Saturday, July 18, 2020

ಪಿಯುಸಿ : ಬಿಜಿಎಸ್ ಪದವಿ ಪೂರ್ವ ಕಾಲೇಜು ಉತ್ತಮ ಫಲಿತಾಂಶ

ಬಡ ವಿದ್ಯಾರ್ಥಿನಿ ಜಿ. ಹರ್ಷಿತ ತಾಲೂಕಿಗೆ ಪ್ರಥಮ, 

ರಾಜ್ಯಕ್ಕೆ ೬ನೇ ರ‍್ಯಾಂಕ್  

ಭದ್ರಾವತಿ ಬೈಪಾಸ್ ರಸ್ತೆಯಲ್ಲಿರುವ ಬಿಜಿಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಜಿ. ಹರ್ಷಿತ ಹೆಚ್ಚಿನ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ ಹಿನ್ನಲೆಯಲ್ಲಿ ಆಕೆಗೆ ಕಾಲೇಜಿನ ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಸಿಹಿ ತಿನಿಸಿ ಅಭಿನಂದಿಸಿದರು. 
ಭದ್ರಾವತಿ, ಜು. ೧೮: ನಗರದ ಬೈಪಾಸ್ ರಸ್ತೆಯಲ್ಲಿರುವ ಬಿಜಿಎಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. 
ವಾಣಿಜ್ಯ ವಿಭಾಗದಲ್ಲಿ ೫೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ ೧೧ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ.  ೩೪ ವಿದ್ಯಾರ್ಥಿಗಳು ಪ್ರಥಮ, ೧೧ ವಿದ್ಯಾರ್ಥಿಗಳು ದ್ವಿತೀಯ ಹಾಗೂ ಓರ್ವ ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.  ವಿಜ್ಞಾನ ವಿಭಾಗದಲ್ಲಿ ೮೦ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ ೧೨ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಪಡೆದುಕೊಂಡಿದ್ದಾರೆ. ಉಳಿಂದಂತೆ ೫೨ ಪ್ರಥಮ ಮತ್ತು ೧೧ ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. 
ಬಡತನದಲ್ಲಿ ಅರಳಿದ ವಿದ್ಯಾರ್ಥಿನಿ ಜಿ.ಹರ್ಷಿತ: 
ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಜಿ. ಹರ್ಷಿತ ೫೮೯ ಅಂಕಗಳೊಂದಿಗೆ ಶೇ.೯೮ ಫಲಿತಾಂಶದೊಂದಿಗೆ ತಾಲೂಕಿಗೆ ಪ್ರಥಮ ಸ್ಥಾನ, ರಾಜ್ಯಕ್ಕೆ ೬ನೇ ರ‍್ಯಾಂಕ್ ಪಡೆದುಕೊಂಡಿದ್ದಾಳೆ. ಈ ವಿದ್ಯಾರ್ಥಿನಿ ಸಾಧನೆ ಇತರರಿಗೆ ಮಾದರಿಯಾಗಿದೆ. 
ಈಕೆ ನಗರದ ವಿಐಎಸ್‌ಎಲ್ ಗುತ್ತಿಗೆ ಕಾರ್ಮಿಕ, ಸಿದ್ದಾಪುರದ ನಿವಾಸಿ ಗಿರಿಗೌಡ ಮತ್ತು ಯಶೋಧ ದಂಪತಿ ಪುತ್ರಿಯಾಗಿದ್ದು, ಕುಟುಂಬದ ಆರ್ಥಿಕ ಸಂಕಷ್ಟದ ನಡುವೆಯೂ ಕಠಿಣ ಪರಿಶ್ರಮದಿಂದ ಗುರಿ ತಲುಪುವಲ್ಲಿ ಯಶಸ್ವಿಯಾಗಿದ್ದಾಳೆ. 
ಈಕೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲೂ ಉತ್ತಮ ಫಲಿತಾಂಶ ಪಡೆದುಕೊಂಡಿದ್ದು, ಆರ್ಥಿಕ ಸಂಕಷ್ಟದಿಂದ ಮುಂದಿನ ವಿದ್ಯಾಭ್ಯಾಸಕ್ಕೆ ಎದುರು ನೋಡುತ್ತಿದ್ದ ಈಕೆಗೆ ಕಾಲೇಜಿನ ಆಡಳಿತ ಮಂಡಳಿ ಎರಡು ವರ್ಷ ಉಚಿತ ಶಿಕ್ಷಣ ನೀಡಿದ ಪರಿಣಾಮ ದ್ವಿತೀಯ ಪಿಯುಸಿಯಲ್ಲೂ ಉತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ. ಇದೀಗ ಮುಂದಿನ ಉನ್ನತ ಶಿಕ್ಷಣದ ಚಿಂತೆ ಈ ವಿದ್ಯಾರ್ಥಿನಿಯನ್ನು ಕಾಡುತ್ತಿದೆ. ಪೋಷಕರು ವಿದ್ಯಾರ್ಥಿನಿಯ ಕನಸು ನನಸು ಮಾಡಲು ಹಗಲಿರುಳು ಶ್ರಮಿಸುತ್ತಿದ್ದಾರೆ. ಆದರೂ ಸಹ ಆರ್ಥಿಕ ಸಂಕಷ್ಟ ಎದುರಾಗುತ್ತಿದೆ. 
ಧನ ಸಹಾಯಕ್ಕೆ ಮನವಿ:
ವಿದ್ಯಾರ್ಥಿನಿ ಹರ್ಷಿತ ಉನ್ನತ ಶಿಕ್ಷಣಕ್ಕೆ ನೆರವಾಗುವ ದಾನಿಗಳು ಆರ್ಥಿಕ ನೆರವು ನೀಡುವಂತೆ ಮನವಿ ಮಾಡಲಾಗಿದೆ. ದಾನಿಗಳು ಎಸ್‌ಬಿಐ ಬ್ಯಾಂಕ್, ಎಸ್.ಬಿ ಖಾತೆ ಸಂಖ್ಯೆ : ೩೫೯೨೭೭೬೧೦೨೨ ಐಎಫ್‌ಎಸ್‌ಸಿ ಎಸ್‌ಬಿಐಎನ್೦೦೧೧೩೩೫ ಸಂಖ್ಯೆಗೆ ಆರ್ಥಿಕ ನೆರವು ನೀಡಬಹುದಾಗಿದೆ.
ವಿದ್ಯಾರ್ಥಿಗಳಿಗೆ ಅಭಿನಂದನೆ:  
ಆದಿಚುಂಚನಗಿರಿ ಶ್ರೀಕ್ಷೇತ್ರದ ಪೀಠಾಧಿಪತಿಗಳಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಎಸ್.ಕುಮಾರ್, ಆಡಳಿತಾಧಿಕಾರಿ ಬಿ. ಜಗದೀಶ್, ಪ್ರಾಂಶುಂಪಾಲ ಜಿ.ಕೇಶವಮೂರ್ತಿ, ಉಪನ್ಯಾಸಕರು ಹಾಗೂ ಸಿಬ್ಬಂದಿ ವೃಂದದವರು ಕಾಲೇಜಿನ ವಿದ್ಯಾರ್ಥಿಗಳ ಸಾಧನೆಯನ್ನು ಅಭಿನಂದಿಸಿದ್ದಾರೆ.  

ಲಯನ್ಸ್, ಲಿಯೋ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಕೆ.ವಿ ಚಂದ್ರಶೇಖರ್, ಸಿ. ಸಿಂಚನ ನೇತೃತ್ವದ ತಂಡ ಅಧಿಕಾರ ಸ್ವೀಕಾರ 

ಭದ್ರಾವತಿ ಲಯನ್ಸ್ ಮತ್ತು ಲಿಯೋ ಕ್ಲಬ್‌ಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ನ್ಯೂಟೌನ್ ಲಯನ್ಸ್ ಭವನದಲ್ಲಿ ನಡೆಯಿತು.
ಭದ್ರಾವತಿ, ಜು. ೧೮: ನಗರದ ಲಯನ್ಸ್ ಮತ್ತು ಲಿಯೋ ಕ್ಲಬ್‌ಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ನ್ಯೂಟೌನ್ ಲಯನ್ಸ್ ಭವನದಲ್ಲಿ ನಡೆಯಿತು.
ಮಾಜಿ ಜಿಲ್ಲಾ ಗವರ್ನರ್ ಡಾ. ಬಿ.ಎಸ್ ನಾಗಪ್ರಕಾಶ್ ಪದಗ್ರಹಣ ನೆರವೇರಿಸಿದರು. ನೂತನ ಅಧ್ಯಕ್ಷರಾಗಿ ಕೆ.ವಿ ಚಂದ್ರಶೇಖರ್, ಕಾರ್ಯದರ್ಶಿಯಾಗಿ ಆರ್. ರಾಮಮೂರ್ತಿ ಮತ್ತು ಖಜಾಂಚಿಯಾಗಿ ಎನ್ ಶಿವಕುಮಾರ್ ಲಿಯೋ ಕ್ಲಬ್ ಅಧ್ಯಕ್ಷೆಯಾಗಿ ಸಿ. ಸಿಂಚನ, ಕಾರ್ಯದರ್ಶಿಯಾಗಿ ಆರ್. ನವೀನ್ ಮತ್ತು ಖಜಾಂಚಿಯಾಗಿ ಲಕ್ಷ್ಮೀ ಎಸ್ ಕುಮಾರ್ ಅಧಿಕಾರ ಸ್ವೀಕರಿಸಿದರು. 
  ಉಪ ಜಿಲ್ಲಾ ಗವರ್ನರ್ ಕೆ.ಸಿ ವೀರಭದ್ರಪ್ಪ, ವಲಯ ಅಧ್ಯಕ್ಷರಾದ ಅನಂತಕೃಷ್ಣ ನಾಯಕ್, ಕುಮಾರ್, ಮಾಜಿ ಜಿಲ್ಲಾ ಗವರ್ನರ್ ಬಿ. ದಿವಾಕರ ಶೆಟ್ಟಿ, ಮಾಜಿ ವಲಯ ಅಧ್ಯಕ್ಷರಾದ ಹೆಬ್ಬಂಡಿ ನಾಗರಾಜ್, ಏಸುದಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
  ನಿಕಟಪೂರ್ವ ಅಧ್ಯಕ್ಷ ಎಚ್.ಆರ್ ಕುಮಾರಪ್ಪ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎ.ಎನ್ ಕಾರ್ತಿಕ್ ಮತ್ತು ಖಜಾಂಚಿ ನಾಗರಾಜ್ ಶೇಟ್ ವಾರ್ಷಿಕ ಕಾರ್ಯ ಚಟುವಟಿಕೆಗಳನ್ನು ವಿವರಿಸಿ ಯಶಸ್ವಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.  
ಪಿಯುಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ಉಪ ಜಿಲ್ಲಾ ಗವರ್ನರ್ ಕೆ.ಸಿ ವೀರಭದ್ರಪ್ಪ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು. 
ಕ್ಲಬ್ ಹಿರಿಯ ಸದಸ್ಯರಾದ ಡಾ. ಯು. ಕರುಣಾಕರ ಶೆಟ್ಟಿ, ಡಾ. ರವೀಂದ್ರನಾಥ ಕೋಠಿ, ಎಚ್.ವಿ ಶಿವರುದ್ರಪ್ಪ, ಡಾ. ಜಿ.ಎಂ ನಟರಾಜ್, ವೆಂಕಟರಮಣ ಶೇಟ್, ದೇವರಾಜ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು. ಭುವನೇಶ್ವರ್ ಕಾರ್ಯಕ್ರಮ ನಿರೂಪಿಸಿದರು. 

ಮುತ್ತೂಟ್ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿಯಿಂದ ವಂಚನೆ

ನ್ಯಾಯ ಒದಗಿಸಿ ಕೊಡಲು ತಹಸೀಲ್ದಾರ್‌ಗೆ ಮನವಿ 

ಭದ್ರಾವತಿ ರಂಗಪ್ಪ ವೃತ್ತದಲ್ಲಿರುವ ಮುತ್ತೂಟ್ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿಯಿಂದ ವಂಚನೆಗೆ ಒಳಗಾಗಿರುವ ಬಡ ಮಹಿಳೆಗೆ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿ ಶನಿವಾರ ತಹಸೀಲ್ದಾರ್ ಶಿವಕುಮಾರ್‌ಗೆ ಸಂಯುಕ್ತ ಜನತಾದಳ ರಾಜ್ಯ ಮುಖಂಡ ಶಶಿಕುಮಾರ್ ಎಸ್ ಗೌಡ ನೇತೃತ್ವದಲ್ಲಿ  ಮನವಿ ಸಲ್ಲಿಸಲಾಯಿತು. 
ಭದ್ರಾವತಿ, ಜು. ೧೮: ನಗರದ ರಂಗಪ್ಪ ವೃತ್ತದಲ್ಲಿರುವ ಮುತ್ತೂಟ್ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿಯಿಂದ ವಂಚನೆಗೆ ಒಳಗಾಗಿರುವ ಬಡ ಮಹಿಳೆಗೆ ನ್ಯಾಯ ಒದಗಿಸಿಕೊಡಬೇಕೆಂದು ಒತ್ತಾಯಿಸಿ ಶನಿವಾರ ತಹಸೀಲ್ದಾರ್ ಶಿವಕುಮಾರ್‌ಗೆ ಸಂಯುಕ್ತ ಜನತಾದಳ ರಾಜ್ಯ ಮುಖಂಡ ಶಶಿಕುಮಾರ್ ಎಸ್ ಗೌಡ ನೇತೃತ್ವದಲ್ಲಿ  ಮನವಿ ಸಲ್ಲಿಸಲಾಯಿತು. 
ತಾಲೂಕಿನ ಸಿದ್ದಾಪುರ ತಾಂಡ ನಿವಾಸಿ ದೇವಿಬಾಯಿ ಎಂಬುವರು ಜನವರಿ, ೨೦೧೮ರಲ್ಲಿ ಮುತ್ತೂಟ್ ಮೈಕ್ರೋ ಫೈನಾನ್ಸ್ ಕಂಪನಿಯಿಂದ ೪೫ ಸಾವಿರ ರು. ಸಾಲ ಪಡೆದಿದ್ದು, ಪ್ರತಿ ತಿಂಗಳು ೫೬೦ ರು. ಒಟ್ಟು ೮೭ ಕಂತು ಪಾವತಿಸುವ ಕಂಪನಿ ನಿಯಮದಂತೆ ಬ್ಯಾಂಕ್ ಸಿಬ್ಬಂದಿ ದೀಪಕ್ ಎಂಬುವರಿಗೆ ಪ್ರತಿ ತಿಂಗಳು ಹಣ ಪಾವತಿಸಿರುತ್ತಾರೆ. ಆದರೆ ಸಿಬ್ಬಂದಿ ಕಂಪನಿಗೆ ಹಣ ಪಾವತಿ ಮಾಡದೆ ವಂಚಿಸಿದ್ದು, ಕೆಲಸ ಬಿಟ್ಟು ನಾಪತ್ತೆಯಾಗಿರುತ್ತಾನೆ. ಈ ನಡುವೆ ಕಂಪನಿ ಅಧಿಕಾರಿಗಳು ಪೂರ್ಣ ಹಣ ಪಾವತಿ ಮಾಡುವಂತೆ ದೇವಿಬಾಯಿಗೆ ಒತ್ತಾಯಿಸುತ್ತಿದ್ದಾರೆಂದು ಆರೋಪಿಸಲಾಗಿದೆ. 
ಕಂಪನಿ ವಿಭಾಗೀಯ ವ್ಯವಸ್ಥಾಪಕರನ್ನು ಈ ಸಂಬಂಧ ಹಲವು ಬಾರಿ ದೇವಿಬಾಯಿಯವರು ಸಂಪರ್ಕಿಸಿ ಅನ್ಯಾಯವಾಗಿರುವುದನ್ನು ಮನವರಿಕೆ ಮಾಡಿಕೊಟ್ಟರೂ ಸಹ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದು, ಸಿಬ್ಬಂದಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಉತ್ತರಿಸುತ್ತಿದ್ದಾರೆ. ಇತ್ತೀಚೆಗೆ ದೇವಿಬಾಯಿಯವರ ಪತಿ ಪಾಪನಾಯ್ಕರವರು ಅನಾರೋಗ್ಯದಿಂದ ನಿಧನ ಹೊಂದಿದ್ದು, ಬಡತನದಲ್ಲಿ ಇಬ್ಬರು ಮಕ್ಕಳೊಂದಿಗೆ ಜೀವನ ಸಾಗಿಸುತ್ತಿರುವ ಮಹಿಳೆಗೆ ಈ ಸಾಲದ ಹೊರೆ ಮತ್ತಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ. ಈ ಹಿನ್ನಲೆಯಲ್ಲಿ ತಕ್ಷಣ ಕಂಪನಿಯವರನ್ನು ಕರೆಸಿ ಆಗಿರುವ ಅನ್ಯಾಯ ಸರಿಪಡಿಸಿಕೊಡಬೇಕೆಂದು ಮನವಿ ಮಾಡಲಾಗಿದೆ. ಒಂದು ವೇಳೆ ನಿರ್ಲಕ್ಷ್ಯತನ ವಹಿಸಿದ್ದಲ್ಲಿ ಲಾಕ್‌ಡೌನ್ ನಿಯಮಗಳನ್ನು ಪಾಲಿಸಿ ತಾಲೂಕು ಕಛೇರಿ ಮುಂಭಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಲಾಗಿದೆ. 
ಪಕ್ಷದ ಯುವ ಮುಖಂಡ ಬಾಬು ದೀಪಕ್ ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಬಿ.ವಿ ಗಿರೀಶ್, ವಂಚನೆಗೆ ಒಳಗಾಗಿರುವ ದೇವಿಬಾಯಿ, ರಘು, ಸುಭಾಷ್ ಮತ್ತು ಅಬ್ದುಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

Friday, July 17, 2020

ಭದ್ರಾವತಿಯಲ್ಲಿ ಪುನಃ ೫ ಸೋಂಕು ಪತ್ತೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಸೀಗೆಬಾಗಿ, ಅಣ್ಣಾನಗರ ಮತ್ತು ಕೆಎಸ್‌ಆರ್‌ಟಿಸಿ ಘಟಕ ಹಿಂಭಾಗ ಶುಕ್ರವಾರ ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಸ್ಥಳಗಳಿಗೆ ಪೌರಾಯುಕ್ತ ಮನೋಹರ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ನಗರಸಭೆ ಪರಿಸರ ಅಭಿಯಂತರ ರುದ್ರೇಗೌಡ, ಹಿರಿಯ ಆರೋಗ್ಯ ನಿರೀಕ್ಷಕ ನೀಲೇಶ್‌ರಾಜ್ ಮತ್ತು ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. 
ಭದ್ರಾವತಿ, ಜು. ೧೭:  ತಾಲೂಕಿನಲ್ಲಿ ಗುರುವಾರ ೩ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿತ್ತು. ಇದೀಗ ಪುನಃ ಏರಿಕೆಯಾಗಿದ್ದು, ಶುಕ್ರವಾರ ಒಂದೇ ದಿನ ೫ ಪ್ರಕರಣಗಳು ಪತ್ತೆಯಾಗಿವೆ. 
ದೇವರನರಸೀಪುರದಲ್ಲಿ ೩೮ ವರ್ಷದ ಪುರುಷ, ಸೀಗೆಬಾಗಿಯಲ್ಲಿ ೨೭ ವರ್ಷದ ಪುರುಷ, ಅಣ್ಣಾನಗರದಲ್ಲಿ ೬೫ ವರ್ಷದ ವೃದ್ಧ ಹಾಗೂ ಕೆಎಸ್‌ಆರ್‌ಟಿಸಿ ಘಟಕ ಹಿಂಭಾಗ ೪೯ ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. ಅಲ್ಲದೆ ಹಳೇನಗರದ ತಾಲೂಕು ಕಛೇರಿ ರಸ್ತೆಯಲ್ಲಿರುವ ನಿರ್ಮಲ ಖಾಸಗಿ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯೊಬ್ಬರಿಗೆ ಸೋಂಕು ತಗುಲಿದೆ ಎನ್ನಲಾಗಿದೆ. ಆದರೆ ಈ ಬಗ್ಗೆ ತಾಲೂಕು ಆರೋಗ್ಯ ಇಲಾಖೆಗೆ ಸರಿಯಾದ ಮಾಹಿತಿ ಲಭ್ಯವಾಗಿಲ್ಲ. 
ನಗರಸಭೆ ವ್ಯಾಪ್ತಿಯಲ್ಲಿ ಸೋಂಕು ಪತ್ತೆಯಾದ ಎಲ್ಲಾ ಸ್ಥಳಗಳಿಗೂ ಖುದ್ದಾಗಿ ತಹಸೀಲ್ದಾರ್ ಶಿವಕುಮಾರ್, ಪೌರಾಯುಕ್ತ ಮನೋಹರ್, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ಆರ್ ಗಾಯತ್ರಿ, ನಗರಸಭೆ ಪರಿಸರ ಅಭಿಯಂತರ ರುದ್ರೇಗೌಡ, ಹಿರಿಯ ಆರೋಗ್ಯ ನಿರೀಕ್ಷಕ ನೀಲೇಶ್‌ರಾಜ್ ಮತ್ತು ಪೊಲೀಸ್ ಸಿಬ್ಬಂದಿಗಳನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಅಲ್ಲದೆ ಕಂಟೈನ್ಮೆಂಟ್ ವಲಯವನ್ನಾಗಿಸಿ ಸೋಂಕು ಹರಡದಂತೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಮಲ್ನಾಡ್ ಅಲಾಯ್ ಕ್ಯಾಸ್ಟಿಂಗ್ ಪ್ರೈವೇಟ್ ಲಿಮಿಟೆಡ್ ಕಾರ್ಮಿಕ ಸಾವು

೩ ದಿನ ಕಾರ್ಯ ಚಟುವಟಿಕೆ ಸ್ಥಗಿತ 

 ಭದ್ರಾವತಿ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಮಲ್ನಾಡ್ ಅಲಾಯ್ ಕ್ಯಾಸ್ಟಿಂಗ್ ಪ್ರೈವೇಟ್ ಲಿಮಿಟೆಡ್ ಕಾರ್ಮಿಕನೋರ್ವ ಅನುಮಾನಸ್ಪದವಾಗಿ ಮೃತಪಟ್ಟಿರುವ ಹಿನ್ನಲೆಯಲ್ಲಿ ಕಾರ್ಖಾನೆ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ಜನ ಸೈನ್ಯ ಸಂಘಟನೆ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಸಲಾಯಿತು. 
ಭದ್ರಾವತಿ, ಜು. ೧೭: ೩ ದಿನಗಳ ಕಾಲ ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಮಲ್ನಾಡ್ ಅಲಾಯ್  ಕ್ಯಾಸ್ಟಿಂಗ್ ಪ್ರೈವೇಟ್ ಲಿಮಿಟೆಡ್ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸುವಲ್ಲಿ ಕರ್ನಾಟಕ ಜನ ಸೈನ್ಯ ಸಂಘಟನೆ ಯಶಸ್ವಿಯಾಗಿದೆ. 
ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಗುರುವಾರ ರಾತ್ರಿ ಅನುಮಾನಸ್ಪದವಾಗಿ ಮೃತಪಟ್ಟಿದ್ದು, ಕೊರೋನಾ ಸೋಂಕು ತಗುಲಿರುವ ಸಾಧ್ಯತೆ ಕಂಡು ಬರುತ್ತಿದೆ. ಈ ಹಿನ್ನಲೆ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸುವ ಮೂಲಕ ಉಳಿದ ಕಾರ್ಮಿಕರ ಹಿತ ರಕ್ಷಣೆ ಕಾಪಾಡಬೇಕೆಂದು  ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ಒತ್ತಾಯಿಸಲಾಯಿತು. 
ಈ ನಡುವೆ ಪೌರಾಯುಕ್ತರು ತಕ್ಷಣ ಕಾರ್ಯ ಚಟುವಟಿಕೆ ಸ್ಥಗಿತಗೊಳಿಸಿ ಕಾರ್ಮಿಕರನ್ನು ಮನೆಗೆ ಕಳುಹಿಸುವಂತೆ ಸೂಚಿಸಿದ್ದು, ಈ ಹಿನ್ನಲೆಯಲ್ಲಿ  ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಮಧುಕರ್ ಜೋಯಿಸ್ ಕಾರ್ಮಿಕರಿಗೆ ೩ ದಿನ ರಜೆ ಘೋಷಿಸುವ ಮೂಲಕ ಜು.೨೦ರಂದು ಕೆಲಸಕ್ಕೆ ಹಾಜರಾಗುವಂತೆ ಆದೇಶಿಸಿದ್ದಾರೆ. 
ಸಂಘಟನೆ ಜಿಲ್ಲಾಧ್ಯಕ್ಷ ಕೆ. ಮಂಜುನಾಥ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಹನುಮಮ್ಮ, ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಎಸ್. ಮಂಜುನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಜಿ+3 ಗುಂಪು ಮನೆ ಹಂಚಿಕೆ ಪ್ರಕ್ರಿಯೆ ಸ್ಥಗಿತಗೊಳಿಸಲು ಆಗ್ರಹಿಸಿ ಮನವಿ

ಕೋವಿಡ್-19 ನಿಯಂತ್ರಣದ ನಂತರ ಪುನಃ ಅರ್ಜಿ ಸಲ್ಲಿಸಲು ಅವಕಾಶ ನೀಡಿ 

ಭದ್ರಾವತಿ, ಜು. 17: ನಗರಸಭೆ ವತಿಯಿಂದ  ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಧಾನ ಮಂತ್ರಿ ಆವಾಜ್ ಯೋಜನೆ ಎ.ಎಚ್.ಪಿ ಘಟಕದಡಿ ಸುಮಾರು ೪೦೦೦ ಜಿ+3 ಗುಂಪು ಮನೆ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಸ್ತುತ ಕೋವಿಡ್-೧೯  ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ತಕ್ಷಣ ಈ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕೆಂದು ಆಗ್ರಹಿಸಿ ನಗರದ ಮಾನವ ಹಕ್ಕುಗಳ ಹೋರಾಟ ವೇದಿಕೆ ವತಿಯಿಂದ ತಹಸೀಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ. 
ನಗರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತ ಬಡವರಿಗೆ ಸುಮಾರು 20 ವರ್ಷಗಳ ನಂತರ ಮನೆಗಳನ್ನು ವಿತರಣೆ ಮಾಡಲು ಮುಂದಾಗುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಈಗಾಗಲೇ ಆನ್‌ಲೈನ್ ಮುಖಾಂತರ ಒಟ್ಟು 5,372 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ ಅರ್ಹ ಮತ್ತು ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿದ್ದು,  4996 ಫಲಾನುಭವಿಗಳಿಗೆ ಮನೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ಸಂಬಂಧ 15 ದಿನಗಳೊಳಗಾಗಿ ಸಾರ್ವಜನಿಕರಿಂದ ಆಕ್ಷೇಪಣೆ ಸಲ್ಲಿಸಲು ಪತ್ರಿಕಾ ಪ್ರಕಟಣೆ ಸಹ ಹೊರಡಿಸಲಾಗಿದೆ. 
ನಗರಸಭೆ ವ್ಯಾಪ್ತಿಯಲ್ಲಿ ನಿವೇಶನ ರಹಿತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ನಗರಸಭೆ ಅರ್ಜಿ ಆಹ್ವಾನಿಸಿದ ಸಂದರ್ಭದಲ್ಲಿ ಸಕಾಲದಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ಅಗತ್ಯ ದಾಖಲೆ ಪತ್ರಗಳನ್ನು ಕ್ರೋಢೀಕರಿಸಿಕೊಳ್ಳಲು ಸಾಧ್ಯವಾಗದ ಹಿನ್ನಲೆಯಲ್ಲಿ ಹಾಗು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸಂಬಂಧ ಸರಿಯಾದ ಮಾಹಿತಿ ಇಲ್ಲದ ಕಾರಣ ನಿಜವಾದ ಬಡವರು ಅರ್ಜಿ ಸಲ್ಲಿಸಲು ಸಾಧ್ಯವಾಗಿಲ್ಲ. ಈ ನಡುವೆ ಕೋವಿಡ್-19 ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಪ್ರಸ್ತುತ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಬೇಕು. ಕೋವಿಡ್-೧೯ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ನಂತರ ಪುನಃ ಅರ್ಜಿ ಸಲ್ಲಿಸಲು 2 ತಿಂಗಳು ಕಾಲಾವಕಾಶ ನೀಡಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 
ಒಂದು ವೇಳೆ ಪ್ರಕ್ರಿಯೆ ಸ್ಥಗಿತಗೊಳಿಸದೆ ಏಕಾಏಕಿ ಮನೆಗಳ ಹಂಚಿಕೆಗೆ ಮುಂದಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ. 
ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಕಾರ್ಯಾಧ್ಯಕ್ಷ ಐ.ಎಲ್ ಅರುಣ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಅಕ್ರಂ ಖಾನ್, ಉಪಾಧ್ಯಕ್ಷ ಬ್ರಹ್ಮಲಿಂಗಯ್ಯ, ಕಾರ್ಯದರ್ಶಿ ಆರ್. ಬಸವರಾಜ್, ಸಂಚಾಲಕರಾದ ಗಾಯಕ್‌ವಾಡ್, ರೈತ ಮುಖಂಡ ಸುಬ್ಬೇಗೌಡ, ಆನಂದಮೂರ್ತಿ, ಮೇಘರಾಜ್, ಗವಿಸಿದ್ದಯ್ಯ, ರವಿನಾಯ್ಕ್, ವರಲಕ್ಷ್ಮಿ, ರಂಗನಾಥ್, ರಾಮಲಿಂಗಯ್ಯ, ಶ್ರೀದೇವಿ, ಶಿವನಾಯ್ಕ, ಬಾಷ, ಮಂಜುಳ, ದೊಡ್ಡಯ್ಯ, ರೂಪಾ, ಲತಾ, ಗೋವಿಂದಪ್ಪ, ನಾಗರಾಜ, ಮಹಾಲಿಂಗಯ್ಯ, ವಸಂತ, ಶಾರದಮ್ಮ  ಮತ್ತು ಸತೀಶ್ ಸೇರಿದಂತೆ ಇನ್ನಿತರರು ಸಹಿಯೊಂದಿಗೆ ಮನವಿ ಮಾಡಿದ್ದಾರೆ.

ಜು.18 ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಭದ್ರಾವತಿ, ಜು. 17: ನಗರದ ಲಯನ್ಸ್ ಮತ್ತು ಲಿಯೋ ಕ್ಲಬ್‌ಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಜು. 18ರಂದು ಬೆಳಿಗ್ಗೆ 10.30ಕ್ಕೆ ನ್ಯೂಟೌನ್ ಲಯನ್ಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 
ಮಾಜಿ ಜಿಲ್ಲಾ ಗವರ್ನರ್ ಬಿ.ಎಸ್ ನಾಗಪ್ರಕಾಶ್ ಪದಗ್ರಹಣ ನೆರವೇರಿಸಿ ಕೊಡಲಿದ್ದು, ಮಾಜಿ ಜಿಲ್ಲಾ ಗವರ್ನರ್ ಬಿ. ದಿವಾಕರ ಶೆಟ್ಟಿ, ಉಪ ಜಿಲ್ಲಾ ಗವರ್ನರ್ ಕೆ.ಸಿ ವೀರಭದ್ರಪ್ಪ ಉಪಸ್ಥಿತರಿರುವರು. ಕ್ಲಬ್ ಅಧ್ಯಕ್ಷ ಎಚ್.ಆರ್ ಕುಮಾರಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. 
ಕೆ.ವಿ ಚಂದ್ರಶೇಖರ್ ನೇತೃತ್ವದ ಕಾರ್ಯದರ್ಶಿ ಆರ್. ರಾಮಮೂರ್ತಿ ಮತ್ತು ಖಜಾಂಚಿ ಎನ್ ಶಿವಕುಮಾರ್ ಅವರನ್ನೊಳಗೊಂಡ ನೂತನ ಲಯನ್ಸ್ ತಂಡ ಹಾಗೂ ಸಿ. ಸಿಂಚನ ನೇತೃತ್ವದ ಕಾರ್ಯದರ್ಶಿ ಆರ್. ನವೀನ್ ಮತ್ತು ಖಜಾಂಚಿ ಲಕ್ಷ್ಮೀ ಎಸ್ ಕುಮಾರ್ ಅವರನ್ನೊಳಗೊಂಡ ನೂತನ ಲಿಯೋ ತಂಡ ಪದಗ್ರಹಣ ಸ್ವೀಕರಿಸಲಿವೆ.