ಲ. ಶಾಲಾ ಮಕ್ಕಳಿಗೆ ಸರ್ಕಾರದ ಯಾವುದೇ ಮಾರ್ಗಸೂಚಿ ತಿಳಿಯುವುದಿಲ್ಲ. ಅಲ್ಲದೆ ಮಕ್ಕಳು ಮಾರ್ಗಸೂಚಿಗಳನ್ನು ಪಾಲಿಸುವುದು ಕಷ್ಟಕರವಾಗಿದೆ. ಈ ಪರಿಸ್ಥಿತಿಯಲ್ಲಿ ಶಾಲೆಗಳನ್ನು ಆರಂಭಿಸುವುದರಿಂದ ಹೆಚ್ಚಿನ ಆಪಾಯ ಎದುರಾಗಲಿದೆ. ಇದನ್ನು ಅರಿತು ತಕ್ಷಣ ಶಾಲೆಗಳನ್ನು ಆರಂಭಿಸದಿರುವಂತೆ ಮನವಿ ಮಾಡಲಾಯಿತು. 
ಪಕ್ಷದ ಯುವ ಘಟಕದ ರಾಜ್ಯ ಉಪಾಧ್ಯಕ್ಷ ಶಶಿಕುಮಾರ್ ಎಸ್.ಗೌಡ ನೇತೃತ್ವ ವಹಿಸಿದ್ದರು. ರೈತ ಮುಖಂಡ ಸುಬ್ಬೇಗೌಡ, ಮುಖಂಡರಾದ ರವಿನಾಯ್ಕ, ರವಿ,  ಮಾನವ ಹಕ್ಕುಗಳ ಹೋರಾಟ ಸಮಿತಿ ಉಪಾಧ್ಯಕ್ಷ ಎಂ.ವಿ ಚಂದ್ರಶೇಖರ್, ಕರ್ನಾಟ ರಕ್ಷಣಾ ವೇದಿಕೆ(ಪ್ರವೀಣ್ ಶೆಟ್ಟಿ ಬಣ) ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Wednesday, June 3, 2020

ಜೂ.೫ರಂದು ಡಿಎಸ್‌ಎಸ್ ವತಿಯಿಂದ ಪ್ರತಿಭಟನೆ

ಭದ್ರಾವತಿ, ಜೂ. ೩: ಕೂಡ್ಲಿಗೆರೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮಾನತ್ತಿಗೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆ ವತಿಯಿಂದ ಜೂ.೫ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಪಂಚಾಯಿತಿ ಕಛೇರಿ ಆವರಣದಲ್ಲಿ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಕೂಡ್ಲಿಗೆರೆ ಹೋಬಳಿ ಕಲ್ಪನಹಳ್ಳಿ ಗ್ರಾಮದಲ್ಲಿ ಸುಮಾರು ೫-೬ ದಲಿತ ಕುಟುಂಬಗಳು ಸುಮಾರು ೫೦ ವರ್ಷಗಳಿಂದ ವಾಸಿಸುತ್ತಿದ್ದು, ದಲಿತ ಕುಟುಂಬದವರು ಓಡಾಡುವ ರಸ್ತೆಗೆ ಅಕ್ರಮವಾಗಿ ಬೇಲಿ ಹಾಕಲಾಗಿದೆ. ಇದಕ್ಕೆ ಪಿಡಿಓ ಕರ್ತವ್ಯ ಲೋಪ ಕಾರಣವಾಗಿದ್ದು, ಈ ಹಿನ್ನಲೆಯಲ್ಲಿ ಅಮಾನತ್ತುಗೊಳಿಸುವಂತೆ ಒತ್ತಾಯಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ.
ದಲಿತ ಮುಖಂಡರು, ವಿವಿಧ ಸಂಘ-ಸಂಸ್ಥೆಗಳು ಸೇರಿದಂತೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಹೋರಾಟ ಯಶಸ್ವಿಗೊಳಿಸುವಂತೆ ತಾಲೂಕು ಸಂಚಾಲಕ ಎಂ. ಕುಬೇಂದ್ರಪ್ಪ ಕೋರಿದ್ದಾರೆ.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ವಿರುದ್ಧ ಹಲವು ಆರೋಪಗಳು : ಕರ್ತವ್ಯದಿಂದ ಬಿಡುಗಡೆಗೊಳ್ಳಲು ಆಗ್ರಹಿಸಿ ಪ್ರತಿಭಟನೆ

ಭದ್ರಾವತಿ ತಾಲೂಕು ಪಂಚಾಯಿತಿಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಸದಸ್ಯರು ಕಾರ್ಯನಿರ್ವಹಣಾಧಿಕಾರಿಗಳ ವಿರುದ್ಧ ಹಲವು ಆರೋಪಗಳನ್ನು ಮಾಡುವ ಮೂಲಕ ಕರ್ತವ್ಯದಿಂದ ಬಿಡುಗಡೆಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. 
ಸಭೆಯಲ್ಲಿ ಕೇಳಿ ಬಂದ ಪ್ರಮುಖ ಆರೋಪಗಳು :
- ಕಾನೂನು ಉಲ್ಲಂಘಿಸಿ ಗ್ರಾ.ಪಂ. ಪಿಡಿಓ ವರ್ಗಾವಣೆ
- ಯಾವುದೇ ಆದೇಶವಿಲ್ಲದೆ ಚಾಲಕನ ನೇಮಕ
- ನಿರ್ಲಕ್ಷ್ಯತನದಿಂದ ಅಂಗವಿಕಲ, ಎಸ್.ಸಿ/ಎಸ್.ಟಿ ಅನುದಾನ ಹಿಂದಕ್ಕೆ
ಭದ್ರಾವತಿ, ಜೂ. ೩: ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳ ವಿರುದ್ಧ ಸದಸ್ಯರು ಬುಧವಾರ ಹಲವು ಆರೋಪಗಳನ್ನು ಮಾಡುವುದರೊಂದಿಗೆ ಕರ್ತವ್ಯದಿಂದ ಬಿಡುಗಡೆಗೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಬೆಳಿಗ್ಗೆ ೧೧.೩೦ಕ್ಕೆ ಸಭೆ ಆರಂಭಗೊಳ್ಳುತ್ತಿದ್ದಂತೆ ಸದಸ್ಯರು ಮಾತನಾಡಿ, ಕಾರ್ಯನಿರ್ವಹಣಾಧಿಕಾರಿ ಕೆ.ಜೆ ತಮ್ಮಣ್ಣಗೌಡರವರು ಸರ್ವಾಧಿಕಾರಿಯಂತೆ ನಡೆದುಕೊಳ್ಳುತ್ತಿದ್ದಾರೆ. ಸದಸ್ಯರ ಯಾವ ಮಾತಿಗೂ ಬೆಲೆ ಕೊಡುತ್ತಿಲ್ಲ. ಕರ್ತವ್ಯದಲ್ಲಿ ನಿರ್ಲಕ್ಷ್ಯತನ ತೋರಿಸುತ್ತಿದ್ದು, ಕಾನೂನಿನ ನಿಯಮಗಳನ್ನು ಉಲ್ಲಂಘಿಸಿ ಅಧಿಕಾರ ಚಲಾಯಿಸುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ಆದೇಶದ ಪ್ರಕಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ವರ್ಗಾವಣೆ ಮಾಡುವ ಅಥವಾ ಅವರ ಸ್ಥಳಕ್ಕೆ ಮತ್ತೊಬ್ಬರನ್ನು ನೇಮಕಗೊಳಿಸುವ ಅಧಿಕಾರ ಕಾರ್ಯನಿರ್ವಹಣಾಧಿಕಾರಿಗಳು ಹೊಂದಿಲ್ಲ. ಆದರೂ ಸಹ ಅಭಿವೃದ್ಧಿ ಅಧಿಕಾರಿಯನ್ನು ವರ್ಗಾವಣೆಗೊಳಿಸಿ ಆ ಜಾಗಕ್ಕೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-೨ ನೇಮಕಗೊಳಿಸಿದ್ದಾರೆ. ಅಲ್ಲದೆ ತಾಲೂಕು ಪಂಚಾಯಿತಿಗೆ ಬಿಡುಗಡೆಯಾಗುವ ವಿವಿಧ ಅನುದಾನಗಳಲ್ಲಿ ಪರಿಶಿಷ್ಟ ಜಾತಿ, ಪಂಗಡಗಳಿಗೆ, ಅಂಗವಿಕಲರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಮೀಸಲಿಡಬೇಕಾದ ಅನುದಾನ ಕಾರ್ಯನಿರ್ವಹಣಾಧಿಕಾರಿಗಳ ನಿರ್ಲಕ್ಷ್ಯತನದಿಂದ ಸರ್ಕಾರಕ್ಕೆ ಹಿಂದಿರುಗಿದೆ. ತಾಲೂಕು ಪಂಚಾಯಿತಿಯಲ್ಲಿ ಖಾಲಿ ಇರುವ ಚಾಲಕರ ಹುದ್ದೆಗೆ ಯಾವುದೇ ಟೆಂಡರ್ ಕರೆಯದೆ ಹಾಗೂ ಸರ್ಕಾರದ ಆದೇಶವಿಲ್ಲದೆ ಸುಮಾರು ೧ ಒಂದು ವಾರದಿಂದ ಅಪರಿಚಿತ ವ್ಯಕ್ತಿಯನ್ನು ಅಕ್ರಮವಾಗಿ ನೇಮಕ ಮಾಡಿಕೊಳ್ಳಲಾಗಿದೆ. ಇದು ಕ್ರಿಮಿನಲ್ ಅಪರಾಧವಾಗಿದ್ದು, ಈ ರೀತಿ ಹಲವು ಅಕ್ರಮಗಳು ನಿಮ್ಮಿಂದ ನಡೆದಿವೆ ಎಂದು ಆರೋಪಿಸಿದ ಸದಸ್ಯರು ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದರು.
ಸುಮಾರು ಮಧ್ಯಾಹ್ನ ೧ ಗಂಟೆವರೆಗೂ ಸದಸ್ಯರು ನಡೆದಿರುವ ಒಂದೊಂದೇ ಅಕ್ರಮಗಳನ್ನು ಸಭೆಯಲ್ಲಿ ಬಿಡಿ ಬಿಡಿಯಾಗಿ ವಿವರಿಸಿದರು. ಕಾರ್ಯನಿರ್ವಹಣಾಧಿಕಾರಿಗಳು ತಪ್ಪನ್ನು ಸರಿಪಡಿಸಿಕೊಳ್ಳುವುದಾಗಿ ತಿಳಿಸಿದರೂ ಸದಸ್ಯರು ಒಪ್ಪದ ಸದಸ್ಯರು ತಕ್ಷಣ ಕರ್ತವ್ಯದಿಂದ ಬಿಡುಗಡೆಗೊಳ್ಳುವಂತೆ ಆಗ್ರಹಿಸಿ ಧಿಕ್ಕಾರಗಳನ್ನು ಕೂಗಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಸಭಾಂಗಣದಲ್ಲಿಯೇ ಕೆಲ ಹೊತ್ತು ಪ್ರತಿಭಟನೆ ನಡೆಸಿದರು.  ನಂತರ ಕಛೇರಿಗೆ ಬಂದ್ ಮಾಡಿ ಪ್ರತಿಭಟನೆ ತೀವ್ರಗೊಳಿಸಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ದೂರವಾಣಿ ಮೂಲಕ ಸದಸ್ಯರೊಂದಿಗೆ ಮಾತನಾಡಿ, ಕಾರ್ಯನಿರ್ವಹಣಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ಹಿಂಪಡೆದರು.
ತಾಲೂಕು ಕಾರ್ಯನಿರ್ವಹಣಾಧಿಕಾರಿ ಆಶಾ ಶ್ರೀಧರ್, ಉಪಾಧ್ಯಕ್ಷೆ ಸರೋಜಯಮ್ಮ ಹಾಜ್ಯನಾಯ್ಕ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಎಸ್. ರಮೇಶ್, ಸದಸ್ಯರಾದ ಧರ್ಮೇಗೌಡ, ಕೆ. ಮಂಜುನಾಥ್, ರುದ್ರಪ್ಪ, ತಿಪ್ಪೇಶ್‌ರಾವ್, ಎಂ.ಜಿ ದಿನೇಶ್, ಅಣ್ಣಾ ಮಲೈ, ಡಿ. ಲಕ್ಷ್ಮಿದೇವಿ, ನೇತ್ರಾಬಾಯಿ, ತುಂಗಮ್ಮ, ಸಿ. ಮಂಜುಳ, ಗೀತಾ ಜಗದೀಶ್, ಎಂ. ನಾಗರಾಜ, ಉಷಾಕಿರಣ, ಶಮಾಬಾನು, ಪ್ರೇಮ್‌ಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Tuesday, June 2, 2020

ನ್ಯಾಯಾಲಯದಲ್ಲಿ ಕಲಾಪಗಳು ಆರಂಭ : ದಿನಕ್ಕೆ ೨೦ ಪ್ರಕರಣ ವಿಚಾರಣೆ

ಭದ್ರಾವತಿ ಜೆಎಂಎಫ್‌ಸಿ ನ್ಯಾಯಾಲಯದ ಆವರಣದಲ್ಲಿ ವಾಹನಗಳನ್ನು ನಿಷೇಧಿಸಿರುವ ಹಿನ್ನಲೆಯಲ್ಲಿ ತಾಲೂಕು ಕಛೇರಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿರುವುದು.
ಭದ್ರಾವತಿ, ಜೂ. ೨: ನಗರದ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸೋಮವಾರದಿಂದ ಕಲಾಪಗಳು ನಡೆಯುತ್ತಿದ್ದು, ದಿನಕ್ಕೆ ೨೦ ಪ್ರಕರಣಗಳ ವಿಚಾರಣೆ ಮಾತ್ರ ನಡೆಯುತ್ತಿದೆ. 
ಸರ್ವೋಚ್ಛ ನ್ಯಾಯಾಲಯದ ಮಾರ್ಗಸೂಚಿಯಂತೆ ಕಲಾಪಗಳು ನಡೆಯುತ್ತಿದ್ದು, ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೨ ಗಂಟೆವರೆಗೆ ಹಾಗೂ ೨.೪೫ ರಿಂದ ಸಂಜೆ ೫ ಗಂಟೆವರೆಗೆ ಕಲಾಪಗಳು ನಡೆಯುತ್ತಿವೆ. ಕೇವಲ ನ್ಯಾಯಾಧೀಶರು, ನ್ಯಾಯವಾದಿಗಳು ಹಾಗೂ ಸಿಬ್ಬಂದಿಗಳಿಗೆ ಮಾತ್ರ ಪ್ರವೇಶ ನೀಡಲಾಗಿದೆ.  ಬೆಳಿಗ್ಗೆ ೧೦ ಪ್ರಕರಣಗಳು ಹಾಗೂ ಮಧ್ಯಾಹ್ನ ೧೦ ಪ್ರಕರಣಗಳು ಒಟ್ಟು ದಿನಕ್ಕೆ ೨೦ ಪ್ರಕರಣಗಳ ವಿಚಾರಣೆ ಮಾತ್ರ ನಡೆಸಲಾಗುತ್ತಿದೆ. ಉಳಿದ ಪ್ರಕರಣಗಳ ವಿಚಾರಣೆಗಳನ್ನು ಮುಂದೂಡಲಾಗುತ್ತಿದೆ. 
ಸಾರ್ವಜನಿಕರ ಪ್ರವೇಶ ಸಂಪೂರ್ಣ ನಿಷೇಧಿಸಲಾಗಿದೆ. ಕಕ್ಷಿದಾರರು ಸಹ ನೇರವಾಗಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿಲ್ಲ. ಅಲ್ಲದೆ ನ್ಯಾಯಾಲಯದ ಆವರಣದಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಇದರಿಂದಾಗಿ ತಾಲೂಕು ಕಛೇರಿ ರಸ್ತೆಯಲ್ಲಿ ವಾಹನ ದಟ್ಟಣೆ ಅಧಿಕವಾಗಿದ್ದು, ರಸ್ತೆಯ ಎರಡು ಬದಿ ವಾಹನಗಳ ನಿಲುಗಡೆ ಕಂಡು ಬರುತ್ತಿದೆ. ತಾಲೂಕು ಕಛೇರಿ ರಸ್ತೆ ಕಾಮಗಾರಿ ಕಳೆದ ಸುಮಾರು ೫-೬ ತಿಂಗಳಿನಿಂದ ನಡೆಯುತ್ತಿದ್ದು, ಇದರಿಂದಾಗಿ ಈ ರಸ್ತೆಯಲ್ಲಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ.