Thursday, June 18, 2020

ವಿವಿಧ ಸಂಘಟನೆಗಳಿಗೆ ಹುತಾತ್ಮ ವೀರ ಯೋಧರಿಗೆ ಪುಷ್ಪ ನಮನ, ಸಂತಾಪ

ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಉಂಟಾಗಿರುವ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಭದ್ರಾವತಿ ರಂಗಪ್ಪ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಗುರುವಾರ ಸಂತಾಪ ಸೂಚಿಸಿ ಮೌನಾಚರಣೆ ನಡೆಸಲಾಯಿತು. 
ಭದ್ರಾವತಿ, ಜೂ. ೧೮: ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಉಂಟಾಗಿರುವ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ನಗರದ ರಂಗಪ್ಪ ವೃತ್ತದಲ್ಲಿ ವಿವಿಧ ಸಂಘಟನೆಗಳಿಂದ ಗುರುವಾರ ಸಂತಾಪ ಸೂಚಿಸಿ ಮೌನಾಚರಣೆ ನಡೆಸಲಾಯಿತು. 
ಶ್ರದ್ದಾಂಜಲಿ ಸಭೆಯಲ್ಲಿ ಪಾಲ್ಗೊಂಡಿದ್ದ ಪ್ರಮುಖರು ಚೀನಾ ನಡೆಯನ್ನು ತೀವ್ರವಾಗಿ ಖಂಡಿಸಿ ಹುತಾತ್ಮ ವೀರ ಸೈನಿಕರ ಹೋರಾಟವನ್ನು ಶ್ಲಾಘಿಸಿದರು. ಭವಿಷ್ಯದಲ್ಲಿ ದೇಶ ಮತ್ತಷ್ಟು ಬಲಿಷ್ಠಗೊಳ್ಳುವ ಜೊತೆಗೆ ನಮ್ಮ ಸೈನಿಕರು ತಕ್ಕ ಉತ್ತರ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಯಾರು ಸಹ ಧೈರ್ಯ ಕಳೆದುಕೊಳ್ಳುವ ಅಗತ್ಯವಿಲ್ಲ ಎಂದರು.
ಆರಂಭದಲ್ಲಿ ಹುತಾತ್ಮ ವೀರ ಯೋಧರಿಗೆ ಪುಷ್ಮ ನಮನ ಸಲ್ಲಿಸಿ ಗೌರವ ಸೂಚಿಸಲಾಯಿತು. ಕೊನೆಯಲ್ಲಿ ಮೌನಾಚರಣೆ ನಡೆಸಿ ಸಂತಾಪ ಸೂಚಿಸಲಾಯಿತು. ಶಾಸಕ ಬಿ.ಕೆ ಸಂಗಮೇಶ್ವರ್, ತಹಸೀಲ್ದಾರ್ ಶಿವಕುಮಾರ್, ನಗರಸಭೆ ಪೌರಾಯುಕ್ತ ಮನೋಹರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ತಾಲೂಕು ಪಂಚಾಯಿತಿ ಅಧ್ಯಕ್ಷೆ ಆಶಾ ಶ್ರೀಧರ್, ಸದಸ್ಯರಾದ ತುಂಗಮ್ಮ, ಕೆ. ಮಂಜುನಾಥ್, ಬಿಜೆಪಿ ಪಕ್ಷದ ಮುಖಂಡರಾದ ವಿ. ಕದಿರೇಶ್, ಮಂಗೋಟೆ ರುದ್ರೇಶ್, ಎನ್. ವಿಶ್ವನಾಥರಾವ್, ಹೇಮಾವತಿ ವಿಶ್ವನಾಥ್, ರಾಮನಾಥಬರ್ಗೆ, ವಿಜಯ್, ನಕುಲ್‌ರೇವಣಕರ್, ಧನುಷ್ ಬೋಸ್ಲೆ, ಆನಂದ ಸಾಮಾಜಿಕ ಸೇವಾ ಸಂಸ್ಥೆಯ ಜಿ. ಆನಂದಕುಮಾರ್, ಸುನಿಲ್‌ಗಾಯಕ್‌ವಾಡ್, ವಿಶ್ವ ಹಿಂದೂಪರಿಷತ್ ಪ್ರಮುಖರಾದ ಹಾ. ರಾಮಪ್ಪ, ತಾಲೂಕು ವಕೀಲರ ಸಂಘದ ಅಧ್ಯಕ್ಷ ವಿ. ವೆಂಕಟೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

‘ಮಾಸ್ಕ್ ದಿನ’ : ಕೊರೋನಾ ನಿರ್ಮೂಲನೆಗೆ ಸಹಕರಿಸಲು ಶಾಸಕ ಸಂಗಮೇಶ್ವರ್ ಕರೆ

ಭದ್ರಾವತಿಯಲ್ಲಿ ಗುರುವಾರ ನಗರಸಭೆ ವತಿಯಿಂದ ರಂಗಪ್ಪ ವೃತ್ತದಲ್ಲಿ ‘ಮಾಸ್ಕ್ ದಿನ’ದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ ನೀಡಿದರು. 
ಭದ್ರಾವತಿ, ಜೂ. ೧೮: ಮಹಾಮಾರಿ ಕೊರೋನಾ ವೈರಸ್ ನಿರ್ಮೂಲನೆಗೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಕರೆ ನೀಡಿದರು. 
ಅವರು ಗುರುವಾರ ನಗರಸಭೆ ವತಿಯಿಂದ ರಂಗಪ್ಪ ವೃತ್ತದಲ್ಲಿ ‘ಮಾಸ್ಕ್ ದಿನ’ದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. 
ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಮಾಸ್ಕ್ ಸಹಕಾರಿಯಾಗಿದ್ದು, ಪ್ರತಿಯೊಬ್ಬರು ಮಾಸ್ಕ್ ಕಡ್ಡಾಯವಾಗಿ ಬಳಸುವ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಮನವಿ ಮಾಡಿದರು. 
ನಗರಸಭೆ ಪೌರಾಯುಕ್ತ ಮನೋಹರ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಹಸೀಲ್ದಾರ್ ಶಿವಕುಮಾರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ನಗರಸಭೆ ಪರಿಸರ ಇಂಜಿನಿಯರ್ ರುದ್ರೇಗೌಡ, ಪೊಲೀಸ್ ನಗರ ವೃತ್ತ ನಿರೀಕ್ಷಕ ನಂಜಪ್ಪ, ಕಂದಾಯಾಧಿಕಾರಿ ಪ್ರಶಾಂತಿ, ಶಿರಸ್ತೆದಾರ್ ಮಂಜಾನಾಯ್ಕ ಸೇರಿದಂತೆ ವಿವಿಧ ಇಲಾಖೆಗಳು ಅಧಿಕಾರಿಗಳು, ಮಹಿಳಾ ಒಕ್ಕೂಟಗಳ ಸದಸ್ಯರು ಇನ್ನಿತರರು ಉಪಸ್ಥಿತರಿದ್ದರು. 

Wednesday, June 17, 2020

ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ

ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿರುವ ಹಿನ್ನಲೆಯಲ್ಲಿ ಬೀದಿ ನಾಯಿಗಳನ್ನು ಹಿಡಿದು ಸಂತಾನ ಹರಣ ಶಸ್ತ್ರ ಚಿಕಿತ್ಸೆ ನೆರವೇರಿಸಲಾಗುತ್ತಿದೆ. 
ಭದ್ರಾವತಿ, ಜೂ. ೧೭: ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ನಗರಸಭೆ ಆಡಳಿತ ಮುಂದಾಗಿದ್ದು, ಈ ನಿಟ್ಟಿನಲ್ಲಿ ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆಗೆ ಬುಧವಾರ ಚಾಲನೆ ನೀಡಿದೆ. 
ಕಳೆದ ಕೆಲವು ದಿನಗಳ ಹಿಂದೆ ಬೀದಿ ನಾಯಿಗಳ ಹಾವಳಿ ಹೆಚ್ಚಾದ ಹಿನ್ನಲೆಯಲ್ಲಿ ಹುತ್ತಾಕಾಲೋನಿ ಮನೆಯೊಂದರಲ್ಲಿ ಸುಮಾರು ೭ ಕುರಿಗಳು ಬಲಿಯಾಗಿದ್ದವು. ಈ ಹಿನ್ನಲೆಯಲ್ಲಿ ಎಚ್ಚೆದ್ದುಕೊಂಡಿರುವ ನಗರಸಭೆ ಆಡಳಿತ ಹುತ್ತಾಕಾಲೋನಿ ಮತ್ತು ಜಿಂಕ್‌ಲೈನ್  ವ್ಯಾಪ್ತಿಯಲ್ಲಿ ಬೀದಿ ನಾಯಿಗಳನ್ನು ಹಿಡಿದು ಅವುಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಲಾಗುತ್ತಿದೆ. 
    ತರೀಕೆರೆ ರಸ್ತೆಯಲ್ಲಿರುವ ನೀರು ಶುದ್ಧೀಕರಣ ಘಟಕದಲ್ಲಿ ಸುಮಾರು ೧೫ ಬೀದಿ ನಾಯಿಗಳಿಗೆ ಸಂತಾನ ಹರಣ ಚಿಕಿತ್ಸೆ ನೆರವೇರಿಸಲಾಗಿದ್ದು, ಗುಣಮುಖಗೊಂಡ ನಂತರ ಪುನಃ ಬಿಡುಗಡೆ ಮಾಡಲಿದ್ದಾರೆ. 
ನಗರಸಭೆ ಪೌರಾಯುಕ್ತ ಮನೋಹರ್, ಪರಿಸರ ಅಭಿಯಂತರ ರುದ್ರೇಗೌಡ, ಶಸ್ತ್ರ ಚಿಕಿತ್ಸೆ ತಜ್ಞರು, ಸಿಬ್ಬಂದಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಲಡಾಖ್ ಗಡಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಸಂತಾಪ

ಬಿ.ಕೆ ಸಂಗಮೇಶ್ವರ್ 
ಭದ್ರಾವತಿ, ಜೂ. ೧೭: ಲಡಾಖ್ ಗಡಿಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಉಂಟಾಗಿರುವ ಸಂಘರ್ಷದಲ್ಲಿ ಹುತಾತ್ಮರಾದ ಭಾರತೀಯ ಯೋಧರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಸಂತಾಪ ಸೂಚಿಸಿದ್ದಾರೆ. 
ದೇಶವನ್ನು ಅತಿಕ್ರಮಣ ಮಾಡುತ್ತಿರುವ ಚೀನಾ ದೇಶದ ಸೈನಿಕರ ವಿರುದ್ಧ ನಮ್ಮ ದೇಶದ ಸೈನಿಕರು ಹೋರಾಟ ನಡೆಸಿ ಹುತಾತ್ಮರಾಗಿರುವುದು ನೋವಿನ ಸಂಗತಿಯಾಗಿದೆ. ವೀರ ಯೋಧರ ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲೆಂದು ಪ್ರಾರ್ಥಿಸುತ್ತೇನೆ. 
ಚೀನಾ ಆರ್ಥಿಕವಾಗಿ ಸದೃಢವಾಗಲು ಭಾರತ ದೇಶ ಕಾರಣವಾಗಿದ್ದು, ಚೀನಾದಲ್ಲಿ ತಯಾರಾದ ಬಹುತೇಕ ಉತ್ಪನ್ನಗಳು ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಾರಾಟವಾಗುತ್ತಿವೆ. ಇದೀಗ ದೇಶದ ವಿರುದ್ಧ ಚೀನಾ ತಿರುಗಿ ಬಿದ್ದಿರುವುದು ಖಂಡನೀಯವಾಗಿದ್ದು, ಚೀನಾ ವರ್ತನೆಯನ್ನು ತೀವ್ರವಾಗಿ ಖಂಡಿಸುವ ಜೊತೆಗೆ ತಕ್ಷಣದಿಂದ ದೇಶದ ಜನರು ಚೀನಾ ಉತ್ಪನ್ನಗಳನ್ನು ತಿರಸ್ಕರಿಸಬೇಕೆಂದು ಮನವಿ ಮಾಡಿದ್ದಾರೆ. 

ನಗರಸಭೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸಿದ್ದ : ಪೌರಾಯುಕ್ತ ಮನೋಹರ್

ತಾಲೂಕು ಆಡಳಿತ ಬೌಂಡರಿ ನಿಗದಿ ಕಾರ್ಯ ಕೈಗೊಳ್ಳಲು ಎಲ್ಲಾ ರೀತಿಯ ಸಹಕಾರ 

ಭದ್ರಾವತಿ ನಗರಸಭೆ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ನಗರಸಭೆ ಸಭಾಂಗಣದಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪೌರಾಯುಕ್ತ ಮನೋಹರ್ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಗರಸಭೆ ವ್ಯಾಪ್ತಿಯ ಕೆರೆಗಳ ಬೌಂಡರಿ ನಿಗದಿಗೊಳಿಸುವಂತೆ ಒತ್ತಾಯಿಸಿ ಸಲ್ಲಿಸಲಾದ ಮನವಿ ಸ್ವೀಕರಿಸಿದರು.  
ಭದ್ರಾವತಿ, ಜೂ. ೧೭: ನಗರಸಭೆ ವ್ಯಾಪ್ತಿಯಲ್ಲಿರುವ ಕೆರೆಗಳನ್ನು ಅಭಿವೃದ್ಧಿಪಡಿಸುವ ಸಂಬಂಧ ತಾಲೂಕು ಆಡಳಿತ ಬೌಂಡರಿ ನಿಗದಿ ಕಾರ್ಯ ಕೈಗೊಂಡಲ್ಲಿ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಪೌರಾಯುಕ್ತ ಮನೋಹರ್ ಭರವಸೆ ನೀಡಿದರು. 
ಅವರು ನಗರಸಭೆ ಸಭಾಂಗಣದಲ್ಲಿ ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ತಹಸೀಲ್ದಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪಾಲ್ಗೊಂಡು ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ವತಿಯಿಂದ ನಗರಸಭೆ ವ್ಯಾಪ್ತಿಯ ಕೆರೆಗಳ ಬೌಂಡರಿ ನಿಗದಿಗೊಳಿಸುವಂತೆ ಒತ್ತಾಯಿಸಿ ಸಲ್ಲಿಸಲಾದ ಮನವಿ ಸ್ವೀಕರಿಸಿ ಮಾತನಾಡಿದರು. 
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ದನಗಾಹಿಗಳಿಗೆ, ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಹಾಗೂ ಅಂತರ್ಜಲ ಚೇತನ ಯೋಜನೆಯಡಿ ಕೆರೆಗಳನ್ನು ಅಭಿವೃದ್ಧಿ ಪಡಿಸಿದಂತೆ ನಗರಸಭೆ ವ್ಯಾಪ್ತಿಯಲ್ಲಿರುವ ಸುಮಾರು ೭೫ಕ್ಕೂ ಅಧಿಕ ಕೆರೆಗಳನ್ನು ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ಇದಕ್ಕೂ ಮೊದಲು ತಾಲೂಕು ಆಡಳಿತ ಕೆರೆಗಳ ಬೌಂಡರಿ ನಿಗದಿಪಡಿಸಬೇಕಾಗಿದೆ ಎಂದರು. 
ತಕ್ಷಣ ತಾಲೂಕು ಆಡಳಿತ ಕೆರೆಗಳ ಬೌಂಡರಿ ನಿಗದಿ ಕಾರ್ಯ ಕೈಗೊಂಡಲ್ಲಿ ನಗರಸಭೆ ವತಿಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಅಲ್ಲದೆ ವಿವಿಧ ಇಲಾಖೆಗಳು ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು. 
ಶಿರಸ್ತೆದಾರ್ ಎಸ್.ಎಂ ಮಲ್ಲಿಕಾರ್ಜುನಯ್ಯ, ಸರ್ವೆ ಸೂಪರ್‌ವೈಸರ್ ಎ.ಎಲ್ ನಟರಾಜು, ಎಸ್‌ಡಿಎ ಪೂರ್ಣಿಮಾ, ಕೆಎನ್‌ಎನ್‌ಎಲ್ ನಂ.೩ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಆರ್.ಬಿ ಮಂಜುನಾಥ್, ಸಹಾಯಕ ಇಂಜಿನಿಯರ್ ಎನ್. ಉಮೇಶ್, ಶಿವಮೊಗ್ಗ ಎಂ.ಐ ಸಬ್‌ಡಿವಿಷನ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರಂಗನಾಥ,  ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ, ಸುವರ್ಣ ಮಹಿಳಾ ವೇದಿಕೆ ಛೇರ‍್ಮನ್ ಆರ್. ವೇಣುಗೋಪಾಲ್, ರಮಾ ವೆಂಕಟೇಶ್, ಶೈಲಜಾ ರಾಮಕೃಷ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Tuesday, June 16, 2020

ವಿವಿಧ ಸಂಘ-ಸಂಸ್ಥೆಗಳಿಂದ ಸಂಸದರಿಗೆ ಸನ್ಮಾನ

ಭದ್ರಾವತಿಯಲ್ಲಿ ಮಂಗಳವಾರ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಆರ್ಯ ವೈಶ್ಯ ಸಮಾಜದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು. 
ಭದ್ರಾವತಿ, ಜೂ. ೧೬: ನಗರದಲ್ಲಿ ವಿವಿಧ ಸಂಘ-ಸಂಸ್ಥೆಗಳಿಂದ ಮಂಗಳವಾರ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು. 
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಸಂಸದ ಬಿ.ವೈ ರಾಘವೇಂದ್ರರವರು ಆರ್ಯವೈಶ್ಯ ಸಮಾಜದ ಮೇಲೆ ಹೊಂದಿರುವ ವಿಶ್ವಾಸಕ್ಕೆ ನಗರದ ಆರ್ಯ ವೈಶ್ಯ ಸಮಾಜ ಬಂಧುಗಳು ಕೃತಜ್ಞತೆ ಸಲ್ಲಿಸುವ ಜೊತೆಗೆ ಸಂಸದ ಬಿ.ವೈ ರಾಘವೇಂದ್ರ ಅವರನ್ನು ಸನ್ಮಾನಿಸಿ ಅಭಿನಂದಿಸಿದರು. 
ಆರ್ಯ ವೈಶ್ಯ ಸಮಾಜ ಅಧ್ಯಕ್ಷ ಬಿ.ಆರ್  ಬದರಿನಾರಾಯಣ, ಕಾರ್ಯದರ್ಶಿ ಸತೀಶ್, ಖಜಾಂಚಿ ರಾಘವೇಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಸತ್ಯಲಕ್ಷ್ಮಿ, ವನಿತಾ, ಸ್ವರೂಪ ರಾಣಿ, ಸಮಾಜದ ಮಾಜಿ ಅಧ್ಯಕ್ಷ ಕಾ.ರಾ ನಾಗರಾಜ್, ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
ಭದ್ರಾವತಿ ಮಂಗಳವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಬಿ.ಕೆ ಸಂಗಮೇಶ್ವರ್, ಕೆ.ಬಿ ಅಶೋಕನಾಯ್ಕ ಅವರನ್ನು ಕೇಸರಿ ಪೇಟದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು. 
      ಕೇಸರಿ ಪೇಟದೊಂದಿಗೆ ಸನ್ಮಾನ: 
ತಾಲೂಕು ಪಂಚಾಯಿತಿಗೆ ಮಂಗಳವಾರ ಆಗಮಿಸಿದ್ದ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಕೇಸರಿ ಪೇಟದೊಂದಿಗೆ ಸದಸ್ಯ ತಿಪ್ಪೇಶ್‌ರಾವ್ ಸನ್ಮಾನಿಸಿ ಗೌರವಿಸಿದರು. 
ಅಲ್ಲದೆ ಶಾಸಕರಾದ ಬಿ.ಕೆ ಸಂಗಮೇಶ್ವರ್ ಮತ್ತು ಕೆ.ಬಿ ಅಶೋಕನಾಯ್ಕ ಅವರನ್ನು ಸಹ ಸನ್ಮಾನಸಿ ಗೌರವಿಸಿದ್ದು, ಎಲ್ಲರ ಗಮನ ಸೆಳೆಯಿತು. 
ತಹಸೀಲ್ದಾರ್ ಶಿವಕುಮಾರ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ಆಶಾ ಶ್ರೀಧರ್, ಉಪಾಧ್ಯಕ್ಷೆ ಸರೋಜಮ್ಮ ಹಾಜ್ಯನಾಯ್ಕ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ರಮೇಶ್, ಸದಸ್ಯರಾದ ಧರ್ಮೇಗೌಡ, ಕೆ. ಮಂಜುನಾಥ್, ರುದ್ರಪ್ಪ, ಎಂ.ಜಿ ದಿನೇಶ್, ಅಣ್ಣಾ ಮಲೈ, ಡಿ. ಲಕ್ಷ್ಮಿದೇವಿ, ನೇತ್ರಾಬಾಯಿ, ತುಂಗಮ್ಮ, ಸಿ. ಮಂಜುಳ, ಗೀತಾ ಜಗದೀಶ್, ಎಂ. ನಾಗರಾಜ, ಉಷಾಕಿರಣ, ಶಮಾಬಾನು, ಪ್ರೇಮ್‌ಕುಮಾರ್, ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

೨೨೦ ಎಂಪಿಎಂ ಕಾರ್ಮಿಕರಿಗೆ ಉದ್ಯೋಗದ ಭರವಸೆ

ಭದ್ರಾವತಿಯಲ್ಲಿ ಮಂಗಳವಾರ ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘದ ಅಧ್ಯಕ್ಷ ಎಸ್. ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಮಿಕರು ಸಂಸದ ಬಿ.ವೈ. ರಾಘವೇಂದ್ರ ಅವರನ್ನು ತಾಲೂಕು ಪಂಚಾಯಿತಿ ಆವರಣದಲ್ಲಿ ಭೇಟಿ ಮಾಡಿ ತಮ್ಮ ಅಳಲು ವ್ಯಕ್ತಪಡಿಸಿದರು. 
ಭದ್ರಾವತಿ, ಜೂ. ೧೬: ನಗರದ ರಾಜ್ಯ ಸರ್ಕಾರಿ ಸ್ವಾಮ್ಯದ ಮೈಸೂರು ಕಾಗದ ಕಾರ್ಖಾನೆಯಲ್ಲಿ ಸ್ವಯಂ ನಿವೃತ್ತಿ ಪಡೆಯದೆ ಸೇವೆ ಸಲ್ಲಿಸುತ್ತಿರುವ ಸುಮಾರು ೨೨೦ ಕಾಯಂ ಕಾರ್ಮಿಕರಿಗೆ ಶಾಶ್ವತ ಭದ್ರತೆ ಕಲ್ಪಿಸಿಕೊಡುವಂತೆ ಸಂಸದ ಬಿ.ವೈ ರಾಘವೇಂದ್ರ ಅವರಿಗೆ ಮಂಗಳವಾರ ಒತ್ತಾಯಿಸಲಾಯಿತು. 
ಶ್ರೀ ಮೈಸೂರು ಕಾಗದ ಕಾರ್ಖಾನೆ ನೌಕರರ ಸಂಘದ ಅಧ್ಯಕ್ಷ ಎಸ್. ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಮಿಕರು ತಾಲೂಕು ಪಂಚಾಯಿತಿ ಆವರಣದಲ್ಲಿ ಸಂಸದರನ್ನು ಭೇಟಿ ಮಾಡಿ, ಪ್ರಸ್ತುತ ಕಾರ್ಖಾನೆಯಲ್ಲಿ ಹೆಚ್ಚಿನ ಸೇವಾವಧಿ ಹೊಂದಿರುವ ಸುಮಾರು ೨೨೦ ಕಾರ್ಮಿಕರು ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರ ಕಾರ್ಖಾನೆಯನ್ನು ಪುನಃ ಆರಂಭಿಸುವ ಭರವಸೆ ನೀಡಿದೆ. ಆದರೆ ೨೨೦ ಕಾರ್ಮಿಕರಿಗೆ ಉದ್ಯೋಗದ ಯಾವುದೇ ಭದ್ರತೆ ಇಲ್ಲವಾಗಿದೆ. ಈ ಕುರಿತು ಕಾರ್ಖಾನೆ ವ್ಯವಸ್ಥಾಪಕರನ್ನು ಪ್ರಶ್ನಿಸಿದಾಗ ಅವರಿಂದ ಉದ್ಯೋಗ ಭದ್ರತೆ ನೀಡುವ ಯಾವುದೇ ಭರವಸೆ ವ್ಯಕ್ತವಾಗಿಲ್ಲ. ಇದರಿಂದಾಗಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. 
ಇದಕ್ಕೆ ಪ್ರತಿಕ್ರಿಯಿಸಿದ ಸಂಸದರು, ಕಾರ್ಖಾನೆಯನ್ನು ಉಳಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಆಸಕ್ತಿ ತೋರಿಸಿರುವಾಗ ೨೨೦ ಕಾರ್ಮಿಕರನ್ನು ಸಹ ಉಳಿಸಿಕೊಳ್ಳಲಾಗುವುದು. ಈ ಬಗ್ಗೆ ಯಾವುದೇ ಆತಂಕ ಬೇಡ. ಸದ್ಯದಲ್ಲಿಯೇ ಈ ಸಂಬಂಧ ಸಭೆ ಕರೆಯುವುದಾಗಿ ಭರವಸೆ ನೀಡಿದರು.