ಶನಿವಾರ, ಜೂನ್ 27, 2020

ಆನಂದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಬೃಹತ್ ರಕ್ತದಾನ ಶಿಬಿರ : ೬೯ ಮಂದಿ ರಕ್ತದಾನ

ಭದ್ರಾವತಿ ಹೊಸಮನೆ ಮುಖ್ಯ ರಸ್ತೆ, ಸಂತೆ ಮೈದಾನ ಬಳಿ ಇರುವ ಆನಂದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಶನಿವಾರ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು. 
ಭದ್ರಾವತಿ, ಜೂ. ೨೭: ನಗರದ ಹೊಸಮನೆ ಮುಖ್ಯ ರಸ್ತೆ, ಸಂತೆ ಮೈದಾನ ಬಳಿ ಇರುವ ಆನಂದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ೬೯ ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು.
ಶಿಬಿರವನ್ನು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಎಂ.ಬಿ ಹರಿಕೃಷ್ಣ  ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿ ಕೆ. ಪ್ರಸಾದ್ ಮತ್ತು ಸಂಸ್ಥೆಯ ಅಧ್ಯಕ್ಷ ಜಿ. ಅನಂದಕುಮಾರ್ ಉದ್ಘಾಟಿಸಿದರು. 
ಬಿಜೆಪಿ ಪಕ್ಷದ ಹಿರಿಯ ಮುಖಂಡ ವಿ. ಕದಿರೇಶ್, ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಸ್.ದತ್ತಾತ್ರಿ, ಮಂಗೋಟೆ ರುದ್ರೇಶ್, ಶಿವಮೊಗ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್, ನಗರಸಭಾ ಸದಸ್ಯರಾದ ಮಣಿ, ಭೈರಪ್ಪ ಗೌಡ, ಸುನಿಲ್ ಗಾಯಕ್ವಾಡ್ ಹಾಗೂ ಸಂಸ್ಥೆಯ ಪದಾಧಿಕಾರಿಗಳಾದ ಬಿ.ಎಸ್ ಶ್ರೀನಾಥ್, ಕೆ ಕುಮಾರ್, ಅರುಣ್, ಮಂಜುನಾಥ್ ಕೊಹ್ಲಿ, ಆದರ್ಶ, ಶಿವು ಮದಕರಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ಹೊಸಮನೆ ಮುಖ್ಯ ರಸ್ತೆ, ಸಂತೆ ಮೈದಾನ ಬಳಿ ಇರುವ ಆನಂದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ಬೃಹತ್ ರಕ್ತದಾನ ಶಿಬಿರದಲ್ಲಿ ಕೊರೋನ ವಾರಿಯರ್ಸ್ ಗಳಾದ ಪೌರ ಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಲಾಯಿತು.
ರಾಜ್ಯ ಸರ್ಕಾರದಿಂದ ನಗರದ ನ್ಯಾಯಾಲಯಕ್ಕೆ ಎಜಿಪಿಯಾಗಿ ನಿಯುಕ್ತಿಗೊಂಡ ಜೆ. ಮೋಹನ್‌ರವರನ್ನು  ಹಾಗೂ ಕೊರೋನ ವಾರಿಯರ್ಸ್ ಗಳಾದ ಪೌರ ಕಾರ್ಮಿಕರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕೆಂಪೇಗೌಡರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿಯಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಪಾಲ್ಗೊಂಡು ಮಾತನಾಡಿದರು. 
ಭದ್ರಾವತಿ, ಜೂ. ೨೭: ನಾಡಪ್ರಭು ಕೆಂಪೇಗೌಡರು ಎಲ್ಲಾ ಸಮುದಾಯಕ್ಕೂ ಮಾದರಿ ವ್ಯಕ್ತಿಯಾಗಿದ್ದು, ಅವರ ಆದರ್ಶ ಗುಣಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕೆಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 
ಸಮಾಜದ ಎಲ್ಲಾ ಆದರ್ಶ ವ್ಯಕ್ತಿಗಳ ವಿಚಾರಧಾರೆಗಳನ್ನು ಅರಿತುಕೊಂಡು ಮುನ್ನಡೆದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಒಕ್ಕಲಿಗರ ಸಮುದಾಯ ತನ್ನದೇ ಆದ ಕೊಡುಗೆಯನ್ನು ಈ ನಾಡಿಗೆ ನೀಡಿದೆ. ನಗರದಲ್ಲಿ ಈ ಸಮುದಾಯಕ್ಕೆ ಅಗತ್ಯವಿರುವ ಸಮುದಾಯ ಭವನ ನಿರ್ಮಾಣಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ಬದ್ಧ ಎಂದರು. 
ಚುಂಚಾದ್ರಿ ಮಹಿಳಾ ವೇದಿಕೆ ಮಾಜಿ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರು ಹಲವು ಯೋಜನೆಗಳ ರೂವಾರಿಗಳಾಗಿದ್ದಾರೆ. ಅವರು ಇಂದಿಗೂ ಸಮಾಜಕ್ಕೆ ಸ್ಪೂರ್ತಿದಾಯಕ ಆದರ್ಶ ವ್ಯಕ್ತಿಗಳಾಗಿದ್ದು, ಇಂದಿನ ಯುವ ಪೀಳಿಗೆ ಅವರ ದಾರಿಯಲ್ಲಿ ಸಾಗುವಂತಾಗಬೇಕೆಂದರು. 
ಒಕ್ಕಲಿಗರ ಸಂಘದ ಕಾರ್ಯದರ್ಶಿ ಪ್ರಶಾಂತ್ ಮಾತನಾಡಿ,  ಒಕ್ಕಲಿಗರು ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಸಮುದಾಯ ಭವನದ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಶಾಸಕರು ಸರ್ಕಾರದಿಂದ ಜಾಗ ಮಂಜೂರಾತಿ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು. 
ತಹಸೀಲ್ದಾರ್ ಶಿವಕುಮಾರ್, ಒಕ್ಕಲಿಗರ ಸಂಘದ ಅಧ್ಯಕ್ಷ ರಮೇಶ್ ರಾಮನಗರ ಸೇರಿದಂತೆ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ತಾಲೂಕು ಪಂಚಾಯಿತಿ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಡಾ. ಕೊಟ್ರೇಶಪ್ಪ, ಕಂದಾಯಾಧಿಕಾರಿ ಪ್ರಶಾಂತ್, ಒಕ್ಕಲಿಗ ಮಹಿಳಾ ವೇದಿಕೆ ಅಧ್ಯಕ್ಷೆ ಅನ್ನಪೂರ್ಣ ಸತೀಶ್, ಸಮಾಜದ ಪ್ರಮುಖರಾದ ಎ.ಟಿ ರವಿ, ಲೋಹಿತಾ ನಂಜಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.   


ಟಿ. ವಿಶ್ವನಾಥ ನಿಧನ

ಟಿ. ವಿಶ್ವನಾಥ
ಭದ್ರಾವತಿ, ಜೂ. ೨೭: ನಗರದ ಭದ್ರಾ ಕಾಲೋನಿ ನಿವಾಸಿ ಟಿ. ವಿಶ್ವನಾಥ(೬೦) ಶುಕ್ರವಾರ ರಾತ್ರಿ ನಿಧನ ಹೊಂದಿದರು.
ಏಕಲವ್ಯ ಪ್ರಶಸ್ತಿ ವಿಜೇತೆ, ಕ್ರೀಡಾಪಟು ನೇತ್ರಾವತಿ ಸೇರಿದಂತೆ ಇಬ್ಬರು ಪುತ್ರಿ, ಓರ್ವ ಪುತ್ರ, ಇಬ್ಬರು ಸಹೋದರಿ ಹಾಗೂ ಬಂಧು-ಬಳಗವನ್ನು ಬಿಟ್ಟಗಲಿದ್ದಾರೆ. ಇವರ ಅಂತ್ಯಸಂಸ್ಕಾರ ಭದ್ರಾ ಕಾಲೋನಿ ತೋಟದಲ್ಲಿ ಶನಿವಾರ ನೆರವೇರಿತು.

ಶುಕ್ರವಾರ, ಜೂನ್ 26, 2020

ಅಗರದಹಳ್ಳಿ ಕೆರೆಗಳ ಅಳತೆ ಕಾರ್ಯ ತಕ್ಷಣ ಸ್ಥಗಿತಗೊಳಿಸಿ

ತಹಸೀಲ್ದಾರ್ ವಿರುದ್ಧ ಡಿಎಸ್‌ಎಸ್ ಪ್ರತಿಭಟನೆ 

ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಹೋಬಳಿ, ಅಗರದಹಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತ ವತಿಯಿಂದ ಕೈಗೊಂಡಿರುವ ಕೆರೆಗಳ ಅಳತೆ ಕಾರ್ಯ ತಕ್ಷಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅಗರದಹಳ್ಳಿ ಕ್ಯಾಂಪ್ ಕೆರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. 
ಭದ್ರಾವತಿ, ಜೂ. ೨೬: ತಾಲೂಕಿನ ಹೊಳೆಹೊನ್ನೂರು ಹೋಬಳಿ, ಅಗರದಹಳ್ಳಿ ಗ್ರಾಮದಲ್ಲಿ ತಾಲೂಕು ಆಡಳಿತ ವತಿಯಿಂದ ಕೈಗೊಂಡಿರುವ ಕೆರೆಗಳ ಅಳತೆ ಕಾರ್ಯ ತಕ್ಷಣ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಅಗರದಹಳ್ಳಿ ಕ್ಯಾಂಪ್ ಕೆರೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು. 
ಗ್ರಾಮದಲ್ಲಿ ಸರ್ವೆ ನಂ.೩, ೪೯/ಬಿ, ೫೨, ೫೩, ೫೪, ೫೫, ೫೬, ೬೪, ೬೫ ಮತ್ತು ೭೨ರಲ್ಲಿ ಒಟ್ಟು ೯೮ ಎಕರೆ ವಿಸ್ತೀರ್ಣದಲ್ಲಿ ೩ ಕೆರೆಗಳಿದ್ದು, ಈ ಪೈಕಿ ಪರಿಶಿಷ್ಟ ಜಾತಿ, ಪಂಗಡದ ಬಡ ಕುಟುಂಬಗಳು ವಾಸಿಸುತ್ತಿರುವ ಸರ್ವೆ ನಂ. ೪೯/ಬಿ, ೫೨/೨, ೫೫, ೫೬/ಎ ಮತ್ತು ೬೯ರ ವ್ಯಾಪ್ತಿಯ ಕೆರೆಗಳನ್ನು ಮಾತ್ರ ಅಳತೆ ಮಾಡಲಾಗುತ್ತಿದೆ. ಹಣವಂತರಿಗೆ, ಬಲಾಢ್ಯರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಹಾಗೂ ಪರಿಶಿಷ್ಟ ಜಾತಿ, ಪಂಗಡದ ಬಡ ಕುಟುಂಬಗಳನ್ನು ಒಕ್ಕಲೆಬ್ಬಿಸಲು ತಾಲೂಕು ಆಡಳಿತ ಅಳತೆ ಕಾರ್ಯ ಕೈಗೊಳ್ಳುತ್ತಿದೆ ಎಂದು ಆರೋಪಿಸಲಾಯಿತು. 
ತಹಸೀಲ್ದಾರ್‌ರವರು ಜಿಲ್ಲಾಧಿಕಾರಿಗಳ ಮೌಖಿಕ ಆದೇಶದ ಮೇರೆಗೆ ಅಳತೆ ಕಾರ್ಯ ಕೈಗೊಳ್ಳುತ್ತಿರುವುದಾಗಿ ದಲಿತ ಸಂಘರ್ಷ ಸಮಿತಿಗೆ ತಿಳಿಸಿದ್ದು, ಆದರೆ ಜಿಲ್ಲಾಧಿಕಾರಿಗಳು ಯಾವುದೇ ಕೆಲಸ ಕೈಗೊಳ್ಳುವಾಗ ಲಿಖಿತ ಆದೇಶ ನೀಡುತ್ತಾರೆ. ಇದನ್ನು ಗಮನಿಸಿದಾಗ ತಹಸೀಲ್ದಾರ್‌ರವರು ಯಾವುದೋ ಒತ್ತಡಕ್ಕೆ ಮಣಿದು ಜಿಲ್ಲಾಧಿಕಾರಿಗಳ ಹೆಸರಿಗೆ ಮಸಿ ಬಳಿಯಲು ಮುಂದಾಗಿದ್ದಾರೆ. ಈ ಹಿನ್ನಲೆಯಲ್ಲಿ ಅಳತೆ ಕಾರ್ಯ ಕೈಗೊಳ್ಳುವುದಾದರೆ ಒಟ್ಟು ೯೮ ಎಕರೆ ಕೆರೆ ಅಳತೆ ಮಾಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಲಾಯಿತು. 
ತಾಲೂಕು ಸಂಚಾಲಕ ವಿ. ವಿನೋದ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಜಿಲ್ಲಾ ಸಂಘಟನಾ ಸಂಚಾಲಕರಾದ ಏಳುಕೋಟಿ, ಏಳುಮಲೈ, ಸುವರ್ಣಮ್ಮ, ತಾಲೂಕು ಸಂಘಟನಾ ಸಂಚಾಲಕರಾದ ವಸಂತಕುಮಾರ್, ಬಾಷ, ರವಿನಾಯ್ಕ, ಗುಣಶೇಖರ್, ಸುಧಾ, ಮಂಜಪ್ಪ, ಸೀನಾ, ಬಾಲು, ಮಲ್ಲೇಶ್, ಹರೀಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ : ಪೌರಾಯುಕ್ತರಿಗೆ ಮನವಿ

ಭದ್ರಾವತಿ ನಗರಸಭೆ ವ್ಯಾಪ್ತಿಯ ವೇಲುರ್ ಶೆಡ್‌ನಲ್ಲಿರುವ ೨ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಒತ್ತಾಯಿಸಿ ‘ಮಹಿಳಾ ಮುನ್ನಡೆ’ ವತಿಯಿಂದ ಶುಕ್ರವಾರ ಪೌರಾಯುಕ್ತ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜೂ. ೨೬: ನಗರಸಭೆ ವ್ಯಾಪ್ತಿಯ ವೇಲುರ್ ಶೆಡ್‌ನಲ್ಲಿರುವ ೨ ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಒತ್ತಾಯಿಸಿ ‘ಮಹಿಳಾ ಮುನ್ನಡೆ’ ವತಿಯಿಂದ ಶುಕ್ರವಾರ ಪೌರಾಯುಕ್ತ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು. 
ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್ ಇಲ್ಲದೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಈ ಹಿನ್ನಲೆಯಲ್ಲಿ ತಕ್ಷಣ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡುವಂತೆ ಸ್ಥಳೀಯ ನಿವಾಸಿಗಳ ಸಹಿ ಸಂಗ್ರಹಿಸಿ ಒತ್ತಾಯಿಸಲಾಗಿದೆ.
ಮನವಿ ಸ್ವೀಕರಿಸಿದ ಪೌರಾಯುಕ್ತರು ಮುಂದಿನ ಒಂದು ವಾರದೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡುವುದಾಗಿ ಭರವಸೆ ನೀಡಿದರು. ಮಹಿಳಾ ಮುನ್ನಡೆ ತಾಲೂಕು ಸಂಚಾಲಕಿ ಎನ್. ನಾಗವೇಣಿ  ಸದಸ್ಯರಾದ ಗೌರಿ, ಲಕ್ಷ್ಮಿ ಇನ್ನಿತರರು ಉಪಸ್ಥಿತರಿದ್ದರು.

ಕುವೆಂಪು ವಿಶ್ವ ವಿದ್ಯಾಲಯದಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಉದ್ಯೋಗ

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರತಿಭಟನೆ, ಮನವಿ 

ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಅಕ್ರಮವಾಗಿ ಸರ್ಕಾರಿ ಉದ್ಯೋಗ ಪಡೆದು ಸರ್ಕಾರಕ್ಕೆ ವಂಚಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಭದ್ರಾವತಿ ತಾಲೂಕಿನ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾಲಯದ ಮುಂಭಾಗ ಶುಕ್ರವಾರ ಜೈಭೀಮ್ ಕನ್ನಡ ಜಾಗೃತಿ ವೇದಿಕೆ ಮತ್ತು ಎಸ್‌ಸಿ/ಎಸ್‌ಟಿ ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. 
ಭದ್ರಾವತಿ, ಜೂ. ೨೬:  ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿ ಅಕ್ರಮವಾಗಿ ಸರ್ಕಾರಿ ಉದ್ಯೋಗ ಪಡೆದು ಸರ್ಕಾರಕ್ಕೆ ವಂಚಿಸಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ತಾಲೂಕಿನ ಶಂಕರಘಟ್ಟದ ಕುವೆಂಪು ವಿಶ್ವ ವಿದ್ಯಾಲಯದ ಮುಂಭಾಗ ಶುಕ್ರವಾರ ಜೈಭೀಮ್ ಕನ್ನಡ ಜಾಗೃತಿ ವೇದಿಕೆ ಮತ್ತು ಎಸ್‌ಸಿ/ಎಸ್‌ಟಿ ಅಸಂಘಟಿತ ಕಾರ್ಮಿಕರ ಅಭಿವೃದ್ಧಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಕುಲಪತಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. 
ವಿಶ್ವ ವಿದ್ಯಾಲಯದಲ್ಲಿ ಸಹಾಯಕ ಕುಲ ಸಚಿವರಾಗಿರುವ ಡಿ.ಎ ಗಾಯತ್ರಿ ಹಾಗೂ ಎಂ. ಸೀತಾರಾಮ ಹಾಗೂ ರಾಜ್ಯಶಾಸ್ತ್ರದ ವಿಭಾಗದ ಎ. ಷಣ್ಮುಗಂ ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿರುವುದು ಇದೀಗ ಸಾಬೀತಾಗಿದೆ. ಈ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ನ್ಯಾಯಾಲಯ ಆದೇಶದಿಂದ ಛೀಮಾರಿ ಹಾಕಿದಂತಾಗಿದೆ. ಆದರೆ ಇಂದಿನ ಕುಲಪತಿಗಳಾಗಿರುವ ಪ್ರೊ. ಬಿ.ಪಿ ವೀರಭದ್ರಪ್ಪ ತಪ್ಪಿತಸ್ಥರ ವಿರುದ್ಧ ಅಮಾನತ್ತು ಅಥವಾ ಕಾನೂನು ರೀತಿ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯತನ ವಹಿಸಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ನ್ಯಾಯಾಲಯದ ಆದೇಶವನ್ನು ಧಿಕ್ಕರಿಸಿದ್ದಾರೆಂದು ಆರೋಪಿಸಲಾಯಿತು. 
ಈ ಹಿಂದೆ ವಿಶ್ವ ವಿದ್ಯಾಲಯದಲ್ಲಿ ಪರೀಕ್ಷಾಂಗ ಕುಲಸಚಿವರಾಗಿದ್ದ ಪ್ರೊ. ಬೋಜನಾಯ್ಕರವರು ೧.೨೭ ಕೋ. ರು. ನೇರವಾಗಿ ಲಪಟಾಯಿಸಿದ್ದು, ಈ ಸಂಬಂಧ ಅಗತ್ಯ ದಾಖಲೆಯೊಂದಿಗೆ ಪ್ರಶ್ನಿಸಿ ದೂರು ಸಲ್ಲಿಸಿದ್ದರೂ ಸಹ ಪರಿಶೀಲಿಸದೆ, ಯಾವುದೇ ಕಾನೂನು ಕ್ರಮ ಕೈಗೊಳ್ಳದೆ ಪ್ರಕರಣ ಮುಚ್ಚಿ ಹಾಕುವ ಹುನ್ನಾರ ನಡೆಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಯಿತು. 
ತಕ್ಷಣ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ನ್ಯಾಯ ಒದಗಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವ ಜೊತೆಗೆ ನ್ಯಾಯಾಲಯದಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಲಾಯಿತು. 
ವೇದಿಕೆ ರಾಜ್ಯಾಧ್ಯಕ್ಷ ಎಸ್.ಎಸ್ ಮಂಜುನಾಥ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಗೌರವಾಧ್ಯಕ್ಷ ತಿಮ್ಲಾಪುರ ಲೋಕೇಶ್, ರಾಜ್ಯ ಉಪಾಧ್ಯಕ್ಷ ಎನ್.ಪಿ ವೆಂಕಟೇಶ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎ.ಕೆ ಹನುಮಂತಪ್ಪ ಮಂಗೋಟೆ ಮತ್ತು ಸಂಘಟನಾ ಕಾರ್ಯದರ್ಶಿ ಈ. ರಮೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. 

೫೦ ಲಕ್ಷ ರು. ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಭೂಮಿ ಪೂಜೆ

ಭದ್ರಾವತಿ ತಾಲೂಕಿನ ಕಾಚಗೊಂಡನಹಳ್ಳಿ ಹಾಗೂ ವಿಜಯನಗರ ಗ್ರಾಮದಲ್ಲಿ ಸುಮಾರು ೫೦ ಲಕ್ಷ ರು. ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು. 
ಭದ್ರಾವತಿ, ಜೂ. ೨೬: ತಾಲೂಕಿನ ಕಾಚಗೊಂಡನಹಳ್ಳಿ ಹಾಗೂ ವಿಜಯನಗರ ಗ್ರಾಮದಲ್ಲಿ ಸುಮಾರು ೫೦ ಲಕ್ಷ ರು. ವೆಚ್ಚದ ಬಾಕ್ಸ್ ಚರಂಡಿ ಕಾಮಗಾರಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಭೂಮಿ ಪೂಜೆ ನೆರವೇರಿಸಿದರು. 
ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರವರ ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಯುತ್ತಿದ್ದು,  ಸಂಸದರ ನಿಧಿಯಿಂದ ಬಿಡುಗಡೆಯಾದ ಅನುದಾನದಲ್ಲಿ ಮಂಜೂರಾತಿಯಾದ ರಸ್ತೆ, ಚರಂಡಿ ಕಾಮಗಾರಿಗಳು ಈಗಾಗಲೇ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಪ್ರಗತಿಯಲ್ಲಿವೆ. 
ಹಿರಿಯ ನಗರಸಭಾ ಸದಸ್ಯ ವಿ. ಕದಿರೇಶ್, ಗ್ರಾಮಪಂಚಾಯತಿ ಅಧ್ಯಕ್ಷ ಕೃಷ್ಣಮೂರ್ತಿ, ಸದಸ್ಯರಾದ ಜಯರಾಮ್, ಮಂಜು, ಮುಖಂಡರಾದ ಸುದೀಪ್, ಗೋಪಾಲ್, ರಮೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.